Home Blog

ಮೀನುಗಾರರು, ಪ್ರವಾಸಿಗರಿಗೆ ಎಚ್ಚರಿಕೆ! ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಎರಡು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 27 ಮತ್ತು 28ರಂದು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಉತ್ತರ ಒಳನಾಡಿನಲ್ಲೂ ಮಳೆ ಸಾಧ್ಯತೆ:

ಜುಲೈ 27ರಂದು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಜುಲೈ 28ರಂದು ಬೀದರ್, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿ ದಕ್ಷಿಣ ಒಳನಾಡಿಗೂ ಮಳೆ ಮುನ್ಸೂಚನೆ:

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಜುಲೈ 27ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಮುಂದುವರಿದ ಮಳೆಯ ಅಬ್ಬರ:

ಕಳೆದ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದ್ದು, ಹಲವು ಕಡೆ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮಂಕಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ತಲಾ 12 ಸೆಂ.ಮೀ. ಮಳೆಯಾಗಿದೆ.

ಇನ್ನು ಬೆಳ್ತಂಗಡಿಯಲ್ಲಿ 9 ಸೆಂ.ಮೀ., ಕಾರ್ಕಳದಲ್ಲಿ 8 ಸೆಂ.ಮೀ., ಧರ್ಮಸ್ಥಳ ಹಾಗೂ ಮಂಗಳೂರು ವೀಕ್ಷಣಾಲಯದಲ್ಲಿ ತಲಾ 7 ಸೆಂ.ಮೀ. ಮಳೆ ದಾಖಲಾಗಿದೆ.

ಗುಡುಗು, ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ.

ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಸ್ವಿಫ್ಟ್ ಕಾರಿನ ಕೀ ಕಿತ್ತು ಓಡಿದ ಇನ್ನೋವಾ ಚಾಲಕ!

ಬೆಂಗಳೂರು: ನಗರದ ಬನ್ನೇರುಘಟ್ಟ ರಸ್ತೆಯಲ್ಲಿ ರಸ್ತೆ ಅಪಘಾತದ ಬಳಿಕ ಇನ್ನೋವಾ ಹಾಗೂ ಸ್ವಿಫ್ಟ್ ಕಾರು ಚಾಲಕರ ನಡುವೆ ಸಿನಿಮಾ ಮಾದರಿಯ ಚೇಸಿಂಗ್ ನಡೆದಿದ್ದು, ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಾಹಿತಿಯ ಪ್ರಕಾರ, ಇನ್ನೋವಾ ಕಾರು ಸ್ವಿಫ್ಟ್ ಕಾರಿಗೆ ಸ್ಪರ್ಶಿಸಿದ ಬಳಿಕ ಎರಡೂ ವಾಹನಗಳು ರಸ್ತೆ ಬದಿಯಲ್ಲಿ ನಿಂತಿದ್ದವು. ಈ ವೇಳೆ ಇನ್ನೋವಾ ಚಾಲಕ ಸ್ವಿಫ್ಟ್ ಕಾರಿನ ಕೀ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.

ತಕ್ಷಣ ಜಾಗೃತನಾದ ಸ್ವಿಫ್ಟ್ ಕಾರು ಚಾಲಕ, ಸ್ಥಳದಲ್ಲಿದ್ದ ಬೈಕ್ ಸವಾರನ ನೆರವು ಪಡೆದು ಇನ್ನೋವಾ ಕಾರನ್ನು ಬೆನ್ನಟ್ಟಿದ್ದಾರೆ. ಬಳಿಕ ಚಾಲಕನನ್ನು ತಡೆದು ಪೊಲೀಸ್ ಠಾಣೆಗೆ ತೆರಳುವಂತೆ ಸೂಚಿಸಿದ್ದಾರೆ.

