Home Blog

ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ದಾರಿ ತಪ್ಪಿಸಲು ಯತ್ನ, 25 ಸಾವಿರ ರೂ. ದಂಡ – KKRTC ವಿರುದ್ಧ ಹೈಕೋರ್ಟ್ ಕಿಡಿ

ಬೆಂಗಳೂರು: ರಸ್ತೆ ಅಪಘಾತ ಪ್ರಕರಣದಲ್ಲಿ ತನ್ನದೇ ಸಿಬ್ಬಂದಿಯ ತಪ್ಪನ್ನು ಮುಚ್ಚಿಟ್ಟು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಲು ಯತ್ನಿಸಿದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್‌ಟಿಸಿ) ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿದೆ. ಜೊತೆಗೆ 25 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ.

ಅಪಘಾತಕ್ಕೆ ಸಂಬಂಧಿಸಿದಂತೆ ನಿಗಮವು ಈಗಾಗಲೇ ತನ್ನ ಸಿಬ್ಬಂದಿಯ ವಿರುದ್ಧ ಆಂತರಿಕ ಶಿಸ್ತು ಕ್ರಮ ಕೈಗೊಂಡಿದ್ದರೂ, ನ್ಯಾಯಾಲಯದ ಮುಂದೆ ಮೃತ ವ್ಯಕ್ತಿಯದ್ದೇ ತಪ್ಪು ಎಂದು ವಾದ ಮಂಡಿಸಿರುವುದು ದ್ವಂದ್ವ ನಿಲುವು ಎಂದು ಹೈಕೋರ್ಟ್‌ ಕಿಡಿಕಾರಿದೆ. ಇದು ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗವಾಗಿದ್ದು, ನ್ಯಾಯಾಲಯದ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ನಡೆ ಎಂದು ಪೀಠ ಸ್ಪಷ್ಟಪಡಿಸಿದೆ.

ಅಪಘಾತ ಪರಿಹಾರ ನ್ಯಾಯಾಧೀಕರಣದ ಆದೇಶವನ್ನು ಪ್ರಶ್ನಿಸಿ ಕೆಕೆಆರ್‌ಟಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಹಾಗೂ ನ್ಯಾಯಮೂರ್ತಿ ಡಾ. ಚಿಲ್ಲಕೂರು ಸುಮಲತಾ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ವಿಧಿಸಿರುವ 25 ಸಾವಿರ ರೂಪಾಯಿ ದಂಡವನ್ನು ಪ್ರಕರಣಕ್ಕೆ ಕಾರಣರಾದ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಎಂದು ಕೂಡ ನ್ಯಾಯಾಲಯ ಸೂಚಿಸಿದೆ.

ವಿಚಾರಣೆ ವೇಳೆ ನ್ಯಾಯಪೀಠ, ಅಪಘಾತದ ಬಳಿಕ ನಿಗಮವು ಗುತ್ತಿಗೆ ಆಧಾರಿತ ಚಾಲಕನನ್ನು ಸೇವೆಯಿಂದ ವಜಾಗೊಳಿಸಿರುವುದನ್ನೂ, ನಿರ್ವಾಹಕನ ವಾರ್ಷಿಕ ವೇತನ ಬಡ್ತಿಯನ್ನು ಕಡಿತಗೊಳಿಸಿರುವುದನ್ನೂ ಉಲ್ಲೇಖಿಸಿತು. ಒಂದು ಕಡೆ ಸಿಬ್ಬಂದಿಯ ತಪ್ಪು ಒಪ್ಪಿಕೊಂಡು ಶಿಕ್ಷೆ ನೀಡಿರುವ ನಿಗಮ, ಮತ್ತೊಂದೆಡೆ ಮೃತರದ್ದೇ ತಪ್ಪು ಎಂದು ವಾದಿಸುವುದು ಕಾನೂನುಬಾಹಿರ ದ್ವಂದ್ವ ನಿಲುವು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಇದೇ ವೇಳೆ, ನ್ಯಾಯಾಲಯಕ್ಕೆ ಬರುವ ಯಾವುದೇ ದಾವೆದಾರರು ಶುದ್ಧ ಹಸ್ತದಿಂದ ಬರಬೇಕು. ತಪ್ಪು ಮಾಹಿತಿ ನೀಡಿ ನ್ಯಾಯಾಂಗ ಪ್ರಕ್ರಿಯೆಯನ್ನು ದಾರಿ ತಪ್ಪಿಸಲು ಯತ್ನಿಸುವವರು ಯಾವುದೇ ಪರಿಹಾರಕ್ಕೆ ಅರ್ಹರಾಗುವುದಿಲ್ಲ ಎಂದು ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಅಲ್ಲದೆ, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಲ್ಲಿ ಆಂತರಿಕ ಶಿಸ್ತು ಕ್ರಮದ ವಿವರಗಳನ್ನು ನ್ಯಾಯಾಲಯದ ಮುಂದೆ ಕಡ್ಡಾಯವಾಗಿ ಬಹಿರಂಗಪಡಿಸಬೇಕು. ಇದೇ ರೀತಿಯ ದ್ವಂದ್ವ ನಿಲುವುಗಳನ್ನು ತಡೆಯಲು ಪ್ರತ್ಯೇಕ ಪರಿಶೀಲನಾ ಸಮಿತಿ ರಚಿಸಿ ಸೂಕ್ತ ಸುತ್ತೋಲೆ ಹೊರಡಿಸಬೇಕು ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ.

