ತುಮಕೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹಠಾತ್ ಹೃದಯಾಘಾತ ಸಂಭವಿಸಿದ ವೇಳೆ, ಸಮಯಪ್ರಜ್ಞೆ ಮೆರೆದ ಚಾಲಕ ನಿಗದಿತ ಮಾರ್ಗವನ್ನು ಬಿಟ್ಟು ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದು ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಬಸ್ನಲ್ಲಿ ಮಹಿಳೆ ಏಕಾಏಕಿ ಅಸ್ವಸ್ಥಗೊಂಡು ಹೃದಯಾಘಾತಕ್ಕೊಳಗಾದರು. ಪರಿಸ್ಥಿತಿ ಗಂಭೀರವಾಗಿದೆ ಎಂದು ಅರಿತ ಚಾಲಕ ಕ್ಷಣಮಾತ್ರವೂ ತಡಮಾಡದೆ ತುಮಕೂರು–ಮಧುಗಿರಿ ರಸ್ತೆಯಲ್ಲಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಬಸ್ ಅನ್ನು ತಿರುಗಿಸಿದರು.
ಆಸ್ಪತ್ರೆಯ ಪ್ರವೇಶ ದ್ವಾರದವರೆಗೂ ಬಸ್ ಕೊಂಡೊಯ್ದ ಬಳಿಕ ನಿರ್ವಾಹಕ ಮತ್ತು ಸಹಪ್ರಯಾಣಿಕರ ನೆರವಿನಿಂದ ಮಹಿಳೆಯನ್ನು ತಕ್ಷಣ ವೈದ್ಯರ ವಶಕ್ಕೆ ಒಪ್ಪಿಸಲಾಯಿತು. ವೈದ್ಯಕೀಯ ಸಿಬ್ಬಂದಿ ಕೂಡಲೇ ಚಿಕಿತ್ಸೆ ಆರಂಭಿಸಿದ ಪರಿಣಾಮ ಮಹಿಳೆಗೆ ಸಮಯಕ್ಕೆ ಸರಿಯಾಗಿ ತುರ್ತು ಚಿಕಿತ್ಸೆ ದೊರೆಯಿತು.
ಸಾಮಾನ್ಯವಾಗಿ ನಿಗದಿತ ಮಾರ್ಗದಲ್ಲಿ ಸಂಚರಿಸುವ ಬಸ್ ಅನ್ನು ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ತಿರುಗಿಸಿದ ಚಾಲಕನ ನಿರ್ಧಾರಕ್ಕೆ ಪ್ರಯಾಣಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಾಲಕ ಹಾಗೂ ನಿರ್ವಾಹಕರ ಮಾನವೀಯ ಸೇವೆಗೆ ಸಾರ್ವಜನಿಕರಿಂದ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

