Home Blog

ಹೀರೋ ಸ್ಪ್ಲೆಂಡರ್ ಬೈಕ್‌ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖದೀಮನ ಬಂಧನ: 20 ಲಕ್ಷ ಮೌಲ್ಯದ ವಾಹನಗಳು ಜಪ್ತಿ!

ಬೆಂಗಳೂರು ಗ್ರಾಮಾಂತರ: ಹೀರೋ ಸ್ಪ್ಲೆಂಡರ್ ಬೈಕ್‌ಗಳನ್ನೇ ಗುರಿಯಾಗಿಸಿಕೊಂಡು ಬೆಂಗಳೂರು ಗ್ರಾಮಾಂತರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮನನ್ನು ವಿಜಯಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆತನಿಂದ ಸುಮಾರು ₹20 ಲಕ್ಷ ಮೌಲ್ಯದ 42 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ನಿವಾಸಿ ಖಲೀಲ್ ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲವು ತಿಂಗಳುಗಳಿಂದ ದೇವನಹಳ್ಳಿ, ಹೊಸಕೋಟೆ, ಶಿಡ್ಲಘಟ್ಟ ಹಾಗೂ ಮಾಲೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಎನ್ನಲಾಗಿದೆ. ವಿಶೇಷವಾಗಿ ಹೀರೋ ಸ್ಪ್ಲೆಂಡರ್ ಬೈಕ್‌ಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ನಡೆಸುತ್ತಿದ್ದುದಾಗಿ ತನಿಖೆಯಿಂದ ಬಹಿರಂಗವಾಗಿದೆ.

ವಾಹನ ಕಳ್ಳತನದ ಬಗ್ಗೆ ಹಲವು ದೂರುಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಗಳು, ತಾಂತ್ರಿಕ ಮಾಹಿತಿ ಹಾಗೂ ಸ್ಥಳೀಯ ಸುಳಿವುಗಳ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹಲವು ಕಳವು ಪ್ರಕರಣಗಳ ಮಾಹಿತಿ ಬೆಳಕಿಗೆ ಬಂದಿದೆ.

ಆರೋಪಿ ಖಲೀಲ್ ಕಳವು ಮಾಡಿದ್ದ ಬೈಕ್‌ಗಳನ್ನು ಕೇವಲ ₹2,500ಕ್ಕೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ನಂತರ ಅವುಗಳನ್ನು ಖರೀದಿಸುತ್ತಿದ್ದ ಕೆಲವರು ದಾಖಲೆಗಳಿಲ್ಲದೆ ಹೆಚ್ಚಿನ ಬೆಲೆಗೆ ಮರುಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಳವು ವಾಹನಗಳನ್ನು ಖರೀದಿಸಿದ್ದ ವ್ಯಕ್ತಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಬಂಧಿತನಿಂದ ಒಟ್ಟು 42 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಅಂದಾಜು ಮೌಲ್ಯ ₹20 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಂಡ ವಾಹನಗಳಲ್ಲಿ ಬಹುತೇಕ ಬೈಕ್‌ಗಳು ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಿಂದ ಕಳುವಾಗಿದ್ದವು ಎಂದು ತಿಳಿದುಬಂದಿದೆ.

ಡಿವೈಎಸ್ಪಿ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ, ವಿಜಯಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಲಕ್ಷ್ಮೀನಾರಾಯಣ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಪ್ರಕರಣವನ್ನು ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪ್ರಶಂಸಿಸಿದ್ದಾರೆ.

ಇದೇ ವೇಳೆ, ವಶಪಡಿಸಿಕೊಂಡ ಬೈಕ್‌ಗಳನ್ನು ವಿಜಯಪುರ ಪೊಲೀಸ್ ಠಾಣೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್‌ಪಿ ಚಂದ್ರಕಾಂತ್ ಅವರು ನೈಜ ಮಾಲೀಕರಿಗೆ ಹಸ್ತಾಂತರಿಸಿದರು. ತಮ್ಮ ಕಳೆದುಹೋದ ವಾಹನಗಳು ಮರಳಿ ದೊರೆತ ಹಿನ್ನೆಲೆಯಲ್ಲಿ ಬೈಕ್ ಮಾಲೀಕರು ಪೊಲೀಸ್ ಇಲಾಖೆಯ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ವಾಹನ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಕಳವು ವಾಹನಗಳ ಖರೀದಿ ಮತ್ತು ಮಾರಾಟದಲ್ಲಿ ತೊಡಗಿರುವವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ತುಂಗಭದ್ರಾ ಡ್ಯಾಂಗೆ ಹೊಸ ಜೀವಕಳೆ: ಇಂದು 33 ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ!

