Home Blog

ಯಾದಗಿರಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆ; ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವು!

ಯಾದಗಿರಿ: ಯಾದಗಿರಿಯ ಕೈಗಾರಿಕಾ ಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದೆ.

ಕೆಮಿಕಲ್ ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಉಸಿರುಗಟ್ಟಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಯಾದಗಿರಿ ತಾಲೂಕಿನ ಕಡೆಚೂರು-ಬಾಡಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಹೈದರಾಬಾದ್ ಮೂಲದ ಖಾಸಗಿ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಫ್ಯಾಕ್ಟರಿಯ ಕೆಮಿಕಲ್ ಸ್ಕ್ರಬ್ಬರ್‌ನಿಂದ ಅಪಾಯಕಾರಿ ಗ್ಯಾಸ್ ಸೋರಿಕೆಯಾದ ಪರಿಣಾಮ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.

ಗ್ಯಾಸ್‌ನ ಕೆಟ್ಟ ವಾಸನೆ ಹಾಗೂ ವಿಷಕಾರಿ ಪರಿಣಾಮದಿಂದ ಉಸಿರಾಟದ ತೊಂದರೆ ಉಂಟಾಗಿ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತರನ್ನು ಮಧ್ಯಪ್ರದೇಶ ಹಾಗೂ ಆಂಧ್ರಪ್ರದೇಶ ಮೂಲದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯಲ್ಲಿ ಅಸ್ವಸ್ಥಗೊಂಡ ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕಾರ್ಮಿಕರ ಸಾವಿನ ಹಿನ್ನೆಲೆಯಲ್ಲಿ ಫ್ಯಾಕ್ಟರಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

 

ಮಹಿಳೆಯರಿಗೆ ಅವಮಾನಿಸುವ ಉದ್ದೇಶ ಇರಲಿಲ್ಲ; ನನ್ನ ಭಾಷಣ ತಿರುಚಲಾಗಿದೆ ಎಂದ ಉದಯನಿಧಿ ಸ್ಟಾಲಿನ್

0

ಚೆನ್ನೈ: ನಟಿ ತ್ರಿಷಾ ಕೃಷ್ಣನ್‌ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಂಜಾವೂರಿನಲ್ಲಿ ಪೊಲೀಸ್ ವಿಚಾರಣೆ ಎದುರಿಸಿದ ಬಳಿಕ ಬಿಡುಗಡೆಯಾದ ಡಿಎಂಕೆ ಹಿರಿಯ ನಾಯಕ ಹಾಗೂ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಟಿವಿಕೆ ಸರ್ಕಾರ ಮತ್ತು ಮುಖ್ಯಮಂತ್ರಿ ವಿಜಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪೊಲೀಸ್ ಠಾಣೆಯಿಂದ ಹೊರಬಂದ ಬಳಿಕ ಬೆಂಬಲಿಗರು ಉದಯನಿಧಿ ಸ್ಟಾಲಿನ್ ಅವರಿಗೆ ಭರ್ಜರಿ ಸ್ವಾಗತ ಕೋರಿದರು. ಈ ವೇಳೆ ಮಾತನಾಡಿದ ಅವರು, ತಮ್ಮ ಬಂಧನವನ್ನು ‘ಸರ್ಕಸ್ ಕ್ಯಾಂಪ್’ ಎಂದು ವ್ಯಂಗ್ಯವಾಡಿದರು. ಅಲ್ಲದೆ ಮುಖ್ಯಮಂತ್ರಿ ವಿಜಯ್ ಅವರನ್ನು ‘ಡಮ್ಮಿ ಮುಖ್ಯಮಂತ್ರಿ’ ಎಂದು ಟೀಕಿಸಿದರು.

ರಾಜ್ಯದ ರೈತರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಸರ್ಕಾರ, ಜನರ ಗಮನ ಬೇರೆಡೆ ಸೆಳೆಯಲು ಈ ಬಂಧನದ ನಾಟಕವಾಡಿದೆ ಎಂದು ಆರೋಪಿಸಿದರು.

ಕಾವೇರಿ ವಿಚಾರದಲ್ಲಿ ಟಿವಿಕೆ ಸರ್ಕಾರದ ವಿರುದ್ಧ ಆರೋಪ:

ಕಾವೇರಿ ನೀರಿನ ವಿಚಾರದಲ್ಲಿ ಟಿವಿಕೆ ಸರ್ಕಾರ ವಿಫಲವಾಗಿದೆ ಎಂದು ಉದಯನಿಧಿ ಸ್ಟಾಲಿನ್ ಆರೋಪಿಸಿದರು.

