Home Blog

ಪೆಟ್ರೋಲ್ ದರ ಏರಿಕೆ ಎಫೆಕ್ಟ್‌: ಬೆಂಗಳೂರಿನಲ್ಲಿ ಇವಿ ಬೈಕ್‌ಗಳಿಗೆ ಭಾರೀ ಡಿಮ್ಯಾಂಡ್‌!

ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ನಿರಂತರ ಏರಿಕೆಯಾಗುತ್ತಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಏರಿಕೆಯಾಗುತ್ತಿದೆ.

ಪಶ್ಚಿಮ ಏಷ್ಯಾದಲ್ಲಿನ ಸಮರ ಪರಿಸ್ಥಿತಿ ಮತ್ತು ಇಂಧನ ಬಿಕ್ಕಟ್ಟಿನ ಪರಿಣಾಮವಾಗಿ ಇಂಧನ ದರಗಳು ಹೆಚ್ಚಳ ಕಂಡಿದ್ದು, ವಾಹನ ಸವಾರರ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಾಗಿದೆ.

ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 90 ಪೈಸೆ ಏರಿಕೆಯಾದ ಹಿನ್ನೆಲೆ ಜನರು ಪರ್ಯಾಯ ವ್ಯವಸ್ಥೆಗಳತ್ತ ಮುಖ ಮಾಡುತ್ತಿದ್ದಾರೆ.

ಈ ನಡುವೆ ಬೆಂಗಳೂರಿನ ರಾಜಾಜಿನಗರ ಸೇರಿದಂತೆ ಹಲವು ಪ್ರದೇಶಗಳ ಇವಿ ಬೈಕ್ ಶೋರೂಂಗಳಲ್ಲಿ ಜನರ ಸಂಖ್ಯೆ ಹೆಚ್ಚಾಗಿದೆ. ಗ್ರಾಹಕರು ಎಲೆಕ್ಟ್ರಿಕ್ ಬೈಕ್‌ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದು, ಹಲವರು ನೇರವಾಗಿ ಬುಕ್ಕಿಂಗ್ ಕೂಡ ಮಾಡುತ್ತಿದ್ದಾರೆ.

ಪರಿಸರ ಸ್ನೇಹಿ ತಂತ್ರಜ್ಞಾನ, ಕಡಿಮೆ ನಿರ್ವಹಣಾ ವೆಚ್ಚ ಹಾಗೂ ಇಂಧನ ಖರ್ಚು ಉಳಿಯುವ ಕಾರಣಕ್ಕೆ ಜನರು ಎಲೆಕ್ಟ್ರಿಕ್ ವಾಹನಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಕರ್ನಾಟಕ ಮೂಲದ ಹಲವು ಸ್ಟಾರ್ಟ್‌ಅಪ್ ಹಾಗೂ ಉದ್ಯಮಿಗಳು ಹೊಸ ಮಾದರಿಯ ಇವಿ ಬೈಕ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಕಡಿಮೆ ಬಜೆಟ್‌ನಲ್ಲಿ ಆಧುನಿಕ ಫೀಚರ್ಸ್‌ಗಳೊಂದಿಗೆ ವಾಹನಗಳನ್ನು ಬಿಡುಗಡೆ ಮಾಡುತ್ತಿದ್ದಾರೆ.

ಪೆಟ್ರೋಲ್ ದರ ಏರಿಕೆಯು ಮುಂದುವರಿದರೆ ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವಾಹನ ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಡೆಡ್‌ಲೈನ್ ಅಂತ್ಯ: ಇಂದೇ ಸಾರಿಗೆ ಮುಷ್ಕರದ ಭವಿಷ್ಯ ನಿರ್ಧಾರ, ಸರ್ಕಾರ ಒಪ್ಪುತ್ತಾ?

ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಘೋಷಿಸಿರುವ ಮುಷ್ಕರದ ಡೆಡ್‌ಲೈನ್ ಇಂದು ಅಂತ್ಯಗೊಳ್ಳಲಿದ್ದು, ಸರ್ಕಾರ ಮತ್ತು ನೌಕರರ ನಡುವಿನ ಸಂಘರ್ಷ ತೀವ್ರ ಹಂತ ತಲುಪಿದೆ.