ಆದರೆ, ಠಾಣೆಗೆ ಬರುವುದಾಗಿ ಹೇಳಿದ ಇನ್ನೋವಾ ಚಾಲಕ ಮತ್ತೆ ರ್ಯಾಶ್ ಡ್ರೈವಿಂಗ್ ಮಾಡುತ್ತಾ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಇದರಿಂದ ಮತ್ತೊಮ್ಮೆ ಬೈಕ್‌ನಲ್ಲಿ ಬೆನ್ನಟ್ಟಿದ ಸ್ವಿಫ್ಟ್ ಚಾಲಕ, ಕೊನೆಗೂ ಇನ್ನೋವಾ ಕಾರನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಪ್ರಕರಣದ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಕೆ.ಎಸ್. ಈಶ್ವರಪ್ಪ ವಿರುದ್ಧ ಗೆದ್ದಿದ್ದ ಮಾಜಿ ಶಾಸಕ ಚಂದ್ರಶೇಖರಪ್ಪ ವಿಧಿವಶ!

ಶಿವಮೊಗ್ಗ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗ ನಗರ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ನಿಧನರಾಗಿದ್ದಾರೆ.

ಕಳೆದ ಎರಡು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಚಂದ್ರಶೇಖರಪ್ಪ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಸಂಜೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮಾಜಿ ಶಾಸಕರ ಪಾರ್ಥಿವ ಶರೀರ ಸದ್ಯ ಆಸ್ಪತ್ರೆಯಲ್ಲಿದ್ದು, ರಾತ್ರಿ ವೇಳೆಗೆ ಕುಟುಂಬಸ್ಥರು ಶಿವಮೊಗ್ಗಕ್ಕೆ ತರಲಿದ್ದಾರೆ. ನಾಳೆ ಸಂಜೆ ವೇಳೆಗೆ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹೆಚ್.ಎಂ. ಚಂದ್ರಶೇಖರಪ್ಪ ಅವರು 1999ರಿಂದ 2004ರ ಅವಧಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. ಚುನಾವಣೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದ ಅವರು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ನಗರಸಭೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ ಮಾಜಿ ಶಾಸಕರ ವೇದಿಕೆಯ ರಾಜ್ಯ ಅಧ್ಯಕ್ಷರಾಗಿ ಹಾಗೂ ವೀರಶೈವ-ಲಿಂಗಾಯತ ಮಹಾಸಭಾದ ಮಾಜಿ ರಾಜ್ಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಚಂದ್ರಶೇಖರಪ್ಪ ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಿರಿಯ ರಾಜಕೀಯ ನಾಯಕರ ಅಗಲಿಕೆಯಿಂದ ಕಾಂಗ್ರೆಸ್ ವಲಯದಲ್ಲಿ ಶೋಕ ಆವರಿಸಿದೆ.

 

ಪತ್ರಕರ್ತರ ಮುಖವಾಡ, ಪೊಲೀಸರ ಸೋಗು; ಸುಲಿಗೆ ಮಾಡುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳು ಅರೆಸ್ಟ್!

ಬೆಳಗಾವಿ: ಪೊಲೀಸರ ಸೋಗು ಹಾಕಿ, ಪತ್ರಕರ್ತರ ಮುಖವಾಡದಲ್ಲಿ ಗಾಂಜಾ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ವ್ಯಕ್ತಿಯೊಬ್ಬರಿಂದ ₹60 ಸಾವಿರ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ.

ಜುಲೈ 18ರಂದು ಹುಕ್ಕೇರಿ ತಾಲೂಕಿನ ಕೋಟಭಾಗಿ ಗ್ರಾಮದ ಮಹಿಬೂಬ್ ಬಾಬುಸಾಬ್ ಜಮಾದಾರ್ ಎಂಬುವವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎರಡು ಗಾಂಜಾ ಪೊಟ್ಟಣಗಳನ್ನು ನೀಡಿ ₹1,000 ಪಡೆದಿದ್ದ. ಬಳಿಕ ಕೆಲವೇ ಸಮಯದಲ್ಲಿ ಕಾರಿನಲ್ಲಿ ಬಂದ ನಾಲ್ವರು ಆರೋಪಿಗಳು ತಮ್ಮನ್ನು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಮಹಿಬೂಬ್ ಅವರನ್ನು ಕಬ್ಬಿನ ಗದ್ದೆಗೆ ಕರೆದೊಯ್ದಿದ್ದಾರೆ.

“ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯ” ಎಂದು ಬೆದರಿಸಿದ ಆರೋಪಿಗಳು, ಗಾಂಜಾ ಪೊಟ್ಟಣಗಳೊಂದಿಗೆ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿದ್ದಾರೆ. ನಂತರ ಹುಕ್ಕೇರಿ ಪೊಲೀಸ್ ಠಾಣೆ ಬಳಿ ಕರೆದುಕೊಂಡು ಹೋಗಿ, “ಪ್ರಕರಣ ದಾಖಲಿಸಿ ಹಿಂಡಲಗಾ ಜೈಲಿಗೆ ಕಳುಹಿಸುತ್ತೇವೆ, ಹಣ ಕೊಟ್ಟು ಪ್ರಕರಣ ಮುಗಿಸಿಕೊಳ್ಳಿ” ಎಂದು ಬೆದರಿಸಿ ₹2ರಿಂದ ₹3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಭಯಗೊಂಡ ಮಹಿಬೂಬ್ ಅವರಿಂದ ಅಂತಿಮವಾಗಿ ₹60 ಸಾವಿರ ನಗದು ಪಡೆದುಕೊಂಡಿದ್ದು, ಚಿತ್ರೀಕರಿಸಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು.

ಜುಲೈ 24ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಹುಕ್ಕೇರಿ ಪಟ್ಟಣದ ಕಲ್ಲಪ್ಪ ಬಸವಣ್ಣಿ ಮಾಳಾಜ, ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿಯ ಮಲ್ಲಿಕಾರ್ಜುನ ಸಿದ್ಧಪ್ಪ ಜುಲಫಿ, ಬೆಳಗಾವಿಯ ಪೃಥ್ವಿರಾಜ್ ನಾರಾಯಣ ಚೌಹಾಣ್ ಹಾಗೂ ಗಣೇಶಪುರದ ಡೇವಿಡ್ ಜಾಕೋಬ್ ತಂಗೇರಾಳ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಮಾರುತಿ ಎರ್ಟಿಗಾ ಕಾರು, ಹೀರೋ ಎಚ್‌ಎಫ್ ಡಿಲಕ್ಸ್ ಬೈಕ್, ಎರಡು ಮೊಬೈಲ್ ಫೋನ್‌ಗಳು ಹಾಗೂ ಸುಲಿಗೆ ಮಾಡಿದ ₹34 ಸಾವಿರ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಹುಕ್ಕೇರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

NEET ಸೋರಿಕೆ ಬೆನ್ನಲ್ಲೇ ಕೇಂದ್ರದ ಮಾಸ್ಟರ್ ಪ್ಲಾನ್; ಪರೀಕ್ಷಾ ಪಾರದರ್ಶಕತೆಗೆ ಹೊಸ ಟಾಸ್ಕ್ ಫೋರ್ಸ್

0

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬೆನ್ನಲ್ಲೇ ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ಕೈಗೊಳ್ಳಲು ಮುಂದಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ನೀಟ್ ವಿವಾದದ ಬಳಿಕ ಪ್ರಧಾನಿ ಮೋದಿ ಮೂರನೇ ವಿಡಿಯೋ ಸಂದೇಶವನ್ನು ಹಂಚಿಕೊಂಡಿದ್ದು, ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ವಿಶ್ವಾಸಾರ್ಹ, ಪಾರದರ್ಶಕ ಹಾಗೂ ತಂತ್ರಜ್ಞಾನ ಆಧಾರಿತವಾಗಿಸಲು ಈ ಕಾರ್ಯಪಡೆ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.

“ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಭಾರತ ಸರ್ಕಾರ ನಿರಂತರವಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಈಗಾಗಲೇ ತ್ವರಿತ ನ್ಯಾಯಾಲಯಗಳ ಸ್ಥಾಪನೆ ಮಾಡಲಾಗಿದೆ. ಸಂಸತ್ತಿನಲ್ಲಿ ಕಠಿಣ ಕಾನೂನು ನಿಬಂಧನೆಗಳೊಂದಿಗೆ ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿಯೂ ಮುಂದುವರಿಯುತ್ತಿದ್ದೇವೆ” ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷೆಗಳು ವಿಶ್ವಾಸಾರ್ಹವಾಗಿರಬೇಕು, ಪಾರದರ್ಶಕವಾಗಿರಬೇಕು ಹಾಗೂ ತಂತ್ರಜ್ಞಾನವನ್ನು ಗರಿಷ್ಠವಾಗಿ ಬಳಸಿಕೊಳ್ಳಬೇಕು ಎಂದು ಮೋದಿ ಒತ್ತಿ ಹೇಳಿದ್ದಾರೆ.

ನಂದನ್ ನಿಲೇಕಣಿ ನೇತೃತ್ವದ ಕಾರ್ಯಪಡೆಯು ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿರುವ ಸವಾಲುಗಳನ್ನು ಪರಿಶೀಲಿಸಿ, ಸುಧಾರಣೆಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಆ ವರದಿಯ ಆಧಾರದ ಮೇಲೆ ಮುಂಬರುವ ಪರೀಕ್ಷೆಗಳ ವಿಶ್ವಾಸಾರ್ಹತೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನಡೆದ ಪ್ರತಿಭಟನೆಗಳು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧದ ರಾಜಕೀಯ ಒತ್ತಡದ ನಡುವೆಯೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಪ್ರಕಟಿಸಿದೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಪರೀಕ್ಷೆಗಳ ಮೇಲಿನ ನಂಬಿಕೆ ಉಳಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.

SIR ಕೆಲಸದ ಒತ್ತಡದಿಂದ ಶಿಕ್ಷಕ ಸಾವು? ಕುಟುಂಬಸ್ಥರ ಗಂಭೀರ ಆರೋಪ!

ಬೆಳಗಾವಿ: SIR ಕಾರ್ಯದ ಒತ್ತಡದ ನಡುವೆ ಬೆಳಗಾವಿ ಜಿಲ್ಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಅಥಣಿ ಪಟ್ಟಣದ ನಿವಾಸಿ ಹಾಗೂ ರಾಯಬಾಗ ತಾಲೂಕಿನ ನಿಲಜಿ ಗ್ರಾಮದ ಪಡದಾಳೆ ತೋಟ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕ ಪ್ರಕಾಶ್ ಕಾಂಬಳೆ ಮೃತಪಟ್ಟ ದುರ್ದೈವಿ.

ಕಳೆದ ಕೆಲವು ದಿನಗಳಿಂದ SIR ಕೆಲಸದ ಒತ್ತಡ ಹೆಚ್ಚಾಗಿತ್ತು. ಮನೆಗೆ ಬಂದ ಬಳಿಕವೂ “ಕೆಲಸ ಬಹಳ ಇದೆ, ಬೇಗ ಮುಗಿಸಬೇಕು” ಎಂದು ಪ್ರಕಾಶ್ ಹೇಳಿಕೊಳ್ಳುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪ್ರಕಾಶ್ ಅವರ ಪತ್ನಿ ಮಾಲಾ ಮಾತನಾಡಿ, “ನನ್ನ ಗಂಡನ ಸಾವಿಗೆ ಕೆಲಸದ ಒತ್ತಡವೇ ಕಾರಣ. ಪ್ರತಿದಿನ SIR ಕೆಲಸದ ಒತ್ತಡದ ಬಗ್ಗೆ ಅವರು ಆತಂಕದಲ್ಲಿದ್ದರು” ಎಂದು ಆರೋಪಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಕಾಶ್ ಅವರು ಲೋ ಬಿಪಿ ಕಾರಣದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಸಾವಿಗೆ SIR ಕಾರ್ಯದ ಒತ್ತಡ ಕಾರಣವಾಗಿರಬಹುದು ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅಥಣಿ ಪಟ್ಟಣದ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ.

