Home Blog

ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌; ಶ್ರೀಲಂಕಾ ಮಣಿಸಿ ತ್ರಿಕೋನ ಸರಣಿ ಗೆದ್ದ ಭಾರತ!

0

ಕೊಲಂಬೊ: ಡಂಬುಲ್ಲಾದಲ್ಲಿ ಭಾನುವಾರ ನಡೆದ ತ್ರಿಕೋನ ಏಕದಿನ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಎ ತಂಡ 66 ರನ್‌ಗಳ ಅಂತರದಿಂದ ಶ್ರೀಲಂಕಾ ಎ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಎ ತಂಡ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 377 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ತಂಡದ ಪರ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 94 ರನ್‌ಗಳ ಸ್ಫೋಟಕ ಇನ್ನಿಂಗ್ಸ್‌ ಆಡಿದರು. ಅವರ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ 8 ಸಿಕ್ಸರ್‌ಗಳು ಸೇರಿದ್ದವು. ಅಲ್ಲದೆ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಲಿಸ್ಟ್ ‘ಎ’ ಕ್ರಿಕೆಟ್‌ನಲ್ಲಿ ಹೊಸ ದಾಖಲೆಯನ್ನೂ ನಿರ್ಮಿಸಿದರು.

ನಾಯಕ ತಿಲಕ್ ವರ್ಮಾ 67 ರನ್‌ ಹಾಗೂ ಅನುಕುಲ್ ರಾಯ್ 15 ಎಸೆತಗಳಲ್ಲಿ 39 ರನ್‌ಗಳ ವೇಗದ ಇನ್ನಿಂಗ್ಸ್‌ ಆಡಿ ತಂಡದ ಮೊತ್ತವನ್ನು 377ಕ್ಕೆ ಏರಿಸಲು ನೆರವಾದರು.

378 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಶ್ರೀಲಂಕಾ ಎ ತಂಡ 47.1 ಓವರ್‌ಗಳಲ್ಲಿ 311 ರನ್‌ಗಳಿಗೆ ಆಲೌಟ್‌ ಆಯಿತು. ಸದೀರ ಸಮರವಿಕ್ರಮ 52 ರನ್‌ ಹಾಗೂ ವನುಜಾ ಸಹನ್ 62 ರನ್‌ಗಳ ಅರ್ಧಶತಕ ಬಾರಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಉಳಿದ ಬ್ಯಾಟರ್‌ಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಭಾರತ ಎ ತಂಡದ ಪರ ವೇಗಿ ಯಶ್ ಠಾಕೂರ್ ಹಾಗೂ ಸ್ಪಿನ್ನರ್ ವಿಪ್ರಜ್ ನಿಗಮ್ ತಲಾ ಮೂರು ವಿಕೆಟ್‌ಗಳನ್ನು ಪಡೆದು ಶ್ರೀಲಂಕಾ ಬ್ಯಾಟಿಂಗ್‌ ಬೆನ್ನೆಲುಬು ಮುರಿದರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮಗ್ರ ಪ್ರದರ್ಶನ ನೀಡಿದ ಭಾರತ ಎ ತಂಡ ತ್ರಿಕೋನ ಸರಣಿಯ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಗೋಡೆಗೆ ನೀರು ಹಾಕುತ್ತಿದ್ದಾಗ ವಿದ್ಯುತ್‌ ಸ್ಪರ್ಶ; ಅರಣ್ಯಾಧಿಕಾರಿ ಸ್ಥಳದಲ್ಲೇ ಸಾವು!

ಹಾಸನ: ಮನೆ ನಿರ್ಮಾಣ ಕಾಮಗಾರಿ ವೇಳೆ ವಿದ್ಯುತ್‌ ಶಾಕ್‌ಗೆ ಅರಣ್ಯ ಇಲಾಖೆಯ ರೇಂಜ್ ಫಾರೆಸ್ಟ್‌ ಆಫೀಸರ್‌ ಮೃತಪಟ್ಟಿರುವ ಘಟನೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಶನಿವಾರ ನಡೆದಿದೆ.

ಮೃತರನ್ನು ಜಗದೀಶ್‌ ಪಿ. (46) ಎಂದು ಗುರುತಿಸಲಾಗಿದೆ. ಅವರು ಕುಣಿಗಲ್‌ನಲ್ಲಿ ಆರ್‌ಎಫ್‌ಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ನೂತನ ಮನೆ ನಿರ್ಮಿಸುತ್ತಿದ್ದು, ಶನಿವಾರ ಮನೆಯ ಗೋಡೆಗೆ ಕ್ಯೂರಿಂಗ್‌ಗಾಗಿ ನೀರು ಹಾಕುತ್ತಿದ್ದ ವೇಳೆ ವಿದ್ಯುತ್‌ ಶಾಕ್‌ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಜಗದೀಶ್‌ ಅವರು 2015ರಿಂದ 2020ರವರೆಗೆ ಹಾಸನ ಜಿಲ್ಲೆಯಲ್ಲಿ ಆರ್‌ಎಫ್‌ಒ ಆಗಿ ಸೇವೆ ಸಲ್ಲಿಸಿದ್ದರು. ಅವರ ಅಕಾಲಿಕ ನಿಧನಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಾತಿ ವಿರೋಧದ ನಡುವೆಯೇ ನಡೆದಿದ್ದ ಮದುವೆ; ವರ್ಷದಲ್ಲೇ ಯುವತಿ ಶವವಾಗಿ ಪತ್ತೆ!

0

ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಕೈದಾಳೆ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ಅಮೂಲ್ಯ ಎಂದು ಗುರುತಿಸಲಾಗಿದೆ.

ಅಮೂಲ್ಯ ಅದೇ ಗ್ರಾಮದ ಧನುಷ್ (19) ಎಂಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಇಬ್ಬರೂ ಸಹಪಾಠಿಗಳಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಜಾತಿ ಕಾರಣದಿಂದಾಗಿ ಇವರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಇಬ್ಬರೂ ಪೊಲೀಸ್ ಭದ್ರತೆಯಲ್ಲಿ ವಿವಾಹವಾಗಿದ್ದರು ಎನ್ನಲಾಗಿದೆ.