ಮೇ 18ರಂದು ಕಾರ್ಮಿಕ ಇಲಾಖೆಯ ಜೊತೆ ನಡೆದ ಸಂಧಾನ ಸಭೆ ವಿಫಲವಾದ ಹಿನ್ನೆಲೆಯಲ್ಲಿ, ಇಂದು ಸರ್ಕಾರ ಮತ್ತೊಮ್ಮೆ ಮಾತುಕತೆ ನಡೆಸದಿದ್ದರೆ ರಾತ್ರಿಯಿಂದಲೇ ಸಾರಿಗೆ ಮುಷ್ಕರ ಆರಂಭವಾಗುವ ಸಾಧ್ಯತೆ ಇದೆ.

ಸಂಧಾನ ಸಭೆಯಲ್ಲಿ ಸರ್ಕಾರದ ಮನವೊಲಿಕೆ ಪ್ರಯತ್ನಗಳಿಗೆ ನೌಕರ ಸಂಘಟನೆ ಮುಖಂಡರು ಬಗ್ಗದ ಹಿನ್ನೆಲೆ, ಮುಷ್ಕರ ಅನಿವಾರ್ಯ ಎನ್ನುವ ವಾತಾವರಣ ನಿರ್ಮಾಣವಾಗಿದೆ. ಆದರೆ ನೌಕರರು ಸರ್ಕಾರಕ್ಕೆ ಮತ್ತೊಂದು ಅವಕಾಶ ನೀಡಿದ್ದು, ವೇತನ ಹೆಚ್ಚಳದ ಪ್ರಮಾಣದ ವಿಚಾರದಲ್ಲಿ ಮಾತುಕತೆಗೆ ಸಿದ್ಧವಿದ್ದೇವೆ ಎಂದು ತಿಳಿಸಿದ್ದಾರೆ.

ಆದರೆ ವೇತನ ಹೆಚ್ಚಳ ಜಾರಿಗೆ ಬರುವ ದಿನಾಂಕದಲ್ಲಿ ಯಾವುದೇ ಬದಲಾವಣೆ ಒಪ್ಪುವುದಿಲ್ಲ ಎಂಬ ಷರತ್ತಿನೊಂದಿಗೆ ನೌಕರರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಈ ಪ್ರಸ್ತಾವನೆಗೆ ಸರ್ಕಾರ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇನ್ನೊಂದೆಡೆ ಸರ್ಕಾರದ ಮೂರು ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಇಂದು ನಡೆಯುತ್ತಿದ್ದು, ಮುಖ್ಯಮಂತ್ರಿ ಸೇರಿದಂತೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ನಡುವೆಯೇ ಸಿಎಂ ಸ್ವತಃ ಸಭೆ ನಡೆಸಿ ನೌಕರರ ಮನವೊಲಿಸುತ್ತಾರಾ ಅಥವಾ ಜವಾಬ್ದಾರಿಯನ್ನು ಸಾರಿಗೆ ಸಚಿವರಿಗೇ ವಹಿಸುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.

ಒಂದುವೇಳೆ ಮುಷ್ಕರ ಆರಂಭವಾದರೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ನಿಗಮಗಳು ಪ್ಲ್ಯಾನ್ ಬಿ ಸಿದ್ಧಪಡಿಸಿವೆ. ಟ್ರೈನಿ ಸಿಬ್ಬಂದಿ ಹಾಗೂ ಖಾಸಗಿ ಬಸ್‌ಗಳ ಸಹಾಯದಿಂದ ಸಾರಿಗೆ ಸೇವೆ ಮುಂದುವರಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಸರ್ಕಾರ ಮತ್ತು ನೌಕರರ ನಡುವಿನ ಇಂದಿನ ಬೆಳವಣಿಗೆ ರಾಜ್ಯದ ಲಕ್ಷಾಂತರ ಪ್ರಯಾಣಿಕರ ಗಮನ ಸೆಳೆದಿದ್ದು, ಮಾತುಕತೆ ಯಶಸ್ವಿಯಾಗುತ್ತದೆಯೋ ಅಥವಾ ಮುಷ್ಕರ ಅನಿವಾರ್ಯವಾಗುತ್ತದೆಯೋ ಎಂಬುದನ್ನು ಕಾದುನೋಡಬೇಕಿದೆ.

