Home Blog

ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು ಪ್ರಕರಣ: ಸಂಪೂರ್ಣ ವರದಿ ಕೇಳಿದ ಸಚಿವ ಶರಣ ಪ್ರಕಾಶ್ ಪಾಟೀಲ್

ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಒಂದೇ ದಿನ 11 ರೋಗಿಗಳು ಮೃತಪಟ್ಟಿರುವ ಪ್ರಕರಣದ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಆಡಳಿತ ಮಂಡಳಿ ಮತ್ತು ವೈದ್ಯರಿಂದ ಮಾಹಿತಿ ಪಡೆದ ಸಚಿವರು, ಸಾವಿನ ಘಟನೆಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು. ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಒಂದೇ ದಿನ 11 ರೋಗಿಗಳು ಮೃತಪಟ್ಟಿರುವ ಬಗ್ಗೆ ವಿವರವಾದ ಮಾಹಿತಿ ಕೇಳಿದ್ದು, ಎಲ್ಲಾ ಅಂಶಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಕಳೆದ ಹಲವು ವರ್ಷಗಳ ಅಂಕಿ-ಅಂಶಗಳನ್ನು ಪರಿಶೀಲಿಸಿದಾಗ ಆಸ್ಪತ್ರೆಯ ಸಾವಿನ ಪ್ರಮಾಣ ಶೇ.4 ರಿಂದ 5ರಷ್ಟಿದೆ. ಜಯದೇವ ಆಸ್ಪತ್ರೆ ರಾಜ್ಯಕ್ಕಷ್ಟೇ ಅಲ್ಲ, ದೇಶದ ಮಟ್ಟದಲ್ಲೂ ಮಾದರಿ ಆರೋಗ್ಯ ಸಂಸ್ಥೆಯಾಗಿದೆ. ಇಲ್ಲಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ.

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆಯ ಸೌಲಭ್ಯವೂ ಇದೆ” ಎಂದು ಹೇಳಿದರು. ಜಯದೇವ ಆಸ್ಪತ್ರೆ ಕುರಿತು ತಪ್ಪು ಮಾಹಿತಿ ಹರಡುವುದರಿಂದ ಖಾಸಗಿ ಆಸ್ಪತ್ರೆಗಳಿಗೆ ಲಾಭವಾಗುವ ಸಾಧ್ಯತೆ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಸಾವಿನ ಪ್ರಕರಣಗಳಲ್ಲಿ ಯಾವುದೇ ಲೋಪ ಅಥವಾ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟ ವೈದ್ಯರಿಂದ ಮಾಹಿತಿ ಪಡೆದು ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಈ ಪ್ರಕರಣದ ಕುರಿತು ಸಂಪೂರ್ಣ ಅವಲೋಕನ ನಡೆಸುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ವಿಧಾನಪರಿಷತ್ ಚುನಾವಣೆ: ವಂಡರ್‌ಲಾದಿಂದ ವಿಶೇಷ ಬಸ್‌ಗಳಲ್ಲಿ ಕಾಂಗ್ರೆಸ್ ಶಾಸಕರ ಶಿಫ್ಟ್! ಅಡ್ಡಮತದಾನ ಭೀತಿಗೆ ಹೈ ಅಲರ್ಟ್

0

ರಾಮನಗರ: ವಿಧಾನಪರಿಷತ್‌ನ ಏಳು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಶಾಸಕರನ್ನು ವಂಡರ್‌ಲಾ ರೆಸಾರ್ಟ್‌ನಿಂದ ನೇರವಾಗಿ ವಿಧಾನಸೌಧಕ್ಕೆ ಕರೆದೊಯ್ಯಲು ಐದು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಅಡ್ಡಮತದಾನದ ಆತಂಕದ ನಡುವೆಯೇ ಕಾಂಗ್ರೆಸ್ ಶಾಸಕರ ಮೊದಲ ತಂಡ ಈಗಾಗಲೇ ವಿಧಾನಸೌಧ ತಲುಪಿದೆ.

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಶಾಸಕರು ರೆಸಾರ್ಟ್‌ನಿಂದ ಬೆಂಗಳೂರಿನ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದ್ದಾರೆ. ಮತದಾನ ಮುಗಿಯುವವರೆಗೆ ಶಾಸಕರ ಚಲನವಲನಗಳ ಮೇಲೆ ಪಕ್ಷದ ನಾಯಕತ್ವ ಕಟ್ಟುನಿಟ್ಟಿನ ನಿಗಾ ಇರಿಸಿದೆ.

