Home Blog

ಪ್ರಜ್ವಲ್ ಮುಗಿಸಿ ಮಗನನ್ನ ಪ್ರತಿಷ್ಠಾಪಿಸಲು ಹೆಚ್‌ಡಿಕೆ ಯತ್ನಿಸುತ್ತಿದ್ದಾರೆ: ಬಾಲಕೃಷ್ಣ

0

ರಾಮನಗರ: ನೈಸ್ ಮತ್ತು ಕೆಪಿಎಸ್‌ಸಿ ಅಕ್ರಮಗಳ ವಿಚಾರವನ್ನು ಮುಚ್ಚಿಹಾಕಲು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮುನ್ನೆಲೆಗೆ ತರಲಾಗುತ್ತಿದೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಆರೋಪವನ್ನು ಸಚಿವ ಹೆಚ್.ಸಿ. ಬಾಲಕೃಷ್ಣ ತೀವ್ರವಾಗಿ ಖಂಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ನೈಸ್ ಹಾಗೂ ಕೆಪಿಎಸ್‌ಸಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿರುವ ಅವರು, ಪ್ರಜ್ವಲ್ ಪ್ರಕರಣದ ಬಗ್ಗೆ ಮಾತನಾಡುವುದು ಅಸಹ್ಯ ಎಂದು ಟೀಕಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರನ್ನು ರಾಜಕೀಯವಾಗಿ ಮುಗಿಸಿ ತಮ್ಮ ಮಗನನ್ನು ಪ್ರತಿಷ್ಠಾಪಿಸುವ ಉದ್ದೇಶ ಕುಮಾರಸ್ವಾಮಿ ಅವರಿಗಿದೆ ಎಂದು ಬಾಲಕೃಷ್ಣ ಆರೋಪಿಸಿದ್ದಾರೆ. ಪದೇ ಪದೇ ಪ್ರಜ್ವಲ್ ಪ್ರಕರಣದ ಬಗ್ಗೆ ಮಾತನಾಡುವ ಮೂಲಕ ಅವರನ್ನೇ ಜೈಲಿಗೆ ಕಳುಹಿಸಿದರು ಎಂದು ಅವರು ಹೇಳಿದ್ದಾರೆ.

ಕೇಂದ್ರ ಸಚಿವ ಸ್ಥಾನದಲ್ಲಿರುವ ಕುಮಾರಸ್ವಾಮಿ ಜವಾಬ್ದಾರಿಯುತವಾಗಿ ಮಾತನಾಡಬೇಕು. ಕೇಂದ್ರ ಸಚಿವ ಎಂಬುದನ್ನು ಮರೆತು ಗ್ರಾಮ ಪಂಚಾಯಿತಿ ಸದಸ್ಯರಂತೆ ವರ್ತಿಸುತ್ತಿದ್ದಾರೆ ಎಂದು ಬಾಲಕೃಷ್ಣ ವಾಗ್ದಾಳಿ ನಡೆಸಿದರು. ಪ್ರಜ್ವಲ್ ಬಳಿ ಮೊಬೈಲ್ ಹೇಗೆ ಬಂತು ಎಂಬ ಅನುಮಾನವಿದ್ದರೆ ಸಿಬಿಐ ತನಿಖೆಗೆ ಪತ್ರ ಬರೆಯಲಿ ಎಂದು ಅವರು ಸವಾಲು ಹಾಕಿದರು.

ರಾಜ್ಯ ಸರ್ಕಾರದ 100ನೇ ದಿನದ ಸಾಧನಾ ಕಾರ್ಯಕ್ರಮವನ್ನು ಕುಮಾರಸ್ವಾಮಿ ಟೀಕಿಸಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಬಾಲಕೃಷ್ಣ, ಕುಮಾರಸ್ವಾಮಿ ತಮ್ಮನ್ನು ಮಾತ್ರ ಮೇಧಾವಿ ಎಂದುಕೊಂಡಿದ್ದಾರೆ. ಉಳಿದವರೆಲ್ಲ ದಡ್ಡರು ಎಂಬ ಮನಸ್ಥಿತಿ ಅವರದ್ದು ಎಂದು ವ್ಯಂಗ್ಯವಾಡಿದರು.

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆದಿದೆ ಎಂಬ ಆರೋಪಕ್ಕೂ ಪ್ರತಿಕ್ರಿಯಿಸಿದ ಅವರು, ಯಾರೂ ಯಾರನ್ನೂ ಮುಗಿಸಲು ಸಾಧ್ಯವಿಲ್ಲ. ನಮ್ಮನ್ನು ಮುಗಿಸಲು ನೋಡಿದರೆ ನಾವು ಅದನ್ನೇ ಮಾಡುತ್ತೇವೆ, ಇದು ರಾಜಕಾರಣ ಎಂದರು. ದೇವೇಗೌಡರು ಮತ್ತು ಕುಮಾರಸ್ವಾಮಿ ಹೆಸರು ಹೇಳಿದರೆ ಒಕ್ಕಲಿಗರು ಎದ್ದು ನಿಲ್ಲುತ್ತಾರೆ ಎಂಬ ಸೆಂಟಿಮೆಂಟ್ ರಾಜಕಾರಣವನ್ನು ಕೈಬಿಡಬೇಕು ಎಂದು ಸಲಹೆ ನೀಡಿದರು.

ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದು, ರಾಜ್ಯಕ್ಕೆ ಉದ್ಯೋಗಗಳನ್ನು ತರಲಿ. ರಾಜ್ಯ ಸರ್ಕಾರ ಅಗತ್ಯ ಜಾಗ ಒದಗಿಸಲು ಸಿದ್ಧವಿದೆ ಎಂದು ಬಾಲಕೃಷ್ಣ ಹೇಳಿದರು. ಇನ್ನು ವಿದೇಶದಿಂದ ತಾವು ವಾಪಸ್ ಬರುವವರೆಗೆ ಯಾರೂ ನಿದ್ದೆ ಮಾಡಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ವ್ಯಂಗ್ಯವಾಡಿದ ಅವರು, ಅವರು ಬರುವವರೆಗೂ ನಿದ್ದೆ ಮಾಡಿರಲಿಲ್ಲ, ಇನ್ನು ಮುಂದೆ ನೆಮ್ಮದಿಯಾಗಿ ನಿದ್ದೆ ಮಾಡುತ್ತೇವೆ ಎಂದರು.

ಎಲ್ಲಿ ಎದೆ ಡಮ್ ಅನ್ನುತ್ತೋ ಎಂಬ ಭಯದಿಂದ ಎದೆ ಗಟ್ಟಿಯಾಗಿ ಇಟ್ಟುಕೊಂಡಿದ್ದೆವು ಎಂದು ವ್ಯಂಗ್ಯವಾಡಿದ ಬಾಲಕೃಷ್ಣ, ಇಂತಹ ಚಿಲ್ಲರೆ ಹೇಳಿಕೆಗಳನ್ನು ನೀಡುವುದನ್ನು ಕುಮಾರಸ್ವಾಮಿ ನಿಲ್ಲಿಸಬೇಕು ಎಂದು ಹೇಳಿದರು.

ರೇಷನ್ ಕಾರ್ಡ್‌ದಾರರಿಗೆ ಡೆಡ್‌ಲೈನ್ ಆತಂಕ: ಶೇ.36.44ರಷ್ಟು ಮಾತ್ರ ಇ-ಕೆವೈಸಿ ಪೂರ್ಣ

0

ಬೆಂಗಳೂರು: ರೇಷನ್ ಕಾರ್ಡ್ ಇ-ಕೆವೈಸಿ ಪೂರ್ಣಗೊಳಿಸಲು ಸೆ.30ರವರೆಗೆ ಮಾತ್ರ ಕಾಲಾವಕಾಶವಿದ್ದು, ಇದೀಗ ಕೇವಲ 15 ದಿನಗಳು ಬಾಕಿ ಉಳಿದಿವೆ. ನಿಗದಿತ ಅವಧಿಯಲ್ಲಿ ಇ-ಕೆವೈಸಿ ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದಾಗುವ ಆತಂಕ ಎದುರಾಗಿದೆ. ಆದರೆ ರಾಜ್ಯದಲ್ಲಿ ಇ-ಕೆವೈಸಿ ಪ್ರಕ್ರಿಯೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದುವರೆಗೆ ಶೇ.36.44ರಷ್ಟು ಮಾತ್ರ ಪೂರ್ಣಗೊಂಡಿದೆ.

ರಾಜ್ಯದಲ್ಲಿ ಒಟ್ಟು 2.67 ಕೋಟಿ ರೇಷನ್ ಕಾರ್ಡ್‌ಗಳ ಇ-ಕೆವೈಸಿ ಮಾಡಬೇಕಿದೆ. ಈ ಪೈಕಿ ಇದುವರೆಗೆ 97.54 ಲಕ್ಷ ಕಾರ್ಡ್‌ಗಳ ಇ-ಕೆವೈಸಿ ಪೂರ್ಣಗೊಂಡಿದ್ದು, ಇನ್ನೂ 1.70 ಕೋಟಿ ಕಾರ್ಡ್‌ಗಳ ಇ-ಕೆವೈಸಿ ಬಾಕಿ ಉಳಿದಿದೆ. ಒಂದೆಡೆ ಸರ್ವರ್ ಸಮಸ್ಯೆ ಕಾಡುತ್ತಿದ್ದರೆ, ಮತ್ತೊಂದೆಡೆ ಗಡುವು ಸಮೀಪಿಸುತ್ತಿರುವುದು ರೇಷನ್ ಕಾರ್ಡ್‌ದಾರರಲ್ಲಿ ಆತಂಕ ಮೂಡಿಸಿದೆ.

ಇ-ಕೆವೈಸಿ ಪೂರ್ಣಗೊಳಿಸಲು ಸೆ.30 ಕೊನೆಯ ದಿನವಾಗಿದ್ದು, ಪ್ರಕ್ರಿಯೆ ಪೂರ್ಣಗೊಳಿಸಲು ಹೆಚ್ಚುವರಿ ಕಾಲಾವಕಾಶ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕಡಿಮೆ ಅವಧಿಯಲ್ಲಿ ಕೋಟ್ಯಂತರ ಕಾರ್ಡ್‌ಗಳ ಇ-ಕೆವೈಸಿ ಪೂರ್ಣಗೊಳಿಸುವುದು ಸವಾಲಾಗಿದ್ದು, ಸರ್ವರ್ ಸಮಸ್ಯೆ ನಿವಾರಿಸಿ ಗಡುವು ವಿಸ್ತರಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಬೆಂಗಳೂರು ಪೂರ್ವ, ರಾಯಚೂರು, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಇ-ಕೆವೈಸಿ ಪ್ರಕ್ರಿಯೆ ಶೇ.50ರ ಗಡಿ ದಾಟಿದೆ. ಆದರೆ ಉಡುಪಿ, ಬಳ್ಳಾರಿ, ಬೀದರ್, ಶಿವಮೊಗ್ಗ, ಕೊಪ್ಪಳ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಇ-ಕೆವೈಸಿ ಪ್ರಮಾಣ ಶೇ.20ರಿಂದ 25ರಷ್ಟಿದೆ.