ನಾಳೆ ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್‌: ಇಂದೇ ಔಷಧಿ ಖರೀದಿಸಿ!

ಬೆಂಗಳೂರು: ರಾಜ್ಯದ ಜನತೆ ಗಮನಿಸಬೇಕಾದ ಮಹತ್ವದ ಬೆಳವಣಿಗೆಯೊಂದರಲ್ಲಿ, ನಾಳೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ.

ಆನ್‌ಲೈನ್ ಮೂಲಕ ನಡೆಯುತ್ತಿರುವ ಔಷಧಿ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘ ದೇಶವ್ಯಾಪಿ ಬಂದ್‌ಗೆ ಕರೆ ನೀಡಿದ್ದು, ಕರ್ನಾಟಕ ಔಷಧಿ ಮಾರಾಟ ವ್ಯಾಪಾರಿಗಳ ಸಂಘವೂ ಇದಕ್ಕೆ ಬೆಂಬಲ ಸೂಚಿಸಿದೆ.

ರಾಜ್ಯದಲ್ಲಿ 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಅಂಗಡಿಗಳು ಮೇ 20ರಂದು ರಾತ್ರಿ 12.01ರಿಂದ 11.59ರವರೆಗೆ ಸಂಪೂರ್ಣ ಬಂದ್ ಆಗಲಿವೆ. ಹೀಗಾಗಿ ಜನರು ಅಗತ್ಯ ಔಷಧಿಗಳನ್ನು ಇಂದೇ ಖರೀದಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

ಬ್ಲಿಂಕಿಟ್, ಸ್ವಿಗ್ಗಿ, ಜೋಮಾಟೋ ಸೇರಿದಂತೆ ವಿವಿಧ ಆಪ್ ಆಧಾರಿತ ಸಂಸ್ಥೆಗಳು ಆನ್‌ಲೈನ್ ಮೂಲಕ ಔಷಧಿಗಳನ್ನು ಮಾರಾಟ ಮಾಡುತ್ತಿರುವುದು ಪರವಾನಗಿ ಪಡೆದ ಮೆಡಿಕಲ್ ಮಾಲೀಕರ ಬದುಕಿಗೆ ದೊಡ್ಡ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ.

ಕೋವಿಡ್ ಅವಧಿಯಲ್ಲಿ ನೀಡಲಾದ ತಾತ್ಕಾಲಿಕ ಅನುಮತಿಯನ್ನು ಕೆಲ ಕಂಪನಿಗಳು ಶಾಶ್ವತ ವ್ಯವಹಾರವನ್ನಾಗಿ ಮಾಡಿಕೊಂಡಿದ್ದು, ನಕಲಿ ಪ್ರಿಸ್ಕ್ರಿಪ್ಷನ್ ಬಳಕೆ, ನಿಯಂತ್ರಣರಹಿತ ಔಷಧಿ ವಿತರಣೆ, ಆಂಟಿಬಯೋಟಿಕ್ ದುರುಪಯೋಗ ಮತ್ತು ನಕಲಿ ಔಷಧಿಗಳ ಅಪಾಯ ಹೆಚ್ಚುತ್ತಿದೆ ಎಂದು ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ.