“ನನ್ನನ್ನು ಭಯೋತ್ಪಾದಕನಂತೆ ಕರೆದುಕೊಂಡು ಹೋದರು. ನಾನು ರೈತರ ಸಮಸ್ಯೆಗಳು, ಮೇಕೆದಾಟು ಯೋಜನೆ ಹಾಗೂ ಕಾವೇರಿ ನೀರಿನ ವಿವಾದದಲ್ಲಿ ಸರ್ಕಾರದ ವೈಫಲ್ಯಗಳನ್ನು ಮಾತ್ರ ಪ್ರಶ್ನಿಸಿದ್ದೆ” ಎಂದು ಹೇಳಿದರು.

ಹಿಂದಿನ ಡಿಎಂಕೆ ಸರ್ಕಾರದ ಅವಧಿಯಲ್ಲಿ ಪ್ರತಿವರ್ಷ ಜೂನ್‌ 12ರಂದು ಮೆಟ್ಟೂರು ಅಣೆಕಟ್ಟಿನಿಂದ ರೈತರಿಗೆ ನೀರು ಬಿಡಲಾಗುತ್ತಿತ್ತು. ಆದರೆ ಈಗ ಹಲವು ತಿಂಗಳು ಕಳೆದರೂ ರೈತರಿಗೆ ನೀರು ಒದಗಿಸಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಕರ್ನಾಟಕ ಕಾಂಗ್ರೆಸ್ ವಿರುದ್ಧ ಮಾತನಾಡುವ ನೈತಿಕತೆ ಟಿವಿಕೆ ಪಕ್ಷಕ್ಕಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ಹೇಳಿಕೆ ತಿರುಚಲಾಗಿದೆ ಎಂದು ಆರೋಪ:

ತಮ್ಮ ಭಾಷಣವನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ ಎಂದು ಉದಯನಿಧಿ ಸ್ಟಾಲಿನ್ ಆರೋಪಿಸಿದ್ದಾರೆ.

“ನನ್ನ ಭಾಷಣವನ್ನು ಕಟ್, ಕಾಪಿ, ಪೇಸ್ಟ್ ಮಾಡಿ ಮಹಿಳೆಯರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದೇನೆ ಎಂದು ಬಿಂಬಿಸಲಾಗಿದೆ. ನನ್ನ ಉದ್ದೇಶ ರೈತರಿಗೆ ನೀರು ಬೇಕು ಎನ್ನುವುದಾಗಿತ್ತು. ಮಹಿಳೆಯರನ್ನು ಅವಮಾನಿಸುವ ಯಾವುದೇ ಉದ್ದೇಶ ಇರಲಿಲ್ಲ” ಎಂದು ಸ್ಪಷ್ಟಪಡಿಸಿದರು.

ತಮಿಳುನಾಡಿನ ಪ್ರತಿಯೊಬ್ಬ ತಾಯಿ ಮತ್ತು ಸಹೋದರಿಯನ್ನು ತಮ್ಮ ಕುಟುಂಬದ ಸದಸ್ಯರಂತೆ ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

 

2,000 ಮೇಲ್ಪಟ್ಟ UPI ಪೇಮೆಂಟ್‌ಗೆ ಹಣ ಕಡಿತವಾಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!

0

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಪಾವತಿ ಬಳಕೆಯ ನಡುವೆ, ₹2,000ಕ್ಕಿಂತ ಹೆಚ್ಚಿನ ಮೊತ್ತದ UPI ವಹಿವಾಟುಗಳಿಗೆ ಶುಲ್ಕ ವಿಧಿಸುವ ಕುರಿತು ಕೇಂದ್ರ ಸರ್ಕಾರ ಹೊಸ ಪ್ರಸ್ತಾವನೆ ಮುಂದಿಟ್ಟಿದೆ.