ಗುರುಗ್ರಾಮ್ ಹಿಟ್‌ ಆ್ಯಂಡ್‌ ರನ್: ಮಹಿಳಾ ಬೈಕರ್‌ಗೆ ಡಿಕ್ಕಿ, ಇಬ್ಬರು ಆರೋಪಿಗಳ ಬಂಧನ

0

ನವದೆಹಲಿ: ಗುರುಗ್ರಾಮ್‌ನಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕರ್‌ಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ಪೊಲೀಸರು ಮಂಗಳವಾರ ರಾಜಸ್ಥಾನದ ದೌಸಾದಲ್ಲಿ ಬಂಧಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಲವ್ನೀಶ್ ಗುರ್ಜರ್‌ನನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಲ್ಯಾಣ್ ವಿರುದ್ಧ ಕೊಲೆ ಯತ್ನದ ಆರೋಪ ದಾಖಲಿಸಲಾಗಿದ್ದು, ಈ ಅಪರಾಧಕ್ಕೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.

ಗುರುಗ್ರಾಮ್‌ನ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಭಾನುವಾರ ಘಟನೆ ನಡೆದಿದೆ. ಬಿಳಿ ಬಣ್ಣದ ಸೆಡಾನ್ ಕಾರೊಂದು ಏಕಾಏಕಿ ಎಡಕ್ಕೆ ತಿರುಗಿ ಬೈಕ್‌ನಲ್ಲಿ ತೆರಳುತ್ತಿದ್ದ ಸಿಯಾ ಅವರಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಸಿಯಾ ರಸ್ತೆಗೆ ಬಿದ್ದಿದ್ದು, ಅವರ ಏಪ್ರಿಲಿಯಾ ಆರ್‌ಎಸ್ 457 ಸ್ಪೋರ್ಟ್ಸ್ ಬೈಕ್ ರಸ್ತೆಯ ಮೇಲೆ ಬಿದ್ದು ಬಹುದೂರ ಉಜ್ಜಿಕೊಂಡು ಹೋಗಿತ್ತು.

ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ.

ಇನ್ನು ಕಾರು ಚಾಲಕ ಕಲ್ಯಾಣ್ ವಿರುದ್ಧ ಸಿಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಬಳಿಕ ವೇಗವಾಗಿ ಪರಾರಿಯಾದರೆ ತನಗೆ ಏನೂ ಆಗುವುದಿಲ್ಲ ಎಂದು ಆತ ಭಾವಿಸಿದ್ದಾನೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

ಆರೋಪಿಗೆ ಕಠಿಣ ಶಿಕ್ಷೆಯಾಗುವವರೆಗೂ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಿಯಾ ಅವರ ಪೋಷಕರು ತಿಳಿಸಿದ್ದಾರೆ.

‘ನನಗೆ ಮುಸ್ಲಿಮರೇ ಮೊದಲು’ ಎಂದ ಅರವಿಂದ್ ಬೋಳಾರ್: ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ

0

ಮಂಗಳೂರು: ಹಾಸ್ಯ ಕಲಾವಿದ ಅರವಿಂದ್ ಬೋಳಾರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಸಮುದಾಯದ ಕುರಿತು ನೀಡಿರುವ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ನನಗೆ ಮುಸ್ಲಿಮರೇ ಮೊದಲು’ ಎಂಬ ಅವರ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಕೆಲವರು ಆಕ್ಷೇಪ ವ್ಯಕ್ತಪಡಿಸಿದರೆ, ಅವರ ಅಭಿಮಾನಿಗಳ ಒಂದು ವರ್ಗ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.

ವೈರಲ್ ವೀಡಿಯೋದಲ್ಲಿ ಮಾತನಾಡಿರುವ ಬೋಳಾರ್, ತಮ್ಮ ಸಿನಿಮಾಗಳಲ್ಲಿ ಹಲವು ಬಾರಿ ಮುಸ್ಲಿಂ ಪಾತ್ರಗಳನ್ನು ಮಾಡಿರುವುದಾಗಿ ಹೇಳಿದ್ದಾರೆ. ತಮ್ಮನ್ನು ಹೆಚ್ಚು ಇಷ್ಟಪಟ್ಟವರು ಮುಸ್ಲಿಮರು ಎಂದು ಹೇಳಿರುವ ಅವರು, ಯಾವುದೇ ವೇದಿಕೆಯಲ್ಲಿ ಕೇಳಿದರೂ ಇದೇ ಮಾತನ್ನು ಹೇಳುವುದಾಗಿ ತಿಳಿಸಿದ್ದಾರೆ.