 

ಹಾವೇರಿಯಲ್ಲಿ ರೈತರಿಗೆ ಕಳ್ಳರ ಕಾಟ: 22ಕ್ಕೂ ಹೆಚ್ಚು ಬೋರ್‌ವೆಲ್ ಕೇಬಲ್ ಕಳ್ಳತನ!

ಹಾವೇರಿ: ಮಳೆ ಕೊರತೆ, ವಿದ್ಯುತ್ ವ್ಯತ್ಯಯದ ನಡುವೆಯೇ ಹಾವೇರಿ ಜಿಲ್ಲೆಯ ರೈತರಿಗೆ ಇದೀಗ ಕಳ್ಳರ ಕಾಟವೂ ಸೇರಿದೆ.

ಜಿಲ್ಲೆಯ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ 22ಕ್ಕೂ ಹೆಚ್ಚು ರೈತರ ಜಮೀನಿನಲ್ಲಿದ್ದ ಬೋರ್‌ವೆಲ್ ಕೇಬಲ್ ಹಾಗೂ ಇತರೆ ಕೃಷಿ ಉಪಕರಣಗಳನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ರಸ್ತೆ ಬದಿಯಲ್ಲಿರುವ ಜಮೀನುಗಳನ್ನು ಗುರಿಯಾಗಿಸಿಕೊಂಡ ಖದೀಮರು, ಬೋರ್‌ವೆಲ್ ಕೇಬಲ್‌ಗಳು ಮತ್ತು ಬಿಡಿಭಾಗಗಳನ್ನು ಕದ್ದು ಪರಾರಿಯಾಗಿದ್ದು, ಸುಮಾರು ₹5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಕಳುವಾಗಿವೆ ಎಂದು ಅಂದಾಜಿಸಲಾಗಿದೆ.

ಈ ವರ್ಷ ಮಳೆ ಕೊರತೆಯಿಂದ ಬೆಳೆ ಉಳಿಸಿಕೊಳ್ಳಲು ರೈತರು ಹಗಲು-ರಾತ್ರಿ ನೀರು ಹರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇಂತಹ ಸಂದರ್ಭದಲ್ಲಿ ಕಳ್ಳತನ ನಡೆದಿರುವುದು ರೈತರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಕರಿಯಪ್ಪ ಅಣ್ಣಿ, ನಾಗರಾಜ ಮೊಟೇಬೆನ್ನೂರು, ರೇವಣಸಿದ್ದಪ್ಪ ವಾಳದ, ಸಿದ್ದಮ್ಮ, ಶಂಕ್ರಪ್ಪ, ಭರಮಪ್ಪ, ಮರಲಿಂಗಪ್ಪ, ತಿರಕಪ್ಪ, ಬಸವರಾಜ, ಹೊಳಲಪ್ಪ, ದುಂಡಪ್ಪ ಸೇರಿದಂತೆ 22ಕ್ಕೂ ಹೆಚ್ಚು ರೈತರು ಕಳ್ಳತನಕ್ಕೆ ಒಳಗಾಗಿದ್ದಾರೆ.

“ನಾವು ಹೇಗೆ ಜೀವನ ಮಾಡಬೇಕು?” ಎಂದು ರೈತ ಶಂಕ್ರಪ್ಪ ಅಳಲು ತೋಡಿಕೊಂಡಿದ್ದಾರೆ.

