Home Blog

ರಾಜ್ಯದ ಬಸ್ ಪ್ರಯಾಣಿಕರಿಗೆ ಶಾಕ್! ಟಿಕೆಟ್ ದರ 33% ರಿಂದ 44% ಏರಿಕೆಗೆ ಸಾರಿಗೆ ನಿಗಮಗಳ ಪ್ರಸ್ತಾವನೆ

ಬೆಂಗಳೂರು: ರಾಜ್ಯದ ಬಸ್ ಪ್ರಯಾಣಿಕರಿಗೆ ಶೀಘ್ರದಲ್ಲೇ ಟಿಕೆಟ್ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ತೀವ್ರ ಆರ್ಥಿಕ ಸಂಕಷ್ಟ, ಡೀಸೆಲ್ ಬೆಲೆ ಏರಿಕೆ ಹಾಗೂ ಕಾರ್ಯಾಚರಣಾ ವೆಚ್ಚ ಹೆಚ್ಚಳದಿಂದ ಸಂಕಷ್ಟಕ್ಕೆ ಸಿಲುಕಿರುವ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಅನುಮತಿ ಕೋರಿವೆ.

ಈ ಸಂಬಂಧ ನಾಲ್ಕೂ ಸಾರಿಗೆ ನಿಗಮಗಳು ಮುಖ್ಯಮಂತ್ರಿ ಅವರಿಗೆ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಿದ್ದು, ಬಿಎಂಟಿಸಿ ಟಿಕೆಟ್ ದರವನ್ನು ಶೇ.44 ರಷ್ಟು ಹಾಗೂ ಕೆಎಸ್‌ಆರ್‌ಟಿಸಿ ಶೇ.33 ರಷ್ಟು ಹೆಚ್ಚಿಸಲು ಮನವಿ ಮಾಡಿದೆ. ಜೊತೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯೂಕೆಆರ್‌ಟಿಸಿ) ಕೂಡ ದರ ಪರಿಷ್ಕರಣೆಗೆ ಒತ್ತಾಯಿಸಿವೆ.

ದರ ಏರಿಕೆಗೆ ಪ್ರಮುಖ ಕಾರಣಗಳು

ಸಾರಿಗೆ ನಿಗಮಗಳ ಪ್ರಕಾರ, ಇತ್ತೀಚಿನ ಡೀಸೆಲ್ ದರ ಏರಿಕೆ ಸಂಸ್ಥೆಗಳ ಆರ್ಥಿಕ ಸ್ಥಿತಿಗೆ ದೊಡ್ಡ ಹೊಡೆತ ನೀಡಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಾಲ್ಕು ಬಾರಿ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ ₹7.81 ಹೆಚ್ಚಳವಾಗಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್‌ಗಳಿಗೆ ಪ್ರತಿದಿನ 13 ಲಕ್ಷ ಲೀಟರ್‌ಗಿಂತ ಹೆಚ್ಚು ಡೀಸೆಲ್ ಬಳಕೆಯಾಗುತ್ತಿದೆ. ಇದರ ಪರಿಣಾಮವಾಗಿ ತಿಂಗಳಿಗೆ ಸುಮಾರು ₹40 ಕೋಟಿ ಹಾಗೂ ವರ್ಷಕ್ಕೆ ಸುಮಾರು ₹480 ಕೋಟಿ ಹೆಚ್ಚುವರಿ ವೆಚ್ಚ ಉಂಟಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶಕ್ತಿ’ ಯೋಜನೆಯ ಹೊರೆ

ಮಹಿಳೆಯರಿಗಾಗಿ ಜಾರಿಯಲ್ಲಿರುವ ‘ಶಕ್ತಿ’ ಉಚಿತ ಬಸ್ ಪ್ರಯಾಣ ಯೋಜನೆ, ಹೆಚ್ಚುತ್ತಿರುವ ಕಾರ್ಯಾಚರಣಾ ವೆಚ್ಚ, ಬಿಡಿಭಾಗಗಳ ಬೆಲೆ ಏರಿಕೆ ಹಾಗೂ ಸಾರಿಗೆ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ಹಲವು ಕಾರಣಗಳಿಂದ ನಿಗಮಗಳ ಮೇಲಿನ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಾಗಿದೆ.

ಸದ್ಯ ನಷ್ಟದಲ್ಲಿರುವ ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಉಳಿಸಿಕೊಳ್ಳಲು ಟಿಕೆಟ್ ದರ ಏರಿಕೆ ಅನಿವಾರ್ಯವಾಗಿದೆ ಎಂಬುದು ಅಧಿಕಾರಿಗಳ ವಾದವಾಗಿದೆ.

ಸರ್ಕಾರದ ತೀರ್ಮಾನವೇನು?

ಸಾರಿಗೆ ನಿಗಮಗಳ ಪ್ರಸ್ತಾವನೆ ಸದ್ಯ ಮುಖ್ಯಮಂತ್ರಿಗಳ ಪರಿಶೀಲನೆಯಲ್ಲಿದೆ. ಸರ್ಕಾರ ಸಂಪೂರ್ಣ ಪ್ರಸ್ತಾವನೆಗೆ ಒಪ್ಪಿಗೆ ನೀಡುತ್ತದೆಯೇ ಅಥವಾ ಕಡಿಮೆ ಪ್ರಮಾಣದ ದರ ಏರಿಕೆಗೆ ಅನುಮೋದನೆ ನೀಡುತ್ತದೆಯೇ ಎಂಬುದು ಇನ್ನಷ್ಟೇ ಸ್ಪಷ್ಟವಾಗಬೇಕಿದೆ. ಸರ್ಕಾರದ ಅಂತಿಮ ತೀರ್ಮಾನದ ಬಳಿಕ ಹೊಸ ಬಸ್ ದರ ಜಾರಿಗೆ ಬರುವ ಸಾಧ್ಯತೆ ಇದೆ.

