Home Blog

ಕೈಕೊಟ್ಟ ಮುಂಗಾರು: ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ, ಕುಡಿಯುವ ನೀರಿಗೆ ಸಂಕಷ್ಟ!

ಮಂಡ್ಯ: ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್‌ ಮತ್ತು ಕಬಿನಿಯಲ್ಲಿ ನೀರಿನ ಮಟ್ಟ ಆತಂಕಕಾರಿ ಪ್ರಮಾಣಕ್ಕೆ ಇಳಿದಿದೆ.

ಕಬಿನಿ ಜಲಾಶಯ ಈಗಾಗಲೇ ಡೆಡ್ ಸ್ಟೋರೇಜ್ ಹಂತ ತಲುಪಿದ್ದು, ಕೆಆರ್‌ಎಸ್‌ ಜಲಾಶಯದ ಮೇಲೆ ಸಂಪೂರ್ಣ ಒತ್ತಡ ಬಿದ್ದಿದೆ.

ಸದ್ಯ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ 81 ಅಡಿಗೆ ತಲುಪಿದ್ದು, ಬಳಕೆಗೆ ಕೇವಲ 6 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಪ್ರತಿದಿನ ಸುಮಾರು 1,800 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.

ಕಬಿನಿಯಲ್ಲಿ ನೀರಿನ ಲಭ್ಯತೆ ಇಲ್ಲದ ಕಾರಣ ಬೆಂಗಳೂರಿಗೆ ಭಾಗಶಃ ಕೆಆರ್‌ಎಸ್‌ನಿಂದಲೇ ನೀರು ಪೂರೈಕೆಯಾಗುತ್ತಿದ್ದು, ಮುಂದಿನ ಮೂರು ತಿಂಗಳ ಕಾಲ ಇದೇ ನೀರಿನ ಸಂಗ್ರಹವನ್ನು ಸಮರ್ಪಕವಾಗಿ ನಿರ್ವಹಿಸುವ ಸವಾಲು ಎದುರಾಗಿದೆ.

ಇದೇ ವೇಳೆ, ರೈತರು ತಮ್ಮ ಬೆಳೆಗಳಿಗೆ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದು, ಜಲಾಶಯದಲ್ಲಿನ ಸೀಮಿತ ನೀರಿನ ಲಭ್ಯತೆ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮುಂದಿನ ದಿನಗಳಲ್ಲಿ ಸಮರ್ಪಕ ಮಳೆಯಾಗದಿದ್ದರೆ ಕುಡಿಯುವ ನೀರಿನ ಪೂರೈಕೆಯ ಮೇಲೆಯೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮಳೆರಾಯನ ಮೊರೆ ಹೋದ ತಾಯಂದಿರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮರ್ಪಕ ಮಳೆಯಿಲ್ಲದೆ ರೈತರು ಆತಂಕದಲ್ಲಿರುವ ಹಿನ್ನೆಲೆಯಲ್ಲಿ ತಾಲೂಕಿನ ಶಿಗ್ಲಿ ಗ್ರಾಮದ ಗಣೇಶಪೇಟೆಯ ತಾಯಂದಿರು ಸಂಪ್ರದಾಯಬದ್ಧವಾಗಿ ಗುರ್ಜಿ ಹೊತ್ತು ಮಳೆ ದೇವರನ್ನು ಪ್ರಾರ್ಥಿಸುವ ಮೂಲಕ ಉತ್ತಮ ಮಳೆಯಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಮುಂಗಾರು ವಿಳಂಬವಾಗಿರುವುದರಿಂದ ಕೃಷಿ ಚಟುವಟಿಕೆಗಳು ಹಿನ್ನಡೆ ಅನುಭವಿಸುತ್ತಿದ್ದು, ಬಿತ್ತನೆ ಮಾಡಿದ ಬೆಳೆಗಳು ಒಣಗುವ ಭೀತಿ ಎದುರಾಗಿದೆ. ಇದರಿಂದ ಕಂಗಾಲಾಗಿರುವ ರೈತ ಸಮುದಾಯದ ಸಂಕಷ್ಟ ನಿವಾರಣೆಯಾಗಲಿ ಎಂಬ ಆಶಯದೊಂದಿಗೆ ಗ್ರಾಮಸ್ಥರು ಈ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಂಡರು.

ಗಣೇಶಪೇಟೆಯ ಮಹಿಳೆಯರು ಗುರ್ಜಿ ಹೊತ್ತು ಗ್ರಾಮದಲ್ಲಿ ಸಂಚರಿಸಿ, ಸಕಾಲಕ್ಕೆ ಮಳೆಯಾಗಿ ರೈತರ ಬದುಕು ಹಸನಾಗಲಿ, ಹೊಲ-ಗದ್ದೆಗಳು ಹಸಿರಿನಿಂದ ಕಂಗೊಳಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಗ್ರಾಮದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ನಡೆದ ಈ ಆಚರಣೆಯಲ್ಲಿ ಭಕ್ತಿ, ನಂಬಿಕೆ ಹಾಗೂ ಜನಪದ ಸಂಸ್ಕೃತಿಯ ಸೊಬಗು ಅನಾವರಣಗೊಂಡಿತು.