ಇನ್ನೋರ್ವ ರೈತ ನಶೀರ್ ಖಾನ್ ಮಾತನಾಡಿ, “ಮತ್ತೆ ₹20ರಿಂದ ₹30 ಸಾವಿರ ಖರ್ಚು ಮಾಡಿ ಕೇಬಲ್ ಹಾಕಿಸಿಕೊಳ್ಳಬೇಕಾಗಿದೆ. ಮಳೆ ಇಲ್ಲ, ಬೆಳೆ ಒಣಗುತ್ತಿದೆ, ವಿದ್ಯುತ್ ಸರಿಯಾಗಿ ಸಿಗುತ್ತಿಲ್ಲ. ಇದರ ನಡುವೆ ಕಳ್ಳತನದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೊಲೀಸರು ಶೀಘ್ರ ಆರೋಪಿಗಳನ್ನು ಬಂಧಿಸಿ ರೈತರಿಗೆ ನ್ಯಾಯ ಒದಗಿಸಬೇಕು,” ಎಂದು ಆಗ್ರಹಿಸಿದರು.

ಕರ್ಜಗಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಕೃಷಿ ಉಪಕರಣಗಳ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದು, ಶೀಘ್ರದಲ್ಲೇ ಕಳ್ಳರನ್ನು ಬಂಧಿಸಿ ರೈತರಿಗೆ ನ್ಯಾಯ ಒದಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬಿಎಂಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ವೈರಲ್ ವಿಡಿಯೋ ಬೆನ್ನಲ್ಲೇ ಸ್ವಯಂಪ್ರೇರಿತ ಎಫ್‌ಐಆರ್‌

0

ಬೆಂಗಳೂರು : ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಂಪಿಗೆಹಳ್ಳಿ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೊ ಆಧರಿಸಿ ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಜುಲೈ 24ರಂದು ಮಧ್ಯಾಹ್ನ ಸುಮಾರು 12:42ರ ವೇಳೆಗೆ ಹೆಬ್ಬಾಳದಿಂದ ಮಾನ್ಯತಾ ಟೆಕ್ ಪಾರ್ಕ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ನಾಗವಾರ ರಿಂಗ್ ರಸ್ತೆಯ ಮಾನ್ಯತಾ ಟೆಕ್ ಪಾರ್ಕ್ ಬಸ್ ನಿಲ್ದಾಣದ ಸಮೀಪ ಯುವತಿಗೆ ಅಪರಿಚಿತ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆತನ ವರ್ತನೆಯಿಂದ ಅಸಹ್ಯಗೊಂಡ ಯುವತಿ ಕೂಡಲೇ ಬಸ್ ಚಾಲಕನ ಗಮನಕ್ಕೆ ತಂದಿದ್ದು, ಬಳಿಕ ಆರೋಪಿಯ ಕೊರಳಪಟ್ಟಿ ಹಿಡಿದು ಕಪಾಳಕ್ಕೆ ಬಾರಿಸಿದ್ದಾಳೆ. ಚಾಲಕ ಕೂಡ ಆರೋಪಿಗೆ ಥಳಿಸಿದ್ದಾರೆ. ಈ ಗಲಾಟೆಯ ಮಧ್ಯೆ ಆರೋಪಿ ಬಸ್‌ನಿಂದ ಪರಾರಿಯಾಗಿದ್ದಾನೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ಬಳಿಕ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ ಆರೋಪಿಯನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಗಳು ಸೇರಿದಂತೆ ವಿವಿಧ ಮೂಲಗಳಿಂದ ಮಾಹಿತಿ ಕಲೆಹಾಕಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇದೇ ವ್ಯಕ್ತಿ ಈ ಹಿಂದೆ ಕೂಡ ಮಹಿಳೆಯರಿಗೆ ಇದೇ ರೀತಿಯ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ. ಮಹಿಳೆಯರ ಮೀಸಲು ಆಸನದಲ್ಲಿ ಕುಳಿತುಕೊಳ್ಳುವುದು, ಮುಂಭಾಗದ ಬಾಗಿಲಿನಿಂದ ಬಸ್ ಹತ್ತಿ ಜನಸಂದಣಿಯ ವೇಳೆ ಮಹಿಳೆಯರಿಗೆ ಅಸಭ್ಯವಾಗಿ ವರ್ತಿಸುವುದು ಆತನ ಚಾಳಿಯಾಗಿತ್ತು ಎನ್ನಲಾಗಿದೆ. ಸದ್ಯ ಆರೋಪಿಯ ಪತ್ತೆಗೆ ಸಂಪಿಗೆಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಜಕೀಯದಿಂದಲ್ಲ, ಚುನಾವಣೆಯಿಂದ ನಿವೃತ್ತಿ: ಸ್ಪರ್ಧಿಸದಿರಲು ಮೂರು ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

