Home Blog

SIR ಕರ್ತವ್ಯ ಮುಗಿಸಿ ಮನೆಗೆ ಮರಳಿದ್ದ BLO ಹೃದಯಾಘಾತದಿಂದ ಸಾವು!

ದಾವಣಗೆರೆ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯ ನಿರ್ವಹಿಸಿ ಮನೆಗೆ ಮರಳಿದ್ದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ.

ಚಿರಡೋಣಿ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಹಾಗೂ ಬಿಎಲ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿ.ಆರ್. ರಾಜಪ್ಪ (57) ಮೃತಪಟ್ಟವರು.

ಜುಲೈ 10ರಂದು ಎಸ್‌ಐಆರ್ ಕಾರ್ಯದ ಅಂಗವಾಗಿ ರಾಜಪ್ಪ ಅವರು ದಿನಪೂರ್ತಿ ಮನೆ-ಮನೆಗೆ ತೆರಳಿ ಮತದಾರರ ಪರಿಶೀಲನೆ ನಡೆಸಿ ರಾತ್ರಿ ಮನೆಗೆ ಮರಳಿದ್ದರು. ಬಳಿಕ ರಾತ್ರಿ ಸುಮಾರು 11 ಗಂಟೆ ವೇಳೆಗೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ.

ಕುಟುಂಬದವರು ಚಿಕಿತ್ಸೆಗಾಗಿ ಪ್ರಯತ್ನಿಸಿದರೂ, ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ FIR

0

ಆನೇಕಲ್: ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕಿ, ಇಬ್ಬರು ಸಹ ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿನಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದಡಿ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಈರಪ್ಪ, ಸಹ ಶಿಕ್ಷಕಿಯರಾದ ಕವಿತಾ, ರೂಪಾ ಹಾಗೂ ಅಡುಗೆ ಸಹಾಯಕಿ ಕಮಲಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಮಧುಶ್ರೀಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಪ್ರಾಥಮಿಕ ತನಿಖೆ ಪ್ರಕಾರ, ಶಾಲೆಯಲ್ಲಿ ಕೆಲವು ವಿದ್ಯಾರ್ಥಿಗಳು ತಮ್ಮನ್ನು ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ಅವರಿಗೆ ದೂರು ನೀಡಲು ಮಧುಶ್ರೀ ಪತ್ರವೊಂದನ್ನು ಬರೆದು ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದಳು ಎನ್ನಲಾಗಿದೆ. ಈ ವಿಷಯ ಶಿಕ್ಷಕಿಯರಿಗೆ ತಿಳಿದ ಬಳಿಕ ಮಧುಶ್ರೀ ಅವರನ್ನು ಇನ್ನಷ್ಟು ಗುರಿಯಾಗಿಸಿ ಮಾನಸಿಕ ಒತ್ತಡಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಆತ್ಮಹತ್ಯೆಗೂ ಒಂದು ದಿನ ಮೊದಲು ಮಧುಶ್ರೀ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀನಿವಾಸ್ ಅವರಿಗೆ ತನ್ನ ಮೇಲಿನ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಳು ಎಂದು ತಿಳಿದುಬಂದಿದೆ. ಅದೇ ದಿನ ಮನೆಗೆ ಬಂದ ಬಳಿಕ, ಶಿಕ್ಷಕಿಯರು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ತನ್ನ ಸಹೋದರಿ ಭಾನುಶ್ರೀ ಅವರ ಬಳಿ ಮಧುಶ್ರೀ ಹೇಳಿಕೊಂಡಿದ್ದಳು ಎನ್ನಲಾಗಿದೆ. ಇದಾದ ಬಳಿಕ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಏನಿದು ಪ್ರಕರಣ?

ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮರಸೂರು ಮಡಿವಾಳ ಗ್ರಾಮದ ನಿವಾಸಿಯಾಗಿದ್ದ ಮಧುಶ್ರೀ, ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ರಾಜ್ಯಮಟ್ಟದ ಕಬಡ್ಡಿ ಆಟಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದಳು.

ಜುಲೈ 9ರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ಶಾಲೆಯಲ್ಲಿ ನಡೆದ ಘಟನೆಗಳಿಂದ ತೀವ್ರ ಮನನೊಂದಿರುವುದಾಗಿ ಉಲ್ಲೇಖಿಸಿದ್ದಾಳೆ.

