Home Blog

ತಾಯಿ ವಿರುದ್ಧದ ನಿಂದನೆಗೆ ಮೋದಿ ಭಾವುಕ ಪ್ರತಿಕ್ರಿಯೆ; ವಿಡಿಯೋ ಮೂಲಕ ಯುವಕರಿಗೆ ಹೇಳಿದ್ದೇನು?

0

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ.

ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಜಂತರ್ ಮಂತರ್‌ನಲ್ಲಿ ಏನಾಯಿತು ಎಂಬುದನ್ನು ದೇಶ ಮತ್ತು ಜಗತ್ತು ನೋಡಿದೆ. ಕೆಲವು ಕಿಡಿಗೇಡಿ ಮಕ್ಕಳು ನಾಗರಿಕ ಸಮಾಜಕ್ಕೆ ಒಪ್ಪದಂತಹ ಅತ್ಯಂತ ಅಸಭ್ಯ ಮತ್ತು ನಿಂದನಾತ್ಮಕ ಭಾಷೆಯನ್ನು ಬಳಸಿದ್ದಾರೆ. ನನ್ನನ್ನು ವೈಯಕ್ತಿಕವಾಗಿ ನಿಂದಿಸಲಾಯಿತು, ಅಷ್ಟೇ ಅಲ್ಲದೆ ನನ್ನ ದಿವಂಗತ ತಾಯಿಯನ್ನೂ ಬಿಡದೆ ನಿಂದಿಸಲಾಯಿತು. ನಮ್ಮ ಹೆಣ್ಣುಮಕ್ಕಳು ಇಂತಹ ಭಾಷೆ ಬಳಸಿರುವುದು ಇಡೀ ಸಮಾಜಕ್ಕೆ ಸಾಂಸ್ಕೃತಿಕ ಆಘಾತ ತಂದಿದೆ” ಎಂದು ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.

“ಬಾಲ್ಯದಲ್ಲಿ ತಪ್ಪುಗಳು ನಡೆಯುವುದು ಸಹಜ, ಅದೇ ರೀತಿ ಆ ತಪ್ಪುಗಳನ್ನು ತಿದ್ದುಕೊಳ್ಳಲು ಬಾಲ್ಯದಲ್ಲೇ ಅವಕಾಶವೂ ಸಿಗುತ್ತದೆ. ಹೀಗಾಗಿ ಸಮಾಜದಲ್ಲಿ ಉಂಟಾಗಿರುವ ಆಕ್ರೋಶವನ್ನು ನಾನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬಲ್ಲೆ. ಆದರೆ, ಈಗ ನಾವು ಆ ಮಕ್ಕಳನ್ನು ಅಪ್ಪಿಕೊಂಡು ಅವರಿಗೆ ಸರಿಯಾದ ದಾರಿಯನ್ನು ತೋರಿಸಬೇಕಾದ ಸಮಯ ಬಂದಿದೆ. ಅವರು ದಾರಿ ತಪ್ಪಿದ್ದಾರೆ, ಅವರನ್ನು ಸರಿಯಾದ ಹಾದಿಗೆ ತರುವುದು ನಮ್ಮ ಕರ್ತವ್ಯ” ಎಂದಿದ್ದಾರೆ.

ಅವರನ್ನು ಶಿಕ್ಷಿಸುವುದು, ಕೋರ್ಟ್‌ ಮೆಟ್ಟಿಲೇರಿಸುವುದು ಅಥವಾ ಸಮಾಜದಲ್ಲಿ ಕಿರುಕುಳ ನೀಡುವುದರಿಂದ ಪರಿಸ್ಥಿತಿ ಬದಲಾಗುವುದಿಲ್ಲ. ನಾನು ಅವರನ್ನು ಕ್ಷಮಿಸಲು ಬಯಸುತ್ತೇನೆ. ಸಮಾಜವೂ ಇದನ್ನು ಸ್ವೀಕರಿಸಬೇಕು. ಕೆಲವೊಮ್ಮೆ ನಮ್ಮ ನಾಲಿಗೆ ಹಲ್ಲಿನ ನಡುವೆ ಸಿಲುಕಿ ರಕ್ತ ಬರುತ್ತದೆ, ಹಾಗೆಂದು ನಾವು ಹಲ್ಲನ್ನು ಮುರಿದುಕೊಳ್ಳುವುದಿಲ್ಲವಲ್ಲ. ಏಕೆಂದರೆ ಹಲ್ಲು ಮತ್ತು ನಾಲಿಗೆ ಎರಡೂ ನಮ್ಮದೇ. ಅದೇ ರೀತಿ ಈ ಮಕ್ಕಳೂ ಸಹ ನಮ್ಮವರೇ” ಎಂದು ಭಾವುಕ ನಿದರ್ಶನ ನೀಡಿದ್ದಾರೆ.