HCG ಕ್ಯಾನ್ಸರ್ ಆಸ್ಪತ್ರೆಗೆ ಕೇಂದ್ರದ ಶಾಕ್; ಹೊಸ ಕ್ಲಿನಿಕಲ್ ಟ್ರಯಲ್ʼಗೆ 2 ವರ್ಷ ನಿಷೇಧ

0

ಬೆಂಗಳೂರು: ನಗರದ ಪ್ರತಿಷ್ಠಿತ ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಗೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ) ಕಠಿಣ ಕ್ರಮ ಕೈಗೊಂಡಿದೆ. ಮಾನವ ಕ್ಲಿನಿಕಲ್ ಪ್ರಯೋಗಗಳಲ್ಲಿ ಗಂಭೀರ ಲೋಪಗಳು ಹಾಗೂ ನಿಯಮ ಉಲ್ಲಂಘನೆಗಳು ಕಂಡುಬಂದ ಹಿನ್ನೆಲೆಯಲ್ಲಿ, ಆಸ್ಪತ್ರೆಯ ನೈತಿಕ ಸಮಿತಿಗೆ ಮುಂದಿನ 24 ತಿಂಗಳ ಕಾಲ ಯಾವುದೇ ಹೊಸ ಕ್ಲಿನಿಕಲ್ ಟ್ರಯಲ್‌ಗಳನ್ನು ನಡೆಸದಂತೆ ನಿರ್ಬಂಧ ಹೇರಲಾಗಿದೆ.

ಆಸ್ಪತ್ರೆಯ ನೈತಿಕ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ನಿವೃತ್ತ ನ್ಯಾಯಮೂರ್ತಿ ಪಿ. ಕೃಷ್ಣಭಟ್ ಸಲ್ಲಿಸಿದ್ದ ಲಿಖಿತ ದೂರಿನ ಆಧಾರದ ಮೇಲೆ ಪ್ರಕರಣ ಬೆಳಕಿಗೆ ಬಂದಿತ್ತು. ಬಳಿಕ ಕೇಂದ್ರ ಹಾಗೂ ರಾಜ್ಯ ಔಷಧ ನಿಯಂತ್ರಣ ಸಂಸ್ಥೆಗಳು ನಡೆಸಿದ ಜಂಟಿ ತನಿಖೆಯಲ್ಲಿ ಹಲವು ಮಾರ್ಗಸೂಚಿಗಳ ಉಲ್ಲಂಘನೆ ನಡೆದಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ನಿಷೇಧಕ್ಕೆ ಕಾರಣವೇನು?

ತನಿಖೆಯಲ್ಲಿ, ಔಷಧ ಪ್ರಯೋಗಗಳ ವೇಳೆ ಮೃತಪಟ್ಟ ಕೆಲವು ರೋಗಿಗಳ ಮಾಹಿತಿಯನ್ನು ನಿಯಮಾನುಸಾರ ನಿಗದಿತ ಅವಧಿಯಲ್ಲಿ ನಿಯಂತ್ರಕ ಸಂಸ್ಥೆಗೆ ಸಲ್ಲಿಸದಿರುವುದು ಪತ್ತೆಯಾಗಿದೆ. ಕೆಲ ಪ್ರಕರಣಗಳಲ್ಲಿ ಸಾವಿನ ವರದಿಗಳನ್ನೇ ದಾಖಲಿಸದೇ ಮುಚ್ಚಿಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಇದಲ್ಲದೆ, ಕ್ಲಿನಿಕಲ್ ಪ್ರಯೋಗದ ವೇಳೆ ತೊಂದರೆ ಅನುಭವಿಸಿದ ಅಥವಾ ಮೃತಪಟ್ಟ ರೋಗಿಗಳ ಕುಟುಂಬಗಳಿಗೆ ನೀಡಬೇಕಾದ ಪರಿಹಾರ ಧನ ಪಾವತಿಸಿರುವುದಕ್ಕೆ ಸಂಬಂಧಿಸಿದ ಯಾವುದೇ ಸಮರ್ಪಕ ದಾಖಲೆಗಳು ಆಸ್ಪತ್ರೆಯ ಬಳಿ ಲಭ್ಯವಿಲ್ಲ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

ಹೊಸ ಔಷಧಗಳ ಪ್ರಯೋಗಕ್ಕೆ ಒಳಗಾಗುವ ರೋಗಿಗಳಿಗೆ ಅಗತ್ಯ ವೈದ್ಯಕೀಯ ಆರೈಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಒದಗಿಸುವಲ್ಲಿಯೂ ಆಸ್ಪತ್ರೆ ವಿಫಲವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

24 ತಿಂಗಳು ಹೊಸ ಪ್ರಯೋಗಗಳಿಗೆ ಅವಕಾಶವಿಲ್ಲ

ಸಿಡಿಎಸ್‌ಸಿಒ ಆದೇಶದ ಪ್ರಕಾರ, ಮುಂದಿನ 24 ತಿಂಗಳವರೆಗೆ ಆಸ್ಪತ್ರೆ ಯಾವುದೇ ಹೊಸ ಕ್ಲಿನಿಕಲ್ ಟ್ರಯಲ್ ಅಥವಾ ಔಷಧ ಸಂಶೋಧನಾ ಯೋಜನೆಗಳನ್ನು ಆರಂಭಿಸುವಂತಿಲ್ಲ. ಆದರೆ ಈಗಾಗಲೇ ನಡೆಯುತ್ತಿರುವ ಕ್ಲಿನಿಕಲ್ ಪ್ರಯೋಗಗಳನ್ನು ಮುಂದುವರಿಸಲು ಅವಕಾಶ ನೀಡಲಾಗಿದೆ. ಅದರೊಂದಿಗೆ ಪ್ರತಿ ತಿಂಗಳು ರೋಗಿಗಳ ಸುರಕ್ಷತೆಗೆ ಸಂಬಂಧಿಸಿದ ಪ್ರಗತಿ ವರದಿಯನ್ನು ಸರ್ಕಾರಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಚಿಕಿತ್ಸೆಗೆ ಯಾವುದೇ ತೊಂದರೆ ಇಲ್ಲ

ಈ ನಿರ್ಬಂಧವು ಕೇವಲ ಹೊಸ ಕ್ಲಿನಿಕಲ್ ಟ್ರಯಲ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಆಸ್ಪತ್ರೆಯ ದೈನಂದಿನ ಕಾರ್ಯಚಟುವಟಿಕೆಗಳು, ಕ್ಯಾನ್ಸರ್ ರೋಗಿಗಳ ತಪಾಸಣೆ ಹಾಗೂ ಚಿಕಿತ್ಸಾ ಸೇವೆಗಳು ಎಂದಿನಂತೆ ಯಾವುದೇ ಅಡಚಣೆಯಿಲ್ಲದೆ ಮುಂದುವರಿಯಲಿವೆ.