ಕೊಪ್ಪಳ: ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಕೋಟ್ಯಂತರ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಹೊಸ ಕಳೆ ಬಂದಿದ್ದು, ಜಲಾಶಯದ 33 ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆಯಲಿದೆ.

ಕಳೆದ ವರ್ಷ 19ನೇ ಕ್ರಸ್ಟ್ ಗೇಟ್ ಹರಿದು ಹೋಗಿದ್ದ ಹಿನ್ನೆಲೆಯಲ್ಲಿ ಉಂಟಾದ ಆತಂಕಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ರಾಜ್ಯ ಸರ್ಕಾರ ಎಲ್ಲಾ 33 ಗೇಟ್‌ಗಳನ್ನು ಬದಲಾಯಿಸುವ ನಿರ್ಧಾರ ಕೈಗೊಂಡಿತ್ತು. ಜಲಸಂಪನ್ಮೂಲ ಇಲಾಖೆ ಸಮರೋಪಾದಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿದ್ದು, ಸುಮಾರು ₹51 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಹೊಸ ಗೇಟ್‌ಗಳನ್ನು ಅಳವಡಿಸಲಾಗಿದೆ.

2024ರ ಆಗಸ್ಟ್‌ನಲ್ಲಿ ನಡೆದ ಗೇಟ್ ದುರಂತದಿಂದ ಲಕ್ಷಾಂತರ ಕ್ಯೂಸೆಕ್ ನೀರು ನದಿಗೆ ಹರಿದು ಹೋಗಿತ್ತು. ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರು ಆತಂಕಕ್ಕೊಳಗಾಗಿದ್ದರು. ಈ ಘಟನೆ ಬಳಿಕ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಂಡು ಇಡೀ ಡ್ಯಾಂನ ಗೇಟ್ ವ್ಯವಸ್ಥೆಯನ್ನೇ ನವೀಕರಿಸುವ ಮಾಸ್ಟರ್ ಪ್ಲಾನ್ ರೂಪಿಸಿತ್ತು.

ಇಂದು ನಡೆಯಲಿರುವ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳು ಒಂದೇ ವೇದಿಕೆಯಲ್ಲಿ ಭಾಗವಹಿಸಲಿದ್ದು, ಕೇಂದ್ರ ಜಲಶಕ್ತಿ ಸಚಿವರೂ ಉಪಸ್ಥಿತರಿರುವರು. ಜಲಾಶಯದ ಮೇಲೆಯೇ ಗೇಟ್‌ಗಳ ಉದ್ಘಾಟನೆ ನಡೆಯಲಿದ್ದು, ಬಳಿಕ 10 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆಯಿರುವ ಬೃಹತ್ ವೇದಿಕೆಯಲ್ಲಿ ಮುಖ್ಯ ಕಾರ್ಯಕ್ರಮ ಜರುಗಲಿದೆ.

ಸರ್ಕಾರದ ಪರವಾಗಿ ಶಾಸಕ ಬಸವರಾಜ್ ರಾಯರೆಡ್ಡಿ ನೇತೃತ್ವದ ನಿಯೋಗ ನೆರೆಯ ರಾಜ್ಯಗಳಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿತ್ತು.

ಒಂದು ಕಡೆ ಡ್ಯಾಂನ ಗೇಟ್‌ಗಳ ನವೀಕರಣ ನಾಲ್ಕು ಜಿಲ್ಲೆಗಳ ರೈತರಿಗೆ ನೆಮ್ಮದಿ ತಂದಿದ್ದರೂ, ಮತ್ತೊಂದೆಡೆ ಜಲಾಶಯದಲ್ಲಿನ ನೀರಿನ ಪ್ರಮಾಣ ಮಾತ್ರ ಚಿಂತೆ ಹುಟ್ಟಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 45 ಟಿಎಂಸಿ ನೀರು ಸಂಗ್ರಹವಾಗಿದ್ದರೆ, ಪ್ರಸ್ತುತ ಕೇವಲ 9 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ಜಲಾಶಯ ತುಂಬಿ ರೈತರಲ್ಲಿ ಮತ್ತೊಮ್ಮೆ ಆಶಾಭಾವನೆ ಮೂಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮಂತ್ರಾಲಯ ರಾಯರ ಮಠಕ್ಕೆ 21 ದಿನದಲ್ಲಿ ₹3.72 ಕೋಟಿ ಕಾಣಿಕೆ ಸಂಗ್ರಹ!

