Home Blog

ಹಿಂದೂಗಳ ಮೇಲಿನ ದಾಳಿಗೆ ರಾಜ್ಯ ಸರ್ಕಾರ ಹೊಣೆ: ಕಾಂಗ್ರೆಸ್ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಮತ್ತು ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ತೊಡಗಿದೆ ಎಂದು ಟೀಕಿಸಿದರು.

ಪ್ರಧಾನಮಂತ್ರಿ ಹುದ್ದೆಗೆ ಗಾಂಧಿ ಕುಟುಂಬದವರೇ ಬರಬೇಕು ಎಂಬ ಮನೋಭಾವ ಕಾಂಗ್ರೆಸ್ ಪಕ್ಷಕ್ಕಿದೆ. ಆದರೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶವನ್ನು ಜಾಗತಿಕ ಮಟ್ಟದಲ್ಲಿ ಶಕ್ತಿಶಾಲಿ ರಾಷ್ಟ್ರವನ್ನಾಗಿ ರೂಪಿಸುತ್ತಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಯಲ್ಲಾಪುರದಲ್ಲಿ ದಲಿತ ಸಮುದಾಯದ ಯುವತಿಯ ಹತ್ಯೆ ನಡೆದರೂ ಸರ್ಕಾರದ ಯಾವುದೇ ಸಚಿವರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿಲ್ಲ. ಅದೇ ರೀತಿ ಕೊಪ್ಪಳದಲ್ಲಿ ಪರಿಶಿಷ್ಟ ಪಂಗಡದ ವ್ಯಕ್ತಿಯ ಹತ್ಯೆ ಪ್ರಕರಣದಲ್ಲೂ ಸರ್ಕಾರದ ಪ್ರತಿನಿಧಿಗಳು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ಅವರು ಆರೋಪಿಸಿದರು.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದು, ಇದರಿಂದ ಸಮಾಜದಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದು ವಿಜಯೇಂದ್ರ ಟೀಕಿಸಿದರು. ಸಮಾಜದಲ್ಲಿ ಜಾಗೃತಿ ಮೂಡಿಸಿ ಎಲ್ಲ ವರ್ಗಗಳಿಗೂ ಸಾಮಾಜಿಕ ನ್ಯಾಯ ದೊರಕುವಂತೆ ಮಾಡಲು ಬಿಜೆಪಿ ಬದ್ಧವಾಗಿದೆ ಎಂದರು.

ಕಾಂಗ್ರೆಸ್ ತನ್ನ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಇತ್ತೀಚೆಗೆ ಹಾವೇರಿ ಜಿಲ್ಲೆಯ ನರೇಗಲ್‌ನಲ್ಲಿ ಹಾಲುಮತ ಸಮಾಜದ ಲೋಹಿತ್ ಕುರುಬ ಹಾಗೂ ಶಿವರಾಮ ಕುರುಬ ಅವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿದರು.

ಹೋರಿ ಬೆದರಿಸುವ ವೇಳೆ ಪಟಾಕಿ ಸಿಡಿಸಿದ ವಿಚಾರವನ್ನು ನೆಪವನ್ನಾಗಿ ಮಾಡಿಕೊಂಡು ಕೆಲವರು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಳಿಸಿದ್ದಾರೆ ಎಂದು ಅವರು ಹೇಳಿದರು. ಇಂತಹ ಘಟನೆ ನಡೆದರೂ ಮುಖ್ಯಮಂತ್ರಿ ಅಥವಾ ಯಾವುದೇ ಸಚಿವರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ತುಂಬಿಲ್ಲ ಎಂದು ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು.

ಇವಿ ಬಸ್ʼಗಳಿಂದ ಸರಣಿ ಅಪಘಾತ: ಹೊಸ ಎಲೆಕ್ಟ್ರಿಕ್ ಬಸ್ ಗಳ ಖರೀದಿ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಎಲೆಕ್ಟ್ರಿಕ್ (ಇವಿ) ಬಸ್‌ಗಳಿಗೆ ಸಂಬಂಧಿಸಿದ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹೊಸ ಇವಿ ಬಸ್‌ಗಳ ಖರೀದಿ ಕುರಿತು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಎಚ್ಚರಿಕೆಯ ನಿಲುವು ತಾಳಿದೆ.