ವ್ಯಾಪಾರಿ ವಹಿವಾಟುಗಳಿಗೆ ಸಂಬಂಧಿಸಿದ UPI ಪಾವತಿಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ಅಥವಾ ವ್ಯವಹಾರ ಶುಲ್ಕ ವಿಧಿಸಲು ಅವಕಾಶ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರಸ್ತಾವಿತ ವ್ಯವಸ್ಥೆಯಡಿ ₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ.0.25 ರಿಂದ ಶೇ.0.4 ರವರೆಗೆ ಶುಲ್ಕ ವಿಧಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಆದರೆ, ಒಬ್ಬ ವ್ಯಕ್ತಿಯಿಂದ ಮತ್ತೊಬ್ಬ ವ್ಯಕ್ತಿಗೆ ನಡೆಯುವ UPI ಪಾವತಿಗಳನ್ನು ಈ ವ್ಯಾಪ್ತಿಯಿಂದ ಹೊರಗಿಡುವ ಸಾಧ್ಯತೆಯಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ತೆರಿಗೆ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆಯಲ್ಲಿ, ಬ್ಯಾಂಕುಗಳು ಹಾಗೂ ಪಾವತಿ ಸೇವಾ ಪೂರೈಕೆದಾರರ ಕೆಲವು ಎಲೆಕ್ಟ್ರಾನಿಕ್ ಪಾವತಿ ವಿಧಾನಗಳ ಮೇಲೆ MDR ವಿಧಿಸುವ ನಿರ್ಬಂಧವನ್ನು ತೆಗೆದುಹಾಕುವ ಪ್ರಸ್ತಾವನೆ ಇದೆ.

ಯಾವಾಗ ಜಾರಿಗೆ? ಇನ್ನೂ ನಿರ್ಧಾರವಾಗಿಲ್ಲ:

ಈ ಶುಲ್ಕ ವ್ಯವಸ್ಥೆಯನ್ನು ಯಾವಾಗ ಜಾರಿಗೆ ತರಲಾಗುತ್ತದೆ ಎಂಬ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

₹2,000ಕ್ಕಿಂತ ಹೆಚ್ಚಿನ ಮೊತ್ತದ UPI ವಹಿವಾಟುಗಳು ಒಟ್ಟು UPI ವಹಿವಾಟುಗಳ ಶೇ.5ರಷ್ಟಿದ್ದರೂ, ಒಟ್ಟು ವಹಿವಾಟಿನ ಮೌಲ್ಯದ ಸುಮಾರು ಶೇ.65ರಷ್ಟು ಪಾಲು ಹೊಂದಿವೆ ಎನ್ನಲಾಗಿದೆ.

ಈ ಕ್ರಮ ಜಾರಿಗೆ ಬಂದರೂ ಹಾಲು, ತರಕಾರಿ, ದಿನಸಿ ಖರೀದಿ ಅಥವಾ ಆಟೋ-ಟ್ಯಾಕ್ಸಿ ಪಾವತಿಗಳಂತಹ ಸಣ್ಣ ಮೊತ್ತದ ವಹಿವಾಟುಗಳಿಗೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ ತಿಂಗಳಲ್ಲಿ ದೇಶದಲ್ಲಿ ಸುಮಾರು 23.7 ಬಿಲಿಯನ್‌ (2,370 ಕೋಟಿ) UPI ವಹಿವಾಟುಗಳು ನಡೆದಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು 29.9 ಲಕ್ಷ ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ಪ್ರಸ್ತಾವಿತ ಶುಲ್ಕ ಜಾರಿಗೆ ಬಂದರೂ ಶೇ.95ರಷ್ಟು UPI ವಹಿವಾಟುಗಳು MDR ವ್ಯಾಪ್ತಿಗೆ ಬರುವುದಿಲ್ಲ. ಅಲ್ಲದೆ, ಎಲ್ಲಾ ವ್ಯಾಪಾರಿಗಳು ಈ ಶುಲ್ಕವನ್ನು ಗ್ರಾಹಕರಿಗೆ ವರ್ಗಾಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

 

KRS Dam Water Level: ಕೆಆರ್‌ಎಸ್ ನೀರಿನ ಮಟ್ಟ 105 ಅಡಿಗೆ ಏರಿಕೆ; ಮಂಡ್ಯ ರೈತರಲ್ಲಿ ಸಂತಸ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದ ರೈತರಲ್ಲಿ ಕೃಷಿ ಚಟುವಟಿಕೆಗಳ ಬಗ್ಗೆ ಹೊಸ ನಿರೀಕ್ಷೆ ಮೂಡಿದೆ.

ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಇದೀಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ತಕ್ಷಣವೇ ನಾಲೆಗಳಿಗೆ ನೀರು ಹರಿಸುವಂತೆ ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೆಲ ದಿನಗಳ ಹಿಂದೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದ ಸಂದರ್ಭದಲ್ಲಿ, ನೀರಿನ ಕೊರತೆ ಹಿನ್ನೆಲೆಯಲ್ಲಿ ಹೊಸ ಬೆಳೆ ಬಿತ್ತನೆ ಮಾಡದಂತೆ ಹಾಗೂ ಕುಡಿಯುವ ನೀರಿಗೆ ಆದ್ಯತೆ ನೀಡುವಂತೆ ಸರ್ಕಾರ ರೈತರಿಗೆ ಸೂಚನೆ ನೀಡಿತ್ತು.

ಆದರೆ ಇದೀಗ ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರ ಪರಿಣಾಮ ಡ್ಯಾಂನ ನೀರಿನ ಮಟ್ಟ 105 ಅಡಿಗೆ ತಲುಪಿದೆ.

ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಮಂಡ್ಯ ಜಿಲ್ಲೆಯ ರೈತರು ಕೃಷಿ ಚಟುವಟಿಕೆಗಳಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವ ಬಗ್ಗೆ ಸರ್ಕಾರ ಶೀಘ್ರ ಅಧಿಕೃತ ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಬಿತ್ತನೆಗೆ ಇದು ಸೂಕ್ತ ಸಮಯವಾಗಿದ್ದು, ನೀರು ಹರಿಸುವಲ್ಲಿ ವಿಳಂಬವಾದರೆ ಬೆಳೆ ನಷ್ಟವಾಗುವ ಆತಂಕ ರೈತರನ್ನು ಕಾಡುತ್ತಿದೆ.

ತುಂಗಭದ್ರಾ ಜಲಾಶಯಕ್ಕೂ ಜೀವಕಳೆ:

ಇದೇ ವೇಳೆ ಮೂರು ರಾಜ್ಯಗಳ ಒಂಬತ್ತು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೂ ಮಳೆ ನೀರಿನಿಂದ ಹೊಸ ಚೈತನ್ಯ ಬಂದಿದೆ.

ಕೊಪ್ಪಳ ತಾಲೂಕಿನ ಮುನಿರಾಬಾದ್‌ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಭಾರಿ ಪ್ರಮಾಣದ ಒಳಹರಿವು ದಾಖಲಾಗುತ್ತಿದೆ.

ಮಳೆ ಕೊರತೆಯಿಂದ ಖಾಲಿಯಾಗಿದ್ದ ಜಲಾಶಯದಲ್ಲಿ ಇದೀಗ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದ್ದು, ರೈತರಲ್ಲಿ ಮತ್ತೆ ಆಶಾಭಾವನೆ ಮೂಡಿದೆ.

105 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಸದ್ಯ 51.145 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 91 ಸಾವಿರಕ್ಕೂ ಅಧಿಕ ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಒಂದೇ ದಿನದಲ್ಲಿ ಸುಮಾರು 7 ಟಿಎಂಸಿ ನೀರು ಹೆಚ್ಚಾಗಿದೆ.

44 ಟಿಎಂಸಿಯಷ್ಟಿದ್ದ ನೀರಿನ ಸಂಗ್ರಹ ಇದೀಗ 51 ಟಿಎಂಸಿಗೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಒಳಹರಿವು ಮುಂದುವರಿದರೆ ಜಲಾಶಯ ಮತ್ತಷ್ಟು ಭರ್ತಿಯಾಗುವ ನಿರೀಕ್ಷೆಯಿದೆ.

Cauvery Issue: ಆಗಸ್ಟ್ 13ರ ಕರ್ನಾಟಕ ಬಂದ್‌ಗೆ ರಮ್ಯಾ ಸಾಥ್, ಹೇಳಿದ್ದೇನು?

ಬೆಂಗಳೂರು: ಆಗಸ್ಟ್‌ 13ರಂದು ಕರೆ ನೀಡಲಾಗಿರುವ ಅಖಂಡ ಕರ್ನಾಟಕ ಬಂದ್‌ಗೆ ನಟಿ ರಮ್ಯಾ ಬೆಂಬಲ ಘೋಷಿಸಿದ್ದಾರೆ.