ಪ್ರಕರಣದ ಹಿನ್ನೆಲೆ ಕುರಿತು ಹೇಳುವುದಾದರೆ, ವಿನೋದ್ ಕುಮಾರ್ ಮಾನೆ ಎಂಬವರು ಬಸ್ ಅಪಘಾತದಲ್ಲಿ ಮೃತಪಟ್ಟಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣವು, ಮೃತರ ಕುಟುಂಬಕ್ಕೆ 1 ಕೋಟಿ 10 ಲಕ್ಷ 36 ಸಾವಿರ 200 ರೂಪಾಯಿ ಪರಿಹಾರವನ್ನು ಶೇ.6 ಬಡ್ಡಿದರದೊಂದಿಗೆ ನೀಡುವಂತೆ 2025ರ ಮಾರ್ಚ್‌ 14ರಂದು ಕೆಕೆಆರ್‌ಟಿಸಿಗೆ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ನಿಗಮವು ಹೈಕೋರ್ಟ್‌ ಮೆಟ್ಟಿಲೇರಿತ್ತು.

ವಿಚಾರಣೆ ವೇಳೆ ಕೆಕೆಆರ್‌ಟಿಸಿ ಪರ ವಕೀಲರು, ಮೃತ ವ್ಯಕ್ತಿಯೇ ಬಸ್‌ ಬಾಗಿಲಲ್ಲಿ ನಿಂತು ನಿರ್ಲಕ್ಷ್ಯದಿಂದ ಪ್ರಯಾಣಿಸಿದ್ದರಿಂದ ಘಟನೆ ನಡೆದಿದೆ ಎಂದು ವಾದ ಮಂಡಿಸಿದ್ದರು. ಆದರೆ, ಚಾಲಕ ಮತ್ತು ನಿರ್ವಾಹಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮದ ಬಗ್ಗೆ ನ್ಯಾಯಾಲಯ ಪ್ರಶ್ನಿಸಿದಾಗ, ಚಾಲಕನನ್ನು ಸೇವೆಯಿಂದ ವಜಾಗೊಳಿಸಿರುವುದನ್ನೂ, ನಿರ್ವಾಹಕನ ವೇತನ ಬಡ್ತಿ ಕಡಿತಗೊಳಿಸಿರುವುದನ್ನೂ ನಿಗಮ ಪರ ವಕೀಲರು ಒಪ್ಪಿಕೊಂಡಿದ್ದರು.

 

ನವಿಲುಗಳ ಸರಣಿ ಸಾವಿನಿಂದ ಬೆಚ್ಚಿಬಿದ್ದ ತುಮಕೂರು; H5N1 ಭೀತಿ ನಡುವೆ ಜಿಲ್ಲೆಯಲ್ಲಿ ಕಟ್ಟೆಚ್ಚರ

0

ತುಮಕೂರು: ಜಿಲ್ಲೆಯಲ್ಲಿ ನವಿಲುಗಳ ಸರಣಿ ಸಾವು ಹಕ್ಕಿ ಜ್ವರದ ಭೀತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಕಳೆದ ಒಂದು ತಿಂಗಳಲ್ಲಿ 54ಕ್ಕೂ ಅಧಿಕ ನವಿಲುಗಳು ಸಾವನ್ನಪ್ಪಿರುವುದು ಪರಿಸರ ಮತ್ತು ಆರೋಗ್ಯ ಇಲಾಖೆಗಳನ್ನೇ ಬೆಚ್ಚಿಬೀಳಿಸಿದೆ. ಈಗಾಗಲೇ ಕೆಲ ನವಿಲುಗಳಲ್ಲಿ H5N1 ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ತುಮಕೂರು ತಾಲೂಕಿನ ವಿವಿಧ ಭಾಗಗಳಲ್ಲಿ ಆರಂಭವಾದ ನವಿಲುಗಳ ಸಾವು ಇದೀಗ ಕುಣಿಗಲ್ ವ್ಯಾಪ್ತಿಗೂ ವಿಸ್ತರಿಸಿದೆ. ಕಾಡು ಪ್ರದೇಶಗಳಲ್ಲಿ ನಿರಂತರವಾಗಿ ನವಿಲಿನ ಕಳೆಬರಗಳು ಪತ್ತೆಯಾಗುತ್ತಿದ್ದು, ಸೋಂಕು ವೇಗವಾಗಿ ಹರಡುತ್ತಿರುವ ಶಂಕೆ ವ್ಯಕ್ತವಾಗಿದೆ. ಸಾವನ್ನಪ್ಪಿದ ಪಕ್ಷಿಗಳ ಮಾದರಿಗಳನ್ನು ಲ್ಯಾಬ್‌ಗೆ ರವಾನಿಸಲಾಗಿದ್ದು, ಅಧಿಕಾರಿಗಳು ವರದಿಗಾಗಿ ಕಾದಿದ್ದಾರೆ.