ಮದುವೆಯಾಗಿ ಕೇವಲ ಒಂದು ವರ್ಷ ಕಳೆದಿರುವಾಗಲೇ ಅಮೂಲ್ಯ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಯುವತಿಯ ಸಾವಿನ ಕುರಿತು ಆಕೆಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಪತಿ ಧನುಷ್ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ.

ಈ ಸಂಬಂಧ ಧನುಷ್ ಹಾಗೂ ಆತನ ಕುಟುಂಬ ಸದಸ್ಯರ ವಿರುದ್ಧ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಯುವತಿಯ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕವೇ ತಿಳಿದುಬರಬೇಕಿದೆ.

ತೆಲಂಗಾಣದಲ್ಲಿ ಎಲೆಕ್ಟ್ರಿಕ್ ಬಸ್‌ಗೆ ಬೆಂಕಿ: 37 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

0

ಹೈದರಾಬಾದ್: ಹೈದರಾಬಾದ್‌ಗೆ ತೆರಳುತ್ತಿದ್ದ ಎಲೆಕ್ಟ್ರಿಕ್ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ 37 ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಎಲೆಕ್ಟ್ರಿಕ್ ಬಸ್ ಕರೀಂನಗರದಿಂದ ಹೈದರಾಬಾದ್ ಕಡೆ ಪ್ರಯಾಣಿಸುತ್ತಿದ್ದ ವೇಳೆ ಎಲ್‌ಎಂಡಿ ಕಾಲೋನಿ ಸಮೀಪದಲ್ಲಿ ಬಸ್‌ನಿಂದ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ.

ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದರೂ, ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ವ್ಯಾಪಿಸಿ ಸಂಪೂರ್ಣ ಬಸ್ ಜ್ವಾಲೆಗೆ ಆಹುತಿಯಾಗಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಆದರೆ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿರುವುದು ವರದಿಯಾಗಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ.

ಗಂಡ-ಹೆಂಡತಿ ನಡುವೆ ಎಷ್ಟು ವಯಸ್ಸಿನ ಅಂತರ ಇರಬೇಕು? ಚಾಣಕ್ಯರ ನೀತಿ ಏನು ಹೇಳುತ್ತದೆ?

0

ಮದುವೆಯಲ್ಲಿ ಜಾತಿ, ಧರ್ಮ, ಆರ್ಥಿಕ ಸ್ಥಿತಿಗಿಂತ ಪರಸ್ಪರ ಪ್ರೀತಿ, ನಂಬಿಕೆ ಮತ್ತು ಹೊಂದಾಣಿಕೆ ಮುಖ್ಯ ಎಂಬ ಅಭಿಪ್ರಾಯ ಸಾಮಾನ್ಯವಾಗಿದೆ.

ಆದರೆ, ಆಚಾರ್ಯ ಚಾಣಕ್ಯರ ಪ್ರಕಾರ ದಾಂಪತ್ಯ ಜೀವನ ಯಶಸ್ವಿಯಾಗಲು ಪತಿ-ಪತ್ನಿಯರ ನಡುವಿನ ವಯಸ್ಸಿನ ಅಂತರವೂ ಪ್ರಮುಖ ಪಾತ್ರ ವಹಿಸುತ್ತದೆ.

ಚಾಣಕ್ಯ ನೀತಿಯ ಪ್ರಕಾರ, ಗಂಡ ಮತ್ತು ಹೆಂಡತಿಯ ನಡುವಿನ ವಯಸ್ಸಿನ ವ್ಯತ್ಯಾಸವು ಅತಿಯಾಗಿ ಇರಬಾರದು. ವೈವಾಹಿಕ ಜೀವನವು ಕೇವಲ ಪ್ರೀತಿ ಮತ್ತು ಭಾವನೆಗಳ ಮೇಲೆ ಮಾತ್ರ ನಿಂತಿಲ್ಲ; ಅದು ಮಾನಸಿಕ, ಭಾವನಾತ್ಮಕ ಹಾಗೂ ದೈಹಿಕ ಸಮತೋಲನದ ಮೇಲೂ ಅವಲಂಬಿತವಾಗಿದೆ ಎಂದು ಅವರು ಹೇಳುತ್ತಾರೆ.

ಆಚಾರ್ಯ ಚಾಣಕ್ಯರ ಅಭಿಪ್ರಾಯದಂತೆ, ಪತಿಯು ಪತ್ನಿಗಿಂತ ಸ್ವಲ್ಪ ಹಿರಿಯನಾಗಿರುವುದು ಉತ್ತಮ. ಇದರಿಂದ ಕುಟುಂಬ ನಿರ್ವಹಣೆಯಲ್ಲಿ ಅನುಭವ, ತಾಳ್ಮೆ ಮತ್ತು ಪ್ರಬುದ್ಧತೆ ಸಹಕಾರಿಯಾಗುತ್ತದೆ. ಆದರೆ ವಯಸ್ಸಿನ ಅಂತರವು ಅತಿಯಾಗಿ ಹೆಚ್ಚಾದರೆ ದಂಪತಿಗಳ ನಡುವೆ ಆಲೋಚನೆ, ಆಸಕ್ತಿ ಹಾಗೂ ಜೀವನಶೈಲಿಯಲ್ಲಿ ವ್ಯತ್ಯಾಸಗಳು ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಚಾಣಕ್ಯ ನೀತಿಯಲ್ಲಿ ಗಂಡ ಮತ್ತು ಹೆಂಡತಿಯ ನಡುವೆ 3 ರಿಂದ 5 ವರ್ಷಗಳ ವಯಸ್ಸಿನ ಅಂತರವನ್ನು ಸೂಕ್ತವೆಂದು ಪರಿಗಣಿಸಲಾಗಿದೆ. ಈ ಮಟ್ಟದ ವಯಸ್ಸಿನ ವ್ಯತ್ಯಾಸ ದಂಪತಿಗಳ ನಡುವೆ ಉತ್ತಮ ಹೊಂದಾಣಿಕೆ, ಪರಸ್ಪರ ಅರ್ಥೈಸಿಕೊಳ್ಳುವಿಕೆ ಮತ್ತು ಜೀವನದ ಸವಾಲುಗಳನ್ನು ಒಟ್ಟಾಗಿ ಎದುರಿಸುವ ಮನೋಭಾವವನ್ನು ಬೆಳೆಸಲು ನೆರವಾಗುತ್ತದೆ ಎಂದು ಹೇಳಲಾಗಿದೆ.

