Home Blog

ಸಮಾಜಮುಖಿ ವ್ಯಕ್ತಿಗಳು ಸದಾ ಸ್ಮರಣೀಯರು: ಎಸ್.ವಿ. ಸಂಕನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ವ್ಯಕ್ತಿಯ ಬದುಕಿನ ಅವಧಿಗಿಂತ ಸಮಾಜಕ್ಕಾಗಿ ಮಾಡಿದ ಕಾರ್ಯಗಳೇ ಅವರನ್ನು ಸದಾ ಸ್ಮರಣೀಯರನ್ನಾಗಿಸುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವಾನಂದ ಗಿಡ್ನಂದಿ ಅವರ ಸಂಸ್ಮರಣ ಗ್ರಂಥ ‘ಸದಾಶಿವಾನಂದ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಶಿಕ್ಷಕರಾಗಿದ್ದ ಶಿವಾನಂದ ಗಿಡ್ನಂದಿ ಅವರು ಬೋಧನೆಯ ಜೊತೆಗೆ ಸಾಹಿತ್ಯ, ಸಂಸ್ಕೃತಿ ಮತ್ತು ಸಂಘಟನಾ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಕವಿಯಾಗಿ, ಸಂಘಟಕರಾಗಿ ಹಾಗೂ ಉತ್ತಮ ಬೋಧಕರಾಗಿ ಗದಗದ ಸಾಂಸ್ಕೃತಿಕ ಶ್ರೀಮಂತಿಕೆಗೆ ತಮ್ಮದೇ ಆದ ಕಾಣಿಕೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.

ಮಾಜಿ ಸಚಿವ ಎಸ್.ಎಸ್. ಪಾಟೀಲ ಮಾತನಾಡಿ, ಶಿಕ್ಷಕರು ಕೇವಲ ಪಾಠ ಬೋಧನೆಗೆ ಸೀಮಿತರಾಗದೆ ಸಮಾಜ ಮತ್ತು ಸಂಸ್ಕೃತಿಯ ಬೆಳವಣಿಗೆಯಲ್ಲೂ ಪಾತ್ರ ವಹಿಸಬೇಕು. ಶಿವಾನಂದ ಗಿಡ್ನಂದಿ ಅವರು ಉತ್ತಮ ಶಿಕ್ಷಕ, ಸಾಹಿತಿ ಹಾಗೂ ಸಂಘಟಕರಾಗಿ ಸಮಾಜಕ್ಕೆ ಮಾದರಿಯಾಗಿದ್ದರು ಎಂದರು.

ಪ್ರೊ. ಚಂದ್ರಶೇಖರ ವಸ್ತ್ರದ ಮಾತನಾಡಿ, ಗಿಡ್ನಂದಿ ಅವರು ಉತ್ತಮ ವಾಗ್ಮಿ, ನಿರೂಪಕ ಹಾಗೂ ಕವಿಯಾಗಿದ್ದು ಸಾಹಿತ್ಯ ವಲಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು ಎಂದು ಹೇಳಿದರು.

ಗ್ರಂಥವನ್ನು ಪರಿಚಯಿಸಿದ ಡಾ. ಎಚ್.ಬಿ. ಪೂಜಾರ ಅವರು, ಈ ಕೃತಿಯಲ್ಲಿ ಶಿವಾನಂದ ಗಿಡ್ನಂದಿ ಅವರ ವ್ಯಕ್ತಿತ್ವ, ಸಾಹಿತ್ಯ ಸಾಧನೆ, ಕವಿತೆಗಳು ಹಾಗೂ ಲೇಖನಗಳನ್ನು ಒಳಗೊಂಡ ಸಮಗ್ರ ಚಿತ್ರಣ ನೀಡಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಗಿಡ್ನಂದಿ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಸೇವಾ ಪರಂಪರೆಯನ್ನು ಕುಟುಂಬ ಮುಂದುವರಿಸಿಕೊಂಡು ಹೋಗುತ್ತಿರುವುದು ಸಂತಸದ ಸಂಗತಿ ಎಂದರು.

ಸಾನ್ನಿಧ್ಯ ವಹಿಸಿದ್ದ ಭೈರನಹಟ್ಟಿ ದೊರೆಸ್ವಾಮಿಮಠದ ಶಾಂತಲಿಂಗ ಮಹಾಸ್ವಾಮಿಗಳು ಮಾತನಾಡಿ, ಸಾಹಿತ್ಯ ಪರಿಷತ್ತಿನಲ್ಲಿ ಗಿಡ್ನಂದಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯವಾಗಿದ್ದು, ಅವರ ಜೀವನ ಸಾಧನೆಯನ್ನು ದಾಖಲಿಸುವ ಈ ಗ್ರಂಥ ಮುಂದಿನ ಪೀಳಿಗೆಗೆ ದಾರಿದೀಪವಾಗಲಿ ಎಂದು ಆಶಿಸಿದರು.

ನಿವೃತ್ತ ಉಪನ್ಯಾಸಕ ಎಸ್.ಜಿ. ಕಡೇಮನಿ ಮಾತನಾಡಿ, ಶಿವಾನಂದ ಗಿಡ್ನಂದಿ ಅವರು ಶಿಕ್ಷಣ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಬಹುಮುಖ ಪ್ರತಿಭೆಯಾಗಿದ್ದರು ಎಂದು ಹೇಳಿದರು.

ವೇದಿಕೆಯಲ್ಲಿ ಮಹಾದೇವಪ್ಪ ಕಡೇಮನಿ, ಶಕುಂತಲಾ ಗಿಡ್ನಂದಿ ಉಪಸ್ಥಿತರಿದ್ದರು. ಮಂಜುಳಾ ವೆಂಕಟೇಶಯ್ಯ ಕವನ ವಾಚಿಸಿದರು. ಡಾ. ದತ್ತಪ್ರಸನ್ನ ಪಾಟೀಲ ನಿರೂಪಿಸಿದರು. ರಾಹುಲ ಗಿಡ್ನಂದಿ ಸ್ವಾಗತಿಸಿದರು. ರಕ್ಷಿತಾ ಗಿಡ್ನಂದಿ ವಂದಿಸಿದರು.