ಕಾರ್ಯಕ್ರಮದಲ್ಲಿ ಹಿರಿಯರು, ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿ, ಉತ್ತಮ ಮಳೆಯಾಗಿ ಬೆಳೆಗಳು ಸಮೃದ್ಧಿಯಾಗಿ ಬೆಳೆಯಲಿ ಹಾಗೂ ರೈತರ ಸಂಕಷ್ಟ ದೂರವಾಗಲಿ ಎಂದು ಪ್ರಾರ್ಥಿಸಿದರು.

ಮಳೆಯ ಅಭಾವದಿಂದ ಸಂಕಷ್ಟದಲ್ಲಿರುವ ರೈತ ಕುಟುಂಬಗಳ ಮಹಿಳೆಯರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂತಹ ಸಾಂಪ್ರದಾಯಿಕ ಆಚರಣೆಗಳನ್ನು ನಡೆಸುತ್ತಿರುವುದು ಕಂಡುಬರುತ್ತಿದ್ದು, ರೈತ ಸಮುದಾಯದ ಈ ಮೊರೆಗೆ ಮಳೆರಾಯ ಕರುಣೆ ತೋರಬೇಕೆಂಬ ಆಶಯ ವ್ಯಕ್ತವಾಗಿದೆ.

ಸಾವು ಮನೆಯವರನ್ನೇ ಟಾರ್ಗೆಟ್ ಮಾಡಿದ ಸೈಬರ್ ಖದೀಮರು: ಚಿತಾಗಾರ ಸ್ಲಾಟ್ ಬುಕ್ಕಿಂಗ್ ಹೆಸರಲ್ಲಿ ವಂಚನೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೈಬರ್ ವಂಚಕರ ಹೊಸ ಜಾಲವೊಂದು ಬಯಲಾಗಿದ್ದು, ಶವಸಂಸ್ಕಾರಕ್ಕಾಗಿ ಆನ್‌ಲೈನ್ ಸ್ಲಾಟ್ ಬುಕ್ಕಿಂಗ್ ಮಾಡುವ ಹೆಸರಿನಲ್ಲಿ ಸಾರ್ವಜನಿಕರಿಂದ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

ಗ್ರೇಟರ್ ಬೆಂಗಳೂರು ಅಥಾರಿಟಿ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯ ಹೆಬ್ಬಾಳ ಕೆಂಪಾಪುರದ ‘ಚಿರಶಾಂತಿಧಾಮ’ ಮತ್ತು ಮೇಡಿ ಅಗ್ರಹಾರದ ‘ಮುಕ್ತಿಧಾಮ’ ವಿದ್ಯುತ್ ಚಿತಾಗಾರಗಳಲ್ಲಿ ಶವಸಂಸ್ಕಾರಕ್ಕೆ ಕೇವಲ ₹250 ಅಧಿಕೃತ ಶುಲ್ಕ ನಿಗದಿಪಡಿಸಲಾಗಿದೆ. ಆದರೆ ಸೈಬರ್ ಖದೀಮರು ನಕಲಿ ವೆಬ್‌ಸೈಟ್‌ಗಳು ಮತ್ತು ಲಿಂಕ್‌ಗಳನ್ನು ಸೃಷ್ಟಿಸಿ, ತಾವೇ ಅಧಿಕೃತ ಏಜೆಂಟ್‌ಗಳು ಎಂದು ಬಿಂಬಿಸಿಕೊಂಡು ಸಾರ್ವಜನಿಕರನ್ನು ವಂಚಿಸುತ್ತಿರುವುದು ಪತ್ತೆಯಾಗಿದೆ.

ಸಾವಿನ ದುಃಖದಲ್ಲಿರುವ ಕುಟುಂಬಸ್ಥರು ತುರ್ತಾಗಿ ಸ್ಲಾಟ್ ಬುಕ್ಕಿಂಗ್ ಮಾಡಲು ಮುಂದಾದಾಗ ಅವರ ಪರಿಸ್ಥಿತಿಯನ್ನೇ ದುರುಪಯೋಗಪಡಿಸಿಕೊಳ್ಳುವ ಈ ಜಾಲ, ಅಧಿಕೃತ ಶುಲ್ಕಕ್ಕಿಂತ ಹಲವು ಪಟ್ಟು ಹೆಚ್ಚು ಹಣ ಪಡೆದು ವಂಚನೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಬೆಂಗಳೂರು ಉತ್ತರ ನಗರ ಪಾಲಿಕೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಮೂರನೇ ವ್ಯಕ್ತಿ ಅಥವಾ ಖಾಸಗಿ ವೆಬ್‌ಸೈಟ್‌ಗಳ ಮೂಲಕ ಬುಕ್ಕಿಂಗ್ ಮಾಡಬಾರದು ಎಂದು ಮನವಿ ಮಾಡಿದೆ.