ಇದೇ ವೇಳೆ, ವಯಸ್ಸಿನ ಅಂತರ ಹೆಚ್ಚು ಇದ್ದರೆ ಜೀವನದ ದೃಷ್ಟಿಕೋನ, ಆಸಕ್ತಿಗಳು ಮತ್ತು ನಿರೀಕ್ಷೆಗಳಲ್ಲಿ ಭಿನ್ನತೆ ಕಾಣಿಸಿಕೊಳ್ಳಬಹುದು. ಇದು ಕೆಲವೊಮ್ಮೆ ಮನಸ್ತಾಪ, ಭಿನ್ನಾಭಿಪ್ರಾಯ ಮತ್ತು ಸಂಬಂಧದಲ್ಲಿ ಬಿರುಕು ಮೂಡಲು ಕಾರಣವಾಗಬಹುದು ಎಂಬ ಅಭಿಪ್ರಾಯವನ್ನು ಚಾಣಕ್ಯ ನೀತಿ ವ್ಯಕ್ತಪಡಿಸುತ್ತದೆ.

ಆದಾಗ್ಯೂ, ಇವು ಚಾಣಕ್ಯ ನೀತಿಯಲ್ಲಿ ಉಲ್ಲೇಖಿಸಲಾದ ಸಾಂಪ್ರದಾಯಿಕ ಅಭಿಪ್ರಾಯಗಳಾಗಿದ್ದು, ಆಧುನಿಕ ಸಮಾಜದಲ್ಲಿ ಯಶಸ್ವಿ ದಾಂಪತ್ಯ ಜೀವನವು ಪರಸ್ಪರ ಗೌರವ, ಸಂವಹನ, ವಿಶ್ವಾಸ ಮತ್ತು ಹೊಂದಾಣಿಕೆಯ ಮೇಲೆ ಹೆಚ್ಚಾಗಿ ಅವಲಂಬಿತವಾಗಿದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

ಮೈಸೂರಿಗೆ ನುಗ್ಗಿದರಾ ಅಕ್ರಮ ವಲಸಿಗರು? ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರು ಬಂದಿಳಿದಿರುವ ಶಂಕೆ ವ್ಯಕ್ತವಾಗಿದ್ದು, ಹೌರಾ ಎಕ್ಸ್‌ಪ್ರೆಸ್ ರೈಲಿನ ಮೂಲಕ ಆಗಮಿಸಿದ 40ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಘಟನೆ ಶನಿವಾರ ನಡೆದಿದೆ.

ಕೋಲ್ಕತ್ತಾದಿಂದ ವಾರಕ್ಕೊಮ್ಮೆ ಮೈಸೂರಿಗೆ ಆಗಮಿಸುವ ಹೌರಾ ಎಕ್ಸ್‌ಪ್ರೆಸ್ ರೈಲು ಬೆಳಿಗ್ಗೆ ನಗರ ತಲುಪಿದ ವೇಳೆ, ರೈಲಿನಿಂದ ಇಳಿದ ಕಾರ್ಮಿಕರ ಗುಂಪಿನ ಚಲನವಲನಗಳ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಅವರನ್ನು ತಡೆದು ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಹಲವರ ಬಳಿ ಪಶ್ಚಿಮ ಬಂಗಾಳದ ವಿಳಾಸ ಹೊಂದಿರುವ ಆಧಾರ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳು ಪತ್ತೆಯಾಗಿವೆ. ಆದರೆ, ಈ ದಾಖಲೆಗಳು ನಕಲಿಯಾಗಿರುವ ಸಾಧ್ಯತೆಯಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದು, ಇವರೆಲ್ಲರೂ ಅಕ್ರಮವಾಗಿ ಭಾರತ ಪ್ರವೇಶಿಸಿರುವ ಬಾಂಗ್ಲಾದೇಶಿ ವಲಸಿಗರಾಗಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಶಂಕಿತ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ರೈಲಿನಿಂದ ಇಳಿದ ಕೆಲವರು ನಗರದ ವಿವಿಧ ಭಾಗಗಳಿಗೆ ತೆರಳಲು ಯತ್ನಿಸಿದ್ದರೆ, ಕೆಲವರು ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೆಂದು ತಿಳಿದುಬಂದಿದೆ.