ಡೆತ್‌ನೋಟ್‌ನಲ್ಲಿ, “ಶಾಲೆಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಈ ಅವಮಾನ ಸಹಿಸಿಕೊಂಡು ಬದುಕಲು ಸಾಧ್ಯವಾಗುತ್ತಿಲ್ಲ. ಮನಸ್ಸಿಗೆ ತುಂಬಾ ನೋವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಅಮ್ಮ, ಅಕ್ಕ, ತಂಗಿ, ತಮ್ಮ ಯಾರದ್ದೂ ತಪ್ಪಿಲ್ಲ. ನನ್ನ ಅಮ್ಮನನ್ನು ಯಾರೂ ಬೈಯಬೇಡಿ. ಎಲ್ಲರೂ ನನ್ನನ್ನು ಕ್ಷಮಿಸಿ. ನನಗೆ ಈ ಭೂಮಿಯ ಮೇಲೆ ಬದುಕುವ ಅರ್ಹತೆ ಇಲ್ಲ” ಎಂದು ಬರೆದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸರು ಡೆತ್‌ನೋಟ್ ವಶಪಡಿಸಿಕೊಂಡಿದ್ದು, ಅದರಲ್ಲಿರುವ ಆರೋಪಗಳು, ಕುಟುಂಬ ಸದಸ್ಯರ ಹೇಳಿಕೆಗಳು ಹಾಗೂ ಶಾಲಾ ಸಿಬ್ಬಂದಿಯ ಪಾತ್ರ ಸೇರಿದಂತೆ ಎಲ್ಲ ಆಯಾಮಗಳಿಂದ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.

29ನೇ ವಯಸ್ಸಿನಲ್ಲೇ 300 ಅಂತಾರಾಷ್ಟ್ರೀಯ ಪಂದ್ಯಗಳ ಮೈಲುಗಲ್ಲು: ಲಾರ್ಡ್ಸ್ʼನಲ್ಲಿ ವಿಶ್ವದಾಖಲೆ ಬರೆದ ಸ್ಮೃತಿ ಮಂಧಾನ

0

ಲಂಡನ್: ಕ್ರಿಕೆಟ್‌ನ ಕಾಶಿ ಎಂದೇ ಖ್ಯಾತಿ ಪಡೆದಿರುವ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅವರು ತಮ್ಮ 300ನೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದು, ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ಈ ಮೈಲುಗಲ್ಲು ತಲುಪಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ.

ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕಿ ನ್ಯಾಟ್ ಸೀವರ್-ಬ್ರಂಟ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಸ್ಮೃತಿ ಮಂಧಾನ 300ನೇ ಅಂತಾರಾಷ್ಟ್ರೀಯ ಪಂದ್ಯ ಆಡಿದ ಸಾಧನೆ ಮಾಡಿದರು.

ಈ ಮೈಲುಗಲ್ಲಿನೊಂದಿಗೆ ಸ್ಮೃತಿ ಮಂಧಾನ 29 ವರ್ಷ 357 ದಿನಗಳ ವಯಸ್ಸಿನಲ್ಲಿ 300 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ದಕ್ಷಿಣ ಆಫ್ರಿಕಾದ ಸುನೆ ಲೂಸ್ ಹೆಸರಿನಲ್ಲಿತ್ತು. ಸುನೆ ಲೂಸ್ ಅವರು 30 ವರ್ಷ 163 ದಿನಗಳ ವಯಸ್ಸಿನಲ್ಲಿ 300 ಪಂದ್ಯಗಳನ್ನು ಆಡಿದ್ದರು.

ಈ ಮೂಲಕ ಅತೀ ಕಡಿಮೆ ವಯಸ್ಸಿನಲ್ಲಿ 300 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಮಹಿಳಾ ಕ್ರಿಕೆಟಿಗೆಯಾಗಿ ಸ್ಮೃತಿ ಮಂಧಾನ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದೇ ಪಂದ್ಯದಲ್ಲಿ ಸ್ಮೃತಿ ಮಂಧಾನ ಬ್ಯಾಟಿಂಗ್‌ನಲ್ಲೂ ಮಿಂಚಿದರು. 108 ಎಸೆತಗಳನ್ನು ಎದುರಿಸಿದ ಅವರು 83 ರನ್ಗಳ ಅಮೂಲ್ಯ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಪೂರೈಸುವ ಮೂಲಕ ಲಾರ್ಡ್ಸ್ ಮೈದಾನದಲ್ಲಿ ಅರ್ಧಶತಕ ದಾಖಲಿಸಿದ ಮೊದಲ ಮಹಿಳಾ ಬ್ಯಾಟರ್ ಎಂಬ ಅಪರೂಪದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು.

ಒಂದೇ ಪಂದ್ಯದಲ್ಲಿ ಎರಡು ಐತಿಹಾಸಿಕ ಸಾಧನೆಗಳನ್ನು ದಾಖಲಿಸಿರುವ ಸ್ಮೃತಿ ಮಂಧಾನ, ಮಹಿಳಾ ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ತಮ್ಮ ಸ್ಥಾನಮಾನವನ್ನು ಸಾಬೀತುಪಡಿಸಿದ್ದು, ಭಾರತೀಯ ಕ್ರಿಕೆಟ್ ಅಭಿಮಾನಿಗಳ ಹೆಮ್ಮೆ ಹೆಚ್ಚಿಸಿದ್ದಾರೆ.

