Home Blog

ಮೊದಲ ಮಳೆಯಲ್ಲೇ ಲಕ್ಷ್ಮೇಶ್ವರ ತತ್ತರ..!

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಪಟ್ಟಣದ ಹಲವು ಪ್ರದೇಶಗಳು ಜಲಾವೃತವಾಗಿ ಜನರು ರಾತ್ರಿಯಿಡೀ ಪರದಾಡುವಂತಾಯಿತು.

ಮುಂಗಾರಿನ ಮೊದಲ ಮಳೆಯಲ್ಲೇ ತ್ಯಾಜ್ಯದಿಂದ ತುಂಬಿಕೊಂಡಿದ್ದ ಚರಂಡಿಗಳ ಕೊಳಚೆ ನೀರು ರಸ್ತೆಗಳಿಗೆ ಹರಿದು ಬಂದ ಪರಿಣಾಮ ರಸ್ತೆಗಳು ಕೆರೆಯಂತಾಗಿದ್ದವು. ಪಟ್ಟಣದ ಶಿಗ್ಲಿ ಕ್ರಾಸ್, ಗ್ರಂಥಾಲಯದ ಬಳಿ ಅಪಾರ ಪ್ರಮಾಣದ ನೀರು ಹರಿದು ಬಂದು ರಸ್ತೆಗಳಲ್ಲಿ ಕೊಳಚೆ ನೀರು ತುಂಬಿಕೊಂಡಿತ್ತು. ಬಹುತೇಕ ರಸ್ತೆಗಳಲ್ಲಿ ತಗ್ಗು-ಗುಂಡಿಗಳು ನೀರಿನಿಂದ ತುಂಬಿದ್ದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು.

ಅಂಬೇಡ್ಕರ್ ನಗರ, ಮುಕ್ತಿನಗರ, ಬಸವೇಶ್ವರ ನಗರ ಸೇರಿದಂತೆ ತಗ್ಗು ಪ್ರದೇಶಗಳ ಅನೇಕ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಆತಂಕದಲ್ಲಿ ರಾತ್ರಿಯಿಡೀ ಕಾಲ ಕಳೆಯುವಂತಾಯಿತು.

ಭಾರಿ ಗಾಳಿ-ಮಳೆಯ ಅಬ್ಬರಕ್ಕೆ ಪಟ್ಟಣದ ಹಲವೆಡೆ ವಿದ್ಯುತ್ ಕಂಬಗಳು ಹಾಗೂ ಮರಗಿಡಗಳು ನೆಲಕ್ಕುರುಳಿದ ಪರಿಣಾಮ ವಿದ್ಯುತ್ ಸಂಪರ್ಕ ಹಾಗೂ ಕೆಲವೆಡೆ ರಸ್ತೆ ಸಂಪರ್ಕ ಕೂಡ ಕಡಿತಗೊಂಡಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಹೆಸ್ಕಾಂ ಸಿಬ್ಬಂದಿ, ಪುರಸಭೆ ಸಿಬ್ಬಂದಿ ಹಾಗೂ ಪೊಲೀಸರು ರಾತ್ರಿಯಿಡೀ ಕಾರ್ಯನಿರ್ವಹಿಸಿದರು. ಅವರ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಸವಣೂರ ರಸ್ತೆಯ ಹೂವಮ್ಮ ಮಲ್ಲಪ್ಪ ಗದ್ದಿ ಅವರ ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ವೃದ್ಧೆ, ಮಹಿಳೆ ಮತ್ತು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಟ್ಟಿಗೆರೆಯ ಅಂಚಿನ ಪ್ರದೇಶದ ನಿವಾಸಿಗಳು ವರ್ಷಗಳಿಂದ ಅನುಭವಿಸುತ್ತಿರುವ ಹಿನ್ನೀರಿನ ಸಮಸ್ಯೆ ಪರಿಹರಿಸಲು ಪುರಸಭೆ ವತಿಯಿಂದ ಕೆರೆ ಅಭಿವೃದ್ಧಿಗಾಗಿ ₹೫೬ ಲಕ್ಷ ವೆಚ್ಚದಲ್ಲಿ ಕೈಗೊಂಡಿದ್ದ ಕಾಮಗಾರಿಗಳು ಮೊದಲ ಮಳೆಯ ಹೊಡೆತಕ್ಕೇ ಕಿತ್ತು ಹೋಗಿವೆ. ನೀರು ಕೆರೆಗೆ ಹರಿದು ಹೋಗಲು ಗುತ್ತಿಗೆದಾರರು ರಾತ್ರಿಯಿಡೀ ಹರಸಾಹಸ ಪಟ್ಟರೂ ಈ ಭಾಗದ ಜನರು ಸಮಸ್ಯೆಯಿಂದ ಹೊರಬರಲಿಲ್ಲ. ಹಾಕಲಾಗಿದ್ದ ಬಂಡು ಒಡೆದು ಹೋಗಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ.

ಇನ್ನೂ ಕೆರೆಗೆ ಚರಂಡಿ ಹಾಗೂ ಕೊಳಚೆ ನೀರು ಹರಿದು ಬರುತ್ತಿರುವುದು ಮುಂದುವರಿದಿದ್ದು, ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ಪುರಸಭೆಯ ಲಕ್ಷಾಂತರ ರೂಪಾಯಿ ಹಣ ಪೋಲಾಗಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.