ಜಿಲ್ಲಾ ಪಶುಸಂಗೋಪನಾ ಇಲಾಖೆ ಹೈ ಅಲರ್ಟ್ ಘೋಷಿಸಿ, ಗ್ರಾಮೀಣ ಭಾಗಗಳಲ್ಲಿ ನಿಗಾವ್ಯವಸ್ಥೆ ಬಿಗಿಗೊಳಿಸಿದೆ. ಯಾವುದೇ ಪಕ್ಷಿ ಅಥವಾ ಕಾಡುಪ್ರಾಣಿಗಳ ಅಸಹಜ ಸಾವು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕೋಳಿ ಫಾರಂಗಳು, ಜಲಾಶಯ ಪ್ರದೇಶಗಳು ಹಾಗೂ ಕಾಡು ವಲಯಗಳಲ್ಲಿ ವಿಶೇಷ ತಪಾಸಣೆ ನಡೆಸಲಾಗುತ್ತಿದೆ.

ಇದರ ಮಧ್ಯೆ ಬೊಮ್ಮನಹಳ್ಳಿ ಕೋಳಿ ಫಾರಂನಲ್ಲಿ ಸಾವನ್ನಪ್ಪಿದ್ದ 30ಕ್ಕೂ ಹೆಚ್ಚು ಕೋಳಿಗಳ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆಯಾಗದಿದ್ದರೂ, ನವಿಲುಗಳ ನಿರಂತರ ಸಾವು ಜಿಲ್ಲೆಯಲ್ಲಿ ಭೀತಿಯ ವಾತಾವರಣ ನಿರ್ಮಿಸಿದೆ.

ಅಕ್ರಮ ಅಕ್ಕಿ ಲಾರಿಗಳಿಂದ ಲಕ್ಷ ಲಕ್ಷ ವಸೂಲಿ ಮಾಡಿದ ಎಸ್ಪಿ ಗನ್‌ಮ್ಯಾನ್ ಅರೆಸ್ಟ್

0

ಬಳ್ಳಾರಿ: ಪೊಲೀಸ್ ಇಲಾಖೆಯ ಪ್ರತಿಷ್ಠೆಗೆ ಧಕ್ಕೆ ತರುವಂತಹ ಪ್ರಕರಣವೊಂದು ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದ್ದು, ಜಿಲ್ಲಾ ಎಸ್ಪಿ ಗನ್‌ಮ್ಯಾನ್ ದೇವರಾಜ್ ಅಕ್ರಮ ಪಡಿತರ ಅಕ್ಕಿ ಸಾಗಾಣೆದಾರರಿಂದ ಹಣ ಸುಲಿಗೆ ಮಾಡಿದ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ. ಮೋಕಾ ಪೊಲೀಸರು ದೇವರಾಜ್ ಮತ್ತು ಆತನ ಸಹಚರರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಆರೋಪಿಗಳ ತಂಡ ಮಡಕೇರಿಯಿಂದ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದ ಎರಡು ಅಕ್ಕಿ ಲಾರಿಗಳನ್ನು ಅಡ್ಡಗಟ್ಟಿ, ತಾವು ‘ಎಸ್ಪಿ ಸ್ಕ್ವಾಡ್’ ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದರು. ಬಳಿಕ ಲಾರಿಗಳನ್ನು ಜಪ್ತಿ ಮಾಡಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿ ಐದು ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಕೊನೆಗೆ ಮೂರು ಲಕ್ಷ ರೂಪಾಯಿ ಪಡೆದು ವಾಹನಗಳನ್ನು ಬಿಟ್ಟುಕೊಟ್ಟಿದ್ದಾರೆ ಎಂದು ದೂರುದಾರ ಶರಭಯ್ಯ ಆರೋಪಿಸಿದ್ದಾರೆ.

ಮೋಕಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದಲ್ಲಿ ತನಿಖೆ ಕೈಗೊಂಡ ಪೊಲೀಸರು, ಗನ್‌ಮ್ಯಾನ್ ದೇವರಾಜ್ ನೇರವಾಗಿ ಹಣ ವಸೂಲಿಯಲ್ಲಿ ಭಾಗಿಯಾಗಿರುವುದನ್ನು ಪತ್ತೆಹಚ್ಚಿದ್ದಾರೆ. ಪ್ರಕರಣ ಗಂಭೀರವಾಗುತ್ತಿದ್ದಂತೆ ಜಿಲ್ಲಾ ಎಸ್ಪಿ ಸುಮನ್ ಡಿ. ಪನ್ನೇಕರ್ ತಕ್ಷಣ ಕ್ರಮ ಕೈಗೊಂಡು ಆರೋಪಿಗಳ ಬಂಧನಕ್ಕೆ ಸೂಚನೆ ನೀಡಿದ್ದಾರೆ.

ಸದ್ಯ ಆರೋಪಿಗಳ ವಿರುದ್ಧ ಸುಲಿಗೆ, ಬೆದರಿಕೆ ಹಾಗೂ ಅಧಿಕಾರದ ದುರುಪಯೋಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಈ ಅಕ್ರಮ ವಸೂಲಿಯಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ವಿಸ್ತರಿಸಿದ್ದಾರೆ.