ಏಳು ವಿಧಾನಪರಿಷತ್ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಅಡ್ಡಮತದಾನ ಸಾಧ್ಯತೆಯನ್ನು ಮನಗಂಡು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಕಳೆದ ಕೆಲ ದಿನಗಳಿಂದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ವಿಧಾನಸಭೆಯ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಬಳಿಕ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ನಾಲ್ವರು ಅಭ್ಯರ್ಥಿಗಳ ಗೆಲುವು ಬಹುತೇಕ ಖಚಿತವಾಗಿದೆ. ಆದರೆ ಐದನೇ ಅಭ್ಯರ್ಥಿಯ ಗೆಲುವು ಪಕ್ಷದ ಹೆಚ್ಚುವರಿ ಮತಗಳ ಲೆಕ್ಕಾಚಾರದ ಮೇಲೆ ಅವಲಂಬಿತವಾಗಿದೆ. ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ಸೇರಿದಂತೆ ಹಲವು ಶಾಸಕರ ಬೆಂಬಲ ಕಾಂಗ್ರೆಸ್‌ಗೆ ಲಭಿಸಿರುವುದಾಗಿ ಪಕ್ಷದ ವಲಯಗಳು ಹೇಳುತ್ತಿವೆ.

ಪ್ರತಿ ಅಭ್ಯರ್ಥಿಯ ಗೆಲುವಿಗೆ 28 ಮತಗಳ ಅಗತ್ಯವಿದ್ದು, ಮೊದಲ ನಾಲ್ವರು ಅಭ್ಯರ್ಥಿಗಳಿಗೆ ತಲಾ 29 ಮತಗಳನ್ನು ಹಂಚುವ ತಂತ್ರವನ್ನು ಕಾಂಗ್ರೆಸ್ ರೂಪಿಸಿದೆ. ಉಳಿದ ಮತಗಳನ್ನು ಐದನೇ ಅಭ್ಯರ್ಥಿಗೆ ವರ್ಗಾಯಿಸುವ ಮೂಲಕ ಅಂತಿಮ ಸ್ಥಾನವನ್ನೂ ತನ್ನದಾಗಿಸಿಕೊಳ್ಳಲು ಕಾಂಗ್ರೆಸ್ ಲೆಕ್ಕಾಚಾರ ನಡೆಸುತ್ತಿದೆ.

ಅಟ್ರಾಸಿಟಿ ಕೇಸ್‌ನಲ್ಲಿ ಆರೋಪಿಗಳ ಕೈಬಿಡಲು 9.5 ಲಕ್ಷ ಲಂಚ ಡೀಲ್? ಡಿವೈಎಸ್ಪಿ, ಕಾನ್ಸ್‌ಟೇಬಲ್ ವಿರುದ್ಧ FIR!

0

ಬೆಂಗಳೂರು: ದಿವಂಗತ ನಟ ದ್ವಾರಕೀಶ್ ಅವರ ಸೊಸೆ ದಾಖಲಿಸಿದ್ದ ಅಟ್ರಾಸಿಟಿ ಪ್ರಕರಣದ ತನಿಖೆಯಲ್ಲಿ ಭಾರೀ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಪ್ರಕರಣದಿಂದ ಆರೋಪಿಗಳನ್ನು ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಡಿಸಿಆರ್‌ಇ ವಿಭಾಗದ ಡಿವೈಎಸ್ಪಿ ಮಹೇಶ್ವರ ಗೌಡ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಬಸವರಾಜ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಂದ ತಲಾ 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಡಿಯೋ ಸಂಭಾಷಣೆ ತನಿಖೆಗೆ ಹೊಸ ತಿರುವು ನೀಡಿದೆ.

ಫೆಬ್ರವರಿ ತಿಂಗಳಲ್ಲಿ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಸುಕನ್ಯಾ ಹಾಗೂ ಅವರ ಕುಟುಂಬ ಮತ್ತು ಸ್ನೇಹಿತರು ಸೇರಿ 19 ಮಂದಿಯ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು. ಬಳಿಕ ತನಿಖೆಯನ್ನು ಬೆಂಗಳೂರು ಡಿಸಿಆರ್‌ಇ ವಿಭಾಗಕ್ಕೆ ವರ್ಗಾಯಿಸಲಾಗಿತ್ತು.

ಆದರೆ ತನಿಖೆಯ ಮಧ್ಯೆ ಆರೋಪಿಗಳನ್ನು ಪ್ರಕರಣದಿಂದ ಕೈಬಿಡಲು ಒಟ್ಟು 19 ಆರೋಪಿಗಳಿಂದ 9.50 ಲಕ್ಷ ರೂಪಾಯಿ ಸಂಗ್ರಹಿಸಲು ಯತ್ನಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಸಂಭಾಷಣೆಯಲ್ಲಿ ಅಧಿಕಾರಿಗಳು ಮತ್ತು ಮಧ್ಯವರ್ತಿಗಳು ಹಣದ ವ್ಯವಹಾರದ ಬಗ್ಗೆ ಚರ್ಚಿಸಿರುವುದು ಬೆಳಕಿಗೆ ಬಂದಿದೆ.

ಆಡಿಯೋದಲ್ಲಿ ‘ಕೋರ್ಟ್‌ಗೆ ಹೋಗುವ ಅವಶ್ಯಕತೆ ಇಲ್ಲ, ಇಲ್ಲಿಯೇ ಮುಗಿಸಿಕೊಡುತ್ತೇವೆ’, ‘ಎಲ್ಲರೂ 35 ಸಾವಿರ ಕೊಡಿ’, ‘ಸಾಹೇಬರು ಒಪ್ಪಬೇಕು’ ಎಂಬ ಮಾತುಗಳು ಕೇಳಿಬಂದಿದ್ದು, ಪ್ರಕರಣವನ್ನು ಹಣದ ಮೂಲಕ ಮುಚ್ಚಿಹಾಕುವ ಯತ್ನ ನಡೆದಿತ್ತೆಂಬ ಅನುಮಾನ ಮೂಡಿಸಿದೆ.

