ರಾಮನಗರ: ನೈಸ್ ಮತ್ತು ಕೆಪಿಎಸ್ಸಿ ಅಕ್ರಮಗಳ ವಿಚಾರವನ್ನು ಮುಚ್ಚಿಹಾಕಲು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮುನ್ನೆಲೆಗೆ ತರಲಾಗುತ್ತಿದೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಆರೋಪವನ್ನು ಸಚಿವ ಹೆಚ್.ಸಿ. ಬಾಲಕೃಷ್ಣ ತೀವ್ರವಾಗಿ ಖಂಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ನೈಸ್ ಹಾಗೂ ಕೆಪಿಎಸ್ಸಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿರುವ ಅವರು, ಪ್ರಜ್ವಲ್ ಪ್ರಕರಣದ ಬಗ್ಗೆ ಮಾತನಾಡುವುದು ಅಸಹ್ಯ ಎಂದು ಟೀಕಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರನ್ನು ರಾಜಕೀಯವಾಗಿ ಮುಗಿಸಿ ತಮ್ಮ ಮಗನನ್ನು ಪ್ರತಿಷ್ಠಾಪಿಸುವ ಉದ್ದೇಶ ಕುಮಾರಸ್ವಾಮಿ ಅವರಿಗಿದೆ ಎಂದು ಬಾಲಕೃಷ್ಣ ಆರೋಪಿಸಿದ್ದಾರೆ. ಪದೇ ಪದೇ ಪ್ರಜ್ವಲ್ ಪ್ರಕರಣದ ಬಗ್ಗೆ ಮಾತನಾಡುವ ಮೂಲಕ ಅವರನ್ನೇ ಜೈಲಿಗೆ ಕಳುಹಿಸಿದರು ಎಂದು ಅವರು ಹೇಳಿದ್ದಾರೆ.
ಕೇಂದ್ರ ಸಚಿವ ಸ್ಥಾನದಲ್ಲಿರುವ ಕುಮಾರಸ್ವಾಮಿ ಜವಾಬ್ದಾರಿಯುತವಾಗಿ ಮಾತನಾಡಬೇಕು. ಕೇಂದ್ರ ಸಚಿವ ಎಂಬುದನ್ನು ಮರೆತು ಗ್ರಾಮ ಪಂಚಾಯಿತಿ ಸದಸ್ಯರಂತೆ ವರ್ತಿಸುತ್ತಿದ್ದಾರೆ ಎಂದು ಬಾಲಕೃಷ್ಣ ವಾಗ್ದಾಳಿ ನಡೆಸಿದರು. ಪ್ರಜ್ವಲ್ ಬಳಿ ಮೊಬೈಲ್ ಹೇಗೆ ಬಂತು ಎಂಬ ಅನುಮಾನವಿದ್ದರೆ ಸಿಬಿಐ ತನಿಖೆಗೆ ಪತ್ರ ಬರೆಯಲಿ ಎಂದು ಅವರು ಸವಾಲು ಹಾಕಿದರು.
ರಾಜ್ಯ ಸರ್ಕಾರದ 100ನೇ ದಿನದ ಸಾಧನಾ ಕಾರ್ಯಕ್ರಮವನ್ನು ಕುಮಾರಸ್ವಾಮಿ ಟೀಕಿಸಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಬಾಲಕೃಷ್ಣ, ಕುಮಾರಸ್ವಾಮಿ ತಮ್ಮನ್ನು ಮಾತ್ರ ಮೇಧಾವಿ ಎಂದುಕೊಂಡಿದ್ದಾರೆ. ಉಳಿದವರೆಲ್ಲ ದಡ್ಡರು ಎಂಬ ಮನಸ್ಥಿತಿ ಅವರದ್ದು ಎಂದು ವ್ಯಂಗ್ಯವಾಡಿದರು.
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆದಿದೆ ಎಂಬ ಆರೋಪಕ್ಕೂ ಪ್ರತಿಕ್ರಿಯಿಸಿದ ಅವರು, ಯಾರೂ ಯಾರನ್ನೂ ಮುಗಿಸಲು ಸಾಧ್ಯವಿಲ್ಲ. ನಮ್ಮನ್ನು ಮುಗಿಸಲು ನೋಡಿದರೆ ನಾವು ಅದನ್ನೇ ಮಾಡುತ್ತೇವೆ, ಇದು ರಾಜಕಾರಣ ಎಂದರು. ದೇವೇಗೌಡರು ಮತ್ತು ಕುಮಾರಸ್ವಾಮಿ ಹೆಸರು ಹೇಳಿದರೆ ಒಕ್ಕಲಿಗರು ಎದ್ದು ನಿಲ್ಲುತ್ತಾರೆ ಎಂಬ ಸೆಂಟಿಮೆಂಟ್ ರಾಜಕಾರಣವನ್ನು ಕೈಬಿಡಬೇಕು ಎಂದು ಸಲಹೆ ನೀಡಿದರು.
ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದು, ರಾಜ್ಯಕ್ಕೆ ಉದ್ಯೋಗಗಳನ್ನು ತರಲಿ. ರಾಜ್ಯ ಸರ್ಕಾರ ಅಗತ್ಯ ಜಾಗ ಒದಗಿಸಲು ಸಿದ್ಧವಿದೆ ಎಂದು ಬಾಲಕೃಷ್ಣ ಹೇಳಿದರು. ಇನ್ನು ವಿದೇಶದಿಂದ ತಾವು ವಾಪಸ್ ಬರುವವರೆಗೆ ಯಾರೂ ನಿದ್ದೆ ಮಾಡಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ವ್ಯಂಗ್ಯವಾಡಿದ ಅವರು, ಅವರು ಬರುವವರೆಗೂ ನಿದ್ದೆ ಮಾಡಿರಲಿಲ್ಲ, ಇನ್ನು ಮುಂದೆ ನೆಮ್ಮದಿಯಾಗಿ ನಿದ್ದೆ ಮಾಡುತ್ತೇವೆ ಎಂದರು.
ಎಲ್ಲಿ ಎದೆ ಡಮ್ ಅನ್ನುತ್ತೋ ಎಂಬ ಭಯದಿಂದ ಎದೆ ಗಟ್ಟಿಯಾಗಿ ಇಟ್ಟುಕೊಂಡಿದ್ದೆವು ಎಂದು ವ್ಯಂಗ್ಯವಾಡಿದ ಬಾಲಕೃಷ್ಣ, ಇಂತಹ ಚಿಲ್ಲರೆ ಹೇಳಿಕೆಗಳನ್ನು ನೀಡುವುದನ್ನು ಕುಮಾರಸ್ವಾಮಿ ನಿಲ್ಲಿಸಬೇಕು ಎಂದು ಹೇಳಿದರು.

