Home Blog

ಪಾರ್ಸೆಲ್ ಕೊಡಲು ಬಂದು ಯುವತಿಗೆ ಕಿರುಕುಳ ಆರೋಪ; ಡೆಲಿವರಿ ಬಾಯ್ ಅರೆಸ್ಟ್!

ಬೆಂಗಳೂರು: ಪಾರ್ಸೆಲ್ ನೀಡಲು ಬಂದಿದ್ದ ಡೆಲಿವರಿ ಏಜೆಂಟ್‌ವೊಬ್ಬ ಮನೆಗೆ ಬಲವಂತವಾಗಿ ಪ್ರವೇಶಿಸಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಸಿಲಿಕಾನ್ ಸಿಟಿಯಲ್ಲಿ ಕೇಳಿಬಂದಿದೆ.

ಘಟನೆ ಕುರಿತು ಸಂತ್ರಸ್ತ ಯುವತಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಪಾರ್ಸೆಲ್ ನೀಡಲು ಬಂದಿದ್ದ ಡೆಲಿವರಿ ಬಾಯ್ ಶೌಚಾಲಯ ಬಳಸಬೇಕು ಎಂದು ಅನುಮತಿ ಕೇಳಿದ್ದಾನೆ. ಆದರೆ ಅಪರಿಚಿತರನ್ನು ಮನೆ ಒಳಗೆ ಬಿಡಲು ಸಾಧ್ಯವಿಲ್ಲ ಎಂದು ಯುವತಿ ನಿರಾಕರಿಸಿದ್ದರು.

ತುರ್ತು ಪರಿಸ್ಥಿತಿ ಇದ್ದರೆ ಪಕ್ಕದ ಮನೆಯವರ ಸಹಾಯ ಪಡೆಯುವಂತೆ ಯುವತಿ ಸಲಹೆ ನೀಡಿದ್ದರೂ, ಅದನ್ನು ಲೆಕ್ಕಿಸದೆ ಡೆಲಿವರಿ ಬಾಯ್ ತನ್ನ ಪಾದರಕ್ಷೆ ಬಿಚ್ಚಿ ಬಲವಂತವಾಗಿ ಮನೆ ಪ್ರವೇಶಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಶೌಚಾಲಯದಿಂದ ಹೊರಬಂದ ಬಳಿಕ ಆತ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದು, ಘಟನೆಯಿಂದ ಭಯಗೊಂಡ ಅವರು ತಕ್ಷಣ ಮೊಬೈಲ್ ಕ್ಯಾಮೆರಾ ಆನ್ ಮಾಡಿ, ಬಾಗಿಲು ತೆರೆದು ಸಹಾಯಕ್ಕಾಗಿ ಕೂಗಿದ್ದಾರೆ.

ಯುವತಿಯ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬೆಂಗಳೂರು ನಗರ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಯುವತಿಯಿಂದ ಮಾಹಿತಿ ಪಡೆದು ಆರೋಪಿತ ಡೆಲಿವರಿ ಏಜೆಂಟ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಡೆಲಿವರಿ ಬಾಯ್‌ನನ್ನು ಬಂಧಿಸಿದ್ದಾರೆ. ಬಂಧಿತನನ್ನು ವಿಜಯ್ ಮಲ್ಲಿಕಾರ್ಜುನ್ ಕಾಮತ್ ಎಂದು ಗುರುತಿಸಲಾಗಿದೆ.