“ಬದುಕಿರುವ ಅವಧಿಗಿಂತ ಸಮಾಜಕ್ಕಾಗಿ ಮಾಡಿದ ಕಾರ್ಯಗಳೇ ವ್ಯಕ್ತಿಯನ್ನು ಸದಾ ಸ್ಮರಣೀಯರನ್ನಾಗಿಸುತ್ತವೆ.”

ಎಸ್.ವಿ. ಸಂಕನೂರ, ವಿಧಾನ ಪರಿಷತ್ ಸದಸ್ಯ

ಡ್ರಗ್ಸ್‌ನಿಂದ ಯುವಕರ ಕನಸುಗಳು ನಾಶ: ಐಜಿಪಿ ಸಂದೀಪ್ ಪಾಟೀಲ್ ಎಚ್ಚರಿಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಕೇವಲ ಪೊಲೀಸ್ ಇಲಾಖೆಯಿಂದ ಸಾಧ್ಯವಿಲ್ಲ. ಸಾರ್ವಜನಿಕರು, ಪೋಷಕರು, ಶಿಕ್ಷಕರು ಹಾಗೂ ಯುವಜನತೆ ಕೈಜೋಡಿಸಿದಾಗ ಮಾತ್ರ ಈ ಸಾಮಾಜಿಕ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ್ ಹೇಳಿದರು.

ಅಂತರರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಿಸಿದ್ದ ‘ಮಾದಕ ವ್ಯಸನ ಮುಕ್ತ ಗದಗ ವಾಕ್‌ಥಾನ್-2026’ ಕಾರ್ಯಕ್ರಮಕ್ಕೆ ನಗರದ ಗಾಂಧಿ ವೃತ್ತದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು.

ಯುವಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಜೀವನದಲ್ಲಿ ವೈದ್ಯ, ಇಂಜಿನಿಯರ್, ಪೊಲೀಸ್ ಅಧಿಕಾರಿ, ಕ್ರೀಡಾಪಟು ಸೇರಿದಂತೆ ದೊಡ್ಡ ಕನಸುಗಳಿರುತ್ತವೆ. ಆದರೆ ಡ್ರಗ್ಸ್‌ನಂತಹ ದುಶ್ಚಟಗಳಿಗೆ ಒಮ್ಮೆ ಬಲಿಯಾದರೆ ಆ ಎಲ್ಲ ಕನಸುಗಳು ನುಚ್ಚುನೂರಾಗುತ್ತವೆ. ಹೀಗಾಗಿ ಯಾವುದೇ ಕಾರಣಕ್ಕೂ ಮಾದಕ ವಸ್ತುಗಳತ್ತ ಆಕರ್ಷಿತರಾಗಬಾರದು ಎಂದು ಕಿವಿಮಾತು ಹೇಳಿದರು.

ಜೂನ್ 26ರಂದು ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಹಿನ್ನೆಲೆಯಲ್ಲಿ ವಾರಪೂರ್ತಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಡ್ರಗ್ಸ್ ಮಾರಾಟಗಾರರಷ್ಟೇ ಅಲ್ಲ, ಮಾದಕ ವಸ್ತುಗಳನ್ನು ಸೇವಿಸುವವರ ಮೇಲೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಮಾದಕ ವ್ಯಸನವು ಕೇವಲ ವ್ಯಕ್ತಿಯನ್ನಷ್ಟೇ ಅಲ್ಲ, ಕುಟುಂಬ ಹಾಗೂ ಸಮಾಜದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ಸ್ನೇಹಿತರ ಒತ್ತಡಕ್ಕೆ ಮಣಿದು ಒಮ್ಮೆ ಡ್ರಗ್ಸ್ ಸೇವಿಸಿದರೂ ಅದು ಜೀವಮಾನವಿಡೀ ವ್ಯಸನಿಯಾಗುವ ಅಪಾಯವಿದೆ ಎಂದು ಎಚ್ಚರಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ಕಾನೂನು ಕ್ರಮಗಳ ಜೊತೆಗೆ ಜನಜಾಗೃತಿಯೂ ಅಗತ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಗ್ರಾಮ ಹಾಗೂ ಮನೆಗಳಲ್ಲಿ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಮೂಲಕ ಸಮಾಜ ಪರಿವರ್ತನೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಐಎಂಎ ಹಿರಿಯ ಅಧ್ಯಕ್ಷ ಡಾ. ಪ್ಯಾರೇಲಾಲ್ ಮುಲಾನಿ ಮಾತನಾಡಿ, ಮಾದಕ ವ್ಯಸನದಿಂದ ಹೊರಬರಲು ಕೇವಲ ಔಷಧಿಗಳಷ್ಟೇ ಸಾಕಾಗುವುದಿಲ್ಲ. ಯೋಗ, ಮನೋವೈದ್ಯಕೀಯ ಚಿಕಿತ್ಸೆ, ಸೈಕೋಥೆರಪಿ ಹಾಗೂ ಕೌನ್ಸೆಲಿಂಗ್ ಅಗತ್ಯವಾಗಿದೆ ಎಂದು ಹೇಳಿದರು.

ಗಾಂಧಿ ವೃತ್ತದಿಂದ ಆರಂಭವಾದ ವಾಕ್‌ಥಾನ್ ರೋಟರಿ ವೃತ್ತ, ಭೂಮರೆಡ್ಡಿ ವೃತ್ತ, ಹಳೆ ಡಿಸಿ ಕಚೇರಿ ಮಾರ್ಗವಾಗಿ ಬಸವೇಶ್ವರ ಮೂರ್ತಿ ಬಳಿಯ ಭೀಷ್ಮಕೆರೆಯವರೆಗೆ ಸಂಚರಿಸಿತು.