PSI ನೇಮಕಾತಿ ಹಗರಣ: ಅಮೃತ್ ಪೌಲ್ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ 545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಹಗರಣದ ಪ್ರಮುಖ ಆರೋಪಿಯಾಗಿರುವ ಅಮಾನತುಗೊಂಡ ಎಡಿಜಿಪಿ ಅಮೃತ್ ಪೌಲ್ ವಿರುದ್ಧ ನಾಲ್ಕು ವರ್ಷಗಳ ಬಳಿಕ ಇಲಾಖಾ ತನಿಖೆ ಆರಂಭಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಅಧಿಕೃತ ಕ್ರಮ ಕೈಗೊಂಡಿದೆ.

ಹಗರಣ ನಡೆದ ಅವಧಿಯಲ್ಲಿ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದ ಅಮೃತ್ ಪೌಲ್ ವಿರುದ್ಧ 2022ರಲ್ಲೇ ಸಿಐಡಿ ವಿಶೇಷ ತನಿಖಾ ತಂಡ (ಎಸ್‌ಐಟಿ) 1,406 ಪುಟಗಳ ದೋಷಾರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಆದರೆ ಚಾರ್ಜ್‌ಶೀಟ್ ಸಲ್ಲಿಕೆಯಾದ ಬಳಿಕವೂ ಇಲಾಖಾ ಮಟ್ಟದ ವಿಚಾರಣೆ ಆರಂಭವಾಗಿರಲಿಲ್ಲ. ಇದೀಗ ಜುಲೈ 9ರಂದು ಇಲಾಖಾ ಚಾರ್ಜ್‌ಶೀಟ್ ಜಾರಿಯಾಗಿದ್ದು, ಆಂತರಿಕ ತನಿಖೆಗೆ ಅಧಿಕೃತ ಚಾಲನೆ ದೊರೆತಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಲಾಖಾ ತನಿಖೆಗೆ ಅನುಮೋದನೆ ನೀಡಿದ್ದಾರೆ. ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು–1969ರ ನಿಯಮ 8(4)ರ ಅನ್ವಯ ವಿಚಾರಣೆ ಮುಂದುವರಿಯಲಿದೆ.

ಸಿಐಡಿ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯಾಧಾರಗಳು ಮತ್ತು ವರದಿಯ ಆಧಾರದ ಮೇಲೆ ಡಿಪಿಎಆರ್ ಅಮೃತ್ ಪೌಲ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ತಮ್ಮ ವಿರುದ್ಧದ ಆರೋಪಗಳಿಗೆ ಲಿಖಿತ ವಿವರಣೆ ಸಲ್ಲಿಸುವಂತೆ ಹಾಗೂ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಪ್ರಕರಣವು ಆರಂಭದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಹಾಗೂ ಉತ್ತರ ಕರ್ನಾಟಕದ ಎರಡು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿತ್ತು. ಬಳಿಕ ತನಿಖೆಯನ್ನು ಸಿಐಡಿ ಎಸ್‌ಐಟಿಗೆ ವರ್ಗಾಯಿಸಲಾಗಿತ್ತು.

ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಎಡಿಜಿಪಿ ಹುದ್ದೆಯ ಅಧಿಕಾರಿಯೊಬ್ಬರು ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿ ಜೈಲು ಶಿಕ್ಷೆ ಅನುಭವಿಸಿದ್ದರು. ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅಮೃತ್ ಪೌಲ್ ವಿರುದ್ಧ ಇದೀಗ ಇಲಾಖಾ ಮಟ್ಟದ ತನಿಖೆ ಆರಂಭವಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಸ್ಟಾಕ್ ಮಾರ್ಕೆಟ್ʼನಲ್ಲಿ ನಷ್ಟ: ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ!

0

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ಯುವಕನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಕವನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಈ ಘಟನೆ ನಾಪೋಕ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕವನ್ ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಕಳೆದುಕೊಂಡಿದ್ದರಿಂದ ಮನನೊಂದು ಈ ಕೃತ್ಯಕ್ಕೆ ಮುಂದಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.