ಇದೇ ವೇಳೆ, ಸಿಡಿಎಸ್‌ಸಿಒ ಹೊರಡಿಸಿರುವ ಆದೇಶವನ್ನು ಎಚ್‌ಸಿಜಿ ಆಸ್ಪತ್ರೆಯ ಆಡಳಿತ ಮಂಡಳಿ ಪರಿಶೀಲಿಸುತ್ತಿದ್ದು, ಈ ಆದೇಶದ ವಿರುದ್ಧ ಕಾನೂನು ಹೋರಾಟ ನಡೆಸುವ ಕುರಿತು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಹಿಡಕಲ್ ಜಲಾಶಯ ಬರದ ನಡುವೆ 51 ವರ್ಷಗಳ ಇತಿಹಾಸ ಮರುಕಳಿಕೆ: ನೀರಿನಿಂದ ಹೊರಬಂದ ವಿಠ್ಠಲ ದೇವಸ್ಥಾನಕ್ಕೆ ಭಕ್ತರ ದಂಡು

0

ಬೆಳಗಾವಿ: ಮುಂಗಾರು ಮಳೆಯ ವಿಳಂಬದಿಂದ ಹಿಡಕಲ್ ಜಲಾಶಯದ ನೀರಿನ ಮಟ್ಟ ಇಳಿಕೆಯಾಗುತ್ತಿದ್ದಂತೆಯೇ, ಜಲಗರ್ಭದಲ್ಲಿ ಮುಳುಗಿದ್ದ ಐತಿಹಾಸಿಕ ವಿಠ್ಠಲ ದೇವಸ್ಥಾನ ಮತ್ತೆ ಬೆಳಕಿಗೆ ಬಂದಿದೆ.

ಹುಕ್ಕೇರಿ ತಾಲೂಕಿನ ಹುನ್ನೂರು ಗ್ರಾಮದಲ್ಲಿದ್ದ ಈ ದೇವಸ್ಥಾನ 1928ರಲ್ಲಿ ನಿರ್ಮಾಣಗೊಂಡಿದ್ದು, 1978ರಲ್ಲಿ ಜಲಾಶಯ ನಿರ್ಮಾಣದ ಬಳಿಕ ಸಂಪೂರ್ಣ ಮುಳುಗಿತ್ತು. ಬರೋಬ್ಬರಿ 51 ವರ್ಷಗಳ ಬಳಿಕ ಈಗ ಮತ್ತೆ ದೇವಾಲಯದ ಸಂಪೂರ್ಣ ರಚನೆ ಗೋಚರವಾಗಿದ್ದು, ಇತಿಹಾಸ ಮರುಕಳಿಸಿದಂತಾಗಿದೆ.

2023ರ ಬರಗಾಲದ ಸಂದರ್ಭದಲ್ಲೂ ದೇವಾಲಯ ಮೊದಲ ಬಾರಿಗೆ ಹೊರಬಂದಿದ್ದರೆ, ಈಗ 2026ರಲ್ಲಿ ಮತ್ತೊಮ್ಮೆ ನೀರಿನ ಮಟ್ಟ ಕುಸಿತದಿಂದ ಅದು ಸ್ಪಷ್ಟವಾಗಿ ಕಾಣಿಸುತ್ತಿದೆ. ದೀರ್ಘಕಾಲ ನೀರಿನಲ್ಲಿದ್ದರೂ ದೇವಾಲಯದ ರಚನೆ ಹಾಗೂ ವಿಠ್ಠಲನ ವಿಗ್ರಹ ಅಚಲವಾಗಿರುವುದು ಭಕ್ತರಲ್ಲಿ ಅಚ್ಚರಿ ಹಾಗೂ ಭಕ್ತಿಭಾವ ಮೂಡಿಸಿದೆ.

ದೇವಾಲಯ ಗೋಚರಿಸುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಜಿಲ್ಲೆ ಹಾಗೂ ಪಕ್ಕದ ಮಹಾರಾಷ್ಟ್ರದಿಂದಲೂ ಭಕ್ತರು ದಾಳಿ ಮಾಡುತ್ತಿದ್ದು, ವಿಠ್ಠಲನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ನೀರಿನ ಕೊರತೆ ಆತಂಕಕಾರಿಯಾಗಿದ್ದರೂ, ಇತಿಹಾಸದ ಈ ಅಪರೂಪದ ಮರುಪ್ರಕಟನೆ ಭಕ್ತ ವಲಯದಲ್ಲಿ ಭಕ್ತಿ ಉತ್ಸಾಹವನ್ನು ಹೆಚ್ಚಿಸಿದೆ.

 

ರಸ್ತೆಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಕಚ್ಚುತ್ತಿದ್ದಂತೆ ಭೀಕರ ಸ್ಫೋ: ಸಾಕುನಾಯಿ ದುರ್ಮರಣ

0

ದಾವಣಗೆರೆ: ಆಹಾರವಿದೆ ಎಂದು ಭಾವಿಸಿ ಪ್ಲಾಸ್ಟಿಕ್ ಕವರ್ ಕಚ್ಚಿದ ಸಾಕುನಾಯಿ ಭೀಕರ ಸ್ಫೋಟದಲ್ಲಿ ಸಾವನ್ನಪ್ಪಿರುವ ಘಟನೆ ಚನ್ನಗಿರಿ ತಾಲೂಕಿನ ನಲ್ಕುದರೆ ಗ್ರಾಮದಲ್ಲಿ ಆತಂಕ ಸೃಷ್ಟಿಸಿದೆ.