“ಮಾದಕ ವ್ಯಸನ ಜೀವನ ಮಸಣ”, “ನಮ್ಮೆಲ್ಲರ ನಡೆ ಮಾದಕ ವ್ಯಸನ ಮುಕ್ತತೆಯ ಕಡೆ”, “ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ” ಎಂಬ ಘೋಷಣೆಗಳು ನಗರದ ಪ್ರಮುಖ ರಸ್ತೆಗಳಲ್ಲಿ ಮೊಳಗಿದವು. ವಿದ್ಯಾರ್ಥಿಗಳು ಜಾಗೃತಿ ಫಲಕಗಳನ್ನು ಹಿಡಿದು ಸಾರ್ವಜನಿಕರ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಮಹಾಂತೇಶ್ ಸಜ್ಜನ, ಡಿಎಸ್‌ಪಿ ಮುರ್ತುಜಾ ಖಾದ್ರಿ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಮ್ಸ್ ನರ್ಸಿಂಗ್ ಕಾಲೇಜು, ಲಯನ್ಸ್ ಕ್ಲಬ್, ಎಎಸ್‌ಎಸ್ ಕಾಲೇಜು, ಸಂಕಲ್ಪ ನರ್ಸಿಂಗ್ ಕಾಲೇಜು, ಕೆಎಲ್‌ಇ ಪ್ಯಾರಾಮೆಡಿಕಲ್ ಕಾಲೇಜು, ಬಸವೇಶ್ವರ ಪ್ಯಾರಾಮೆಡಿಕಲ್ ಕಾಲೇಜು, ಸಿಎಸ್‌ಐ ನರ್ಸಿಂಗ್ ಕಾಲೇಜು, ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು, ಆರ್‌ಡಿಪಿಆರ್ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

“ಡ್ರಗ್ಸ್‌ನಂತಹ ದುಶ್ಚಟಗಳಿಗೆ ಬಲಿಯಾದರೆ ಯುವಕರ ಎಲ್ಲ ಕನಸುಗಳು ನುಚ್ಚುನೂರಾಗುತ್ತವೆ. ‘ಸೇ ನೋ ಟು ಡ್ರಗ್ಸ್’ ಎಂಬ ಸಂಕಲ್ಪವನ್ನು ಜೀವನದುದ್ದಕ್ಕೂ ಪಾಲಿಸಬೇಕು.”

– ಸಂದೀಪ್ ಪಾಟೀಲ್, ಐಜಿಪಿ, ಬೆಳಗಾವಿ ಉತ್ತರ ವಲಯ

ಡ್ರಗ್ಸ್ ಜಾಲದ ವಿರುದ್ಧ ಗದಗ ಪೊಲೀಸರ ಖಡಕ್ ಕ್ರಮ

ಕಳೆದ ಒಂದು ವರ್ಷದಲ್ಲಿ ಗದಗ ಜಿಲ್ಲಾ ಪೊಲೀಸರು ಮಾದಕ ವಸ್ತುಗಳ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಿ 27 ಪ್ರಕರಣಗಳನ್ನು ದಾಖಲಿಸಿ 52 ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳ ಪೈಕಿ ಮೊದಲ ಬಾರಿಗೆ ಗದಗ ಜಿಲ್ಲೆಯಲ್ಲಿ ಪಿಐಟಿ-ಎನ್‌ಡಿಪಿಎಸ್ (PIT NDPS) ಕಾಯ್ದೆಯಡಿ ಕುಖ್ಯಾತ ಡ್ರಗ್ ಪೆಡ್ಲರ್ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿದೆ ಎಂದು ಐಜಿಪಿ ಸಂದೀಪ್ ಪಾಟೀಲ್ ಮಾಹಿತಿ ನೀಡಿದರು.

ಮಾದಕ ವಸ್ತುಗಳ ಜಾಲ ಬೇರುಸಹಿತ ಕಿತ್ತೊಗೆಯಲು ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ಮುಂದುವರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಕೆ. ಲಮಾಣಿ ಆಗ್ರಹಿಸಿದ್ದಾರೆ.

ಪ್ರಕಟಣೆ ನೀಡಿರುವ ಅವರು, ಎಚ್.ಕೆ. ಪಾಟೀಲ ಅವರು ಈ ಹಿಂದೆ ನೀರಾವರಿ, ಕೃಷಿ, ಜವಳಿ ಸೇರಿದಂತೆ ಹಲವು ಪ್ರಮುಖ ಇಲಾಖೆಗಳಲ್ಲಿ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಗದಗ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿರುವುದು ಅವರ ಕಾರ್ಯಕ್ಷಮತೆ ಮತ್ತು ಜನಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಪಕ್ಷದ ನಿಷ್ಠಾವಂತ ಹಾಗೂ ಅನುಭವಿ ರಾಜಕಾರಣಿಯಾಗಿರುವ ಎಚ್.ಕೆ. ಪಾಟೀಲ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹೈಕಮಾಂಡ್ ಸಚಿವ ಸ್ಥಾನ ನೀಡುವ ಮೂಲಕ ಗೌರವಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಳೆಗಾಗಿ ಸೋಮೇಶ್ವರನಿಗೆ ಅಹೋರಾತ್ರಿ ಜಲಾಭಿಷೇಕ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಪಟ್ಟಣದ ಐತಿಹಾಸಿಕ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆ ಹಾಗೂ ರೈತರ ಒಳಿತಿಗಾಗಿ ಸೋಮವಾರ ಮುಂಜಾನೆಯಿಂದ ಅಹೋರಾತ್ರಿ ವಿಶೇಷ ಜಲಾಭಿಷೇಕ, ರುದ್ರಾಭಿಷೇಕ ಹಾಗೂ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಯಿತು.

ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಜಲಾಭಿಷೇಕವು 24 ಗಂಟೆಗಳ ಕಾಲ ನಿರಂತರವಾಗಿ ನಡೆಯುತ್ತಿದ್ದು, ಶಿವಲಿಂಗದ ಮೇಲೆ ನಿರಂತರವಾಗಿ ಜಲಧಾರೆ ಹರಿಯುತ್ತಿದೆ. ಮಳೆಯ ಅಭಾವದಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಕ್ತರು ಮತ್ತು ರೈತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಶ್ರೀ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿ, ದೇವಸ್ಥಾನ ಅರ್ಚಕರ ಸಮಿತಿ ಹಾಗೂ ಸೋಮೇಶ್ವರ ಜಾತ್ರಾ ಕಮಿಟಿ ಸಂಯುಕ್ತವಾಗಿ ಈ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿವೆ. ಅರ್ಚಕರಾದ ಚಿಕ್ಕರಸ ಪೂಜಾರ, ರಾಘವೇಂದ್ರ ಪೂಜಾರ ಹಾಗೂ ಕೃಷ್ಣಾಜಿ ಪೂಜಾರ ಅವರ ನೇತೃತ್ವದಲ್ಲಿ ರುದ್ರಾಭಿಷೇಕ ಮತ್ತು ವಿಶೇಷ ಪೂಜೆ ನೆರವೇರಿತು.

ಪೂಜೆಯ ಬಳಿಕ ಭಕ್ತರಿಗೆ ನೆನೆಗಡಲೆ ಹಾಗೂ ಬೆಲ್ಲದ ಪ್ರಸಾದ ವಿತರಿಸಲಾಯಿತು. ದೇವಸ್ಥಾನದ ಆವರಣದಲ್ಲಿ ನೂರಾರು ಭಕ್ತರು ಸೇರಿ “ಓಂ ನಮಃ ಶಿವಾಯ” ಮಂತ್ರ ಜಪಿಸಿ ಮಳೆಗಾಗಿ ಪ್ರಾರ್ಥಿಸಿದರು. ಸಂಜೆಯಿಂದ ವಿವಿಧ ಭಜನಾ ತಂಡಗಳು ಭಾಗವಹಿಸಿ ಭಕ್ತಿ ಸೇವೆ ಸಲ್ಲಿಸಿದವು.

ಮಂಗಳವಾರ ಬೆಳಗ್ಗೆ 8 ಗಂಟೆಯವರೆಗೆ ಜಲಾಭಿಷೇಕ ಮುಂದುವರಿಯಲಿದ್ದು, ನಂತರ ವೇದಘೋಷಗಳ ಮಧ್ಯೆ ಮಹಾ ರುದ್ರಾಭಿಷೇಕ ನಡೆಯಲಿದೆ. ಬಳಿಕ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಗುರುರಾಜ ಪಾಟೀಲಕುಲಕರ್ಣಿ, ಸುರೇಶ ರಾಚನಾಯ್ಕರ, ಚನ್ನಪ್ಪ ಜಗಲಿ, ಸೋಮಣ್ಣ ಬಂಡಿವಾಡ, ಜಿ.ಎಸ್. ಗುಡಗೇರಿ, ವಿರುಪಾಕ್ಷ ಆದಿ, ನಂದೀಶ ಬಂಡಿವಾಡ, ಮಯೂರಗೌಡ ಪಾಟೀಲ, ಜಯಪ್ರಕಾಶ ಹೊಟ್ಟಿ, ಚಂಬಣ್ಣ ಬಾಳಿಕಾಯಿ, ಕುಬೇರಪ್ಪ ಮಹಾಂತಶೆಟ್ಟರ, ಶಿವಯೋಗಿ ಅಂಕಲಕೋಟಿ ಸೇರಿದಂತೆ ಟ್ರಸ್ಟ್ ಕಮಿಟಿ, ಅರ್ಚಕರ ಸಮಿತಿ, ಜಾತ್ರಾ ಕಮಿಟಿ, ಪುರಾಣ ಕಮಿಟಿ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

ಭಗವಾನ್ ವಿರುದ್ಧ ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಹಿಂದೂ ಧರ್ಮ, ಪ್ರಭು ಶ್ರೀರಾಮ ಹಾಗೂ ಹಿಂದೂ ದೇವತೆಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಜೂನ್ 9ರಂದು ನಡೆದ ಕಾರ್ಯಕ್ರಮದಲ್ಲಿ ಪ್ರೊ. ಕೆ.ಎಸ್. ಭಗವಾನ್ ಅವರು ಹಿಂದೂ ಧರ್ಮ, ಶ್ರೀರಾಮ ಹಾಗೂ ಧಾರ್ಮಿಕ ಆಚರಣೆಗಳ ಕುರಿತು ನೀಡಿದ ಹೇಳಿಕೆಗಳು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿವೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಇಂತಹ ಹೇಳಿಕೆಗಳು ಸಮಾಜದಲ್ಲಿ ಉದ್ವಿಗ್ನತೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಸೃಷ್ಟಿಸುವ ಸಾಧ್ಯತೆ ಇರುವುದರಿಂದ ಅವರ ಭಾಷಣದ ವಿಡಿಯೋ, ಧ್ವನಿಮುದ್ರಣ ಸೇರಿದಂತೆ ಎಲ್ಲ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ, ಅನ್ವಯವಾಗುವ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮಂಜುನಾಥ ಮಾಗಡಿ, ಹೊನ್ನಪ್ಪ ವಡ್ಡರ, ಶಿವರಾಜ ಪಟ್ಟಣಶೆಟ್ಟಿ, ಗಜೇಂದ್ರಗೌಡ ಪಾಟೀಲ, ನಾಗರಾಜ ಚಿಂಚಲಿ, ಎಚ್.ಎಸ್. ವಾಲಿ, ಡಿ.ಎಂ. ಕೋಟಗಿ, ಶಂಕರ ಬ್ಯಾಡಗಿ, ಮಲ್ಲಪ್ಪಗೌಡರ, ಮುತ್ತು ನೀರಲಗಿ, ಜಿ.ಎಸ್. ಮಲ್ಲಪ್ಪಗೌಡರ, ಫಕ್ಕೀರಪ್ಪ ಹಾವನೂರು, ಯಲ್ಲಪ್ಪಗೌಡ ಪಾಟೀಲ ಸೇರಿದಂತೆ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಹಾಗೂ ಧರ್ಮಪ್ರೇಮಿಗಳು ಉಪಸ್ಥಿತರಿದ್ದರು.