ಹಲ್ಲು ಕಡಿಯುವ ಅಭ್ಯಾಸದಿಂದ ದವಡೆ ನೋವು ಬರುತ್ತಿದೆಯೇ? ಇಲ್ಲಿದೆ ಅಸಲಿ ಕಾರಣ

ಬೆಳಿಗ್ಗೆ ಎದ್ದ ತಕ್ಷಣ ದವಡೆ ನೋವು ಅಥವಾ ಹಲ್ಲು ನೋವು ಅನುಭವಿಸುವವರ ಸಂಖ್ಯೆ ಇತ್ತೀಚೆಗೆ ಹೆಚ್ಚುತ್ತಿದೆ. ತಜ್ಞರ ಪ್ರಕಾರ, ಇದಕ್ಕೆ ಪ್ರಮುಖ ಕಾರಣ ರಾತ್ರಿ ನಿದ್ರೆಯಲ್ಲಿರುವಾಗ ಅರಿವಿಲ್ಲದೆ ಹಲ್ಲು ಕಡಿಯುವ ಅಭ್ಯಾಸವಾಗಿದೆ. ಜಗತ್ತಿನಾದ್ಯಂತ ಸುಮಾರು 10ರಿಂದ 36 ಶೇಕಡಾ ಜನರು ಒತ್ತಡ ಮತ್ತು ಮಾನಸಿಕ ಚಿಂತೆಯಿಂದ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎಂದು ಅಧ್ಯಯನಗಳು ತಿಳಿಸಿವೆ.

ರಾತ್ರಿ ಮಲಗುವ ವೇಳೆ ಒತ್ತಡ ಅಥವಾ ಅತಿಯಾದ ಆಲೋಚನೆಗಳಿಂದ ಅನೇಕರು ತಿಳಿಯದೆ ಹಲ್ಲುಗಳನ್ನು ಬಿಗಿಯಾಗಿ ಒತ್ತುತ್ತಾರೆ ಅಥವಾ ಕಡಿಯುತ್ತಾರೆ. ಈ ನಿರಂತರ ಘರ್ಷಣೆಯಿಂದ ಹಲ್ಲಿನ ಮೇಲಿನ ದಂತಕವಚ ಪದರ ಹಾನಿಗೊಳಗಾಗುತ್ತದೆ. ಪರಿಣಾಮವಾಗಿ ಹಲ್ಲುಗಳು ನಿಧಾನವಾಗಿ ದುರ್ಬಲಗೊಳ್ಳುವ ಸಾಧ್ಯತೆ ಇರುತ್ತದೆ.

ಬೆಳಿಗ್ಗೆ ಎದ್ದಾಗ ದವಡೆಯಲ್ಲಿ ಬಿಗಿತ, ಹಲ್ಲು ನೋವು ಅಥವಾ ದವಡೆ ನೋವು ಕಾಣಿಸಿಕೊಳ್ಳುವುದು ಈ ಸಮಸ್ಯೆಯ ಪ್ರಮುಖ ಲಕ್ಷಣಗಳಾಗಿವೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ದರೆ ಹಲ್ಲು ಸವೆತ, ಒಸಡು ಸಮಸ್ಯೆಗಳು ಸೇರಿದಂತೆ ಹಲವು ತೊಂದರೆಗಳು ಉಂಟಾಗಬಹುದು ಎಂದು ದಂತ ತಜ್ಞರು ಎಚ್ಚರಿಸಿದ್ದಾರೆ.

ಈ ಸಮಸ್ಯೆಯಿಂದ ಹಲ್ಲುಗಳನ್ನು ರಕ್ಷಿಸಲು ‘ಮೌತ್ ಗಾರ್ಡ್’ ಬಳಕೆ ಪರಿಣಾಮಕಾರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಮಲಗುವ ಮುನ್ನ ಮೌತ್ ಗಾರ್ಡ್ ಧರಿಸುವುದರಿಂದ ಮೇಲಿನ ಮತ್ತು ಕೆಳಗಿನ ಹಲ್ಲುಗಳು ನೇರವಾಗಿ ತಾಕುವುದನ್ನು ತಡೆಯಬಹುದು. ಇದರಿಂದ ಹಲ್ಲುಗಳ ನಡುವಿನ ಘರ್ಷಣೆ ಕಡಿಮೆಯಾಗಿ, ಹಲ್ಲು ಸವೆತ ತಡೆಯಲು ಸಹಕಾರಿಯಾಗುತ್ತದೆ.

ತಜ್ಞರ ಪ್ರಕಾರ, ಒತ್ತಡವನ್ನು ನಿಯಂತ್ರಿಸುವುದೇ ಈ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರವಾಗಿದೆ. ಪ್ರತಿದಿನ ನಿಯಮಿತ ವ್ಯಾಯಾಮ ಮಾಡುವುದು, ಧ್ಯಾನ ಹಾಗೂ ಆಳವಾದ ಉಸಿರಾಟದ ವ್ಯಾಯಾಮಗಳನ್ನು ಅಭ್ಯಾಸ ಮಾಡುವುದು ಮನಸ್ಸನ್ನು ಶಾಂತವಾಗಿಡಲು ಸಹಾಯ ಮಾಡುತ್ತದೆ.