ಸದ್ಯ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ನನಗೆ ಅಧಿಕಾರ ಇದ್ದರೆ KAT, KPSCಯನ್ನೇ ರದ್ದು ಮಾಡುತ್ತಿದ್ದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೆಪಿಎಸ್ಸಿ (KPSC) ಅಧ್ಯಕ್ಷರ ಪುತ್ರಿ ವಿರುದ್ಧ ನಕಲಿ ಆದಾಯ ಪ್ರಮಾಣ ಪತ್ರದ ಆರೋಪದಡಿ ಎಫ್‌ಐಆರ್ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. “ನನಗೆ ಅಧಿಕಾರ ಇದ್ದರೆ ಕೆಎಟಿ (KAT) ಮತ್ತು ಕೆಪಿಎಸ್ಸಿಯನ್ನೇ ರದ್ದು ಮಾಡುತ್ತಿದ್ದೆ” ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ನಕಲಿ ಆದಾಯ ಪ್ರಮಾಣ ಪತ್ರದ ಕುರಿತು ದೂರು ದಾಖಲಾಗಿದ್ದು, ಬುಧವಾರ ರಾತ್ರಿ ಎಫ್‌ಐಆರ್ ದಾಖಲಿಸಲಾಗಿದೆ. ಕೆಪಿಎಸ್ಸಿ ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ ಅದರ ವಿರುದ್ಧ ಯಾವುದೇ ಕ್ರಮವನ್ನು ಕಾನೂನು ಮತ್ತು ಸಂವಿಧಾನದ ವ್ಯಾಪ್ತಿಯಲ್ಲಿಯೇ ಕೈಗೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.

“ಬೇಲಿಯೇ ಎದ್ದು ಹೊಲ ಮೇಯ್ದರೆ ಏನು ಮಾಡುವುದು? ಇದು ನಮ್ಮ ಕೈಯಲ್ಲಿಲ್ಲ. ನನಗೆ ಅಧಿಕಾರ ಇದ್ದರೆ ಕೆಎಟಿ ಮತ್ತು ಕೆಪಿಎಸ್ಸಿಯನ್ನೇ ರದ್ದು ಮಾಡುತ್ತಿದ್ದೆ. ಆದರೆ ಅದಕ್ಕಾಗಿ ಹೊಸ ಕಾನೂನು ತರಬೇಕಾಗುತ್ತದೆ. ಕಾನೂನು ರೂಪಿಸುವ ಅಧಿಕಾರ ಶಾಸನಸಭೆಗೆ ಇದೆ. ಎಲ್ಲರೂ ಒಟ್ಟಾಗಿ ನಿರ್ಧಾರ ಕೈಗೊಂಡರೆ ವ್ಯವಸ್ಥೆಯನ್ನು ಶುದ್ಧೀಕರಿಸಬಹುದು” ಎಂದು ಹೇಳಿದರು.

ಯುವಕರ ಭವಿಷ್ಯದೊಂದಿಗೆ ಆಟವಾಡುವುದು ಯಾವುದೇ ಕಾರಣಕ್ಕೂ ಸರಿಯಲ್ಲ ಎಂದು ಹೇಳಿದ ಅವರು, ಹುಬ್ಬಳ್ಳಿ-ಧಾರವಾಡದಲ್ಲಿ ಯಾವುದೇ ರಾಜಕೀಯ ನಾಯಕರ ಬೆಂಬಲವಿಲ್ಲದೆ ಯುವಕರು ನಡೆಸಿದ ಪ್ರತಿಭಟನೆ ಇದಕ್ಕೆ ಸಾಕ್ಷಿಯಾಗಿದೆ. ಇಂತಹ ಬೆಳವಣಿಗೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಪ್ರಕರಣದ ಸತ್ಯಾಸತ್ಯತೆ ದಾಖಲೆಗಳ ಪರಿಶೀಲನೆಯ ಬಳಿಕವೇ ಸ್ಪಷ್ಟವಾಗಲಿದೆ. ದಾಖಲೆಗಳನ್ನು ಪರಿಶೀಲಿಸದೇ ಯಾವುದೇ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಮುಖ್ಯಮಂತ್ರಿ ಕೂಡ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ. ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಈಗಾಗಲೇ ಕಾನೂನು ತರಲಾಗಿದ್ದು, ಅದರ ನಿಯಮಾವಳಿಗಳನ್ನು ಒಂದು ವಾರದಿಂದ ಹತ್ತು ದಿನಗಳೊಳಗೆ ಅಂತಿಮಗೊಳಿಸುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದರು.

ಕೆಪಿಎಸ್ಸಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯಪಾಲರಿಗಿದೆ. ಆದರೆ ನಕಲಿ ಆದಾಯ ಪ್ರಮಾಣ ಪತ್ರದ ಆರೋಪವು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಅಗತ್ಯ ದಾಖಲೆಗಳನ್ನು ಸರ್ಕಾರ ರಾಜ್ಯಪಾಲರಿಗೆ ಸಲ್ಲಿಸಲಿದೆ. ಆಯೋಗದೊಳಗಿನ ಪಾರದರ್ಶಕತೆ ಮತ್ತು ಹೊಂದಾಣಿಕೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿದ್ದು, ಆಯೋಗವೇ ತನ್ನ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಬೇಕಿದೆ ಎಂದು ಅವರು ಹೇಳಿದರು.