ರಥದ ಗಾಲಿಯಲ್ಲಿ ಅನ್ಯಕೋಮಿನ ಮಹಿಳೆ ಹೆಸರು: ಗದಗದಲ್ಲಿ ವಿವಾದ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಐತಿಹಾಸಿಕ ಗಂಗಾಪುರ ಪೇಟೆಯ ದುರ್ಗಾದೇವಿ ದೇವಸ್ಥಾನ ಹಾಗೂ ವೀರೇಶ್ವರ ಪುಣ್ಯಾಶ್ರಮದ ರಥಗಳ ಗಾಲಿಗಳ ಮೇಲೆ ಅನ್ಯಕೋಮಿನ ಮಹಿಳೆಯ ಹೆಸರನ್ನು ಕೆತ್ತಿಸಿರುವುದು ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದು, ಇದು ಅಕ್ಷಮ್ಯ ತಪ್ಪು ಎಂದು ಹಿಂದೂ ಸಂಘಟನೆಗಳ ಮುಖಂಡ ರಾಜೂ ಖಾನಪ್ಪನವರ ಆರೋಪಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಥಗಳ ಗಾಲಿಗಳ ಮೇಲೆ ‘ಜೋಹರಾ ಪೀರಸಾಬ ಕೌತಾಳ’ ಎಂಬ ಹೆಸರು ಕೆತ್ತಿಸಿರುವುದು ಸಮಸ್ತ ಹಿಂದೂ ಭಕ್ತರಿಗೆ ಮಾಡಿದ ಅವಮಾನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇವಾಲಯಗಳಿಗೆ ದಾನ ನೀಡಿದವರನ್ನು ಸ್ಮರಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ದಾನಿಗಳ ಹೆಸರನ್ನು ರಥದ ಗಾಲಿಗಳ ಮೇಲೆ ಕೆತ್ತಿಸುವ ಮುನ್ನ ಆಡಳಿತ ಮಂಡಳಿಗಳು ಭಕ್ತರ ಸಭೆ ಕರೆದು ಚರ್ಚಿಸಬೇಕಿತ್ತು. ಸಮಾಜದ ಅಭಿಪ್ರಾಯ ಪಡೆಯದೇ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಹೇಳಿದರು.

ದುರ್ಗಾದೇವಿ ದೇವಸ್ಥಾನ ಮತ್ತು ವೀರೇಶ್ವರ ಪುಣ್ಯಾಶ್ರಮ ಎರಡಕ್ಕೂ ಶತಮಾನಗಳ ಇತಿಹಾಸವಿದೆ. ವೀರೇಶ್ವರ ಪುಣ್ಯಾಶ್ರಮವು ನಾಡಿನ ಅಂಧರ ಸಂಗೀತ ಶಿಕ್ಷಣಕ್ಕೆ ಮಹತ್ವದ ಕೊಡುಗೆ ನೀಡಿದ್ದು, ದುರ್ಗಾದೇವಿ ಜಾತ್ರೆಗೆ ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಇಂತಹ ಐತಿಹಾಸಿಕ ಧಾರ್ಮಿಕ ಕೇಂದ್ರಗಳ ರಥಗಳಲ್ಲಿ ಅನ್ಯಕೋಮಿನ ಮಹಿಳೆಯ ಹೆಸರು ಕೆತ್ತಿಸಿರುವುದು ಭಕ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.

ವೀರೇಶ್ವರ ಪುಣ್ಯಾಶ್ರಮಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾಗೂ ದೇಣಿಗೆ ನೀಡಿದ ಅನೇಕ ದಾನಿಗಳ ಹೆಸರುಗಳನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ದಾನ ಎಂಬುದು ಪ್ರಚಾರಕ್ಕಾಗಿ ಅಲ್ಲ, ಸೇವಾ ಮನೋಭಾವಕ್ಕಾಗಿ ಇರಬೇಕು. ಇಂತಹ ಸಂದರ್ಭದಲ್ಲಿ ರಥದ ಗಾಲಿಗಳ ಮೇಲೆ ಹೆಸರು ಕೆತ್ತಿಸಿರುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.

