Home Blog

ಬೆಂಗಳೂರಿನ ಐಐಎಂ ಕ್ಯಾಂಪಸ್​ನಲ್ಲಿ ಮೊದಲ ಬಾರಿಗೆ ಬಿಎಸ್‌ಸಿ ಕೋರ್ಸ್ ಆರಂಭ!

ಬೆಂಗಳೂರು: ದೇಶದ ಪ್ರತಿಷ್ಠಿತ ನಿರ್ವಹಣಾ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಐಐಎಂ ಬೆಂಗಳೂರು ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಪದವಿ ಶಿಕ್ಷಣ ಕ್ಷೇತ್ರಕ್ಕೆ ಕಾಲಿಡುತ್ತಿದೆ.

ಟಾಟಾ ಟ್ರಸ್ಟ್ಸ್‌ನ ಆರ್ಥಿಕ ಬೆಂಬಲದೊಂದಿಗೆ ಹೊಸ ಅಂಡರ್‌ಗ್ರಾಜುಯೇಟ್ ಶಾಲೆಯನ್ನು ಆರಂಭಿಸುತ್ತಿದ್ದು, 2026ರ ಆಗಸ್ಟ್‌ನಿಂದ ಮೊದಲ ಬ್ಯಾಚ್‌ಗೆ ಪ್ರವೇಶ ನೀಡಲಾಗುತ್ತದೆ.

ಇದುವರೆಗೆ ಎಂಬಿಎ, ಪಿಎಚ್‌ಡಿ ಹಾಗೂ ಉನ್ನತ ನಿರ್ವಹಣಾ ಶಿಕ್ಷಣ ಕೋರ್ಸ್‌ಗಳಿಗೆ ಸೀಮಿತವಾಗಿದ್ದ ಐಐಎಂ ಬೆಂಗಳೂರು, ಇದೀಗ 12ನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗಾಗಿ ನಾಲ್ಕು ವರ್ಷದ ಪೂರ್ಣಾವಧಿ ವಸತಿ ಸಹಿತ ಪದವಿ ಕೋರ್ಸ್‌ಗಳನ್ನು ಪರಿಚಯಿಸಿದೆ.

ಸದ್ಯಕ್ಕೆ ಬಿಎಸ್‌ಸಿ ಎಕನಾಮಿಕ್ಸ್ (ಆನರ್ಸ್) ಹಾಗೂ ಬಿಎಸ್‌ಸಿ ಡಾಟಾ ಸೈನ್ಸ್ (ಆನರ್ಸ್) ಎಂಬ ಎರಡು ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದೆ. ಎಕನಾಮಿಕ್ಸ್ ಕೋರ್ಸ್‌ನಲ್ಲಿ ಡಾಟಾ ಸೈನ್ಸ್ ಮೈನರ್ ವಿಷಯವಾಗಿದ್ದರೆ, ಡಾಟಾ ಸೈನ್ಸ್ ಕೋರ್ಸ್‌ನಲ್ಲಿ ಎಕನಾಮಿಕ್ಸ್ ಮೈನರ್ ವಿಷಯವಾಗಿರಲಿದೆ. ಎರಡೂ ಕೋರ್ಸ್‌ಗಳಲ್ಲಿ ಡಾಟಾ ಸೈನ್ಸ್, ಅರ್ಥಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯಗಳ ಸಮನ್ವಯ ಇರಲಿದೆ.

ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಮೂರು ವರ್ಷಗಳ ಬಳಿಕ ಪದವಿ ಪ್ರಮಾಣಪತ್ರದೊಂದಿಗೆ ನಿರ್ಗಮಿಸಬಹುದಾಗಿದ್ದು, ನಾಲ್ಕು ವರ್ಷ ಪೂರ್ಣಗೊಳಿಸಿದವರಿಗೆ ಆನರ್ಸ್ ಪದವಿ ನೀಡಲಾಗುತ್ತದೆ.

ಈ ಹೊಸ ಶಾಲೆಯ ಸ್ಥಾಪನೆಗೆ ಟಾಟಾ ಟ್ರಸ್ಟ್ಸ್ ಮಹತ್ವದ ಧನಸಹಾಯ ನೀಡಿದ್ದು, ಐಐಎಂ ಬೆಂಗಳೂರಿನ ಸುವರ್ಣ ಮಹೋತ್ಸವ ನಿಧಿ ಸಂಗ್ರಹ ಅಭಿಯಾನದಲ್ಲಿ ಇದು ಅತಿದೊಡ್ಡ ಕೊಡುಗೆಯಾಗಿದೆ. ಈ ಯೋಜನೆಯು ಸಂಸ್ಥೆಯ ಶೈಕ್ಷಣಿಕ ವಿಸ್ತರಣೆಗೆ ಹೊಸ ಆಯಾಮ ನೀಡಲಿದೆ ಎಂದು ಆಡಳಿತ ಮಂಡಳಿ ಅಭಿಪ್ರಾಯಪಟ್ಟಿದೆ.