ಅರೆಕೇರೆ ರುದ್ರೇಶ್ ಅವರಿಗೆ ಸೇರಿದ ನಾಯಿ, ಜಮೀನಿಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಅನುಮಾನಾಸ್ಪದ ಪ್ಲಾಸ್ಟಿಕ್ ಕವರ್ ಅನ್ನು ಬಾಯಿಯಿಂದ ಕಚ್ಚಿದೆ. ತಕ್ಷಣವೇ ಕವರ್‌ನೊಳಗಿದ್ದ ಸ್ಫೋಟಕ ವಸ್ತು ಸಿಡಿದು, ನಾಯಿಯ ಮುಖ ಸಂಪೂರ್ಣ ನಜ್ಜುಗುಜ್ಜಾಗಿದ್ದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ.

ಸ್ಫೋಟದ ಭಾರೀ ಶಬ್ದದಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಾಥಮಿಕ ಮಾಹಿತಿ ಪ್ರಕಾರ ಕಾಡು ಹಂದಿಗಳನ್ನು ಬೇಟೆಯಾಡಲು ಅಥವಾ ಓಡಿಸಲು ಬಳಸುವ ಸಿಡಿಮದ್ದು ಮಾದರಿಯ ವಸ್ತು ಇದಾಗಿರಬಹುದು ಎಂದು ಶಂಕಿಸಲಾಗಿದೆ.

ಸಂಬಂಧಿತ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಸ್ಫೋಟಕ ವಸ್ತುವಿನ ಅವಶೇಷಗಳನ್ನು ವಶಪಡಿಸಿಕೊಂಡು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ವರದಿ ಬಂದ ಬಳಿಕ ಸ್ಫೋಟದ ನಿಖರ ಕಾರಣ ತಿಳಿಯಲಿದೆ.

ನಿರಪರಾಧ ಪ್ರಾಣಿಯ ಸಾವಿಗೆ ಕಾರಣವಾದ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಭೈರಮಂಗಲಕ್ಕೆ ಬನ್ನಿ, ರೈತರ ಜೊತೆ ಮಾತನಾಡೋಣ: ಡಿ.ಕೆ. ಶಿವಕುಮಾರ್ʼಗೆ ಹೆಚ್.ಡಿ. ಕುಮಾರಸ್ವಾಮಿ ಸವಾಲು

ಬೆಂಗಳೂರು: ಬಿಡದಿ ಸ್ಮಾರ್ಟ್ ಸಿಟಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ದಾಖಲೆಗಳೊಂದಿಗೆ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಭೈರಮಂಗಲಕ್ಕೆ ಬಂದು ರೈತರೊಂದಿಗೆ ನೇರವಾಗಿ ಮಾತನಾಡುವಂತೆ ಸವಾಲು ಹಾಕಿದ್ದಾರೆ.

ಮಾಜಿ ಶಾಸಕ ಮಾಗಡಿ ಮಂಜುನಾಥ್ ಹಾಗೂ ಜೆಡಿಎಸ್‌ನ ಗ್ರೇಟರ್ ಬೆಂಗಳೂರು ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ತಮ್ಮ ಮುಖ್ಯಮಂತ್ರಿ ಅವಧಿಯಲ್ಲಿ ಟೌನ್‌ಶಿಪ್ ಯೋಜನೆ ಕುರಿತು ಏನೆಲ್ಲ ನಿರ್ಧಾರಗಳು ಕೈಗೊಳ್ಳಲಾಗಿತ್ತು ಹಾಗೂ ಕಾಂಗ್ರೆಸ್ ನಾಯಕರು ಆಗ ವ್ಯಕ್ತಪಡಿಸಿದ್ದ ನಿಲುವಿನ ಕುರಿತು ದಾಖಲೆಗಳನ್ನು ಪ್ರದರ್ಶಿಸಿದರು.

“2006ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಐದು ಕಡೆ ಟೌನ್‌ಶಿಪ್ ಯೋಜನೆ ಘೋಷಿಸಿದ್ದು ನಿಜ. ಆದರೆ 2007ರ ಜುಲೈನಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಇದೇ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದ್ದರು” ಎಂದು ಕುಮಾರಸ್ವಾಮಿ ಹೇಳಿದರು.

ಅಂದು ಕಾಂಗ್ರೆಸ್ ನಾಯಕರು “ಇದು ಫಲವತ್ತಾದ ಕೃಷಿ ಭೂಮಿ, ರೈತರು ಭೂಮಿ ನೀಡಬಾರದು, ಇದು ರಿಯಲ್ ಎಸ್ಟೇಟ್ ಮಾಫಿಯಾದ ದಂಧೆ” ಎಂದು ಸದನದಲ್ಲಿ ಭಾಷಣ ಮಾಡಿದ್ದರು. ಆ ಭಾಷಣಗಳ ದಾಖಲೆಗಳು ತಮ್ಮ ಬಳಿ ಇವೆ ಎಂದು ಅವರು ತಿಳಿಸಿದರು.

ರೈತರ ತೀವ್ರ ವಿರೋಧದ ಹಿನ್ನೆಲೆಯಲ್ಲಿ 2007ರ ಆಗಸ್ಟ್ 1ರಂದು ವಿಧಾನಸಭೆಯಲ್ಲೇ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವುದಾಗಿ ಘೋಷಿಸಿದ್ದೆ. ಅದರ ನಂತರ 2007ರ ಬಳಿಕ ಈ ಯೋಜನೆಯಲ್ಲಿ ತಮ್ಮ ಯಾವುದೇ ಪಾತ್ರ ಇರಲಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ತಮ್ಮನ್ನು ಯೋಜನೆಯ ‘ಪಿತಾಮಹ’ ಎಂದು ಟೀಕಿಸುವ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಈ ಯೋಜನೆಗೆ ಸಂಬಂಧಿಸಿದಂತೆ ರೈತರ ಭೂಸ್ವಾಧೀನಕ್ಕೆ ನನ್ನ ಅವಧಿಯಲ್ಲಿ ಯಾವುದೇ ಆದೇಶ ಹೊರಡಿಸಲಿಲ್ಲ. 2025ರ ಮಾರ್ಚ್ 12ರಂದು ಮೊದಲ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರವೇ. ಅಲ್ಲದೆ, ಈ ವರ್ಷದ ಜೂನ್ 10ರಂದು ಅಂತಿಮ ಅಧಿಸೂಚನೆಯನ್ನೂ ಇದೇ ಸರ್ಕಾರ ಹೊರಡಿಸಿದೆ. ಇದರಲ್ಲಿ ನನ್ನ ಪಾತ್ರ ಎಲ್ಲಿದೆ?” ಎಂದು ಪ್ರಶ್ನಿಸಿದರು.

