Home Blog

ರೋಹಿತ್ ಶರ್ಮಾ ನಿವೃತ್ತಿ ವದಂತಿಗೆ ಹೊಸ ಟ್ವಿಸ್ಟ್: ಹಿಟ್ ಮ್ಯಾನ್ ಅಭಿಮಾನಿಗಳಿಗೆ ಸಿಗುತ್ತಾ ಸಿಹಿಸುದ್ದಿ?

0

ಲಂಡನ್: ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಜುಲೈ 19ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯವೇ ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ ಕೊನೆಯ ಪಂದ್ಯವಾಗಬಹುದು ಎಂಬ ವದಂತಿಗೆ ಇದೀಗ ಹೊಸ ತಿರುವು ಸಿಕ್ಕಿದೆ.

ರೋಹಿತ್ ಶರ್ಮಾ ಅವರು ತಮ್ಮ ನಿವೃತ್ತಿ ಕುರಿತು ಬಿಸಿಸಿಐ, ತಂಡದ ಆಡಳಿತ ಮಂಡಳಿ ಅಥವಾ ಆಯ್ಕೆ ಸಮಿತಿಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಲಾರ್ಡ್ಸ್‌ನಲ್ಲಿ ನಡೆಯಲಿರುವ ಪಂದ್ಯ ಮುಗಿದ ಬಳಿಕ ಅವರು ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗೆ ಈವರೆಗೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಇತ್ತೀಚಿನ ವರದಿಗಳ ಪ್ರಕಾರ, 2027ರ ಏಕದಿನ ವಿಶ್ವಕಪ್ ಯೋಜನೆಯಲ್ಲಿ ರೋಹಿತ್ ಶರ್ಮಾ ಅವರನ್ನು ಪರಿಗಣಿಸದಿರಲು ಆಯ್ಕೆ ಸಮಿತಿ ನಿರ್ಧರಿಸಿದ್ದು, ಈ ವಿಚಾರವನ್ನು ಅವರಿಗೆ ಈಗಾಗಲೇ ತಿಳಿಸಲಾಗಿದೆ ಎನ್ನಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ವಿಶ್ವಕಪ್‌ನ್ನು ಗಮನದಲ್ಲಿಟ್ಟುಕೊಂಡು ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುವ ಉದ್ದೇಶದಿಂದ ತಂಡದ ಆಡಳಿತ ಮತ್ತು ಆಯ್ಕೆ ಸಮಿತಿ ಭವಿಷ್ಯದ ಯೋಜನೆ ರೂಪಿಸುತ್ತಿದೆ ಎಂದು ವರದಿಗಳು ಹೇಳಿವೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಈ ಕುರಿತು ರೋಹಿತ್ ಶರ್ಮಾ ಅವರೊಂದಿಗೆ ಚರ್ಚೆ ನಡೆದಿತ್ತು ಎನ್ನಲಾಗುತ್ತಿದೆ. ಆದರೆ, ಅವರು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಬಗ್ಗೆ ಯಾವುದೇ ಅಂತಿಮ ನಿರ್ಧಾರವನ್ನು ಬಿಸಿಸಿಐ ಅಥವಾ ಆಯ್ಕೆ ಸಮಿತಿಗೆ ತಿಳಿಸಿಲ್ಲ ಎಂದು ವರದಿಯಾಗಿದೆ.

ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಕ್ರಮವಾಗಿ 11 ಮತ್ತು 26 ರನ್ ಗಳಿಸಿದ್ದಾರೆ. ಅವರ ಬ್ಯಾಟಿಂಗ್ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರದ ಹಿನ್ನೆಲೆಯಲ್ಲಿ, ಜುಲೈ 19ರಂದು ಲಾರ್ಡ್ಸ್‌ನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯವೇ ಅವರ ಕೊನೆಯ ಪಂದ್ಯವಾಗಬಹುದು ಎಂಬ ಊಹಾಪೋಹಗಳು ಮತ್ತಷ್ಟು ಜೋರಾಗಿವೆ.

ಆದಾಗ್ಯೂ, ರೋಹಿತ್ ಶರ್ಮಾ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗೆ ಇನ್ನೂ ಅಧಿಕೃತ ಸ್ಪಷ್ಟನೆ ಸಿಕ್ಕಿಲ್ಲ. ಹೀಗಾಗಿ ಲಾರ್ಡ್ಸ್ ಪಂದ್ಯಕ್ಕೂ ಮುನ್ನ ಅಥವಾ ಪಂದ್ಯದ ಬಳಿಕ ರೋಹಿತ್ ತಮ್ಮ ಭವಿಷ್ಯದ ಕುರಿತು ಯಾವುದೇ ನಿರ್ಧಾರ ಪ್ರಕಟಿಸುತ್ತಾರೆಯೇ ಎಂಬುದು ಸದ್ಯ ಕುತೂಹಲ ಮೂಡಿಸಿದೆ.

ಮಳೆಗಾಗಿ ದೇವರ ಮೊರೆ : ಪಾದಯಾತ್ರೆಯಲ್ಲೇ ಸುರಿದ ಧಾರಾಕಾರ ಮಳೆ, ರೈತರ ಸಂಭ್ರಮ

0

ರಾಯಚೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಮಳೆಯಾಗಲೆಂದು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ನಡೆಸಿದ ಪಾದಯಾತ್ರೆಗೆ ವರುಣ ತಕ್ಷಣವೇ ಸ್ಪಂದಿಸಿದಂತೆ ಮಾನ್ವಿಯಲ್ಲಿ ಅಪರೂಪದ ದೃಶ್ಯ ಕಂಡುಬಂದಿದೆ. ಪಾದಯಾತ್ರೆ ಸಾಗುತ್ತಿದ್ದ ಸಂದರ್ಭವೇ ಧಾರಾಕಾರ ಮಳೆ ಸುರಿದ ಪರಿಣಾಮ ರೈತರು ಹಾಗೂ ಕಾರ್ಯಕರ್ತರು ಮಳೆಯಲ್ಲೇ ಸಂಭ್ರಮಾಚರಣೆ ನಡೆಸಿದರು.