ಜಿಎಸ್‌ಆರ್ 220(ಇ) ಹಾಗೂ ಜಿಎಸ್‌ಆರ್ 817(ಇ) ಆದೇಶಗಳನ್ನು ಹಿಂಪಡೆಯಬೇಕು, ಅಕ್ರಮ ಇ-ಫಾರ್ಮಸಿ ಸೇವೆಗಳನ್ನು ಬಂದ್ ಮಾಡಬೇಕು ಹಾಗೂ ಸಣ್ಣ ವ್ಯಾಪಾರಿಗಳನ್ನು ರಕ್ಷಿಸಬೇಕು ಎಂಬುದು ವ್ಯಾಪಾರಿಗಳ ಪ್ರಮುಖ ಬೇಡಿಕೆಯಾಗಿದೆ.

ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಮೆಡಿಕಲ್ ಶಾಪ್‌ಗಳು ಬಂದ್ ಆಗುತ್ತಿರುವ ಹಿನ್ನೆಲೆ, ಸಾರ್ವಜನಿಕರ ಮೇಲಿನ ಪರಿಣಾಮ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸುರಿದ ಭಾರೀ ಮಳೆ ಜನಜೀವನ ಅಸ್ತವ್ಯಸ್ತಗೊಳಿಸಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿ ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿದ ಘಟನೆಗಳು ವರದಿಯಾಗಿವೆ.

ಇದೇ ವೇಳೆ ಇಂದು ಕೂಡ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಹಾಗೂ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಇನ್ನು ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಗುಡುಗು, ಮಿಂಚು ಹಾಗೂ ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಿಶೇಷ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

ಇದೇ ವೇಳೆ ರಾಜ್ಯದ ಹಲವೆಡೆ ಉಷ್ಣಾಂಶವೂ ಏರಿಕೆಯಾಗಿದ್ದು, ಕಲಬುರಗಿಯಲ್ಲಿ ಗರಿಷ್ಠ 42.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ 1.6 ರಿಂದ 3 ಡಿಗ್ರಿವರೆಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಭಾರೀ ಮಳೆ ಮತ್ತು ಗಾಳಿಯಿಂದ ಕೆಲವೆಡೆ ವಿದ್ಯುತ್‌ ಸಂಪರ್ಕ ಕಡಿತವಾಗುವ ಹಾಗೂ ರಸ್ತೆಗಳು ಜಲಾವೃತಗೊಂಡು ಟ್ರಾಫಿಕ್‌ ಸಮಸ್ಯೆ ಉಂಟಾಗುವ ಆತಂಕವಿದೆ. ಹೀಗಾಗಿ ಮಳೆ ವೇಳೆ ಮನೆಯೊಳಗೇ ಇರಲು, ಅನಗತ್ಯ ಪ್ರಯಾಣ ತಪ್ಪಿಸಲು ಹಾಗೂ ಮರಗಳ ಕೆಳಗೆ ಆಶ್ರಯ ಪಡೆಯದಂತೆ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.

ವಾಹನ ಸವಾರರಿಗೆ ಬೆಳ್ಳಂಬೆಳಗ್ಗೆ ಶಾಕ್‌: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ!

ನವದೆಹಲಿ: ಇರಾನ್‌ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮತ್ತಷ್ಟು ತೀವ್ರವಾಗುತ್ತಿರುವ ನಡುವೆಯೇ ದೇಶದ ಜನರಿಗೆ ಮತ್ತೆ ಇಂಧನ ದರ ಏರಿಕೆಯ ಶಾಕ್‌ ಎದುರಾಗಿದೆ.

ಮಂಗಳವಾರ ಬೆಳಿಗ್ಗೆ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್‌ ಹಾಗೂ ಡೀಸೆಲ್‌ ದರವನ್ನು ಪ್ರತಿ ಲೀಟರ್‌ಗೆ ಸರಾಸರಿ 90 ಪೈಸೆ ಹೆಚ್ಚಿಸಿವೆ.

ಇದು ಒಂದು ವಾರದೊಳಗೆ ಎರಡನೇ ಬಾರಿ ಇಂಧನ ದರ ಏರಿಕೆಯಾಗಿದೆ. ಕಳೆದ ಮೇ 15ರಂದು ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಏಕಾಏಕಿ 3 ರೂ. ಹೆಚ್ಚಿಸಲಾಗಿತ್ತು. ಇದೀಗ ಕೇವಲ ಕೆಲವೇ ದಿನಗಳ ಅಂತರದಲ್ಲಿ ಮತ್ತೆ ದರ ಏರಿಕೆಯಾಗಿರುವುದು ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಭಾರೀ ಹೊರೆ ತಂದಿದೆ.

