ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ, ಸಾರ್ವಜನಿಕ ಸ್ಥಳಗಳು ಹಾಗೂ ತೆರೆದ ಪ್ರದೇಶಗಳಲ್ಲಿ ಹಲವು ದಿನಗಳಿಂದ ಅನಾಥವಾಗಿ ನಿಲ್ಲಿಸಿರುವ ವಾಹನಗಳ ತೆರವು ಕಾರ್ಯಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಜ್ಜಾಗಿದೆ.
ಜುಲೈ 10ರಿಂದ ನಗರದ 5 ನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ಆರಂಭವಾಗಲಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಬಿಟ್ಟುಹೋಗಿರುವ ವಾಹನಗಳನ್ನು ಸಂಚಾರಿ ಪೊಲೀಸರು ಹಾಗೂ ಜಿಬಿಎ ಅಧಿಕಾರಿಗಳು ಜಂಟಿಯಾಗಿ ಗುರುತಿಸಿ ತೆರವುಗೊಳಿಸಲಿದ್ದಾರೆ. ಈಗಾಗಲೇ ಗುರುತಿಸಲಾದ ಅನಾಥ ವಾಹನಗಳಿಗೆ ಮೊದಲು 7 ದಿನಗಳ ಕಾಲಾವಕಾಶ ನೀಡಲಾಗುತ್ತದೆ.
ವಾಹನಗಳ ಮೇಲೆ ಅಧಿಕೃತ ಸ್ಟಿಕ್ಕರ್ ಮಾದರಿಯ ನೋಟಿಸ್ ಅಂಟಿಸಲಾಗುತ್ತದೆ. ಜೊತೆಗೆ ವಾಹನಗಳ ಚಕ್ರಗಳಿಗೆ ವೀಲ್ ಕ್ಲಾಂಪ್ ಅಳವಡಿಸಲಾಗುವುದು. ನೋಟಿಸ್ ನೀಡಿದ ಅವಧಿಯೊಳಗೆ ವಾಹನ ಮಾಲೀಕರು ವಾಹನಗಳನ್ನು ತೆರವುಗೊಳಿಸದಿದ್ದರೆ, ಅಂತಹ ವಾಹನಗಳನ್ನು ಜಪ್ತಿ ಮಾಡಿ ಸ್ಥಳಾಂತರಿಸಲಾಗುತ್ತದೆ.
ಜಪ್ತಿ ಮಾಡಲಾದ ವಾಹನಗಳನ್ನು ನಿಯಮಾನುಸಾರ ಬಹಿರಂಗ ಹರಾಜು ಮಾಡುವುದಾಗಿ ಜಿಬಿಎ ತಿಳಿಸಿದೆ. ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಸಂಚಾರ ವ್ಯವಸ್ಥೆ ಸುಗಮಗೊಳಿಸುವುದು ಹಾಗೂ ಅನಗತ್ಯವಾಗಿ ನಿಲ್ಲಿಸಿರುವ ವಾಹನಗಳಿಂದ ಉಂಟಾಗುವ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.