ರಾಯಚೂರು: ಕಲಿಯುಗ ಕಾಮಧೇನು ಎಂದೇ ಭಕ್ತರಿಂದ ಆರಾಧಿಸಲ್ಪಡುವ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ಕಾಣಿಕೆಗಳ ಮಹಾಪೂರ ಹರಿದು ಬಂದಿದೆ.

ಜೂನ್ ತಿಂಗಳ 21 ದಿನಗಳ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು ₹3.72 ಕೋಟಿ ಕಾಣಿಕೆ ಸಂಗ್ರಹವಾಗಿದೆ.

ಮಠದ ಮಾಹಿತಿಯ ಪ್ರಕಾರ, ಸಂಗ್ರಹವಾದ ಕಾಣಿಕೆಯಲ್ಲಿ ₹3,61,40,030 ಮೌಲ್ಯದ ಕರೆನ್ಸಿ ನೋಟುಗಳು ಹಾಗೂ ₹11,02,500 ಮೌಲ್ಯದ ನಾಣ್ಯಗಳು ಸೇರಿವೆ. ಇದಲ್ಲದೆ ಭಕ್ತರು ಕಾಣಿಕೆ ರೂಪದಲ್ಲಿ 67 ಗ್ರಾಂ ಚಿನ್ನ ಮತ್ತು 511 ಗ್ರಾಂ ಬೆಳ್ಳಿಯನ್ನು ಸಮರ್ಪಿಸಿದ್ದಾರೆ.

ಪ್ರತಿ ತಿಂಗಳಿನಂತೆ ಈ ಬಾರಿಯೂ ಸಾವಿರಾರು ಭಕ್ತರು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ತಮ್ಮ ಭಕ್ತಿಯನ್ನು ಕಾಣಿಕೆ ಮೂಲಕ ಅರ್ಪಿಸಿದ್ದಾರೆ.

ಹುಂಡಿ ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಕರಸೇವಕರು ಹಾಗೂ ಭಜನಾ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಮುಜರಾಯಿ ಇಲಾಖೆ ಹಾಗೂ ಮಠದ ಅಧಿಕಾರಿಗಳ ಸಮ್ಮುಖದಲ್ಲಿ ಎಣಿಕೆ ಕಾರ್ಯ ಯಶಸ್ವಿಯಾಗಿ ನಡೆಯಿತು.

 

ಕೈಕೊಟ್ಟ ಮುಂಗಾರು: ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ, ಕುಡಿಯುವ ನೀರಿಗೆ ಸಂಕಷ್ಟ!

ಮಂಡ್ಯ: ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್‌ ಮತ್ತು ಕಬಿನಿಯಲ್ಲಿ ನೀರಿನ ಮಟ್ಟ ಆತಂಕಕಾರಿ ಪ್ರಮಾಣಕ್ಕೆ ಇಳಿದಿದೆ.

ಕಬಿನಿ ಜಲಾಶಯ ಈಗಾಗಲೇ ಡೆಡ್ ಸ್ಟೋರೇಜ್ ಹಂತ ತಲುಪಿದ್ದು, ಕೆಆರ್‌ಎಸ್‌ ಜಲಾಶಯದ ಮೇಲೆ ಸಂಪೂರ್ಣ ಒತ್ತಡ ಬಿದ್ದಿದೆ.

ಸದ್ಯ ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ 81 ಅಡಿಗೆ ತಲುಪಿದ್ದು, ಬಳಕೆಗೆ ಕೇವಲ 6 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಪ್ರತಿದಿನ ಸುಮಾರು 1,800 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.

ಕಬಿನಿಯಲ್ಲಿ ನೀರಿನ ಲಭ್ಯತೆ ಇಲ್ಲದ ಕಾರಣ ಬೆಂಗಳೂರಿಗೆ ಭಾಗಶಃ ಕೆಆರ್‌ಎಸ್‌ನಿಂದಲೇ ನೀರು ಪೂರೈಕೆಯಾಗುತ್ತಿದ್ದು, ಮುಂದಿನ ಮೂರು ತಿಂಗಳ ಕಾಲ ಇದೇ ನೀರಿನ ಸಂಗ್ರಹವನ್ನು ಸಮರ್ಪಕವಾಗಿ ನಿರ್ವಹಿಸುವ ಸವಾಲು ಎದುರಾಗಿದೆ.