ಯುವತಿ ನೀಡಿದ ದೂರಿನ ಆಧಾರದ ಮೇಲೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಘಟನೆ ಕುರಿತು ಇ-ಕಾಮರ್ಸ್ ಸಂಸ್ಥೆ ಫ್ಲಿಪ್‌ಕಾರ್ಟ್ ಕೂಡ ಪ್ರತಿಕ್ರಿಯಿಸಿದ್ದು, ಸಿಬ್ಬಂದಿಯ ಇಂತಹ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಈ ಘಟನೆ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

ಮೈಸೂರು ವಿವಿಯಲ್ಲಿ ಎಸ್. ಜಾನಕಿ ಹೆಸರಿನಲ್ಲಿ ಸಂಗೀತ ಅಧ್ಯಯನ ಪೀಠ ಸ್ಥಾಪಿಸಿ: ಜಯಮಾಲಾ ಮನವಿ

ಮೈಸೂರು: ಭಾರತೀಯ ಸಂಗೀತ ಲೋಕದ ದಿಗ್ಗಜ ಗಾಯಕಿ ಎಸ್. ಜಾನಕಿ ಅವರ ನೆನಪಿಗಾಗಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಗೀತ ಅಧ್ಯಯನ ಪೀಠವನ್ನು ಸ್ಥಾಪಿಸಬೇಕು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಹಾಗೂ ಹಿರಿಯ ನಟಿ ಜಯಮಾಲಾ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇರಿಸಲಾಗಿದ್ದ ಎಸ್. ಜಾನಕಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಮಾಲಾ, ಜಾನಕಿ ಅಮ್ಮನ ಸಂಗೀತ ಸೇವೆಯನ್ನು ಸ್ಮರಿಸಿದರು.

“1975ರಿಂದ ಜಾನಕಮ್ಮ ಅವರನ್ನು ಬಲ್ಲೆ. ಪ್ರೇಮದ ಕಾಣಿಕೆ ಚಿತ್ರದ ಸಂದರ್ಭದಲ್ಲಿ ಅವರ ಪರಿಚಯವಾಯಿತು. ಅವರಲ್ಲಿದ್ದ ಗಾಯನದ ವೈವಿಧ್ಯತೆ ಬೇರೆ ಯಾರಲ್ಲೂ ಕಾಣಲು ಸಾಧ್ಯವಿಲ್ಲ. ಭಾರತೀಯ ಸಂಗೀತ ಇತಿಹಾಸದಲ್ಲಿ ಅವರದ್ದು ವಿಶೇಷ ದಾಖಲೆ” ಎಂದು ಹೇಳಿದರು.

ಎಸ್. ಜಾನಕಿ ಅವರು ಭಾರತೀಯ ಚಿತ್ರರಂಗದ ಶ್ರೇಷ್ಠ ಗಾನ ಕೋಗಿಲೆಯಾಗಿದ್ದರು. ಅವರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ. ನಮ್ಮ ಯಶಸ್ಸಿನ ಹಿಂದೆ ಜಾನಕಿ ಅವರ ಕೊಡುಗೆ ಇದೆ ಎಂದು ಜಯಮಾಲಾ ತಿಳಿಸಿದರು.

“ಜಾನಕಮ್ಮ ಮೈಸೂರಿನ ಸೊಸೆ. ಇದೇ ಮಣ್ಣಿನಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನೆನಪನ್ನು ಶಾಶ್ವತವಾಗಿಸಲು ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಗೀತ ಅಧ್ಯಯನ ಪೀಠ ಆರಂಭಿಸಬೇಕು. ಈ ಮೂಲಕ ಜಾನಕಮ್ಮ ಅವರನ್ನು ನಮ್ಮೊಂದಿಗೆ ಉಳಿಸಿಕೊಳ್ಳುವ ಕೆಲಸ ಮಾಡಬೇಕು” ಎಂದು ಸರ್ಕಾರಕ್ಕೆ ಮನವಿ ಮಾಡಿದರು.

1957ರಲ್ಲಿ ಗಾಯನ ಆರಂಭಿಸಿದ್ದ ಎಸ್. ಜಾನಕಿ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದ ಅವರು, ಕನ್ನಡದಲ್ಲಿ ಅಪಾರ ಸಂಖ್ಯೆಯ ಗೀತೆಗಳನ್ನು ಹಾಡಿ ಕನ್ನಡಿಗರ ಮನಗೆದ್ದಿದ್ದರು.