ಮಾನ್ವಿ ಪಟ್ಟಣದ ಮಾರಿಕಾಂಬಾ ದೇವಿ ದೇವಸ್ಥಾನದಿಂದ ನೀರಮಾನ್ವಿಯ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನವರೆಗೆ ನಡೆದ ಪಾದಯಾತ್ರೆಗೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮತ್ತು ಮಾಜಿ ಶಾಸಕ ವೆಂಕಟಪ್ಪ ನಾಯಕ್ ನೇತೃತ್ವ ವಹಿಸಿದ್ದರು. ಜೆಡಿಎಸ್ ಕಾರ್ಯಕರ್ತರು, ಮುಖಂಡರು, ರೈತರು ಹಾಗೂ ಕಲಾತಂಡದ ಸದಸ್ಯರು ಈ ಧಾರ್ಮಿಕ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಪಾದಯಾತ್ರೆ ನಡೆಯುತ್ತಿದ್ದ ವೇಳೆ ಸುರಿದ ಭಾರೀ ಮಳೆ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿತು. ಮಳೆಯಲ್ಲೇ ಕುಣಿದು ಕುಪ್ಪಳಿಸಿದ ರೈತರು ಮತ್ತು ಕಾರ್ಯಕರ್ತರು ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ರೈತ ಸಮುದಾಯದ ಕಲ್ಯಾಣಕ್ಕಾಗಿ ಬೇಡಿಕೊಂಡರು.

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.

ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ವಿವಿಧ ಆಯಾಮಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆದ ಸಭೆಯಲ್ಲೂ ಸಂಪುಟ ವಿಸ್ತರಣೆ ಪ್ರಮುಖ ವಿಚಾರವಾಗಿದ್ದು, ಆ ಬಳಿಕ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದರು.

ಮೂಲಗಳ ಪ್ರಕಾರ, ಸಚಿವ ಸ್ಥಾನಕ್ಕೆ ಪರಿಗಣಿಸಲಾದ ಹಿರಿಯ ಮಾಜಿ ಸಚಿವರ ಪಟ್ಟಿಗೆ ಹೈಕಮಾಂಡ್ ಕೆಲವು ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಆ ಪಟ್ಟಿಯಲ್ಲಿ ಬದಲಾವಣೆ ಮಾಡುವ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆದಿದೆ. ಹಿರಿಯ ನಾಯಕರ ಪಟ್ಟಿಯಲ್ಲಿ ಯಾರಿಗೆ ಅವಕಾಶ ನೀಡಬೇಕು ಮತ್ತು ಯಾರ ಹೆಸರನ್ನು ಕೈಬಿಡಬೇಕು ಎಂಬ ವಿಚಾರದ ಕುರಿತು ಚರ್ಚೆ ನಡೆದಿರುವ ಸಾಧ್ಯತೆ ಇದೆ.

ಸಿಎಂ ಹಾಗೂ ಪಕ್ಷದ ಹಿರಿಯ ನಾಯಕರು ಸಿದ್ಧಪಡಿಸಿದ್ದ ಪಟ್ಟಿಯಲ್ಲಿ 11 ಮಂದಿ ಹಿರಿಯ ಮಾಜಿ ಸಚಿವರ ಹೆಸರುಗಳಿದ್ದು, ಅದರಲ್ಲಿ ಶೇಕಡಾ 50ರಷ್ಟು ಹೆಸರುಗಳನ್ನು ಕೈಬಿಡುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಂತಿಮ ಪಟ್ಟಿಯ ರೂಪುರೇಷೆಗಳನ್ನು ನಿರ್ಧರಿಸುವ ಜವಾಬ್ದಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೇಲಿದೆ ಎನ್ನಲಾಗುತ್ತಿದೆ.

ರಾಹುಲ್ ಗಾಂಧಿ ಅವರೊಂದಿಗೆ ಮತ್ತೊಂದು ಸುತ್ತಿನ ಚರ್ಚೆಯ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಇದರ ನಡುವೆ, ಸಚಿವ ಸ್ಥಾನಕ್ಕಾಗಿ ಲಾಬಿ ಕೂಡ ಜೋರಾಗಿದ್ದು, ಶಾಸಕ ಅಜಯ್ ಸಿಂಗ್ ಅವರು ಖರ್ಗೆ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕೆ ತಮ್ಮ ಹೆಸರನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಶಾಸಕ ಎಂ. ಕೃಷ್ಣಪ್ಪ ಕೂಡ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ ಸಚಿವ ಸಂಪುಟದಲ್ಲಿ ಅವಕಾಶ ನೀಡುವಂತೆ ಕೋರಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಅಂತಿಮ ತೀರ್ಮಾನ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲೇ ಕೈಗೊಳ್ಳಲಾಗುವ ಸಾಧ್ಯತೆ ಇದ್ದು, ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