ಇದೇ ವೇಳೆ, ರೈತರು ತಮ್ಮ ಬೆಳೆಗಳಿಗೆ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದು, ಜಲಾಶಯದಲ್ಲಿನ ಸೀಮಿತ ನೀರಿನ ಲಭ್ಯತೆ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮುಂದಿನ ದಿನಗಳಲ್ಲಿ ಸಮರ್ಪಕ ಮಳೆಯಾಗದಿದ್ದರೆ ಕುಡಿಯುವ ನೀರಿನ ಪೂರೈಕೆಯ ಮೇಲೆಯೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಮಳೆರಾಯನ ಮೊರೆ ಹೋದ ತಾಯಂದಿರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮರ್ಪಕ ಮಳೆಯಿಲ್ಲದೆ ರೈತರು ಆತಂಕದಲ್ಲಿರುವ ಹಿನ್ನೆಲೆಯಲ್ಲಿ ತಾಲೂಕಿನ ಶಿಗ್ಲಿ ಗ್ರಾಮದ ಗಣೇಶಪೇಟೆಯ ತಾಯಂದಿರು ಸಂಪ್ರದಾಯಬದ್ಧವಾಗಿ ಗುರ್ಜಿ ಹೊತ್ತು ಮಳೆ ದೇವರನ್ನು ಪ್ರಾರ್ಥಿಸುವ ಮೂಲಕ ಉತ್ತಮ ಮಳೆಯಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ಮುಂಗಾರು ವಿಳಂಬವಾಗಿರುವುದರಿಂದ ಕೃಷಿ ಚಟುವಟಿಕೆಗಳು ಹಿನ್ನಡೆ ಅನುಭವಿಸುತ್ತಿದ್ದು, ಬಿತ್ತನೆ ಮಾಡಿದ ಬೆಳೆಗಳು ಒಣಗುವ ಭೀತಿ ಎದುರಾಗಿದೆ. ಇದರಿಂದ ಕಂಗಾಲಾಗಿರುವ ರೈತ ಸಮುದಾಯದ ಸಂಕಷ್ಟ ನಿವಾರಣೆಯಾಗಲಿ ಎಂಬ ಆಶಯದೊಂದಿಗೆ ಗ್ರಾಮಸ್ಥರು ಈ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಂಡರು.

ಗಣೇಶಪೇಟೆಯ ಮಹಿಳೆಯರು ಗುರ್ಜಿ ಹೊತ್ತು ಗ್ರಾಮದಲ್ಲಿ ಸಂಚರಿಸಿ, ಸಕಾಲಕ್ಕೆ ಮಳೆಯಾಗಿ ರೈತರ ಬದುಕು ಹಸನಾಗಲಿ, ಹೊಲ-ಗದ್ದೆಗಳು ಹಸಿರಿನಿಂದ ಕಂಗೊಳಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಗ್ರಾಮದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ನಡೆದ ಈ ಆಚರಣೆಯಲ್ಲಿ ಭಕ್ತಿ, ನಂಬಿಕೆ ಹಾಗೂ ಜನಪದ ಸಂಸ್ಕೃತಿಯ ಸೊಬಗು ಅನಾವರಣಗೊಂಡಿತು.

ಕಾರ್ಯಕ್ರಮದಲ್ಲಿ ಹಿರಿಯರು, ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿ, ಉತ್ತಮ ಮಳೆಯಾಗಿ ಬೆಳೆಗಳು ಸಮೃದ್ಧಿಯಾಗಿ ಬೆಳೆಯಲಿ ಹಾಗೂ ರೈತರ ಸಂಕಷ್ಟ ದೂರವಾಗಲಿ ಎಂದು ಪ್ರಾರ್ಥಿಸಿದರು.

ಮಳೆಯ ಅಭಾವದಿಂದ ಸಂಕಷ್ಟದಲ್ಲಿರುವ ರೈತ ಕುಟುಂಬಗಳ ಮಹಿಳೆಯರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂತಹ ಸಾಂಪ್ರದಾಯಿಕ ಆಚರಣೆಗಳನ್ನು ನಡೆಸುತ್ತಿರುವುದು ಕಂಡುಬರುತ್ತಿದ್ದು, ರೈತ ಸಮುದಾಯದ ಈ ಮೊರೆಗೆ ಮಳೆರಾಯ ಕರುಣೆ ತೋರಬೇಕೆಂಬ ಆಶಯ ವ್ಯಕ್ತವಾಗಿದೆ.