ಬೋಳಾರ್ ಅವರ ಈ ಹೇಳಿಕೆಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲಾವಿದನೊಬ್ಬನ ಯಶಸ್ಸಿನಲ್ಲಿ ಎಲ್ಲ ಸಮುದಾಯಗಳ ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲವೂ ಇರುತ್ತದೆ. ಅಂತಹ ಸಂದರ್ಭದಲ್ಲಿ ಒಂದು ಸಮುದಾಯವನ್ನು ಮಾತ್ರ ಮೊದಲ ಸ್ಥಾನದಲ್ಲಿ ಇರಿಸಿ ಮಾತನಾಡುವುದು ಸೂಕ್ತವಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರವಾಗಿ ಕೆಲವರು ಬೋಳಾರ್ ಅವರನ್ನು ದೂರವಾಣಿ ಮೂಲಕ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಬೋಳಾರ್ ಪರವಾಗಿಯೂ ಅಭಿಮಾನಿಗಳು ಧ್ವನಿ ಎತ್ತಿದ್ದಾರೆ. ಅವರು ಯಾವುದೇ ಸಮುದಾಯವನ್ನು ಅವಮಾನಿಸುವ ಉದ್ದೇಶದಿಂದ ಮಾತನಾಡಿಲ್ಲ. ತಮ್ಮನ್ನು ಹೆಚ್ಚು ಪ್ರೀತಿಸಿದ ಅಭಿಮಾನಿಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ಸಂದರ್ಭದಲ್ಲಿ ಸೌಹಾರ್ದತೆಯ ದೃಷ್ಟಿಯಿಂದ ಈ ಮಾತುಗಳನ್ನು ಆಡಿದ್ದಾರೆ ಎಂದು ಬೆಂಬಲಿಗರು ಹೇಳಿದ್ದಾರೆ.

ವೈರಲ್ ವೀಡಿಯೋಗೆ ಸಂಬಂಧಿಸಿದಂತೆ ಅರವಿಂದ್ ಬೋಳಾರ್ ಅವರ ಹೇಳಿಕೆಯ ಉದ್ದೇಶದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಕರಾವಳಿ ಭಾಗದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ.

‘ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ಇಡಿ ದಾಳಿ, ಇದು ಸೇಡಿನ ರಾಜಕಾರಣ’: ವಿಜಯಾನಂದ ಕಾಶಪ್ಪನವರ್ ಆರೋಪ

0

ಬಾಗಲಕೋಟೆ: ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ ದಾಳಿ ಬಿಜೆಪಿ ನಡೆಸುತ್ತಿರುವ ಕುತಂತ್ರದ ಭಾಗವಾಗಿರಬಹುದು ಎಂದು ಸಚಿವ ವಿಜಯಾನಂದ ಕಾಶಪ್ಪನವರ್ ಆರೋಪಿಸಿದ್ದಾರೆ. ಬಿಜೆಪಿಗೆ ಸೇರ್ಪಡೆಯಾಗದಿದ್ದರೆ ಇಡಿ, ಐಟಿ ದಾಳಿ ನಡೆಸುವುದಾಗಿ ಕಾಂಗ್ರೆಸ್‌ನ 56 ಶಾಸಕರಿಗೆ ಬೆದರಿಕೆ ಹಾಕಲಾಗಿತ್ತು ಎಂದು ಹೇಳಿದ ಅವರು, ತಮ್ಮ ಮೇಲೂ ದಾಳಿ ನಡೆದರೂ ಎದುರಿಸಲು ಸಿದ್ಧ ಎಂದಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ನ 56 ಶಾಸಕರ ಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ಅದರಲ್ಲಿ ತಮ್ಮ ಹೆಸರೂ ಇತ್ತು ಎಂದು ಕಾಶಪ್ಪನವರ್ ಹೇಳಿದ್ದಾರೆ. ಅನೇಕರು ತಮ್ಮ ಹೆಸರುಗಳನ್ನು ಆ ಪಟ್ಟಿಯಲ್ಲಿ ನೀಡಿದ್ದರು. ಬಿಜೆಪಿಗೆ ಸೇರ್ಪಡೆಯಾಗದಿದ್ದರೆ ದಾಳಿ ನಡೆಸುವುದಾಗಿ ಹೇಳಲಾಗುತ್ತಿತ್ತು ಎಂದು ಆರೋಪಿಸಿರುವ ಅವರು, ಇಡಿ ಮತ್ತು ಐಟಿ ಅಧಿಕಾರಿಗಳು ಯಾವಾಗ ಬೇಕಾದರೂ ತಮ್ಮ ಮನೆಗೆ ಬರಬಹುದು ಎಂದಿದ್ದಾರೆ.

ಸತೀಶ್ ಜಾರಕಿಹೊಳಿ ಮನೆ ಮೇಲಿನ ದಾಳಿಯ ಹಿಂದೆ ಕಾಂಗ್ರೆಸ್‌ನವರೇ ಇದ್ದಾರೆ ಎಂಬ ಆರೋಪಗಳನ್ನು ತಳ್ಳಿಹಾಕಿದ ಕಾಶಪ್ಪನವರ್, ತಮ್ಮ ನಾಯಕರ ರಾಜಕೀಯ ಬೆಳವಣಿಗೆಯನ್ನು ಸಹಿಸದೆ ಬಿಜೆಪಿ ಕುತಂತ್ರ ನಡೆಸುತ್ತಿದೆ ಎಂದು ದೂರಿದ್ದಾರೆ. ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಸಿಕೊಂಡು ಇಡಿ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಇದು ದ್ವೇಷ ಮತ್ತು ಸೇಡಿನ ರಾಜಕಾರಣ ಎಂದು ಟೀಕಿಸಿದ್ದಾರೆ.

ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಮುಚ್ಚಿಹಾಕಲಾಗಿದೆ ಎಂದು ಆರೋಪಿಸಿದ ಕಾಶಪ್ಪನವರ್, ಬಿಜೆಪಿ ನಾಯಕರು ವಿಜಯೇಂದ್ರ ಹಾಗೂ ಬಸವರಾಜ ಬೊಮ್ಮಾಯಿ ಅವರ ಮನೆಗಳ ಮೇಲೂ ಇಡಿ ದಾಳಿ ನಡೆಸಲಿ ಎಂದು ಹೇಳಿದ್ದಾರೆ. ದೇಶದಲ್ಲಿ ಬಿಜೆಪಿಯ ಒಬ್ಬ ನಾಯಕನ ಮೇಲೂ ಇಡಿ ದಾಳಿ ನಡೆಸಿಲ್ಲ ಎಂಬುದಾಗಿಯೂ ಅವರು ಆರೋಪಿಸಿದ್ದಾರೆ.