ಇದಲ್ಲದೆ, ಮಲಗುವ ಮೊದಲು ಹಾಸ್ಯ ಕಾರ್ಯಕ್ರಮಗಳು ಅಥವಾ ಮನರಂಜನೆಯ ಚಲನಚಿತ್ರಗಳನ್ನು ವೀಕ್ಷಿಸುವುದು ಒತ್ತಡ ಕಡಿಮೆ ಮಾಡಲು ಸಹಕಾರಿ ಎಂದು ವೈದ್ಯರು ತಿಳಿಸಿದ್ದಾರೆ.

ಆರೋಗ್ಯಕರ ಹಲ್ಲುಗಳು ಕೇವಲ ಬಾಯಿಯ ಆರೋಗ್ಯಕ್ಕಷ್ಟೇ ಅಲ್ಲ, ದೇಹದ ಒಟ್ಟಾರೆ ಆರೋಗ್ಯಕ್ಕೂ ಅಗತ್ಯವಾಗಿರುವುದರಿಂದ ಒತ್ತಡವನ್ನು ನಿಯಂತ್ರಿಸಿ ಸರಿಯಾದ ಮುನ್ನೆಚ್ಚರಿಕೆಗಳನ್ನು ಪಾಲಿಸುವುದು ಮುಖ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಅನಿಲ್ ಕುಂಬ್ಳೆ ಸರ್ಕಲ್ ಬಳಿ ಭೀಕರ ಅಪಘಾತ: ಹಿಟ್ ಅಂಡ್ ರನ್ ಗೆ ಪಾದಚಾರಿ ಬಲಿ!

ಬೆಂಗಳೂರು: ನಗರದ ಎಂಜಿ ರಸ್ತೆ ವ್ಯಾಪ್ತಿಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಇಂದು ಮುಂಜಾನೆ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮುಂಜಾನೆ ಸುಮಾರು 4.30ರ ವೇಳೆಗೆ ಪಾದಚಾರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಅಪಘಾತದ ತೀವ್ರತೆಗೆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಮೃತರ ಗುರುತು ಪತ್ತೆಹಚ್ಚುವ ಕಾರ್ಯವೂ ಮುಂದುವರಿದಿದೆ.

ಈ ಸಂಬಂಧ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದ ವಾಹನ ಹಾಗೂ ಚಾಲಕನ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು-ಮಂಗಳೂರು ಏರ್ ಕ್ವಾಲಿಟಿಯಲ್ಲಿ ಸುಧಾರಣೆ: AQI ಇಳಿದರೂ ಆರೋಗ್ಯದ ಮೇಲೆ ಅಪಾಯ ಇನ್ನೂ ಮುಂದುವರಿಕೆ

ಬೆಂಗಳೂರು: ರಾಜ್ಯದ ಪ್ರಮುಖ ನಗರಗಳ ವಾಯು ಗುಣಮಟ್ಟದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದ್ದು, ವಿಶೇಷವಾಗಿ ಬೆಂಗಳೂರು ಮತ್ತು ಮಂಗಳೂರು ನಗರಗಳ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಕಳೆದ ಕೆಲವು ವಾರಗಳಿಗೆ ಹೋಲಿಸಿದರೆ ಉತ್ತಮ ಮಟ್ಟಕ್ಕೆ ಇಳಿದಿದೆ. ಆದರೂ ವಿಶ್ವ ಆರೋಗ್ಯ ಸಂಸ್ಥೆ (WHO) ಮಾನದಂಡಗಳ ಪ್ರಕಾರ ಈ ಮಟ್ಟದ ವಾಯು ಗುಣಮಟ್ಟವೂ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಪ್ರಸ್ತುತ ಬೆಂಗಳೂರಿನ AQI 66 ದಾಖಲಾಗಿದ್ದು, ತಾಂತ್ರಿಕವಾಗಿ ‘ಮಧ್ಯಮ’ ಅಥವಾ ‘ಸ್ವೀಕಾರಾರ್ಹ’ ಮಟ್ಟದಲ್ಲಿದೆ. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ AQI 200ರ ಗಡಿ ತಲುಪುವ ಮೂಲಕ ಆತಂಕ ಸೃಷ್ಟಿಸಿತ್ತು. ಆದರೆ ಇತ್ತೀಚಿನ ಮಳೆಯ ಪರಿಣಾಮ ಮತ್ತು ಗಾಳಿಯ ಚಲನವಲನದಿಂದ ನಗರದಲ್ಲಿ ವಾಯು ಗುಣಮಟ್ಟ ಸುಧಾರಿಸಿದ್ದು, ಇಂದು AQI 86ಕ್ಕೆ ಇಳಿದಿದೆ.

ರಾಜ್ಯದ ಇತರೆ ನಗರಗಳಲ್ಲೂ ವಾಯು ಗುಣಮಟ್ಟ ಸಾಧಾರಣ ಮಟ್ಟದಲ್ಲಿದ್ದು, ಮೈಸೂರು 74, ಬೆಳಗಾವಿ 68, ಕಲಬುರಗಿ 64, ಶಿವಮೊಗ್ಗ 66, ಬಳ್ಳಾರಿ 86, ಹುಬ್ಬಳ್ಳಿ 87, ಉಡುಪಿ 64 ಹಾಗೂ ವಿಜಯಪುರ 67 AQI ದಾಖಲಿಸಿವೆ.