ಸಾವು ಮನೆಯವರನ್ನೇ ಟಾರ್ಗೆಟ್ ಮಾಡಿದ ಸೈಬರ್ ಖದೀಮರು: ಚಿತಾಗಾರ ಸ್ಲಾಟ್ ಬುಕ್ಕಿಂಗ್ ಹೆಸರಲ್ಲಿ ವಂಚನೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೈಬರ್ ವಂಚಕರ ಹೊಸ ಜಾಲವೊಂದು ಬಯಲಾಗಿದ್ದು, ಶವಸಂಸ್ಕಾರಕ್ಕಾಗಿ ಆನ್‌ಲೈನ್ ಸ್ಲಾಟ್ ಬುಕ್ಕಿಂಗ್ ಮಾಡುವ ಹೆಸರಿನಲ್ಲಿ ಸಾರ್ವಜನಿಕರಿಂದ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

ಗ್ರೇಟರ್ ಬೆಂಗಳೂರು ಅಥಾರಿಟಿ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯ ಹೆಬ್ಬಾಳ ಕೆಂಪಾಪುರದ ‘ಚಿರಶಾಂತಿಧಾಮ’ ಮತ್ತು ಮೇಡಿ ಅಗ್ರಹಾರದ ‘ಮುಕ್ತಿಧಾಮ’ ವಿದ್ಯುತ್ ಚಿತಾಗಾರಗಳಲ್ಲಿ ಶವಸಂಸ್ಕಾರಕ್ಕೆ ಕೇವಲ ₹250 ಅಧಿಕೃತ ಶುಲ್ಕ ನಿಗದಿಪಡಿಸಲಾಗಿದೆ. ಆದರೆ ಸೈಬರ್ ಖದೀಮರು ನಕಲಿ ವೆಬ್‌ಸೈಟ್‌ಗಳು ಮತ್ತು ಲಿಂಕ್‌ಗಳನ್ನು ಸೃಷ್ಟಿಸಿ, ತಾವೇ ಅಧಿಕೃತ ಏಜೆಂಟ್‌ಗಳು ಎಂದು ಬಿಂಬಿಸಿಕೊಂಡು ಸಾರ್ವಜನಿಕರನ್ನು ವಂಚಿಸುತ್ತಿರುವುದು ಪತ್ತೆಯಾಗಿದೆ.

ಸಾವಿನ ದುಃಖದಲ್ಲಿರುವ ಕುಟುಂಬಸ್ಥರು ತುರ್ತಾಗಿ ಸ್ಲಾಟ್ ಬುಕ್ಕಿಂಗ್ ಮಾಡಲು ಮುಂದಾದಾಗ ಅವರ ಪರಿಸ್ಥಿತಿಯನ್ನೇ ದುರುಪಯೋಗಪಡಿಸಿಕೊಳ್ಳುವ ಈ ಜಾಲ, ಅಧಿಕೃತ ಶುಲ್ಕಕ್ಕಿಂತ ಹಲವು ಪಟ್ಟು ಹೆಚ್ಚು ಹಣ ಪಡೆದು ವಂಚನೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಬೆಂಗಳೂರು ಉತ್ತರ ನಗರ ಪಾಲಿಕೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಯಾವುದೇ ಮೂರನೇ ವ್ಯಕ್ತಿ ಅಥವಾ ಖಾಸಗಿ ವೆಬ್‌ಸೈಟ್‌ಗಳ ಮೂಲಕ ಬುಕ್ಕಿಂಗ್ ಮಾಡಬಾರದು ಎಂದು ಮನವಿ ಮಾಡಿದೆ.

ಈ ಸಂಬಂಧ ಯಲಹಂಕದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದ್ದು, ನಕಲಿ ವೆಬ್‌ಸೈಟ್‌ಗಳ ಹಿಂದೆ ಇರುವ ಜಾಲವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಭಕ್ತಿಯ ಕಾಣಿಕೆಗೆ ಜಾತಿಯ ಬಣ್ಣ ಏಕೆ..?

0

ವಿಜಯಸಾಕ್ಷಿ ಸುದ್ದಿ, ಗದಗ: ವೀರೇಶ್ವರ ಪುಣ್ಯಾಶ್ರಮದ ರಥೋತ್ಸವದ ಕುರಿತು ಇತ್ತೀಚೆಗೆ ಉಂಟಾಗಿರುವ ವಿವಾದಕ್ಕೆ ಸ್ಪಷ್ಟನೆ ನೀಡಿರುವ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು, ಭಕ್ತರು ನೀಡುವ ದೇಣಿಗೆಗೆ ಜಾತಿಯ ಬಣ್ಣ ಹಚ್ಚುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಬುಧವಾರ ಆಶ್ರಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಥೋತ್ಸವದ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕಳೆದ ನಾಲ್ಕು ವರ್ಷಗಳಿಂದ ರಥೋತ್ಸವ ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತಿದ್ದು, ವಿವಿಧ ಸಮುದಾಯಗಳ ಭಕ್ತರು ಆಶ್ರಮಕ್ಕೆ ದೇಣಿಗೆ ನೀಡುವುದು ಸಂಪ್ರದಾಯವಾಗಿದೆ ಎಂದರು.