ಈ ವಿಷಯದಲ್ಲಿ ಆಗಿರುವ ಲೋಪವನ್ನು ಸಂಬಂಧಿಸಿದ ದೇವಾಲಯಗಳ ಆಡಳಿತ ಮಂಡಳಿಗಳು ಕೂಡಲೇ ಸರಿಪಡಿಸಬೇಕು. ಐದು ದಿನಗಳೊಳಗೆ ಕ್ರಮ ಕೈಗೊಳ್ಳದಿದ್ದರೆ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ದೇವಾಲಯಗಳ ಎದುರು ಹಾಗೂ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ, ಸತ್ಯಾಗ್ರಹ ಮತ್ತು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಹೇಶ ರೋಖಡೆ, ಶಿವಯೋಗಿ ಹಿರೇಮಠ, ಸತೀಶ ಕುಂಬಾರ, ವೆಂಕಟೇಶ ದೊಡ್ಡಮನಿ, ಸಿ.ಬಿ. ಕಾಳೆ, ಶಂಕರ ಕಾರದಕಟ್ಟಿ, ಈರಪ್ಪ ಹೆಬಸೂರ, ಆನಂದ ಅರಕೆರೆ, ಸುನೀಲ ಶಿಂಧೆ, ಸಂಜು ಚಟ್ಟಿ, ವಿಶಾಲ ಗೋಕಾವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ದಾನಿಗಳ ಹೆಸರನ್ನು ಸ್ಮರಿಸುವುದಕ್ಕೆ ವಿರೋಧವಿಲ್ಲ. ಆದರೆ ಐತಿಹಾಸಿಕ ದೇವಾಲಯಗಳ ರಥದ ಗಾಲಿಗಳ ಮೇಲೆ ಅನ್ಯಕೋಮಿನ ಮಹಿಳೆಯ ಹೆಸರು ಕೆತ್ತಿಸಿರುವುದು ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದೆ.”

– ರಾಜೂ ಖಾನಪ್ಪನವರ, ಹಿಂದೂ ಸಂಘಟನೆಗಳ ಮುಖಂಡ

ಬೈಪಾಸ್ ನಿರ್ಧಾರ ಹಿಂಪಡೆಯಲು ರೈಲ್ವೆ ಇಲಾಖೆಗೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ವಿಜಯಪುರ ಮಾರ್ಗಕ್ಕೆ ಸಂಚರಿಸುವ ಎಲ್ಲ ಪ್ರಯಾಣಿಕ ರೈಲುಗಳನ್ನು ಗದಗ ನಗರದ ಮುಖ್ಯ ರೈಲ್ವೆ ನಿಲ್ದಾಣದ ಮೂಲಕವೇ ಓಡಿಸಬೇಕು. ಹೊಂಬಳ ಗೇಟ್ ಸಮೀಪದ ಬೈಪಾಸ್ ನಿಲ್ದಾಣದ ಮೂಲಕ ರೈಲು ಸಂಚಾರ ನಡೆಸುವ ನಿರ್ಧಾರವನ್ನು ರೈಲ್ವೆ ಇಲಾಖೆ ಕೈಬಿಡಬೇಕು ಎಂದು ಬೆಟಗೇರಿ ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಪಾಸ್ ನಿಲ್ದಾಣದಲ್ಲಿ ಸಮರ್ಪಕ ಮೂಲಸೌಕರ್ಯಗಳ ಕೊರತೆಯಿದ್ದು, ಅಲ್ಲಿಂದ ನಗರಕ್ಕೆ ಸಂಪರ್ಕ ಸಾಧಿಸುವುದು ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಹೀಗಾಗಿ ಪ್ರಯಾಣಿಕರ ಹಿತದೃಷ್ಟಿಯಿಂದ ವಿಜಯಪುರ ಮಾರ್ಗದ ರೈಲುಗಳನ್ನು ಗದಗ ಮುಖ್ಯ ರೈಲ್ವೆ ನಿಲ್ದಾಣದ ಮೂಲಕವೇ ಸಂಚರಿಸಬೇಕು ಎಂದು ಒತ್ತಾಯಿಸಿದರು.

ರೈಲುಗಳನ್ನು ತಿರುಗಿಸಲು ತಾಂತ್ರಿಕ ಸಮಸ್ಯೆಗಳಿವೆ ಎಂಬ ಕಾರಣವನ್ನು ರೈಲ್ವೆ ಇಲಾಖೆ ನೀಡುತ್ತಿದೆ. ಆದರೆ ಲೊಕೊಮೊಟಿವ್ ವ್ಯವಸ್ಥೆ ಅಳವಡಿಸಿಕೊಂಡರೆ ಈ ಸಮಸ್ಯೆ ನಿವಾರಣೆಯಾಗುತ್ತದೆ. ಅಗತ್ಯವಿದ್ದರೆ ಸರಕು ಸಾಗಣೆ ರೈಲುಗಳನ್ನು ಬೈಪಾಸ್ ಮಾರ್ಗದಲ್ಲಿ ಓಡಿಸಬಹುದು. ಆದರೆ ಪ್ರಯಾಣಿಕರ ರೈಲುಗಳನ್ನು ಬೈಪಾಸ್‌ಗೆ ವರ್ಗಾಯಿಸುವುದು ಸಮಂಜಸವಲ್ಲ ಎಂದು ಹೇಳಿದರು.

ಈ ಕುರಿತು ರೈಲ್ವೆ ಸಚಿವರು, ರೈಲ್ವೆ ಮಂಡಳಿ ಅಧ್ಯಕ್ಷರು, ಪ್ರಧಾನ ವ್ಯವಸ್ಥಾಪಕರು ಹಾಗೂ ವಿಭಾಗೀಯ ವ್ಯವಸ್ಥಾಪಕರಿಗೆ ಇ-ಮೇಲ್ ಮೂಲಕ ಮನವಿ ಸಲ್ಲಿಸಲಾಗುವುದು. 15 ದಿನಗಳೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸಮಾನ ಮನಸ್ಕ ಸಂಘ–ಸಂಸ್ಥೆಗಳೊಂದಿಗೆ ಸಭೆ ನಡೆಸಿ ಹೋರಾಟದ ರೂಪುರೇಷೆ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಧ್ಯಾ ಗುಂಡಿ, ಮನ್ಸುಖ್‌ಲಾಲ್ ಪುಣೇಕರ್, ಎಸ್.ವಿ. ಸುಲಾಖೆ, ಬೋಜಪ್ಪ ಹೆಗ್ಗಡಿ, ಆಂಜನೇಯ ಗುಂತಕಲ್ ಹಾಗೂ ಅಶೋಕ ಅಂಗಡಿ ಉಪಸ್ಥಿತರಿದ್ದರು.