ತಜ್ಞರ ಪ್ರಕಾರ AQI 0 ರಿಂದ 50ರ ನಡುವೆ ಇದ್ದರೆ ಮಾತ್ರ ಉತ್ತಮ ವಾಯು ಗುಣಮಟ್ಟ ಎಂದು ಪರಿಗಣಿಸಲಾಗುತ್ತದೆ. 50ರಿಂದ 100ರ ಮಟ್ಟ ‘ಮಧ್ಯಮ’ ಎಂದು ವರ್ಗೀಕರಿಸಲ್ಪಟ್ಟರೂ, ಉಸಿರಾಟ ಸಮಸ್ಯೆ ಹೊಂದಿರುವವರು ಮತ್ತು ಮಕ್ಕಳಿಗೆ ದೀರ್ಘಾವಧಿಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ನಗರಗಳಲ್ಲಿ ವಾಹನಗಳ ದಟ್ಟಣೆ, ಕೈಗಾರಿಕಾ ಮಾಲಿನ್ಯ ಮತ್ತು ಧೂಳು ಪ್ರಮಾಣ ಕಡಿಮೆಯಾಗದ ಹೊರತು ವಾಯು ಗುಣಮಟ್ಟದಲ್ಲಿ ಶಾಶ್ವತ ಸುಧಾರಣೆ ಸಾಧ್ಯವಿಲ್ಲ ಎಂದು ಪರಿಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮೂರು ದಿನ ಕರ್ನಾಟಕದಲ್ಲಿ ಮಳೆ ಅಬ್ಬರ: ಕರಾವಳಿ-ಮಲೆನಾಡಿಗೆ ಐಎಂಡಿ ಅಲರ್ಟ್, ಬೆಂಗಳೂರಿಗೂ ಗುಡುಗು ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬಿಸಿಲಿನ ನಡುವೆಯೇ ಜನರಿಗೆ ಕೊಂಚ ನೆಮ್ಮದಿ ನೀಡುವಂತೆ ಭಾರತೀಯ ಹವಾಮಾನ ಇಲಾಖೆ ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಕೆಲವು ಭಾಗಗಳಲ್ಲಿ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇದೆ.

ಐಎಂಡಿ ವರದಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9ರಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಮಳೆಯೊಂದಿಗೆ ಗಂಟೆಗೆ 30ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ.

ಆದರೆ ಮಳೆಯ ನಡುವೆಯೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನದಲ್ಲಿ ಹೆಚ್ಚಿನ ಇಳಿಕೆಯಾಗುವ ಲಕ್ಷಣಗಳಿಲ್ಲ. ಕೆಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತುರ್ತು ಆರೋಗ್ಯ ಸೇವೆಗೆ ಕರ್ನಾಟಕದಲ್ಲಿ ಡಿಜಿಟಲ್ ಕ್ರಾಂತಿ: 24×7 HEOC ಕೇಂದ್ರಕ್ಕೆ ದಿನೇಶ್ ಗುಂಡೂರಾವ್ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗಳ ನಿರ್ವಹಣೆಗೆ ಹೊಸ ಅಧ್ಯಾಯ ಆರಂಭವಾಗಿದ್ದು, ಆರೋಗ್ಯ ಇಲಾಖೆ ಅತ್ಯಾಧುನಿಕ ‘ಹೆಲ್ತ್ ಎಮರ್ಜೆನ್ಸಿ ಆಪರೇಷನ್ ಸೆಂಟರ್’ (HEOC) ಅನ್ನು ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರಂಭಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ನೂತನ ಕೇಂದ್ರಕ್ಕೆ ಚಾಲನೆ ನೀಡಿದ್ದು, ಆರೋಗ್ಯ, ಪೊಲೀಸ್, ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ಸೇವೆಗಳನ್ನು ಒಂದೇ ವೇದಿಕೆಗೆ ತರಲಾಗಿದೆ.

WHO ಮಾರ್ಗಸೂಚಿ ಮತ್ತು ‘ಪ್ರಧಾನಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್’ ಅಡಿಯಲ್ಲಿ ನಿರ್ಮಾಣವಾಗಿರುವ ಈ ಕೇಂದ್ರವು 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಸಾಂಕ್ರಾಮಿಕ ರೋಗ ಹರಡುವಿಕೆ, ಪ್ರಕೃತಿ ವಿಕೋಪ, ಅಗ್ನಿ ಅವಘಡ ಸೇರಿದಂತೆ ತುರ್ತು ಪರಿಸ್ಥಿತಿಗಳಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಕೇಂದ್ರಗಳೊಂದಿಗೆ ನೇರ ಸಂಪರ್ಕ ಸಾಧಿಸಿ ಕ್ಷಿಪ್ರ ನಿರ್ಧಾರ ಕೈಗೊಳ್ಳಲು ಈ ವ್ಯವಸ್ಥೆ ನೆರವಾಗಲಿದೆ.