ಈ ಸಂಬಂಧ ಯಲಹಂಕದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದ್ದು, ನಕಲಿ ವೆಬ್‌ಸೈಟ್‌ಗಳ ಹಿಂದೆ ಇರುವ ಜಾಲವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಭಕ್ತಿಯ ಕಾಣಿಕೆಗೆ ಜಾತಿಯ ಬಣ್ಣ ಏಕೆ..?

0

ವಿಜಯಸಾಕ್ಷಿ ಸುದ್ದಿ, ಗದಗ: ವೀರೇಶ್ವರ ಪುಣ್ಯಾಶ್ರಮದ ರಥೋತ್ಸವದ ಕುರಿತು ಇತ್ತೀಚೆಗೆ ಉಂಟಾಗಿರುವ ವಿವಾದಕ್ಕೆ ಸ್ಪಷ್ಟನೆ ನೀಡಿರುವ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು, ಭಕ್ತರು ನೀಡುವ ದೇಣಿಗೆಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಬುಧವಾರ ಆಶ್ರಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಥೋತ್ಸವದ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕಳೆದ ನಾಲ್ಕು ವರ್ಷಗಳಿಂದ ರಥೋತ್ಸವ ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತಿದ್ದು, ವಿವಿಧ ಸಮುದಾಯಗಳ ಭಕ್ತರು ಆಶ್ರಮಕ್ಕೆ ದೇಣಿಗೆ ನೀಡುವುದು ಸಂಪ್ರದಾಯವಾಗಿದೆ ಎಂದರು.

ಪೀರಸಾಬ ದಂಪತಿಗಳು ರಥಕ್ಕೆ ಗಾಲಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಕೆಲ ಭಕ್ತರು ತಮ್ಮ ಹೆಸರಿನೊಂದಿಗೆ ದೇಣಿಗೆ ನೀಡಿದರೆ, ಇನ್ನೂ ಕೆಲವರು ಹೆಸರು ಬಹಿರಂಗಪಡಿಸದೇ ಕಾಣಿಕೆ ಸಲ್ಲಿಸುತ್ತಾರೆ. ದೇಣಿಗೆ ನೀಡುವ ವಿಚಾರದಲ್ಲಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ವಿವಾದ ಸೃಷ್ಟಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ಇದೇ ವೇಳೆ ಆಶ್ರಮದ ಆಡಳಿತ ಹಾಗೂ ಹಣಕಾಸು ನಿರ್ವಹಣೆ ಕುರಿತು ಮಾತನಾಡಿದ ಕಲ್ಲಯ್ಯಜ್ಜನವರು, ತಾವು ಪೀಠಾಧಿಪತಿಯಾದ ಸಂದರ್ಭದಲ್ಲಿ ಆಶ್ರಮಕ್ಕೆ ಲಕ್ಷಾಂತರ ರೂಪಾಯಿ ಸಾಲವಿತ್ತು. ಅದನ್ನು ತೀರಿಸಿ ಆಶ್ರಮದ ಆರ್ಥಿಕ ಸ್ಥಿತಿಯನ್ನು ಸದೃಢಗೊಳಿಸಲಾಗಿದೆ. ಎಲ್ಲ ಆದಾಯ-ವೆಚ್ಚಗಳ ಲೆಕ್ಕಪತ್ರಗಳನ್ನು ಪಾರದರ್ಶಕವಾಗಿ ನಿರ್ವಹಿಸಲಾಗಿದೆ ಎಂದು ತಿಳಿಸಿದರು.

ಕೆಲ ಟ್ರಸ್ಟಿಗಳಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ ಅವರು, ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದರು. ಹಲವು ವರ್ಷಗಳಿಂದ ಮಾನಸಿಕ ಕಿರುಕುಳ ನೀಡಲಾಗುತ್ತಿದ್ದು, ಈ ವಿಷಯವನ್ನು ಟ್ರಸ್ಟ್ ಸಮಿತಿ, ಭಕ್ತರು ಹಾಗೂ ಸಾರ್ವಜನಿಕರ ಗಮನಕ್ಕೆ ತರಲು ಸುದ್ದಿಗೋಷ್ಠಿ ನಡೆಸಲಾಗಿದೆ ಎಂದು ತಿಳಿಸಿದರು.