ಆಡಿಯೋ ಸಾಕ್ಷ್ಯಾಧಾರಗಳ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ಮಹೇಶ್ವರ ಗೌಡ ಮತ್ತು ಕಾನ್ಸ್‌ಟೇಬಲ್ ಬಸವರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಪ್ರಕರಣದ ಸಂಪೂರ್ಣ ತನಿಖೆ ಆರಂಭಿಸಿದ್ದಾರೆ. ಆರೋಪ ಸಾಬೀತಾದರೆ ಇಬ್ಬರು ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಎದುರಾಗುವ ಸಾಧ್ಯತೆ ಇದೆ.

ಕೊಯಮತ್ತೂರಿನಲ್ಲಿ NEET ಆಕಾಂಕ್ಷಿ ಆತ್ಮಹತ್ಯೆ: ತಮಿಳುನಾಡಿನಲ್ಲಿ ಮತ್ತೆ ಭುಗಿಲೆದ್ದ NEET ವಿರೋಧ

0

ಚೆನ್ನೈ: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ NEET ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅನುಕೀರ್ತನಾ (19) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಅನುಕೀರ್ತನಾ ಈಗಾಗಲೇ ಎರಡು ಬಾರಿ NEET ಪರೀಕ್ಷೆ ಬರೆದಿದ್ದಳು. ವೈದ್ಯಕೀಯ ಶಿಕ್ಷಣ ಪಡೆಯುವ ಕನಸಿನೊಂದಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿದ್ದಳು. ಆದರೆ ಇತ್ತೀಚೆಗೆ NEET ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಮರುಪರೀಕ್ಷೆ ಕುರಿತ ಬೆಳವಣಿಗೆಗಳ ಬಳಿಕ ಆಕೆ ಮಾನಸಿಕವಾಗಿ ಕುಗ್ಗಿದ್ದಳು ಎನ್ನಲಾಗಿದೆ.

ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ವಿದ್ಯಾರ್ಥಿನಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. NEET ಪರೀಕ್ಷಾ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದು, ತಮಿಳುನಾಡಿಗೆ NEET ಪರೀಕ್ಷೆಯಿಂದ ವಿನಾಯಿತಿ ನೀಡಬೇಕು ಎಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಡಿಎಂಕೆ ನಾಯಕರು, ರಾಜ್ಯಕ್ಕೆ NEET ವಿನಾಯಿತಿ ನೀಡುವ ತಮ್ಮ ನಿಲುವನ್ನು ಪುನರುಚ್ಚರಿಸಿದ್ದು, ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದಾರೆ.

NEET ಜಾರಿಯಾದ ದಿನದಿಂದಲೂ ತಮಿಳುನಾಡು ಈ ಪರೀಕ್ಷಾ ವ್ಯವಸ್ಥೆಯನ್ನು ವಿರೋಧಿಸುತ್ತಾ ಬಂದಿದೆ. ದುಬಾರಿ ಖಾಸಗಿ ತರಬೇತಿ ಕೇಂದ್ರಗಳ ಸಹಾಯ ಪಡೆಯಲು ಸಾಧ್ಯವಾಗುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನುಕೂಲಕರವಾಗಿದ್ದು, ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಡಿಎಂಕೆ ವಾದಿಸಿದೆ.