ಇದರಿಂದ ಸಾರ್ವಜನಿಕರು ಬೇರೆ ಬೇರೆ ಸಹಾಯವಾಣಿಗಳಿಗೆ ಕರೆ ಮಾಡುವ ಅವಶ್ಯಕತೆ ಕಡಿಮೆಯಾಗಲಿದ್ದು, ಒಂದೇ ಕೇಂದ್ರದ ಮೂಲಕ ತುರ್ತು ಸೇವೆಗಳನ್ನು ಪಡೆಯಬಹುದಾಗಿದೆ. ಆಂಬ್ಯುಲೆನ್ಸ್ ಸೇವೆಗಳನ್ನೂ HEOC ಜಾಲಕ್ಕೆ ಸಂಪರ್ಕಿಸಲಾಗಿದ್ದು, ರಿಯಲ್ ಟೈಂ ಮಾಹಿತಿ ವಿನಿಮಯ ಸಾಧ್ಯವಾಗಲಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೋವಿಡ್ ಅವಧಿಯಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆಯಲ್ಲಿ ಹಲವು ಸವಾಲುಗಳು ಎದುರಾಗಿದ್ದವು. ಭವಿಷ್ಯದಲ್ಲಿ ಅಂತಹ ಪರಿಸ್ಥಿತಿಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ವಿಶ್ವ ಮಟ್ಟದ ಮಾದರಿಯ ವ್ಯವಸ್ಥೆ ರಾಜ್ಯದಲ್ಲಿ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ. ಆಧುನಿಕ ತಂತ್ರಜ್ಞಾನ ಮತ್ತು ವಿವಿಧ ಇಲಾಖೆಗಳ ಸಮನ್ವಯದ ಮೂಲಕ ಜನರಿಗೆ ವೇಗವಾದ ಸೇವೆ ಒದಗಿಸುವುದು ಕೇಂದ್ರದ ಪ್ರಮುಖ ಉದ್ದೇಶ ಎಂದು ಸಚಿವರು ಹೇಳಿದ್ದಾರೆ.

ಹಣಕ್ಕಾಗಿ ‘ಅಪಘಾತ’ದ ಸ್ಕೆಚ್: ಬೆಂಗಳೂರಿನಲ್ಲಿ ಒಂಟಿ ಮಹಿಳೆ ಮೇಲೆ ಬೈಕ್ ಹರಿಸಿ ಕೊಲೆ, ರಕ್ಷಕರಂತೆ ನಟಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ರಾಜಧಾನಿಯಲ್ಲಿ ಹಣ ಮತ್ತು ಚಿನ್ನಾಭರಣ ದೋಚುವ ಉದ್ದೇಶದಿಂದ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ ಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕುರುಬರಹಳ್ಳಿ ಪೈಪ್‌ಲೈನ್ ರಸ್ತೆಯಲ್ಲಿ ಏಪ್ರಿಲ್ 21ರಂದು ನಡೆದಿದ್ದ ಘಟನೆ ಆರಂಭದಲ್ಲಿ ಸಾಮಾನ್ಯ ರಸ್ತೆ ಅಪಘಾತ ಎಂದು ಕಾಣಿಸಿಕೊಂಡಿತ್ತು. ಆದರೆ ಪೊಲೀಸರ ತೀವ್ರ ತನಿಖೆಯಲ್ಲಿ ಇದು ಪೂರ್ವಯೋಜಿತ ಕೊಲೆ ಮತ್ತು ಸುಲಿಗೆ ಯತ್ನ ಎಂಬುದು ಬಹಿರಂಗವಾಗಿದೆ.

ವಿಜಯಲಕ್ಷ್ಮಿ ಎಂಬ ಮಹಿಳೆಯ ಪರಿಚಯ ಹೊಂದಿದ್ದ ಆರೋಪಿ ಚೇತನ್, ಆಕೆಯ ಬಳಿ ಹಣ ಮತ್ತು ಚಿನ್ನಾಭರಣ ಇರುವ ಮಾಹಿತಿ ಆಧರಿಸಿ ಸ್ನೇಹಿತರ ಜೊತೆ ಸೇರಿ ಸಂಚು ರೂಪಿಸಿದ್ದ. ಯೋಜನೆಯಂತೆ ಮಹಿಳೆ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ರಾಕೇಶ್ ಬೈಕ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಅಪಘಾತ ನಡೆದ ತಕ್ಷಣವೇ ಮತ್ತೊಂದು ಆಟೋದಲ್ಲಿ ಬಂದ ಆರೋಪಿಗಳು ರಕ್ಷಕರಂತೆ ನಟಿಸಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ನಡುವೆ ಮಂಜುನಾಥ್ ಎಂಬ ಆರೋಪಿ ಮಹಿಳೆಯ ಪರ್ಸ್‌ನಲ್ಲಿದ್ದ ಮನೆ ಕೀಲಿಯನ್ನು ಕದ್ದು, ನೇರವಾಗಿ ಮನೆಗೆ ತೆರಳಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಆದರೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರಿಂದ ಆಧಾರ್ ಕಾರ್ಡ್ ಬೇಕು ಎಂದು ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಮತ್ತೊಂದೆಡೆ ರಾಕೇಶ್ ಸಂಚಾರ ಪೊಲೀಸ್ ಠಾಣೆಗೆ ತೆರಳಿ, ‘ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದರಿಂದ ಮಹಿಳೆಯನ್ನು ನಾನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದೇನೆ’ ಎಂದು ಸುಳ್ಳು ದೂರು ನೀಡಿ ಪೊಲೀಸರ ದಿಕ್ಕು ತಪ್ಪಿಸಲು ಯತ್ನಿಸಿದ್ದಾನೆ.