“ಸರಕು ಸಾಗಣೆ ರೈಲುಗಳನ್ನು ಬೈಪಾಸ್ ಮಾರ್ಗದಲ್ಲಿ ಓಡಿಸಬಹುದು. ಆದರೆ ಪ್ರಯಾಣಿಕರ ಹಿತದೃಷ್ಟಿಯಿಂದ ವಿಜಯಪುರ ಮಾರ್ಗದ ಎಲ್ಲ ರೈಲುಗಳು ಗದಗ ಮುಖ್ಯ ನಿಲ್ದಾಣದ ಮೂಲಕವೇ ಸಂಚರಿಸಬೇಕು.”

– ಗಣೇಶಸಿಂಗ್ ಬ್ಯಾಳಿ, ಅಧ್ಯಕ್ಷರು, ಬೆಟಗೇರಿ ರೈಲ್ವೆ ಹೋರಾಟ ಸಮಿತಿ

ಭಾವೈಕ್ಯತೆಯ ಕೇಂದ್ರಗಳಿಗೆ ಮೂಲಸೌಲಭ್ಯ ಕಲ್ಪಿಸಲು ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಪಟ್ಟಣದ ಭಾವೈಕ್ಯತೆಯ ಪ್ರತೀಕಗಳಾದ ಶ್ರೀ ಜ. ಫಕೀರೇಶ್ವರ ಮಠ ಹಾಗೂ ಹಜರತ್ ಮೆಹಬೂಬ ಸುಬಾನಿ ದರ್ಗಾ ಮಧ್ಯದ ಹಳ್ಳದ ದಂಡೆಯ ಬಳಿ ಸಾರ್ವಜನಿಕ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಕಾರ್ಯಾಧ್ಯಕ್ಷ ದೇವೇಂದ್ರ ಶಿಂಧೆ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ವಡವಿ, ಈ ಎರಡೂ ಧಾರ್ಮಿಕ ಕೇಂದ್ರಗಳಿಗೆ ಪ್ರತಿದಿನ ನೂರಾರು ಹಾಗೂ ವಿಶೇಷ ದಿನಗಳಲ್ಲಿ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಶೌಚಾಲಯ, ಸ್ನಾನಗೃಹ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಶುಚಿತ್ವ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಇಮ್ರಾನ ಬಾವಿಕಟ್ಟಿ, ಮಲಿಕ ನಗಾರಿ, ತೌಸಿಫ ವಡ್ಡಟ್ಟಿ, ಅನ್ವರ್ ಬರದ್ವಾಡ, ಮೋದಿನ ಪರೀಟ, ಆಸಿಫ್ ಪಠಾಣ, ಮಂಜು ಭಜಂತ್ರಿ, ದೀಪಾ ಹರಿಪೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಸ್ತೆಗಳೇ ಅಭಿವೃದ್ಧಿಯ ಮಾನದಂಡ: ಶಾಸಕ ಕೆ. ನೇಮಿರಾಜ್ ನಾಯ್ಕ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ರಸ್ತೆಗಳು ಒಂದು ಪ್ರದೇಶದ ಅಭಿವೃದ್ಧಿ ಹಾಗೂ ನಾಗರಿಕತೆಯ ಮಾನದಂಡಗಳಾಗಿದ್ದು, ಉತ್ತಮ ರಸ್ತೆಗಳ ನಿರ್ಮಾಣದಿಂದ ಅಪಘಾತಗಳು ಕಡಿಮೆಯಾಗಿ ಜನರ ಅಮೂಲ್ಯ ಜೀವಗಳು ರಕ್ಷಣೆ ಪಡೆಯುತ್ತವೆ ಎಂದು ಶಾಸಕ ಕೆ. ನೇಮಿರಾಜ್ ನಾಯ್ಕ ಹೇಳಿದರು.

ಪಟ್ಟಣದ ಶ್ರೀ ಪಾಂಡುರಂಗ ದೇವಸ್ಥಾನದಿಂದ ಕೆಚ್ಚಿನಮಂಡೆ ರಸ್ತೆವರೆಗೆ ಸುಮಾರು 3 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳ ರಸ್ತೆ ಅಭಿವೃದ್ಧಿ ವಿಶೇಷ ಅನುದಾನದಡಿ 1 ಕೋಟಿ 65 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಕಳಪೆ ಕಾಮಗಾರಿಗೆ ಅವಕಾಶ ನೀಡಬಾರದು. ಗುತ್ತಿಗೆದಾರರು ಗುಣಮಟ್ಟದ ಸಾಮಗ್ರಿಗಳನ್ನು ಬಳಸಿ ರಸ್ತೆ ನಿರ್ಮಿಸಬೇಕು ಎಂದು ಸೂಚಿಸಿದರು.

ಈ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಮುಂದಿನ ಹಂತದಲ್ಲಿ ವಿವಿಧ ಅನುದಾನಗಳನ್ನು ತಂದು ಮಾಗಿ-ಮಾವಿನಹಳ್ಳಿವರೆಗೆ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದಲ್ಲಿದ್ದು ಪಕ್ಷಕ್ಕೆ ದ್ರೋಹ ಮಾಡುವವರು ಮಾತೃದ್ರೋಹ ಮಾಡಿದಂತೆ. ತಾನು ಯಾವುದೇ ಸಂದರ್ಭದಲ್ಲೂ ಪಕ್ಷದ್ರೋಹ ಮಾಡುವವನಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಾದಾಮಿ ಮೃತ್ಯುಂಜಯ, ತಾಲೂಕು ಅಧ್ಯಕ್ಷ ವೈ. ಮಲ್ಲಿಕಾರ್ಜುನ, ವಿಶ್ವಕರ್ಮ ಸಮಾಜದ ಅಧ್ಯಕ್ಷ ಸಿದ್ಧರಾಜು, ನಾಣ್ಯಪುರ ಕೃಷ್ಣಮೂರ್ತಿ, ಚಿತ್ತವಾಡಗಿ ಪ್ರಕಾಶ್, ಗುತ್ತಿಗೆದಾರ ದೊಡ್ಡಬಸಪ್ಪ, ಶ್ರೀಕಾಂತ್ ಸೇರಿದಂತೆ ಕುರದಗಡ್ಡಿ ಗ್ರಾಮ ಹಾಗೂ ರೈತರ ಓಣಿಯ ನಿವಾಸಿಗಳು ಉಪಸ್ಥಿತರಿದ್ದರು.