ಅವರು 4 ರಾಷ್ಟ್ರೀಯ ಪ್ರಶಸ್ತಿ, 33 ರಾಜ್ಯ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ಅವರ ನಿಧನದಿಂದ ಭಾರತೀಯ ಸಂಗೀತ ಲೋಕದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ.

ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಆತಂಕ; ಕಡಪದಲ್ಲಿ ಇಬ್ಬರು ಸಾವು, 4 ಹೊಸ ಪ್ರಕರಣ ಪತ್ತೆ

0

ಅಮರಾವತಿ: ಹಲವು ವರ್ಷಗಳಿಂದ ನಿಯಂತ್ರಣದಲ್ಲಿದ್ದ ಕೋವಿಡ್-19 ಸೋಂಕು ಆಂಧ್ರಪ್ರದೇಶದಲ್ಲಿ ಮತ್ತೆ ಆತಂಕ ಮೂಡಿಸಿದೆ. ಕಡಪ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, 2022ರ ಬಳಿಕ ರಾಜ್ಯದಲ್ಲಿ ವರದಿಯಾದ ಮೊದಲ ಕೋವಿಡ್ ಸಂಬಂಧಿತ ಸಾವುಗಳು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ನಾಲ್ಕು ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ತೀವ್ರಗೊಳಿಸಿದೆ.

60 ವರ್ಷದ ವೃದ್ಧ ಸಾವು:

ಕಡಪ ಜಿಲ್ಲೆಯ 60 ವರ್ಷದ ವ್ಯಕ್ತಿಯೊಬ್ಬರು ತೀವ್ರ ಅನಾರೋಗ್ಯದಿಂದ ತಿರುಪತಿಯ SVIMS ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೆಲ್ಲೂರಿನ CMC ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜೂನ್ 28ರಂದು ಮೃತಪಟ್ಟಿದ್ದಾರೆ.

ಮರಣದ ಬಳಿಕ ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.

46 ವರ್ಷದ ವ್ಯಕ್ತಿಯೂ ಬಲಿ:

ಕಡಪದ ಮಾಸಪೇಟೆಯ 46 ವರ್ಷದ ವ್ಯಕ್ತಿಯೊಬ್ಬರು ತೀವ್ರ ಜ್ವರ ಮತ್ತು ಕೆಮ್ಮಿನಿಂದ ಜುಲೈ 4ರಂದು ಕಡಪ RIMS ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶಕ್ಕೆ ಸೋಂಕು ತೀವ್ರವಾಗಿ ಹರಡಿದ್ದರಿಂದ ನಾಲ್ಕು ದಿನಗಳ ಚಿಕಿತ್ಸೆಯ ಬಳಿಕ ಮೃತಪಟ್ಟಿದ್ದಾರೆ.

ಈ ವ್ಯಕ್ತಿಗೆ ಅತಿಯಾದ ಮದ್ಯಪಾನದ ಹಿನ್ನೆಲೆ ಇದ್ದ ಕಾರಣ ಉಸಿರಾಟದ ಸಮಸ್ಯೆ ಮತ್ತಷ್ಟು ಗಂಭೀರವಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ನಾಲ್ಕು ಹೊಸ ಕೋವಿಡ್ ಪ್ರಕರಣ ಪತ್ತೆ:

ಇಬ್ಬರ ಸಾವಿನ ಜೊತೆಗೆ ಕಡಪ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಾಲ್ಕು ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಮೂವರು ಸೋಂಕಿತರಿಗೆ ಸೌಮ್ಯ ಲಕ್ಷಣಗಳಿದ್ದು, ಮನೆಯಲ್ಲೇ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ.