ಪೀರಸಾಬ ದಂಪತಿಗಳು ರಥಕ್ಕೆ ಗಾಲಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಕೆಲ ಭಕ್ತರು ತಮ್ಮ ಹೆಸರಿನೊಂದಿಗೆ ದೇಣಿಗೆ ನೀಡಿದರೆ, ಇನ್ನೂ ಕೆಲವರು ಹೆಸರು ಬಹಿರಂಗಪಡಿಸದೇ ಕಾಣಿಕೆ ಸಲ್ಲಿಸುತ್ತಾರೆ. ದೇಣಿಗೆ ನೀಡುವ ವಿಚಾರದಲ್ಲಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ವಿವಾದ ಸೃಷ್ಟಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ಇದೇ ವೇಳೆ ಆಶ್ರಮದ ಆಡಳಿತ ಹಾಗೂ ಹಣಕಾಸು ನಿರ್ವಹಣೆ ಕುರಿತು ಮಾತನಾಡಿದ ಕಲ್ಲಯ್ಯಜ್ಜನವರು, ತಾವು ಪೀಠಾಧಿಪತಿಯಾದ ಸಂದರ್ಭದಲ್ಲಿ ಆಶ್ರಮಕ್ಕೆ ಲಕ್ಷಾಂತರ ರೂಪಾಯಿ ಸಾಲವಿತ್ತು. ಅದನ್ನು ತೀರಿಸಿ ಆಶ್ರಮದ ಆರ್ಥಿಕ ಸ್ಥಿತಿಯನ್ನು ಸದೃಢಗೊಳಿಸಲಾಗಿದೆ. ಎಲ್ಲ ಆದಾಯ-ವೆಚ್ಚಗಳ ಲೆಕ್ಕಪತ್ರಗಳನ್ನು ಪಾರದರ್ಶಕವಾಗಿ ನಿರ್ವಹಿಸಲಾಗಿದೆ ಎಂದು ತಿಳಿಸಿದರು.

ಕೆಲ ಟ್ರಸ್ಟಿಗಳಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ ಅವರು, ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದರು. ಹಲವು ವರ್ಷಗಳಿಂದ ಮಾನಸಿಕ ಕಿರುಕುಳ ನೀಡಲಾಗುತ್ತಿದ್ದು, ಈ ವಿಷಯವನ್ನು ಟ್ರಸ್ಟ್ ಸಮಿತಿ, ಭಕ್ತರು ಹಾಗೂ ಸಾರ್ವಜನಿಕರ ಗಮನಕ್ಕೆ ತರಲು ಸುದ್ದಿಗೋಷ್ಠಿ ನಡೆಸಲಾಗಿದೆ ಎಂದು ತಿಳಿಸಿದರು.

ವೀರೇಶ್ವರ ಪುಣ್ಯಾಶ್ರಮವು ಜಾತ್ಯಾತೀತ ಸಂಸ್ಥೆಯಾಗಿದ್ದು, ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಪರಂಪರೆಯನ್ನು ಹೊಂದಿದೆ. ಪೀರಸಾಬ ಕೌತಾಳ ಅವರೊಂದಿಗೆ ಆಶ್ರಮಕ್ಕೆ ಗುರು-ಶಿಷ್ಯರ ಸಂಬಂಧವಿದ್ದು, ಅವರು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಿಗೆ ಆಶ್ರಮದಿಂದ ಯಾವುದೇ ಆರ್ಥಿಕ ನೆರವು ನೀಡಿಲ್ಲ. ಶಿಕ್ಷಣ ಸಂಸ್ಥೆಗಳು ಸುಗಮವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದಲೇ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಆಶ್ರಮದ ವ್ಯವಸ್ಥಾಪಕ ಹೇಮರಾಜಶಾಸ್ತ್ರೀ, ಎಂ. ಕಲ್ಲಿನಾಥಶಾಸ್ತ್ರೀ, ವೀರೇಶ ಕಿತ್ತೂರು, ಎಂ.ಜಿ. ಗುರುಸಿದ್ದೇಶ್ವರಶಾಸ್ತ್ರೀ, ಚನ್ನಬಸಯ್ಯ ಬಂಕಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

“ಭಕ್ತರ ದೇಣಿಗೆಗೆ ಜಾತಿ ಅಥವಾ ಧರ್ಮದ ಬಣ್ಣ ಹಚ್ಚುವುದು ಸರಿಯಲ್ಲ. ರಥೋತ್ಸವವನ್ನು ವಿವಾದದ ಕೇಂದ್ರವನ್ನಾಗಿಸದೇ ಭಕ್ತಿಭಾವದಿಂದ ನಡೆಸಬೇಕು.”