ಕಾವೇರಿ ನೀರಿನ ವಿಚಾರದಲ್ಲಿ ರೈತರ ಪರವಾಗಿ ತಮ್ಮ ಬೆಂಬಲ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾವೇರಿ ಹೋರಾಟ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ನಟಿ ರಮ್ಯಾ ತಮ್ಮ ಪ್ರತಿಕ್ರಿಯೆ ನೀಡಿದ್ದು, “ನಾನು ಮಂಡ್ಯದವಳು. ಕಾವೇರಿ ವಿಚಾರ ಬಂದಾಗ ರೈತರ ಪರವಾಗಿ ನಿಲ್ಲುವುದು ನನ್ನ ಜವಾಬ್ದಾರಿ. ನನ್ನ ಬೆಂಬಲ ಖಂಡಿತ ಇರುತ್ತದೆ” ಎಂದು ಹೇಳಿದ್ದಾರೆ.

ಕಾವೇರಿ ನೀರಿನ ವಿಚಾರದಲ್ಲಿ ಈ ಹಿಂದೆಯೂ ಹೋರಾಟಗಳಲ್ಲಿ ಭಾಗಿಯಾಗಿದ್ದೇನೆ ಎಂದು ಹೇಳಿರುವ ರಮ್ಯಾ, ಕಾವೇರಿ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದ್ದ ಸಂದರ್ಭದಲ್ಲೂ ಹಾಜರಾಗಿದ್ದೆ ಎಂದು ತಿಳಿಸಿದ್ದಾರೆ.

“ರೈತರ ಹಿತದ ಪ್ರಶ್ನೆ ಬಂದಾಗ ಯಾವುದೇ ಹಿಂಜರಿಕೆಯಿಲ್ಲದೆ ಬೆಂಬಲ ನೀಡುತ್ತೇನೆ. ನಾನು ಯಾವಾಗಲೂ ರೈತರ ಪರವಾಗಿಯೇ ಇರುತ್ತೇನೆ” ಎಂದು ರಮ್ಯಾ ಹೇಳಿದ್ದಾರೆ.

ಕಾವೇರಿ ನೀರಿನ ವಿವಾದ ಮತ್ತೆ ರಾಜ್ಯದಲ್ಲಿ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿರುವ ಸಂದರ್ಭದಲ್ಲಿ ರಮ್ಯಾ ಅವರ ಬೆಂಬಲ ಬಂದ್‌ಗೆ ಮತ್ತಷ್ಟು ಬಲ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಆದರೆ, ಆಗಸ್ಟ್‌ 13ರಂದು ನಡೆಯುವ ಬಂದ್‌ನಲ್ಲಿ ರಮ್ಯಾ ಸ್ವತಃ ಬೀದಿಗಿಳಿದು ಹೋರಾಟದಲ್ಲಿ ಭಾಗಿಯಾಗುತ್ತಾರೆಯೇ ಅಥವಾ ಬೆಂಬಲಕ್ಕೆ ಮಾತ್ರ ಸೀಮಿತರಾಗುತ್ತಾರೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

 

ರಾಘವೇಂದ್ರ ಹಿಟ್ನಾಳ್‌ಗೆ ಕೈತಪ್ಪಿದ ಸಚಿವ ಸ್ಥಾನ: ಕೊಪ್ಪಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ

ಕೊಪ್ಪಳ: ರಾಜ್ಯದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಬೆಳವಣಿಗೆಗಳು ಮುಂದುವರಿದಿವೆ.

ಕೊಪ್ಪಳ ಜಿಲ್ಲೆಯಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರಿಂದ ರಾಜೀನಾಮೆ ಪರ್ವ ಆರಂಭವಾಗಿದೆ.

ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಪುರ ಅವರಿಗೆ ಸಲ್ಲಿಸಿದ್ದಾರೆ.

ರಾಘವೇಂದ್ರ ಹಿಟ್ನಾಳ್ ಅವರ ಆಪ್ತೆಯಾಗಿರುವ ಜ್ಯೋತಿ ಗೊಂಡಬಾಳ್, ಕೊಪ್ಪಳ ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 75 ವರ್ಷಗಳಿಂದ ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡದಿರುವುದು ತೀವ್ರ ನೋವು ತಂದಿದೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಬಳಿಕ ಕೊಪ್ಪಳ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಈ ಬೆಳವಣಿಗೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

 

ವಿಮೆ ಇಲ್ಲದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್ ಸಿಗಲ್ಲ? ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ!