ಸುಫಾರಿ ಹೆಸರಿನಲ್ಲಿ ₹40 ಲಕ್ಷ ಬೇಡಿಕೆ: ಗುತ್ತಿಗೆದಾರನ ಕಿಡ್ನ್ಯಾಪ್ ಮಾಡಿ ₹16 ಲಕ್ಷ ವಸೂಲಿ

0

ಮೈಸೂರು: ನಗರದಲ್ಲಿ ಗುತ್ತಿಗೆದಾರನನ್ನು ಗುರಿಯಾಗಿಸಿಕೊಂಡು ನಡೆದ ಸಂಘಟಿತ ಅಪಹರಣ ಪ್ರಕರಣ ಭಾರೀ ಆತಂಕ ಮೂಡಿಸಿದೆ. ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿ ರಾತ್ರಿಯಿಡೀ ಕಾರಿನಲ್ಲಿ ಬಂಧಿಯಾಗಿರಿಸಿ, “ಕೊಲೆ ಸುಫಾರಿ” ಹೆಸರಿನಲ್ಲಿ ₹40 ಲಕ್ಷಕ್ಕೆ ಬೇಡಿಕೆ ಇಟ್ಟ ದುಷ್ಕರ್ಮಿಗಳು, ಕೊನೆಗೆ ₹16 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪ್ರಕರಣದ ಬೆನ್ನತ್ತಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಜುಲೈ 15ರಂದು ಮೈಸೂರು ತಾಲೂಕಿನ ಮುದೇಗೌಡನ ದೊಡ್ಡಿ ಗ್ರಾಮದ ಗುತ್ತಿಗೆದಾರ ರಾಮು ತಮ್ಮ ತೋಟದಿಂದ ಮನೆಗೆ ಮರಳುತ್ತಿದ್ದ ವೇಳೆ ನಾಲ್ವರು ಆರೋಪಿಗಳು ಅವರನ್ನು ಅಪಹರಿಸಿದ್ದಾರೆ. ಕಾರಿನೊಳಗೆ ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿ ವಿವಿಧ ಪ್ರದೇಶಗಳಲ್ಲಿ ಸುತ್ತಾಡಿಸಿದ್ದು, ಅವರ ಮೊಬೈಲ್‌ನಿಂದಲೇ ಕುಟುಂಬದವರಿಗೆ ಕರೆ ಮಾಡಿಸಿ ಅನುಮಾನ ಬಾರದಂತೆ ನೋಡಿಕೊಂಡಿದ್ದಾರೆ.

ಅಪಹರಣದ ವೇಳೆ ರಾಮು ಅವರ ಬಳಿಯಿದ್ದ 30 ಗ್ರಾಂ ಚಿನ್ನದ ಸರ, 20 ಗ್ರಾಂ ತೂಕದ ಎರಡು ಉಂಗುರಗಳು ಹಾಗೂ ₹50 ಸಾವಿರ ನಗದನ್ನು ಕಸಿದುಕೊಂಡಿದ್ದಾರೆ. ಬಳಿಕ “ನಿನ್ನ ಹತ್ಯೆಗೆ ₹9 ಲಕ್ಷ ಸುಫಾರಿ ನೀಡಲಾಗಿದೆ. ಬದುಕಬೇಕಾದರೆ ₹40 ಲಕ್ಷ ಕೊಡಬೇಕು” ಎಂದು ಬೆದರಿಸಿ ಹಲ್ಲೆ ನಡೆಸಿದ್ದಾರೆ.

ಹಣ ಇಲ್ಲ ಎಂದು ರಾಮು ಹೇಳಿದ ಬಳಿಕ, ₹16 ಲಕ್ಷ ಇರುವುದಾಗಿ ತಿಳಿಸಿದ್ದು, ಆ ಹಣವನ್ನು ಪತ್ನಿಯಿಂದ ತರಿಸುವಂತೆ ಒತ್ತಾಯಿಸಲಾಗಿದೆ. ರಾಮು ಅವರ ಬಾಮೈದ ಸುರೇಶ್, ನಂದಗುಂದ ಸೇತುವೆ ಬಳಿ ಕಪ್ಪು ಶರ್ಟ್ ಧರಿಸಿದ್ದ ವ್ಯಕ್ತಿಗೆ ₹16 ಲಕ್ಷ ಹಸ್ತಾಂತರಿಸಿದ್ದಾರೆ.

ಹಣ ಪಡೆದ ಬಳಿಕ ಆರೋಪಿಗಳು ರಾಮುವನ್ನು ಇನ್ನೂ ಕೆಲಕಾಲ ಕಾರಿನಲ್ಲಿ ಸುತ್ತಾಡಿಸಿ, ಅಜ್ಞಾತ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ವರುಣಾ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಸುಳಿವು ಪತ್ತೆ ಹಚ್ಚಲು ಮೂರು ವಿಶೇಷ ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

ಮತದಾರರ ಪಟ್ಟಿಯಿಂದ ಹೆಸರು ಅಳಿಸಿದರೆ ಪೌರತ್ವ ರದ್ದಾಗುವುದಿಲ್ಲ; ಸುಪ್ರೀಂ ಕೋರ್ಟ್ ಸ್ಪಷ್ಟನೆ

0

ನವದೆಹಲಿ: ಮತದಾರರ ಪಟ್ಟಿಯಿಂದ (ವೋಟರ್ ಲಿಸ್ಟ್) ವ್ಯಕ್ತಿಯ ಹೆಸರನ್ನು ಅಳಿಸುವುದರಿಂದ ಆತನ ಅಥವಾ ಆಕೆಯ ಪೌರತ್ವ ರದ್ದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಸ್ಪಷ್ಟನೆ ನೀಡಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ನಿರ್ವಹಿಸುವ ಸಾಂವಿಧಾನಿಕ ಸಂಸ್ಥೆಯಾಗಿದ್ದರೂ, ಯಾವುದೇ ವ್ಯಕ್ತಿಯ ಪೌರತ್ವವನ್ನು ನಿರ್ಧರಿಸುವ ಅಧಿಕಾರ ಅದಕ್ಕಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಪಶ್ಚಿಮ ಬಂಗಾಳದಲ್ಲಿ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಮಾಹಿತಿ ಬಹಿರಂಗಪಡಿಸುವಂತೆ ಕೋರಿ ಪಶ್ಚಿಮ ಬಂಗಾಳ ಕಾಂಗ್ರೆಸ್‌ನ ಎಸ್‌ಐಆರ್ ಸಮಿತಿ ಅಧ್ಯಕ್ಷ ಪ್ರಸೇನ್‌ಜಿತ್ ಬೋಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

ಈ ಸಂಬಂಧ ಚುನಾವಣಾ ಆಯೋಗ, ಪಶ್ಚಿಮ ಬಂಗಾಳ ಸರ್ಕಾರ ಹಾಗೂ ರಾಜ್ಯ ಚುನಾವಣಾ ಸಮಿತಿಗೆ ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಅರ್ಜಿದಾರರು, ಎಸ್‌ಐಆರ್ ಪ್ರಕ್ರಿಯೆ ಬಳಿಕ ಸ್ವೀಕರಿಸಲಾದ ಮತ್ತು ತಿರಸ್ಕರಿಸಲಾದ ಫಾರ್ಮ್-6 ಹಾಗೂ ಫಾರ್ಮ್-7 ಅರ್ಜಿಗಳ ಸಂಖ್ಯೆ, ಮೇಲ್ಮನವಿ ನ್ಯಾಯಮಂಡಳಿಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿವರ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವಂತೆ ಕೋರಿದ್ದಾರೆ.