ತೀವ್ರ ಲಕ್ಷಣ ಹೊಂದಿದ್ದ ಮತ್ತೊಬ್ಬ ಸೋಂಕಿತನನ್ನು ಕಡಪ RIMS ಆಸ್ಪತ್ರೆಯ ವಿಶೇಷ ಕೋವಿಡ್ ವಾರ್ಡ್‌ಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹೊಸ ರೂಪಾಂತರದ ಶಂಕೆ; ಪುಣೆಗೆ ಮಾದರಿ ರವಾನೆ:

ಇತ್ತೀಚಿನ ಸೋಂಕುಗಳಿಗೆ ಕೋವಿಡ್‌ನ ಹೊಸ ಓಮಿಕ್ರಾನ್ ಉಪ-ರೂಪಾಂತರ ಕಾರಣವಾಗಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ. ವೈರಸ್‌ನ ತಳಿಯನ್ನು ಪತ್ತೆಹಚ್ಚಲು ಮೃತಪಟ್ಟ ಇಬ್ಬರ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (NIV) ಗೆ ಜೀನೋಮ್ ಅನುಕ್ರಮಣಿಕೆ ಪರೀಕ್ಷೆಗೆ ಕಳುಹಿಸಲಾಗಿದೆ.

ವರದಿ ಬಂದ ಬಳಿಕ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಆತಂಕ ಬೇಡ, ಎಚ್ಚರಿಕೆ ಇರಲಿ:

ಕಡಪ ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಜ್ವರ, ಕೆಮ್ಮು ಹಾಗೂ ಇನ್ಫ್ಲುಯೆನ್ಸ ಲಕ್ಷಣಗಳಿರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ.

ಸದ್ಯಕ್ಕೆ ಇದು ಸೀಮಿತ ಪ್ರಕರಣಗಳಾಗಿದ್ದು, ಯಾವುದೇ ದೊಡ್ಡ ಮಟ್ಟದ ಸಮುದಾಯ ಪ್ರಸರಣ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿರಿಯ ನಾಗರಿಕರು, ಗರ್ಭಿಣಿಯರು ಹಾಗೂ ಆರೋಗ್ಯ ಸಮಸ್ಯೆ ಇರುವವರು ಮುನ್ನೆಚ್ಚರಿಕೆಯಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಜನದಟ್ಟಣೆಯ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಕಾಂಗ್ರೆಸ್‌ಗೆ ಆಘಾತ; ರಾಯಚೂರಿನ ಮಾಜಿ ಶಾಸಕ ಸೈಯದ್ ಯಾಸಿನ್ ನಿಧನ!

ರಾಯಚೂರು: ಮಾಜಿ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಜಾಫರ್ ಶರೀಫ್ ಅವರ ಅಳಿಯ ಸೈಯದ್ ಯಾಸಿನ್ (70) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.

ಸೈಯದ್ ಯಾಸಿನ್ ಅವರು ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದರು. 1999 ಮತ್ತು 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2008ರ ಚುನಾವಣೆಯಲ್ಲಿ ರಾಯಚೂರು ಜಿಲ್ಲೆಯಿಂದ ಕಾಂಗ್ರೆಸ್ ಪಕ್ಷದ ಏಕೈಕ ಮುಸ್ಲಿಂ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು, ಕುಟುಂಬಸ್ಥರು ಹಾಗೂ ಅಪಾರ ಬಂಧು-ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.

ಸೈಯದ್ ಯಾಸಿನ್ ಅವರ ಅಂತ್ಯಕ್ರಿಯೆ ಇಂದು ಸಂಜೆ ರಾಯಚೂರು ನಗರದ ಕಮಲಿವಾಲೆ ಬಾಬಾ ಕಬರಸ್ಥಾನದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಎ. ವಸಂತ ಕುಮಾರ್ ಸೇರಿದಂತೆ ಹಲವು ಗಣ್ಯರು ಸೈಯದ್ ಯಾಸಿನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದಲ್ಲಿ ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು; ಹಂಸಲೇಖ ಮನವಿ!