ವೀರೇಶ್ವರ ಪುಣ್ಯಾಶ್ರಮವು ಜಾತ್ಯಾತೀತ ಸಂಸ್ಥೆಯಾಗಿದ್ದು, ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಪರಂಪರೆಯನ್ನು ಹೊಂದಿದೆ. ಪೀರಸಾಬ ಕೌತಾಳ ಅವರೊಂದಿಗೆ ಆಶ್ರಮಕ್ಕೆ ಗುರು-ಶಿಷ್ಯರ ಸಂಬಂಧವಿದ್ದು, ಅವರು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಗೆ ಆಶ್ರಮದಿಂದ ಯಾವುದೇ ಆರ್ಥಿಕ ನೆರವು ನೀಡಿಲ್ಲ. ಶಿಕ್ಷಣ ಸಂಸ್ಥೆಗಳು ಸುಗಮವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದಲೇ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಆಶ್ರಮದ ವ್ಯವಸ್ಥಾಪಕ ಹೇಮರಾಜಶಾಸ್ತ್ರೀ, ಎಂ. ಕಲ್ಲಿನಾಥಶಾಸ್ತ್ರೀ, ವೀರೇಶ ಕಿತ್ತೂರು, ಎಂ.ಜಿ. ಗುರುಸಿದ್ದೇಶ್ವರಶಾಸ್ತ್ರೀ, ಚನ್ನಬಸಯ್ಯ ಬಂಕಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

“ಭಕ್ತರ ದೇಣಿಗೆಗೆ ಜಾತಿ ಅಥವಾ ಧರ್ಮದ ಬಣ್ಣ ಹಚ್ಚುವುದು ಸರಿಯಲ್ಲ. ರಥೋತ್ಸವವನ್ನು ವಿವಾದದ ಕೇಂದ್ರವನ್ನಾಗಿಸದೇ ಭಕ್ತಿಭಾವದಿಂದ ನಡೆಸಬೇಕು.”

ಕಲ್ಲಯ್ಯಜ್ಜನವರು, ಪೀಠಾಧಿಪತಿ, ವೀರೇಶ್ವರ ಪುಣ್ಯಾಶ್ರಮ

ನೈಋತ್ಯ ಮುಂಗಾರು ಬಿರುಸು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!

ಬೆಂಗಳೂರು: ನೈಋತ್ಯ ಮುಂಗಾರು ಮಾರುತಗಳು ರಾಜ್ಯಾದ್ಯಂತ ಬಲಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಹಾಗೂ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿ-ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಹಾಗೂ ನದಿ, ಹಳ್ಳ-ಕೊಳ್ಳಗಳ ತೀರದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತಗಳು ಸಲಹೆ ನೀಡಿವೆ.

ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದೇ ವೇಳೆ ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ.

ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳ ನಿವಾಸಿಗಳು, ಮೀನುಗಾರರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

ಬೆಂಗಳೂರಿನಲ್ಲಿ ಗಗನಕ್ಕೇರಿದ ತರಕಾರಿ ದರ: ನೂರರ ಗಡಿ ದಾಟಿದ ಬೀನ್ಸ್, ಬದನೆಕಾಯಿ

ಬೆಂಗಳೂರು: ರಾಜ್ಯದಲ್ಲಿ ಮುಂದುವರಿದಿರುವ ಅನಾವೃಷ್ಟಿ ಹಾಗೂ ನೆರೆಯ ರಾಜ್ಯಗಳ ಹವಾಮಾನ ವೈಪರೀತ್ಯದ ಪರಿಣಾಮ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ತರಕಾರಿ ಮತ್ತು ಸೊಪ್ಪುಗಳ ಬೆಲೆ ಭಾರೀ ಏರಿಕೆ ಕಂಡಿದೆ.

ಕೆಆರ್ ಮಾರುಕಟ್ಟೆ ಸೇರಿದಂತೆ ಪ್ರಮುಖ ಹೋಲ್‌ಸೇಲ್ ಮತ್ತು ಚಿಲ್ಲರೆ ಮಾರುಕಟ್ಟೆಗಳಲ್ಲಿ ಹಲವು ತರಕಾರಿಗಳ ದರ ಶತಕ ದಾಟಿದ್ದು, ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ನುಗ್ಗೆಕಾಯಿ ಕೆಜಿಗೆ ₹200 ರಿಂದ ₹220, ಬೀನ್ಸ್ ₹115 ರಿಂದ ₹140, ಮೆಂತ್ಯ ಸೊಪ್ಪು ₹120 ರಿಂದ ₹130, ಬಿಳಿ ಬದನೆಕಾಯಿ ₹110 ರಿಂದ ₹120, ಬಟಾಣಿ ಮತ್ತು ಹಸಿಮೆಣಸಿನಕಾಯಿ ₹100 ರಿಂದ ₹120 ದರದಲ್ಲಿ ಮಾರಾಟವಾಗುತ್ತಿದೆ. ಕ್ಯಾಪ್ಸಿಕಂ ಹಾಗೂ ಕ್ಯಾರೆಟ್ ಬೆಲೆ ಕೂಡ ₹80 ರಿಂದ ₹100ರ ನಡುವೆ ಇದೆ. ಬೆಳ್ಳುಳ್ಳಿ ದರವು ₹200 ರಿಂದ ₹220ಕ್ಕೆ ಏರಿಕೆಯಾಗಿದೆ.