ವಿಚಾರಣೆ ವೇಳೆ ಕೆಲವರು ಪರಸ್ಪರ ವಿರೋಧಾಭಾಸದ ಮಾಹಿತಿಯನ್ನು ನೀಡಿದ್ದು, ಮೈಸೂರಿನಿಂದ ಕೊಡಗು, ಪಿರಿಯಾಪಟ್ಟಣ ಹಾಗೂ ಕೇರಳದ ವಿವಿಧ ಭಾಗಗಳಿಗೆ ಕೆಲಸದ ನಿಮಿತ್ತ ತೆರಳಲು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಎಲ್. ನಾಗೇಂದ್ರ, ಪಶ್ಚಿಮ ಬಂಗಾಳದಿಂದ ಅಕ್ರಮ ವಲಸಿಗರು ರಾಜ್ಯಕ್ಕೆ ಪ್ರವೇಶಿಸುತ್ತಿದ್ದಾರೆ ಎಂಬ ಆರೋಪ ಮಾಡಿದ್ದು, ನಕಲಿ ದಾಖಲೆಗಳ ಮೂಲಕ ರಾಜ್ಯದ ವಿವಿಧ ಭಾಗಗಳಿಗೆ ತೆರಳುತ್ತಿರುವವರ ಮೇಲೆ ಸರ್ಕಾರ ಕಣ್ಣಿಡಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ರಾಜ್ಯ ಸರ್ಕಾರವು ಅಕ್ರಮ ವಲಸೆಯನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಘಟನೆಯು ಮೈಸೂರಿನಲ್ಲಿ ಸಾರ್ವಜನಿಕರು ಹಾಗೂ ಭದ್ರತಾ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ವಶಕ್ಕೆ ಪಡೆದಿರುವವರು ನಿಜವಾಗಿಯೂ ಬಾಂಗ್ಲಾದೇಶದ ಅಕ್ರಮ ವಲಸಿಗರೇ ಅಥವಾ ಪಶ್ಚಿಮ ಬಂಗಾಳದ ಕಾರ್ಮಿಕರೇ ಎಂಬುದು ಪೊಲೀಸರ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ. ಸದ್ಯ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಹರಿಪ್ರಸಾದ್–ಡಿಕೆ ನಾಯಕತ್ವದಲ್ಲಿ ಕಾಂಗ್ರೆಸ್ ಗೆ ಹೊಸ ಶಕ್ತಿ; ದೇಶಕ್ಕೆ ಕರ್ನಾಟಕವೇ ದಿಕ್ಸೂಚಿ – ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಪಕ್ಷನಿಷ್ಠೆ, ಸೈದ್ಧಾಂತಿಕ ಬದ್ಧತೆಗೆ ಇಡೀ ದೇಶದಲ್ಲಿ ಹೆಸರು ಮಾಡಿರುವ ಬಿಕೆ ಹರಿಪ್ರಸಾದ್ ನೇತೃತ್ವದ ಪಕ್ಷ ಸಂಘಟನೆ ಮತ್ತು ಅಭಿವೃದ್ಧಿಯನ್ನೇ ಧ್ಯೇಯವಾಗಿಟ್ಟುಕೊಂಡ ಡಿಕೆ ಶಿವಕುಮಾರ್ ಅವರ ಆಡಳಿತದ ಮೂಲಕ ಕರ್ನಾಟಕದ ಕಾಂಗ್ರೆಸ್ ಇಡೀ ದೇಶಕ್ಕೆ ಹೊಸ ದಿಕ್ಸೂಚಿ ನೀಡಲಿದೆ. ಆಮೂಲಕ ಮತ್ತೆ ದೇಶವ್ಯಾಪಿ ಕಾಂಗ್ರೆಸ್ಸೀಕರಣಕ್ಕೆ ನಾಂದಿ ಹಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದ್ದ ಸಾವಿರಾರು ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು. ಜನಪರ ಮತ್ತು ಅಭಿವೃದ್ಧಿ ಪರ ಆಡಳಿತಕ್ಕಾಗಿ ಕಾಂಗ್ರೆಸ್ ಸರ್ಕಾರಕ್ಕೆ ಜನಮೆಚ್ಚುಗೆ ಇದೆ ಎನ್ನುವುದಕ್ಕೆ ಮೊನ್ನೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಂದಿರುವ ಫಲಿತಾಂಶ ಸಾಕ್ಷಿಯಾಗಿದೆ.

ವಿಪಕ್ಷದ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರೇ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ್ದು ಇಡೀ ದೇಶಕ್ಕೆ ಹೊಸ ಸಂದೇಶವನ್ನು ನೀಡಿದೆ‌. ಇಡೀ ದೇಶದಲ್ಲಿ ಬಿಜೆಪಿಯ ದ್ವೇಷದ ರಾಜಕಾರಣ ವಿಜೃಂಭಿಸುತ್ತಿದ್ದರೆ, ರಾಜ್ಯದಲ್ಲಿ ಸ್ನೇಹದ ರಾಜಕಾರಣ ಕಾಣುತ್ತಿದ್ದೇವೆ ಎಂದು ಹೇಳಿದರು.

1980ರ ಕಾಲದಲ್ಲಿ ಸೇವಾದಳ, ಎನ್ಎಸ್ ಯುಐ ಮೂಲಕ ಮೇಲಕ್ಕೆ ಬಂದ ಬಿಕೆ ಹರಿಪ್ರಸಾದರು ಎಐಸಿಸಿ ಕಾರ್ಯದರ್ಶಿಯಾಗಿ ಇಡೀ ದೇಶದಲ್ಲಿ 19ಕ್ಕು ಹೆಚ್ಚು ರಾಜ್ಯಗಳಲ್ಲಿ ಉಸ್ತುವಾರಿಯಾಗಿ ಕೆಲಸ ಮಾಡಿದವರು. ಸುದೀರ್ಘ ರಾಜಕಾರಣದಲ್ಲಿ ಎಂದೂ ಅಧಿಕಾರದ ಹಿಂದೆ ಹೋದವರಲ್ಲ. ಸದಾ ತನ್ನ ಕರ್ಮವನ್ನು ಮಾಡುತ್ತಲೇ ಬಂದ ಹರಿಪ್ರಸಾದ್ ಮತ್ತು ಡಿಕೆ ಶಿವಕುಮಾರ್ ಅವರನ್ನು ಗುರುತಿಸಿ ಹೈಕಮಾಂಡ್ ಗುರುತರ ಜವಾಬ್ದಾರಿ ಕೊಟ್ಟಿದೆ. ಮುಖ್ಯಮಂತ್ರಿ ಆದರೂ ಡಿಕೆ ಶಿವಕುಮಾರ್ ಅವರು ತಾನೊಬ್ಬ ಜನಸೇವಕ ಎಂದೇ ಹೇಳುತ್ತಾರೆ. ಇವರಿಬ್ಬರ ರಾಜಕೀಯ ಹಾದಿ ಪಕ್ಷದ ಯುವ ಕಾರ್ಯಕರ್ತರಿಗೆ ಮಾದರಿಯಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇವರ ನಾಯಕತ್ವದಲ್ಲಿ ಮುಂದಿನ ಗ್ರಾಮ ಪಂಚಾಯತ್ ಮತ್ತು 2028ರ ಚುನಾವಣೆಯನ್ನು ಕಾಂಗ್ರೆಸ್ ಅಭೂತಪೂರ್ವ ರೀತಿಯಲ್ಲಿ ಗೆಲ್ಲಲಿದೆ. ಆಮೂಲಕ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಸಿಗಲಿದೆ. ಇದಕ್ಕಾಗಿ ನಮ್ಮೆಲ್ಲ ಕಾರ್ಯಕರ್ತರು ಪಕ್ಷ ಸಂಘಟನೆಗಾಗಿ ಶಕ್ತಿ ತುಂಬುವ ಕೆಲಸ ಮಾಡಬೇಕಾಗಿದೆ ಎಂದು ಹೆಬ್ಬಾಳ್ಕರ್ ಕರೆ ನೀಡಿದರು.