ಪಾಠ ಬಿಟ್ಟು ಕಳ್ಳತನಕ್ಕೆ ಇಳಿದ ವಿದ್ಯಾರ್ಥಿಗಳು: ಹಾಸ್ಟೆಲ್‌ನಿಂದಲೇ ಬೈಕ್ ಮಾಫಿಯಾ; ಮೂವರ ಬಂಧನ

0

ರಾಯಚೂರು: ಕಾಲೇಜು ಶಿಕ್ಷಣದ ಹೆಸರಿನಲ್ಲಿ ಹಾಸ್ಟೆಲ್‌ನಲ್ಲಿ ವಾಸವಿದ್ದ ಇಬ್ಬರು ವಿದ್ಯಾರ್ಥಿಗಳು ಬೈಕ್ ಕಳ್ಳತನವನ್ನೇ ‘ವ್ಯವಹಾರ’ವನ್ನಾಗಿ ಮಾಡಿಕೊಂಡಿದ್ದ ಆಘಾತಕಾರಿ ಪ್ರಕರಣ ರಾಯಚೂರಿನಲ್ಲಿ ಪತ್ತೆಯಾಗಿದೆ. ನೇತಾಜಿನಗರ ಪೊಲೀಸ್ ಠಾಣೆ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ 15 ಕಳ್ಳತನದ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಸರ್ಕಾರಿ ಹಾಸ್ಟೆಲ್‌ನಲ್ಲಿ ವಾಸವಿದ್ದ ಬಿಎ ವಿದ್ಯಾರ್ಥಿ ಆಕಾಶ್, ಬಿಕಾಂ ವಿದ್ಯಾರ್ಥಿ ಕಾರ್ತಿಕ್ ಹಾಗೂ ಅವರ ಸಹಚರ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಕಳುವು ಮಾಡಿದ ಬೈಕ್‌ಗಳ ನಂಬರ್ ಪ್ಲೇಟ್, ಬಣ್ಣ ಹಾಗೂ ಬಿಡಿಭಾಗಗಳನ್ನು ಬದಲಾಯಿಸಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಮೇ 25ರಂದು ವಿದ್ಯಾರ್ಥಿ ನಾರಾಯಣನ ಪಲ್ಸರ್ ಬೈಕ್ ಕಳ್ಳತನವಾಗಿತ್ತು. ನಂತರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿದ್ದ ಮಾರಾಟದ ಜಾಹೀರಾತಿನಲ್ಲಿ ತನ್ನ ಬೈಕ್‌ನನ್ನೇ ಗುರುತಿಸಿದ ನಾರಾಯಣ ಪೊಲೀಸರಿಗೆ ಮಾಹಿತಿ ನೀಡಿದ್ದನು. ಈ ಸುಳಿವಿನ ಆಧಾರದ ಮೇಲೆ ಪೊಲೀಸರು ಖರೀದಿದಾರರಂತೆ ನಟಿಸಿ ಆರೋಪಿಗಳಿಗೆ ಬಲೆ ಬೀಸಿದರು.

ಬಂಧಿತರಿಂದ ತೀವ್ರ ವಿಚಾರಣೆ ನಡೆಸಿದಾಗ ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳು ಹಾಗೂ ತೆಲಂಗಾಣ ರಾಜ್ಯದಲ್ಲಿ ಸರಣಿ ಬೈಕ್ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಕಾರ್ಯಾಚರಣೆಯಲ್ಲಿ 15 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶಿಕ್ಷಣ ಪಡೆಯಬೇಕಾದ ವಯಸ್ಸಿನಲ್ಲೇ ಅಪರಾಧ ಜಾಲದಲ್ಲಿ ತೊಡಗಿದ್ದ ವಿದ್ಯಾರ್ಥಿಗಳ ಬಂಧನ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಹಿಂದೆ ಇನ್ನೂ ದೊಡ್ಡ ಜಾಲ ಇರುವ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಮತ್ತೊಂದು ಅವಕಾಶ ಕೊಡಿ: ತೆಲುಗು ಚಿತ್ರರಂಗಕ್ಕೆ ದಿಗಂತ್ ನೇರ ಮನವಿ

ಹೈದರಾಬಾದ್: ನಟ ದಿಗಂತ್ ತಮ್ಮ ಸಿನಿ ಬದುಕಿನ ಹೊಸ ಅಧ್ಯಾಯ ಆರಂಭಿಸುವ ನಿಟ್ಟಿನಲ್ಲಿ ತೆಲುಗು ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಚಿತ್ರದ ಮೂಲಕ ಟಾಲಿವುಡ್‌ಗೆ ಎಂಟ್ರಿ ನೀಡಿರುವ ಅವರು, ಚಿತ್ರದ ಪ್ರೀ-ರಿಲೀಸ್ ಸಮಾರಂಭದಲ್ಲಿ ಭಾವುಕ ಮನವಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ದಿಗಂತ್, ‘ನಾನು ಕನ್ನಡ ಚಿತ್ರರಂಗದಿಂದ ಬಂದಿದ್ದೇನೆ. ಈ ಚಿತ್ರದಲ್ಲಿ ಅವಕಾಶ ನೀಡಿದ ಸಮಂತಾ, ನಿರ್ದೇಶಕಿ ನಂದಿನಿ ರೆಡ್ಡಿ ಹಾಗೂ ಇಡೀ ತಂಡಕ್ಕೆ ಧನ್ಯವಾದಗಳು’ ಎಂದು ಹೇಳಿದರು.

ಸಮಂತಾ ಅವರ ಕೆಲಸದ ಶೈಲಿಯನ್ನು ಶ್ಲಾಘಿಸಿದ ಅವರು, ನಂದಿನಿ ರೆಡ್ಡಿ ನಿರ್ದೇಶನದ ‘ಓಹ್ ಬೇಬಿ’ ಸಿನಿಮಾ ತಮ್ಮ ನೆಚ್ಚಿನ ಚಿತ್ರಗಳಲ್ಲಿ ಒಂದಾಗಿದೆ ಎಂದರು. ಚಿತ್ರತಂಡದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ ಬಳಿಕ ದಿಗಂತ್ ಮಾಡಿದ ಮನವಿ ಎಲ್ಲರ ಗಮನ ಸೆಳೆಯಿತು.

