ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಕಟಿಸಿದ್ದ ನೂತನ ಸಚಿವರ ಪಟ್ಟಿಯಲ್ಲಿ ಕೊನೆಯ ಕ್ಷಣದಲ್ಲಿ ಮಹತ್ವದ ಬದಲಾವಣೆ ನಡೆದಿದೆ.
ಆರಂಭದಲ್ಲಿ ಪಟ್ಟಿಯಲ್ಲಿ ಹೆಸರು ಕಾಣಿಸಿಕೊಂಡಿದ್ದ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಅವರ ಬದಲಿಗೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಅವಕಾಶ ನೀಡಲಾಗಿದೆ.
ಈ ಬೆಳವಣಿಗೆ ಕುರಿತು ಎಐಸಿಸಿ ಸ್ಪಷ್ಟನೆ ನೀಡಿದ್ದು, ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರು ಕಾಣಿಸಿಕೊಂಡಿರುವುದು ಟೈಪಿಂಗ್ ಮಿಸ್ಟೇಕ್ ಆಗಿದ್ದು, ಅಂತಿಮ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ ಎಂದು ತಿಳಿಸಿದೆ.
ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಮಂಕಾಳು ವೈದ್ಯ ಅವರು ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿ, ಕೊನೆಯ ಕ್ಷಣದ ಬದಲಾವಣೆ ಕುರಿತು ಚರ್ಚಿಸಲು ಯತ್ನಿಸಿದ್ದಾರೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಮಂಕಾಳು ವೈದ್ಯ, “ನಾನು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿಲ್ಲ. ಅವರು ಸಿಗಲಿಲ್ಲ. ಮತ್ತೆ ಬರುತ್ತೇನೆ,” ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದ್ದಾರೆ.
ಇನ್ನೊಂದೆಡೆ, ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಎಸ್.ಎಸ್. ಮಲ್ಲಿಕಾರ್ಜುನ ಅವರು, ಸಚಿವ ಸ್ಥಾನ ಸಿಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೈಕಮಾಂಡ್ಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಅಲ್ಲದೆ, ಸಂಸದೆಯಾಗಿರುವ ತಮ್ಮ ಪತ್ನಿ ಹಾಗೂ ಶಾಸಕರಾಗಿರುವ ಪುತ್ರ ಕೂಡ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶದ ಮೂಲಕ ಪಕ್ಷದ ನಾಯಕರ ಮೇಲೆ ಒತ್ತಡ ಹೇರಿದ್ದರು ಎಂಬ ಮಾಹಿತಿಯೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಈ ಬೆಳವಣಿಗೆಗಳ ಬೆನ್ನಲ್ಲೇ ಕೊನೆಯ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿ ಬದಲಾವಣೆ ಮಾಡಿ, ಮಂಕಾಳು ವೈದ್ಯ ಅವರ ಬದಲಿಗೆ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