ಆದರೆ ಗ್ರಾಹಕರಿಗೆ ಕೊಂಚ ಸಮಾಧಾನ ತಂದಿರುವುದು ಟೊಮೆಟೊ ಮತ್ತು ಈರುಳ್ಳಿ ಬೆಲೆ. ಹೋಲ್‌ಸೇಲ್ ಮಾರುಕಟ್ಟೆಯಲ್ಲಿ ಟೊಮೆಟೊ ಕೆಜಿಗೆ ₹10 ರಿಂದ ₹15 ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ₹15 ರಿಂದ ₹20ಕ್ಕೆ ಲಭ್ಯವಿದೆ. ಈರುಳ್ಳಿ ಕೂಡ ಕೆಜಿಗೆ ₹20 ರಿಂದ ₹25 ದರದಲ್ಲಿ ದೊರೆಯುತ್ತಿದೆ.

ಇದರ ನಡುವೆಯೇ ಕೋಳಿ ಮೊಟ್ಟೆಯ ಬೆಲೆಯೂ ಏರಿಕೆಯಾಗಿದ್ದು, ಈ ಹಿಂದೆ ₹6.50 ಇದ್ದ ಒಂದು ಮೊಟ್ಟೆಯ ದರ ಈಗ ₹8ಕ್ಕೆ ತಲುಪಿದೆ.

ದೇಶದ ವಿವಿಧ ಭಾಗಗಳಲ್ಲಿ ಅತಿವೃಷ್ಟಿ ಮತ್ತು ಮಳೆಯ ಕೊರತೆಯಿಂದ ಬೆಳೆ ಹಾನಿಯಾಗಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ವಿಶೇಷವಾಗಿ ಬಿಳಿ ಬದನೆಕಾಯಿ ದರ ಮೊದಲ ಬಾರಿಗೆ ₹100ರ ಗಡಿ ದಾಟಿರುವುದು ಗ್ರಾಹಕರ ಗಮನ ಸೆಳೆದಿದೆ.

ತರಕಾರಿ ಬೆಲೆ ಏರಿಕೆಯಿಂದ ಗ್ರಾಹಕರು ಕೆಜಿಗಟ್ಟಲೆ ಖರೀದಿಸುವ ಬದಲು ಕಾಲು ಕೆಜಿ ಅಥವಾ ಅರ್ಧ ಕೆಜಿಗೆ ಸೀಮಿತರಾಗಿದ್ದಾರೆ. ಇದರಿಂದ ವ್ಯಾಪಾರವೂ ಕುಂಠಿತಗೊಂಡಿದ್ದು, ಮಾರಾಟದಲ್ಲಿ ಕುಸಿತ ಉಂಟಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಒಟ್ಟಾರೆ, ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೆಂಗಳೂರಿನ ಜನಸಾಮಾನ್ಯರ ಮಾಸಿಕ ಅಡುಗೆ ವೆಚ್ಚ ಮತ್ತು ಕುಟುಂಬದ ಬಜೆಟ್ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ.

ತುಂಗಭದ್ರಾ ಗೇಟ್‌ಗಳ ಲೋಕಾರ್ಪಣೆ: ಮುನಿರಾಬಾದ್‌ನ ಶಾಲೆಗಳಿಗೆ ರಜೆ ಘೋಷಣೆ!

ಕೊಪ್ಪಳ: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುನಿರಾಬಾದ್‌ನಲ್ಲಿರುವ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಸರ್ಕಾರಿ ಕಾರ್ಯಕ್ರಮ ನಡೆಯುತ್ತಿರುವ ಕಾರಣ ಮುನಿರಾಬಾದ್ ವ್ಯಾಪ್ತಿಯ ಎಲ್ಲ ಶಾಲೆಗಳಿಗೆ ಗುರುವಾರ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಜೆಯಿಂದ ಉಂಟಾಗುವ ಶೈಕ್ಷಣಿಕ ನಷ್ಟವನ್ನು ಸರಿದೂಗಿಸಲು ಮತ್ತೊಂದು ದಿನ ಶಾಲೆ ನಡೆಸಲಾಗುವುದು ಎಂದೂ ಸ್ಪಷ್ಟಪಡಿಸಿದ್ದಾರೆ.

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ ಸಮಾರಂಭವು ಮುನಿರಾಬಾದ್‌ನ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.

ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಮಾರಂಭಕ್ಕಾಗಿ 10 ಸಾವಿರದಿಂದ 15 ಸಾವಿರ ಜನರು ಕುಳಿತುಕೊಳ್ಳುವಂತೆ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದ 33 ನೂತನ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಾವಿರಾರು ರೈತರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು, ಭದ್ರತೆ ಮತ್ತು ಸಂಚಾರ ವ್ಯವಸ್ಥೆಗಳಿಗೂ ವಿಶೇಷ ಕ್ರಮ ಕೈಗೊಳ್ಳಲಾಗಿದೆ.