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಬಿಹಾರ ಎಸ್‌ಐಆರ್ ಪ್ರಕರಣದಲ್ಲಿ ನೀಡಿದ್ದ ಹಿಂದಿನ ತೀರ್ಪನ್ನು ಉಲ್ಲೇಖಿಸಿ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವುದರಿಂದ ವ್ಯಕ್ತಿಯ ಪೌರತ್ವ ಕಳೆದುಹೋಗುವುದಿಲ್ಲ ಎಂದು ಪುನರುಚ್ಚರಿಸಿತು. ಪೌರತ್ವ ನಿರ್ಧಾರ ಮಾಡುವ ಅಧಿಕಾರ ಪೌರತ್ವ ಕಾಯ್ದೆಯಡಿ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ಚುನಾವಣಾ ಆಯೋಗಕ್ಕೆ ಅಂತಹ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟವರಿಗೆ ಮೇಲ್ಮನವಿ ಸಲ್ಲಿಸಲು ರಚಿಸಲಾಗಿರುವ 18 ನ್ಯಾಯಮಂಡಳಿಗಳ ಕಾರ್ಯವೈಖರಿಯಲ್ಲಿ ವಿಳಂಬ ಮತ್ತು ಅಸಮರ್ಪಕತೆ ಇದೆ ಎಂದು ಆರೋಪಿಸಿದರು. ಸಲ್ಲಿಸಲಾದ ಮೇಲ್ಮನವಿಗಳಲ್ಲಿ ಸುಮಾರು 70 ಶೇಕಡಾ ಪ್ರಕರಣಗಳಲ್ಲಿ ಮತದಾರರ ಹೆಸರನ್ನು ಮರು ಸೇರ್ಪಡೆಗೊಳಿಸಲಾಗಿದ್ದು, ಉಳಿದ 30 ಶೇಕಡಾ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಲ್ಲದೆ, ಮತದಾರರ ಪಟ್ಟಿಯಿಂದ ಹೆಸರು ಅಳಿಸಲ್ಪಟ್ಟ ಬಳಿಕ ಕೆಲವರಿಗೆ ಮಹಿಳಾ ಕಲ್ಯಾಣ ಯೋಜನೆಗಳು, ನಗದು ವರ್ಗಾವಣೆ ಯೋಜನೆಗಳು ಹಾಗೂ ಜಾತಿ ಪ್ರಮಾಣಪತ್ರ ಪರಿಶೀಲನೆ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ನಿರಾಕರಿಸಲಾಗುತ್ತಿದೆ ಎಂದು ವಕೀಲರು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ವಿಷಯದ ಬಗ್ಗೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಲಾಗಿದ್ದು, ನ್ಯಾಯಾಲಯಕ್ಕೆ ಇದರ ಅರಿವಿದೆ ಎಂದು ತಿಳಿಸಿತು.

ನ್ಯಾಯಾಲಯವು ತನ್ನ ಹಿಂದಿನ ಆದೇಶವನ್ನು ಉಲ್ಲೇಖಿಸಿ, ಯಾವುದೇ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ನಿರ್ಧಾರ ಕೈಗೊಂಡ ಬಳಿಕ, ಪೌರತ್ವ ಕಾಯ್ದೆಯಡಿ ಅಗತ್ಯ ಪರಿಶೀಲನೆಗಾಗಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನಿಸುವುದು ಚುನಾವಣಾ ಆಯೋಗದ ಕರ್ತವ್ಯ. ಆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಂಬಂಧಿತ ವ್ಯಕ್ತಿಯ ಪೌರತ್ವದ ಸ್ಥಾನಮಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿತು.

ವಿಚಾರಣೆ ವೇಳೆ ಬಾಕಿ ಇರುವ ಮೇಲ್ಮನವಿಗಳ ಸಂಖ್ಯೆಯ ಬಗ್ಗೆಯೂ ಗಮನ ಸೆಳೆದ ವಕೀಲರು, 34 ಲಕ್ಷ ಮೇಲ್ಮನವಿಗಳ ಪೈಕಿ ಕೇವಲ 38 ಸಾವಿರ ಪ್ರಕರಣಗಳಷ್ಟೇ ಇತ್ಯರ್ಥಗೊಂಡಿದ್ದು, ಸುಮಾರು 33.5 ಲಕ್ಷ ಅರ್ಜಿಗಳು ಇನ್ನೂ ಬಾಕಿ ಉಳಿದಿವೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ, ಮೇಲ್ಮನವಿಗಳು ಬಾಕಿ ಇರುವ ಕಾರಣದಿಂದ ಜನರ ನಾಗರಿಕ ಹಕ್ಕುಗಳು ಮತ್ತು ಸರ್ಕಾರಿ ಸೌಲಭ್ಯಗಳಿಗೆ ಧಕ್ಕೆಯಾಗಬಾರದು ಎಂದು ಮನವಿ ಮಾಡಿದರು.

ಈ ನಡುವೆ, ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಸಲ್ಲಿಕೆಯಾಗಿರುವ ಇತರೆ ಅರ್ಜಿಗಳೊಂದಿಗೆ ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 25ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಈಗಾಗಲೇ ತಿಳಿಸಿದೆ.

ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದ ಸೋನಂ ವಾಂಗ್ಚುಕ್ ಆರೋಗ್ಯ ಗಂಭೀರ: ಆಸ್ಪತ್ರೆಗೆ ಶಿಫ್ಟ್

0

ನವದೆಹಲಿ: ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈಕೋರ್ಟ್ ಆದೇಶ ಹಾಗೂ ವೈದ್ಯರ ಸಲಹೆಯಂತೆ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷದ ಕಾರ್ಯಕರ್ತರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಅದರ ಭಾಗವಾಗಿ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.

ಈ ಕುರಿತು ಮಾಹಿತಿ ನೀಡಿರುವ ದೆಹಲಿ ಪೊಲೀಸರು, ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಹೈಕೋರ್ಟ್ ನಿರ್ದೇಶನಗಳು ಮತ್ತು ತಜ್ಞ ವೈದ್ಯರ ಸಲಹೆಯನ್ನು ಅನುಸರಿಸಿ ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಜಂತರ್ ಮಂತರ್ ಪ್ರದೇಶವನ್ನು ಶಾಂತಿಯುತವಾಗಿ ತೆರವುಗೊಳಿಸುವಂತೆ ಮನವಿ ಮಾಡಲಾಗಿತ್ತು. ಆದರೆ, ಹೈಕೋರ್ಟ್ ಆದೇಶ ಜಾರಿಗೆ ತರಲು ಪೊಲೀಸರು ಮುಂದಾದ ವೇಳೆ ಕೆಲ ಪ್ರತಿಭಟನಾಕಾರರು ಅಡ್ಡಿಪಡಿಸಲು ಯತ್ನಿಸಿದ್ದರಿಂದ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ಆದರೂ ಪೊಲೀಸರು ಸಂಯಮದಿಂದ ಪರಿಸ್ಥಿತಿಯನ್ನು ನಿಭಾಯಿಸಿ, ವಾಂಗ್ಚುಕ್ ಅವರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ದಾಖಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ಪ್ರತಿದಿನ ವೈದ್ಯಕೀಯ ತಪಾಸಣೆ ನಡೆಸುವಂತೆ ಹೈಕೋರ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಶುಕ್ರವಾರ ಆರೋಗ್ಯ ಪರೀಕ್ಷೆ ನಡೆಸಿದ ವೈದ್ಯರು, ಅವರ ಆರೋಗ್ಯದಲ್ಲಿ ತೀವ್ರ ಹಿನ್ನಡೆ ಕಂಡುಬಂದಿದ್ದು, ಪ್ರಮುಖ ಅಂಗಾಂಗಗಳ ಕಾರ್ಯಕ್ಷಮತೆ ಕುಸಿಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ, ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು,

ಭಾರತೀಯ ಹವಾಮಾನ ಇಲಾಖೆ (IMD) ಜುಲೈ 18 ಮತ್ತು 19ರಂದು ಕರಾವಳಿ ಭಾಗದ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಳೆಯ ಜೊತೆಗೆ ಗಂಟೆಗೆ 30ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಈ ಹಿಂದೆ ರಾಜ್ಯದಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದ್ದರೂ, ಇದೀಗ ಕರಾವಳಿ ಭಾಗದಲ್ಲಿ ಮಳೆಯ ಚಟುವಟಿಕೆ ಮತ್ತೆ ವೇಗ ಪಡೆದುಕೊಂಡಿದೆ.

ಜುಲೈ 18 ಮತ್ತು 19ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದಲ್ಲದೆ ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಭಾಗಗಳಲ್ಲಿಯೂ ಕೆಲವೆಡೆ ಬಿರುಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ನದಿ-ಹಳ್ಳಗಳ ತೀರ ಪ್ರದೇಶದ ನಿವಾಸಿಗಳು, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸಂಚರಿಸುವವರು ಹಾಗೂ ಮೀನುಗಾರರು ಸ್ಥಳೀಯ ಆಡಳಿತ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಮಾವು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಈ ಆರೋಗ್ಯ ಸಮಸ್ಯೆ ಇರುವವರು ದಿನಕ್ಕೆ ಎಷ್ಟು ತಿನ್ನಬೇಕು? ತಜ್ಞರ ಸಲಹೆ ಇಲ್ಲಿದೆ

0

ಮಳೆಗಾಲ ಆರಂಭವಾಗಿದ್ದರೂ ಮಾರುಕಟ್ಟೆಯಲ್ಲಿ ಇನ್ನೂ ಮಾವಿನ ಹಣ್ಣಿನ ಸೀಸನ್ ಮುಂದುವರಿದಿದೆ. ರುಚಿ, ಸುವಾಸನೆ ಹಾಗೂ ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿರುವ ಮಾವು ಬಹುತೇಕರ ನೆಚ್ಚಿನ ಹಣ್ಣು. ವಿಟಮಿನ್ ಎ, ವಿಟಮಿನ್ ಸಿ, ಫೈಬರ್,

ಪೊಟ್ಯಾಸಿಯಂ, ಫೋಲೇಟ್ ಮತ್ತು ಹಲವು ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿರುವ ಮಾವು ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಕೆಲವು ಆರೋಗ್ಯ ಸಮಸ್ಯೆ ಇರುವವರು ಇದನ್ನು ಮಿತ ಪ್ರಮಾಣದಲ್ಲಿ ಸೇವಿಸುವುದು ಅಗತ್ಯ ಎಂದು ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

ಯಾರು ಮಾವು ತಿನ್ನುವಾಗ ಎಚ್ಚರಿಕೆ ವಹಿಸಬೇಕು?