“ದಾರಿ ತಪ್ಪಿದ ಯುವಜನತೆಗೆ ನೇರ ಕರೆ ನೀಡಿದ ಪ್ರಧಾನಿ, “ದಾರಿ ತಪ್ಪಿದವರನ್ನು ಸರಿ ದಾರಿಗೆ ತರುವುದು ಕಷ್ಟಕರ, ಆದರೆ ನಾವು ಆ ಕೆಲಸವನ್ನು ಮಾಡಲೇಬೇಕು. ಆದ್ದರಿಂದ ನಾನು ಈ ಮಕ್ಕಳಿಗೆ ಕರೆ ನೀಡುತ್ತಿದ್ದೇನೆ. , ದೇಶದ ಹಿತಕ್ಕಾಗಿ ನಾವೆಲ್ಲರೂ ಒಟ್ಟಾಗಿ ಮುನ್ನಡೆಯೋಣ. ಹೊಸದನ್ನು ಕಲಿಯೋಣ, ಮಾಡಿದ ತಪ್ಪುಗಳಿಂದಲೂ ಪಾಠ ಕಲಿಯೋಣ. ದೇಶವು ವೇಗವಾಗಿ ಮುನ್ನಡೆಯುತ್ತಿದ್ದು, ನಿಮ್ಮ ಕನಸುಗಳನ್ನೂ ಈಡೇರಿಸಿಕೊಳ್ಳಿ. ನಾನು ನಿಮಗಾಗಿಯೇ ಜೀವಿಸುತ್ತಿದ್ದೇನೆ, ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ನನ್ನನ್ನು ಮುಡಿಪಾಗಿಟ್ಟಿದ್ದೇನೆ” ಎಂದು ಹೇಳಿ ತಮ್ಮ ಮಾತನ್ನು ಕೊನೆಗೊಳಿಸಿದ್ದಾರೆ.

ನೋಯ್ಡಾ ಯುವತಿಯ ಮೇಲೆ ಎಫ್‌ಐಆರ್:

ನೋಯ್ಡಾ ನಿವಾಸಿ, 25 ವರ್ಷದ ರುಚಿಕಾ ಸಿಂಗ್ ಎಂಬುವವರ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಪ್ರಧಾನಿಯವರ ಈ ಸಂದೇಶ ಹೊರಬಿದ್ದಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಪ್ರಧಾನಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ರುಚಿಕಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಘಾಜಿಯಾಬಾದ್ ಮೂಲದ ವಕೀಲರೊಬ್ಬರು ನೀಡಿದ ದೂರಿನ ಮೇರೆಗೆ, ನೋಯ್ಡಾ ಎಕ್ಸ್‌ಪ್ರೆಸ್‌ವೇ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆಗಾಗಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಮುಳ್ಳಯ್ಯನಗಿರಿಯಲ್ಲಿ ಭಾರಿ ಗುಡ್ಡ ಕುಸಿತ! ದತ್ತಪೀಠ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತ!

ಚಿಕ್ಕಮಗಳೂರು: ಜಿಲ್ಲೆಯ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿದಿದೆ.

ನಿತ್ಯ ನೂರಾರು ಪ್ರವಾಸಿಗರು ಹಾಗೂ ಸ್ಥಳೀಯರು ಸಂಚರಿಸುವ ಕವಿಕಲ್ ಗಂಡಿ ಸಮೀಪ ರಸ್ತೆ ಮೇಲೆ ಭಾರಿ ಪ್ರಮಾಣದ ಮಣ್ಣು ಕುಸಿದಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ದುರದೃಷ್ಟವಶಾತ್, ಗುಡ್ಡ ಕುಸಿತ ತಡೆಯಲು ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲೇ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಈ ರಸ್ತೆ ಅತ್ತಿಗುಂಡಿ, ಮಹಲ್ ಸೇರಿದಂತೆ ಹಲವು ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ. ಅಲ್ಲದೆ, ಮುಳ್ಳಯ್ಯನಗಿರಿ ತಪ್ಪಲಿನ ಕಾಫಿ ತೋಟಗಳಿಗೆ ತೆರಳುವ ಸಾವಿರಾರು ಕಾರ್ಮಿಕರು ಇದೇ ರಸ್ತೆಯನ್ನು ಬಳಸುತ್ತಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಜೆಸಿಬಿ ಯಂತ್ರಗಳ ಮೂಲಕ ರಸ್ತೆಗೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿದರು. ಬಳಿಕ ವಾಹನಗಳ ಸಂಚಾರವನ್ನು ಪುನಃ ಆರಂಭಿಸಲಾಯಿತು.

ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಮಳೆ ಇನ್ನೂ ಮುಂದುವರಿದಿದ್ದು, ಭೂಮಿಯಲ್ಲಿ ತೇವಾಂಶ ಹೆಚ್ಚಾಗಿರುವ ಕಾರಣ ಮತ್ತಷ್ಟು ಕಡೆಗಳಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಎಚ್ಚರಿಕೆಯಿಂದ ಸಂಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಇಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ; 12 ಪ್ರಮುಖ ರಸ್ತೆ ಬಂದ್, ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಹಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ನಿರ್ಮಿಸಿರುವ ‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ’ (ವಿವೇಕ ಸ್ಮಾರಕ)ವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. 1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಿಸಲಾಗಿದೆ.

ಪ್ರಧಾನಿ ಮೋದಿ ಮಧ್ಯಾಹ್ನ 2.55ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಓವಲ್ ಮೈದಾನಕ್ಕೆ ತೆರಳಿ, ಅಲ್ಲಿಂದ ರಸ್ತೆ ಮಾರ್ಗವಾಗಿ ರಾಮಕೃಷ್ಣ ಆಶ್ರಮಕ್ಕೆ ಹೋಗಲಿದ್ದಾರೆ. ಮಧ್ಯಾಹ್ನ 3.30ರಿಂದ ಸಂಜೆ 5.15ರವರೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಆಶ್ರಮದ ಶಾಲೆಗೆ ಭೇಟಿ ನೀಡಿ, ಸಂಜೆ 5.55ಕ್ಕೆ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಇಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ಇದು ಅವರ ಮೊದಲ ಮೈಸೂರು ಪ್ರವಾಸವಾಗಿದೆ. ಬೆಳಿಗ್ಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು, ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ, ವಿವೇಕ ಸ್ಮಾರಕ ಉದ್ಘಾಟನಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದ 12 ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಕೆ.ಆರ್.ಬಿ ರಸ್ತೆ, ಬೋಗಾದಿ ರಸ್ತೆ, ಜೆ.ಎಲ್.ಬಿ ರಸ್ತೆ, ರಮಾವಿಲಾಸ ರಸ್ತೆ, ಕೃಷ್ಣವಿಲಾಸ ರಸ್ತೆ ಸೇರಿದಂತೆ ಹಲವು ರಸ್ತೆಗಳು ಬಂದ್ ಆಗಲಿವೆ. ಸಾರ್ವಜನಿಕರು ಪೊಲೀಸರು ಸೂಚಿಸಿರುವ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ.

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! ಕೊಡಗು-ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ನಿರಂತರ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಇಂದು ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆಯಾ ತಾಲೂಕುಗಳ ತಹಶೀಲ್ದಾರ್‌ಗಳು ಈ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲೂ ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಕರಾವಳಿ ಭಾಗದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 50ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ನಿವಾಸಿಗಳು, ನದಿ ಹಾಗೂ ಹಳ್ಳಗಳ ಸಮೀಪ ವಾಸಿಸುವವರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅನಗತ್ಯ ಪ್ರಯಾಣವನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಹಾಗೂ ಹವಾಮಾನ ಇಲಾಖೆಯ ಅಧಿಕೃತ ಮಾಹಿತಿ ಗಮನಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

ಲಂಚದ ಬಲೆಗೆ ಬಿದ್ದ ಪುರಸಭೆ ವ್ಯವಹಾರ: ಹಣ ಪಡೆಯುತ್ತಿದ್ದ ಮಧ್ಯವರ್ತಿ ಪರಾರಿ!

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಖಾತೆ ಜಮಾಬಂಧಿ ಪತ್ರ ನೀಡಲು ಲಂಚದ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಶಿರಹಟ್ಟಿ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದು, ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಧ್ಯವರ್ತಿಯಾಗಿ ಆರೋಪಿಸಲಾದ ವಿನೋದ ಕಪ್ಪತ್ತನವರ ಪರಾರಿಯಾಗಿದ್ದಾನೆ.

ಮಾಂತೇಶ ಎಂಬುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಹಟ್ಟಿ ಪಟ್ಟಣ ಪಂಚಾಯಿತಿಯ ಮಾಜಿ ಮುಖ್ಯಾಧಿಕಾರಿ ಸವಿತಾ ತಾಂಬ್ರೆ ವಿರುದ್ಧವೂ ಗದಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಿಂದ ಖಾತೆ ಜಮಾಬಂಧಿ ಪತ್ರ ನೀಡಲು ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಅದರ ಭಾಗವಾಗಿ ₹5 ಸಾವಿರ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚ ಸ್ವೀಕರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.

ದಾಳಿ ವೇಳೆ ಆರೋಪಿ ವಿನೋದ ಕಪ್ಪತ್ತನವರ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಲೋಕಾಯುಕ್ತ ಡಿಎಸ್‌ಪಿ ಲೋಕೇಶ್ ನೇತೃತ್ವದ ತಂಡ ಗುರುವಾರ ತಡರಾತ್ರಿವರೆಗೆ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿತು.

“ದೂರು ಆಧರಿಸಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದ್ದು, ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.”

