Home Blog

ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದ ಟ್ವಿಸ್ಟ್; ಮೂರು ಬಾರಿ ಬದಲಾದ ಸಚಿವರ ಪಟ್ಟಿ, ಹೆಚ್ಚಿದ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಾಗೂ ವಿಧಾನಸಭೆ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಸುತ್ತ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹಲವು ಹೈಡ್ರಾಮಾ ಬೆಳವಣಿಗೆಗಳು ನಡೆದಿವೆ.

ಸರ್ಕಾರದ ಮಟ್ಟದಲ್ಲಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಕೊನೆ ಕ್ಷಣದವರೆಗೂ ನಡೆದ ಕಸರತ್ತಿನಿಂದಾಗಿ, ಕೆಲವೇ ಗಂಟೆಗಳ ಅವಧಿಯಲ್ಲಿ ಸಚಿವರು ಹಾಗೂ ಸ್ಪೀಕರ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂರು ಬಾರಿ ಬದಲಾವಣೆ ನಡೆದಿದೆ ಎನ್ನಲಾಗಿದೆ.

ಬೆಳಗ್ಗೆ ಮುಖ್ಯಮಂತ್ರಿ ಅವರು ಸ್ಪೀಕರ್ ಸ್ಥಾನಕ್ಕೆ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರ ಹೆಸರನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಶಿಫಾರಸು ಪತ್ರ ಕಳುಹಿಸಿದ್ದರು ಎನ್ನಲಾಗಿದೆ. ಆದರೆ, ಕೆಲವೇ ಗಂಟೆಗಳಲ್ಲಿ ಎಐಸಿಸಿ ಕಡೆಯಿಂದ ಜಿ.ಎಸ್‌. ಪಾಟೀಲ್ ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಶಿಫಾರಸು ಮಾಡಲಾಗಿದ್ದು, ಈ ಬೆಳವಣಿಗೆ ಅಚ್ಚರಿಗೆ ಕಾರಣವಾಗಿದೆ.

ಇದೇ ವೇಳೆ, ಸಚಿವ ಸಂಪುಟದ ಪಟ್ಟಿಯಲ್ಲೂ ಕೊನೆ ಕ್ಷಣದ ಬದಲಾವಣೆಗಳು ನಡೆದಿವೆ. ಎಐಸಿಸಿ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿಯಲ್ಲಿ ಭಟ್ಕಳ ಶಾಸಕ ಮಂಕಾಳು ವೈದ್ಯ ಅವರ ಹೆಸರು ಕಾಣಿಸಿಕೊಂಡಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಅವರ ಹೆಸರನ್ನು ಕೈಬಿಟ್ಟು, ದಾವಣಗೆರೆ ಉತ್ತರ ಶಾಸಕ ಎಸ್‌.ಎಸ್‌. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮಹಿಳಾ ಕೋಟಾದಡಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು ಎನ್ನಲಾಗಿತ್ತು. ಆದರೆ ತಮ್ಮ ಆಪ್ತರಾದ ಶಿವಣ್ಣನವರ್ ಅವರಿಗೆ ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದು, ಗಾಯತ್ರಿ ಶಾಂತೇಗೌಡ ಅವರು ಪ್ರಮಾಣವಚನ ಸ್ವೀಕರಿಸದಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

ಸಚಿವ ಸಂಪುಟದ ಅಧಿಕೃತ ಪಟ್ಟಿ ಪ್ರಕಟವಾದ ಬಳಿಕ ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಅಸಮಾಧಾನ ಹಾಗೂ ಗೊಂದಲಗಳು ಮತ್ತಷ್ಟು ಹೆಚ್ಚಾಗಿವೆ. ಸಚಿವ ಸ್ಥಾನ ಕೈತಪ್ಪಿದ ಹಲವು ಶಾಸಕರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿದೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶ: ಡಿಕೆಶಿ ಕಾರಿಗೆ ಮುತ್ತಿಗೆ ಯತ್ನ

ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಾಕೃಷ್ಣ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ವಿರೋಧಿಸಿ ಬೆಂಬಲಿಗರು ಹಾಗೂ ಮಾಜಿ ಶಾಸಕ ಎಂ. ಕೃಷ್ಣಪ್ಪ ಅಭಿಮಾನಿಗಳು ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ನಾಗರಭಾವಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ದೊರೆತ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಗರಭಾವಿಯ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ರಸ್ತೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಸಿಎಂ ಕಾರನ್ನು ತಡೆಯಲು ಮುಂದಾಗಿದ್ದಾರೆ.

ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ಭದ್ರತಾ ಸಿಬ್ಬಂದಿ ಎಚ್ಚರಿಕೆ ವಹಿಸಿದ್ದು, ಮುಖ್ಯಮಂತ್ರಿ ಕಾರು ಯು-ಟರ್ನ್ ಪಡೆದು ಹಿಂತಿರುಗಿದೆ. ಆದರೂ ಆಕ್ರೋಶಗೊಂಡ ಕಾರ್ಯಕರ್ತರು ಕಾರಿನ ಹಿಂದೆಯೇ ಓಡಿ ಪ್ರತಿಭಟನೆ ಮುಂದುವರಿಸಿದ್ದಾರೆ.

ನಾಗರಭಾವಿ ಸರ್ಕಲ್ ಹಾಗೂ ವಿಜಯನಗರ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಕೃಷ್ಣಪ್ಪ ಬೆಂಬಲಿಗರು ಮತ್ತು ಮಹಿಳಾ ಕಾರ್ಯಕರ್ತೆಯರು ರಸ್ತೆ ಮಧ್ಯೆಯೇ ಕುಳಿತು, ಮಲಗಿ ಪ್ರತಿಭಟನೆ ನಡೆಸಿದರು. ಇದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಪ್ರತಿಭಟನೆಯ ಪರಿಣಾಮ ಮೈಸೂರು ರಸ್ತೆಯಲ್ಲಿ ಸುಮಾರು 4 ಕಿಲೋಮೀಟರ್‌ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ ಸಂಚಾರ ವ್ಯವಸ್ಥೆ ಸರಿಪಡಿಸಲು ಕ್ರಮ ಕೈಗೊಂಡಿದ್ದಾರೆ.

ಕಂಟೇನರ್‌ಗೆ ವೋಲ್ವೋ ಬಸ್ ಡಿಕ್ಕಿ: ಬೆಂಗಳೂರಿಗೆ ಬರುತ್ತಿದ್ದ ಟೆಕ್ಕಿ ಯುವತಿ ಸಾವು

0

ಚಿಕ್ಕಬಳ್ಳಾಪುರ: ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ವೋಲ್ವೋ ಬಸ್ ಭೀಕರ ಅಪಘಾತಕ್ಕೀಡಾಗಿ ಟೆಕ್ಕಿ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-44ರ ಅಗಲಗುರ್ಕಿ ಬಳಿ ಕಂಟೇನರ್‌ಗೆ ಬಸ್ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ಛಿದ್ರವಾಗಿದೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಐಷಾರಾಮಿ ವೋಲ್ವೋ ಬಸ್, ಮಾರ್ಗಮಧ್ಯೆ ಮುಂದೆ ಚಲಿಸುತ್ತಿದ್ದ ಕಂಟೇನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಬಸ್‌ನ ಮುಂಭಾಗದ ಬಾಗಿಲಿನ ಸಮೀಪ ಕುಳಿತಿದ್ದ ಅನಂತಪುರ ಜಿಲ್ಲೆಯ ಚಿಲ್ಲಮತ್ತೂರು ನಿವಾಸಿ ಕೌಸರ್ ತಾಜ್ (28) ಗಂಭೀರವಾಗಿ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ರಕ್ಷಣಾ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಕ್ರೇನ್ ಬಳಸಿ ಬಸ್‌ನ ಮುಂಭಾಗವನ್ನು ತೆರವುಗೊಳಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ನಂತರ ಶವವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.

ಮೃತ ಯುವತಿ ಕೊಡಿಕೊಂಡ ಚೆಕ್‌ಪೋಸ್ಟ್ ಬಳಿ ಬಸ್ ಹತ್ತಿದ್ದು, ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರೂ, ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳಕ್ಕೆ ಧಾವಿಸಿದ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಿದರು.

ಕಾಂಗ್ರೆಸ್ʼನಲ್ಲಿ ಅಸಮಾಧಾನದ ಸ್ಫೋಟ; ಬೇಳೂರು ಗೋಪಾಲಕೃಷ್ಣ, ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಎಚ್ಚರಿಕೆ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಲವು ಸಚಿವಾಕಾಂಕ್ಷಿಗಳು ಹಾಗೂ ಹಿರಿಯ ಶಾಸಕರಲ್ಲಿ ಅಸಮಾಧಾನ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಇಬ್ಬರು ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಘೋಷಣೆ ಮಾಡಿದ್ದಾರೆ.

ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಯಶವಂತರಾಯಗೌಡ ಪಾಟೀಲ್, ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಇದೆ ಎಂದು ಕರೆ ಮಾಡಿ ತಿಳಿಸಲಾಗಿತ್ತು. ಪ್ರಮಾಣವಚನಕ್ಕೆ ಸಿದ್ಧರಾಗುವಂತೆ ಹೇಳಿದ ಬಳಿಕ ಇದೀಗ ಅವಕಾಶ ಕೈತಪ್ಪಿಸಿರುವುದು ತೀವ್ರ ಬೇಸರ ತಂದಿದೆ ಎಂದು ಹೇಳಿದ್ದಾರೆ.

“ನನಗೆ ಈ ರಾಜಕೀಯ ವ್ಯವಸ್ಥೆಯೇ ಬೇಡ ಎನ್ನುವಂತಾಗಿದೆ. ನಿಷ್ಠಾವಂತರು ಮತ್ತು ಪ್ರಾಮಾಣಿಕರಿಗೆ ಇದು ಕಾಲವಲ್ಲ. ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ರಾಜೀನಾಮೆ ಪತ್ರ ಸಿದ್ಧಪಡಿಸಿದ್ದೇನೆ. ಇಂದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಯಶವಂತರಾಯಗೌಡ ಪಾಟೀಲ್ ತಿಳಿಸಿದ್ದಾರೆ.

ಇದೇ ವೇಳೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

“ಸಂಪುಟ ವಿಸ್ತರಣೆಯಲ್ಲಿಯೂ ಸಚಿವ ಸ್ಥಾನ ಸಿಗಲಿಲ್ಲ. ಹಿರಿತನ, ಅನುಭವ ಇರುವವರಿಗೆ ಅವಕಾಶ ನೀಡಿಲ್ಲ. ಮೂರು ಬಾರಿ ಶಾಸಕನಾಗಿದ್ದರೂ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಲಾಗಿದೆ. ಇದರಿಂದ ತುಂಬಾ ನೋವಾಗಿದೆ. ಬೆಂಬಲಿಗರು ಕಣ್ಣೀರಿಡುತ್ತಿದ್ದಾರೆ” ಎಂದು ಬೇಳೂರು ಗೋಪಾಲಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸಬರಿಗೆ ಅವಕಾಶ ನೀಡುವುದಾಗಿ ಹೇಳಲಾಗಿತ್ತು. ಆದರೆ ಕೆಲವರನ್ನು ಹೊರತುಪಡಿಸಿದರೆ ಈಗಾಗಲೇ ಸಚಿವರಾಗಿದ್ದವರಿಗೆ ಮತ್ತೆ ಅವಕಾಶ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಬೇರೆ ಶಾಸಕರಿಗೆ ಅವಕಾಶವೇ ಸಿಕ್ಕಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಸಹಿಸಲು ಸಾಧ್ಯವಿಲ್ಲ. ಇದರಿಂದ ಪಕ್ಷಕ್ಕೂ ಹೊಡೆತ ಬೀಳಲಿದೆ. ನಾಳೆ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನ ಎರಡಕ್ಕೂ ರಾಜೀನಾಮೆ ನೀಡುತ್ತೇನೆ. ಮುಂದಿನ ನಡೆ ಬಗ್ಗೆ ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ” ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗೆ ಟ್ವಿಸ್ಟ್: ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯ ಔಟ್, ಎಸ್.ಎಸ್. ಮಲ್ಲಿಕಾರ್ಜುನ ಇನ್!

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಕಟಿಸಿದ್ದ ನೂತನ ಸಚಿವರ ಪಟ್ಟಿಯಲ್ಲಿ ಕೊನೆಯ ಕ್ಷಣದಲ್ಲಿ ಮಹತ್ವದ ಬದಲಾವಣೆ ನಡೆದಿದೆ.

ಆರಂಭದಲ್ಲಿ ಪಟ್ಟಿಯಲ್ಲಿ ಹೆಸರು ಕಾಣಿಸಿಕೊಂಡಿದ್ದ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಅವರ ಬದಲಿಗೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಅವಕಾಶ ನೀಡಲಾಗಿದೆ.