ಮಧುಮೇಹ ಇರುವವರು:
ಮಧುಮೇಹ ಇರುವವರು ಮಾವನ್ನು ಸಂಪೂರ್ಣವಾಗಿ ಬಿಡುವ ಅಗತ್ಯವಿಲ್ಲ. ಆದರೆ ಒಂದೇ ಬಾರಿಗೆ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ವೇಗವಾಗಿ ಏರಬಹುದು. ಆದ್ದರಿಂದ ವೈದ್ಯರು ಅಥವಾ ಪೌಷ್ಟಿಕ ತಜ್ಞರು ಸೂಚಿಸಿದ ಪ್ರಮಾಣದಲ್ಲಿ ಮಾತ್ರ ಸೇವಿಸುವುದು ಸೂಕ್ತ.

ಪ್ರೀ-ಡಯಾಬಿಟಿಸ್ ಮತ್ತು ಇನ್ಸುಲಿನ್ ರೆಸಿಸ್ಟೆನ್ಸ್ ಇರುವವರು:
ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿ ಸಮಸ್ಯೆ ಇರುವವರು ಅಥವಾ ಮೆಟಾಬಾಲಿಕ್ ಸಿಂಡ್ರೋಮ್‌ನಿಂದ ಬಳಲುತ್ತಿರುವವರು ಮಾವಿನ ಸೇವನೆಯನ್ನು ಮಿತಿಗೊಳಿಸುವುದು ಉತ್ತಮ.

ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು:
ಮಾವಿನಲ್ಲಿ ನೈಸರ್ಗಿಕ ಸಕ್ಕರೆ ಮತ್ತು ಕ್ಯಾಲೊರಿ ಪ್ರಮಾಣ ಇರುವುದರಿಂದ ಅತಿಯಾಗಿ ಸೇವಿಸಿದರೆ ತೂಕ ಇಳಿಸುವ ಪ್ರಯತ್ನಕ್ಕೆ ಅಡ್ಡಿಯಾಗಬಹುದು. ಆದ್ದರಿಂದ ಸಮತೋಲಿತ ಆಹಾರದ ಭಾಗವಾಗಿ ಮಾತ್ರ ಸೇವಿಸಬೇಕು.

ಫ್ಯಾಟಿ ಲಿವರ್ ಇರುವವರು:
ಫ್ಯಾಟಿ ಲಿವರ್ ಸಮಸ್ಯೆ ಇರುವವರು ಮಾವನ್ನು ಮಿತ ಪ್ರಮಾಣದಲ್ಲಿ ಸೇವಿಸಬಹುದು. ಆದರೆ ಆಹಾರದ ಒಟ್ಟು ಕ್ಯಾಲೊರಿ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಸೇವಿಸುವುದು ಅಗತ್ಯ.

ಮಾವು ತಿನ್ನುವ ಸರಿಯಾದ ವಿಧಾನ ಯಾವುದು?

ಆರೋಗ್ಯ ತಜ್ಞರ ಪ್ರಕಾರ, ಮಾವಿನ ಜ್ಯೂಸ್, ಮಿಲ್ಕ್‌ಶೇಕ್ ಅಥವಾ ಹೆಚ್ಚು ಸಕ್ಕರೆ ಸೇರಿಸಿದ ಸಿಹಿ ಪದಾರ್ಥಗಳಿಗಿಂತ ಹಣ್ಣನ್ನೇ ನೇರವಾಗಿ ತಿನ್ನುವುದು ಆರೋಗ್ಯಕರ. ಮೊಸರು ಅಥವಾ ಒಂದು ಮುಷ್ಟಿ ಬಾದಾಮಿ, ಗೋಡಂಬಿ ಅಥವಾ ಇತರ ನಟ್ಸ್ ಜೊತೆಗೆ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ತ್ವರಿತವಾಗಿ ಏರುವ ಸಾಧ್ಯತೆ ಕಡಿಮೆಯಾಗಬಹುದು.

ಮಾವು ತಿನ್ನುವ ಮೊದಲು ಹೀಗೆ ಮಾಡಿ

ಮಾವು ತಿನ್ನುವ ಮೊದಲು ಅದನ್ನು ಚೆನ್ನಾಗಿ ತೊಳೆದು ಸುಮಾರು 20 ರಿಂದ 30 ನಿಮಿಷಗಳ ಕಾಲ ನೀರಿನಲ್ಲಿ ನೆನೆಸಿಡುವುದು ಉತ್ತಮ ಎಂದು ಕೆಲವು ತಜ್ಞರು ಸಲಹೆ ನೀಡುತ್ತಾರೆ. ಇದರಿಂದ ಹಣ್ಣಿನ ಮೇಲ್ಮೈಯಲ್ಲಿರುವ ಧೂಳು, ಕಲ್ಮಶಗಳು ಹಾಗೂ ಕೆಲವು ಲ್ಯಾಟೆಕ್ಸ್ ಅಂಶಗಳು ಕಡಿಮೆಯಾಗಬಹುದು. ಆದರೆ ಇದರಿಂದ ಮಾವಿನಲ್ಲಿರುವ ಸಕ್ಕರೆ ಪ್ರಮಾಣ ಕಡಿಮೆಯಾಗುತ್ತದೆ ಎಂಬುದಕ್ಕೆ ವೈಜ್ಞಾನಿಕ ಸಾಕ್ಷ್ಯ ಇಲ್ಲ.

ದಿನಕ್ಕೆ ಎಷ್ಟು ಮಾವು ತಿನ್ನಬಹುದು?

ಸಹಜವಾಗಿ ಹಣ್ಣಾದ ಮಾವನ್ನು ಆಯ್ಕೆ ಮಾಡುವುದು ಉತ್ತಮ. ಸಾಮಾನ್ಯವಾಗಿ ದಿನಕ್ಕೆ ಒಂದು ಮಧ್ಯಮ ಗಾತ್ರದ ಮಾವು ಸೇವಿಸುವುದು ಸಾಕಷ್ಟು ಎಂದು ಪರಿಗಣಿಸಲಾಗುತ್ತದೆ. ಯಾವುದೇ ಆಹಾರವನ್ನು ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.