ಇವಿ ಬಸ್‌ಗಳ ಕಾರ್ಯಕ್ಷಮತೆ ಹಾಗೂ ಅಪಘಾತಗಳ ಕಾರಣಗಳ ಬಗ್ಗೆ ಸಮಗ್ರ ಅಧ್ಯಯನ ನಡೆಸಲು ಸಾರಿಗೆ ಇಲಾಖೆ ಮುಂದಾಗಿದ್ದು, ಸಾರಿಗೆ ಸಚಿವರ ಸೂಚನೆಯ ಮೇರೆಗೆ ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಅಗತ್ಯ ನಿರ್ದೇಶನ ನೀಡಲಾಗಿದೆ.

ಈ ಹಿಂದೆ ಸಾರಿಗೆ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿ ಅವರು ಇವಿ ಬಸ್‌ಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಹಾಗೂ ಅಪಘಾತಗಳ ಬಗ್ಗೆ ದಾಖಲೆಗಳೊಂದಿಗೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು. ಆದರೆ, ಈವರೆಗೆ ಯಾವುದೇ ಸ್ಪಷ್ಟ ಪರಿಹಾರ ಕಂಡುಬಂದಿಲ್ಲ ಎನ್ನಲಾಗಿದೆ.

ಇತ್ತೀಚಿನ ಅಪಘಾತಗಳ ಹಿನ್ನೆಲೆಯಲ್ಲಿ ಅಧ್ಯಯನ ವರದಿ ಸಲ್ಲಿಕೆಯಾದ ಬಳಿಕವೇ ಹೊಸ ಇವಿ ಬಸ್‌ಗಳ ಖರೀದಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ವರ್ಷ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಸುಮಾರು 1,500 ಹೊಸ ಇವಿ ಬಸ್‌ಗಳು ಸೇರ್ಪಡೆಯಾಗಬೇಕಾಗಿತ್ತು. ಆದರೆ ಸರ್ಕಾರ ವರದಿ ಕೇಳಿರುವ ಹಿನ್ನೆಲೆಯಲ್ಲಿ ಹೊಸ ಇವಿ ಬಸ್ ಖರೀದಿ ಪ್ರಕ್ರಿಯೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

13 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಜಸ್ಥಾನದಲ್ಲಿ ನಾಲ್ಕು ಹೋಟೆಲ್ʼ ಗಳ ನೆಲಸಮ

ಜೈಪುರ: 13 ವರ್ಷದ ಬಾಲಕಿಯ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ನಾಲ್ಕು ಹೋಟೆಲ್‌ಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸರು ನೆಲಸಮಗೊಳಿಸಿದ್ದಾರೆ.

ಪ್ರಕರಣದಲ್ಲಿ ಹೋಟೆಲ್ ಮಾಲೀಕರು ಹಾಗೂ ನಿರ್ವಾಹಕರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಅಪರಾಧಕ್ಕೆ ಸಂಬಂಧಿಸಿದ ಕಟ್ಟಡಗಳನ್ನು ಬುಲ್ಡೋಜರ್ ಮೂಲಕ ತೆರವುಗೊಳಿಸಲಾಗಿದೆ. ಆರೋಪಿಗಳು ಕಠಿಣ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿಶಂಕರ್ ಎಚ್ಚರಿಕೆ ನೀಡಿದ್ದಾರೆ.