ಹಿಂದಿನ ಏರಿಕೆಯ ಬಳಿಕ ದೆಹಲಿಯಲ್ಲಿ ಪೆಟ್ರೋಲ್‌ ದರ ಲೀಟರ್‌ಗೆ 94.77 ರೂ.ನಿಂದ 97.77 ರೂ.ಗೆ ಹಾಗೂ ಡೀಸೆಲ್‌ ದರ 87.67 ರೂ.ನಿಂದ 90.67 ರೂ.ಗೆ ಏರಿಕೆಯಾಗಿತ್ತು. ಇದೀಗ ಮತ್ತೊಮ್ಮೆ ಹೆಚ್ಚಳ ಮಾಡಿರುವುದರಿಂದ ದರಗಳು ಇನ್ನಷ್ಟು ಏರಿಕೆಯಾಗಿವೆ.

ಮಾರುಕಟ್ಟೆ ವಿಶ್ಲೇಷಕರು ಹಾಗೂ ಕೈಗಾರಿಕಾ ಮೂಲಗಳ ಪ್ರಕಾರ, ಜಾಗತಿಕ ರಾಜತಾಂತ್ರಿಕ ಮತ್ತು ಮಿಲಿಟರಿ ಬಿಕ್ಕಟ್ಟಿನ ಪರಿಣಾಮವಾಗಿ ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ತೈಲ ಪೂರೈಕೆಗೆ ಅಡಚಣೆ ಉಂಟಾಗಿದ್ದು, ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್‌ ದಾಟಿದೆ ಎನ್ನಲಾಗಿದೆ.

ಕಚ್ಚಾ ತೈಲದ ದರ ಏರಿಕೆಯಿಂದ ಭಾರತೀಯ ತೈಲ ಸಂಸ್ಕರಣಾ ಕಂಪನಿಗಳಿಗೆ ಭಾರೀ ನಷ್ಟ ಉಂಟಾಗುತ್ತಿದ್ದು, ಅದರ ಹೊರೆ ಗ್ರಾಹಕರ ಮೇಲೆ ಬೀಳುತ್ತಿದೆ. ಕಳೆದ ವಾರದ 3 ರೂ. ಏರಿಕೆಯಿಂದ ತೈಲ ಕಂಪನಿಗಳಿಗೆ ಆಗುತ್ತಿದ್ದ ಶೇ.25ರಷ್ಟು ನಷ್ಟ ತಗ್ಗಿತ್ತು ಎನ್ನಲಾಗಿದ್ದು, ಇದೀಗ ಮತ್ತೆ ದರ ಹೆಚ್ಚಳ ಮಾಡಲಾಗಿದೆ.

ಇಂಧನ ದರದ ನಿರಂತರ ಏರಿಕೆಯಿಂದ ಸಾರಿಗೆ ವೆಚ್ಚ, ಅಗತ್ಯ ವಸ್ತುಗಳ ಬೆಲೆ ಮತ್ತು ದೈನಂದಿನ ಜೀವನ ವೆಚ್ಚಗಳು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.

ಮಳೆರಾಯನ ರೌದ್ರಾವತಾರಕ್ಕೆ ಬಿಚ್ಚಿಬಿದ್ದ ಗದಗ: ಭೀಕರ ಗಾಳಿಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು!

ಗದಗ:- ಗದಗ-ಬೆಟಗೇರಿ ಅವಳಿ ನಗರದಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಗಾಳಿ ಸಹಿತ ಮಳೆ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ.