ಮದ್ದೂರು ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಎಸಿ ಸ್ಫೋಟ: ಓರ್ವ ಸಾವು, ಮತ್ತೋರ್ವ ಗಂಭೀರ

ಮಂಡ್ಯ: ಮದ್ದೂರು ತಾಲೂಕಿನ ಕೊಪ್ಪದಲ್ಲಿರುವ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಯಲ್ಲಿ ಏರ್ ಕಂಡೀಷನರ್‌ಗೆ ಗ್ಯಾಸ್ ತುಂಬಿಸುವ ವೇಳೆ ಸಿಲಿಂಡರ್ ಸ್ಫೋಟಗೊಂಡು ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ.

ಮೃತರನ್ನು ಮೈಸೂರಿನ ಖಾಸಗಿ ಸಂಸ್ಥೆಯ ನೌಕರ ಮಹಮದ್ ಸಾದಿಕ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಮಹಮದ್ ಸಲ್ಮಾನ್ ಎಂದು ತಿಳಿದುಬಂದಿದೆ.

ಕಾರ್ಖಾನೆಯ ಸಕ್ಕರೆ ಉತ್ಪಾದನಾ ವಿಭಾಗದ ಕಂಟ್ರೋಲ್ ರೂಂ ಬಳಿ ಎಸಿಗೆ ಗ್ಯಾಸ್ ತುಂಬಿಸುವ ಕೆಲಸದಲ್ಲಿ ಇಬ್ಬರು ನೌಕರರು ತೊಡಗಿದ್ದರು. ಈ ವೇಳೆ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.

ಸ್ಫೋಟದ ತೀವ್ರತೆಗೆ ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಕಾರ್ಖಾನೆ ಸಿಬ್ಬಂದಿ ಇಬ್ಬರನ್ನೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಆದರೆ ಮಾರ್ಗಮಧ್ಯದಲ್ಲೇ ಮಹಮದ್ ಸಾದಿಕ್ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಮಹಮದ್ ಸಲ್ಮಾನ್ ಅವರಿಗೆ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Eye Health Tips: ಅಗಸೆ ಬೀಜ vs ಕುಂಬಳಕಾಯಿ ಬೀಜ! ಕಣ್ಣಿನ ಆರೋಗ್ಯಕ್ಕೆ ಯಾವುದು ಬೆಸ್ಟ್?

0

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಕಣ್ಣಿನ ದೃಷ್ಟಿ ಮಸುಕಾಗುವುದು, ಕಣ್ಣಿನ ಆಯಾಸ, ಡ್ರೈ ಐ, ಮೊಬೈಲ್ ಹಾಗೂ ಕಂಪ್ಯೂಟರ್ ಬಳಕೆಯಿಂದ ಉಂಟಾಗುವ ಡಿಜಿಟಲ್ ಐ ಸ್ಟ್ರೇನ್ ಸಮಸ್ಯೆಗಳು ಹೆಚ್ಚಾಗುತ್ತಿವೆ.

ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಹಲವರು ನೈಸರ್ಗಿಕ ಆಹಾರಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ ಅಗಸೆ ಬೀಜ (Flax Seeds) ಮತ್ತು ಕುಂಬಳಕಾಯಿ ಬೀಜ ಕಣ್ಣಿನ ದೃಷ್ಟಿಗೆ ಸಹಾಯ ಮಾಡುತ್ತವೆ ಎಂಬ ಮಾತುಗಳು ಕೇಳಿಬರುತ್ತವೆ. ಹಾಗಾದರೆ ಇವೆರಡರಲ್ಲಿ ಯಾವುದು ಹೆಚ್ಚು ಉಪಯುಕ್ತ? ಇಲ್ಲಿದೆ ಮಾಹಿತಿ.

ಕಣ್ಣಿನ ಆರೋಗ್ಯಕ್ಕೆ ಅಗಸೆ ಬೀಜದ ಪ್ರಯೋಜನಗಳು:

ಅಗಸೆ ಬೀಜಗಳಲ್ಲಿ ಒಮೆಗಾ-3 ಫ್ಯಾಟಿ ಆಸಿಡ್, ಫೈಬರ್, ವಿಟಮಿನ್ ಇ ಹಾಗೂ ಲಿಗ್ನಾನ್ಸ್ ಸಮೃದ್ಧವಾಗಿವೆ.

ಇವು ಕಣ್ಣಿನ ರೆಟಿನಾದ ಆರೋಗ್ಯ ಕಾಪಾಡಲು ಸಹಾಯ ಮಾಡಬಹುದು. ಅಲ್ಲದೆ, ಒಮೆಗಾ-3 ಕೊಬ್ಬಿನಾಮ್ಲಗಳು ಕಣ್ಣಿನ ಉರಿಯೂತ ಕಡಿಮೆ ಮಾಡಿ, ಕಣ್ಣೀರಿನ ಗುಣಮಟ್ಟ ಸುಧಾರಿಸಲು ನೆರವಾಗಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸುತ್ತವೆ.

ಆದರೆ ಅಗಸೆ ಬೀಜ ಸೇವನೆಯಿಂದ ಕನ್ನಡಕದ ಸಂಖ್ಯೆ ಕಡಿಮೆಯಾಗುತ್ತದೆ ಅಥವಾ ಕನ್ನಡಕದ ಅಗತ್ಯವೇ ಇರುವುದಿಲ್ಲ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ.

ಕುಂಬಳಕಾಯಿ ಬೀಜಗಳ ಪ್ರಯೋಜನಗಳು:

ಕುಂಬಳಕಾಯಿ ಬೀಜಗಳಲ್ಲಿ ಜಿಂಕ್, ಮೆಗ್ನೀಷಿಯಂ, ವಿಟಮಿನ್ ಇ ಹಾಗೂ ಆಂಟಿಆಕ್ಸಿಡೆಂಟ್‌ಗಳು ಹೆಚ್ಚಿನ ಪ್ರಮಾಣದಲ್ಲಿವೆ.