0

ಮಂಡ್ಯ: 2028ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ನಿರ್ಧಾರದ ಹಿಂದಿನ ಮೂರು ಪ್ರಮುಖ ಕಾರಣಗಳನ್ನು ಸ್ವತಃ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ. ರಾಜಕೀಯ ಕಲುಷಿತಗೊಂಡಿರುವುದು, ವಯಸ್ಸಿನ ಕಾರಣದಿಂದ ಹಿಂದಿನಂತೆ ಕೆಲಸ ಮಾಡಲು ಸಾಧ್ಯವಾಗದಿರುವುದು ಹಾಗೂ ಹಣದ ಪ್ರಭಾವ ಹೆಚ್ಚಾಗಿರುವ ಚುನಾವಣೆಗಳೇ ಈ ತೀರ್ಮಾನದ ಪ್ರಮುಖ ಕಾರಣಗಳೆಂದು ಅವರು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಸಿದ್ದರಾಮಯ್ಯ, ಬಳಿಕ ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿರ್ಧಾರದ ಕುರಿತು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

“2028ರ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಜನರ ಕಷ್ಟ–ಸುಖಗಳಿಗೆ ಧ್ವನಿಯಾಗಿರುತ್ತೇನೆ. ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೂ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ತೀರ್ಮಾನಿಸಿದ್ದೇನೆ. ಈ ಹಿಂದೆ ಜನರೇ ನಮ್ಮನ್ನು ದುಡ್ಡು ಖರ್ಚು ಮಾಡಿ ಗೆಲ್ಲಿಸುತ್ತಿದ್ದರು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ವಯಸ್ಸು ಕೂಡ ತಮ್ಮ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಹೇಳಿರುವ ಸಿದ್ದರಾಮಯ್ಯ, “ಈಗ ನನಗೆ 79 ವರ್ಷ. ಸರ್ಕಾರದ ಅವಧಿ ಮುಗಿಯುವ ವೇಳೆಗೆ 81–82 ವರ್ಷವಾಗಿರುತ್ತದೆ. ಆಗ ಹಿಂದಿನಂತೆ ಆರೋಗ್ಯ ಹಾಗೂ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. 2028ಕ್ಕೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳಲಿವೆ. 1978ರಲ್ಲಿ ತಾಲೂಕು ಮಂಡಳಿ ಸದಸ್ಯನಾಗಿ ಆರಂಭವಾದ ನನ್ನ ರಾಜಕೀಯ ಪಯಣದಲ್ಲಿ ಸೋಲು-ಗೆಲುವು ಎರಡನ್ನೂ ಕಂಡಿದ್ದೇನೆ. ಆದರೆ ನನ್ನ ಸಿದ್ಧಾಂತಗಳಿಗೆ ವಿರುದ್ಧವಾಗಿ ಎಂದಿಗೂ ನಡೆದುಕೊಂಡಿಲ್ಲ” ಎಂದು ಹೇಳಿದ್ದಾರೆ.

