ಬೆಳಗಾವಿ: ಬೆಳಗಾವಿಯಲ್ಲಿ ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೈದ್ಯಕೀಯ ವಲಯದಲ್ಲಿ ಶಾಕ್ ಉಂಟುಮಾಡಿದೆ. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಡ್ಸೆವಾಡಿಯ ನಿವಾಸದಲ್ಲಿ ಈ ಘಟನೆ ನಡೆದಿದೆ.
79 ವರ್ಷದ ಡಾ. ದಿನೇಶ್ ಲಕ್ಷ್ಮಣ ಭಟ್ಕಳ ಆತ್ಮಹತ್ಯೆ ಮಾಡಿಕೊಂಡ ವೈದ್ಯರಾಗಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದವರಾಗಿದ್ದು, ದೀರ್ಘಕಾಲ ವೈದ್ಯರಾಗಿ ಸೇವೆ ಸಲ್ಲಿಸಿ ಬಳಿಕ ಬೆಳಗಾವಿಯಲ್ಲಿ ವಾಸವಾಗಿದ್ದರು.
ಶುಕ್ರವಾರ ಬೆಳಗ್ಗೆ ಮನೆಯ ಬಾಲ್ಕನಿಯಲ್ಲಿ ತಾವೇ ತಮ್ಮ ಮೇಲೆ ಗುಂಡು ಹಾರಿಸಿಕೊಂಡಿದ್ದಾರೆ ಎನ್ನಲಾಗಿದೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.
ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಟಿಳಕವಾಡಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಪ್ರಾಥಮಿಕ ತನಿಖೆ ಪ್ರಕಾರ, ಡಾ. ಭಟ್ಕಳ ಅವರು ಅನಾರೋಗ್ಯ ಮತ್ತು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಪೊಲೀಸರ ತನಿಖೆಯ ಬಳಿಕ ಸ್ಪಷ್ಟವಾಗಲಿದೆ.
ಮಾನಸಿಕ ಒತ್ತಡ ಅನುಭವಿಸುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲ ಅಗತ್ಯವಿದ್ದರೆ ಸ್ನೇಹ ಫೌಂಡೇಶನ್ 04424640050 ಅಥವಾ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ಸಹಾಯವಾಣಿ 9152987821 ಸಂಪರ್ಕಿಸಬಹುದು.

