ಹಾಸನ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ, ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಮತ್ತೆ ಸಚಿವರಾಗಲಿದ್ದಾರೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆಯ ಅಲ್ ಅಮೀನ್ ಶಾಲೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿವೇತನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಮೀರ್ ಅಹಮ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ಹೊರಗಿಡಲು ಸಾಧ್ಯವಿಲ್ಲ. ಅವರು ಮತ್ತೆ ಸಚಿವ ಸಂಪುಟ ಸೇರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಮೀರ್ ಅವರ ವಿರುದ್ಧ ಕೇಳಿಬಂದಿರುವ ಆಡಿಯೋ ಹಾಗೂ ಇತರ ವಿವಾದಗಳು ಅಪಪ್ರಚಾರದ ಭಾಗವಾಗಿದ್ದು, ಇದರಿಂದ ಅವರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ವಾಮೀಜಿ ಹೇಳಿದರು. ಜೊತೆಗೆ ಶಾಸಕ ಶಿವಲಿಂಗೇಗೌಡ ಅವರಿಗೂ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.
ಜಮೀರ್ ಅಹಮ್ಮದ್ ಖಾನ್ ಸಮಾಜ ಸೇವೆ ಮತ್ತು ಜಾತ್ಯತೀತ ಮೌಲ್ಯಗಳಿಗಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಎಲ್ಲರೂ ಬೆಂಬಲ ನೀಡಬೇಕು. ಸಚಿವ ಸ್ಥಾನ ದೊರೆತ ಬಳಿಕ ಜಮೀರ್ ಮತ್ತು ಶಿವಲಿಂಗೇಗೌಡ ಅವರನ್ನು ಮಠದಲ್ಲಿ ಸನ್ಮಾನಿಸುವುದಾಗಿ ಸ್ವಾಮೀಜಿ ತಿಳಿಸಿದರು.
ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಈ ಹಿಂದೆ ನೀಡಿದ್ದ ತಮ್ಮ ಭವಿಷ್ಯ ನಿಜವಾಗಿರುವುದನ್ನೂ ಉಲ್ಲೇಖಿಸಿದ ಅವರು, ಈ ಬಾರಿಯೂ ಜಮೀರ್ ಸಚಿವರಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಬೇಕಿದ್ದು, ಕೋಡಿಮಠ ಶ್ರೀಗಳ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