ಮೈಸೂರು: ಕರುನಾಡಿನ ಮಣ್ಣಲ್ಲಿ ಖ್ಯಾತ ಗಾಯಕಿ ಎಸ್‌. ಜಾನಕಿ ಅವರು ಕೊನೆಯುಸಿರೆಳೆದಿದ್ದು, ಅವರ ನೆನಪಿಗಾಗಿ ಕರ್ನಾಟಕದಲ್ಲಿ ಸ್ಮಾರಕ ನಿರ್ಮಾಣವಾಗಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹಂಸಲೇಖ, “ಜಾನಕಿ ಅಂದ್ರೆ ಸೀತೆ, ಸೀತೆ ಅಂದ್ರೆ ನಮಗೆ ಗೀತೆ. ಅವರ ಆಸೆ ಕರುನಾಡಿನಲ್ಲಿತ್ತು. ಅವರ ಸ್ಮಾರಕ ನಿರ್ಮಾಣವಾಗಬೇಕು. ಈ ವಿಚಾರವನ್ನು ಸಂಬಂಧಪಟ್ಟವರ ಗಮನಕ್ಕೆ ತರೋಣ” ಎಂದು ಹೇಳಿದರು.

ಎಸ್‌. ಜಾನಕಿ ಅವರದ್ದು ಪರಿಪೂರ್ಣ ಜೀವನವಾಗಿದ್ದು, 88 ವರ್ಷಗಳನ್ನು ಪೂರೈಸಿದ್ದಾರೆ. ಅವರು ದೇವರ ಭಕ್ತರಾಗಿದ್ದರು. ಸಂಗೀತವೇ ದೇವರು, ಸಂಗೀತ ಎಲ್ಲ ದೇವರಿಗೂ ಪ್ರಿಯವಾದದ್ದು ಎಂದು ಹಂಸಲೇಖ ಹೇಳಿದರು.

ಮೈಸೂರು ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಜಾನಕಿ ಅವರ ಸ್ಮಾರಕ ನಿರ್ಮಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್‌. ಜಾನಕಿ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಜುಲೈ 11ರಂದು ನಿಧನರಾಗಿದ್ದರು. ಚಿಕಿತ್ಸೆಗೆ ದಾಖಲಾಗಿದ್ದ ಅವರು, ಮಗನ ನಿಧನದ ಬಳಿಕ ಮೈಸೂರಿನ ಬೋಗಾದಿಯಲ್ಲಿರುವ ಆಪ್ತರ ಮನೆಯಲ್ಲಿ ವಾಸವಾಗಿದ್ದರು.

80ರ ದಶಕದಲ್ಲಿ ತಮ್ಮ ಸುಮಧುರ ಕಂಠದಿಂದ ಅಪಾರ ಜನಪ್ರಿಯತೆ ಗಳಿಸಿದ್ದ ಜಾನಕಿ ಅವರನ್ನು “ಭಾರತದ ನೈಟಿಂಗೇಲ್” ಎಂದೇ ಕರೆಯಲಾಗುತ್ತಿತ್ತು. ಸುಮಾರು 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಅವರು, ಕನ್ನಡ ಸೇರಿದಂತೆ ಹಲವು ಭಾಷೆಗಳ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ಆಂಧ್ರಪ್ರದೇಶದಲ್ಲಿ ಜನಿಸಿದ್ದರೂ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹೊಂದಿದ್ದ ಜಾನಕಿ ಅವರು ಕನ್ನಡದಲ್ಲೇ ಅತಿ ಹೆಚ್ಚು ಗೀತೆಗಳನ್ನು ಹಾಡಿದ್ದರು. ಅವರು 4 ರಾಷ್ಟ್ರೀಯ ಪ್ರಶಸ್ತಿ, 33 ರಾಜ್ಯ ಪ್ರಶಸ್ತಿ, ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು.