– ಲೋಕಾಯುಕ್ತ ಅಧಿಕಾರಿಗಳು

ಧರ್ಮ ರಕ್ಷಣೆಗೆ ಗುರು ಮಾರ್ಗವೇ ಶ್ರೇಷ್ಠ: ದುಲಾ ಹಳದೀಪುರ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: “ಗುರು-ಶಿಷ್ಯ ಪರಂಪರೆಯೇ ಭಾರತೀಯ ಧರ್ಮ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕತೆಯ ಭದ್ರ ಬುನಾದಿಯಾಗಿದೆ. ‘ಹರ ಮುನಿದರೆ ಗುರು ಕಾಯುವನು’ ಎಂಬಂತೆ ಗುರು ಶಿಷ್ಯನ ಬದುಕಿಗೆ ದಾರಿದೀಪವಾಗಿದ್ದು, ಗುರು ತೋರಿದ ಧರ್ಮಮಾರ್ಗದಲ್ಲಿಯೇ ರಾಷ್ಟ್ರ ಮತ್ತು ಸಂಸ್ಕೃತಿಯ ರಕ್ಷಣೆ ಸಾಧ್ಯ,” ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರೆ ವಿದುಲಾ ಹಳದೀಪುರ ಹೇಳಿದರು.

ಪಟ್ಟಣದ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ಗುರುಪೂರ್ಣಿಮೆ ಮಹೋತ್ಸವದಲ್ಲಿ ಅವರು ಮಾತನಾಡಿದರು.

ಗುರುಗಳು ಜ್ಞಾನ ಹಾಗೂ ಆಧ್ಯಾತ್ಮಿಕ ಶಕ್ತಿಯ ಭಂಡಾರವಾಗಿದ್ದು, ಸಾಮಾನ್ಯ ವ್ಯಕ್ತಿಯನ್ನೂ ಆದರ್ಶ ವ್ಯಕ್ತಿತ್ವವಾಗಿ ರೂಪಿಸುವ ಸಾಮರ್ಥ್ಯ ಹೊಂದಿದ್ದಾರೆ. “ಧರ್ಮೋ ರಕ್ಷತಿ ರಕ್ಷಿತಃ” ಎಂಬ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರತಿಯೊಬ್ಬರೂ ಧರ್ಮ ಹಾಗೂ ರಾಷ್ಟ್ರ ರಕ್ಷಣೆಗೆ ಕಂಕಣಬದ್ಧರಾಗಬೇಕು ಎಂದು ಹೇಳಿದರು.

ದೇಶ ಹಾಗೂ ಧರ್ಮದ ಮೇಲೆ ವಿವಿಧ ಸವಾಲುಗಳು ಎದುರಾಗುತ್ತಿರುವ ಸಂದರ್ಭದಲ್ಲಿ ಹಿಂದೂ ಸಮಾಜವು ಸ್ವಬೋಧ ಮತ್ತು ಶತ್ರುಬೋಧ ಬೆಳೆಸಿಕೊಂಡು ಸಂಘಟಿತರಾಗಬೇಕಿದೆ. ಸಮಾಜ ಸಂಘಟಿತವಾದಾಗ ಮಾತ್ರ ರಾಷ್ಟ್ರ ಮತ್ತು ಧರ್ಮದ ರಕ್ಷಣೆಗೆ ಬಲ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ಪ್ರತಿಯೊಬ್ಬರೂ ಈಶ್ವರ ಪೂಜೆ, ಧ್ಯಾನ ಮತ್ತು ಪ್ರಾರ್ಥನೆಯ ಮೂಲಕ ಆಧ್ಯಾತ್ಮಿಕ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು. ಮಕ್ಕಳಲ್ಲಿ ಬಾಲ್ಯದಿಂದಲೇ ನೈತಿಕ ಮೌಲ್ಯಗಳು, ಧರ್ಮಬೋಧನೆ ಹಾಗೂ ಗುರು-ಹಿರಿಯರ ಬಗ್ಗೆ ಗೌರವ ಬೆಳೆಸಬೇಕು ಎಂದು ಕರೆ ನೀಡಿದರು.

ಸಮಾಜಕ್ಕೆ ಒಳಿತಾಗುವ ಗುಣಗಳನ್ನು ಬೆಳೆಸಿಕೊಳ್ಳುವ ಜೊತೆಗೆ ಭಾರತದ ಸಾಂಸ್ಕೃತಿಕ ಪರಂಪರೆ ಉಳಿಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು. ಭಾರತ ಮಾತೆ, ಗೋ ರಕ್ಷಣೆ ಹಾಗೂ ಸಂಸ್ಕೃತಿ ಸಂರಕ್ಷಣೆಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಮುಂಬರುವ ತುರ್ತು ಪರಿಸ್ಥಿತಿಗಳು ಹಾಗೂ ಪ್ರಕೃತಿ ವಿಕೋಪಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ಪ್ರಥಮ ಚಿಕಿತ್ಸೆ, ಅಗ್ನಿಶಾಮಕ ಹಾಗೂ ಸ್ವರಕ್ಷಣಾ ತರಬೇತಿ ಪಡೆಯಬೇಕು ಎಂದು ಸಲಹೆ ನೀಡಿದರು.