ಜೂನ್ 18ರಂದು ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ತನಿಖೆ ಪ್ರಕಾರ, ರಿಕ್ಷಾ ಚಾಲಕನೊಬ್ಬ ಬಾಲಕಿಯನ್ನು ಹೋಟೆಲ್ ಮಾಲೀಕರಿಗೆ ಕರೆದೊಯ್ದಿದ್ದು, ನಂತರ ಐದು ದಿನಗಳ ಕಾಲ ನಗರದ ವಿವಿಧ ಹೋಟೆಲ್‌ಗಳಲ್ಲಿ 30ಕ್ಕೂ ಹೆಚ್ಚು ಪುರುಷರು ಆಕೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಎಫ್‌ಐಆರ್ ಪ್ರಕಾರ, ಹಲವಾರು ಹೋಟೆಲ್ ಮಾಲೀಕರು ಮತ್ತು ನಿರ್ವಾಹಕರು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದು, ಬಾಲಕಿಗೆ ಮದ್ಯ ಕುಡಿಸಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಕರಣ ಸಂಬಂಧ ಇದುವರೆಗೆ 12 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಶಂಕಿತರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಅಮಾನವೀಯ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಅಕ್ರಮ ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ತಪ್ಪಿತಸ್ಥರಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷವೂ ಪ್ರತಿಭಟನೆ ನಡೆಸಿ, ಪ್ರಕರಣದಲ್ಲಿರುವ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದೆ.

ಟ್ರಾಫಿಕ್‌ ದಂಡದ 50% ರಿಯಾಯಿತಿ ಯೋಜನೆಗೆ ಭರ್ಜರಿ ಸ್ಪಂದನೆ; ಕೇವಲ 14 ದಿನಗಳಲ್ಲಿ ₹18 ಕೋಟಿಗೂ ಅಧಿಕ ದಂಡ ಸಂಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂಚಾರ ನಿಯಮ ಉಲ್ಲಂಘನೆಯ ಬಾಕಿ ದಂಡದ ಮೇಲಿನ ಶೇ.50 ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಜೂನ್ 21ರಿಂದ ಜುಲೈ 4ರವರೆಗೆ ಕೇವಲ 14 ದಿನಗಳಲ್ಲಿ ₹18,15,42,200 ದಂಡದ ಮೊತ್ತ ಸಂಗ್ರಹವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಬೆಂಗಳೂರು ಸಂಚಾರ ಪೊಲೀಸರು, ಜೂನ್ 4ರಂದು ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಇ-ಚಲನ್‌ನಲ್ಲಿ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ.50 ರಿಯಾಯಿತಿ ಘೋಷಿಸಿತ್ತು. ಈ ಆದೇಶ ಜೂನ್ 21ರಿಂದ ಜಾರಿಗೆ ಬಂದಿತ್ತು ಎಂದು ತಿಳಿಸಿದ್ದಾರೆ.

ರಿಯಾಯಿತಿ ಯೋಜನೆಯಡಿ ಜೂನ್ 21ರಿಂದ ಜುಲೈ 4ರವರೆಗೆ ವಿವಿಧ ಮಾಧ್ಯಮಗಳ ಮೂಲಕ 6,06,032 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಒಟ್ಟು ₹18.15 ಕೋಟಿ ದಂಡ ವಸೂಲಿಯಾಗಿದೆ.

ವಾಹನ ಸವಾರರು ಈ ರಿಯಾಯಿತಿಯ ಪ್ರಯೋಜನ ಪಡೆಯಲು ಜುಲೈ 10ರವರೆಗೆ ಅವಕಾಶವಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಗರದ ಪ್ರಮುಖ ಸಂಚಾರ ಜಂಕ್ಷನ್‌ಗಳಲ್ಲಿ ಪಿಎಸ್‌ಐ ಸೇರಿದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಆ.15ರವರೆಗೆ ಅವಕಾಶ; ಸರ್ಕಾರದಿಂದ ಅವಧಿ ವಿಸ್ತರಣೆ

ಬೆಂಗಳೂರು: ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 15ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೊದಲು ಜೂನ್ 30ರಿಂದ 15 ದಿನಗಳೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರಕ್ಕೆ ತಿದ್ದುಪಡಿ ಮಾಡಿರುವ ಸರ್ಕಾರ, ಅರ್ಜಿ ಸಲ್ಲಿಕೆಗೆ ನೀಡಿದ್ದ ಗಡುವನ್ನು ಇದೀಗ ಆಗಸ್ಟ್ 15ರವರೆಗೆ ವಿಸ್ತರಿಸಿದೆ.