ಇಂತಹ ಬೆಳವಣಿಗೆಗಳು ಯಾವುದೇ ಸರ್ಕಾರಕ್ಕೂ ಒಳ್ಳೆಯದಲ್ಲ. ಇತರೆ ರಾಜ್ಯಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಮಾದರಿಗಳನ್ನು ಪರಿಶೀಲಿಸಿ, ಕರ್ನಾಟಕದಲ್ಲಿಯೂ ಸೂಕ್ತ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

ವೀಸಾ ಅವಧಿ ಮುಗಿದರೂ ಭಾರತದಲ್ಲೇ ವಾಸ: ಪಾಕಿಸ್ತಾನ ಮೂಲದ ಮಹಿಳೆ, ಪುತ್ರ ಬಂಧನ

ಚಿಕ್ಕಬಳ್ಳಾಪುರ: ಪಾಕಿಸ್ತಾನ ಮೂಲದ ಮಹಿಳೆ ಮತ್ತು ಆಕೆಯ ಪುತ್ರ ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಬಾಗೇಪಲ್ಲಿ ಪೊಲೀಸರು ಫರ್ಹಾನಾಜ್ ಹಾಗೂ ಪುತ್ರ ಮೊಹಮ್ಮದ್ ಫರ್ದೀನ್ ಖಾನ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ತನಿಖೆಯ ವೇಳೆ, ಆರೋಪಿಗಳು ಭಾರತೀಯ ಪೌರತ್ವ ಹೊಂದಿಲ್ಲದಿದ್ದರೂ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಬ್ಯಾಂಕ್ ಖಾತೆಗಳನ್ನು ಹೊಂದಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ದಾಖಲೆಗಳು ಹೇಗೆ ಸೃಷ್ಟಿಯಾಗಿವೆ ಎಂಬ ಕುರಿತು ತನಿಖೆ ನಡೆಯುತ್ತಿದೆ.

ಫರ್ಹಾನಾಜ್ ಅವರು ಬಾಗೇಪಲ್ಲಿ ತಾಲೂಕಿನ ನಿವಾಸಿ ಅಯೂಬ್ ಖಾನ್ ಅವರನ್ನು ವಿವಾಹವಾಗಿದ್ದು, ಅವರ ಪತಿ ಪ್ರಸ್ತುತ ಕತಾರ್‌ನಲ್ಲಿ ಉದ್ಯೋಗದಲ್ಲಿದ್ದಾರೆ. ಕುಟುಂಬವು ದಾಸಗಾರೆಪಲ್ಲಿ ಗ್ರಾಮದಲ್ಲೇ ವಾಸಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವೀಸಾ ಅವಧಿ ನವೀಕರಣವಾಗದೇ ಇದ್ದರೂ ಭಾರತದಲ್ಲೇ ಉಳಿದಿರುವ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಅಕ್ರಮ ವಾಸ ಹಾಗೂ ದಾಖಲೆಗಳಿಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ತನಿಖೆಯ ವ್ಯಾಪ್ತಿಗೆ ಒಳಪಡಿಸಿದ್ದಾರೆ.

ಪೋಕ್ಸೋ ಪ್ರಕರಣದ ಆರೋಪಿ ಕ್ರೌರ್ಯ: ಚಾಕು ಇರಿದು ಪತ್ನಿ, ಇಬ್ಬರು ಮಕ್ಕಳು ಸೇರಿ 6 ಮಂದಿಯ ಬರ್ಬರ ಹತ್ಯೆ.!

0

ಹೈದರಾಬಾದ್: ಪೋಕ್ಸೊ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿ, ಇಬ್ಬರು ಪುಟ್ಟ ಮಕ್ಕಳು ಹಾಗೂ ತನ್ನ ವಿರುದ್ಧ ದೂರು ನೀಡಿದ್ದ ಅಪ್ರಾಪ್ತ ಬಾಲಕಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್‌ನಲ್ಲಿ ನಡೆದಿದೆ.

ರಾಜ್‌ಕುಮಾರ್ (35) ಎಂಬಾತ ಈ ಪ್ರಕರಣದ ಪ್ರಮುಖ ಆರೋಪಿ. ಆತ ತನ್ನ ಪತ್ನಿ ಪಾರ್ವತಿ ಸರಿತಾ (30) ಹಾಗೂ ನಾಲ್ಕು ಮತ್ತು ಒಂದು ವರ್ಷದ ಇಬ್ಬರು ಪುತ್ರರನ್ನು ಮನೆಯಲ್ಲಿ ಹತ್ಯೆ ಮಾಡಿದ್ದಾನೆ.