 

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಹಣ ನೀಡಿ ಪಡೆದ ಬಸ್ ಪಾಸ್ ಮೊತ್ತ ಮರುಪಾವತಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಹಾಗೂ ನಾಲ್ಕು ರಸ್ತೆ ಸಾರಿಗೆ ನಿಗಮಗಳು ಮತ್ತೊಂದು ಸಿಹಿಸುದ್ದಿ ನೀಡಿವೆ.

ಉಚಿತ ಬಸ್ ಪಾಸ್ ಯೋಜನೆ ಜಾರಿಯಾದ ಹಿನ್ನೆಲೆಯಲ್ಲಿ ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಆ ಮೊತ್ತವನ್ನು ಮರುಪಾವತಿಸಲು ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ಪಾವತಿಸಿದ ಬಸ್ ಪಾಸ್ ಶುಲ್ಕವನ್ನು ಹಿಂದಿರುಗಿಸಲು ಕ್ರಮ ಕೈಗೊಂಡಿವೆ.

ಉಚಿತ ಬಸ್ ಪಾಸ್ ಯೋಜನೆಯ ಪ್ರಯೋಜನ ರಾಜ್ಯದ ಗಡಿಭಾಗಗಳಲ್ಲಿ ವಾಸವಿದ್ದು ನೆರೆಯ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ, ನೆರೆಯ ರಾಜ್ಯಗಳಲ್ಲಿ ವಾಸವಿದ್ದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದೆ.

ಈಗಾಗಲೇ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಮರುಪಾವತಿ ಪಡೆಯಬಹುದು. ಅರ್ಜಿ ಸಲ್ಲಿಸಲು ಒಟಿಪಿ ಆಧಾರಿತ ನೋಂದಣಿ ಕಡ್ಡಾಯವಾಗಿದ್ದು, ಬ್ಯಾಂಕ್ ಖಾತೆಯ ವಿವರಗಳನ್ನು ಸಲ್ಲಿಸಬೇಕು. ಅರ್ಜಿ ಪರಿಶೀಲನೆಯಾದ ಬಳಿಕ ಎನ್‌ಇಎಫ್‌ಟಿ ಅಥವಾ ಆರ್‌ಟಿಜಿಎಸ್ ಮೂಲಕ ಏಳು ದಿನಗಳೊಳಗೆ ಹಣವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸಿದ್ದರು. ಅದರಂತೆ ಯೋಜನೆ ಜಾರಿಯಾಗಿದ್ದು, ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ಮುಂದಾಗಿದೆ.

ಸರ್ಕಾರದ ಅಂದಾಜಿನ ಪ್ರಕಾರ, ರಾಜ್ಯದ ಎಲ್ಲಾ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಸುಮಾರು 286.08 ಕೋಟಿ ರೂಪಾಯಿ ವೆಚ್ಚವಾಗಲಿದೆ. ಇದರ ಜೊತೆಗೆ ಬಸ್ ಪಾಸ್ ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿ ಸೇರಿದಂತೆ ಸುಮಾರು 15 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

2026-27ನೇ ಶೈಕ್ಷಣಿಕ ವರ್ಷದಲ್ಲಿ ಉಚಿತ ಬಸ್ ಪಾಸ್ ಯೋಜನೆ ಜಾರಿಯಾಗುವ ಮೊದಲು ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆದಿದ್ದ 19,792 ವಿದ್ಯಾರ್ಥಿಗಳಿಗೆ ಪಾವತಿಸಿದ ಮೊತ್ತವನ್ನು ಮರುಪಾವತಿಸಲು ಸರ್ಕಾರ ಈಗಾಗಲೇ ಅನುಮೋದನೆ ನೀಡಿದೆ.

ಗುರುಕುಲ ಮಕ್ಕಳ ದಾಸೋಹಕ್ಕೆ ದಾನಿಯ ಮಹಾದಾಸೋಹ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಠ-ಮಾನ್ಯಗಳು ಹಾಗೂ ಗುರುಕುಲಗಳು ನಡೆಸುವ ಅನ್ನ, ಅಕ್ಷರ ಮತ್ತು ಆಶ್ರಯದ ತ್ರಿವಿಧ ದಾಸೋಹ ಸೇವೆ ನಿರಂತರವಾಗಿ ಸಾಗಲು ದಾನಿಗಳ ಕೊಡುಗೆ ಅತ್ಯಮೂಲ್ಯವಾಗಿದೆ ಎಂದು ಹೂವಿನಶಿಗ್ಲಿ ವಿರಕ್ತಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳು ಹೇಳಿದರು.