ಅರ್ಧ ಗಂಟೆಗೂ ಹೆಚ್ಚು ಕಾಲ ಮುಂದುವರಿದ ಮಳೆ ಹಾಗೂ ಭಾರೀ ಗಾಳಿಗೆ ಅನೇಕ ಕಡೆ ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಯಿತು. ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡು ಸಾರ್ವಜನಿಕರು ಕತ್ತಲಲ್ಲೇ ಪರದಾಡುವಂತಾಯಿತು.

ವೀರನಾರಾಯಣ ದೇವಸ್ಥಾನದ ಬಳಿ ಬೃಹತ್ ಮರವೊಂದು ಮನೆ ಮೇಲಕ್ಕೆ ಬಿದ್ದ ಪರಿಣಾಮ ಕೆಲಕಾಲ ಭೀತಿಯ ವಾತಾವರಣ ನಿರ್ಮಾಣವಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮುಳಗುಂದ ನಾಕಾ ಬಳಿ ಗೂಡ್ಸ್ ವಾಹನದ ಮೇಲೆ ಮರ ಬಿದ್ದಿದ್ದು, ವಾಹನ ಜಖಂಗೊಂಡಿದೆ. ಇದರಿಂದ ರಸ್ತೆ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡು ವಾಹನಗಳ ಸರದಿ ನಿರ್ಮಾಣವಾಯಿತು.

ಗದಗ ಡಿಪೋ ಮುಂಭಾಗದಲ್ಲಿಯೂ ಬೃಹತ್ ಮರ ಧರೆಗುರುಳಿದ ಪರಿಣಾಮ ಸಾರಿಗೆ ಬಸ್‌ಗಳು ಡಿಪೋದಿಂದ ಹೊರಬರಲಾಗದ ಸ್ಥಿತಿ ಉಂಟಾಯಿತು. ಬಳಿಕ ಜೆಸಿಬಿ ಹಾಗೂ ಕಟಿಂಗ್ ಯಂತ್ರಗಳ ಸಹಾಯದಿಂದ ಮರ ತೆರವು ಕಾರ್ಯಾಚರಣೆ ನಡೆಸಲಾಯಿತು.

ನೆಲಕ್ಕುರುಳಿದ 100 ವರ್ಷದ ಬೇವಿನ ಮರ:-

ಬೆಟಗೇರಿಯ ಕಬಾಡಿ ರಸ್ತೆಯ ಜೋಡು ಬಸವೇಶ್ವರ ದೇವಸ್ಥಾನದ ಬಳಿ ಸುಮಾರು 100 ವರ್ಷದ ಬೇವಿನ ಮರ ವಿದ್ಯುತ್ ಕಂಬದೊಂದಿಗೆ ಬುಡಸಹಿತ ಉರುಳಿ ಬಿದ್ದಿದೆ. ಇದರಿಂದ ವಿದ್ಯುತ್ ತಂತಿಗಳು ತುಂಡಾಗಿ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಯಿತು. ಎರಡು ಕಾರುಗಳ ಮೇಲೂ ಮರ ಬಿದ್ದಿದ್ದು, ವಾಹನಗಳು ಜಖಂಗೊಂಡಿವೆ.

ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ!

ಎಸ್‌ಎಂ ಕೃಷ್ಣ ನಗರ, ಉಸಿಗಿನಗಟ್ಟಿ ಓಣಿ ಹಾಗೂ ಯಲಿಗಾರ ಪ್ಲಾಟ್ ಭಾಗಗಳಲ್ಲಿ ಭಾರೀ ಗಾಳಿಗೆ ಮನೆಗಳ ಚಾವಣಿಗಳು ಹಾರಿ ಹೋಗಿರುವ ಘಟನೆಗಳು ವರದಿಯಾಗಿವೆ. ನಿವಾಸಿಗಳು ಭೀತಿಯಿಂದ ಮನೆಗಳಿಂದ ಹೊರಬಂದ ದೃಶ್ಯಗಳು ಕಂಡುಬಂದವು.