ಈ ಬೆಳವಣಿಗೆ ಕುರಿತು ಎಐಸಿಸಿ ಸ್ಪಷ್ಟನೆ ನೀಡಿದ್ದು, ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರು ಕಾಣಿಸಿಕೊಂಡಿರುವುದು ಟೈಪಿಂಗ್ ಮಿಸ್ಟೇಕ್‌ ಆಗಿದ್ದು, ಅಂತಿಮ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ ಎಂದು ತಿಳಿಸಿದೆ.

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಮಂಕಾಳು ವೈದ್ಯ ಅವರು ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿ, ಕೊನೆಯ ಕ್ಷಣದ ಬದಲಾವಣೆ ಕುರಿತು ಚರ್ಚಿಸಲು ಯತ್ನಿಸಿದ್ದಾರೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಮಂಕಾಳು ವೈದ್ಯ, “ನಾನು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿಲ್ಲ. ಅವರು ಸಿಗಲಿಲ್ಲ. ಮತ್ತೆ ಬರುತ್ತೇನೆ,” ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದ್ದಾರೆ.

ಇನ್ನೊಂದೆಡೆ, ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಎಸ್.ಎಸ್. ಮಲ್ಲಿಕಾರ್ಜುನ ಅವರು, ಸಚಿವ ಸ್ಥಾನ ಸಿಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಅಲ್ಲದೆ, ಸಂಸದೆಯಾಗಿರುವ ತಮ್ಮ ಪತ್ನಿ ಹಾಗೂ ಶಾಸಕರಾಗಿರುವ ಪುತ್ರ ಕೂಡ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶದ ಮೂಲಕ ಪಕ್ಷದ ನಾಯಕರ ಮೇಲೆ ಒತ್ತಡ ಹೇರಿದ್ದರು ಎಂಬ ಮಾಹಿತಿಯೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ಬೆಳವಣಿಗೆಗಳ ಬೆನ್ನಲ್ಲೇ ಕೊನೆಯ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿ ಬದಲಾವಣೆ ಮಾಡಿ, ಮಂಕಾಳು ವೈದ್ಯ ಅವರ ಬದಲಿಗೆ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಅವಕಾಶ: ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಸಮಾಧಾನ!

ಮೈಸೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ತನ್ವೀರ್ ಸೇಠ್, ತಮ್ಮ ಆಸೆ ನಿರಾಸೆಯಾಗಿದೆ ಎಂದು ಹೇಳಿದ್ದಾರೆ.

“ರಾಹುಲ್ ಗಾಂಧಿ ಬಗ್ಗೆ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಕೆ.ಎನ್. ರಾಜಣ್ಣ ಅವರನ್ನು ತಕ್ಷಣ ವಜಾ ಮಾಡಲಾಗಿತ್ತು. ಆದರೆ, ಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ನೀಡಲಾಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರು ಭಾಗಕ್ಕೆ ಸಿಗಬೇಕಾದ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಹೇಳಿದ ಅವರು, ಪ್ರಸ್ತುತ ಸಚಿವ ಸಂಪುಟದ ಪಟ್ಟಿ ಆಶಾದಾಯಕವಾಗಿಲ್ಲ ಎಂದರು. ಸಚಿವ ಸ್ಥಾನ ಪಡೆದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ ಅವರು, ಆದರೆ ತಮ್ಮ ಭಾಗಕ್ಕೆ ಅನ್ಯಾಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

“ನನಗೆ ಸಿಗಬೇಕಾದ ಗೌರವ ಸಿಗಲಿಲ್ಲ. ನನ್ನ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬದ್ಧನಾಗಿರುತ್ತೇನೆ” ಎಂದು ತನ್ವೀರ್ ಸೇಠ್ ಹೇಳಿದರು.

ಸಚಿವ ಸಂಪುಟ ರಚನೆ ಯಾವ ಮಾನದಂಡದ ಆಧಾರದ ಮೇಲೆ ನಡೆದಿದೆ ಎಂಬುದು ತಿಳಿದಿಲ್ಲ ಎಂದು ಪ್ರಶ್ನಿಸಿದ ಅವರು, ದಾವಣಗೆರೆ ಉಪಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದವರಿಗೂ ಅವಕಾಶ ಸಿಕ್ಕಿಲ್ಲ ಎಂದು ಹೇಳಿದರು.