“ಅವೈಜ್ಞಾನಿಕ ಮತ್ತು ಕಳಪೆ ಕಾಮಗಾರಿಯಿಂದ ಪುರಸಭೆಯ ಲಕ್ಷಾಂತರ ರೂಪಾಯಿ ಹಣ ಪೋಲಾಗಿದ್ದು, ಜನರ ಸಮಸ್ಯೆಯೂ ಪರಿಹಾರವಾಗಿಲ್ಲ, ಈ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು.”

ಶರಣು ಗೋಡಿ, ಜಿಲ್ಲಾಧ್ಯಕ್ಷ

ಕರವೇ ಸ್ವಾಭಿಮಾನಿ ಸೇನೆ

ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲ: ಮಿಥುನ ಜಿ. ಪಾಟೀಲ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಡಂಬಳ: ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಜಾರಿಗೆ ತರಲಾದ ನೀಟ್ ಪರೀಕ್ಷೆಯು ಇದೀಗ ವಿಶ್ವಾಸಾರ್ಹತೆಯ ಸಂಕಷ್ಟಕ್ಕೆ ಸಿಲುಕಿರುವುದು ಅತ್ಯಂತ ದುರಂತದ ಸಂಗತಿ ಎಂದು ರೋಣ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಜಿ. ಪಾಟೀಲ ಆರೋಪಿಸಿದರು.
ಡಂಬಳ ಹೋಬಳಿಯ ಡೋಣಿ ತಾಂಡದಲ್ಲಿ ಮಾತನಾಡಿದ ಅವರು, ೨೦೨೬ರ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ ಎಂದು ಹೇಳಿದರು.
ವರ್ಷಗಳ ಕಾಲ ಪರಿಶ್ರಮಪಟ್ಟು ತಯಾರಿ ನಡೆಸಿದ ವಿದ್ಯಾರ್ಥಿಗಳ ಭವಿಷ್ಯ ಇಂದು ಅನಿಶ್ಚಿತತೆಯ ಅಂಚಿನಲ್ಲಿದೆ. ಇಂತಹ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಜಾಗೃತಿ ವಹಿಸಿ ವಿದ್ಯಾರ್ಥಿಗಳಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ನೀಟ್ ಪರೀಕ್ಷೆ ರದ್ದುಗೊಂಡಿರುವುದು ಕೇವಲ ಆಡಳಿತಾತ್ಮಕ ನಿರ್ಧಾರವಲ್ಲ. ಇದು ಸುಮಾರು 22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಕನಸು ಮತ್ತು ಪೋಷಕರ ನಂಬಿಕೆಗೆ ಬಿದ್ದ ದೊಡ್ಡ ಹೊಡೆತವಾಗಿದೆ. ವಿದ್ಯಾರ್ಥಿಗಳ ಶ್ರಮಕ್ಕೆ ನ್ಯಾಯ ಸಿಗಬೇಕಾದರೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸಂಪೂರ್ಣ ಜವಾಬ್ದಾರಿ ಹೊತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿರುವುದು ಇದೇ ಮೊದಲಲ್ಲ ಎಂದು ಆರೋಪಿಸಿದ ಅವರು, 2024ರ ಪರೀಕ್ಷೆಯಲ್ಲಿಯೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಕೇಳಿ ಬಂದಿದ್ದವು. ಆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಪರೀಕ್ಷಾ ಸುರಕ್ಷತೆಗಾಗಿ ಕಠಿಣ ಮಾರ್ಗಸೂಚಿಗಳನ್ನು ರೂಪಿಸಿತ್ತು ಎಂದು ಹೇಳಿದರು.
ಡಿಜಿಟಲ್ ಲಾಕ್ ವ್ಯವಸ್ಥೆ, ಬಯೋಮೆಟ್ರಿಕ್ ಪರಿಶೀಲನೆ, ಸಿಸಿಟಿವಿ ನಿಗಾ ಸೇರಿದಂತೆ ಹಲವು ಭದ್ರತಾ ಕ್ರಮಗಳನ್ನು ಘೋಷಿಸಲಾಗಿದ್ದರೂ, ಅವು ಕೇವಲ ಕಾಗದದಲ್ಲೇ ಉಳಿದಿವೆ. ಜಾರಿಗೆ ತರುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.
ದೇಶದ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸಲಾಗದು. ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ನಂಬಿಕೆ ಉಳಿಸಿಕೊಳ್ಳಬೇಕಾದರೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ತಂತ್ರಜ್ಞಾನ ಆಧಾರಿತ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ಹೊತ್ತು ನೀಟ್ ಪರೀಕ್ಷೆಗೆ ಹಾಜರಾಗುತ್ತಾರೆ. ಗ್ರಾಮೀಣ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮಕ್ಕಳು ದಿನರಾತ್ರಿ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ಅವರ ಮಾನಸಿಕ ಸ್ಥೈರ್ಯ ಕುಗ್ಗಿಸುವುದಲ್ಲದೆ, ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಹಾಳು ಮಾಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
“ನೀಟ್ ಪರೀಕ್ಷೆಯ ವಿಶ್ವಾಸಾರ್ಹತೆ ಕುಸಿದರೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕತ್ತಲೆಯಾಗುತ್ತದೆ, ಕೇಂದ್ರ ಸರ್ಕಾರ ತಕ್ಷಣ ಹೊಣೆ ಹೊತ್ತು ಕ್ರಮ ಕೈಗೊಳ್ಳಬೇಕು.”
ಮಿಥುನ ಜಿ. ಪಾಟೀಲ
ರೋಣ ಗ್ಯಾರಂಟಿ ಸಮಿತಿ ಅಧ್ಯಕ್ಷ