ಮೊದಲ ಬ್ಯಾಚ್‌ಗೆ ಕೇವಲ 120 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದ್ದು, ಹೊಸ ಪದವಿ ಶಾಲೆಯು ಬನ್ನೇರುಘಟ್ಟ ರಸ್ತೆಯಲ್ಲಿರುವ ಐಐಎಂ ಬೆಂಗಳೂರಿನ ಮುಖ್ಯ ಕ್ಯಾಂಪಸ್‌ನಲ್ಲೇ ಕಾರ್ಯನಿರ್ವಹಿಸಲಿದೆ. ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ಹಾಸ್ಟೆಲ್, ಪ್ರಯೋಗಾಲಯ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ಸಂಸ್ಥೆ ಸಿದ್ಧತೆ ನಡೆಸಿದೆ.

ಈ ಕುರಿತು ಮಾತನಾಡಿದ ಐಐಎಂ ಬೆಂಗಳೂರು ನಿರ್ದೇಶಕ ಪ್ರೊ. ಹೃಷಿಕೇಶ್ ಟಿ. ಕೃಷ್ಣನ್, “ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದೆ. ಜಾಗತಿಕ ಸವಾಲುಗಳನ್ನು ಎದುರಿಸಬಲ್ಲ ಯುವ ನಾಯಕರನ್ನು ರೂಪಿಸುವುದು ನಮ್ಮ ಉದ್ದೇಶ” ಎಂದು ತಿಳಿಸಿದ್ದಾರೆ.

ಟಾಟಾ ಟ್ರಸ್ಟ್ಸ್ ಅಧ್ಯಕ್ಷ ನೋಯೆಲ್ ಟಾಟಾ, “ಒಂದು ಸಂಸ್ಥೆಯ ಆರಂಭಿಕ ಹಂತದಲ್ಲಿ ನೀಡುವ ಬೆಂಬಲವು ಅದರ ಭವಿಷ್ಯದ ಚಾರಿತ್ರ್ಯ ಮತ್ತು ಮಹತ್ವಾಕಾಂಕ್ಷೆಯನ್ನು ರೂಪಿಸುತ್ತದೆ. ಐಐಎಂ ಬೆಂಗಳೂರಿನ ಈ ಹೊಸ ಪ್ರಯತ್ನಕ್ಕೆ ಬೆಂಬಲ ನೀಡುತ್ತಿರುವುದು ನಮ್ಮ ಹೆಮ್ಮೆ” ಎಂದು ಹೇಳಿದ್ದಾರೆ.

ಐಐಎಂ ಬೆಂಗಳೂರಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ದೇವಿ ಶೆಟ್ಟಿ ಅವರು, “ಪದವಿಪೂರ್ವ ಹಂತದಲ್ಲೇ ಪ್ರತಿಭೆಗಳನ್ನು ಪೋಷಿಸುವ ಮೂಲಕ ದತ್ತಾಂಶ ಆಧಾರಿತ ಜಗತ್ತಿನ ಸವಾಲುಗಳಿಗೆ ಸಿದ್ಧವಾಗಿರುವ ಚಿಂತಕರನ್ನು ರೂಪಿಸುವ ಗುರಿ ಹೊಂದಿದ್ದೇವೆ” ಎಂದು ಹೇಳಿದ್ದಾರೆ.

ಪ್ರವೇಶ ಪರೀಕ್ಷೆ, ಅರ್ಜಿ ಸಲ್ಲಿಕೆ ಹಾಗೂ ಆಯ್ಕೆ ಪ್ರಕ್ರಿಯೆಯ ಕುರಿತ ಅಧಿಕೃತ ಮಾಹಿತಿಯನ್ನು ಶೀಘ್ರದಲ್ಲೇ ಐಐಎಂ ಬೆಂಗಳೂರಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಅಬ್ಬರ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಜೂನ್ 20ರಿಂದ 21ರವರೆಗೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಕೆಲವೆಡೆ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇದೇ ವೇಳೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಸಿರು ವಲಯ ಮುಂದುವರಿದಿದ್ದು, ಯಾವುದೇ ವಿಶೇಷ ಎಚ್ಚರಿಕೆ ನೀಡಲಾಗಿಲ್ಲ.

ಜೂನ್ 21ರಿಂದ 22ರವರೆಗೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆ ಮುಂದುವರಿಯಲಿದ್ದು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಸಲಹೆ ನೀಡಿದೆ.

ಪ್ರತಿದಿನ ನೆಲ ಒರೆಸುವಾಗ ಈ ಒಂದು ಕೆಲಸ ಮಾಡಿ; ಹಲ್ಲಿ-ಜಿರಳೆ ಕಾಟಕ್ಕೆ ಗುಡ್‌ಬೈ ಹೇಳಿ!

0

ಮನೆಯ ಸ್ವಚ್ಛತೆ ಆರೋಗ್ಯಕರ ಜೀವನಶೈಲಿಯ ಪ್ರಮುಖ ಭಾಗವಾಗಿದೆ.