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ, ಆದರೆ ಪಕ್ಷಕ್ಕೆ ನಿಷ್ಠೆಯಿಂದ ದುಡಿದವರಿಗೆ ಅವಕಾಶ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ತನ್ವೀರ್ ಸೇಠ್, ಇದರ ಹಿಂದೆ ಹಲವು ಬೆಳವಣಿಗೆಗಳು ನಡೆದಿವೆ ಎಂದು ಆರೋಪಿಸಿದರು. “ಪಕ್ಷದಿಂದ ಕೈತಪ್ಪಿಲ್ಲ, ನಮ್ಮ ನಾಯಕರಿಂದ ನನಗೆ ಕೈತಪ್ಪಿದೆ. ಹೈಕಮಾಂಡ್ ವಿರುದ್ಧ ಯಾವುದೇ ರೀತಿಯ ಆರೋಪ ಮಾಡಲು ನನಗೆ ಏನೂ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

ಪ್ರಧಾನಿ ಮೋದಿ ಕ್ಷಮಾದಾನದ ಬಳಿಕ ಬಾಲಕಿಯ ಮೇಲಿನ ಕೇಸ್ ರದ್ದು: ನಿಟ್ಟುಸಿರು ಬಿಟ್ಟ ಕುಟುಂಬ

0

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಅವರ ತಾಯಿ, ಭಾರತೀಯ ಸೇನೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಗಳಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ.

ಅತಿರೇಕದ ವರ್ತನೆ ಹಾಗೂ ಅವಹೇಳನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಲು ಮುಂದಾದ ಬೆನ್ನಲ್ಲೇ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ಕ್ಷಮೆಯಾಚನೆ ಮಾಡುವ ವಿಡಿಯೋಗಳನ್ನು ಹಂಚಿಕೊಂಡಿದ್ದರು.

ಈ ಪೈಕಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿ ರೀತಿಯಲ್ಲಿ ನಿಂದಿಸಿದ ಆರೋಪ ಎದುರಿಸುತ್ತಿದ್ದ ಅಪ್ರಾಪ್ತ ಬಾಲಕಿಯ ವಿರುದ್ಧದ ಪ್ರಕರಣವನ್ನು ದೆಹಲಿ ಪೊಲೀಸರು ರದ್ದುಗೊಳಿಸಿದ್ದಾರೆ. ಪ್ರಧಾನಿ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮನ್ನು ನಿಂದಿಸಿದ ಮಕ್ಕಳನ್ನು ಕ್ಷಮಿಸಿರುವುದಾಗಿ ಹೇಳಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಜಂತರ್ ಮಂತರ್ ಪ್ರತಿಭಟನೆ ವೇಳೆ ಅಪ್ರಾಪ್ತ ಬಾಲಕಿಯ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಪ್ರಕರಣ ದಾಖಲಾಗುತ್ತಿದ್ದಂತೆ ಬಾಲಕಿಯ ಕುಟುಂಬ ಆತಂಕಕ್ಕೆ ಒಳಗಾಗಿತ್ತು ಎನ್ನಲಾಗಿದೆ.

ಬಳಿಕ ಬಾಲಕಿ ವಿಡಿಯೋ ಮೂಲಕ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಳು. ಅಂದಿನ ಆವೇಶದಲ್ಲಿ ತಪ್ಪಾಗಿ ಮಾತನಾಡಿದ್ದು, ತಮ್ಮಿಂದ ತಪ್ಪಾಗಿದೆ. ದಯವಿಟ್ಟು ಕ್ಷಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಳು.

ಬಾಲಕಿ ಸೇರಿದಂತೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಲವರು ತಮ್ಮಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸೆಲ್ಫಿ ವಿಡಿಯೋ ಮೂಲಕ ಪ್ರತಿಕ್ರಿಯಿಸಿ, ಮಕ್ಕಳು ತಪ್ಪು ಮಾಡುವುದು ಸಹಜ. ಅವರನ್ನು ತಿದ್ದಿ ಸರಿಯಾದ ದಾರಿಯಲ್ಲಿ ಮುನ್ನಡೆಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದರು.