ಯುವ ಮುಖಂಡ ಆದೇಶ ಹುಲಗೂರು ಮಾತನಾಡಿ, ಜಾತಿ-ಪಂಗಡಗಳ ಭೇದ ಮರೆತು ಹಿಂದೂ ಸಮಾಜ ಸಂಘಟಿತವಾದಾಗ ಮಾತ್ರ ಸಮಾಜದ ಮೇಲಿನ ಅನ್ಯಾಯ ಮತ್ತು ದೌರ್ಜನ್ಯಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವ್ಯಾಸಪೂಜೆ, ಗುರುಪೂಜೆ, ಧರ್ಮರಕ್ಷಕರ ಸತ್ಕಾರ, ಸ್ವರಕ್ಷಣಾ ಕೌಶಲ್ಯದ ಪ್ರಾತ್ಯಕ್ಷಿಕೆ, ಕಿರುಚಿತ್ರ ಹಾಗೂ ಗ್ರಂಥ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು.

ಶಂಕರ ಬ್ಯಾಡಗಿ, ದುಂಡಪ್ಪ ಸವಣೂರ, ಈರಣ್ಣ ಪೂಜಾರ, ವಿರೇಶ ಚಿಂಚಲಿ, ಪ್ರಕಾಶ ಬೆಟಗೇರಿ, ಮುರುಗೇಶ ರುದ್ರಶೆಟ್ಟಿ, ಶೋಭಾ ಇಟಗಿ, ಲಕ್ಷ್ಮೀ ತಟ್ಟಿ, ಬೇಬಿ ರುದ್ರಶೆಟ್ಟಿ, ಗೀತಾ ಬಡಿಗೇರ, ಅನುಸೂಯ ಸಜ್ಜನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಗುರು ತೋರಿದ ಧರ್ಮಮಾರ್ಗದಲ್ಲಿಯೇ ನಡೆಯುವ ಮೂಲಕ ರಾಷ್ಟ್ರ ಮತ್ತು ಸಂಸ್ಕೃತಿಯನ್ನು ರಕ್ಷಿಸಬಹುದು. ಸಮಾಜ ಸಂಘಟಿತವಾದಾಗ ಮಾತ್ರ ಧರ್ಮದ ಮೇಲೆ ಬರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯ.”

– ವಿದುಲಾ ಹಳದೀಪುರ, ವಕ್ತಾರೆ, ಹಿಂದೂ ಜನಜಾಗೃತಿ ಸಮಿತಿ

ಮಳೆಗಾಗಿ ವರ್ತಕರ ಪರ್ಜನ್ಯ ಹೋಮ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರೈತರ ಬದುಕು ಸುಧಾರಿಸಲಿ ಹಾಗೂ ಉತ್ತಮ ಮಳೆಯಾಗಲಿ ಎಂಬ ಆಶಯದೊಂದಿಗೆ ಹಗರಿಬೊಮ್ಮನಹಳ್ಳಿ ಎಪಿಎಂಸಿ ಆವರಣದಲ್ಲಿ ಆಹಾರ ಧಾನ್ಯ ವರ್ತಕರ ಸಂಘದ ವತಿಯಿಂದ ಗುರುವಾರ ಪರ್ಜನ್ಯ ಹೋಮ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಆಹಾರ ಧಾನ್ಯ ವರ್ತಕರ ಸಂಘದ ಅಧ್ಯಕ್ಷ ಅಂಬಾಡಿ ಮಹೇಶ್, “ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿರುವುದರಿಂದ ರೈತರ ಬದುಕು ಚಿಂತಾಜನಕವಾಗಿದೆ. ಭಾರತವು ಸನಾತನ ಸಂಸ್ಕೃತಿಯ ದೇಶವಾಗಿದ್ದು, ಮಳೆ ಕೊರತೆಯಾದಾಗ ವರುಣ ದೇವನಿಗೆ ಪೂಜೆ-ಹೋಮಗಳನ್ನು ನಡೆಸುವ ಪರಂಪರೆ ಇದೆ. ಅದೇ ನಿಟ್ಟಿನಲ್ಲಿ ಜನಕಲ್ಯಾಣ ಹಾಗೂ ರೈತರ ಹಿತದೃಷ್ಟಿಯಿಂದ ಪರ್ಜನ್ಯ ಹೋಮ ಆಯೋಜಿಸಲಾಗಿದೆ,” ಎಂದು ಹೇಳಿದರು.

ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ಪ್ರಕಾಶ್ ಗೌಡ ಮಾತನಾಡಿ, “ಈ ವೇಳೆಗೆ ಬೆಳೆಗಳು ಉತ್ತಮ ಹಂತದಲ್ಲಿರಬೇಕಾಗಿತ್ತು. ಆದರೆ ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ಮುಂದಿನ ದಿನಗಳಲ್ಲಿ ಎಪಿಎಂಸಿಗೆ ಆಹಾರ ಧಾನ್ಯಗಳ ಆಗಮನವೂ ಕುಂಠಿತವಾಗುವ ಆತಂಕ ಎದುರಾಗಿದೆ. ಈ ಪರಿಸ್ಥಿತಿ ಬದಲಾಗಲೆಂಬ ಆಶಯದಿಂದ ಪರ್ಜನ್ಯ ಹೋಮ ಕೈಗೊಳ್ಳಲಾಗಿದೆ,” ಎಂದರು.