ಇನ್ನು ಸತೀಶ್ ಜಾರಕಿಹೊಳಿ ಅವರ ಇಡಿ ದಾಳಿ ಕುರಿತು ಕಾಂಗ್ರೆಸ್‌ನವರ ಕೈವಾಡವಿದೆ ಎಂಬ ಮಾತುಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ಮುಡಾ ಪ್ರಕರಣದಲ್ಲಿ ದೂರು ನೀಡಿದ್ದು ಕಾಂಗ್ರೆಸ್‌ನವರೇ ಅಲ್ಲವೇ ಎಂದು ಪ್ರಶ್ನಿಸಿದ್ದರು. ಅಧಿಕಾರ ವಿಷದಂತೆ, ಗಿಡದ ಸುತ್ತ ಇರುವ ಕಳೆಯಂತೆ ಎಂದು ಹೇಳಿದ್ದ ರಾಜಣ್ಣ, ಸತೀಶ್ ಜಾರಕಿಹೊಳಿ ಅವರು ಹೇಳಿದ್ದನ್ನು ತಾವು ನಂಬುವುದಾಗಿ ತಿಳಿಸಿದ್ದರು.

ಮದ್ದೂರು ಗಣೇಶೋತ್ಸವ: 10 ಸಾವಿರಕ್ಕೂ ಹೆಚ್ಚು ಜನರ ನಿರೀಕ್ಷೆ, ರಾಜಕೀಯ ಶಕ್ತಿ ಪ್ರದರ್ಶನಕ್ಕೆ ದೋಸ್ತಿ ಸಜ್ಜು

0

ಮಂಡ್ಯ: ಮದ್ದೂರಿನಲ್ಲಿ ಈ ಬಾರಿ ಗಣೇಶೋತ್ಸವಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಬೃಹತ್ ರೂಪ ನೀಡಿದ್ದು, 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಗೆ ಸಿದ್ಧತೆ ನಡೆದಿದೆ. ಸೆ.16ರಂದು ನಡೆಯಲಿರುವ ಮೆರವಣಿಗೆಯಲ್ಲಿ 10 ಸಾವಿರಕ್ಕೂ ಅಧಿಕ ಭಕ್ತರು ಹಾಗೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಕಳೆದ ವರ್ಷದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಂಡಿದೆ.

ಮದ್ದೂರು ಪಟ್ಟಣ ಮತ್ತು ಸುತ್ತಮುತ್ತಲಿನ ಬಡಾವಣೆಗಳು ಹಾಗೂ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳನ್ನು ಒಂದೆಡೆ ಸೇರಿಸಿ ಸಾಮೂಹಿಕವಾಗಿ ವಿಸರ್ಜನೆ ಮಾಡಲಾಗುತ್ತದೆ. ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಪ್ರಮುಖ ನಾಯಕರು ಭಾಗವಹಿಸಲಿದ್ದು, ಮೈತ್ರಿ ಪಕ್ಷಗಳ ರಾಜಕೀಯ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಗಲಿದೆ.

ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಎರಡೂ ಪಕ್ಷಗಳ ಹಲವು ಶಾಸಕರು ಹಾಗೂ ಮಾಜಿ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ರಾಮ್ ರಹೀಂ ನಗರ ಪ್ರದೇಶದಲ್ಲಿ ಮಸೀದಿಯೊಂದರ ಮುಂಭಾಗ ಧ್ವನಿವರ್ಧಕ ಮತ್ತು ನೃತ್ಯದ ವಿಚಾರವಾಗಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ಬಳಿಕ ಕಿಡಿಗೇಡಿಗಳು ಮೆರವಣಿಗೆಯತ್ತ ಕಲ್ಲು ಹಾಗೂ ಬಾಟಲಿಗಳನ್ನು ಎಸೆದಿದ್ದರು ಎನ್ನಲಾಗಿದ್ದು, ಹಲವು ಭಕ್ತರು ಗಾಯಗೊಂಡಿದ್ದರು. ಘಟನೆಯಿಂದ ಮದ್ದೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದಾದ ಬಳಿಕ ಬಿಜೆಪಿ, ಜೆಡಿಎಸ್ ಹಾಗೂ ಹಿಂದೂ ಸಂಘಟನೆಗಳು ಮದ್ದೂರು ಬಂದ್‌ಗೆ ಕರೆ ನೀಡಿದ್ದವು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ 20ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದರು.

ಘಟನೆಯ ನಂತರ ಮುನ್ನೆಚ್ಚರಿಕಾ ಕ್ರಮವಾಗಿ ಮದ್ದೂರು ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಬಾರಿ ಮೆರವಣಿಗೆ ಮತ್ತು ಸಾಮೂಹಿಕ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಕೆಎಸ್‌ಆರ್‌ಪಿ ಪಡೆಗಳೊಂದಿಗೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.