ಗ್ರಾಮೀಣ ಮಕ್ಕಳಿಗೆ ವೇದಿಕೆ ಕಲ್ಪಿಸಿ ಸಾಂಸ್ಕೃತಿಕ ಪರಂಪರೆ ಉಳಿಸುತ್ತಿರುವ ನಟರಂಗ ಸಂಸ್ಥೆ: ಕೃಷ್ಣಗೌಡ ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಸಾಂಸ್ಕೃತಿಕ ಪರಿಸರವನ್ನು ಜೀವಂತವಾಗಿರಿಸುವಲ್ಲಿ ಸೋಮಶೇಖರ ಚಿಕ್ಕಮಠ ನೇತೃತ್ವದ ನಟರಂಗ ಸಂಸ್ಥೆಯ ಪಾತ್ರ ಅಪಾರವಾಗಿದೆ ಎಂದು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿದರು.

ನಗರದ ಪಂ. ಭೀಮಸೇನ್ ಜೋಶಿ ರಂಗಮಂದಿರದಲ್ಲಿ ಗುರುವಾರ ನಟರಂಗ ಕಲ್ಚರಲ್ ಅಕಾಡೆಮಿ ಮತ್ತು ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ‘ಮಕ್ಕಳ ಕಲರವ-೨೦೨೬’ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಸಂಸ್ಥೆಯ ದಶಮಾನೋತ್ಸವದ ಲೋಗೋ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನಟರಂಗ ಸಂಸ್ಥೆ ಗ್ರಾಮೀಣ ಭಾಗದ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೂ ಉತ್ತಮ ವೇದಿಕೆ ಕಲ್ಪಿಸಿದೆ. ಸಂಸ್ಥೆಯ ಚಟುವಟಿಕೆಗಳನ್ನು ಇನ್ನಷ್ಟು ವಿಸ್ತರಿಸಲು ಸ್ವಂತ ಜಾಗದ ಅಗತ್ಯವಿದೆ ಎಂಬುದನ್ನು ಪದಾಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಈ ಕುರಿತು ಸಂಬಂಧಪಟ್ಟವರ ಗಮನ ಸೆಳೆದು ಸಂಸ್ಥೆಗೆ ಜಾಗ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಪ್ರೀತಿ ಹೊನಗುಡಿ ಮಾತನಾಡಿ, ಉತ್ತರ ಕರ್ನಾಟಕವು ಕಲೆಯ ತವರೂರು. ಇಂದಿನ ಮೊಬೈಲ್ ಯುಗದಲ್ಲೂ ಜನಪದ ಹಾಗೂ ಕಲಾ ಸಂಸ್ಕೃತಿಯನ್ನು ಜನರು ಪೋಷಿಸುತ್ತಿರುವುದಕ್ಕೆ ನಟರಂಗ ಸಂಸ್ಥೆಯ ಈ ಅದ್ಧೂರಿ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದರು.

ಬೇಸಿಗೆ ಶಿಬಿರದ ಮೂಲಕ ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಶ್ಲಾಘನೀಯವಾಗಿ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಖ್ಯಾತ ವೈದ್ಯ ಡಾ. ಎಸ್.ವಿ. ಶಿವನಗೌಡ ಮಾತನಾಡಿ, ನಟರಂಗ ಸಂಸ್ಥೆಯ ತರಬೇತುದಾರರು ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹೊರತರುತ್ತಿದ್ದಾರೆ. ಇಲ್ಲಿ ತರಬೇತಿ ಪಡೆದ ಅನೇಕ ಮಕ್ಕಳು ಇಂದು ದೊಡ್ಡ ವೇದಿಕೆಗಳಲ್ಲಿ ಮಿಂಚುತ್ತಿರುವುದು ಹೆಮ್ಮೆಯ ಸಂಗತಿ. ಈ ಸಂಸ್ಥೆ ಮತ್ತಷ್ಟು ಹೆಮ್ಮರವಾಗಿ ಬೆಳೆಯಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಅಡ್ನೂರು-ರಾಜೂರ-ಗದಗ ಬೃಹನ್ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ನಟರಂಗ ಸಂಸ್ಥೆ ಸಮಾಜಕ್ಕೆ ಉತ್ತಮ ಕಲಾವಿದರನ್ನು ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.

ಪಂ. ಪಂಚಾಕ್ಷರ ಗವಾಯಿಗಳು ಹಾಗೂ ಪುಟ್ಟರಾಜ ಗವಾಯಿಗಳಂತಹ ಮಹಾನ್ ಪ್ರತಿಭೆಗಳು ಮತ್ತೆ ಈ ನೆಲದಲ್ಲಿ ಮೂಡಿಬರಬೇಕಾದರೆ ಇಂತಹ ಸಂಸ್ಥೆಗಳಿಗೆ ಸ್ವಂತ ನೆಲೆ ಅಗತ್ಯವಾಗಿದೆ. ಸರ್ಕಾರ ಜನಪರ ಸಂಸ್ಥೆಗಳಿಗೆ ಸೂಕ್ತ ಆಶ್ರಯ ನೀಡಬೇಕು ಎಂದು ಹೇಳಿದರು.