“ಕಾರ್ಯಕರ್ತರೇ ಪಕ್ಷದ ಜೀವಾಳ. ಕಾರ್ಯಕರ್ತರಿಲ್ಲದೆ ಪಕ್ಷವಿಲ್ಲ, ಪಕ್ಷವಿಲ್ಲದೆ ಸರ್ಕಾರವಿಲ್ಲ” ಎಂದು ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್, ಗ್ರಾಮ ಮಟ್ಟದಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಕರೆ ನೀಡಿದರು. “ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವದಲ್ಲಿ ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಹಾಗೂ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ವಿಜಯದ ನೂತನ ಇತಿಹಾಸ ಬರೆಯಲಿದೆ” ಎಂದು ಹೇಳಿದರು.

ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ.ಜಿ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರು, ಪಕ್ಷದ ನಾಯಕರು ಉಪಸ್ಥಿತರಿದ್ದರು.

ದುರಾಡಳಿತದಿಂದ ಇಡೀ ದೇಶದಲ್ಲಿ ಕರ್ನಾಟಕಕ್ಕೆ ಕೆಟ್ಟ ಹೆಸರು ಬಂದಿದೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಬೆಂಗಳೂರಿನ ಜನರು ನಲುಗಿ ಹೋಗುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಏನನ್ನೂ ಮಾಡುತ್ತಿಲ್ಲ. ಬದಲಿಗೆ ಯೋಜನೆಗಳ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಹೊಡೆಯುತ್ತಿದೆ. ಮಳೆ ಬಂದರೆ ರಸ್ತೆಗಳಲ್ಲಿ ಮೊಣಕಾಲುದ್ದ ನೀರು ನಿಲ್ಲುತ್ತಿದೆ. ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲು ಸರ್ಕಾರದ ಬಳಿ ಹಣ ಇಲ್ಲವಂತೆ, ಆದರೆ ದೋಚುವುದಕ್ಕೆ ಯೋಜನೆಗಳ ಮೇಲೆ ಯೋಜನೆಗಳನ್ನು ರೂಪಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಸಚಿವರು ದೂರಿದರು.

ಈ ಸರ್ಕಾರದ ಯೋಗ್ಯತೆಗೆ ಸಮರ್ಪಕವಾಗಿ ಕಸ ವಿಲೇವಾರಿ ಮಾಡುವುದಕ್ಕೆ ಆಗುತ್ತಿಲ್ಲ. ಬೀದಿ ಬೀದಿಯಲ್ಲಿ ರಾಶಿಗಟ್ಟಲೆ ಕಸ ಬಿದ್ದಿದೆ. ಕೆಟ್ಟ ಮತ್ತು ದುರಾಡಳಿತದಿಂದ ಇಡೀ ದೇಶದಲ್ಲಿ ಕರ್ನಾಟಕಕ್ಕೆ ಅತ್ಯಂತ ಕೆಟ್ಟ ಹೆಸರು ಬಂದಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಡ ಜನರಿಗೆ ಒಳ್ಳೆಯದು ಮಾಡುವ ಉದ್ದೇಶ ಈ ಸರ್ಕಾರಕ್ಕೆ ಇಲ್ಲ. ಗ್ಯಾರೆಂಟಿಗಳನ್ನು ಕೊಟ್ಟಹಾಗೆ ಕೊಟ್ಟು ಇದೀಗ ಅದರಲ್ಲಿ ಮುಕ್ಕಾಲು ಪಾಲು ಜನರನ್ನು ಕಿತ್ತು ಹಾಕುವ ಸಂಚು ನಡೆಸಿದ್ದಾರೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಬೀದಿ ಬದಿ ವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ ಎಂದು ₹10,000 ನೀಡುವ ಯೋಜನೆ ರೂಪಿಸಿದ್ದೆ. ನನ್ನ ಸರ್ಕಾರ ಹೋದ ಮೇಲೆ ಆ ಯೋಜನೆಯನ್ನು ಕೈ ಬಿಡಲಾಯಿತು.

ಬಡ ವ್ಯಾಪಾರಿಗಳು ಎಷ್ಟೇ ಗೋಗರಿದರೂ ಆ ಯೋಜನೆಯನ್ನು ಪುನಾ ಜಾರಿಗೆ ತರಲಿಲ್ಲ. ಕೇಂದ್ರ ಸರ್ಕಾರ ಪಿಎಂ ಸ್ವನಿಧಿ ಎಂಬ ಯೋಜನೆಯ ಹೆಸರಿನಲ್ಲಿ ಇಂತಹದೇ ಉತ್ತಮ ಯೋಜನೆಯನ್ನು ಜಾರಿಗೆ ತಂದಿದೆ. ಆ ಮೂಲಕ ಬಡ ವ್ಯಾಪಾರಿಗಳಿಗೆ ₹50,000 ಸಾಲ ನೀಡುತ್ತಿದೆ ಎಂದು ಸಚಿವರು ಹೇಳಿದರು.

ನನಗೊಂದು ಅವಕಾಶ ಕೊಡಿ. ಇದೆಲ್ಲವನ್ನು ಸರಿ ಮಾಡುವ ಕೆಲಸ ಮಾಡುತ್ತೇನೆ. ಬಡವರಿಗೆ ನಿವೇಶನ ಕೊಟ್ಟು ಎಷ್ಟೋ ಕಾಲವಾಯಿತು. ರಸ್ತೆಗಳ ಗುಂಡಿಗಳನ್ನು ದಿನವೂ ಜನರು ನೋಡಿ ಕಷ್ಟಕಾರ್ಪಣ್ಯ ಅನುಭವಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಪಾಲಿಕೆ ಸದಸ್ಯರು ಇಲ್ಲವಾಗಿ ಎಷ್ಟೋ ವರ್ಷ ಆಯಿತು. ಕೊನೆ ಪಕ್ಷ ಪಾಲಿಕೆ ಸದಸ್ಯರಾದರು ಇದ್ದಿದ್ದರೆ ಅವರ ಮನೆಗೆ ಹೋಗಿ ಕಷ್ಟ ಹೇಳಿಕೊಳ್ಳುತ್ತಿದ್ದರು. ಗ್ರೇಟರ್ ಬೆಂಗಳೂರು ಮಾಡಿದ್ದಾರೆ, ಆದರೆ ಚುನಾವಣೆ ನಡೆಸುವ ಧೈರ್ಯ ಈ ಸರ್ಕಾರಕ್ಕೆ ಇಲ್ಲ. ಏನಾದರೂ ಮಾಡಿ ಮುಂದಕ್ಕೆ ಹಾಕಿಸುವ ಹುನ್ನಾರ ಮಾಡುತ್ತಲೇ ಇದ್ದಾರೆ. ಹೀಗಾದರೆ ಬೆಂಗಳೂರಿನ ಪರಿಸ್ಥಿತಿ ಎಲ್ಲಿಗೆ ಬರುತ್ತದೆ ಎಂಬುದನ್ನು ಜನತೆ ಯೋಚಿಸಬೇಕು ಎಂದು ಸಚಿವರು ಹೇಳಿದರು.