ಆದರೆ ಮಹಿಳೆಯ ಮನೆಯಲ್ಲಿ ನಡೆದ ಕಳ್ಳತನ ಯತ್ನದ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಪ್ರಕರಣ ಭೇದಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ವಿಜಯಲಕ್ಷ್ಮಿ ಮೃತಪಟ್ಟಿದ್ದು, ಪ್ರಕರಣ ಕೊಲೆ ತಿರುವು ಪಡೆದುಕೊಂಡಿದೆ.

ಪ್ರಕರಣ ಸಂಬಂಧ ರಾಕೇಶ್, ಚೇತನ್, ಪ್ರದೀಪ್, ಯೋಹಾನ್ ಸೇರಿ ಐವರನ್ನು ಬಂಧಿಸಲಾಗಿದೆ. ಇದೇ ವೇಳೆ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಮಂಜುನಾಥ್ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಸದ್ಯ ಆರೋಪಿಗಳ ವಿರುದ್ಧ ಕೊಲೆ, ಸಂಚು ಮತ್ತು ಸುಲಿಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಸ್ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ ; ಮಡಿಕೇರಿಯಲ್ಲಿ ತಪ್ಪಿದ ಭಾರೀ ದುರಂತ

0

ಮಡಿಕೇರಿ: ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ ಚಾಲಕನಿಗೆ ಚಾಲನೆ ವೇಳೆಯೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಮಡಿಕೇರಿ ತಾಲೂಕಿನ ತಾಳತ್‌ಮನೆ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ದಿಣ್ಣೆಗೆ ಡಿಕ್ಕಿ ಹೊಡೆದಿದ್ದರೂ, ಅದೃಷ್ಟವಶಾತ್ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

‘ಪೂರ್ಣಿಮಾ ಟ್ರಾವೆಲ್ಸ್’ಗೆ ಸೇರಿದ ಬಸ್ ಚಲಿಸುತ್ತಿದ್ದ ವೇಳೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಪರಿಣಾಮ ಬಸ್ ಏಕಾಏಕಿ ನಿಯಂತ್ರಣ ಕಳೆದುಕೊಂಡಿದೆ. ಆದರೆ ರಸ್ತೆ ಬದಿಯ ದಿಣ್ಣೆಗೆ ಗುದ್ದಿ ನಿಂತಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೊಂದೆಡೆ ತಮಿಳುನಾಡು ರಾಜಕೀಯದಲ್ಲಿ ಸರ್ಕಾರ ರಚನೆಗೆ ಭಾರೀ ಕಸರತ್ತು ನಡೆಯುತ್ತಿದೆ. ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 107 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಕಾಂಗ್ರೆಸ್‌ನ 5 ಶಾಸಕರ ಬೆಂಬಲದೊಂದಿಗೆ ಒಟ್ಟು 112 ಸಂಖ್ಯಾಬಲ ಹೊಂದಿದೆ. ಸರ್ಕಾರ ರಚನೆಗೆ ಅಗತ್ಯವಿರುವ ಮ್ಯಾಜಿಕ್ ನಂಬರ್ 118 ತಲುಪಲು ಇನ್ನೂ ಆರು ಶಾಸಕರ ಬೆಂಬಲಕ್ಕಾಗಿ ಟಿವಿಕೆ ತೀವ್ರ ಪ್ರಯತ್ನ ನಡೆಸುತ್ತಿದೆ.

ಈ ನಡುವೆ ಎಐಎಡಿಎಂಕೆಯ ಕೆಲ ಶಾಸಕರನ್ನು ಪುದುಚೇರಿ ರೆಸಾರ್ಟ್‌ಗೆ ಸ್ಥಳಾಂತರಿಸಿರುವ ಬೆಳವಣಿಗೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೂಡ “ವಿಜಯ್ ಸರ್ಕಾರ ರಚಿಸಲಿ, ಆರು ತಿಂಗಳು ತೊಂದರೆ ಕೊಡುವುದಿಲ್ಲ” ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಅತ್ತ ಜಾಗತಿಕ ಯುದ್ಧದ ಪರಿಣಾಮ ಬೆಂಗಳೂರಿನ ಪೀಣ್ಯ ಕೈಗಾರಿಕಾ ವಲಯಕ್ಕೂ ತಟ್ಟಿದೆ. ವಾಣಿಜ್ಯ ಸಿಲಿಂಡರ್ ಪೂರೈಕೆ ಸಮಸ್ಯೆ ಮತ್ತು ಇಂಧನ ದರ ಏರಿಕೆಯಿಂದ ಸಾವಿರಕ್ಕೂ ಹೆಚ್ಚು ಸಣ್ಣ ಕೈಗಾರಿಕೆಗಳು ಹಾಗೂ ಕಟ್ಟಿಂಗ್ ಯೂನಿಟ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಉತ್ಪಾದನಾ ವೆಚ್ಚ ಹೆಚ್ಚಳದಿಂದ ಕೈಗಾರಿಕಾ ಮಾಲೀಕರು ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ.

error: Content is protected !!