ವೇದಿಕೆಯ ಮೇಲೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಹಟ್ಟಿ, ರಂಗಕರ್ಮಿ ಮಹಾಂತೇಶ ಗಜೇಂದ್ರಗಡ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟರ್, ಉದ್ಯಮಿ ಕಿರಣ ಬೂಮಾ, ಎಚ್.ಎಸ್. ಶಿವನಗೌಡ್ರ, ಶರಣಬಸಪ್ಪ ಗುಡುಮನಿ, ಜಿ.ಬಿ. ಪಾಟೀಲ, ಮುತ್ತಣ್ಣ ಮುಶಿಗೇರಿ, ವಿಜಯಕುಮಾರ ಹಿರೇಮಠ, ವಿಜಯಲಕ್ಷ್ಮೀ ಮಾನ್ವಿ, ಚಂದ್ರು ಹರಿಜನ, ಬಾಬು ನರಸಾಪುರ, ನಾಗರತ್ನಾ ಚಿಕ್ಕಮಠ, ರಾಮಚಂದ್ರ ಬಳ್ಳಾರಿ, ಮಹೇಶ ಕರಿಬಿಷ್ಟಿ, ನಟರಂಗ ಅಕಾಡೆಮಿಯ ಅಧ್ಯಕ್ಷ ಸೋಮಶೇಖರ ಚಿಕ್ಕಮಠ, ಪೂಜಾ ಚಿಕ್ಕಮಠ ಹಾಗೂ ಸಂಗೀತಾ ಶಿಗ್ಗಾಂವಿ ಉಪಸ್ಥಿತರಿದ್ದರು.

ರಾಹುಲ್ ರಾಠೋಡ ಪ್ರಾರ್ಥಿಸಿದರು. ಪತ್ರಕರ್ತ ಆನಂದಯ್ಯ ವಿರಕ್ತಮಠ ಕಾರ್ಯಕ್ರಮ ನಿರೂಪಿಸಿದರು. ಶಿಬಿರದ ಮಕ್ಕಳಿಂದ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೆಳೆದವು.

“ಗ್ರಾಮೀಣ ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸಿ, ಉತ್ತರ ಕರ್ನಾಟಕದ ಕಲಾ ಸಂಸ್ಕೃತಿಯನ್ನು ಜೀವಂತವಾಗಿರಿಸಿರುವುದು ನಟರಂಗ ಸಂಸ್ಥೆಯ ದೊಡ್ಡ ಸಾಧನೆ.”

— ಕೃಷ್ಣಗೌಡ ಪಾಟೀಲ

ಯುವ ಕಾಂಗ್ರೆಸ್ ಘಟಕದ ಜಿಲ್ಲಾ ಅಧ್ಯಕ್ಷ

ಪಂಚ ಗ್ಯಾರಂಟಿ ಸೌಲಭ್ಯಕ್ಕೆ ವಿಳಂಬ ಬೇಡ: ಬಿ.ಬಿ. ಅಸೂಟಿ

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು, ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಬೇಕು ಎಂದರು.
ಜಿಲ್ಲೆಯ ಎಲ್ಲಾ ತಾಲೂಕುಗಳ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ತಾಲೂಕಿನಲ್ಲಿ ಗ್ಯಾರಂಟಿ ಶಿಬಿರ ಹಾಗೂ ಸಮಾವೇಶಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬಿ.ಬಿ. ಅಸೂಟಿ ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಿಂದ ಯಾವುದೇ ಅರ್ಹ ಫಲಾನುಭವಿ ವಂಚಿತರಾಗಬಾರದು. ಫಲಾನುಭವಿಗಳಿಗೆ ಹಣ ತಲುಪಿರುವ ಕುರಿತು ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿದರು.
ಅನ್ನಭಾಗ್ಯ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಳಂಬವಾಗದಂತೆ ಕ್ರಮ ವಹಿಸಬೇಕು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಅವರು ಒತ್ತಾಯಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಕುರಿತು ಅಧಿಕಾರಿಗಳು ನಿಯಮಿತ ಪರಾಮರ್ಶೆ ನಡೆಸಬೇಕು. ಯೋಜನೆಗಳ ಸೌಲಭ್ಯ ನಿಗದಿತ ಅವಧಿಯೊಳಗೆ ಅರ್ಹರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದೀಪಕ್ ಲಮಾಣಿ ಮಾತನಾಡಿ, ಶಕ್ತಿ ಯೋಜನೆಯ ಸೌಲಭ್ಯ ಪಡೆಯುವ ಮಹಿಳೆಯರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಗ್ಯಾರಂಟಿ ಯೋಜನೆಗಳು ಕಾಗದದಲ್ಲಲ್ಲ, ಜನರ ಬದುಕಿನಲ್ಲಿ ಕಾಣಿಸಬೇಕು.”
— ಬಿ.ಬಿ. ಅಸೂಟಿ

ಗೃಹಲಕ್ಷ್ಮಿ ಯೋಜನೆ
ಫೆಬ್ರವರಿ 2026ರವರೆಗೆ 2,61,860 ಅರ್ಜಿಗಳು ನೋಂದಣಿಯಾಗಿದ್ದು, ಅವುಗಳಲ್ಲಿ 2,52,843 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ.