ವಂದೇ ಮಾತರಂ 2 ಚರಣಕ್ಕೆ ಸೀಮಿತಗೊಳಿಸಿದ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ

0

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಮಾತ್ರ ಸೀಮಿತಗೊಳಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ರಾಷ್ಟ್ರಗೀತೆಯ ಗಾಯನವನ್ನು ಕಡಿತಗೊಳಿಸುವ ಕಾನೂನು ವ್ಯಾಪ್ತಿ ರಾಜ್ಯ ಸರ್ಕಾರಕ್ಕಿಲ್ಲ ಎಂದು ವಕೀಲ ಗಿರೀಶ್ ಭಾರದ್ವಾಜ್ ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಯ್ದೆಯ ಮೂಲಕ ಮಾಡಲಾಗದ ಕ್ರಮವನ್ನು ಸರ್ಕಾರ ಆದೇಶದ ಮೂಲಕ ಜಾರಿಗೆ ತರಲು ಮುಂದಾಗಿದೆ ಎಂದು ಅವರು ದೂರಿದ್ದಾರೆ.

ರಾಜ್ಯ ಸರ್ಕಾರ ಸೆಪ್ಟೆಂಬರ್ 8ರಂದು ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸಚಿವ ಸಂಪುಟದ ನಿರ್ಣಯದ ಆಧಾರದ ಮೇಲೆ ಸರ್ಕಾರ ಈ ಆದೇಶ ಹೊರಡಿಸಿದ್ದು, ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲು ಸೂಚಿಸಲಾಗಿದೆ.

ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆ ಮೂಡಿಸುವಲ್ಲಿ ವಂದೇ ಮಾತರಂ ಗೀತೆಯು ಮಹತ್ವದ ಪಾತ್ರ ವಹಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ವಂದೇ ಮಾತರಂನ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ ಮತ್ತು ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ.

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ವಂದೇ ಮಾತರಂ ಗೀತೆಯ ವಾದನ ಅಥವಾ ಗಾಯನದಲ್ಲಿ ಏಕರೂಪತೆ, ಗೌರವ ಹಾಗೂ ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿತ್ತು.

ಬ್ರಿಕ್ಸ್ ಔತಣಕೂಟ ವಿವಾದ: ವಿಪಕ್ಷ ನಾಯಕರಿಗೆ ಆಹ್ವಾನ ನೀಡಿಲ್ಲವೆಂಬ ಆರೋಪಕ್ಕೆ ಸರ್ಕಾರದ ಸ್ಪಷ್ಟನೆ

0

ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ಆಯೋಜಿಸಲಾದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ವಿದೇಶಿ ನಾಯಕರ ಗೌರವಾರ್ಥ ಕೇಂದ್ರ ಸರ್ಕಾರ ಆಯೋಜಿಸಿದ್ದ ಭವ್ಯ ಔತಣಕೂಟ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಔತಣಕೂಟದಲ್ಲಿ ಎನ್‌ಡಿಎ ಮತ್ತು ಬಿಜೆಪಿ ಮಿತ್ರಪಕ್ಷಗಳ ಮುಖ್ಯಮಂತ್ರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದರಿಂದ, ಇದು ಆಡಳಿತ ಪಕ್ಷದ ಕಾರ್ಯಕ್ರಮದಂತೆ ಬಿಂಬಿತವಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಆದರೆ, ಈ ಆರೋಪವನ್ನು ತಳ್ಳಿಹಾಕಿರುವ ಅಧಿಕೃತ ಮೂಲಗಳು, ವಿರೋಧ ಪಕ್ಷಗಳ ಮುಖ್ಯಮಂತ್ರಿಗಳಿಗೂ ಔತಣಕೂಟಕ್ಕೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಆದರೆ ಕೆಲವರು ಅನಿವಾರ್ಯ ಕಾರಣಗಳಿಂದ ಗೈರಾಗಿದ್ದಾರೆ ಎಂದು ಸ್ಪಷ್ಟಪಡಿಸಿವೆ.

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸೆಪ್ಟೆಂಬರ್ 12ರಂದು ಔತಣಕೂಟದ ಆಹ್ವಾನವನ್ನು ಸ್ವೀಕರಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಅನಿವಾರ್ಯ ಕಾರಣಗಳನ್ನು ಉಲ್ಲೇಖಿಸಿ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದರು. ಕರ್ನಾಟಕ ಹಾಗೂ ಕೇರಳದ ಕಾಂಗ್ರೆಸ್ ಮುಖ್ಯಮಂತ್ರಿಗಳೂ ಔತಣಕೂಟದಿಂದ ದೂರ ಉಳಿದಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಅವರು ವಿದೇಶ ಪ್ರವಾಸದಲ್ಲಿದ್ದ ಕಾರಣ ಔತಣಕೂಟದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.

ಇದೇ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಔತಣಕೂಟಕ್ಕೆ ಆಹ್ವಾನ ನೀಡದಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಆಕ್ಷೇಪಿಸಿದೆ. ಕೇಂದ್ರ ಸರ್ಕಾರದ ರಾಜತಾಂತ್ರಿಕ ಧೋರಣೆಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಭಾರತದ ವಿವಿಧ ನಗರಗಳಲ್ಲಿ ಬ್ರಿಕ್ಸ್ ಸಭೆಗಳು ನಡೆದಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿತ್ತು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ರಾಷ್ಟ್ರೀಯ ಮಹತ್ವದ ಜಾಗತಿಕ ರಾಜತಾಂತ್ರಿಕ ಕಾರ್ಯಕ್ರಮದಿಂದ ವಿರೋಧ ಪಕ್ಷಗಳ ಮುಖಂಡರು ದೂರ ಉಳಿದಿರುವುದು ದುರದೃಷ್ಟಕರ ಎಂದೂ ಸರ್ಕಾರದ ಮೂಲಗಳು ಬೇಸರ ವ್ಯಕ್ತಪಡಿಸಿವೆ.