ಬಳಿಕ ತನ್ನ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿದ್ದ 17 ವರ್ಷದ ಬಾಲಕಿಯ ಮನೆಗೆ ತೆರಳಿ, ಆಕೆಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಬಾಲಕಿಯನ್ನು ಅಪಹರಿಸುವ ಮುನ್ನ ಆಕೆಯ 45 ವರ್ಷದ ತಾಯಿ ಹಾಗೂ 65 ವರ್ಷದ ಅಜ್ಜಿಯನ್ನೂ ಹತ್ಯೆ ಮಾಡಿದ್ದಾನೆ. ಘಟನೆಯ ವೇಳೆ ಮನೆಯಲ್ಲಿದ್ದ ಅಂಗವಿಕಲ 20 ವರ್ಷದ ಯುವತಿಗೆ ಯಾವುದೇ ಹಾನಿ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗಳ ಬಳಿಕ ರಾಜ್‌ಕುಮಾರ್ ತನ್ನ ತಂದೆಗೆ ಕರೆ ಮಾಡಿ ತಾನು ಆರು ಮಂದಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾನೆ. ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಪರಾರಿಯಾಗಿದ್ದಾನೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಪ್ರಕರಣ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ತರುಣ್ ಜೋಶಿ, ಆರೋಪಿಯ ಇರುವಿಕೆ ಕುರಿತು ಕೆಲವು ಸುಳಿವುಗಳು ಲಭ್ಯವಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್‌ಕುಮಾರ್ ಮತ್ತು ಪಾರ್ವತಿ 2018ರಲ್ಲಿ ಪ್ರೇಮ ವಿವಾಹವಾಗಿದ್ದರು. ಆರಂಭದಲ್ಲಿ ಗ್ರಾಮದ ಹೊರವಲಯದಲ್ಲಿ ವಾಸಿಸುತ್ತಿದ್ದ ದಂಪತಿ ನಂತರ ಶಾಬಾದ್ ಹಾಗೂ ದೇವಲಗುಡದಲ್ಲಿರುವ ಮನೆಗಳಲ್ಲಿ ನೆಲೆಸಿದ್ದರು.

ಈ ವರ್ಷದ ಮೇ ತಿಂಗಳಲ್ಲಿ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜ್‌ಕುಮಾರ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಆತ ತಲೆಮರೆಸಿಕೊಂಡಿದ್ದರೂ, ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸುವ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದ್ದ ಕಾರಣ 20 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮೇಲೆ ನಿರೀಕ್ಷಣಾ ಜಾಮೀನು ಪಡೆದಿದ್ದ.

ಆರೋಪಿಯ ಮಾನಸಿಕ ಸ್ಥಿತಿ ಸ್ಥಿರವಾಗಿರಲಿಲ್ಲ ಹಾಗೂ ಜೂಜಾಟದ ಚಟ ಮತ್ತು ಸಾಲದ ಸಮಸ್ಯೆಯಿಂದ ಬಳಲುತ್ತಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹಲವು ಬಾರಿ ಕೌನ್ಸೆಲಿಂಗ್‌ಗೆ ಕರೆಯಲಾಗಿದ್ದರೂ ಆತ ಹಾಜರಾಗಿರಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ನಿಯ ಶವ ಪತ್ತೆಯಾದ ಕೋಣೆಯಲ್ಲಿ ಹಲ್ಲೆ ನಡೆಸಿದ ಕುರುಹುಗಳು ಪತ್ತೆಯಾಗಿದ್ದು, ಮಕ್ಕಳು ನಿದ್ರೆಯಲ್ಲಿದ್ದಾಗಲೇ ಹತ್ಯೆಗೀಡಾಗಿರುವ ಸಾಧ್ಯತೆ ಇದೆ ಎಂದು ಸಂಬಂಧಿಕರು ಶಂಕಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.

ಲೋಕಾಯುಕ್ತರಿಗೆ ನಿಂದನಾತ್ಮಕ ಪತ್ರ ಬರೆದ ವ್ಯಕ್ತಿಗೆ 6 ತಿಂಗಳ ಜೈಲು ಶಿಕ್ಷೆ

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಮತ್ತು ಉಪಲೋಕಾಯುಕ್ತ ಸಂಸ್ಥೆಯ ವಿರುದ್ಧ ಅವಹೇಳನಕಾರಿ ಹಾಗೂ ನಿಂದನಾತ್ಮಕ ಪದಗಳನ್ನು ಬಳಸಿ ಪತ್ರ ಬರೆದ ಪ್ರಕರಣದಲ್ಲಿ ಬಳ್ಳಾರಿ ಮೂಲದ ವ್ಯಕ್ತಿಯೊಬ್ಬರಿಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ಹಾಗೂ 5,000 ರೂಪಾಯಿ ದಂಡ ವಿಧಿಸಿದೆ.