ನವದೆಹಲಿ: ದೇಶದಲ್ಲಿ ವಿಮೆ ಇಲ್ಲದೆ ಸಂಚರಿಸುವ ವಾಹನಗಳ ಸಂಖ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಮಾನ್ಯ ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್‌ ಬಂಕ್‌ಗಳಲ್ಲಿ ಇಂಧನ ನೀಡದಿರುವ ಕುರಿತು ಪ್ರಾಯೋಗಿಕ ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಹಾಗೂ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪೈಲಟ್ ಯೋಜನೆ ಸಿದ್ಧಪಡಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಈ ಯೋಜನೆಯಡಿ ಪೆಟ್ರೋಲ್‌ ಅಥವಾ ಡೀಸೆಲ್‌ ತುಂಬಿಸುವ ಮೊದಲು ವಾಹನದ ವಿಮೆ ಮಾನ್ಯವಾಗಿದೆಯೇ ಎಂಬುದನ್ನು ಪರಿಶೀಲಿಸುವ ವ್ಯವಸ್ಥೆ ಜಾರಿಗೆ ಬರಬಹುದು.

ಮಾನ್ಯ ವಿಮೆ ಇಲ್ಲದ ವಾಹನಗಳಿಗೆ ಅಗತ್ಯ ವಿಮೆ ಮಾಡಿಸಿಕೊಳ್ಳುವವರೆಗೆ ಇಂಧನ ನಿರಾಕರಿಸುವ ಸಾಧ್ಯತೆಯಿದೆ. ಕಡ್ಡಾಯ ಮೋಟಾರು ವಿಮಾ ನಿಯಮಗಳ ಪಾಲನೆ ಹೆಚ್ಚಿಸುವುದು ಹಾಗೂ ವಿಮೆ ಇಲ್ಲದ ವಾಹನಗಳ ಸಂಚಾರ ತಡೆಯುವುದು ಈ ಕ್ರಮದ ಉದ್ದೇಶವಾಗಿದೆ.

ರಸ್ತೆ ಸುರಕ್ಷತಾ ಕ್ರಮಗಳ ಭಾಗವಾಗಿ ವಾಹನಗಳ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ANPR) ಕ್ಯಾಮೆರಾಗಳನ್ನು ವಾಹನ ಹಾಗೂ ವಿಮಾ ಡೇಟಾಬೇಸ್‌ಗಳಿಗೆ ಸಂಪರ್ಕಿಸುವುದು, ಸಂಚಾರ ಪೊಲೀಸರಿಗೆ ವಿಮೆ ಪರಿಶೀಲನೆಗೆ ಮೊಬೈಲ್‌ ಸಾಧನಗಳನ್ನು ಒದಗಿಸುವುದು ಸೇರಿದಂತೆ ಹಲವು ಪ್ರಸ್ತಾವನೆಗಳನ್ನು ಸುಪ್ರೀಂ ಕೋರ್ಟ್‌ ಮುಂದಿಟ್ಟಿದೆ.

ಇದಲ್ಲದೆ, ಹೊಸದಾಗಿ ಖರೀದಿಸುವ ವಾಹನಗಳಿಗೆ ಕಡ್ಡಾಯವಾಗಿರುವ ಮೂರನೇ ವ್ಯಕ್ತಿ ವಿಮೆಯ ಅವಧಿಯನ್ನು ವಿಸ್ತರಿಸುವ ಬಗ್ಗೆಯೂ ಚರ್ಚೆ ನಡೆದಿದೆ. ವಿಮೆ ಇಲ್ಲದ ವಾಹನಗಳಿಂದ ಉಂಟಾಗುವ ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಸಿಗುವಂತೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ.

 

Chikkamagaluru News: ಕಾಫಿ ಎಸ್ಟೇಟ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಐವರು ಅಕ್ರಮ ನಿವಾಸಿಗಳು ಪತ್ತೆ!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎನ್ನಲಾದ ಐವರು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಫಿ ತೋಟಗಳು, ಹೋಂಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ಅಕ್ರಮ ನಿವಾಸಿಗಳಿರುವ ಆರೋಪಗಳ ನಡುವೆ ಈ ಬೆಳವಣಿಗೆ ಚರ್ಚೆಗೆ ಕಾರಣವಾಗಿದೆ.

ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಆಧಾರದ ಮೇಲೆ ಪೊಲೀಸರು ನಡೆಸಿದ ತಪಾಸಣೆ ವೇಳೆ ಐವರು ಪತ್ತೆಯಾಗಿದ್ದಾರೆ. ಅವರ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದಿರುವ ಕಾರ್ಮಿಕರ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಯುತ್ತಿತ್ತು. ಈ ವೇಳೆ ನಡೆಸಿದ ಪರಿಶೀಲನೆಯಲ್ಲಿ ಐವರು ಕಾಫಿ ಎಸ್ಟೇಟ್‌ಗಳು ಸೇರಿದಂತೆ ವಿವಿಧೆಡೆ ದಿನಗೂಲಿ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ.

ಬಂಧಿತರನ್ನು ಜಹಾಂಗೀರ್, ಫೈಸುದ್ದಿನ್, ನುಮನ್ ಬಶೀರ್, ಮಹಮದ್ ಹುಮೈನ್ ಹಾಗೂ ಮಹಮದ್ ಹಸೀಬುಲ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಕೆಲವರು ಒಂಟಿಯಾಗಿ ಹಾಗೂ ಕೆಲವರು ಕುಟುಂಬ ಸಮೇತರಾಗಿ ಚಿಕ್ಕಮಗಳೂರಿಗೆ ಬಂದಿರುವುದು ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯಾರು ಕರೆತಂದರು? ಪೊಲೀಸರಿಂದ ತನಿಖೆ:

ಬಂಧಿತರು ಚಿಕ್ಕಮಗಳೂರಿಗೆ ಹೇಗೆ ಬಂದರು, ಅವರನ್ನು ಯಾರು ಕರೆತಂದರು, ಅವರ ಏಜೆಂಟ್ ಯಾರು ಹಾಗೂ ಸ್ಥಳೀಯ ಸಂಪರ್ಕ ಹೇಗೆ ಬೆಳೆದಿದೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಸಂಗ್ರಹಿಸಲು ವಿಚಾರಣೆ ಮುಂದುವರಿದಿದೆ.

ಇನ್ನು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಮಿಕರ ದಾಖಲೆಗಳು ಹಾಗೂ ಫೋಟೋಗಳನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದ್ದು, ಅಕ್ರಮ ವಲಸಿಗರ ಪತ್ತೆ ಕಾರ್ಯ ಮುಂದುವರಿದಿದೆ.

ಈ ನಡುವೆ, ಮಲೆನಾಡು ಭಾಗದಲ್ಲಿ ಸಾವಿರಾರು ಅಕ್ರಮ ಬಾಂಗ್ಲಾದೇಶಿ ನಿವಾಸಿಗಳಿದ್ದಾರೆ ಎಂದು ಬಿಜೆಪಿ ಹಾಗೂ ಕೆಲವು ಹಿಂದೂಪರ ಸಂಘಟನೆಗಳು ಈ ಹಿಂದೆ ಆರೋಪಿಸಿದ್ದವು. ಇದೀಗ ಐವರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಇನ್ನಷ್ಟು ಮಂದಿ ಇದ್ದಾರೆಯೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

 

ನೆಲಮಂಗಲದಲ್ಲಿ ಭೀಕರ ಅಪಘಾತ: ಥಾರ್ ಜೀಪ್ ಪಲ್ಟಿಯಾಗಿ ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಥಾರ್‌ ಜೀಪ್‌ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ನಡೆದಿದೆ.

ಮೃತರನ್ನು ಪವನ್ ಮತ್ತು ದೀಪಕ್ ಎಂದು ಗುರುತಿಸಲಾಗಿದೆ. ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್‌ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕಂಬಾಳು ಗ್ರಾಮದ ಕೆರೆಯ ರಸ್ತೆಯಲ್ಲಿ ತೆರಳುತ್ತಿದ್ದ ಥಾರ್‌ ಜೀಪ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗದ್ದೆಗೆ ಬಿದ್ದಿದೆ. ಬಳಿಕ ಜೀಪ್‌ ನಾಲ್ಕೈದು ಬಾರಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಡಾಬಸ್‌ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Karnataka Rain Alert: ಕರ್ನಾಟಕದ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಇಂದು ಯಾವ ಜಿಲ್ಲೆಗಳಿಗೆ ಅಲರ್ಟ್?

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಕೂಡ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇನ್ನು ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮಳೆ ಮತ್ತು ಗಾಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.