ಬೆಳಿಗ್ಗೆ 7 ಗಂಟೆಗೆ ಆರಂಭವಾದ ಪರ್ಜನ್ಯ ಹೋಮ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಿತು. ಬ್ರಾಹ್ಮಣ ಪುರೋಹಿತ ವೆಂಕಟೇಶ್ ಹಾಗೂ ತಂಡ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ವರ್ತಕರಿಂದ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ರೈತರು, ಎಪಿಎಂಸಿ ಸಿಬ್ಬಂದಿ, ಹಮಾಲರು ಹಾಗೂ ವರ್ತಕರು ಪ್ರಸಾದ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಆಹಾರ ಧಾನ್ಯ ವರ್ತಕರ ಸಂಘದ ಉಪಾಧ್ಯಕ್ಷ ಒಂಟಿಗೋಡಿ ಚನ್ನಬಸಪ್ಪ, ಬಂಡಿಹಳ್ಳಿ ಉಪ್ಪಾರ ರಾಮಪ್ಪ, ಅರಳಿಹಳ್ಳಿ ಪೋತಗುಳ್ಳಿ ನಾಗರಾಜ, ದೇವರೆಡ್ಡಿ, ಶಿವಣ್ಣ, ಚಿಂತ್ರಪಳ್ಳಿ ಪ್ರಕಾಶ್, ಖಜಾಂಚಿ ಹನುಮರೆಡ್ಡಿ, ಕಾರ್ಯದರ್ಶಿ ವೆಂಕಟೇಶ್, ಪರಶುರಾಮ್, ಸತೀಶ್, ಪ್ರಸನ್ನ, ಟಿ. ಬಸವರಾಜ್, ಮಾರುತಿ ಶೆಟ್ರು, ಮಲ್ಲಣ್ಣ, ರಾಕೇಶ್ ಮನೋಹರ, ರಾಜಶೇಖರ್, ಶಿವು, ಕಂಠಿ ಶಿವು, ಎಂ.ಸಿ. ನಾಗರಾಜ್, ಎಲ್.ಟಿ.ಪಿ. ಬಸವರಾಜ್, ರಾಘವೇಂದ್ರ ಸೇರಿದಂತೆ ವರ್ತಕರು ಹಾಗೂ ಅವರ ಕುಟುಂಬದವರು ಭಾಗವಹಿಸಿದ್ದರು.

“ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ರೈತರ ಬದುಕು ಚಿಂತಾಜನಕವಾಗಿದೆ. ಉತ್ತಮ ಮಳೆಯಾಗಿ ರೈತರ ಸಂಕಷ್ಟ ದೂರವಾಗಲೆಂಬ ಉದ್ದೇಶದಿಂದ ಪರ್ಜನ್ಯ ಹೋಮ ನಡೆಸಿದ್ದೇವೆ.”