ಶಕ್ತಿ ಯೋಜನೆ
1-6-2023ರಿಂದ 3-5-2026ರವರೆಗೆ ಜಿಲ್ಲೆಯಲ್ಲಿ 15,57,32,562 ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಸೌಲಭ್ಯ ಬಳಸಿದ್ದು, ₹528.54 ಕೋಟಿ ಆದಾಯ ದಾಖಲಾಗಿದೆ.

ಅನ್ನಭಾಗ್ಯ ಯೋಜನೆ
ಫೆಬ್ರವರಿ 2025ರಿಂದ ಏಪ್ರಿಲ್ 2026ರವರೆಗೆ 5.81 ಲಕ್ಷ ಕ್ವಿಂಟಲ್ ಹೆಚ್ಚುವರಿ ಅಕ್ಕಿ ವಿತರಣೆ ಮಾಡಲಾಗಿದೆ.

ಯುವನಿಧಿ ಯೋಜನೆ
ಜನವರಿ 2024ರಿಂದ ಮೇ 2026ರವರೆಗೆ 8,075 ಅರ್ಜಿಗಳು ಸ್ವೀಕೃತವಾಗಿದ್ದು, 6,712 ಫಲಾನುಭವಿಗಳಿಗೆ ₹19.72 ಕೋಟಿ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ.

ಗೃಹ ಜ್ಯೋತಿ ಯೋಜನೆ
ಏಪ್ರಿಲ್ 2026ರವರೆಗೆ 2,74,543 ಸ್ಥಾವರಗಳು ನೋಂದಣಿಯಾಗಿದ್ದು, ಶೇ. 98.51 ಪ್ರಗತಿ ಸಾಧಿಸಲಾಗಿದೆ.

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರಿ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ಆರೆಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಐಎಂಡಿ ಮಾಹಿತಿ ಪ್ರಕಾರ, ಉತ್ತರ ಒಳನಾಡು ಕರ್ನಾಟಕದಲ್ಲಿ ಮೇ 17ರವರೆಗೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಿಂಚು ಹಾಗೂ ಬಿರುಗಾಳಿಯಿಂದ ಕೆಲ ಪ್ರದೇಶಗಳಲ್ಲಿ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿರುವುದರಿಂದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಮೇ 18ರಂದು ಗಾಳಿಯ ವೇಗದಲ್ಲಿ ಸ್ವಲ್ಪ ಇಳಿಕೆ ಕಂಡುಬರುವ ನಿರೀಕ್ಷೆಯಿದ್ದರೂ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಇದೇ ಅವಧಿಯಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಶೇ.50ಕ್ಕಿಂತ ಹೆಚ್ಚು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಕ್ಕಾಲು ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಧ್ಯಪ್ರಾಚ್ಯ ಯುದ್ಧದ ನಡುವೆ ಮೋದಿ UAE ಭೇಟಿ: ರಕ್ಷಣಾ, ಇಂಧನ ಸೇರಿದಂತೆ ಮಹತ್ವದ ಒಪ್ಪಂದಗಳಿಗೆ ಸಹಿ

ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಉದ್ಭವಿಸಿರುವ ಯುದ್ಧ ಪರಿಸ್ಥಿತಿ ಹಾಗೂ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಮಹತ್ವದ ಭೇಟಿ ನೀಡಿದ್ದು, ಭಾರತ ಮತ್ತು ಯುಎಇ ನಡುವೆ ರಕ್ಷಣಾ, ಅನಿಲ ಪೂರೈಕೆ ಹಾಗೂ ಕಾರ್ಯತಂತ್ರದ ತೈಲ ನಿಕ್ಷೇಪಕ್ಕೆ ಸಂಬಂಧಿಸಿದ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.

ಯುಎಇ ಭಾರತೀಯ ಮೂಲಸೌಕರ್ಯ ಮತ್ತು ಹಣಕಾಸು ಸಂಸ್ಥೆಗಳಲ್ಲಿ 5 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಘೋಷಿಸಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಸಮ್ಮುಖದಲ್ಲಿ ಈ ಒಪ್ಪಂದಗಳ ವಿನಿಮಯ ನಡೆಯಿತು.

ಭಾರತ-ಯುಎಇ ನಡುವಿನ ಕಾರ್ಯತಂತ್ರದ ರಕ್ಷಣಾ ಪಾಲುದಾರಿಕೆಗಾಗಿ ಚೌಕಟ್ಟಿನ ಒಪ್ಪಂದವು ಪ್ರಮುಖ ಘೋಷಣೆಗಳಲ್ಲಿ ಒಂದಾಗಿದೆ. ಇದು ಎರಡೂ ರಾಷ್ಟ್ರಗಳ ನಡುವಿನ ಭದ್ರತೆ ಮತ್ತು ಮಿಲಿಟರಿ ಸಹಕಾರವನ್ನು ಇನ್ನಷ್ಟು ಗಟ್ಟಿಗೊಳಿಸುವ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

ಇದೇ ವೇಳೆ, ಗುಜರಾತ್‌ನ ದ್ವಾರಕಾ ಜಿಲ್ಲೆಯ ವಡಿನಾರ್‌ನಲ್ಲಿ ಹಡಗು ದುರಸ್ತಿ ಕ್ಲಸ್ಟರ್ ಸ್ಥಾಪನೆಗೆ ಸಂಬಂಧಿಸಿದ ಒಪ್ಪಂದಕ್ಕೂ ಸಹಿ ಹಾಕಲಾಗಿದೆ. ಈ ಒಪ್ಪಂದಗಳು ನವದೆಹಲಿ ಮತ್ತು ಅಬುಧಾಬಿ ನಡುವಿನ ಆರ್ಥಿಕ ಹಾಗೂ ಕಾರ್ಯತಂತ್ರದ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ.