“ಮಕ್ಕಳು ತಪ್ಪಿನಿಂದ ಏನಾದರೂ ಹೇಳಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವರ ಭವಿಷ್ಯವನ್ನು ಹಾಳು ಮಾಡಬಾರದು. ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳ ಸುತ್ತ ಅವರ ಜೀವನ ಸಾಗುವಂತಾಗಬಾರದು” ಎಂದು ಹೇಳಿದ್ದ ಮೋದಿ, ತಮ್ಮನ್ನು ನಿಂದಿಸಿದ ಮಕ್ಕಳನ್ನು ಕ್ಷಮಿಸಿರುವುದಾಗಿ ತಿಳಿಸಿದ್ದರು.

ಇದೇ ವೇಳೆ, ಬಾಲಕಿಯ ತಾಯಿ ಕೂಡ ಮಾಧ್ಯಮಗಳ ಮೂಲಕ ಪ್ರತಿಕ್ರಿಯಿಸಿ, ಮಗಳು ತಪ್ಪು ಮಾಡಿದ್ದಾಳೆ. ಆಕೆಯನ್ನು ಕ್ಷಮಿಸುವಂತೆ ಮನವಿ ಮಾಡಿದ್ದರು.

ಪ್ರಕರಣ ಹಿಂಪಡೆಯುವಂತೆ ಹಲವು ರಾಜಕೀಯ ನಾಯಕರು ಹಾಗೂ ಸಂಘಟನೆಗಳು ಕೂಡ ಒತ್ತಾಯಿಸಿದ್ದವು. ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಸೇರಿದಂತೆ ಹಲವರು ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದರು.

ಜಿ.ಎಸ್. ಪಾಟೀಲ್ ಸ್ಪೀಕರ್, ಪೊನ್ನಣ್ಣ ಡೆಪ್ಯುಟಿ ಸ್ಪೀಕರ್; ಸಲೀಂ ಅಹ್ಮದ್, ಉಮಾಶ್ರೀಗೆ ವಿಧಾನ ಪರಿಷತ್ ಜವಾಬ್ದಾರಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, ನೂತನ ಸಚಿವರು ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ಜೊತೆಗೆ ವಿಧಾನಸಭೆ ಸ್ಪೀಕರ್, ಡೆಪ್ಯುಟಿ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಹುದ್ದೆಗಳಿಗೂ ಎಐಸಿಸಿ ಅಂತಿಮ ನಿರ್ಧಾರ ಕೈಗೊಂಡಿದೆ.

ವಿಧಾನಸಭೆ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ವಿಧಾನಸಭೆಯ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ಆಯ್ಕೆ ಮಾಡಲಾಗಿದೆ.

ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಹಾಗೂ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ವಿಧಾನಸಭೆ ಸ್ಪೀಕರ್ ಆಗಿದ್ದ ಯು.ಟಿ. ಖಾದರ್ ಅವರು ಈಗಾಗಲೇ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನು ವಿಧಾನಸಭೆಯ ಡೆಪ್ಯುಟಿ ಸ್ಪೀಕರ್ ಆಗಿದ್ದ ರುದ್ರಪ್ಪ ಲಮಾಣಿ ಅವರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ತಮ್ಮ ಹಾಲಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ವಿಧಾನ ಪರಿಷತ್ ಸಭಾಪತಿಯಾಗಿ ಪ್ರಸ್ತುತ ಬಸವರಾಜ ಹೊರಟ್ಟಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಎಐಸಿಸಿ ಹೊಸ ನಿರ್ಧಾರದ ಹಿನ್ನೆಲೆಯಲ್ಲಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಸ್ಥಾನ ತ್ಯಜಿಸುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ವರದಿಗಳನ್ನು ಹೊರಟ್ಟಿ ನಿರಾಕರಿಸಿದ್ದರು.

ಬಸವರಾಜ ಹೊರಟ್ಟಿ ಅವರು ಬಿಜೆಪಿ ಬೆಂಬಲದಿಂದ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಬಹುಮತದ ಕೊರತೆ ಇರುವ ಸಂದರ್ಭದಲ್ಲಿ ಸಭಾಪತಿ ಸ್ಥಾನದಿಂದ ಹಿಂದೆ ಸರಿಯುವುದು ಸೂಕ್ತ ಎಂಬ ಅಭಿಪ್ರಾಯವನ್ನು ಕಾಂಗ್ರೆಸ್‌ನ ಕೆಲವು ನಾಯಕರು ವ್ಯಕ್ತಪಡಿಸಿದ್ದರು.