– ಅಂಬಾಡಿ ಮಹೇಶ್, ಅಧ್ಯಕ್ಷರು, ತಾಲೂಕು ಆಹಾರ ಧಾನ್ಯ ವರ್ತಕರ ಸಂಘ, ಹಗರಿಬೊಮ್ಮನಹಳ್ಳಿ

ದೌರ್ಜನ್ಯ ಸಹಿಸಬೇಡಿ… ಧೈರ್ಯವಾಗಿ ಧ್ವನಿ ಎತ್ತಿ: ಡಾ. ನಾಗಲಕ್ಷ್ಮಿ ಚೌಧರಿ

0

ವಿಜಯಸಾಕ್ಷಿ ಸುದ್ದಿ, ಗದಗ: “ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು. ಮಹಿಳೆಯರು ಯಾವುದೇ ರೀತಿಯ ಅನ್ಯಾಯ, ದೌರ್ಜನ್ಯ ಅಥವಾ ಲೈಂಗಿಕ ಕಿರುಕುಳವನ್ನು ಸಹಿಸಿಕೊಳ್ಳದೆ ಧೈರ್ಯವಾಗಿ ಧ್ವನಿ ಎತ್ತಬೇಕು. ಮೌನವಾಗಿರುವುದು ಸಮಸ್ಯೆಗೆ ಪರಿಹಾರವಲ್ಲ,” ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ-2013 (POSH Act) ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣುಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಮಹಿಳೆಯರ ಪ್ರಗತಿಗೆ ಪುರುಷರ ಸಹಕಾರವೂ ಅಗತ್ಯವಾಗಿದೆ. ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ನಡೆದರೆ ಪೋಶ್ ಕಾಯ್ದೆಯಡಿ ರಚಿಸಲಾದ ಆಂತರಿಕ ದೂರು ಸಮಿತಿಗೆ ದೂರು ಸಲ್ಲಿಸಿ ನ್ಯಾಯ ಪಡೆಯಬಹುದು. ಆದರೆ ಕಾಯ್ದೆಯ ಸದ್ಬಳಕೆಯಾಗಬೇಕು, ದುರ್ಬಳಕೆಯಾಗಬಾರದು ಎಂದು ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಪೋಶ್ ಕಾಯ್ದೆ ಅನ್ವಯವಾಗುತ್ತದೆ. ದೂರು ಸಮಿತಿಗೆ ಸಿವಿಲ್ ನ್ಯಾಯಾಲಯದ ಅಧಿಕಾರವಿದ್ದು, ಉದ್ದೇಶಪೂರ್ವಕವಾಗಿ ಸುಳ್ಳು ದೂರು ನೀಡಿದರೆ ದೂರುದಾರರ ವಿರುದ್ಧವೂ ಕ್ರಮ ಕೈಗೊಳ್ಳುವ ಅವಕಾಶವಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯವನ್ನು ಸಹಿಸಿಕೊಳ್ಳುವುದೂ ತಪ್ಪು. ಅನ್ಯಾಯ ನಡೆದಾಗ ಮೌನವಾಗದೆ, ಅದರ ವಿರುದ್ಧ ಕಾನೂನಾತ್ಮಕವಾಗಿ ಹೋರಾಡುವ ಮನೋಭಾವವನ್ನು ಪ್ರತಿಯೊಬ್ಬ ಮಹಿಳೆಯೂ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಟಿ.ಎಸ್. ಚಂದ್ರಿಕಾ ಅವರು ಪೋಶ್ ಕಾಯ್ದೆಯ ಉದ್ದೇಶ, ದೂರು ಸಲ್ಲಿಸುವ ವಿಧಾನ ಹಾಗೂ ಸಮಿತಿಯ ಅಧಿಕಾರಗಳ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಆರ್., ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

“ಮಹಿಳೆಯರು ಅನ್ಯಾಯ ಮತ್ತು ದೌರ್ಜನ್ಯವನ್ನು ಸಹಿಸಿಕೊಳ್ಳಬಾರದು. ಕೆಲಸದ ಸ್ಥಳದಲ್ಲಿ ಕಿರುಕುಳ ಎದುರಾದರೆ ಧೈರ್ಯವಾಗಿ ದೂರು ನೀಡಿ ನ್ಯಾಯ ಪಡೆಯಬೇಕು.”

– ಡಾ. ನಾಗಲಕ್ಷ್ಮಿ ಚೌಧರಿ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ

ಶಿರಹಟ್ಟಿ: ಎಸ್‌ಐಆರ್‌ನಲ್ಲಿ ಶೇ.100 ಸಾಧನೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026 ಕಾರ್ಯದಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಶೇ.100 ಪ್ರಗತಿ ಸಾಧಿಸುವ ಮೂಲಕ ಗದಗ ಜಿಲ್ಲೆಯಲ್ಲೇ ಮೊದಲ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕುಗಳನ್ನು ಒಳಗೊಂಡಿರುವ ಕ್ಷೇತ್ರದಲ್ಲಿ ಒಟ್ಟು 252 ಮತಗಟ್ಟೆ ವ್ಯಾಪ್ತಿಯಲ್ಲಿ 2,30,268 ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿತ್ತು. ಜುಲೈ 30ರ ವೇಳೆಗೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡು ಶೇ.100 ಪ್ರಗತಿ ದಾಖಲಾಗಿದೆ.

ಕ್ಷೇತ್ರದಲ್ಲಿ 7,236 ಮೃತ ಮತದಾರರು, 17,787 ಸ್ಥಳಾಂತರಗೊಂಡವರು, 3,427 ದ್ವಿಪಾತ್ರ ಮತದಾರರು, 1,140 ಗೈರು ಮತದಾರರು ಹಾಗೂ ಇತರೆ 56 ಪ್ರಕರಣಗಳು ಸೇರಿ ಒಟ್ಟು 29,646 ದಾಖಲೆಗಳನ್ನು ಪರಿಶೀಲಿಸಿ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.

ಈ ಸಾಧನೆಯ ಹಿಂದೆ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಬಿಎಲ್‌ಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ನಡೆಸಿದ ಸತತ ಸಭೆಗಳು, ಕ್ಷೇತ್ರ ಭೇಟಿ, ಸಮಸ್ಯೆಗಳ ತ್ವರಿತ ಪರಿಹಾರ ಹಾಗೂ ರಾಜಕೀಯ ಪಕ್ಷಗಳೊಂದಿಗೆ ಸಮನ್ವಯ ಸಭೆಗಳು ಪ್ರಮುಖ ಕಾರಣವಾಗಿವೆ.