ನಿಯೋಗ ಮಟ್ಟದ ಮಾತುಕತೆ ವೇಳೆ ಪ್ರಧಾನಿ ಮೋದಿ, ಭಾರತವು ಪ್ರತಿಯೊಂದು ಸಂದರ್ಭದಲ್ಲೂ ಯುಎಇ ಜತೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆ ಪುನಃಸ್ಥಾಪನೆಗಾಗಿ ಭಾರತ ಸಾಧ್ಯವಿರುವ ಎಲ್ಲ ಸಹಕಾರ ನೀಡಲು ಸಿದ್ಧವಿದೆ ಎಂದು ಅವರು ತಿಳಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಸಂಘರ್ಷದ ನಡುವೆ ಯುಎಇ ಮೇಲೆ ಇರಾನ್ ನಡೆಸಿದ ದಾಳಿಯನ್ನು ಅವರು ಖಂಡಿಸಿದ್ದು, ಹಾರ್ಮುಜ್ ಜಲಸಂಧಿ ಮುಕ್ತವಾಗಿರುವುದು ಜಾಗತಿಕ ಇಂಧನ ಭದ್ರತೆಗೆ ಅತ್ಯಂತ ಮುಖ್ಯ ಎಂದು ಒತ್ತಿಹೇಳಿದ್ದಾರೆ.

ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಿರುವುದಕ್ಕಾಗಿ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ದ್ವಿಪಕ್ಷೀಯ ಸಹಕಾರದ ಮಹತ್ವ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಜಾಗತಿಕ ಮಟ್ಟದಲ್ಲಿ ಪರಿಣಾಮ ಬೀರುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸಂವಾದ ಮತ್ತು ರಾಜತಾಂತ್ರಿಕತೆಯೇ ಉತ್ತಮ ಮಾರ್ಗ ಎಂದು ಪ್ರಧಾನಿ ಸಲಹೆ ನೀಡಿದ್ದಾರೆ.

ಯುಎಇ ಭಾರತಕ್ಕೆ ಮೂರನೇ ಅತಿದೊಡ್ಡ ವ್ಯಾಪಾರ ಪಾಲುದಾರವಾಗಿದ್ದು, ಕಳೆದ 25 ವರ್ಷಗಳಲ್ಲಿ ಏಳನೇ ಅತಿದೊಡ್ಡ ಹೂಡಿಕೆ ಮೂಲವಾಗಿದೆ. ಅಲ್ಲದೆ, 45 ಲಕ್ಷಕ್ಕೂ ಹೆಚ್ಚು ಭಾರತೀಯರು ಯುಎಇನಲ್ಲಿ ನೆಲೆಸಿದ್ದು, ಅವರ ಕಲ್ಯಾಣ ಕುರಿತೂ ಈ ಭೇಟಿಯಲ್ಲಿ ಚರ್ಚೆ ನಡೆಸಲಾಗಿದೆ.

ಪ್ರಸ್ತುತ ಪ್ರಕ್ಷುಬ್ಧ ಪರಿಸ್ಥಿತಿಯ ನಡುವೆಯೂ ಯುಎಇ ಭಾರತದ ವಿಶ್ವಾಸಾರ್ಹ ಇಂಧನ ಪಾಲುದಾರವಾಗಿಯೇ ಉಳಿದಿದ್ದು, ದೀರ್ಘಾವಧಿಯ ಪೂರೈಕೆ ಒಪ್ಪಂದಗಳು ಭಾರತದ ಇಂಧನ ಭದ್ರತೆಯನ್ನು ಮತ್ತಷ್ಟು ಬಲಪಡಿಸಲಿವೆ.

 

ಜನಪರ ಸರ್ಕಾರವಾಗಿದ್ದರೆ ಈ ನಿರ್ಧಾರ ಕೈಗೊಳ್ಳುತ್ತಿರಲಿಲ್ಲ: ಇಂಧನ ದರ ಏರಿಕೆಗೆ ಪರಮೇಶ್ವರ್ ವಾಗ್ದಾಳಿ

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮೂಲಕ ಕೇಂದ್ರ ಸರ್ಕಾರದ ನೀತಿ ಬಹಿರಂಗವಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟೀಕಿಸಿದ್ದಾರೆ.

ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್, “ಕೇಂದ್ರ ಸರ್ಕಾರ ಜನಪರವಾಗಿಲ್ಲ ಎಂಬುದನ್ನು ಇಂಧನ ದರ ಏರಿಕೆಯೇ ತೋರಿಸುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಬಾರದಿತ್ತು” ಎಂದು ಅಭಿಪ್ರಾಯಪಟ್ಟರು.