ಅಖಂಡ ಮನೆಗೆ ವಾಪಸ್ ಬಂದಿದ್ದಾರೆ;

ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡ ಸಚಿವ ಕುಮಾರಸ್ವಾಮಿ ಅವರು, ಅಖಂಡ ಶ್ರೀನಿವಾಸಮೂರ್ತಿ ಅವರು ತಮ್ಮ ಸ್ವಂತ ಮನೆಗೆ ವಾಪಸ್ಸಾಗಿದ್ದಾರೆ. ಅವರನ್ನು ಹೃದಯಪೂರ್ವಕವಾಗಿ ಪಕ್ಷಕ್ಕೆ ಬರಮಾಡಿಕೊಡಿದ್ದೇನೆ. ಮುಂದಿನ ದಿನಗಳಲ್ಲಿ ಅವರು ಬೆಂಗಳೂರು ಸೇರಿ ರಾಜ್ಯದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸುವ ಕೆಲಸ ಮಾಡುತ್ತಾರೆ ಎಂದರು.

ಅಖಂಡ ಶ್ರೀನಿವಾಸ್ ಮೂರ್ತಿ ಅವರನ್ನು ಕಾಂಗ್ರೆಸ್ ಪಕ್ಷ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಏನೆಲ್ಲಾ ಕಹಿ ಘಟನೆಗಳು ನಡೆದವು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಈ ಬಹಿರಂಗ ಸಭೆಯಲ್ಲಿ ನಾನು ಚರ್ಚೆ ಮಾಡಲು ಬಯಸುವುದಿಲ್ಲ. ಅವರ ಮನೆಗೆ ಬೆಂಕಿ ಹಾಕಲಾಯಿತು. ಆದರೂ ಅವರು ಎದೆಗುಂದದೆ ತನ್ನನ್ನು ನಂಬಿದ ಕಾರ್ಯಕರ್ತರ ಜೊತೆ ನಿಂತರು. ಕೆಲವರು ಪರಿಸ್ಥಿತಿಯ ದುರ್ಲಾಭ ಪಡೆಯಲು ಪ್ರಯತ್ನಿಸಿದರು ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಪುಲಕೇಶಿ ನಗರ ವಿಶಿಷ್ಟವಾದ ಕ್ಷೇತ್ರ. ಈ ಕ್ಷೇತ್ರಕ್ಕೂ ನನಗೂ ಅವಿನ ಭಾವ ಸಂಬಂಧ ಇದೆ. ಕಾರ್ಯಕ್ರಮ ನಡೆಯುತ್ತಿರುವ ಪಿಳ್ಳಣ್ಣ ಗಾರ್ಡನ್ ನ ಈ ಕ್ರೀಡಾಂಗಣ ನನಗೆ ಚಿರಪರಿಚಿತ. ಎಷ್ಟೋ ಸಂದರ್ಭದಲ್ಲಿ ಇಲ್ಲಿನ ಎಲ್ಲಾ ರಸ್ತೆಗಳಲ್ಲಿ ಸಂಚರಿಸಿ ಜನರನ್ನು ಭೇಟಿಯಾಗಿದ್ದೇನೆ. ಹೀಗಾಗಿ ಪಕ್ಷವನ್ನು ಸಂಘಟಿಸುವುದು ಸವಾಲಿನ ಕೆಲಸವಲ್ಲ. ಅಖಂಡ ಶ್ರೀನಿವಾಸ ಮೂರ್ತಿ ಸಮರ್ಥವಾಗಿ ಕಾರ್ಯಕರ್ತರನ್ನು ಸಂಘಟಿಸಲಿದ್ದಾರೆ ಎಂದು ಸಚಿವರು ಹೇಳಿದರು.

ನಾನು ಜಾತಿ ಹೆಸರಿನಲ್ಲಿ ರಾಜಕೀಯ ಮಾಡುವುದಿಲ್ಲ. ರಾಷ್ಟ್ರಕವಿ ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ತತ್ವದ ಅಡಿಯಲ್ಲಿ ರಾಜಕಾರಣ ಮಾಡುವವನು. ಎಲ್ಲರನ್ನೂ ಒಳಗೊಂಡು ಉತ್ತಮ ಸಮಾಜಕ್ಕಾಗಿ ದುಡಿಮೆ ಮಾಡುವ ಉದ್ದೇಶ ನನ್ನದು. ನನ್ನ ಇಡೀ ಜೀವಮಾನದ ಉದ್ದಕ್ಕೂ ಇದನ್ನೇ ಮಾಡಿಕೊಂಡು ಬಂದಿದ್ದೇನೆ ಎಂದರು ಕೇಂದ್ರ ಸಚಿವರು.

ಈ ಸಂದರ್ಭದಲ್ಲಿ ಮಾತನಾಡಿದ ಅಖಂಡ ಶ್ರೀನಿವಾಸ ಮೂರ್ತಿ ಅವರು, ಜೆಡಿಎಸ್ ಪಕ್ಷಕ್ಕೆ ನಾನು ಹೊರಗಿನವನಲ್ಲ. ಯಾರದೋ ಮಾತು ಕೇಳಿ ಹೊರಕ್ಕೆ ಹೋಗಬೇಕಾಯಿತು. ಅದರಿಂದ ಉಂಟಾದ ಕಷ್ಟಗಳೇನು ಎಂಬುದು ನನಗೆ ಅರಿವಾಗಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ನನ್ನ ನಾಯಕರು. ಅವರಲ್ಲಿ ವಿಶ್ವಾಸವಿರಿಸಿ ಜೆಡಿಎಸ್ ಸೇರಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗಾಗಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಮಾಜಿ ಶಾಸಕರು ಹಾಗೂ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷ ಎಚ್ಎಂ ರಮೇಶ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೊತೆಗೆ ಕ್ಷೇತ್ರದ ಹಿರಿಯ ಮುಖಂಡರು ಹಾಗೂ ಅಸಂಖ್ಯಾತ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಅವರ ಅಸಂಖ್ಯಾತ ಬೆಂಬಲಿಗರು ಜೆಡಿಎಸ್ ಪಕ್ಷವನ್ನು ಸೇರಿದರು.