ಬ್ಯಾಗ್‌ನಲ್ಲಿ ಬಂತು ₹4 ಕೋಟಿ ಡ್ರಗ್ಸ್! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಬಂಧನ

ದೇವನಹಳ್ಳಿ: ವಿದೇಶದಿಂದ ಅಕ್ರಮವಾಗಿ ತಂದಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 12.07 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ಸುಮಾರು 4 ಕೋಟಿ 22 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಪ್ರಯಾಣಿಕರ ತಪಾಸಣೆ ವೇಳೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಬ್ಯಾಗ್ ಪರಿಶೀಲಿಸಿದಾಗ ಮಾದಕ ವಸ್ತು ಪತ್ತೆಯಾಗಿದೆ. ಈ ಸಂಬಂಧ ಆರೋಪಿಯನ್ನು ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಿ ತನಿಖೆ ಮುಂದುವರಿಸಲಾಗಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತು ಸಾಗಾಟ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಸ್ಟಮ್ಸ್ ಅಧಿಕಾರಿಗಳು ಹಲವು ಕಾರ್ಯಾಚರಣೆ ನಡೆಸಿದ್ದಾರೆ.

ಜೂನ್ 26ರಂದು ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ ₹2.086 ಕೋಟಿ ಮೌಲ್ಯದ 5.960 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿತ್ತು. ಮತ್ತೊಂದು ಪ್ರಕರಣದಲ್ಲಿ ₹5.58 ಕೋಟಿ ಮೌಲ್ಯದ 6.98 ಕೆಜಿ ಮೆಸ್ಕಲಿನ್ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿತ್ತು.

ಇದೇ ರೀತಿ ಜೂನ್ 17ರಂದು ₹5.43 ಕೋಟಿ ಮೌಲ್ಯದ 15.520 ಕೆಜಿ ಹೈಡ್ರೋಪೋನಿಕ್ ಗಾಂಜಾ ಹಾಗೂ ಜೂನ್ 29ರಂದು ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನಿಂದ 8 ಕೆಜಿ ತೂಕದ ₹2.80 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಲಾಗಿತ್ತು.

ಕೌಟುಂಬಿಕ ಕಲಹಕ್ಕೆ ಬಲಿಯಾದ ‘ಅಳಿಯ’: ತವರು ಸೇರಿದ್ದ ಹೆಂಡ್ತಿ ಕರೆತರಲು ಹೋದವನ ಬರ್ಬರ ಕೊಲೆ!

0

ವಿಜಯಪುರ: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಬಾಬುಸಾಬ್ ಜಮಾದಾರ್ (35) ಎಂದು ಗುರುತಿಸಲಾಗಿದೆ.

ಐದು ವರ್ಷಗಳ ಹಿಂದೆ ಬಾಬುಸಾಬ್ ಅವರು ತಮ್ಮ ಸ್ವಂತ ಸಹೋದರಿ ಮೀನಾಕ್ಷಿ ಅವರ ಮಗಳು ಸೌಂದರ್ಯಳನ್ನು ವಿವಾಹವಾಗಿದ್ದರು. ಕಳೆದ ಐದು ತಿಂಗಳಿಂದ ದಂಪತಿ ನಡುವೆ ಕಲಹ ಉಂಟಾಗಿ ಸೌಂದರ್ಯ ತವರು ಮನೆಯಲ್ಲಿ ವಾಸವಾಗಿದ್ದಳು.

ನಿನ್ನೆ ರಾತ್ರಿ ಪತ್ನಿಯನ್ನು ವಾಪಸ್ ಕರೆದುಕೊಂಡು ಹೋಗಲು ಬಾಬುಸಾಬ್, ತಮ್ಮ ಸ್ನೇಹಿತ ಅಪ್ಪಾಲಾಲ ಮಕಾಸಿ ಜೊತೆ ಹಲಸಂಗಿಗೆ ಬಂದಿದ್ದರು. ಈ ವೇಳೆ ನಡೆದ ಮಾತಿನ ಚಕಮಕಿ ಗಲಾಟೆಗೆ ತಿರುಗಿದೆ ಎನ್ನಲಾಗಿದೆ.