ಮರಣ ಹೊಂದಿರುವ, ಸ್ಥಳಾಂತರಗೊಂಡಿರುವ, ದ್ವಿಪಾತ್ರ ಹಾಗೂ ಗೈರು ಮತದಾರರ ಪಟ್ಟಿಯ ಕ್ರಾಸ್‌ ವೆರಿಫಿಕೇಶನ್ ಕಾರ್ಯ ಮುಂದುವರಿದಿದ್ದು, ಅರ್ಹರಿಗೆ ಅಗತ್ಯ ದಾಖಲೆಗಳ ಆಧಾರದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಬಿಎಲ್‌ಒಗಳು ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಕಾರ್ಯದಲ್ಲಿ ಶೇ.100 ಪ್ರಗತಿ ಸಾಧಿಸಲು ಸಾಧ್ಯವಾಗಿದೆ.”

– ನಂದಾ ಹಣಬರಹಟ್ಟಿ, ಮತದಾರರ ನೋಂದಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಉಪನಿರ್ದೇಶಕಿ

“ಬಿಎಲ್‌ಒಗಳು, ವಿಎಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಪಿಡಿಒಗಳು, ಇಒಗಳು, ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ.”

– ತಹಸೀಲ್ದಾರ್, ಶಿರಹಟ್ಟಿ (ಸಹಾಯಕ ಮತದಾರರ ನೋಂದಣಾಧಿಕಾರಿ)

ನರ್ಸಿಂಗ್ ವಿದ್ಯಾರ್ಥಿಗಳ ಆರೋಗ್ಯದೊಂದಿಗೆ ಚೆಲ್ಲಾಟ ಬೇಡ!

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆ.ಎಚ್. ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ, ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಡ್ಡಾಯ ಹೆಪಟೈಟಿಸ್ ಲಸಿಕೆ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ತಕ್ಷಣವೇ ಲಸಿಕೆ ನೀಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಆಸ್ಪತ್ರೆಯ ವೈದ್ಯಕೀಯ ಸೇವೆ, ಹೆರಿಗೆ ಮತ್ತು ಬಾಣಂತಿಯರ ವಿಭಾಗ, ನರ್ಸಿಂಗ್ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಹಾಗೂ ಬಿ.ಸಿ.ಎಂ. ಹಾಸ್ಟೆಲ್‌ಗಳ ಸ್ಥಿತಿಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಅವರು, ವೈದ್ಯಾಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕಳೆದ ಮೂರು ವರ್ಷಗಳಲ್ಲಿ ತಾಯಂದಿರ ಸಾವಿನ ಪ್ರಮಾಣ ಅತ್ಯಂತ ಕಡಿಮೆಯಾಗಿರುವುದು ಹಾಗೂ ಗಂಭೀರ ಸ್ಥಿತಿಯಲ್ಲಿರುವ ಬಾಣಂತಿಯರ ಆರೈಕೆಗಾಗಿ ವಿಶೇಷ ವೈದ್ಯಕೀಯ ತಂಡ ರಚಿಸಿರುವುದನ್ನು ಶ್ಲಾಘಿಸಿದ ಅವರು, ಈ ಮಾದರಿಯನ್ನು ರಾಜ್ಯದ ಎಲ್ಲಾ ಬೋಧಕ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಜಾರಿಗೊಳಿಸುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಬಿ.ಸಿ.ಎಂ. ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕ ಆಹಾರ ಹಾಗೂ ನೀರಿನ ಸಮಸ್ಯೆ ಇರುವ ಕುರಿತು ದೂರುಗಳು ಬಂದಿದ್ದು, ಇತ್ತೀಚಿನ ಆಹಾರ ವಿಷಬಾಧೆ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಗಂಡು ಮಕ್ಕಳ ಜನನ ಪ್ರಮಾಣ ಹೆಚ್ಚುತ್ತಿರುವುದು ಹಾಗೂ ಹೆಣ್ಣು ಮಕ್ಕಳ ಜನನ ಪ್ರಮಾಣ ಕುಸಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಅಕ್ರಮ ಲಿಂಗಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಜಿಲ್ಲಾಡಳಿತದಿಂದ ಸಮಗ್ರ ವರದಿ ಪಡೆಯಲಾಗುವುದು ಎಂದು ಹೇಳಿದರು.

ಡಿ-ಗ್ರೂಪ್ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ಪರಿಷ್ಕೃತ ವೇತನ, ಸಮವಸ್ತ್ರ ಸೇರಿದಂತೆ ಮಹಿಳಾ ಸಿಬ್ಬಂದಿಗೆ ಋತುಚಕ್ರ ರಜೆ ಜಾರಿಗೆ ತರಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ್ ಬಿದರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ನರ್ಸಿಂಗ್ ವಿದ್ಯಾರ್ಥಿಗಳ ಆರೋಗ್ಯದ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸುವುದಿಲ್ಲ. ಎಲ್ಲ ವಿದ್ಯಾರ್ಥಿಗಳಿಗೆ ಕೂಡಲೇ ಹೆಪಟೈಟಿಸ್ ಲಸಿಕೆ ನೀಡಬೇಕು.”

– ಡಾ. ನಾಗಲಕ್ಷ್ಮಿ ಚೌಧರಿ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