ಪ್ರತಿನಿತ್ಯ ಮನೆ ಸ್ವಚ್ಛಗೊಳಿಸುವುದರಿಂದ ಧೂಳು ಮತ್ತು ಕೊಳಕು ದೂರವಾಗುವುದಷ್ಟೇ ಅಲ್ಲ, ಹಲ್ಲಿ, ಜಿರಳೆ ಹಾಗೂ ಇತರ ಕೀಟಗಳ ಕಾಟವನ್ನೂ ಕಡಿಮೆ ಮಾಡಬಹುದು. ಸಾಮಾನ್ಯವಾಗಿ ಕೀಟಗಳನ್ನು ಓಡಿಸಲು ರಾಸಾಯನಿಕ ಉತ್ಪನ್ನಗಳನ್ನು ಬಳಸಲಾಗುತ್ತದೆ. ಆದರೆ ಇವು ಆರೋಗ್ಯ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಕೆಲವು ನೈಸರ್ಗಿಕ ಪದಾರ್ಥಗಳನ್ನು ನೆಲ ಒರೆಸುವ ನೀರಿಗೆ ಬೆರೆಸಿ ಬಳಸುವುದರಿಂದ ಮನೆ ಸ್ವಚ್ಛವಾಗಿರುವುದರ ಜೊತೆಗೆ ಕೀಟಗಳ ಕಾಟವನ್ನೂ ತಡೆಯಬಹುದು.

ನಿಂಬೆ ರಸ, ಪುದೀನಾ ಎಣ್ಣೆ, ಕರ್ಪೂರ, ವಿನೆಗರ್, ಬೇವಿನ ಎಣ್ಣೆ, ನೀಲಗಿರಿ ಎಣ್ಣೆ, ಅರಿಶಿನ ಹಾಗೂ ಕಲ್ಲು ಉಪ್ಪು ಮೊದಲಾದ ವಸ್ತುಗಳು ಕೀಟ ನಿವಾರಣೆಗೆ ಸಹಕಾರಿಯಾಗುತ್ತವೆ ಎನ್ನಲಾಗುತ್ತದೆ. ನೆಲ ಒರೆಸುವ ನೀರಿಗೆ ಎರಡು ಚಮಚ ನಿಂಬೆ ರಸ ಅಥವಾ 8 ರಿಂದ 10 ಹನಿ ಪುದೀನಾ ಎಣ್ಣೆ ಸೇರಿಸುವುದರಿಂದ ಹಲ್ಲಿ ಮತ್ತು ಜಿರಳೆಗಳು ದೂರವಿರಬಹುದು. ಅದೇ ರೀತಿ ಕರ್ಪೂರ ಬೆರೆಸಿದ ನೀರು, ಅರ್ಧ ಕಪ್ ವಿನೆಗರ್ ಮಿಶ್ರಿತ ನೀರು ಅಥವಾ ಕೆಲವು ಹನಿ ಬೇವಿನ ಎಣ್ಣೆ ಸೇರಿಸಿದ ನೀರಿನಿಂದ ನೆಲ ಒರೆಸುವುದೂ ಪ್ರಯೋಜನಕಾರಿಯಾಗಿದೆ.

ನೀಲಗಿರಿ ಎಣ್ಣೆಯ 10 ರಿಂದ 12 ಹನಿಗಳನ್ನು ನೀರಿಗೆ ಬೆರೆಸಿ ಬಳಸುವುದರಿಂದ ಮನೆ ತಾಜಾವಾಗಿರುವುದರ ಜೊತೆಗೆ ಕೀಟಗಳ ಕಾಟವೂ ಕಡಿಮೆಯಾಗಬಹುದು. ಸ್ವಲ್ಪ ಅರಿಶಿನ ಅಥವಾ ಕಲ್ಲು ಉಪ್ಪನ್ನು ನೀರಿಗೆ ಸೇರಿಸಿ ನೆಲ ಒರೆಸುವುದರಿಂದ ಸಹ ಸ್ವಚ್ಛತೆ ಹೆಚ್ಚಾಗಿ, ಹಲ್ಲಿ ಮತ್ತು ಜಿರಳೆಗಳು ಮನೆಯೊಳಗೆ ಬರುವುದನ್ನು ತಡೆಯಲು ನೆರವಾಗಬಹುದು. ಈ ಸರಳ ಮತ್ತು ನೈಸರ್ಗಿಕ ವಿಧಾನಗಳನ್ನು ಅಳವಡಿಸಿಕೊಳ್ಳುವುದರಿಂದ ರಾಸಾಯನಿಕ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಿ, ಮನೆಗೆ ಸುರಕ್ಷಿತ ಹಾಗೂ ಆರೋಗ್ಯಕರ ವಾತಾವರಣವನ್ನು ನಿರ್ಮಿಸಬಹುದು.