ಸೌಂದರ್ಯಳ ತಾಯಿ ಮೀನಾಕ್ಷಿ, ಸಹೋದರ ವಿಕಾಸ್ ಹಾಗೂ ರಫೀಕ್ ಸೇರಿ ಬಾಬುಸಾಬ್ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಬುಸಾಬ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅವರ ಸ್ನೇಹಿತ ಅಪ್ಪಾಲಾಲ ಮಕಾಸಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಳಿಕ ಆರೋಪಿತರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಇನ್ಸ್‌ಪೆಕ್ಟರ್ ಪರಶುರಾಮ ಮನಗೂಳಿ ಹಾಗೂ ಝಳಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓವರ್‌ಲೋಡ್ ಎಂ-ಸ್ಯಾಂಡ್, ಮರಳು ಸಾಗಣೆ ಮೇಲೆ ಪೊಲೀಸ್‌ ದಾಳಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಮೂಲಕ ಮಿತಿಮೀರಿದ (ಓವರ್‌ಲೋಡ್) ಎಂ-ಸ್ಯಾಂಡ್ ಹಾಗೂ ಮರಳು ಸಾಗಣೆ ಮಾಡುತ್ತಿದ್ದ ವಾಹನಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ 3 ಟಿಪ್ಪರ್‌ಗಳು ಹಾಗೂ 1 ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ಮಧ್ಯರಾತ್ರಿಯಿಂದ ಶನಿವಾರ ನಸುಕಿನವರೆಗೆ ನಡೆದ ಕಾರ್ಯಾಚರಣೆಯಲ್ಲಿ, ಅಡರಕಟ್ಟಿ ಗ್ರಾಮದಿಂದ ಸುಮಾರು 5 ಟನ್ ಅಧಿಕ ಮರಳು ಸಾಗಿಸುತ್ತಿದ್ದ ಲಾರಿ, ಮಾಗಡಿ, ಹುಲ್ಲೂರು ಹಾಗೂ ಬೆಳ್ಳಟ್ಟಿ ಗ್ರಾಮಗಳಿಂದ ಹೆಚ್ಚುವರಿ ಎಂ-ಸ್ಯಾಂಡ್ ಹೊತ್ತೊಯ್ಯುತ್ತಿದ್ದ ಮೂರು ಟಿಪ್ಪರ್‌ಗಳನ್ನು ತಡೆದು ವಶಪಡಿಸಿಕೊಳ್ಳಲಾಯಿತು.

ಓವರ್‌ಲೋಡ್ ಸಾಗಣೆ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿಗಳಿಗೆ ಮಾಹಿತಿ ನೀಡಲಾಗಿದೆ.

ಕಾರ್ಯಾಚರಣೆಯಲ್ಲಿ ಪಿಎಸ್‌ಐ ನಾಗರಾಜ ಗಡದ, ಕ್ರೈಂ ಪಿಎಸ್‌ಐ ಟಿ.ಕೆ. ರಾಥೋಡ್ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ: ಬಸವರಾಜ ಬೊಮ್ಮಾಯಿ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಗದಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಶೇ.50ಕ್ಕೂ ಹೆಚ್ಚು ತಾಲೂಕುಗಳು ಬರದ ಸಂಕಷ್ಟದಲ್ಲಿದ್ದರೂ ಸರ್ಕಾರ ಯಾವುದೇ ಕಾರ್ಯಯೋಜನೆ ರೂಪಿಸಿಲ್ಲ. ಗದಗ ಜಿಲ್ಲೆಯಲ್ಲಿ ಕೇವಲ ಶೇ.30ರಷ್ಟು ಮಾತ್ರ ಬಿತ್ತನೆಯಾಗಿದ್ದು, ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ಎನ್‌ಡಿಆರ್‌ಎಫ್ ನಿಧಿಯಿಂದ ರೈತರಿಗೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಕೃಷಿ ಇಲಾಖೆ ನಿಷ್ಕ್ರಿಯವಾಗಿದ್ದು, ರೈತರಿಗೆ ಪರ್ಯಾಯ ಬೆಳೆ ಕುರಿತು ಯಾವುದೇ ಮಾರ್ಗದರ್ಶನ ಸಿಕ್ಕಿಲ್ಲ. ಗದಗ ನಗರದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿದ್ದು, ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ನೇಮಿಸಿ 15 ದಿನಗಳಾದರೂ ಅವರು ಜಿಲ್ಲೆಗೆ ಭೇಟಿ ನೀಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಬೊಮ್ಮಾಯಿ, ಸಂಕಷ್ಟದ ಸಮಯದಲ್ಲಿ ಜನರೊಂದಿಗೆ ನಿಲ್ಲದ ಸರ್ಕಾರ ಬೇಜವಾಬ್ದಾರಿಯಾಗಿದೆ ಎಂದು ಟೀಕಿಸಿದರು.