ಇಂದಿನ ರಾಜಕೀಯದಲ್ಲಿ ಹಣದ ಪ್ರಭಾವ ಹೆಚ್ಚಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ. “ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಭ್ಯರ್ಥಿಗಳೇ ಮತದಾರರಿಗೆ ಹಣ ನೀಡಬೇಕಾದ ಪರಿಸ್ಥಿತಿ ಬಂದಿದೆ. ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲಿಲ್ಲದಂತಾಗಿದೆ. ಇದೇ ಕಾರಣದಿಂದ ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಐದು ದಶಕಗಳ ಕಾಲ ರಾಜ್ಯದ ಜನರು ನನ್ನನ್ನು ತಮ್ಮ ಮನೆಯವನಂತೆ ಪ್ರೀತಿಸಿದ್ದಾರೆ. ಆ ಋಣ ತೀರಿಸಲು ಮುಂದಿನ ಜೀವನವನ್ನೂ ಜನಸೇವೆಗೆ ಮೀಸಲಿಡುತ್ತೇನೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ವಿವಾದಾತ್ಮಕ ಪೋಸ್ಟರ್‌: ಉಮರ್ ಖಾಲಿದ್ ಪರ ಘೋಷಣೆ ಪ್ರದರ್ಶಿಸಿದ ಯುವತಿ ವಿರುದ್ಧ ಕೇಸ್‌

ಬೆಂಗಳೂರು: 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಪರ ಪೋಸ್ಟರ್‌ ಪ್ರದರ್ಶಿಸಿದ್ದ ಯುವತಿ ವಿರುದ್ಧ ಬೆಂಗಳೂರು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ‘ಗಲಭೆ ಉದ್ದೇಶದಿಂದ ಪ್ರಚೋದನೆ’ ಆರೋಪದಡಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶುಕ್ರವಾರ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಯುವತಿ, ಉಮರ್ ಖಾಲಿದ್ ಹಾಗೂ ಶಾರ್ಜೀಲ್ ಇಮಾಮ್ ಪರ ಘೋಷಣೆಗಳಿದ್ದ ಪೋಸ್ಟರ್‌ಗಳನ್ನು ಪ್ರದರ್ಶಿಸಿದ್ದಳು. ಅಲ್ಲದೆ, ‘Ukhad Le BLR Police’ ಎಂಬ ಬರಹವಿದ್ದ ಪೋಸ್ಟರ್‌ ಹಿಡಿದು ಬೆಂಗಳೂರು ಪೊಲೀಸರ ವಿರುದ್ಧವೂ ಆಕ್ಷೇಪಾರ್ಹ ಸಂದೇಶ ಪ್ರದರ್ಶಿಸಿದ್ದಳು.

ಪೋಸ್ಟರ್‌ಗಳು ಪೊಲೀಸರ ಗಮನಕ್ಕೆ ಬಂದ ತಕ್ಷಣ ಪರಿಸ್ಥಿತಿ ಉದ್ವಿಗ್ನವಾಗದಂತೆ ಅಧಿಕಾರಿಗಳು ಅವುಗಳನ್ನು ವಶಪಡಿಸಿಕೊಂಡರು. ಸ್ಥಳದಲ್ಲಿದ್ದ ಇತರ ಪ್ರತಿಭಟನಾಕಾರರು ಹಾಗೂ ವಿದ್ಯಾರ್ಥಿಗಳು ಕೂಡ ಯುವತಿಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿ, ಆಕೆಯನ್ನು ಪ್ರತಿಭಟನಾ ಸ್ಥಳದಿಂದ ಹೊರ ಕಳುಹಿಸಿದರು.

ಘಟನೆಗೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೋಸ್ಟರ್‌ಗಳ ಉದ್ದೇಶ, ಹಿನ್ನೆಲೆ ಹಾಗೂ ಇತರೆ ಅಂಶಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.