ತಾತನ ಸ್ವಯಾರ್ಜಿತ ಆಸ್ತಿಯಲ್ಲಿ ಮೊಮ್ಮಗಳಿಗೆ ಪಾಲಿಲ್ಲ; ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಬೆಂಗಳೂರು: ತಾತನು ಸ್ವಂತವಾಗಿ ಸಂಪಾದಿಸಿದ ಆಸ್ತಿಯು ಕುಟುಂಬ ವಿಭಜನೆಯ ಬಳಿಕ ತಂದೆಯ ಪಾಲಿಗೆ ಬಂದರೂ, ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆ. ಅಂತಹ ಆಸ್ತಿಯನ್ನು ಹಿಂದೂ ಅವಿಭಕ್ತ ಕುಟುಂಬದ (HUF) ಆಸ್ತಿಯೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ, ಇಂತಹ ಆಸ್ತಿಯಲ್ಲಿ ಮೊಮ್ಮಗಳು ಪಾಲು ಕೇಳಲು ಕಾನೂನಾತ್ಮಕ ಹಕ್ಕಿಲ್ಲ ಎಂದು ಸ್ಪಷ್ಟಪಡಿಸಿದೆ.

ಅಮೆರಿಕದಲ್ಲಿ ನೆಲೆಸಿರುವ ಉಷಾ ಎನ್. ಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಟಿ.ಎಂ. ನದಾಫ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಷಾ ಅವರು ಉಲ್ಲೇಖಿಸಿದ್ದ ಆಸ್ತಿಗಳನ್ನು ಅವರ ತಾತ ಸ್ವಂತವಾಗಿ ಸಂಪಾದಿಸಿದ್ದರು ಎಂಬುದು ದಾಖಲೆಗಳಿಂದ ಸ್ಪಷ್ಟವಾಗುತ್ತದೆ ಎಂದು ನ್ಯಾಯಪೀಠ ತಿಳಿಸಿದೆ. ಬಳಿಕ ಕುಟುಂಬದ ಒಳಗಿನ ಒಪ್ಪಂದದ ಮೂಲಕ ತಾತ ತಮ್ಮ ಮಕ್ಕಳ ನಡುವೆ ಆಸ್ತಿಯನ್ನು ಹಂಚಿಕೆ ಮಾಡಿದ್ದರು. ಈ ವೇಳೆ ತಂದೆಯ ಪಾಲಿಗೆ ಬಂದ ಆಸ್ತಿ, ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆ ಹೊರತು ಪಿತ್ರಾರ್ಜಿತ ಅಥವಾ ಜಂಟಿ ಕುಟುಂಬದ ಆಸ್ತಿಯಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮಿತಾಕ್ಷರ ಕಾನೂನಿನ ಪ್ರಕಾರ, ವ್ಯಕ್ತಿಗೆ ತನ್ನ ಸ್ವಯಾರ್ಜಿತ ಆಸ್ತಿಯನ್ನು ತನ್ನ ಇಚ್ಛೆಯಂತೆ ವಿಲೇವಾರಿ ಮಾಡುವ ಸಂಪೂರ್ಣ ಹಕ್ಕು ಇರುತ್ತದೆ. ಈ ಆಸ್ತಿಗಳು ಹಿಂದೂ ಅವಿಭಕ್ತ ಕುಟುಂಬದ ಆಸ್ತಿಗಳಾಗಿದ್ದವು ಎಂಬುದನ್ನು ಸಾಬೀತುಪಡಿಸುವ ಯಾವುದೇ ಸಮರ್ಪಕ ಸಾಕ್ಷ್ಯವನ್ನು ಅರ್ಜಿದಾರರು ನ್ಯಾಯಾಲಯದ ಮುಂದೆ ಮಂಡಿಸಿಲ್ಲ ಎಂದು ಪೀಠ ಹೇಳಿದೆ.

ಹೀಗಾಗಿ, ಅರ್ಜಿದಾರರು ಆಸ್ತಿಯನ್ನು ಪಿತ್ರಾರ್ಜಿತ ಆಸ್ತಿ ಎಂದು ಸಾಬೀತುಪಡಿಸುವಲ್ಲಿ ವಿಫಲರಾಗಿರುವುದರಿಂದ, ಆ ಆಸ್ತಿಯಲ್ಲಿ ಪಾಲು ಕೇಳುವ ಹಕ್ಕು ಹೊಂದಿಲ್ಲ. ತಾತನ ಸ್ವಯಾರ್ಜಿತ ಆಸ್ತಿಯನ್ನು ಜಂಟಿ ಕುಟುಂಬದ ಆಸ್ತಿ ಎಂದು ಪರಿಗಣಿಸಿ ಪಾಲು ಬೇಡುವ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಹೇಳಿ, ಉಷಾ ಎನ್. ಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ

ಅರ್ಜಿದಾರರಾದ ಉಷಾ ಎನ್. ಸ್ವಾಮಿ ಅವರು 1979ರಲ್ಲಿ ವೈದ್ಯರಾಗಿರುವ ಜವರಯ್ಯ ಎನ್. ಸ್ವಾಮಿ ಅವರನ್ನು ವಿವಾಹವಾಗಿದ್ದು, ಬಳಿಕ ಪತಿಯೊಂದಿಗೆ ಅಮೆರಿಕದಲ್ಲಿ ನೆಲೆಸಿದ್ದರು.