ರಸ್ತೆ ಮೇಲೆ ತೇಲಿದ ಸಿಂಟ್ಯಾಕ್ಸ್ ಟ್ಯಾಂಕ್:-

ತಿಲಕ್ ಪಾರ್ಕ್ ಬಳಿ ಭಾರೀ ಮಳೆಯಿಂದ ಸಿಂಟ್ಯಾಕ್ಸ್ ನೀರಿನ ಟ್ಯಾಂಕ್ ರಸ್ತೆ ಮೇಲೆ ತೇಲಿದ ದೃಶ್ಯ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿತು.

ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ:-

ಬೆಟಗೇರಿಯಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಭಾರೀ ಸಿಡಿಲಿನ ಶಬ್ದಕ್ಕೆ ಜನರು ಆತಂಕಗೊಂಡರು.

ಒಟ್ಟಾರೆ ಗಾಳಿ-ಮಳೆಯ ಅಬ್ಬರಕ್ಕೆ ಗದಗ-ಬೆಟಗೇರಿ ನಗರ ತತ್ತರಿಸಿದ್ದು, ಅದೃಷ್ಟವಶಾತ್ ಜೀವಹಾನಿ ಸಂಭವಿಸಿಲ್ಲ. ಆದರೆ ಆಸ್ತಿ ಹಾನಿ, ವಿದ್ಯುತ್ ವ್ಯತ್ಯಯ ಹಾಗೂ ಸಂಚಾರ ಅಸ್ತವ್ಯಸ್ತದಿಂದ ಜನರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ.

ಬೆಟ್ಟದ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ 2 ವರ್ಷದ ಗಂಡು ಮಗು ಸಾವು!

ಕೋಲಾರ: ಕೋಲಾರ ಜಿಲ್ಲೆ ಮಾಲೂರು ಪಟ್ಟದ ಗಾಂಧಿ ಸರ್ಕಲ್‌ನಲ್ಲಿ ಇಂದು ದುರಂತ ಸಂಭವಿಸಿದೆ.

ಬೆಟ್ಟದ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ರವಿ ಹಾಗೂ ಮಾಲಾ ದಂಪತಿಯ ಎರಡು ವರ್ಷದ ಗಂಡು ಮಗು ವಿಜಯೇಂದ್ರ ಮೃತಪಟ್ಟಿದ್ದಾನೆ.

ಘಟನೆ ನಡೆದ ದಿನ ಆಟವಾಡುವಾಗ ಮಗು ಬೆಟ್ಟದ ನೆಲ್ಲಿಕಾಯಿ ನುಂಗಿದೆ. ಈ ವೇಳೆ ಅದು ಗಂಟಲಲ್ಲಿ ಸಿಲುಕಿಕೊಂಡಿದೆ. ಪರಿಣಾಮ ಉಸಿರಾಟದ ಸಮಸ್ಯೆ ಉಂಟಾಗಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ದುರದೃಷ್ಟವಶಾತ್ ಗಂಟಲಲ್ಲಿ ಸಿಲುಕಿದ್ದ ನೆಲ್ಲಿಕಾಯಿ ಹೊರ ತೆಗೆಯಲಾಗದೇ ಮಗು ಸಾವನ್ನಪ್ಪಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು,

ಈ ಘಟನೆ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

“ಅಂತರ್‌ಜಿಲ್ಲಾ ಕಳ್ಳರ ಗ್ಯಾಂಗ್‌ಗೆ ಬಿಗ್ ಶಾಕ್!”