ಇದೇ ವೇಳೆ ಚುನಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಪರವಾಗಿ ತೀರ್ಪು ನೀಡಿದ ಬಳಿಕ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಹೀಗಾಗಿ ತೆರವಾಗಿರುವ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ.

ವಿಚ್ಛೇದನದ ಬಳಿಕ ಖಿನ್ನತೆಗೆ ಒಳಗಾಗಿದ್ದ ಮನೋವೈದ್ಯೆ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ!

0

ಲಕ್ನೋ: ಪತಿಯಿಂದ ವಿಚ್ಛೇದನ ಪಡೆದ ಬಳಿಕ ಮಾನಸಿಕ ಒತ್ತಡ ಹಾಗೂ ಖಿನ್ನತೆಗೆ ಒಳಗಾಗಿದ್ದ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.

ಮೃತರನ್ನು 40 ವರ್ಷದ ಡಾ. ಹೆಮಿಕಾ ಅಗರ್ವಾಲ್ ಎಂದು ಗುರುತಿಸಲಾಗಿದೆ. ರಾಜ್ ನಗರ ಎಕ್ಸ್‌ಟೆನ್ಷನ್‌ನಲ್ಲಿರುವ ಆಫೀಸರ್ಸ್ ಸಿಟಿ-2 ಅಪಾರ್ಟ್‌ಮೆಂಟ್ನ ಐದನೇ ಮಹಡಿಯಿಂದ ಬಿದ್ದು ಅವರು ಮೃತಪಟ್ಟಿದ್ದಾರೆ.

ಘಟನೆ ಭಾನುವಾರ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಡಾ. ಹೆಮಿಕಾ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕುಟುಂಬದವರ ಮಾಹಿತಿ ಪ್ರಕಾರ, ಸುಮಾರು ಒಂದೂವರೆ ವರ್ಷದ ಹಿಂದೆ ಡಾ. ಹೆಮಿಕಾ ಅವರಿಗೆ ವಿಚ್ಛೇದನವಾಗಿತ್ತು. ಬಳಿಕ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಅವರ ತಂದೆ ಖ್ಯಾತ ಮನೋವೈದ್ಯ ಡಾ. ಆರ್. ಚಂದ್ರ ಅವರು, ಮಗಳು ಕಳೆದ ಕೆಲವು ತಿಂಗಳುಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿಸಿದ್ದಾರೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

ಇದುವರೆಗೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿರುವ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉದ್ಯೋಗಿಗಳಿಗೆ ಗುಡ್ ನ್ಯೂಸ್; ಸಂಪೂರ್ಣ ಗ್ರಾಚ್ಯುಟಿ ತಡೆಹಿಡಿಯಲು ಸಾಧ್ಯವಿಲ್ಲ – ಸುಪ್ರೀಂ ಸ್ಪಷ್ಟನೆ

0

ನವದೆಹಲಿ: ಗ್ರಾಚ್ಯುಟಿ (Gratuity) ಹಣವನ್ನು ತಡೆಹಿಡಿಯುವ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಉದ್ಯೋಗಿಗಳ ಹಕ್ಕುಗಳಿಗೆ ಬಲ ನೀಡಿದೆ. ಯಾವುದೇ ಸಮರ್ಪಕ ಕಾರಣವಿಲ್ಲದೆ ಕಂಪನಿಗಳು ಉದ್ಯೋಗಿಯ ಸಂಪೂರ್ಣ ಗ್ರಾಚ್ಯುಟಿ ಮೊತ್ತವನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಉದ್ಯೋಗಿಯ ನಿರ್ಲಕ್ಷ್ಯ, ಕರ್ತವ್ಯ ಲೋಪ ಅಥವಾ ದುರ್ವರ್ತನೆಯಿಂದ ಸಂಸ್ಥೆಗೆ ಆರ್ಥಿಕ ನಷ್ಟ ಉಂಟಾಗಿರುವುದು ದಾಖಲೆಗಳ ಮೂಲಕ ಸಾಬೀತಾದರೆ ಮಾತ್ರ ಆ ನಷ್ಟಕ್ಕೆ ಸಮಾನವಾದ ಮೊತ್ತವನ್ನು ಗ್ರಾಚ್ಯುಟಿ ಹಣದಿಂದ ಕಡಿತಗೊಳಿಸಬಹುದು. ಆದರೆ, ಸಂಪೂರ್ಣ ಗ್ರಾಚ್ಯುಟಿ ಮೊತ್ತವನ್ನು ಜಪ್ತಿ ಮಾಡುವುದು ಕಾನೂನುಬಾಹಿರ ಎಂದು ನ್ಯಾಯಾಲಯ ಹೇಳಿದೆ.