ರಾಜ್ಯದಲ್ಲಿ ಈ ವರ್ಷದಿಂದಲೇ ವಿದ್ಯಾರ್ಥಿ ಚುನಾವಣೆ ಆರಂಭ: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ಪ್ರಸಕ್ತ ವರ್ಷದಿಂದಲೇ ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಿ ಮಾತನಾಡಿದ ಅವರು, ವಿದ್ಯಾರ್ಥಿ ನಾಯಕತ್ವವನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿ ಚುನಾವಣೆಗಳನ್ನು ಮತ್ತೆ ಆರಂಭಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷರಾಗಿ ತಾವು ಅಧಿಕಾರ ಸ್ವೀಕರಿಸಿದ ಸಂದರ್ಭವನ್ನು ಡಿ.ಕೆ. ಶಿವಕುಮಾರ್ ಸ್ಮರಿಸಿದರು.

2020ರ ಮಾರ್ಚ್ 10ರಂದು ಸೋನಿಯಾ ಗಾಂಧಿ ಅವರು ನನಗೆ ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿ ನೀಡಿದ್ದರು. ಆದರೆ ಕೋವಿಡ್ ಕಾರಣದಿಂದ ಅದ್ದೂರಿ ಕಾರ್ಯಕ್ರಮ ನಡೆಸಲು ಸಾಧ್ಯವಾಗಲಿಲ್ಲ. ಜೂಮ್ ಸಭೆಯ ಮೂಲಕವೇ ನಾನು ಅಧಿಕಾರ ಸ್ವೀಕರಿಸಿದ್ದೆ. ನಿಮ್ಮೆಲ್ಲರ ವಿಶ್ವಾಸ ಮತ್ತು ಸಹಕಾರದಿಂದ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೇನೆ. ನಾನು ಮನುಷ್ಯನಾಗಿರುವುದರಿಂದ ನನ್ನಿಂದಲೂ ಕೆಲವು ತಪ್ಪುಗಳು ಆಗಿರಬಹುದು ಎಂದು ಹೇಳಿದರು.

ಕೋವಿಡ್ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕರಾಗಿ ನೇಮಕ ಮಾಡಲಾಗಿತ್ತು. ಅಂದು ತಾವು ಮತ್ತು ಸಿದ್ದರಾಮಯ್ಯ ಸೇರಿ ಪಕ್ಷವನ್ನು ಬಲಪಡಿಸುವ ಸಂಕಲ್ಪ ಮಾಡಿದ್ದೆವು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಮಾರ್ಗದರ್ಶನ ಮತ್ತು ಆಶೀರ್ವಾದದಿಂದ ಪಕ್ಷದ ಸಂಘಟನೆಗೆ ಶಕ್ತಿ ತುಂಬಲು ಸಾಧ್ಯವಾಯಿತು ಎಂದು ಹೇಳಿದರು.

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜನರ ನೆರವಿಗೆ ಕಾಂಗ್ರೆಸ್ ಪಕ್ಷ ನಿಂತಿತ್ತು. ಲಕ್ಷಾಂತರ ಆಹಾರ ಕಿಟ್‌ಗಳನ್ನು ವಿತರಿಸಲಾಗಿತ್ತು. ಯಾದಗಿರಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಜನರು ಸುರಕ್ಷಿತವಾಗಿ ತಲುಪಲು ಬಸ್ ಹಾಗೂ ರೈಲು ವ್ಯವಸ್ಥೆ ಕಲ್ಪಿಸಲಾಗಿತ್ತು. ಕೆಪಿಸಿಸಿ ವತಿಯಿಂದ ₹1 ಕೋಟಿ ನೆರವು ನೀಡಲಾಗಿತ್ತು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಯೋಗವು ಆರೋಗ್ಯಕರ ಮತ್ತು ಸಮತೋಲಿತ ಜೀವನಕ್ಕೆ ಅತ್ಯಂತ ವಿಶ್ವಾಸಾರ್ಹ ಸಾಧನ: ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: “ಭಾರತದ ಸಾವಿರಾರು ವರ್ಷಗಳಷ್ಟು ಹಳೆಯದಾದ ಯೋಗ ಪರಂಪರೆಗೆ ಜಾಗತಿಕ ಮನ್ನಣೆ ತಂದುಕೊಟ್ಟಿರುವ ಅಂತರರಾಷ್ಟ್ರೀಯ ಯೋಗ ದಿನವು ಇಂದು ವಿಶ್ವದ ಅತಿದೊಡ್ಡ ಆರೋಗ್ಯ ಮತ್ತು ಕ್ಷೇಮ ಅಭಿಯಾನಗಳಲ್ಲಿ ಒಂದಾಗಿ ರೂಪುಗೊಂಡಿದೆ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಆಯುಷ್ ಇಲಾಖೆಯ ವತಿಯಿಂದ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ–2026 ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿದ ಅವರು, ಬಳಿಕ ಮಾತನಾಡಿದರು.

“ಭಾರತದ ಪ್ರಾಚೀನ ಸಂಪ್ರದಾಯದ ಅಮೂಲ್ಯ ಕೊಡುಗೆಯಾದ ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಅತ್ಯಂತ ವಿಶ್ವಾಸಾರ್ಹ ಸಾಧನವಾಗಿದೆ. ಯೋಗವು ಮನಸ್ಸು ಮತ್ತು ದೇಹದ ಏಕತೆ, ಆಲೋಚನೆ ಮತ್ತು ಕ್ರಿಯೆಯ ಸಮನ್ವಯ, ಸಂಯಮ ಮತ್ತು ತೃಪ್ತಿ, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಾಮರಸ್ಯ ಹಾಗೂ ಆರೋಗ್ಯ ಮತ್ತು ಯೋಗಕ್ಷೇಮದ ಸಮಗ್ರ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ,” ಎಂದು ರಾಜ್ಯಪಾಲರು ತಿಳಿಸಿದರು.