ಇದೇ ವೇಳೆ ಗ್ರಾಮೀಣ ಪ್ರದೇಶಗಳಲ್ಲಿರುವ ಕೋಳಿ ಸಾಕಾಣಿಕೆ ಕೇಂದ್ರಗಳು ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪ್ರಮಾಣ ಪತ್ರ ಸಲ್ಲಿಸುವ ಕಡ್ಡಾಯದಿಂದ ವಿನಾಯಿತಿ ನೀಡಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ನಿರ್ಧಾರದಿಂದ ಗ್ರಾಮೀಣ ಭಾಗದ ರೈತರು ಹಾಗೂ ಕೃಷಿ ಆಧಾರಿತ ಚಟುವಟಿಕೆಗಳಲ್ಲಿ ತೊಡಗಿರುವ ಫಲಾನುಭವಿಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆ ಮತ್ತಷ್ಟು ಸುಲಭವಾಗಲಿದೆ.

ಬೆಂಗಳೂರು ಮೂಲದ ಗೌರಿ ಸ್ಪ್ರ್ಯಾಟ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಆಮಿರ್ ಖಾನ್!

ಮುಂಬೈ: ಬಾಲಿವುಡ್‌ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಎಂದೇ ಖ್ಯಾತಿ ಪಡೆದಿರುವ ನಟ ಆಮಿರ್ ಖಾನ್ ಹಾಗೂ ಬೆಂಗಳೂರಿನ ಗೌರಿ ಸ್ಪ್ರ್ಯಾಟ್ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಮಾರು ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಮುಂಬೈನ ಬಾಂದ್ರಾದಲ್ಲಿರುವ ಆಮಿರ್ ಖಾನ್ ಅವರ ನಿವಾಸದಲ್ಲಿ ಆಪ್ತ ಕುಟುಂಬ ಸದಸ್ಯರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

ಮದುವೆ ಸಮಾರಂಭದಲ್ಲಿ ಸುಮಾರು 150 ಮಂದಿ ಮಾತ್ರ ಭಾಗವಹಿಸಿದ್ದರು. ವಿದೇಶಗಳಿಂದ ಆಗಮಿಸಿದ್ದ ಸಂಬಂಧಿಕರು, ಆಪ್ತ ಸ್ನೇಹಿತರು ಹಾಗೂ ಸಿನಿಮಾ ಕ್ಷೇತ್ರದ ಆಯ್ದ ಗಣ್ಯರು ಈ ವಿಶೇಷ ಕ್ಷಣಕ್ಕೆ ಸಾಕ್ಷಿಯಾದರು. ಮದುವೆಯ ಬಳಿಕ ಆಮಿರ್ ಖಾನ್ ಮತ್ತು ಗೌರಿ ಸ್ಪ್ರ್ಯಾಟ್ ಅಗತ್ಯ ದಾಖಲೆಗಳಿಗೆ ಸಹಿ ಹಾಕುವ ಮೂಲಕ ತಮ್ಮ ವಿವಾಹವನ್ನು ಕಾನೂನುಬದ್ಧವಾಗಿ ನೋಂದಾಯಿಸಿಕೊಂಡಿದ್ದಾರೆ.