ಜಾಗತಿಕ ವೇದಿಕೆಯಲ್ಲಿ ಭಾರತದ ಸಾಂಸ್ಕೃತಿಕ ಹಾಗೂ ಆಡಳಿತಾತ್ಮಕ ಒಗ್ಗಟ್ಟನ್ನು ಪ್ರದರ್ಶಿಸುವ ಉದ್ದೇಶದಿಂದ ಎಲ್ಲಾ ರಾಜ್ಯಗಳ ನಾಯಕರನ್ನು ಒಟ್ಟಿಗೆ ಸೇರಿಸುವ ಪರಿಕಲ್ಪನೆಯೊಂದಿಗೆ ಆಹ್ವಾನ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಈ ನಡುವೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಕಾಂಗ್ರೆಸ್ ನಾಯಕರು ಉದ್ದೇಶಪೂರ್ವಕವಾಗಿ ಬಹಿಷ್ಕರಿಸುತ್ತಾರೆ ಎಂಬ ಬಿಜೆಪಿ ಆರೋಪವೂ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ರಾಜ್ಯದಲ್ಲಿ ಭೀಕರ ಬರದ ಮುನ್ಸೂಚನೆ: ಕೇಂದ್ರದ ನಿಯಮದಂತೆ ಬರಪೀಡಿತ ತಾಲೂಕುಗಳ ಘೋಷಣೆ ಎಂದ ಡಿಕೆಶಿ

0

ರಾಮನಗರ: ರಾಜ್ಯದಲ್ಲಿ ಈ ಬಾರಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, 200ಕ್ಕೂ ಹೆಚ್ಚು ತಾಲೂಕುಗಳು ಬರದ ಬವಣೆಗೆ ಸಿಲುಕಿವೆ. ಕೇಂದ್ರದ ನಿಯಮಾನುಸಾರ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿರುವ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಗೌರಿ-ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದರು. ತಾವು ಹಲವು ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಈಗಾಗಲೇ 102 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದ ತಾಲೂಕುಗಳಲ್ಲಿ ಪರಿಶೀಲನೆ ನಡೆಯುತ್ತಿದ್ದು, ಯಾರೂ ಆತುರಪಡುವ ಅಗತ್ಯವಿಲ್ಲ ಎಂದರು.

ಹಲವು ಕಡೆ ಬೆಳೆಗಳು ನಾಶವಾಗಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಅನೇಕ ಪ್ರದೇಶಗಳಲ್ಲಿ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಕೊರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶಿವಕುಮಾರ್ ಹೇಳಿದರು.

ಕಳೆದ ವಾರ ವಿದ್ಯುತ್ ಬೇಡಿಕೆ 19 ಸಾವಿರಕ್ಕೂ ಹೆಚ್ಚು ಮೆಗಾವ್ಯಾಟ್‌ಗೆ ತಲುಪಿದ್ದು, ಪ್ರತಿ ಯೂನಿಟ್‌ಗೆ ₹11ರಿಂದ ₹12ರ ವರೆಗೆ ವಿದ್ಯುತ್ ಖರೀದಿಸಬೇಕಾದ ಅನಿವಾರ್ಯತೆ ಎದುರಾಗಿದೆ. ರಾತ್ರಿ ವೇಳೆ ವಿದ್ಯುತ್ ಬಳಕೆ ಹೆಚ್ಚಾಗಿದ್ದು, ನೆರೆ ರಾಜ್ಯಗಳೊಂದಿಗೆ ಚರ್ಚೆ ನಡೆಸುವಂತೆ ಸಚಿವರಿಗೆ ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಹಲವು ಕಂಪನಿಗಳು ಬರುತ್ತಿದ್ದು, ವಿದ್ಯುತ್, ನೀರು ಹಾಗೂ ಭೂಮಿಗೆ ಬೇಡಿಕೆ ಇಟ್ಟಿವೆ. ವಿಘ್ನ ನಿವಾರಕ ಗಣೇಶನ ಹಬ್ಬದ ಸಂದರ್ಭದಲ್ಲಿ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಬರದ ಸಂಕಷ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಲೆಗಳು ಏರಿಕೆಯಾಗುತ್ತಿದ್ದು, ಜಲ್ಲಿ ಬೆಲೆ ಶೇ.40ರಷ್ಟು ಹೆಚ್ಚಾಗಿರುವುದರಿಂದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತೊಂದರೆಯಾಗುತ್ತಿದೆ ಎಂದು ತಿಳಿಸಿದರು.

ಸೆಪ್ಟೆಂಬರ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಆ ಭಾಗದ ಶಾಸಕರು ಹಾಗೂ ಸಚಿವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಜನರು ಉದ್ಯೋಗಕ್ಕಾಗಿ ಹೊರಗೆ ತೆರಳುವುದನ್ನು ತಪ್ಪಿಸಿ, ಅಲ್ಲಿನ ಪ್ರಾಕೃತಿಕ ಸಂಪತ್ತನ್ನು ಬಳಸಿಕೊಂಡು ಸ್ಥಳೀಯರ ಬದುಕಿನಲ್ಲಿ ಬದಲಾವಣೆ ತರಲು ಹಲವು ಹೊಸ ಯೋಜನೆಗಳನ್ನು ಘೋಷಿಸಲಾಗುವುದು ಎಂದರು.