ಕಣ್ಣಿನ ರೆಟಿನಾ ಸರಿಯಾಗಿ ಕಾರ್ಯನಿರ್ವಹಿಸಲು ಜಿಂಕ್ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ವಯಸ್ಸಾದಂತೆ ಉಂಟಾಗುವ ಕೆಲವು ದೃಷ್ಟಿ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಲು ಸಹ ಸಹಕಾರಿಯಾಗಬಹುದು.

ಕುಂಬಳಕಾಯಿ ಬೀಜಗಳನ್ನು ಹುರಿದು ಅಥವಾ ಸಲಾಡ್, ಮೊಸರು, ಸ್ಮೂಥಿ ಹಾಗೂ ಓಟ್ಸ್ ಜೊತೆ ಸೇರಿಸಿ ಸೇವಿಸಬಹುದು.

ಕಣ್ಣಿನ ದೃಷ್ಟಿಗೆ ಸಹಾಯ ಮಾಡುವ ಇತರ ಆಹಾರಗಳು:

ಕೇವಲ ಬೀಜಗಳಷ್ಟೇ ಅಲ್ಲ, ಈ ಆಹಾರಗಳು ಕೂಡ ಕಣ್ಣಿನ ಆರೋಗ್ಯಕ್ಕೆ ಉತ್ತಮ:

  • ಕ್ಯಾರೆಟ್: ಬೀಟಾ ಕ್ಯಾರೋಟಿನ್ ಸಮೃದ್ಧ
  • ಪಾಲಕ್, ಮೆಂತೆ ಹಾಗೂ ಹಸಿರು ಸೊಪ್ಪುಗಳು: ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್ ಹೊಂದಿವೆ
  • ಮೊಟ್ಟೆ: ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ
  • ಮೀನು (ಸ್ಯಾಲ್ಮನ್, ಸಾರ್ಡಿನ್): ಒಮೆಗಾ-3 ಮೂಲ
  • ಕಿತ್ತಳೆ, ನಿಂಬೆ: ವಿಟಮಿನ್ ಸಿ
  • ಬಾದಾಮಿ, ವಾಲ್ನಟ್
  • ಸಿಹಿ ಗೆಣಸು
  • ದೃಷ್ಟಿ ಮಸುಕಾಗಲು ಪ್ರಮುಖ ಕಾರಣಗಳು

ಕಣ್ಣಿನ ದೃಷ್ಟಿ ಕಡಿಮೆಯಾಗಲು ಹಲವು ಕಾರಣಗಳಿರಬಹುದು.

  • ಸಮೀಪದೃಷ್ಟಿ ಅಥವಾ ದೂರದೃಷ್ಟಿ
  • ಡ್ರೈ ಐ ಸಿಂಡ್ರೋಮ್
  • ಮಧುಮೇಹದಿಂದ ಉಂಟಾಗುವ ಕಣ್ಣಿನ ಸಮಸ್ಯೆಗಳು
  • ಕ್ಯಾಟರಾಕ್ಟ್ (ಕಣ್ಣಿನ ಪೊರೆ)
  • ಗ್ಲೂಕೋಮಾ
  • ಹೆಚ್ಚು ಸಮಯ ಮೊಬೈಲ್ ಅಥವಾ ಕಂಪ್ಯೂಟರ್ ಬಳಕೆ

ದೃಷ್ಟಿ ಹಠಾತ್ ಮಸುಕಾಗುವುದು, ಕಣ್ಣಿನಲ್ಲಿ ನೋವು, ಕೆಂಪಾಗುವಿಕೆ ಅಥವಾ ಬೆಳಕನ್ನು ಸಹಿಸಲಾಗದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ನೇತ್ರ ತಜ್ಞರನ್ನು ಸಂಪರ್ಕಿಸಬೇಕು.

ಕಣ್ಣಿನ ಆರೋಗ್ಯ ಕಾಪಾಡಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ:

  • ಪ್ರತಿ 20 ನಿಮಿಷಕ್ಕೊಮ್ಮೆ 20-20-20 ನಿಯಮ ಪಾಲಿಸಿ.
  • ದಿನಕ್ಕೆ ಕನಿಷ್ಠ 7–8 ಗಂಟೆ ನಿದ್ರೆ ಮಾಡಿ.
  • ಸಾಕಷ್ಟು ನೀರು ಕುಡಿಯಿರಿ.
  • ಸೂರ್ಯನ ತೀವ್ರ ಬೆಳಕಿನಲ್ಲಿ UV ರಕ್ಷಣೆ ಇರುವ ಕನ್ನಡಕ ಧರಿಸಿ.
  • ವರ್ಷಕ್ಕೊಮ್ಮೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಿ.

ಆರೋಗ್ಯಕರ ಆಹಾರ ಸೇವನೆ ಕಣ್ಣಿನ ಆರೋಗ್ಯವನ್ನು ಉತ್ತಮಗೊಳಿಸಲು ಸಹಾಯ ಮಾಡುತ್ತದೆ. ಆದರೆ ಅಗಸೆ ಬೀಜ ಅಥವಾ ಕುಂಬಳಕಾಯಿ ಬೀಜ ತಿಂದರೆ ಕನ್ನಡಕದ ಅಗತ್ಯವೇ ಇರುವುದಿಲ್ಲ ಎಂಬುದಕ್ಕೆ ವೈಜ್ಞಾನಿಕ ಆಧಾರವಿಲ್ಲ. ಉತ್ತಮ ದೃಷ್ಟಿಗಾಗಿ ಪೌಷ್ಟಿಕ ಆಹಾರ, ನಿಯಮಿತ ಕಣ್ಣಿನ ಪರೀಕ್ಷೆ ಹಾಗೂ ಆರೋಗ್ಯಕರ ಜೀವನಶೈಲಿ ಮುಖ್ಯವಾಗಿದೆ.