ಆಮಿರ್ ಖಾನ್ ಮತ್ತು ಗೌರಿ ಸ್ಪ್ರ್ಯಾಟ್ ಸುಮಾರು 25 ವರ್ಷಗಳಿಂದ ಪರಸ್ಪರ ಪರಿಚಯ ಹೊಂದಿದ್ದರು. ಆದರೆ ಕಳೆದ ಎರಡು ವರ್ಷಗಳ ಹಿಂದೆ ಅವರ ಸ್ನೇಹ ಪ್ರೀತಿಯಾಗಿ ಮಾರ್ಪಟ್ಟಿತ್ತು. ಕಳೆದ ವರ್ಷ ತಮ್ಮ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಆಮಿರ್ ಖಾನ್ ಮೊದಲ ಬಾರಿಗೆ ಗೌರಿಯನ್ನು ಸಾರ್ವಜನಿಕವಾಗಿ ಪರಿಚಯಿಸಿದ್ದರು. ಬಳಿಕ ಜೂನ್ 4ರಂದು ತಮ್ಮ ವಿವಾಹದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದರು.

ಈ ಮದುವೆಯಲ್ಲಿ ಆಮಿರ್ ಖಾನ್ ಅವರ ಮೂವರು ಮಕ್ಕಳಾದ ಜುನೈದ್, ಇರಾ ಹಾಗೂ ಆಜಾದ್ ಭಾಗವಹಿಸಿದ್ದರು. ಗೌರಿ ಸ್ಪ್ರ್ಯಾಟ್ ಅವರ ಆರು ವರ್ಷದ ಮಗ ಕೂಡ ವಿವಾಹ ಸಮಾರಂಭದಲ್ಲಿ ಉಪಸ್ಥಿತರಿದ್ದನು.

ಬೀದರ್ʼನಲ್ಲಿ SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ನಿಧನ!

ಬೀದರ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದ ವೇಳೆ ಮತ್ತೊಬ್ಬ ಬೂತ್ ಮಟ್ಟದ ಅಧಿಕಾರಿ (BLO) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಭಾಲ್ಕಿ ತಾಲೂಕಿನ ಮೂಲದ 45 ವರ್ಷದ ಸುನೀಲ್ ಅವರು ಅಮಲಾಪುರ ಗ್ರಾಮದ 33ನೇ ಬೂತ್‌ನಲ್ಲಿ ಕಳೆದ ಹಲವು ದಿನಗಳಿಂದ ಎಸ್‌ಐಆರ್ ಸರ್ವೆ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.

ತಕ್ಷಣ ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ವೇಳೆ ಸ್ಟಂಟ್ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದ್ದಾಗ ಚಿಕಿತ್ಸೆ ಫಲಕಾರಿಯಾಗದೆ ಸುನೀಲ್ ಮೃತಪಟ್ಟಿದ್ದಾರೆ.

ಈ ಘಟನೆ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದಲ್ಲೇ ಫಸ್ಟ್ ಭರ್ತಿಯಾದ ತುಂಗಾ ಜಲಾಶಯ: 10 ಕ್ರೆಸ್ಟ್ ಗೇಟ್ʼಗಳ ಮೂಲಕ ನದಿಗೆ ನೀರು ಬಿಡುಗಡೆ

ಶಿವಮೊಗ್ಗ: ತೀರ್ಥಹಳ್ಳಿ, ಶೃಂಗೇರಿ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಶಿವಮೊಗ್ಗ ಜಿಲ್ಲೆಯ ಗಾಜನೂರು ಸಮೀಪದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲೇ ಮೊದಲಿಗೆ ಪೂರ್ಣ ಭರ್ತಿಯಾದ ಜಲಾಶಯ ಎಂಬ ಹೆಗ್ಗಳಿಕೆಗೆ ತುಂಗಾ ಡ್ಯಾಂ ಪಾತ್ರವಾಗಿದೆ.

ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ತುಂಗಾ ಜಲಾಶಯಕ್ಕೆ ಒಳಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಜಲಾಶಯಕ್ಕೆ ಸದ್ಯ 20,565 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ 10 ಕ್ರಸ್ಟ್ ಗೇಟ್‌ಗಳು ಹಾಗೂ 2 ಸ್ಲೂಯಿಸ್ (ತೂಬು) ಗೇಟ್‌ಗಳ ಮೂಲಕ ಒಟ್ಟು 18,051 ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಹೊರಬಿಡಲಾಗುತ್ತಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 588.24 ಮೀಟರ್ ತಲುಪಿದ್ದು, ಡ್ಯಾಂನಲ್ಲಿ 3.24 ಟಿಎಂಸಿ ನೀರು ಸಂಗ್ರಹವಾಗಿದೆ. ಶೃಂಗೇರಿ ಹಾಗೂ ತೀರ್ಥಹಳ್ಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದರೆ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಅದರಂತೆ ನದಿಗೆ ಬಿಡಲಾಗುತ್ತಿರುವ ನೀರಿನ ಪ್ರಮಾಣವನ್ನೂ ಹೆಚ್ಚಿಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತುಂಗಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನದಿ ಪಾತ್ರದ ಎರಡೂ ದಡಗಳಲ್ಲಿರುವ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ನದಿ ತೀರದ ಪ್ರದೇಶಗಳಿಗೆ ಅನಗತ್ಯವಾಗಿ ತೆರಳದಂತೆ ಹಾಗೂ ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಜೊತೆಗೆ ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಕಂಟೇನರ್ʼಗೆ ಡಿಕ್ಕಿ ಹೊಡೆದ ಖಾಸಗಿ ಬಸ್, ಲಾರಿ ಪಲ್ಟಿ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಖಾಸಗಿ ಬಸ್‌ವೊಂದು ಕಂಟೇನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಂಟೇನರ್ ಪಲ್ಟಿಯಾಗಿ, ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ರಾಮನಗರ ಜಿಲ್ಲೆಯ ವಡ್ಡರದೊಡ್ಡಿ ಗ್ರಾಮದ ಸಮೀಪ ನಡೆದಿದೆ.

ಮೈಸೂರಿನಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಕಂಟೇನರ್ ಲಾರಿಯನ್ನು ಓವರ್‌ಟೇಕ್ ಮಾಡಲು ಖಾಸಗಿ ಬಸ್ ಚಾಲಕ ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಡಿಕ್ಕಿಯ ರಭಸಕ್ಕೆ ಕಂಟೇನರ್ ರಸ್ತೆ ಮೇಲೆಯೇ ಪಲ್ಟಿಯಾಗಿದ್ದು, ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆ ಕಂಡು ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ರಾಮನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

SIR ಕರ್ತವ್ಯಕ್ಕೆ ತೆರಳಿದ್ದ ವೇಳೆ ಹೃದಯಾಘಾತ: BLO ಸಿಬ್ಬಂದಿ ದುರ್ಮರಣ

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಬಿಎಲ್‌ಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಟರಾಜ್ ಅವರು, ಭಾನುವಾರ ಬೆಳಗ್ಗೆ ಮನೆಯಿಂದ ಎಸ್‌ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತಕ್ಕೊಳಗಾಗಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಎಸ್‌ಐಆರ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರ ಸಾವಿನಿಂದ ಸಹೋದ್ಯೋಗಿಗಳಲ್ಲಿ ಹಾಗೂ ಇಲಾಖೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಇದೇ ಎಸ್‌ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ತುಮಕೂರು ಜಿಲ್ಲೆಯ ಗೂಳೂರು ಸಮೀಪ ಗ್ರಾಮ ಲೆಕ್ಕಾಧಿಕಾರಿ ಭುವನಾ ಅವರ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.

ಆ ಘಟನೆಯ ಬೆನ್ನಲ್ಲೇ ಇದೀಗ ಎಸ್‌ಐಆರ್ ಕರ್ತವ್ಯಕ್ಕೆ ತೆರಳುತ್ತಿದ್ದ ಬಿಎಲ್‌ಒ ನಟರಾಜ್ ಹೃದಯಾಘಾತದಿಂದ ಮೃತಪಟ್ಟಿರುವುದು ದುಃಖದ ಸಂಗತಿಯಾಗಿದ್ದು, ಸತತ ಎರಡನೇ ದಿನ ಎಸ್‌ಐಆರ್ ಕರ್ತವ್ಯಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಗಮನ ಸೆಳೆದಿದೆ.