“ರಸ್ತೆಗಳು ಅಭಿವೃದ್ಧಿಯ ಕನ್ನಡಿಯಾಗಿವೆ. ಗುಣಮಟ್ಟದ ರಸ್ತೆ ನಿರ್ಮಾಣದಿಂದ ಅಪಘಾತಗಳು ಕಡಿಮೆಯಾಗಿ ಜನರ ಜೀವ ರಕ್ಷಣೆ ಸಾಧ್ಯವಾಗುತ್ತದೆ.”

– ಕೆ. ನೇಮಿರಾಜ್ ನಾಯ್ಕ, ಶಾಸಕ

ಆರೋಗ್ಯವೇ ನಿಜವಾದ ಸಂಪತ್ತು: ಶಾಸಕ ಡಾ. ಚಂದ್ರು ಲಮಾಣಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮನುಷ್ಯನಿಗೆ ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ಅತ್ಯಂತ ಮುಖ್ಯವಾಗಿದ್ದು, ಉತ್ತಮ ಆರೋಗ್ಯವೇ ಅಭಿವೃದ್ಧಿಯ ರಹದಾರಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಭಾರತೀಯ ಜನತಾ ಪಾರ್ಟಿ ಶಿರಹಟ್ಟಿ ಮಂಡಲ, ಬಾಲಾಜಿ ಆಸ್ಪತ್ರೆ, ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗೂ ಜಯಪ್ರಿಯಾ ಕಣ್ಣಿನ ಆಸ್ಪತ್ರೆ, ಹುಬ್ಬಳ್ಳಿ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಜನಪರ ಆಡಳಿತದ ಅಂಗವಾಗಿ ಹಮ್ಮಿಕೊಂಡಿದ್ದ ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶ ಹೊಂದಲಾಗಿದೆ. ಕಲುಷಿತ ವಾತಾವರಣ, ಕಲಬೆರಕೆ ಆಹಾರ ಹಾಗೂ ಒತ್ತಡದ ಜೀವನಶೈಲಿಯಿಂದ ಅನೇಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು, ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯರ ಸೇವೆ ತಲುಪಿಸಲು ಇಂತಹ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಸಪ್ತಗಿರಿ ಆಸ್ಪತ್ರೆಯ ಡಾ. ನಂದಕುಮಾರ ಮಾತನಾಡಿ, ಬಡತನದ ಕಾರಣದಿಂದ ತಜ್ಞ ವೈದ್ಯರ ಚಿಕಿತ್ಸೆ ಪಡೆಯಲು ಸಾಧ್ಯವಾಗದವರಿಗೆ ಉಚಿತ ಆರೋಗ್ಯ ಶಿಬಿರಗಳು ವರದಾನವಾಗಿವೆ. ಜನಸೇವೆಯ ಕಾಳಜಿಯಿಂದ ಶಾಸಕ ಡಾ. ಚಂದ್ರು ಲಮಾಣಿ ಇಂತಹ ಜನಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಶಿಬಿರದಲ್ಲಿ ಹೃದಯ, ಮೂಳೆ, ಕಿಡ್ನಿ ಹಾಗೂ ನರರೋಗ ತಜ್ಞರು ಭಾಗವಹಿಸಿ ಆರೋಗ್ಯ ತಪಾಸಣೆ ನಡೆಸಿದರು. ಇಸಿಜಿ, 2-ಡಿ ಇಕೋ ಪರೀಕ್ಷೆಗಳು ಹಾಗೂ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು. ಸುಮಾರು 300ರಿಂದ 400ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು.

ಈ ಸಂದರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ಅಶೋಕ ಪಲ್ಲೆದ, ಗಿರೀಶ ಚೌರಡ್ಡಿ, ಗಂಗಾಧರ ಮೆಣಸಿನಕಾಯಿ, ನಿಂಗಪ್ಪ ಬನ್ನಿ, ಜಾನು ಲಮಾಣಿ, ಬಸವರಾಜ ಚಕ್ರಸಾಲಿ, ರಮೇಶ ಲಮಾಣಿ, ಹನುಮಂತ ಲಮಾಣಿ, ಈರಣ್ಣ ಅಕ್ಕೂರ, ಡಾ. ವೆಂಕಟೇಶ ಮಾಡೊಳ್ಳಿ, ಡಾ. ಪ್ರಭು, ಡಾ. ಗೋಪಾಲಕೃಷ್ಣ, ಡಾ. ನವೀನ್, ಡಾ. ಭರತ ಹಾಗೂ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

“ಧನ-ಸಂಪತ್ತಿಗಿಂತ ಆರೋಗ್ಯ ಸಂಪತ್ತು ದೊಡ್ಡದು. ಆರೋಗ್ಯವಂತ ಸಮಾಜ ನಿರ್ಮಾಣವೇ ನಮ್ಮ ಗುರಿಯಾಗಿದ್ದು, ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ತಲುಪಿಸುವುದು ನಮ್ಮ ಆದ್ಯತೆ.”

– ಡಾ. ಚಂದ್ರು ಲಮಾಣಿ, ಶಾಸಕ

error: Content is protected !!