ಸಮೀಪದ ಹೂವಿನಶಿಗ್ಲಿ ಮಠದ ಗುರುಕುಲದ ಮಕ್ಕಳ ನಿತ್ಯದ ದಾಸೋಹಕ್ಕಾಗಿ ಪ್ರತಿ ಆರು ತಿಂಗಳಿಗೊಮ್ಮೆ ದಿನಸಿ ಪದಾರ್ಥಗಳನ್ನು ಪೂರೈಸುತ್ತಿರುವ ಕಲಬುರಗಿ ಜಿಲ್ಲೆಯ ಸೋನಾಳ ಗ್ರಾಮದ ಉದ್ಯಮಿ ವಿಜಯಕುಮಾರ ಸೂರ್ಯಕಾಂತ ಬಿರಾದಾರ ಅವರಿಗೆ ಗುರುಕುಲ ಹಾಗೂ ಗ್ರಾಮಸ್ಥರ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಸರ್ಕಾರದ ಯಾವುದೇ ಅನುದಾನವಿಲ್ಲದೆ ಗುರುಕುಲದ ನೂರಾರು ಮಕ್ಕಳಿಗೆ ತ್ರಿವಿಧ ದಾಸೋಹ ಸೇವೆ ನೀಡುವುದು ಸವಾಲಿನ ಕೆಲಸವಾಗಿದೆ. ಇಂತಹ ಸಂದರ್ಭದಲ್ಲಿ ವಿಜಯಕುಮಾರ ಬಿರಾದಾರ ಅವರಂತಹ ದಾನಿಗಳ ಸಹಕಾರದಿಂದಲೇ ಸೇವಾ ಪರಂಪರೆ ನಿರಂತರವಾಗಿ ಸಾಗುತ್ತಿದೆ ಎಂದು ಹೇಳಿದರು.

ಸಮಾಜದಲ್ಲಿ ದಾನಿಗಳ ಸಂಖ್ಯೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಹಲವು ವರ್ಷಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿಗಳನ್ನು ದೇಣಿಗೆಯಾಗಿ ನೀಡುತ್ತಿರುವ ವಿಜಯಕುಮಾರ ಬಿರಾದಾರ ಅವರ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ಭಗವಂತ ಅವರಿಗೆ ಇನ್ನಷ್ಟು ಶಕ್ತಿ, ಸಂಪತ್ತು ಮತ್ತು ಸೇವಾ ಮನೋಭಾವವನ್ನು ಕರುಣಿಸಲಿ ಎಂದು ಹಾರೈಸಿದರು.

ತಹಸೀಲ್ದಾರ್ ರವಿ ಕೊರಕನವರ ಮಾತನಾಡಿ, ಗುರುಕುಲ ಶಿಕ್ಷಣ ಪದ್ಧತಿ ಮರೆಯಾಗುತ್ತಿರುವ ಕಾಲಘಟ್ಟದಲ್ಲಿ ಹೂವಿನಶಿಗ್ಲಿ ಮಠವು ಅನಾಥ ಹಾಗೂ ಬಡ ಮಕ್ಕಳಿಗೆ ಶಿಕ್ಷಣ ಮತ್ತು ಸಂಸ್ಕಾರ ನೀಡುವ ಮಹತ್ವದ ಕಾರ್ಯ ಮಾಡುತ್ತಿದೆ. ಈ ಸೇವೆಗೆ ವಿಜಯಕುಮಾರ ಬಿರಾದಾರ ಅವರು ಹಲವು ವರ್ಷಗಳಿಂದ ಬೆನ್ನೆಲುಬಾಗಿ ನಿಂತಿರುವುದು ಶ್ಲಾಘನೀಯ ಎಂದರು.

ಗುರುಕುಲದ ಆಡಳಿತಾಧಿಕಾರಿ ಆರ್.ಜಿ. ಚಿಕ್ಕಮಠ ಮಾತನಾಡಿ, ಭಕ್ತರು ಹಾಗೂ ದಾನಿಗಳ ಸಹಕಾರದಿಂದಲೇ ಮಠದಲ್ಲಿ ಅನಾಥ ಮತ್ತು ಬಡ ಮಕ್ಕಳ ಸೇವೆ ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಜಯಕುಮಾರ ಎಸ್. ಬಿರಾದಾರ, ಮಕ್ಕಳ ಸೇವೆಯೇ ದೇವರ ಸೇವೆ ಎಂಬ ನಂಬಿಕೆಯಿಂದ ಈ ಕಾರ್ಯದಲ್ಲಿ ತೊಡಗಿದ್ದೇನೆ. ಗುರುಕುಲದ ಸೇವೆಯಲ್ಲಿ ಭಾಗಿಯಾಗಿರುವುದು ಆತ್ಮಸಂತೃಪ್ತಿ ತಂದಿದ್ದು, ಮುಂದೆಯೂ ಈ ಸೇವೆ ಮುಂದುವರಿಯಲಿ ಎಂಬುದು ನನ್ನ ಆಶಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುಭಾಷ್ ಮಜ್ಜಗಿ, ರಾಜು ಚಂದರವಾಡ, ಧನರಾಜ ರಾಜಮನೆ, ಎಸ್.ಎಸ್. ಮೈನಾಲೆ, ಬಿ.ಬಿ. ಹೆಡೆ, ಮಹಾದೇವ ಬಿರಾದಾರ, ಮನೋಜ ಹಿರೇಮಠ, ಆಕಾಶ ಹೊನ್ನಿ, ಆರ್.ಬಿ. ಬನ್ನೂರ, ಚಂದ್ರಕಾಂತ ಘಾಟಗೆ, ಶೈಲಾ ಆದಿ, ಜಯಶ್ರೀ ಮೆಳ್ಳಿಗೇರಿ, ಯೋಗೇಂದ್ರ ಜಂಬಗಿ, ಗುರುಕುಲದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಆರ್.ವಿ. ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.