“ನನಗೆ ಈ ಯೋಜನೆ ಬಗ್ಗೆ ಆಸಕ್ತಿ ಅಥವಾ ಹಪಾಹಪಿ ಇದ್ದಿದ್ದರೆ, 2018ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಅದನ್ನು ಜಾರಿಗೆ ತರಬಹುದಿತ್ತು. ಆದರೆ ಹಾಗೆ ಮಾಡಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಇನ್ನು ಭೇಟಿ ಇಲ್ಲ; ‘ಕೃಷ್ಣಾ’ದಲ್ಲೇ ಸಾರ್ವಜನಿಕರ ಭೇಟಿ – ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ, ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮನ್ನು ಭೇಟಿ ಮಾಡಲು ಸದಾಶಿವನಗರ ನಿವಾಸಕ್ಕೆ ಬರುವ ಬದಲು, ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ಕ್ಕೆ ಆಗಮಿಸುವಂತೆ ಅವರು ಮನವಿ ಮಾಡಿದ್ದಾರೆ.

ಅಲ್ಲದೆ, ಯಾರೂ ಸದಾಶಿವನಗರ ನಿವಾಸಕ್ಕೆ ಬರುವ ತೊಂದರೆ ತೆಗೆದುಕೊಳ್ಳಬಾರದು ಹಾಗೂ ಈ ನಿರ್ಧಾರವನ್ನು ಅನ್ಯಥಾ ಭಾವಿಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಮುಂದೆ ಎಲ್ಲ ಸಾರ್ವಜನಿಕ ಭೇಟಿಗಳು ಹಾಗೂ ಮನವಿ ಸ್ವೀಕಾರ ಸೇರಿದಂತೆ ಅಧಿಕೃತ ಭೇಟಿಗಳು ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲೇ ನಡೆಯಲಿವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳ ಕೈಚಳಕ: ಕ್ಷಣಾರ್ಧದಲ್ಲಿ ಉಂಗುರ ಕದ್ದು ಪರಾರಿಯಾದ ಖದೀಮರು

0

ಬೆಂಗಳೂರು: ನಗರದಲ್ಲಿ ನಕಲಿ ನಾಗಸಾಧುಗಳ ವೇಷ ಧರಿಸಿ ಅಮಾಯಕ ಜನರನ್ನು ವಂಚಿಸಿ ಕಳ್ಳತನ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಆಶೀರ್ವಾದ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರ ಕೈಯಲ್ಲಿದ್ದ ಚಿನ್ನದ ಉಂಗುರವನ್ನು ಎಗರಿಸಿರುವ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರ್‌ಪಿಸಿ ಲೇಔಟ್ ನಿವಾಸಿ ಅರುಣ್ ಶ್ರೀಪಾದ್ ವಂಚನೆಗೆ ಒಳಗಾದವರಾಗಿದ್ದಾರೆ. ನಾಗಸಾಧುಗಳ ವೇಷದಲ್ಲಿದ್ದ ಕೆಲವರು ಅರುಣ್ ಶ್ರೀಪಾದ್ ಅವರ ಬಳಿ ಬಂದು ಕಾಶಿ ಹಾಗೂ ಗಂಗಾ ಸ್ನಾನದ ಮಹತ್ವದ ಕುರಿತು ಮಾತನಾಡುತ್ತಾ ಧಾರ್ಮಿಕ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.

ಮಾತಿನ ಮೂಲಕ ಅವರ ವಿಶ್ವಾಸ ಗಳಿಸಿದ ಬಳಿಕ ಆಶೀರ್ವಾದ ಮಾಡುವುದಾಗಿ ಹೇಳಿ, ಅವರ ಕೈಯಲ್ಲಿದ್ದ ಉಂಗುರವನ್ನು ಚಾಣಾಕ್ಷತನದಿಂದ ಕಳವು ಮಾಡಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆ ನಡೆದ ತಕ್ಷಣ ಅರುಣ್ ಶ್ರೀಪಾದ್ ಅವರಿಗೆ ಉಂಗುರ ಕಳುವಾಗಿರುವುದು ತಿಳಿದಿರಲಿಲ್ಲ. ಮನೆಗೆ ತಲುಪಿದ ಬಳಿಕ ಕೈಯಲ್ಲಿದ್ದ ಉಂಗುರ ಕಾಣಿಸದಿರುವುದನ್ನು ಗಮನಿಸಿ ತಾವು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ.

ಬಳಿಕ ಅವರು ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಅಯೋಧ್ಯೆ ರಾಮಮಂದಿರ ಕಾಣಿಕೆ ಎಣಿಕೆಯಲ್ಲಿ ಅಕ್ರಮ ಆರೋಪ; 40 ಸಿಬ್ಬಂದಿ ವಜಾ, SIT ತನಿಖೆ ಚುರುಕು

0

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಕಾಣಿಕೆ ಹಣ ಹಾಗೂ ಚಿನ್ನಾಭರಣಗಳ ಎಣಿಕೆ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ಮತ್ತು ಕಳ್ಳತನ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40 ಸಿಬ್ಬಂದಿಯನ್ನು ತಕ್ಷಣದಿಂದಲೇ ಸೇವೆಯಿಂದ ವಜಾಗೊಳಿಸಲಾಗಿದೆ.

ದೇಣಿಗೆ ಎಣಿಕೆ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿಯನ್ನು ಬದಲಿಸಿ, ಅವರ ಸ್ಥಾನಕ್ಕೆ ಹೊಸ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಜೊತೆಗೆ ಹಣ ಹಾಗೂ ಆಭರಣಗಳ ಎಣಿಕೆ ಪ್ರಕ್ರಿಯೆಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ಕಳೆದ ಆರು ದಿನಗಳಿಂದ ಅಯೋಧ್ಯೆಯಲ್ಲೇ ಬೀಡುಬಿಟ್ಟು ಪರಿಶೀಲನೆ ನಡೆಸಿದೆ. ತನಿಖೆಯ ಪ್ರಾಥಮಿಕ ವರದಿಯನ್ನು ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಲ್ಲಿಸುವ ಸಾಧ್ಯತೆ ಇದೆ.