ಈ ಸಮಸ್ಯೆ ಎದುರಾಗುವ ಸಾಧ್ಯತೆ ಮೊದಲಿನಿಂದಲೂ ಕೇಂದ್ರ ಸರ್ಕಾರಕ್ಕೆ ಗೊತ್ತಿತ್ತು. ಆದರೂ ದರ ಏರಿಕೆ ಮಾಡಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಹಿಜಾಬ್ ವಿಚಾರವಾಗಿ ಪ್ರತಿಕ್ರಿಯಿಸಿದ ಡಾ. ಜಿ. ಪರಮೇಶ್ವರ್, ಯಾರು ಏನೇ ಟೀಕೆ ಮಾಡಿದರೂ ಸರ್ಕಾರ ಎಲ್ಲರೂ ಚೆನ್ನಾಗಿರಬೇಕು ಎಂಬ ಉದ್ದೇಶದಿಂದ ಕಾನೂನು ಮತ್ತು ನೀತಿಗಳನ್ನು ರೂಪಿಸುತ್ತದೆ. ಹಿಜಾಬ್ ಹೊಸ ವಿಷಯವಲ್ಲ, ಹಿಂದಿನಿಂದಲೂ ಬಳಸಲಾಗುತ್ತಿತ್ತು. ಮಧ್ಯದಲ್ಲಿ ಕೆಲವರು ಗೊಂದಲ ಸೃಷ್ಟಿಸಿದರು ಎಂದು ಹೇಳಿದರು.

ಇದೇ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಕುರಿತು ಅನುಮಾನ ವ್ಯಕ್ತಪಡಿಸಿದ ಅವರು, ಎಸ್‌ಐಆರ್ ಬಗ್ಗೆ ನಮಗೂ ಸಂಶಯಗಳಿವೆ. ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಪ್ರಕ್ರಿಯೆ ನಡೆದ ಸ್ಥಳಗಳಲ್ಲಿ ಪ್ರಶ್ನೆಗಳು ಉದ್ಭವಿಸಿವೆ ಎಂದು ತಿಳಿಸಿದರು.

ಜಾತ್ರೆ ಮುಗಿಸಿ ವಾಪಸ್ ಬರುತ್ತಿದ್ದವರ ಮೇಲೆ ದುರಂತ: ಟ್ಯಾಂಕರ್ ಡಿಕ್ಕಿಗೆ ಸೇತುವೆಯಿಂದ ಟ್ರ್ಯಾಕ್ಟರ್ ಪತನ – 6 ಮಂದಿ ಸಾವು

0

ಕೊಪ್ಪಳ: ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಭದ್ರಾ ಸೇತುವೆ ಮೇಲೆ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಹುಲಿಗೆಮ್ಮ ಜಾತ್ರೆ ಮುಗಿಸಿಕೊಂಡು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮಕ್ಕೆ ಮರಳುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಡಿಕ್ಕಿಯ ತೀವ್ರತೆಗೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ತುಂಗಭದ್ರಾ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಅಪಘಾತದಲ್ಲಿ ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾರೇಶ್ ಹಾಗೂ ಗೌರಮ್ಮ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಹತ್ತಕ್ಕೂ ಹೆಚ್ಚು ಮಂದಿಯನ್ನು ಹೊಸಪೇಟೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿರುವ ಹಿನ್ನೆಲೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಅಪಘಾತದ ನಂತರ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮುನಿರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ವಿಜಯಪುರದ ಚಿನ್ನದಂಗಡಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ

ವಿಜಯಪುರ: ಚಿನ್ನಾಭರಣ ತಯಾರಿಕಾ ಮಳಿಗೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಅಕ್ಕಸಾಲಿಗರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ನಗರದ ಹೃದಯಭಾಗವಾದ ಸರಾಫ್ ಬಜಾರ್‌ನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಬೆಳ್ಳಂಬೆಳಗ್ಗೆ ಕೆಲಸ ಆರಂಭಿಸಲು ಅಂಗಡಿಗೆ ಬಂದಿದ್ದ ಕಾರ್ಮಿಕರು ಸಿದ್ಧತೆ ನಡೆಸುತ್ತಿದ್ದ ವೇಳೆ ಏಕಾಏಕಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಅಂಗಡಿಗಳಲ್ಲಿದ್ದ ವಸ್ತುಗಳು ನೆಲಕ್ಕಪ್ಪಳಿಸಿದ್ದು, ಗಾಜುಗಳು ಪುಡಿಪುಡಿಯಾಗಿವೆ.

ಘಟನೆಯಲ್ಲಿ ಬೀಜು (38) ಹಾಗೂ ನಾನಾ ಹಕ್ಕಿಂ (40) ಎಂಬ ಇಬ್ಬರು ಅಕ್ಕಸಾಲಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿನ್ನಾಭರಣ ತಯಾರಿಕೆಗೆ ಬಳಸಲಾಗುವ ಕುಲುಮೆ ಕಾರ್ಯಕ್ಕಾಗಿ ಉಪಯೋಗಿಸುತ್ತಿದ್ದ ಗ್ಯಾಸ್ ಸಿಲಿಂಡರ್ ಲೀಕ್ ಆಗಿದ್ದೇ ಸ್ಫೋಟಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಸ್ಫೋಟದ ಪರಿಣಾಮ ಅಂಗಡಿಯ ಕಬ್ಬಿಣದ ಶಟರ್ ಸಂಪೂರ್ಣವಾಗಿ ಕಿತ್ತು ರಸ್ತೆಗೆ ಎಸೆಯಲ್ಪಟ್ಟಿದ್ದು, ಪಕ್ಕದ ಗಿಫ್ಟ್ ಸೆಂಟರ್ ಅಂಗಡಿಯಲ್ಲಿದ್ದ ಬೆಲೆಬಾಳುವ ವಸ್ತುಗಳಿಗೂ ಭಾರೀ ಹಾನಿಯಾಗಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭೋಜಶಾಲಾ ವಿವಾದಕ್ಕೆ ತೆರೆ: ದೇವಸ್ಥಾನವೆಂದು ಘೋಷಿಸಿದ ಮಧ್ಯಪ್ರದೇಶ ಹೈಕೋರ್ಟ್!

ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯ ದಶಕಗಳ ಭೋಜಶಾಲಾ-ಕಮಲ್ ಮೌಲಾ ಮಸೀದಿ ವಿವಾದಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಮಧ್ಯಪ್ರದೇಶ ಹೈಕೋರ್ಟ್ ಭೋಜಶಾಲಾ ಆವರಣವನ್ನು ದೇವಸ್ಥಾನ ಎಂದು ಘೋಷಿಸಿ ಐತಿಹಾಸಿಕ ತೀರ್ಪು ನೀಡಿದೆ.

ಇಂದೋರ್ ಪೀಠದ ಹೈಕೋರ್ಟ್, ಈ ಸಂಕೀರ್ಣದಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಸಂಪೂರ್ಣ ಹಕ್ಕು ಇದೆ ಎಂದು ಸ್ಪಷ್ಟಪಡಿಸಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ನಡೆಸಿದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಆಧರಿಸಿ ನ್ಯಾಯಾಲಯ ಈ ಮಹತ್ವದ ತೀರ್ಪು ಪ್ರಕಟಿಸಿದೆ.

ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಮೇ 12ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಲಾಗಿದೆ.

ತೀರ್ಪಿನಲ್ಲಿ, ವಿವಾದಿತ ಸಂಪೂರ್ಣ ಸಂಕೀರ್ಣವು ಮೂಲತಃ ವಾಗ್ದೇವಿ ಅಂದರೆ ಸರಸ್ವತಿ ದೇವಸ್ಥಾನ ಹಾಗೂ ರಾಜ ಭೋಜ ಸ್ಥಾಪಿಸಿದ್ದ ಸಂಸ್ಕೃತ ಅಧ್ಯಯನ ಕೇಂದ್ರವಾಗಿತ್ತು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪ್ರಸ್ತುತ ಇರುವ ಮಸೀದಿ ರಚನೆ ಹಳೆಯ ದೇವಸ್ಥಾನದ ಅವಶೇಷಗಳು ಮತ್ತು ಸ್ತಂಭಗಳನ್ನು ಬಳಸಿ ನಿರ್ಮಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಎಎಸ್‌ಐ ಸಮೀಕ್ಷೆಯಲ್ಲಿ ಪತ್ತೆಯಾದ ಪರಮಾರ ರಾಜರ ಕಾಲದ ಸಂಸ್ಕೃತ ಮತ್ತು ಪ್ರಾಕೃತ ಶಾಸನಗಳು, ಶಿಲ್ಪ ಕೆತ್ತನೆಗಳು ಹಾಗೂ ಬ್ರಹ್ಮ, ಗಣೇಶ ಸೇರಿದಂತೆ 94ಕ್ಕೂ ಹೆಚ್ಚು ಹಿಂದೂ ದೇವತೆಗಳ ಭಿನ್ನಗೊಂಡ ವಿಗ್ರಹಗಳು ಈ ಸ್ಥಳದ ಮೂಲ ಸ್ವರೂಪವನ್ನು ದೃಢಪಡಿಸುತ್ತವೆ ಎಂದು ನ್ಯಾಯಾಲಯ ಉಲ್ಲೇಖಿಸಿದೆ.

ಇದಲ್ಲದೆ, ಪ್ರಸ್ತುತ ಇರುವ ಕಮಲ್ ಮೌಲಾ ಮಸೀದಿಯನ್ನು ಮುಸ್ಲಿಂ ಆಡಳಿತಗಾರರ ಕಾಲದಲ್ಲಿ ಪೂರ್ವ ಅಸ್ತಿತ್ವದಲ್ಲಿದ್ದ ಹಿಂದೂ ದೇವಸ್ಥಾನದ ಸ್ತಂಭಗಳು, ಕಲ್ಲುಗಳು ಮತ್ತು ಇತರ ಅವಶೇಷಗಳನ್ನು ಬಳಸಿ ನಿರ್ಮಿಸಲಾಗಿದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಎಎಸ್‌ಐ ಸಮೀಕ್ಷೆ ಏಕಪಕ್ಷೀಯವಾಗಿದೆ ಹಾಗೂ ಮುಸ್ಲಿಂ ಅರ್ಜಿದಾರರ ಹಕ್ಕುಗಳನ್ನು ಕಡೆಗಣಿಸಲಾಗಿದೆ ಎಂಬ ಕಮಲ್ ಮೌಲಾ ಮಸೀದಿ ಸಮಿತಿಯ ವಾದಗಳನ್ನು ಹೈಕೋರ್ಟ್ ತಳ್ಳಿ ಹಾಕಿದೆ.

ಧಾರ್ಮಿಕ ಸ್ಥಳಗಳ ಸಂರಕ್ಷಣೆ ಹಾಗೂ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಈ ತೀರ್ಪು ದಶಕಗಳ ವಿವಾದಕ್ಕೆ ಅಂತ್ಯ ಹಾಡುವ ಸಾಧ್ಯತೆ ಮೂಡಿಸಿದ್ದು, ದೇಶದಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

error: Content is protected !!