ಉದಾಹರಣೆಗೆ, ಉದ್ಯೋಗಿಯಿಂದ ಕಂಪನಿಗೆ ₹5,000 ನಷ್ಟವಾಗಿದ್ದು, ಆತನಿಗೆ ₹50,000 ಗ್ರಾಚ್ಯುಟಿ ಬರಬೇಕಿದ್ದರೆ, ಕಂಪನಿ ₹5,000 ಮಾತ್ರ ಕಡಿತಗೊಳಿಸಿ ಉಳಿದ ₹45,000 ಹಣವನ್ನು ಕಡ್ಡಾಯವಾಗಿ ಪಾವತಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಗ್ರಾಚ್ಯುಟಿ ಪಾವತಿ ಕಾಯ್ದೆ-1972 (Payment of Gratuity Act, 1972) ಪ್ರಕಾರ, ಉದ್ಯೋಗಿಯ ತಪ್ಪಿನಿಂದ ಕಂಪನಿಯ ಆಸ್ತಿಗೆ ಹಾನಿ ಅಥವಾ ಆರ್ಥಿಕ ನಷ್ಟ ಉಂಟಾದರೆ, ಆ ನಷ್ಟದ ಮೊತ್ತವನ್ನು ಮಾತ್ರ ವಸೂಲಿ ಮಾಡಬಹುದು. ಸಂಪೂರ್ಣ ಗ್ರಾಚ್ಯುಟಿ ಹಣವನ್ನು ತಡೆಹಿಡಿಯಲು ಅವಕಾಶವಿಲ್ಲ.

ಇದರ ಜೊತೆಗೆ, ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸಂಬಂಧಪಟ್ಟ ಉದ್ಯೋಗಿಗೆ ನೋಟಿಸ್ ನೀಡುವುದು ಹಾಗೂ ಅವರ ವಿವರಣೆಯನ್ನು ಆಲಿಸುವುದು ಕಡ್ಡಾಯವಾಗಿದೆ. ಉದ್ಯೋಗಿಯು ತನ್ನ ಪರವಾಗಿ ಸಾಕ್ಷ್ಯಾಧಾರಗಳನ್ನು ಸಲ್ಲಿಸಲು ಸಮಯ ಕೋರಿದರೆ, ಅದಕ್ಕೂ ಸೂಕ್ತ ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಉದ್ಯೋಗಿಯನ್ನು ಹಿಂಸಾಚಾರ, ನೈತಿಕ ಭ್ರಷ್ಟಾಚಾರ, ಗಂಭೀರ ದುರ್ವರ್ತನೆ ಅಥವಾ ಗಂಭೀರ ಅಪರಾಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಿದ ಸಂದರ್ಭಗಳಲ್ಲಿ ಮಾತ್ರ ಸಂಪೂರ್ಣ ಗ್ರಾಚ್ಯುಟಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ.

ಸುಪ್ರೀಂ ಕೋರ್ಟ್‌ನ ಈ ತೀರ್ಪು ದೇಶದ ಲಕ್ಷಾಂತರ ಉದ್ಯೋಗಿಗಳಿಗೆ ಮಹತ್ವದ ರಕ್ಷಣೆ ಒದಗಿಸಿದೆ. ವೈಯಕ್ತಿಕ ದ್ವೇಷ ಅಥವಾ ಸಣ್ಣಪುಟ್ಟ ಕಾರಣಗಳನ್ನು ನೆಪವಿಟ್ಟು ಗ್ರಾಚ್ಯುಟಿ ಹಣವನ್ನು ತಡೆಹಿಡಿಯುವ ಕಂಪನಿಗಳ ಕ್ರಮಕ್ಕೆ ನ್ಯಾಯಾಲಯ ಸ್ಪಷ್ಟವಾದ ತಡೆ ನೀಡಿದ್ದು, ಉದ್ಯೋಗಿಗಳ ಕಾನೂನುಬದ್ಧ ಹಕ್ಕುಗಳನ್ನು ಮತ್ತೊಮ್ಮೆ ಎತ್ತಿ ಹಿಡಿದಿದೆ.