ಎಸ್‌ಐಟಿ ತಂಡವು ದೇಣಿಗೆಯ ಹಳೆಯ ದಾಖಲೆಗಳು, ಸಿಸಿಟಿವಿ ದೃಶ್ಯಾವಳಿಗಳು, ನಗದು ಎಣಿಕೆ ವಿಧಾನ, ಆಭರಣಗಳ ದಾಖಲೆ ಸೇರಿದಂತೆ ಹಲವು ಮಾಹಿತಿಗಳನ್ನು ಪರಿಶೀಲಿಸಿದೆ. ಅಲ್ಲದೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸಂಬಂಧಿಸಿದ ಪ್ರಮುಖರು, ಅರ್ಚಕರು, ಬ್ಯಾಂಕ್ ಅಧಿಕಾರಿಗಳು ಹಾಗೂ ನಗದು ನಿರ್ವಹಣಾ ಸಿಬ್ಬಂದಿ ಸೇರಿದಂತೆ 100ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ತನಿಖೆ ಪೂರ್ಣಗೊಳ್ಳುವವರೆಗೆ ವಿಚಾರಣೆಗೆ ಒಳಗಾದ ಯಾರೂ ಅಯೋಧ್ಯೆ ನಗರವನ್ನು ತೊರೆಯಬಾರದು ಎಂದು ಎಸ್‌ಐಟಿ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಚರ ಎಂದು ಹೇಳಲಾಗುತ್ತಿರುವ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಅವರನ್ನು ಎಸ್‌ಐಟಿ ಹಲವು ಬಾರಿ ವಿಚಾರಣೆ ನಡೆಸಿದೆ. ಅವರ ಆಪ್ತರು, ಸಂಬಂಧಿಕರು ಹಾಗೂ ಆಸ್ತಿಪಾಸ್ತಿಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇದೇ ವೇಳೆ, ತನಿಖೆ ಕೇವಲ ಕಾಣಿಕೆ ಹಣದ ದುರುಪಯೋಗಕ್ಕೆ ಮಾತ್ರ ಸೀಮಿತವಾಗಿಲ್ಲ. ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದ ವಿವಿಧ ಖರೀದಿಗಳು, ನಿರ್ಮಾಣ ಸಾಮಗ್ರಿಗಳ ವ್ಯವಹಾರಗಳು ಹಾಗೂ ಟ್ರಸ್ಟ್‌ನ ಹಣಕಾಸು ನಿರ್ವಹಣೆಯ ವಿವಿಧ ಅಂಶಗಳ ಬಗ್ಗೆಯೂ ಎಸ್‌ಐಟಿ ಸಮಗ್ರ ತನಿಖೆ ನಡೆಸುತ್ತಿದೆ.

ರಾಗಿ ರೊಟ್ಟಿ ತಿಂದರೆ ಎಲುಬುಗಳು ಗಟ್ಟಿಯಾಗುತ್ತವೆಯೇ?: ಆರೋಗ್ಯ ತಜ್ಞರು ಹೇಳುವುದೇನು..?

0

ರಾಗಿ ನಮ್ಮ ಸಾಂಪ್ರದಾಯಿಕ ಆಹಾರ ಪದ್ಧತಿಯ ಪ್ರಮುಖ ಧಾನ್ಯಗಳಲ್ಲಿ ಒಂದಾಗಿದ್ದು, ಅತ್ಯಂತ ಪೌಷ್ಟಿಕ ಆಹಾರವೆಂದು ಪರಿಗಣಿಸಲಾಗಿದೆ. ಕ್ಯಾಲ್ಸಿಯಂ, ಕಬ್ಬಿಣಾಂಶ, ಫೈಬರ್, ಪ್ರೋಟೀನ್ ಹಾಗೂ ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವ ರಾಗಿ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರ ಆರೋಗ್ಯಕ್ಕೂ ಪ್ರಯೋಜನಕಾರಿ. ಅದರಲ್ಲೂ ರಾಗಿ ರೊಟ್ಟಿ ನಿಯಮಿತವಾಗಿ ಸೇವಿಸುವುದರಿಂದ ಹಲವು ಆರೋಗ್ಯ ಲಾಭಗಳನ್ನು ಪಡೆಯಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ರಾಗಿ ರೊಟ್ಟಿ ಸೇವನೆಯಿಂದ ದೊರೆಯುವ ಆರೋಗ್ಯ ಪ್ರಯೋಜನಗಳು

ಎಲುಬು ಮತ್ತು ಹಲ್ಲುಗಳನ್ನು ಬಲಪಡಿಸುತ್ತದೆ

ರಾಗಿಯಲ್ಲಿ ಕ್ಯಾಲ್ಸಿಯಂ ಪ್ರಮಾಣ ಹೆಚ್ಚಿರುವುದರಿಂದ ಎಲುಬು ಮತ್ತು ಹಲ್ಲುಗಳ ಆರೋಗ್ಯವನ್ನು ಕಾಪಾಡಲು ಸಹಕಾರಿ. ನಿಯಮಿತ ಸೇವನೆಯು ಆಸ್ಟಿಯೋಪೊರೋಸಿಸ್‌ (ಎಲುಬು ಸವೆತ) ಅಪಾಯವನ್ನು ಕಡಿಮೆ ಮಾಡಲು ನೆರವಾಗಬಹುದು.