ಅಘೋರ ಹೋಮಕ್ಕೆ ಪೂರ್ಣಾಹುತಿ; ಮಂಗಲ ಭವನ ನಿರ್ಮಾಣಕ್ಕೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಹೊಂದಿಕೊಂಡಂತೆ ನಿರ್ಮಾಣವಾಗಲಿರುವ ಶ್ರೀ ದತ್ತ ಮಂಗಲ ಭವನ ಕಾಮಗಾರಿ ಯಶಸ್ವಿಯಾಗಲೆಂದು ಪಟ್ಟಣದ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಶನಿವಾರ ಅಘೋರ ಹೋಮ ಹಾಗೂ ಪೂರ್ಣಾಹುತಿ ನೆರವೇರಿಸಲಾಯಿತು.

ಹೋಮದ ಪೂರ್ಣಾಹುತಿ ಬಳಿಕ ಮಾತನಾಡಿದ ಅರ್ಚಕ ಶ್ರೀವಲ್ಲಭಭಟ್ಟ ಸದರಜೋಷಿ, ಯಾವುದೇ ದೇವಸ್ಥಾನದ ಜೀರ್ಣೋದ್ಧಾರ ಅಥವಾ ಧಾರ್ಮಿಕ ಕಟ್ಟಡ ನಿರ್ಮಾಣದಂತಹ ಕಾರ್ಯಗಳಿಗೆ ಮುನ್ನ ಅಘೋರ ಹೋಮ ನೆರವೇರಿಸುವುದು ಶಾಸ್ತ್ರಸಮ್ಮತವಾಗಿದೆ ಎಂದು ಹೇಳಿದರು.

ಶ್ರೀ ದತ್ತ ಮಂಗಲ ಭವನ ಸಮಿತಿಯ ಗೌರವಾಧ್ಯಕ್ಷ ಡಾ. ಜಿ.ಕೆ. ಕಾಳೆ ಮಾತನಾಡಿ, ಶ್ರೀ ಗುರುದತ್ತಾತ್ರೇಯರ ಪ್ರೇರಣೆಯಿಂದ ಮಂಗಲ ಭವನ ನಿರ್ಮಾಣದ ಸಂಕಲ್ಪ ಕೈಗೊಂಡಿದ್ದು, ಭಕ್ತರ ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವಿಶ್ವನಾಥಭಟ್ಟ ವೈದ್ಯ, ಅರುಣ ಗ್ರಾಮಪುರೋಹಿತ, ಅಜಿತ ಕುಲಕರ್ಣಿ, ನಾಗೇಶಭಟ್ಟ ಗ್ರಾಮಪುರೋಹಿತ, ಪ್ರಶಾಂತ ಗ್ರಾಮಪುರೋಹಿತ, ಡಾ. ನಾಗರಾಜ ಗ್ರಾಮಪುರೋಹಿತ, ಶ್ರೀಪಾದಭಟ್ಟ ಜೋಷಿ, ಪ್ರಕಾಶ ಕುಲಕರ್ಣಿ, ಬಿ.ಎಲ್. ಕುಲಕರ್ಣಿ ಸೇರಿದಂತೆ ದತ್ತಭಕ್ತ ಮಂಡಳಿಯ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಶ್ರೀಪಾದ ಕುಲಕರ್ಣಿ ದಂಪತಿ ಪೂರ್ಣಾಹುತಿ ಅರ್ಪಿಸಿದರು.