ಕಲ್ಲಯ್ಯಜ್ಜನವರು, ಪೀಠಾಧಿಪತಿ, ವೀರೇಶ್ವರ ಪುಣ್ಯಾಶ್ರಮ

ನೈಋತ್ಯ ಮುಂಗಾರು ಬಿರುಸು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!

ಬೆಂಗಳೂರು: ನೈಋತ್ಯ ಮುಂಗಾರು ಮಾರುತಗಳು ರಾಜ್ಯಾದ್ಯಂತ ಬಲಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಹಾಗೂ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆಯ ವರದಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿ-ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಹಾಗೂ ನದಿ, ಹಳ್ಳ-ಕೊಳ್ಳಗಳ ತೀರದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತಗಳು ಸಲಹೆ ನೀಡಿವೆ.

ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದೇ ವೇಳೆ ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ.

ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳ ನಿವಾಸಿಗಳು, ಮೀನುಗಾರರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

ಬೆಂಗಳೂರಿನಲ್ಲಿ ಗಗನಕ್ಕೇರಿದ ತರಕಾರಿ ದರ: ನೂರರ ಗಡಿ ದಾಟಿದ ಬೀನ್ಸ್, ಬದನೆಕಾಯಿ

ಬೆಂಗಳೂರು: ರಾಜ್ಯದಲ್ಲಿ ಮುಂದುವರಿದಿರುವ ಅನಾವೃಷ್ಟಿ ಹಾಗೂ ನೆರೆಯ ರಾಜ್ಯಗಳ ಹವಾಮಾನ ವೈಪರೀತ್ಯದ ಪರಿಣಾಮ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ತರಕಾರಿ ಮತ್ತು ಸೊಪ್ಪುಗಳ ಬೆಲೆ ಭಾರೀ ಏರಿಕೆ ಕಂಡಿದೆ.

ಕೆಆರ್ ಮಾರುಕಟ್ಟೆ ಸೇರಿದಂತೆ ಪ್ರಮುಖ ಹೋಲ್‌ಸೇಲ್ ಮತ್ತು ಚಿಲ್ಲರೆ ಮಾರುಕಟ್ಟೆಗಳಲ್ಲಿ ಹಲವು ತರಕಾರಿಗಳ ದರ ಶತಕ ದಾಟಿದ್ದು, ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ನುಗ್ಗೆಕಾಯಿ ಕೆಜಿಗೆ ₹200 ರಿಂದ ₹220, ಬೀನ್ಸ್ ₹115 ರಿಂದ ₹140, ಮೆಂತ್ಯ ಸೊಪ್ಪು ₹120 ರಿಂದ ₹130, ಬಿಳಿ ಬದನೆಕಾಯಿ ₹110 ರಿಂದ ₹120, ಬಟಾಣಿ ಮತ್ತು ಹಸಿಮೆಣಸಿನಕಾಯಿ ₹100 ರಿಂದ ₹120 ದರದಲ್ಲಿ ಮಾರಾಟವಾಗುತ್ತಿದೆ. ಕ್ಯಾಪ್ಸಿಕಂ ಹಾಗೂ ಕ್ಯಾರೆಟ್ ಬೆಲೆ ಕೂಡ ₹80 ರಿಂದ ₹100ರ ನಡುವೆ ಇದೆ. ಬೆಳ್ಳುಳ್ಳಿ ದರವು ₹200 ರಿಂದ ₹220ಕ್ಕೆ ಏರಿಕೆಯಾಗಿದೆ.