ಜೀರ್ಣಕ್ರಿಯೆ ಸುಧಾರಿಸುತ್ತದೆ

ಫೈಬರ್ ಸಮೃದ್ಧವಾಗಿರುವ ರಾಗಿ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಕಾರಿಯಾಗಿದೆ. ಇದು ಮಲಬದ್ಧತೆಯನ್ನು ತಡೆಯುವುದರ ಜೊತೆಗೆ ಹೆಚ್ಚು ಹೊತ್ತು ಹೊಟ್ಟೆ ತುಂಬಿದ ಅನುಭವ ನೀಡುವ ಮೂಲಕ ಅತಿಯಾದ ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ರಕ್ತಹೀನತೆ ನಿವಾರಣೆಗೆ ನೆರವು

ರಾಗಿಯಲ್ಲಿರುವ ಕಬ್ಬಿಣಾಂಶವು ದೇಹದಲ್ಲಿ ಹಿಮೋಗ್ಲೋಬಿನ್‌ ಉತ್ಪಾದನೆಗೆ ನೆರವಾಗುವ ಮೂಲಕ ರಕ್ತಹೀನತೆಯ ಸಮಸ್ಯೆಯನ್ನು ತಡೆಗಟ್ಟಲು ಸಹಕಾರಿ.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಸಹಕಾರಿ

ರಾಗಿ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ (Low Glycemic Index) ಹೊಂದಿರುವ ಕಾರಣ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಧಾನವಾಗಿ ಹೆಚ್ಚಿಸುತ್ತದೆ. ಆದ್ದರಿಂದ ಮಧುಮೇಹ ಇರುವವರು ವೈದ್ಯರು ಅಥವಾ ಪೌಷ್ಟಿಕ ತಜ್ಞರ ಸಲಹೆಯಂತೆ ರಾಗಿಯನ್ನು ಆಹಾರದಲ್ಲಿ ಸೇರಿಸಬಹುದು.

ಹೃದಯದ ಆರೋಗ್ಯಕ್ಕೂ ಉತ್ತಮ

ರಾಗಿಯಲ್ಲಿರುವ ಫೈಬರ್ ಮತ್ತು ಇತರ ಪೋಷಕಾಂಶಗಳು ಹೃದಯದ ಆರೋಗ್ಯವನ್ನು ಕಾಪಾಡಲು ನೆರವಾಗುತ್ತವೆ. ಜೊತೆಗೆ ದೇಹಕ್ಕೆ ದೀರ್ಘಕಾಲ ಶಕ್ತಿ ಒದಗಿಸುವ ಗುಣವೂ ರಾಗಿಯಲ್ಲಿದೆ. ಬೆಳಗಿನ ಉಪಾಹಾರ ಅಥವಾ ಮಧ್ಯಾಹ್ನ ಹಾಗೂ ರಾತ್ರಿ ಊಟದಲ್ಲಿ ರಾಗಿ ರೊಟ್ಟಿಯನ್ನು ಸೇವಿಸುವುದು ಆರೋಗ್ಯಕರ ಆಯ್ಕೆಯಾಗಬಹುದು.

ಯಾರು ರಾಗಿ ರೊಟ್ಟಿಯನ್ನು ಎಚ್ಚರಿಕೆಯಿಂದ ಸೇವಿಸಬೇಕು?

ರಾಗಿ ಆರೋಗ್ಯಕರ ಆಹಾರವಾಗಿದ್ದರೂ, ಕೆಲವು ಆರೋಗ್ಯ ಸಮಸ್ಯೆಗಳಿರುವವರು ಮಿತ ಪ್ರಮಾಣದಲ್ಲಿ ಅಥವಾ ವೈದ್ಯರ ಸಲಹೆಯೊಂದಿಗೆ ಸೇವಿಸುವುದು ಸೂಕ್ತ.

ಕಿಡ್ನಿ ಸ್ಟೋನ್ ಸಮಸ್ಯೆ ಇರುವವರು

ರಾಗಿಯಲ್ಲಿ ಆಕ್ಸಲೇಟ್‌ (Oxalate) ಅಂಶವಿರುವುದರಿಂದ ಈಗಾಗಲೇ ಕಿಡ್ನಿ ಕಲ್ಲಿನ ಸಮಸ್ಯೆ ಇರುವವರು ಅತಿಯಾಗಿ ಸೇವಿಸುವುದನ್ನು ತಪ್ಪಿಸಬೇಕು.

ಥೈರಾಯ್ಡ್ ಸಮಸ್ಯೆ ಇರುವವರು

ಕೆಲವು ಅಧ್ಯಯನಗಳ ಪ್ರಕಾರ, ರಾಗಿಯಲ್ಲಿರುವ ಕೆಲವು ನೈಸರ್ಗಿಕ ಸಂಯುಕ್ತಗಳು ಥೈರಾಯ್ಡ್‌ ಗ್ರಂಥಿಯ ಕಾರ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ವಿಶೇಷವಾಗಿ ಹೈಪೋಥೈರಾಯ್ಡಿಸಮ್‌ ಇರುವವರು ವೈದ್ಯರ ಸಲಹೆಯಂತೆ ಮಿತವಾಗಿ ಸೇವಿಸುವುದು ಉತ್ತಮ.

ಜೀರ್ಣಕ್ರಿಯೆ ಸಮಸ್ಯೆ ಇರುವವರು

ಫೈಬರ್‌ ಅಧಿಕವಾಗಿರುವುದರಿಂದ ಕೆಲವರಿಗೆ ಹೊಟ್ಟೆ ಉಬ್ಬರ, ಗ್ಯಾಸ್ ಅಥವಾ ಅಜೀರ್ಣದಂತಹ ಸಮಸ್ಯೆಗಳು ಕಾಣಿಸಬಹುದು. ಆದ್ದರಿಂದ ಆರಂಭದಲ್ಲಿ ಕಡಿಮೆ ಪ್ರಮಾಣದಲ್ಲಿ ಸೇವಿಸಿ ದೇಹದ ಪ್ರತಿಕ್ರಿಯೆಯನ್ನು ಗಮನಿಸುವುದು ಸೂಕ್ತ.

ತೂಕ ಹೆಚ್ಚಿಸಿಕೊಳ್ಳಲು ಬಯಸುವವರು

ರಾಗಿ ಹೆಚ್ಚು ಹೊತ್ತು ಹೊಟ್ಟೆ ತುಂಬಿದ ಅನುಭವ ನೀಡುವುದರಿಂದ ತೂಕ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಕೇವಲ ರಾಗಿಯನ್ನೇ ಅವಲಂಬಿಸದೆ ಸಮತೋಲನ ಆಹಾರವನ್ನು ಸೇವಿಸಬೇಕು.