‘ನನ್ನನ್ನು ನಾನು ಪ್ರೂವ್ ಮಾಡಿಕೊಳ್ಳಲು ಇನ್ನೊಂದು ಅವಕಾಶ ಬೇಕು. ಮತ್ತೆ ಅವಕಾಶ ಕೊಡುತ್ತೀರಾ?’ ಎಂದು ಅವರು ನೇರವಾಗಿ ಕೇಳಿದರು. ಸಭಿಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಯಿತು.

ದಿಗಂತ್ ಈ ಹಿಂದೆ ವಿಜಯ್ ದೇವರಕೊಂಡ ಜೊತೆ ತೆಲುಗು ಸಿನಿಮಾವೊಂದರಲ್ಲಿ ನಟಿಸಲು ಸಿದ್ಧತೆ ನಡೆಸಿದ್ದರು. ಚಿತ್ರಕ್ಕಾಗಿ ತರಬೇತಿ ಕೂಡ ಪಡೆದಿದ್ದರು. ಆದರೆ ಆ ಯೋಜನೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದೀಗ ‘ಮಾ ಇಂಟಿ ಬಂಗಾರಂ’ ಮೂಲಕ ತೆಲುಗು ಪ್ರೇಕ್ಷಕರ ಮುಂದೆ ಬರುತ್ತಿರುವ ಅವರು, ಟಾಲಿವುಡ್‌ನಲ್ಲಿ ಮತ್ತಷ್ಟು ಅವಕಾಶಗಳ ನಿರೀಕ್ಷೆಯಲ್ಲಿದ್ದಾರೆ.

ಬಿಡುಗಡೆ ಸಂದರ್ಭದಲ್ಲಿ ‘ಬಾಸ್’ ಚಿತ್ರಕ್ಕೆ ಕಾನೂನು ಸಂಕಷ್ಟ: ಹೈಕೋರ್ಟ್ ಮೆಟ್ಟಿಲೇರಿದ ವಿಜಯಲಕ್ಷ್ಮಿ

ಬೆಂಗಳೂರು: ಬಿಡುಗಡೆಗೆ ಕೇವಲ ಕೆಲವೇ ದಿನಗಳು ಬಾಕಿ ಇರುವ ಹೊತ್ತಲ್ಲೇ ‘ಬಾಸ್’ ಚಿತ್ರ ಮತ್ತೊಮ್ಮೆ ಕಾನೂನು ವಿವಾದಕ್ಕೆ ಸಿಲುಕಿದೆ. ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ ಚಿತ್ರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದು, ಬಿಡುಗಡೆಗೆ ತಡೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ವಿ. ಲವ ನಿರ್ದೇಶನದ ಹಾಗೂ ತನಿಷ್ ಶಿವಣ್ಣ ಅಭಿನಯದ ‘ಬಾಸ್’ ಸಿನಿಮಾ ಆರಂಭದಿಂದಲೇ ಸುದ್ದಿಯಲ್ಲಿದೆ. ಚಿತ್ರದ ಟೀಸರ್‌ನಲ್ಲಿ ‘ನೈಜ ಘಟನೆಗಳ ಆಧಾರಿತ ಸಿನಿಮಾ’ ಎಂದು ಉಲ್ಲೇಖಿಸಿದ್ದರಿಂದ, ಇದು ದರ್ಶನ್ ಸುತ್ತಲಿನ ವಿವಾದಾತ್ಮಕ ಪ್ರಕರಣವನ್ನು ಆಧರಿಸಿದೆ ಎಂಬ ಚರ್ಚೆ ಜೋರಾಗಿತ್ತು.

ಈ ಹಿಂದೆ ವಿಜಯಲಕ್ಷ್ಮಿ ದರ್ಶನ್ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಮನವಿ ಮಾಡಿದ್ದರು. ಆದರೆ ಆ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು. ಬಳಿಕ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ, ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿರುವುದಾಗಿ ಹೇಳಿಕೊಂಡಿತ್ತು.

ಇದೀಗ ಪ್ರಕರಣ ಹೊಸ ತಿರುವು ಪಡೆದಿದ್ದು, ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ. ಜೂನ್ 17ರಂದು ನಡೆಯಲಿರುವ ವಿಚಾರಣೆಯಲ್ಲಿ ನ್ಯಾಯಾಲಯದ ತೀರ್ಪು ಹೊರಬೀಳುವ ಸಾಧ್ಯತೆ ಇದೆ.

ಜೂನ್ 19ರಂದು ಸಿನಿಮಾ ಬಿಡುಗಡೆಗೆ ಸಿದ್ಧತೆ ಪೂರ್ಣಗೊಂಡಿದೆ. ಪ್ರಚಾರ ಅಭಿಯಾನ, ಜಾಹೀರಾತುಗಳು ಮತ್ತು ವಿತರಣೆ ಕಾರ್ಯಗಳನ್ನೂ ಚಿತ್ರತಂಡ ಮುಗಿಸಿದೆ. ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ಕೂಡ ಲಭಿಸಿದೆ.