ಶಿಕ್ಷೆಗೆ ಗುರಿಯಾದವರು ಬಳ್ಳಾರಿಯ ಹಾವಿನಾಳ ಬಸಣ್ಣ ಕಾಂಪೌಂಡ್ ನಿವಾಸಿ ಎಸ್.ಜಿ. ಶಂಕರ್ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಕರಣದ ವಿವರಗಳ ಪ್ರಕಾರ, ಎಸ್.ಜಿ. ಶಂಕರ್ ಅವರು 2015ರಲ್ಲಿ ಬಳ್ಳಾರಿ ಮುಜರಾಯಿ ಇಲಾಖೆಯ ಜಂಟಿ ಆಯುಕ್ತರ ವಿರುದ್ಧ ಅಧಿಕಾರ ದುರುಪಯೋಗ ಆರೋಪಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೇವಸ್ಥಾನದ ಸಮೀಪದ ಅಂಗಡಿಗಳನ್ನು ಕಾನೂನುಬಾಹಿರವಾಗಿ ತೆರವುಗೊಳಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಆದರೆ, ಲೋಕಾಯುಕ್ತ ನಡೆಸಿದ ತನಿಖೆಯಲ್ಲಿ ಜಂಟಿ ಆಯುಕ್ತರು ಕಾನೂನುಬದ್ಧವಾಗಿಯೇ ಅಂಗಡಿಗಳನ್ನು ತೆರವುಗೊಳಿಸಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರು ಪ್ರಕರಣವನ್ನು ಮುಕ್ತಾಯಗೊಳಿಸಿ, ಅದರ ಮಾಹಿತಿ ನೀಡುವ ಪತ್ರವನ್ನು ದೂರುದಾರರಿಗೆ ಕಳುಹಿಸಿದ್ದರು.

ಪ್ರಕರಣ ಮುಕ್ತಾಯಗೊಂಡಿದ್ದರಿಂದ ಅಸಮಾಧಾನಗೊಂಡ ಶಂಕರ್, 2022ರಲ್ಲಿ ಉಪಲೋಕಾಯುಕ್ತರಿಗೆ ಹಾಗೂ 2023ರಲ್ಲಿ ಲೋಕಾಯುಕ್ತರಿಗೆ ಅವಹೇಳನಕಾರಿ ಮತ್ತು ನಿಂದನಾತ್ಮಕ ಪದಗಳನ್ನು ಬಳಸಿ ಪತ್ರಗಳನ್ನು ಬರೆದಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ಸಂಸ್ಥೆ, ಅವರ ವಿರುದ್ಧ ಕಾನೂನು ಕ್ರಮ ಏಕೆ ಕೈಗೊಳ್ಳಬಾರದು ಎಂದು ನೋಟಿಸ್ ಜಾರಿ ಮಾಡಿತ್ತು. ಆದರೆ, ನೋಟಿಸ್‌ಗೆ ಉತ್ತರಿಸುವ ಬದಲಿಗೆ ಮತ್ತೊಮ್ಮೆ ನಿಂದನಾತ್ಮಕ ಭಾಷೆಯಲ್ಲೇ ಪತ್ರ ಬರೆದು ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಕಚೇರಿ ಅವರ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ, ಎಸ್.ಜಿ. ಶಂಕರ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಆರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಬೆಳಗಾವಿಯ ಐತಿಹಾಸಿಕ ಯಲ್ಲಮ್ಮ ದೇವಿ ದೇವಸ್ಥಾನವನ್ನು ಸಾರ್ವಜನಿಕ ಟ್ರಸ್ಟ್‌ ಎಂದು ಘೋಷಿಸಿದ ಹೈಕೋರ್ಟ್

ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮದ ಐತಿಹಾಸಿಕ ಶ್ರೀ ಯಲ್ಲಮ್ಮ ದೇವಿ ದೇವಸ್ಥಾನವನ್ನು ಸಾರ್ವಜನಿಕ ಟ್ರಸ್ಟ್ ಎಂದು ಘೋಷಿಸಿರುವ ಕರ್ನಾಟಕ ಹೈಕೋರ್ಟ್, 1950ರ ಬಾಂಬೆ ಪಬ್ಲಿಕ್ ಟ್ರಸ್ಟ್ (ಬಿಪಿಟಿ) ಕಾಯ್ದೆಯಡಿ ದೇವಾಲಯವನ್ನು ಸಾರ್ವಜನಿಕ ಟ್ರಸ್ಟ್ ಆಗಿ ನೋಂದಾಯಿಸಲು ಆದೇಶ ನೀಡಿದೆ.