ಅಲರ್ಜಿ ಇರುವವರು

ಅಪರೂಪದ ಸಂದರ್ಭಗಳಲ್ಲಿ ಕೆಲವರಿಗೆ ರಾಗಿ ಸೇವನೆಯಿಂದ ಅಲರ್ಜಿ, ಚರ್ಮದ ತುರಿಕೆ ಅಥವಾ ಜೀರ್ಣಕ್ರಿಯೆ ಸಮಸ್ಯೆಗಳು ಕಾಣಿಸಬಹುದು. ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ರೌಡಿ ಶೀಟರ್ʼಗಳ ಬಡ್ಡಿ ಜಾಲಕ್ಕೆ ಬಿದ್ದ ರೈತ..! 17 ಲಕ್ಷ ಸಾಲಕ್ಕೆ 5 ಎಕರೆ ಜಮೀನು ಕಬಳಿಕೆ ಆರೋಪ –ಇಬ್ಬರ ಬಂಧನ

ಗದಗ: ಜಿಲ್ಲೆಯಲ್ಲಿ ಅಕ್ರಮ ಬಡ್ಡಿ ದಂಧೆಕೋರರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ 17 ಲಕ್ಷ ರೂಪಾಯಿ ಸಾಲದ ಹೆಸರಿನಲ್ಲಿ ರೈತನ 5 ಎಕರೆ ಜಮೀನನ್ನೇ ಕಬಳಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.

ಗದಗ ತಾಲೂಕಿನ ಬೆಳಹೋಡ ಗ್ರಾಮದ ರೈತ ಮಹ್ಮದ್ ರಫೀಕ್ ದೊಡ್ಡಮನಿ ಹಾಗೂ ಅವರ ಸಹೋದರರಿಗೆ ಬೆಟಗೇರಿಯ ಬಡ್ಡಿ ದಂಧೆಕೋರರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ರೈತ ಕುಟುಂಬಕ್ಕೆ 17 ಲಕ್ಷ ರೂಪಾಯಿ ಸಾಲ ನೀಡುವುದಾಗಿ ಹೇಳಿ, ಮುಂಗಡವಾಗಿಯೇ 5 ಲಕ್ಷ ರೂಪಾಯಿ ಬಡ್ಡಿ ಕಡಿತ ಮಾಡಿಕೊಂಡು ಕೇವಲ 12 ಲಕ್ಷ ರೂಪಾಯಿಯನ್ನು ಮಾತ್ರ ನೀಡಿದ್ದರೆಂದು ದೂರಲಾಗಿದೆ.

ಸಾಲದ ಭದ್ರತೆಯಾಗಿ ರೈತನ 5 ಎಕರೆ ಜಮೀನಿನ ದಾಖಲೆಗಳನ್ನು ಪಡೆದು, ಕೇವಲ ಅಡಮಾನ (ಹಾಪ್) ನೋಂದಣಿ ಮಾಡಿಕೊಳ್ಳುವುದಾಗಿ ನಂಬಿಸಿದ್ದರು. ಆದರೆ ಬಳಿಕ ಅಡಮಾನ ಪತ್ರದ ಬದಲು ಖರೀದಿ ಪತ್ರವೇ ಮಾಡಿಸಿಕೊಂಡು ಜಮೀನನ್ನು ತಮ್ಮ ವಶಕ್ಕೆ ತೆಗೆದುಕೊಂಡಿರುವ ಆರೋಪ ಕೇಳಿಬಂದಿದೆ.

ಪ್ರಕರಣದಲ್ಲಿ ಶೇಷಗೀರಿಸಾ ಬಾಕಳೆ ಹೆಸರಿಗೆ ಖರೀದಿ ಪತ್ರ ಮಾಡಿಸಲಾಗಿದ್ದು, ಇದರ ಹಿಂದೆ ರೌಡಿ ಶೀಟರ್ ಹಾಗೂ ಬಡ್ಡಿ ದಂಧೆಕೋರ ಯುವರಾಜ್ ಕೊರವರನ ಕೈವಾಡವಿದೆ ಎಂದು ರೈತ ಕುಟುಂಬ ಆರೋಪಿಸಿದೆ.

17 ಲಕ್ಷ ರೂಪಾಯಿ ಸಾಲಕ್ಕೆ ಕೋಟ್ಯಾಂತರ ಮೌಲ್ಯದ 5 ಎಕರೆ ಜಮೀನು ಕಳೆದುಕೊಂಡ ರೈತ ಕುಟುಂಬ ನ್ಯಾಯಕ್ಕಾಗಿ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರನ್ನು ಸಂಪರ್ಕಿಸಿ ಮೊರೆ ಹೋಗಿತ್ತು. ಪ್ರಕರಣದ ಗಂಭೀರತೆಯನ್ನು ಅರಿತ ಎಸ್ಪಿ ತಕ್ಷಣ ತನಿಖೆಗೆ ಸೂಚನೆ ನೀಡಿದ ಹಿನ್ನೆಲೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ಯುವರಾಜ್ ಕೊರವರ ಹಾಗೂ ರವಿ ಕೌಜಗೇರಿ ಅವರನ್ನು ಪೊಲೀಸರು ಬಂಧಿಸಿದ್ದು, ಬಸನಗೌಡ ಕರಮುಡಿ, ಶೇಷಗೀರಿಸಾ ಬಾಕಳೆ ಹಾಗೂ ಜಗದೀಶ ಅಯ್ಯನಗೌಡರ ತಲೆಮರೆಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಜಿಲ್ಲೆಯಲ್ಲಿ ವಾರದ ಹಿಂದಷ್ಟೇ ಬಡ್ಡಿ ಹಣಕ್ಕಾಗಿ ಮನೆಯ ಕಂಪೌಂಡ್ ಧ್ವಂಸಗೊಳಿಸಿದ ಘಟನೆ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಬಡ್ಡಿ ಬಕಾಸೂರರ ಕರಾಳ ಮುಖ ಬಯಲಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ.

error: Content is protected !!