ಬರ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, ವಿದ್ಯುತ್ ಉತ್ಪಾದನೆ ಹೆಚ್ಚಿಸುವ ಕುರಿತು ಇಂಧನ ಸಚಿವರು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದಾಗಿ ಹೇಳಿದರು. ‘ಒನ್ ನೇಷನ್, ಒನ್ ಗ್ರಿಡ್’ ವ್ಯವಸ್ಥೆಯಿಂದ ದೇಶದ ಯಾವುದೇ ಭಾಗದಲ್ಲಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ರಾಜ್ಯಕ್ಕೆ ತರಬಹುದಾಗಿದ್ದು, ಇದಕ್ಕೆ ಸರಬರಾಜು ವೆಚ್ಚವಾಗಲಿದೆ ಎಂದು ವಿವರಿಸಿದರು.

ಬರ ಹಾಗೂ ರೈತರ ಸಮಸ್ಯೆಗಳು ಮತ್ತು ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಸೆಪ್ಟೆಂಬರ್ 21ರಿಂದ 23ರವರೆಗೆ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ. ಬಿಜೆಪಿ ಶಾಸಕರೂ ರೈತರ ಸಮಸ್ಯೆಗಳ ಬಗ್ಗೆ ತಮ್ಮ ನೋವು ಹಂಚಿಕೊಂಡಿದ್ದಾರೆ. ಬರ ಘೋಷಣೆ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ಸರ್ಕಾರದ 100 ದಿನಗಳ ಕಾರ್ಯಕ್ರಮಕ್ಕೆ ವಿರೋಧ ಪಕ್ಷಗಳ ಶಾಸಕರು ಸೇರಿದಂತೆ ಎಲ್ಲರಿಗೂ ಆಹ್ವಾನ ನೀಡಲಾಗಿದೆ. ವೇದಿಕೆಯಲ್ಲಿ ಶಿಷ್ಟಾಚಾರ ಪಾಲಿಸಲಾಗುತ್ತದೆ. ಪಕ್ಷದ ಅಧ್ಯಕ್ಷರು ಸೇರಿದಂತೆ ಎಲ್ಲರೂ ಪಕ್ಷದೊಂದಿಗೆ ಸೇರಿಕೊಂಡೇ ಕೆಲಸ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಖಾಲಿ ಇರುವ ಸಚಿವ ಸ್ಥಾನವನ್ನು ಪಕ್ಷ ಸೂಚಿಸಿದಾಗ ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಬಳಿಕ ದೊಡ್ಡಾಲಹಳ್ಳಿಯ ತಮ್ಮ ನಿವಾಸದಲ್ಲಿ ತಾಯಿ ಗೌರಮ್ಮ ಹಾಗೂ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ಮಾತುಕತೆ ನಡೆಸಿದರು. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಪೂರ್ವಜರ ಸಮಾಧಿಗಳಿಗೆ ವಾಡಿಕೆಯಂತೆ ಪೂಜೆ ಸಲ್ಲಿಸಿದರು. ಈ ವೇಳೆ ಪತ್ನಿ ಉಷಾ ಕೂಡ ಉಪಸ್ಥಿತರಿದ್ದರು.

ಭದ್ರಾ ಬಲದಂಡೆ ನಾಲೆಗೆ ನೀರು ಹರಿಸಲು ಆಗ್ರಹ; ಹೆದ್ದಾರಿ ತಡೆದು ರೈತರ ಪ್ರತಿಭಟನೆ!

0

ದಾವಣಗೆರೆ: ಭದ್ರಾ ಜಲಾಶಯದಿಂದ ಬಲದಂಡೆ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಬಿಜೆಪಿ ಹಾಗೂ ರೈತ ಒಕ್ಕೂಟದ ವತಿಯಿಂದ ದಾವಣಗೆರೆ ಹೊರವಲಯದ ಬಾಡ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭದ್ರಾ ಜಲಾಶಯದಿಂದ ಅಪ್ಪರ್ ಭದ್ರಾ ಯೋಜನೆಗೆ ಮೂರು ಟಿಎಂಸಿ ನೀರು ಹರಿಸಿ, ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಮಳೆ ಕೊರತೆಯಿಂದ ತೋಟಗಾರಿಕಾ ಬೆಳೆಗಳು, ಇತರೆ ಬೆಳೆಗಳು ಹಾಗೂ ಭತ್ತ ಒಣಗುತ್ತಿವೆ. ಕೆರೆಗಳು ಬತ್ತಿದ್ದು, ಅಂತರ್ಜಲ ಮಟ್ಟವೂ ಕುಸಿಯುತ್ತಿದೆ. ಹೀಗಾಗಿ ಕೂಡಲೇ ಭದ್ರಾ ಬಲದಂಡೆ ನಾಲೆಗೆ ನೀರು ಹರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಎಂ.ಪಿ. ರೇಣುಕಾಚಾರ್ಯ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಈ ಬಗ್ಗೆ ಮನವಿ ಮಾಡಲಾಗಿತ್ತು. ಡಿ.ಕೆ. ಶಿವಕುಮಾರ್ ನೀರಾವರಿ ಸಚಿವರಾಗಿದ್ದ ಸಂದರ್ಭದಲ್ಲಿಯೂ ಮನವಿ ಸಲ್ಲಿಸಲಾಗಿತ್ತು ಎಂದು ಹೇಳಿದ್ದಾರೆ.

ಈಗಲೇ ಸರ್ಕಾರ ಕ್ರಮ ಕೈಗೊಂಡು ಭದ್ರಾ ಬಲದಂಡೆ ನಾಲೆಗೆ ನೀರು ಹರಿಸದಿದ್ದರೆ, ಭದ್ರಾ ನೀರು ನಮ್ಮ ಕೈತಪ್ಪುವ ಆತಂಕವಿದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ರೈತರ ಹಿತದೃಷ್ಟಿಯಿಂದ ಕೂಡಲೇ ನೀರು ಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.