ಜಲಾಲಪುರ ಗ್ರಾಮದ ಮಲ್ಲಾರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರು ಈ ಮಹತ್ವದ ತೀರ್ಪು ನೀಡಿದ್ದಾರೆ. ದತ್ತಿ ಆಯುಕ್ತರು ಹಾಗೂ ಬೆಳಗಾವಿ ಜಿಲ್ಲಾ ನ್ಯಾಯಾಲಯ ದೇವಾಲಯವನ್ನು ಸಾರ್ವಜನಿಕ ಟ್ರಸ್ಟ್ ಎಂದು ಪರಿಗಣಿಸಲು ನಿರಾಕರಿಸಿ ನೀಡಿದ್ದ ಆದೇಶಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

ತೀರ್ಪಿನಲ್ಲಿ, ಶ್ರೀ ಯಲ್ಲಮ್ಮ ದೇವಿ ದೇವಸ್ಥಾನವು ಪ್ರಾಚೀನ ಧಾರ್ಮಿಕ ಕ್ಷೇತ್ರವಾಗಿದ್ದು, ಹಿಂದೂ ಸಮುದಾಯದ ಸಾರ್ವಜನಿಕರು ಪೂಜೆ ಸಲ್ಲಿಸಲು ಹಾಗೂ ದೇವರಿಗೆ ಸಮರ್ಪಣೆ ಸಲ್ಲಿಸಲು ಹಕ್ಕಿನ ಆಧಾರದ ಮೇಲೆ ಬಳಸುತ್ತಿರುವ ಸಾರ್ವಜನಿಕ ಆರಾಧನಾ ಸ್ಥಳವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಬಾಂಬೆ ಪಬ್ಲಿಕ್ ಟ್ರಸ್ಟ್ ಕಾಯ್ದೆಯ ಸೆಕ್ಷನ್ 2(17)ರ ಪ್ರಕಾರ ಈ ದೇವಾಲಯವು ‘ದೇವಾಲಯ’ದ ವ್ಯಾಖ್ಯಾನಕ್ಕೆ ಒಳಪಡುವುದರಿಂದ, ಸೆಕ್ಷನ್ 2(13)ರ ಅಡಿಯಲ್ಲಿ ಸಾರ್ವಜನಿಕ ಟ್ರಸ್ಟ್ ಎಂದು ಪರಿಗಣಿಸಲು ಅಗತ್ಯವಾದ ಎಲ್ಲಾ ಕಾನೂನು ಮಾನದಂಡಗಳನ್ನು ಪೂರೈಸಿದೆ ಎಂದು ಪೀಠ ತಿಳಿಸಿದೆ.

ದೇವಾಲಯದಲ್ಲಿ ಕೆಲವು ಕುಟುಂಬಗಳಿಗೆ ಪೂಜೆ ನಡೆಸುವ ಆನುವಂಶಿಕ ಹಕ್ಕುಗಳಿರುವ ಕಾರಣ ಅದು ಖಾಸಗಿ ಆಸ್ತಿ ಎಂಬ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. ದೇವಾಲಯವು ಸಾರ್ವಜನಿಕರಿಗೆ ಮುಕ್ತವಾಗಿದ್ದು, ಭಕ್ತರು ಸ್ವತಂತ್ರವಾಗಿ ಪ್ರವೇಶಿಸಿ ಪೂಜೆ ಸಲ್ಲಿಸುವ ಹಕ್ಕು ಹೊಂದಿರುವುದರಿಂದ ಅದನ್ನು ಸಾರ್ವಜನಿಕ ಟ್ರಸ್ಟ್ ಆಗಿಯೇ ನೋಂದಾಯಿಸಬೇಕು ಎಂದು ಆದೇಶಿಸಿದೆ.

ಅಲ್ಲದೆ, ಅರ್ಚಕರು ಅಥವಾ ಪೂಜಾರಿಗಳು ಟ್ರಸ್ಟಿಗಳಾಗಲು ಯಾವುದೇ ಕಾನೂನು ನಿರ್ಬಂಧವಿಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಭಕ್ತರು ಮತ್ತು ದೇವರ ನಡುವೆ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುವ ಅರ್ಚಕರು ದೇವಾಲಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುವ ಕಾರಣ ಟ್ರಸ್ಟಿಗಳಾಗಲು ಅರ್ಹರು ಎಂದು ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ, 1994ರ ಮೂಲ ಅರ್ಜಿಯಲ್ಲಿ ಉಲ್ಲೇಖಿಸಲಾದ ಟ್ರಸ್ಟಿಗಳ ಜೊತೆಗೆ ಅರ್ಚಕರ ಎರಡು ಕುಟುಂಬಗಳಿಂದ ತಲಾ ಒಬ್ಬರನ್ನು ದೇವಾಲಯದ ಟ್ರಸ್ಟಿಗಳಾಗಿ ಪರಿಗಣಿಸುವಂತೆ ನ್ಯಾಯಾಲಯ ಆದೇಶಿಸಿದೆ.