ಆದರೆ ಚಿತ್ರದಲ್ಲಿನ ಪಾತ್ರಗಳು, ಘಟನೆಗಳು ಹಾಗೂ ಟೀಸರ್‌ನ ನಿರೂಪಣೆ ದರ್ಶನ್ ಪ್ರಕರಣದೊಂದಿಗೆ ಹೋಲಿಕೆ ಹೊಂದಿವೆ ಎಂಬ ವಾದ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡುವ ಆದೇಶದ ಮೇಲೆ ‘ಬಾಸ್’ ಚಿತ್ರದ ಬಿಡುಗಡೆ ಮತ್ತು ಮುಂದಿನ ಭವಿಷ್ಯ ಅವಲಂಬಿತವಾಗಿದೆ.

ಗ್ಯಾಸ್ʼನಿಂದ ತಲೆನೋವು ಕಾಡುತ್ತಿದೆಯೇ? ಈ ಮನೆಮದ್ದುಗಳಿಂದ ಸುಲಭವಾಗಿ ನಿವಾರಿಸಿಕೊಳ್ಳಿ

0

ಅನೇಕರು ಆಗಾಗ್ಗೆ ಗ್ಯಾಸ್, ಅಜೀರ್ಣ ಅಥವಾ ಹೊಟ್ಟೆ ಉಬ್ಬರದ ಸಮಸ್ಯೆಯೊಂದಿಗೆ ತಲೆನೋವಿನಿಂದಲೂ ಬಳಲುತ್ತಾರೆ. ಜೀರ್ಣಕ್ರಿಯೆಯಲ್ಲಿ ಉಂಟಾಗುವ ಅಸ್ವಸ್ಥತೆಗಳು ಕೆಲವೊಮ್ಮೆ ತಲೆನೋವಿಗೂ ಕಾರಣವಾಗಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸಿವೆ. ಇಂತಹ ಸಂದರ್ಭಗಳಲ್ಲಿ ವೈದ್ಯರ ಸಲಹೆಯ ಜೊತೆಗೆ ಕೆಲವು ಸರಳ ಮನೆಮದ್ದುಗಳೂ ಪರಿಹಾರ ನೀಡಬಹುದು.

ತಜ್ಞರ ಪ್ರಕಾರ, ಜಠರಗರುಳಿನ ಆರೋಗ್ಯ ಮತ್ತು ದೇಹದ ಒಟ್ಟಾರೆ ಆರೋಗ್ಯದ ನಡುವೆ ನಿಕಟ ಸಂಬಂಧವಿದೆ. ಜೀರ್ಣಕ್ರಿಯೆ ಸರಿಯಾಗಿ ನಡೆಯದಿದ್ದರೆ ಅನಿಲ, ಅಜೀರ್ಣ, ಮಲಬದ್ಧತೆ ಹಾಗೂ ಹೊಟ್ಟೆ ಉಬ್ಬರದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಕೆಲವರಲ್ಲಿ ಈ ಸಮಸ್ಯೆಗಳ ಪರಿಣಾಮವಾಗಿ ತಲೆನೋವು, ವಾಕರಿಕೆ ಅಥವಾ ವಾಂತಿಯಂತಹ ಲಕ್ಷಣಗಳೂ ಕಂಡುಬರಬಹುದು.

ನಿಂಬೆ ನೀರು

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರುಬೆಚ್ಚಗಿನ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸಲು ನೆರವಾಗಬಹುದು. ನಿಂಬೆಯಲ್ಲಿರುವ ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟ್‌ಗಳು ಹೊಟ್ಟೆಯ ಆಮ್ಲದ ಸಮತೋಲನ ಕಾಪಾಡಲು ಸಹಕಾರಿಯಾಗುತ್ತವೆ ಎಂದು ಹೇಳಲಾಗುತ್ತದೆ.

ಪುದೀನಾ ಚಹಾ

ಪುದೀನಾ ಎಲೆಗಳಿಂದ ತಯಾರಿಸಿದ ಚಹಾ ಜೀರ್ಣಕ್ರಿಯೆಗೆ ನೆರವಾಗುವುದರ ಜೊತೆಗೆ ಸ್ನಾಯುಗಳನ್ನು ಸಡಿಲಗೊಳಿಸಲು ಸಹಕಾರಿ. ಇದು ಹೊಟ್ಟೆಯ ಅಸ್ವಸ್ಥತೆಯನ್ನು ಕಡಿಮೆ ಮಾಡುವ ಮೂಲಕ ಗ್ಯಾಸ್‌ನಿಂದ ಉಂಟಾಗುವ ತಲೆನೋವಿನ ತೀವ್ರತೆಯನ್ನು ತಗ್ಗಿಸಲು ನೆರವಾಗಬಹುದು.

ಮೆಗ್ನೀಸಿಯಮ್ ಇರುವ ಆಹಾರ

ಮೆಗ್ನೀಸಿಯಮ್ ದೇಹದ ಹಲವು ಕ್ರಿಯೆಗಳಿಗೆ ಅಗತ್ಯವಾದ ಖನಿಜವಾಗಿದೆ. ಬಾದಾಮಿ, ಕುಂಬಳಕಾಯಿ ಬೀಜ, ಹಸಿರು ಸೊಪ್ಪುಗಳು ಹಾಗೂ ಬೇಳೆಕಾಳುಗಳಂತಹ ಮೆಗ್ನೀಸಿಯಮ್ ಸಮೃದ್ಧ ಆಹಾರಗಳನ್ನು ಸೇವಿಸುವುದು ಆರೋಗ್ಯಕ್ಕೆ ಉತ್ತಮ.