“ದಾನಿಗಳ ಸಹಕಾರದಿಂದಲೇ ಗುರುಕುಲಗಳ ತ್ರಿವಿಧ ದಾಸೋಹ ಸೇವೆ ನಿರಂತರವಾಗಿ ಸಾಗುತ್ತಿದೆ.”

— ಶ್ರೀ ಚನ್ನವೀರ ಮಹಾಸ್ವಾಮಿಗಳು, ಹೂವಿನಶಿಗ್ಲಿ ವಿರಕ್ತಮಠ

ಶ್ರದ್ಧಾ-ಭಕ್ತಿಯಿಂದ ಗಂಗಾಮಾತಾ ಜಯಂತಿ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಗಂಗಾಮತ ಸಮಾಜ ಬಾಂಧವರಿಂದ ಬುಧವಾರ ಗಂಗಾಮಾತಾ ಜಯಂತಿಯನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.

ಬೆಳಿಗ್ಗೆ ಪುರಸಭೆ ಸಮೀಪದ ಸುಣಗಾರ ಓಣಿಯ ಗಂಗಾದೇವಿ ದೇವಸ್ಥಾನದಲ್ಲಿ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಬಳಿಕ ಗಂಗಾದೇವಿ ಭಾವಚಿತ್ರದ ಮೆರವಣಿಗೆಯು ಪೂರ್ಣಕುಂಭ ಹಾಗೂ ವಾದ್ಯಗಳ ಸಮೇತ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಭ್ರಮದಿಂದ ಸಾಗಿತು.

ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಭರಮಣ್ಣ ಕಟ್ಟಿಮನಿ ಮಾತನಾಡಿ, ಭಗೀರಥನ ತಪಸ್ಸಿಗೆ ಮೆಚ್ಚಿ ಭೂಲೋಕಕ್ಕೆ ಅವತರಿಸಿದ ಗಂಗಾಮಾತೆ ಸಕಲ ಜೀವಜಗತ್ತಿನ ಆಶ್ರಯದಾತೆಯಾಗಿದ್ದು, ಜೀವಕೋಟಿಗಳಿಗೆ ಉಸಿರಾಗಿರುವ ಪವಿತ್ರ ದಿನವನ್ನು ಗಂಗಾಮಾತಾ ಜಯಂತಿಯಾಗಿ ಆಚರಿಸಲಾಗುತ್ತದೆ ಎಂದರು.

ಗಂಗಾಮಾತೆ ಜೀವಕೋಟಿಗಳಿಗೆ ಮೂಲಸೆಲೆ, ನೆಲೆ ಹಾಗೂ ಆಧಾರವಾಗಿರುವುದರಿಂದ ಪ್ರತಿಯೊಬ್ಬರೂ ಆಕೆಯನ್ನು ನಿತ್ಯ ಸ್ಮರಿಸಿ ಪೂಜಿಸಬೇಕು. ಗಂಗಾಮತ ಸಮಾಜದ ಬಾಂಧವರು ತಮ್ಮ ಸಾಂಪ್ರದಾಯಿಕ ಕಾಯಕದ ಜೊತೆಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲೂ ಮುನ್ನಡೆಯಬೇಕು. ಮಕ್ಕಳಿಗೆ ಸಂಸ್ಕಾರಯುತ ಹಾಗೂ ಉನ್ನತ ಶಿಕ್ಷಣ ಕಲ್ಪಿಸುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಕರೆ ನೀಡಿದರು.

ಮೆರವಣಿಗೆಯಲ್ಲಿ ಸಮಾಜದ ಮುಖಂಡರಾದ ಮಹದೇವಪ್ಪ ಕಟ್ಟಿಮನಿ, ಸೋಮಪ್ಪ ಸುಣಗಾರ, ಹೊನ್ನಪ್ಪ ಸುಣಗಾರ, ಸೋಮಪ್ಪ ತಂಡಿಗೇರ, ರವಿ ಸುಣಗಾರ, ಹೊಳಲಪ್ಪ ಕಟ್ಟಿಮನಿ, ಮಾಲತೇಶ ತಂಡಿಗೇರ, ಆಕಾಶ ಸವದತ್ತಿ, ರಾಜು ಸುಣಗಾರ, ಹನುಮಂತಪ್ಪ ಸುಣಗಾರ, ಕಿರಣ ಕಟ್ಟಿಮನಿ ಸೇರಿದಂತೆ ಸಮಾಜದ ಬಾಂಧವರು ಭಾಗವಹಿಸಿದ್ದರು.

error: Content is protected !!