ಆದರೆ ಗ್ರಾಹಕರಿಗೆ ಕೊಂಚ ಸಮಾಧಾನ ತಂದಿರುವುದು ಟೊಮೆಟೊ ಮತ್ತು ಈರುಳ್ಳಿ ಬೆಲೆ. ಹೋಲ್‌ಸೇಲ್ ಮಾರುಕಟ್ಟೆಯಲ್ಲಿ ಟೊಮೆಟೊ ಕೆಜಿಗೆ ₹10 ರಿಂದ ₹15 ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ₹15 ರಿಂದ ₹20ಕ್ಕೆ ಲಭ್ಯವಿದೆ. ಈರುಳ್ಳಿ ಕೂಡ ಕೆಜಿಗೆ ₹20 ರಿಂದ ₹25 ದರದಲ್ಲಿ ದೊರೆಯುತ್ತಿದೆ.

ಇದರ ನಡುವೆಯೇ ಕೋಳಿ ಮೊಟ್ಟೆಯ ಬೆಲೆಯೂ ಏರಿಕೆಯಾಗಿದ್ದು, ಈ ಹಿಂದೆ ₹6.50 ಇದ್ದ ಒಂದು ಮೊಟ್ಟೆಯ ದರ ಈಗ ₹8ಕ್ಕೆ ತಲುಪಿದೆ.

ದೇಶದ ವಿವಿಧ ಭಾಗಗಳಲ್ಲಿ ಅತಿವೃಷ್ಟಿ ಮತ್ತು ಮಳೆಯ ಕೊರತೆಯಿಂದ ಬೆಳೆ ಹಾನಿಯಾಗಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ವಿಶೇಷವಾಗಿ ಬಿಳಿ ಬದನೆಕಾಯಿ ದರ ಮೊದಲ ಬಾರಿಗೆ ₹100ರ ಗಡಿ ದಾಟಿರುವುದು ಗ್ರಾಹಕರ ಗಮನ ಸೆಳೆದಿದೆ.

ತರಕಾರಿ ಬೆಲೆ ಏರಿಕೆಯಿಂದ ಗ್ರಾಹಕರು ಕೆಜಿಗಟ್ಟಲೆ ಖರೀದಿಸುವ ಬದಲು ಕಾಲು ಕೆಜಿ ಅಥವಾ ಅರ್ಧ ಕೆಜಿಗೆ ಸೀಮಿತರಾಗಿದ್ದಾರೆ. ಇದರಿಂದ ವ್ಯಾಪಾರವೂ ಕುಂಠಿತಗೊಂಡಿದ್ದು, ಮಾರಾಟದಲ್ಲಿ ಕುಸಿತ ಉಂಟಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಒಟ್ಟಾರೆ, ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೆಂಗಳೂರಿನ ಜನಸಾಮಾನ್ಯರ ಮಾಸಿಕ ಅಡುಗೆ ವೆಚ್ಚ ಮತ್ತು ಕುಟುಂಬದ ಬಜೆಟ್ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ.

ತುಂಗಭದ್ರಾ ಗೇಟ್‌ಗಳ ಲೋಕಾರ್ಪಣೆ: ಮುನಿರಾಬಾದ್‌ನ ಶಾಲೆಗಳಿಗೆ ರಜೆ ಘೋಷಣೆ!

ಕೊಪ್ಪಳ: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುನಿರಾಬಾದ್‌ನಲ್ಲಿರುವ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಸರ್ಕಾರಿ ಕಾರ್ಯಕ್ರಮ ನಡೆಯುತ್ತಿರುವ ಕಾರಣ ಮುನಿರಾಬಾದ್ ವ್ಯಾಪ್ತಿಯ ಎಲ್ಲ ಶಾಲೆಗಳಿಗೆ ಗುರುವಾರ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಜೆಯಿಂದ ಉಂಟಾಗುವ ಶೈಕ್ಷಣಿಕ ನಷ್ಟವನ್ನು ಸರಿದೂಗಿಸಲು ಮತ್ತೊಂದು ದಿನ ಶಾಲೆ ನಡೆಸಲಾಗುವುದು ಎಂದೂ ಸ್ಪಷ್ಟಪಡಿಸಿದ್ದಾರೆ.

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ ಸಮಾರಂಭವು ಮುನಿರಾಬಾದ್‌ನ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.

ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಮಾರಂಭಕ್ಕಾಗಿ 10 ಸಾವಿರದಿಂದ 15 ಸಾವಿರ ಜನರು ಕುಳಿತುಕೊಳ್ಳುವಂತೆ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದ 33 ನೂತನ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಾವಿರಾರು ರೈತರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು, ಭದ್ರತೆ ಮತ್ತು ಸಂಚಾರ ವ್ಯವಸ್ಥೆಗಳಿಗೂ ವಿಶೇಷ ಕ್ರಮ ಕೈಗೊಳ್ಳಲಾಗಿದೆ.

 

error: Content is protected !!