ಮಜ್ಜಿಗೆ

ಮಜ್ಜಿಗೆಯಲ್ಲಿ ಪ್ರೋಬಯಾಟಿಕ್‌ಗಳು ಮತ್ತು ಲ್ಯಾಕ್ಟಿಕ್ ಆಮ್ಲವಿದ್ದು, ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಕಾರಿಯಾಗುತ್ತದೆ. ಅಜೀರ್ಣ, ಗ್ಯಾಸ್ ಹಾಗೂ ಮಲಬದ್ಧತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಮಜ್ಜಿಗೆ ಉಪಯುಕ್ತ ಪಾನೀಯವೆಂದು ಪರಿಗಣಿಸಲಾಗುತ್ತದೆ.

ತುಳಸಿ ಎಲೆಗಳು

ತುಳಸಿ ಎಲೆಗಳನ್ನು ಜಗಿದು ತಿನ್ನುವುದು ಅಥವಾ ತುಳಸಿ ಕಷಾಯ ಸೇವಿಸುವುದು ಜೀರ್ಣಕ್ರಿಯೆಗೆ ನೆರವಾಗಬಹುದು. ತುಳಸಿಯಲ್ಲಿರುವ ನೈಸರ್ಗಿಕ ಗುಣಗಳು ಹೊಟ್ಟೆಯ ಉರಿಯೂತವನ್ನು ಕಡಿಮೆ ಮಾಡಲು ಹಾಗೂ ಸೌಮ್ಯವಾದ ಗ್ಯಾಸ್‌ನಿಂದ ಉಂಟಾಗುವ ಅಸ್ವಸ್ಥತೆಯನ್ನು ತಗ್ಗಿಸಲು ಸಹಕಾರಿಯಾಗಬಹುದು.

ಆಹಾರ ಪದ್ಧತಿಗೂ ಗಮನ ಕೊಡಿ

ಗ್ಯಾಸ್ ಮತ್ತು ಅಜೀರ್ಣದ ಸಮಸ್ಯೆಗಳನ್ನು ತಪ್ಪಿಸಲು ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದು, ಸಾಕಷ್ಟು ನೀರು ಕುಡಿಯುವುದು, ಎಣ್ಣೆಯುಕ್ತ ಮತ್ತು ಅತಿಯಾದ ಖಾರ ಆಹಾರವನ್ನು ಮಿತವಾಗಿ ಸೇವಿಸುವುದು ಹಾಗೂ ನಿಯಮಿತ ವ್ಯಾಯಾಮ ಮಾಡುವುದು ಅಗತ್ಯ.

ಗೋಲ್ಡ್ ಪ್ರಿಯರಿಗೆ ಸಂತಸದ ವಿಚಾರ! ಚಿನ್ನ-ಬೆಳ್ಳಿ ಬೆಲೆ ಇಳಿಕೆ, ಇಂದಿನ ರೇಟ್ ಎಷ್ಟು?

0

ನವದೆಹಲಿ: ದೇಶೀಯ ಬಂಗಾರ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಇಂದು ಬೆಲೆ ಇಳಿಕೆ ಕಂಡುಬಂದಿದ್ದು, ಗ್ರಾಹಕರು ದಿಲ್ ಖುಷ್ ಆಗಿದ್ದಾರೆ.

22 ಕ್ಯಾರಟ್ ಆಭರಣ ಚಿನ್ನದ ಬೆಲೆ 10 ಗ್ರಾಮ್‌ಗೆ 13,850 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 15,110 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಇಂದು ಗ್ರಾಮ್​ಗೆ 5 ರೂ ತಗ್ಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ:

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,332 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.

ಕಾನೂನು ಪದವಿ ವಿದ್ಯಾರ್ಥಿಗಳಿಗೆ ಹೈಕೋರ್ಟ್‌ ಸಿಹಿಸುದ್ದಿ: 2 ವಿಷಯ ಬದಲಾವಣೆ ಕುರಿತ KSLU ಸುತ್ತೋಲೆ ರದ್ದು

ಬೆಂಗಳೂರು: ಕಾನೂನು ಪದವಿ (ಎಲ್‌ಎಲ್‌ಬಿ) ವ್ಯಾಸಂಗ ಮಾಡುತ್ತಿರುವ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮಹತ್ವದ ರಿಲೀಫ್ ನೀಡಿರುವ ಕರ್ನಾಟಕ ಹೈಕೋರ್ಟ್‌, ಪರಿಷ್ಕೃತ ಪಠ್ಯಕ್ರಮದ ಅನ್ವಯ ಹೊಸ ವಿಷಯಗಳನ್ನು ಕಡ್ಡಾಯಗೊಳಿಸಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿದೆ.