ತಮ್ಮ ಗಮನಕ್ಕೆ ಬಾರದೆ ಕುಟುಂಬಕ್ಕೆ ಸೇರಿದ 10 ಎಕರೆ ಜಮೀನನ್ನು ಪೋಷಕರು ಮಾರಾಟ ಮಾಡಿದ್ದಾರೆ. ಅಲ್ಲದೆ, ತಂದೆಗೆ ಸೇರಿದ ಪಿತ್ರಾರ್ಜಿತ ಆಸ್ತಿಯಲ್ಲಿ ಗಣಿಗಾರಿಕೆ ನಡೆಸಿ ಗಳಿಸಿದ ಹಣದಿಂದ ಇತರೆ ಆಸ್ತಿಗಳನ್ನು ಸಂಪಾದಿಸಲಾಗಿದೆ. ಆದ್ದರಿಂದ ಆಸ್ತಿಗಳು ಹಾಗೂ ಬ್ಯಾಂಕ್ ಠೇವಣಿಗಳಲ್ಲಿಯೂ ತಮಗೆ ಪಾಲು ಸಿಗಬೇಕು ಎಂದು ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ಆದರೆ, ಈ ಆಸ್ತಿಗಳು ಪೂರ್ವಜರಿಂದ ಬಂದ ಆಸ್ತಿಗಳಲ್ಲ ಹಾಗೂ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯೂ ಅಲ್ಲ ಎಂದು ಪೋಷಕರು ವಾದಿಸಿದ್ದರು. ವಿಚಾರಣಾ ನ್ಯಾಯಾಲಯವೂ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನೂ ಇದೀಗ ಹೈಕೋರ್ಟ್ ತಳ್ಳಿ ಹಾಕಿದೆ.

ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಸಿಗದಿದ್ದರೂ ಬೇಜಾರಿಲ್ಲ ಎಂದ ಜಮೀರ್ ಅಹ್ಮದ್

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಾಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ ಮಾಜಿ ಸಂಸದ ಡಿ.ಕೆ. ಸುರೇಶ್ ಅವರನ್ನು ಮಾಜಿ ಸಚಿವ ಜಮೀರ್ ಅಹ್ಮದ್ ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

“ನಮ್ಮದು ಹೈಕಮಾಂಡ್ ಪಕ್ಷ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಎಲ್ಲ ವಿಚಾರಗಳಲ್ಲೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಮೊದಲ ಹಂತದಲ್ಲೇ ಸಚಿವ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಿದ್ದೆ. ಆದರೆ ಅವಕಾಶ ಸಿಗಲಿಲ್ಲ. ಎರಡನೇ ಹಂತದಲ್ಲಿ ಅವಕಾಶ ದೊರೆಯುವ ವಿಶ್ವಾಸವಿದೆ. ಸಿಗದಿದ್ದರೂ ಯಾವುದೇ ಬೇಸರವಿಲ್ಲ” ಎಂದು ಹೇಳಿದರು.

ಸಚಿವ ಸ್ಥಾನಕ್ಕಾಗಿ ತಾವು ಬಹಿರಂಗವಾಗಿ ಒತ್ತಾಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ನನ್ನ ಅಭಿಮಾನಿಗಳು ಹಾಗೂ ಬೆಂಬಲಿಗರು ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ. ಅದು ಅವರ ಅಭಿಮಾನದಿಂದ ಮಾಡಿದ ಕಾರ್ಯ” ಎಂದು ತಿಳಿಸಿದರು.

“ಸಚಿವ ಸ್ಥಾನ ಸಿಗದಿರುವುದಕ್ಕೆ ನನಗೆ ಬೇಸರವಿಲ್ಲ. ನನ್ನ ಮುಖದಲ್ಲಿ ಬೇಸರ ಕಾಣಿಸುತ್ತಿದೆಯೇ? ನಾನು ಹೈಕಮಾಂಡ್ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಕೇರಳ ಹಾಗೂ ತೆಲಂಗಾಣ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷದ ಪರ ಪ್ರಚಾರ ನಡೆಸಿದ್ದೇನೆ” ಎಂದು ಹೇಳಿದರು.

ವಿಧಾನಪರಿಷತ್ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ ಶಾಸಕರು ಒಗ್ಗಟ್ಟಿನ ಸಂದೇಶ ನೀಡಿದ್ದಾರೆ ಎಂದರು.

ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುಮಾರು 140 ಶಾಸಕರು ಭಾಗವಹಿಸಿದ್ದರು. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಒಬ್ಬ ಅಭ್ಯರ್ಥಿಯ ಗೆಲುವಿಗೆ ಅಗತ್ಯವಿರುವ 28 ಮತಗಳು ದೊರೆತರೂ ಸಾಕು. ನಮ್ಮ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

18 ವರ್ಷಗಳ ದಾಂಪತ್ಯಕ್ಕೆ ದುರಂತ ಅಂತ್ಯ: ಡೆತ್‌ನೋಟ್ ಬರೆದು ನೇಣಿಗೆ ಶರಣಾದ ಪತಿ

0

ಹುಬ್ಬಳ್ಳಿ: ಕೌಟುಂಬಿಕ ಕಲಹ, ಪೊಲೀಸ್ ಠಾಣೆ ಸುತ್ತಾಟ ಹಾಗೂ ದಾಂಪತ್ಯ ಬಿಕ್ಕಟ್ಟಿನ ನಡುವೆ ವ್ಯಕ್ತಿಯೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಪ್ರದೇಶದಲ್ಲಿ ನಡೆದಿದೆ.

ಸಂತೋಷ್ ಅಳ್ಳೂರು (39) ಮೃತ ವ್ಯಕ್ತಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ಮುನ್ನ ಅವರು ಡೆತ್‌ನೋಟ್ ಬರೆದಿಟ್ಟು ಹೋಗಿರುವುದಾಗಿ ತಿಳಿದುಬಂದಿದೆ.

ಸಂತೋಷ್ ಮತ್ತು ಅವರ ಪತ್ನಿ ಸುಮಾರು 18 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದು, ಇತ್ತೀಚಿನ ದಿನಗಳಲ್ಲಿ ಇಬ್ಬರ ನಡುವೆ ಕೌಟುಂಬಿಕ ಕಲಹ ತೀವ್ರಗೊಂಡಿತ್ತು ಎನ್ನಲಾಗಿದೆ.

ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಂತರ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಪತಿಯಿಂದ ದೂರವಾಗಲು ಮುಂದಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕುಟುಂಬದವರ ಆರೋಪದ ಪ್ರಕಾರ, ಪೊಲೀಸ್ ಠಾಣೆಗೆ ಪದೇ ಪದೇ ಕರೆಸಿ ಕಿರುಕುಳ ನೀಡಲಾಗುತ್ತಿತ್ತು. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಸಂತೋಷ್ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಬಳಿಕ ಕುಟುಂಬಸ್ಥರು ಪತ್ನಿ ಹಾಗೂ ಸಂಬಂಧಿತ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಾವಿನ ಹಿಂದಿನ ಕಾರಣಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್‌ನೋಟ್ ಸೇರಿದಂತೆ ಎಲ್ಲಾ ಆಯಾಮಗಳ ಬಗ್ಗೆ ತನಿಖೆ ನಡೆಯುತ್ತಿದೆ.

ಕಲಬುರಗಿಯಲ್ಲಿ PSI ಆತ್ಮಹತ್ಯೆ; ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

0

ಕಲಬುರಗಿ: ಪೊಲೀಸ್ ಇಲಾಖೆಯ ಪಿಎಸ್‌ಐಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಗಂಗಾನಗರ ಪ್ರದೇಶದಲ್ಲಿ ನಡೆದಿದೆ. ಬಸವರಾಜ ಹೆರೂರ್ (2014ರ ಬ್ಯಾಚ್ ಪಿಎಸ್‌ಐ) ಮೃತ ಅಧಿಕಾರಿ ಎಂದು ಗುರುತಿಸಲಾಗಿದೆ.

ಬಸವರಾಜ ಹೆರೂರ್ ಕಳೆದ ಎರಡು ವರ್ಷಗಳಿಂದ ಕಲಬುರಗಿ ಡಿಸಿಆರ್‌ಬಿ (DCRB) ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಸಾವಿನ ಸುದ್ದಿ ಪೊಲೀಸ್ ಇಲಾಖೆಯಲ್ಲಿ ಆಘಾತ ಮೂಡಿಸಿದೆ.

ಮಂಗಳವಾರ ತಡರಾತ್ರಿ ಬಸವರಾಜ ಹೆರೂರ್ ತಮ್ಮ ಕೆಲ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಕುರಿತು ಸುಳಿವು ನೀಡಿದ್ದರು ಎನ್ನಲಾಗಿದೆ. ವಿಷಯ ತಿಳಿದ ಸ್ನೇಹಿತರು ತಕ್ಷಣವೇ ಅವರ ತಂದೆಗೆ ಮಾಹಿತಿ ನೀಡಿದ್ದಾರೆ.

ಬಳಿಕ ಅವರ ತಂದೆ ಮನೆಗೆ ಧಾವಿಸಿ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಯಾವುದೇ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ಬಸವರಾಜ ಹೆರೂರ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.

ಈ ಸಂಬಂಧ ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಆತ್ಮಹತ್ಯೆಯ ಹಿಂದಿನ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.

ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಆರೋಪ: ಪ್ರೊ. ದೇವರಾಜನ್ ತಂಗುದೊರೈ ಅಮಾನತು

0

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಆರೋಪ ಪ್ರಕರಣದಲ್ಲಿ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ಅವರನ್ನು ವಿಶ್ವವಿದ್ಯಾಲಯ ಆಡಳಿತ ಅಮಾನತುಗೊಳಿಸಿದೆ.

ಪಿಎಚ್‌ಡಿ ಸಂಶೋಧನೆಗಾಗಿ ತಮ್ಮ ಮಾರ್ಗದರ್ಶನದಲ್ಲಿ ಅಧ್ಯಯನ ನಡೆಸುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಪ್ರಾಧ್ಯಾಪಕರು ವೈಯಕ್ತಿಕ ಸಂಬಂಧ ಹೊಂದಿದ್ದರು ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ಸಂಬಂಧದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ವಿದ್ಯಾರ್ಥಿನಿ ಅಧ್ಯಯನವನ್ನು ಅರ್ಧದಲ್ಲೇ ನಿಲ್ಲಿಸಿ ತೆರಳಿದ ನಂತರವೂ ಆಕೆಯನ್ನು ಮರಳಿ ಕರೆಸುವಂತೆ ಇತರ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿತ್ತು.

ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳದ ವಿಶ್ವವಿದ್ಯಾಲಯ ಆಡಳಿತದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಆಡಳಿತ ಕಚೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು ಹೂವಿನ ಕುಂಡಗಳನ್ನು ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದರು.

ಕುಲಪತಿ ಕಚೇರಿಯೊಳಗೆ ಪ್ರವೇಶಿಸಲು ಕೆಲ ಕಾರ್ಯಕರ್ತರು ಯತ್ನಿಸಿದ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸಿಂಡಿಕೇಟ್ ಸದಸ್ಯರ ಸಭೆ ನಡೆಸಿದ ವಿಶ್ವವಿದ್ಯಾಲಯ ಆಡಳಿತ, ಪ್ರಾಧ್ಯಾಪಕರ ವಿರುದ್ಧ ತಕ್ಷಣದ ಅಮಾನತು ಕ್ರಮ ಜಾರಿಗೊಳಿಸಿತು. ಜೊತೆಗೆ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಪತ್ತೆಹಚ್ಚಲು ವಿಶೇಷ ತನಿಖಾ ಸಮಿತಿ ರಚಿಸಲಾಗಿದೆ.

ಕುಲಪತಿ ಪ್ರೊ. ಎ.ಎಂ. ಖಾನ್ ನೇತೃತ್ವದ ಆಡಳಿತ, ತನಿಖಾ ವರದಿ ಬಂದ ಬಳಿಕ ಮುಂದಿನ ಕಾನೂನು ಹಾಗೂ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದೆ. ಪ್ರಕರಣದಲ್ಲಿ ಪೊಲೀಸ್ ತನಿಖೆಯೂ ಅಗತ್ಯ ಎಂದು ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ.

ಅಮ್ಮ-ಅಕ್ಕನನ್ನು ನಿಂದಿಸಿದ್ದಕ್ಕೆ ಸ್ನೇಹಿತನ ಮೇಲೆಯೇ ಚಾಕು ಇರಿತ: ಚಿಕಿತ್ಸೆ ಫಲಿಸದೆ ಯುವಕ ಸಾವು

0

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರದ ನಿಮ್ಹಾನ್ಸ್ ಲೇಔಟ್‌ನಲ್ಲಿ ನಡೆದಿದೆ.

ಮೃತ ಯುವಕನನ್ನು ವಸೀಂ ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿಯನ್ನು ಸೈಯದ್ ಸಮೀರ್ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬುಧವಾರ ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ನಡೆದಿದ್ದು, ಇಬ್ಬರೂ ಆಪ್ತ ಸ್ನೇಹಿತರಾಗಿದ್ದರು ಎನ್ನಲಾಗಿದೆ.

 ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಈ ವೇಳೆ ವಸೀಂ, ಸಮೀರ್ ಅವರ ಕುಟುಂಬ ಸದಸ್ಯರನ್ನು, ವಿಶೇಷವಾಗಿ ತಂದೆ ಮತ್ತು ಅಕ್ಕನನ್ನು ನಿಂದಿಸಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಸಮೀರ್, ಮಾತಿಗೆ ಮಾತು ಬೆಳೆದು ವಸೀಂ ಮೇಲೆ ಹಲ್ಲೆ ನಡೆಸಿದ್ದಾನೆ.