“ಇಂದಿನ ಸ್ಪರ್ಧಾತ್ಮಕ ಮತ್ತು ಒತ್ತಡದ ಜೀವನಶೈಲಿಯು ಅನೇಕ ದೈಹಿಕ ಮತ್ತು ಮಾನಸಿಕ ಸವಾಲುಗಳನ್ನು ಸೃಷ್ಟಿಸಿದ್ದು, ಅಂತಹ ಸಂದರ್ಭದಲ್ಲಿ ಯೋಗವು ಆರೋಗ್ಯಕರ ದೇಹ, ಶಾಂತ ಮನಸ್ಸು ಮತ್ತು ಸಕಾರಾತ್ಮಕ ದೃಷ್ಟಿಕೋನವನ್ನು ಒದಗಿಸುತ್ತದೆ” ಎಂದು ಅವರು ಹೇಳಿದರು.

“ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಉಪಕ್ರಮದ ಮೇರೆಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2014ರಲ್ಲಿ ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿರುವುದು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಹೆಮ್ಮೆಯ ವಿಷಯವಾಗಿದೆ. ಇಂದು 190ಕ್ಕೂ ಹೆಚ್ಚು ದೇಶಗಳಲ್ಲಿ ಲಕ್ಷಾಂತರ ಜನರು ಯೋಗವನ್ನು ಅಭ್ಯಾಸ ಮಾಡುತ್ತಿದ್ದು, ಇದು ಭಾರತದ ಜ್ಞಾನ, ಸಂಸ್ಕೃತಿ ಮತ್ತು “ವಸುಧೈವ ಕುಟುಂಬಕಂ” ಎಂಬ ಮನೋಭಾವಕ್ಕೆ ದೊರೆತ ಜಾಗತಿಕ ಮಾನ್ಯತೆಯಾಗಿದೆ” ಎಂದು ಅವರು ಅಭಿಪ್ರಾಯಪಟ್ಟರು.

“ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣಕ್ಕಾಗಿ ಆರೋಗ್ಯವಂತ, ಶಕ್ತಿಯುತ ಹಾಗೂ ಮಾನಸಿಕವಾಗಿ ಸದೃಢ ಯುವಜನತೆ ಅಗತ್ಯವಾಗಿದ್ದು, ಈ ದಿಕ್ಕಿನಲ್ಲಿ ಯೋಗವು ಪರಿಣಾಮಕಾರಿ ಸಾಧನವಾಗಿದೆ. ಯುವಕರು ಪ್ರತಿದಿನ ಸ್ವಲ್ಪ ಸಮಯವನ್ನು ಯೋಗಕ್ಕೆ ಮೀಸಲಿಟ್ಟರೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ತಮ್ಮ ವ್ಯಕ್ತಿತ್ವವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಬಹುದು” ಎಂದು ರಾಜ್ಯಪಾಲರು ಕರೆ ನೀಡಿದರು.

“ಈ ವರ್ಷದ ಅಂತರರಾಷ್ಟ್ರೀಯ ಯೋಗ ದಿನದ ಧ್ಯೇಯವಾಕ್ಯವಾದ “ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ವಯೋವೃದ್ಧರನ್ನು ದೈಹಿಕವಾಗಿ ಸಕ್ರಿಯರಾಗಿ, ಮಾನಸಿಕವಾಗಿ ಆರೋಗ್ಯವಂತರಾಗಿ ಮತ್ತು ಸ್ವಾವಲಂಬಿಗಳಾಗಿ ರೂಪಿಸುವಲ್ಲಿ ಯೋಗದ ಮಹತ್ವವನ್ನು ಪ್ರತಿಪಾದಿಸುತ್ತದೆ ಎಂದು ಅವರು ತಿಳಿಸಿದರು. “ನಾನು ಸ್ವತಃ ಯೋಗ ಮತ್ತು ಪ್ರಾಣಾಯಾಮವನ್ನು ಅಳವಡಿಸಿಕೊಂಡಿದ್ದೇನೆ ಮತ್ತು ಅದರ ಪರಿಣಾಮವಾಗಿ ಆರೋಗ್ಯವಾಗಿದ್ದೇನೆ” ಎಂದು ರಾಜ್ಯಪಾಲರು ಹೇಳಿದರು.

ಯೋಗ, ಪ್ರಾಣಾಯಾಮ ಮತ್ತು ಧ್ಯಾನವನ್ನು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕಾದ ಅಗತ್ಯವಿದ್ದು, ಪ್ರತಿದಿನ ಕೆಲವೇ ನಿಮಿಷಗಳ ಯೋಗಾಭ್ಯಾಸವು ಅನೇಕ ರೋಗಗಳಿಂದ ರಕ್ಷಿಸಿ ಜೀವನದಲ್ಲಿ ಹೊಸ ಚೈತನ್ಯವನ್ನು ತುಂಬುತ್ತದೆ ಎಂದು ಅವರು ಹೇಳಿದರು.

ಯೋಗದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅದರ ಪ್ರಚಾರಕ್ಕೆ ಕರ್ನಾಟಕ ಸರ್ಕಾರ ಕೈಗೊಂಡಿರುವ ವಿವಿಧ ನವೀನ ಕಾರ್ಯಕ್ರಮಗಳನ್ನು ಶ್ಲಾಘಿಸಿದ ರಾಜ್ಯಪಾಲರು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಿಗಳು, ಯೋಗ ಸಂಸ್ಥೆಗಳು, ಸ್ವಯಂಸೇವಾ ಸಂಘಟನೆಗಳು ಹಾಗೂ ಯೋಗ ಸಾಧಕರನ್ನು ಅಭಿನಂದಿಸಿದರು.

“ಸರ್ವೇ ಭವಂತು ಸುಖಿನಃ, ಸರ್ವೇ ಸಂತು ನಿರಾಮಯಾಃ” ಎಂಬ ಸಂದೇಶದೊಂದಿಗೆ ರಾಜ್ಯಪಾಲರು ರಾಜ್ಯದ ಜನತೆಗೆ ಅಂತರರಾಷ್ಟ್ರೀಯ ಯೋಗ ದಿನದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಸಚಿವರಾದ ಯು.ಟಿ. ಖಾದರ್, ನಟಿ ಸುಧಾರಾಣಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

error: Content is protected !!