ಈ ಮೂಲಕ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಹಿಂದಿನ ಪಠ್ಯಕ್ರಮದಂತೆ ಕಾರ್ಮಿಕ ಕಾನೂನು–1 ಮತ್ತು ಕಾರ್ಮಿಕ ಕಾನೂನು–2 ವಿಷಯಗಳ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕೆಎಸ್‌ಎಲ್‌ಯುಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಬೆಂಗಳೂರಿನ ಬಿಎಂಎಸ್ ಕಾನೂನು ಕಾಲೇಜಿನ ಮೂರು ವರ್ಷದ ಎಲ್‌ಎಲ್‌ಬಿ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಆನಂದ ಕರೆಗೋಣೆಪ್ಪರ ಹಾಗೂ ಆರತಿ ರಾಜು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ಪೀಠ ಬುಧವಾರ ನಡೆಸಿತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗುವಂತೆ ವಿಶ್ವವಿದ್ಯಾಲಯದ ಸುತ್ತೋಲೆಯನ್ನು ರದ್ದುಪಡಿಸಿ, ಅವರಿಗೆ ಹಿಂದಿನ ಪಠ್ಯಕ್ರಮದ ವಿಷಯಗಳ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ಆದೇಶಿಸಿತು.

ಸುತ್ತೋಲೆಯಲ್ಲಿ ಏನಿತ್ತು?

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು 2026ರ ಏಪ್ರಿಲ್ 8ರಂದು ಸುತ್ತೋಲೆ ಹೊರಡಿಸಿ, 2025-26ನೇ ಶೈಕ್ಷಣಿಕ ವರ್ಷದಿಂದ ಎಲ್‌ಎಲ್‌ಬಿ ಕೋರ್ಸ್‌ನ ಪಠ್ಯಕ್ರಮವನ್ನು ಪರಿಷ್ಕರಿಸಿತ್ತು.

ಅದರಂತೆ, ಕಾರ್ಮಿಕ ಕಾನೂನು–1 ಮತ್ತು ಕಾರ್ಮಿಕ ಕಾನೂನು–2 ವಿಷಯಗಳ ಬದಲಿಗೆ ಕಾರ್ಮಿಕ ಹಾಗೂ ಕೈಗಾರಿಕಾ ಕಾನೂನು–1 ಮತ್ತು ಕಾರ್ಮಿಕ ಹಾಗೂ ಕೈಗಾರಿಕಾ ಕಾನೂನು–2 ವಿಷಯಗಳನ್ನು ಹೊಸದಾಗಿ ಅಳವಡಿಸಿ, ಹೊಸ ವಿದ್ಯಾರ್ಥಿಗಳ ಜೊತೆಗೆ ಪುನರಾವರ್ತಿತ ವಿದ್ಯಾರ್ಥಿಗಳಿಗೂ ಅದನ್ನು ಕಡ್ಡಾಯಗೊಳಿಸಲಾಗಿತ್ತು.

ವಿದ್ಯಾರ್ಥಿಗಳ ಆಕ್ಷೇಪ ಏನು?

ಮೂರು ವರ್ಷದ ಎಲ್‌ಎಲ್‌ಬಿ ಕೋರ್ಸ್‌ಗೆ ಸೇರ್ಪಡೆಯಾದ ವಿದ್ಯಾರ್ಥಿಗಳು ಗರಿಷ್ಠ ಐದು ವರ್ಷಗಳೊಳಗೆ ಪದವಿ ಪೂರ್ಣಗೊಳಿಸುವ ಅವಕಾಶ ಹೊಂದಿರುತ್ತಾರೆ. ಈ ಅವಧಿಯಲ್ಲಿ ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪುನರಾವರ್ತಿತ ವಿದ್ಯಾರ್ಥಿಗಳಾಗಿ ಪರೀಕ್ಷೆ ಬರೆಯಬೇಕಾಗುತ್ತದೆ.

ಆದರೆ, ಈಗಾಗಲೇ ಅಧ್ಯಯನ ಮಾಡಿದ್ದ ವಿಷಯಗಳ ಬದಲಿಗೆ ಹೊಸ ವಿಷಯಗಳನ್ನು ಕಡ್ಡಾಯಗೊಳಿಸಿರುವುದು ಪುನರಾವರ್ತಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ಅರ್ಜಿದಾರರು ವಾದಿಸಿದ್ದರು.

ಈ ವಾದವನ್ನು ಪರಿಗಣಿಸಿದ ಹೈಕೋರ್ಟ್‌, ಪುನರಾವರ್ತಿತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುತ್ತೋಲೆಯನ್ನು ರದ್ದುಪಡಿಸಿ, ಅವರಿಗೆ ಹಿಂದಿನ ಪಠ್ಯಕ್ರಮದ ಪ್ರಕಾರವೇ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕೆಎಸ್‌ಎಲ್‌ಯುಗೆ ನಿರ್ದೇಶನ ನೀಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ಶ್ರೀವತ್ಸ ವಾದ ಮಂಡಿಸಿದ್ದು, ವಕೀಲ ಶಶಾಂಕ್ ನ್ಯಾಯಾಲಯದಲ್ಲಿ ಹಾಜರಿದ್ದರು.

error: Content is protected !!