ಜಗಳ ತೀವ್ರಗೊಂಡಾಗ ಸಮೀರ್ ಚಾಕುವಿನಿಂದ ವಸೀಂಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ವಸೀಂ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಆರೋಪಿ ಸೈಯದ್ ಸಮೀರ್ ಕೂಡ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸಂಬಂಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ನಿಖರ ಕಾರಣ ಹಾಗೂ ಇತರೆ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ: ನಟ ಪ್ರಕಾಶ್‌ ರಾಜ್‌

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರು ಉಲ್ಲೇಖವಾಗಿರುವ ಕುರಿತು ನಟ ಪ್ರಕಾಶ್ ರಾಜ್ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದು, ಚಿನ್ನಯ್ಯ ಎಂಬ ವ್ಯಕ್ತಿ ದೂರವಾಣಿ ಮೂಲಕ ಸಂಪರ್ಕಿಸಿದ್ದನ್ನು ಒಪ್ಪಿಕೊಂಡಿದ್ದಾರೆ. ಆದರೆ ಧರ್ಮಸ್ಥಳದ ವಿರುದ್ಧದ ಯಾವುದೇ ಸಂಚು ಅಥವಾ ಷಡ್ಯಂತ್ರದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಕೋರ್ಟ್‌ನಲ್ಲಿ ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಮ್ಮ ಹೆಸರು ಪ್ರಸ್ತಾಪವಾಗಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.

‘ಚಿನ್ನಯ್ಯ ನನ್ನೊಂದಿಗೆ ಮಾತನಾಡಿದ್ದಾನೆ ಎಂಬುದು ನಿಜ. ಆದರೆ ಆತ ನನ್ನನ್ನು ಭೇಟಿಯಾಗಿಲ್ಲ. ನಾನು ಕೂಡ ಅವನನ್ನು ಭೇಟಿಯಾಗಿಲ್ಲ. ಆತ ಕರೆ ಮಾಡಿ ಭೇಟಿಯಾಗಬೇಕು ಎಂದು ಕೇಳಿದಾಗ, ನೇರವಾಗಿ ಭೇಟಿಯಾಗುವ ಅಗತ್ಯವಿಲ್ಲ, ಹೇಳಬೇಕಿರುವುದನ್ನು ರೆಕಾರ್ಡ್ ಮಾಡಿ ಕಳುಹಿಸು ಎಂದು ತಿಳಿಸಿದ್ದೆ’ ಎಂದು ಹೇಳಿದರು.

ಧರ್ಮಸ್ಥಳ ಕುರಿತು ಕೇಳಿಬಂದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಪಾರದರ್ಶಕ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಮಾತ್ರ ಎಸ್‌ಐಟಿ ರಚನೆಗೆ ಒತ್ತಾಯಿಸಿದ್ದಾಗಿ ಪ್ರಕಾಶ್ ರಾಜ್ ಸ್ಪಷ್ಟಪಡಿಸಿದರು.

‘ನಾನು ಧರ್ಮಸ್ಥಳಕ್ಕೆ ಹೋಗಿಲ್ಲ. ಗಿರೀಶ್ ಮಟ್ಟಣ್ಣನವರ್ ಅವರನ್ನು ಭೇಟಿಯಾಗಿಲ್ಲ. ಕೇರಳದಿಂದ ಹಣ ಬಂದಿದೆ ಎಂಬ ಆರೋಪಗಳಿಗೂ ನನ್ನೊಂದಿಗೆ ಯಾವುದೇ ಸಂಬಂಧ ಇಲ್ಲ. ನನ್ನ ಹೆಸರನ್ನು ಅನಗತ್ಯವಾಗಿ ಎಳೆದು ತರುವ ಪ್ರಯತ್ನ ನಡೆಯುತ್ತಿದೆ’ ಎಂದು ಆರೋಪಿಸಿದರು.

ಚಿನ್ನಯ್ಯ ತಮ್ಮೊಂದಿಗೆ ತಮಿಳು ಭಾಷೆಯಲ್ಲಿ ಮಾತನಾಡಿದ್ದಾನೆ ಎಂದು ಹೇಳಿದ ಅವರು, ಆ ಕರೆ ಕುರಿತು ಪ್ರಣವ್ ಮೊಹಂತಿ ಅವರಿಗೆ ಮಾಹಿತಿ ನೀಡಿದ್ದೇನೆ ಎಂದರು.

‘ಈಗ ತನಿಖೆಯಲ್ಲಿ ಚಿನ್ನಯ್ಯ ಹಲವರನ್ನು ದಾರಿ ತಪ್ಪಿಸಿದ್ದಾನೆ ಎಂಬ ವಿಚಾರಗಳು ಹೊರಬರುತ್ತಿವೆ. ಸತ್ಯ ಹೊರಬರಬೇಕು ಎಂಬುದೇ ನನ್ನ ನಿಲುವು. ಆದರೆ ನನ್ನನ್ನು ಧರ್ಮಸ್ಥಳ ವಿರೋಧಿ ಅಥವಾ ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನಗಳು ಸಂಪೂರ್ಣ ಆಧಾರರಹಿತ’ ಎಂದು ಪ್ರಕಾಶ್ ರಾಜ್ ಹೇಳಿದರು.

error: Content is protected !!