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡ ಹಾಗೂ ಹಾವೇರಿ ಜಿಲ್ಲಾ ಪೊಲೀಸರ ಭರ್ಜರಿ ಜಂಟಿ ಕಾರ್ಯಾಚರಣೆಯಲ್ಲಿ ಅಂತರ್‌ರಾಜ್ಯ ಕಳ್ಳರ ಜಾಲವನ್ನು ಭೇದಿಸಿ, ಸುಮಾರು ₹1 ಕೋಟಿ 15 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿ ಆಭರಣಗಳು ಹಾಗೂ ಕಳ್ಳತನದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕಿರೇಸೂರ ಗ್ರಾಮದಲ್ಲಿ ಕಳೆದ ಎಪ್ರಿಲ್ ತಿಂಗಳಲ್ಲಿ ನಡೆದ ಮನೆ ಕಳ್ಳತನ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ ನಡೆದ ಬಂಗಾರದ ಅಂಗಡಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಶಿವರಾಜ ಹನಮಂತಪ್ಪ ಮೋಡಕೇರ ಹಾಗೂ ಅಶೋಕ @ ರಮೇಶ್ ಶಿವಪ್ಪ ಕೊಂಚಿಕೊರವರ (ಅಂಬಾಮಠ, ಶಿಂದನೂರ ತಾಲೂಕು) ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಆರೋಪಿಗಳಿಂದ ೩೧೦ ಗ್ರಾಂ ಬಂಗಾರದ ಆಭರಣಗಳು, ೨೬ ಕೆ.ಜಿ. ಬೆಳ್ಳಿಯ ಆಭರಣಗಳು ಹಾಗೂ ತೆಲಂಗಾಣ ರಾಜ್ಯದಲ್ಲಿ ಕಳವು ಮಾಡಿದ್ದ ಬುಲೆರೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ಹಾಗೂ ಹಾವೇರಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಯಶೋದಾ ವಂಟಗೋಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಧಾರವಾಡ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆ, ಡಿವೈಎಸ್‌ಪಿ ಶಿವಾನಂದ ಕಟಗಿ, ಡಿವೈಎಸ್‌ಪಿ ವಿನೋದ ಮುಕ್ತಧಾರ ನೇತೃತ್ವದಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ಮುರುಗೇಶ ಚನ್ನಣ್ಣವರ, ನವಲಗುಂದ ಸಿಪಿಐ ರವಿ ಕಪ್ಪತ್ತನವರ, ಹಾನಗಲ್ ಸಿಪಿಐ ಬಸವರಾಜ ಹಳಬಣ್ಣವರ, ಪಿಎಸ್‌ಐ ಇಮ್ರಾನ್ ಪಠಾಣ ಸೇರಿದಂತೆ ವಿವಿಧ ಠಾಣೆಗಳ ಸಿಬ್ಬಂದಿ ಚುರುಕಿನ ಕಾರ್ಯಾಚರಣೆ ನಡೆಸಿದರು.

ಒಟ್ಟು ಆರು ಜನ ಆರೋಪಿತರ ತಂಡದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದ ನಾಲ್ವರು ಆರೋಪಿತರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಕರಣವನ್ನು ಸಿನಿಮೀಯ ರೀತಿಯಲ್ಲಿ ಭೇದಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿ ಸೂಕ್ತ ಬಹುಮಾನ ಘೋಷಿಸಲಾಗಿದೆ ಎಂದು ಎಸ್‌ಪಿ ಗುಂಜನ್ ಆರ್ಯ ತಿಳಿಸಿದ್ದಾರೆ.

“ಜಿಲ್ಲೆಗಳ ನಡುವೆ ಸಮನ್ವಯದಿಂದ ಕಾರ್ಯಾಚರಣೆ ನಡೆಸಿದ ಪರಿಣಾಮ ದೊಡ್ಡ ಕಳ್ಳತನ ಜಾಲವನ್ನು ಭೇದಿಸಲು ಸಾಧ್ಯವಾಯಿತು.”

ಗುಂಜನ್ ಆರ್ಯ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

“ಮರುಮೌಲ್ಯಮಾಪನದಲ್ಲಿ ಬದಲಾದ ಭವಿಷ್ಯ!”

ವಿಜಯಸಾಕ್ಷಿ ಸುದ್ದಿ, ಗದಗ: ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನದ ಬಳಿಕ ಗದಗ ಗ್ರಾಮೀಣ ವಲಯದ ಬ್ರೈಟ್ ಹಾರೈಝನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ ಲಮಾಣಿ 625ಕ್ಕೆ 620 ಅಂಕಗಳನ್ನು ಪಡೆದು 99.2 ಶೇಕಡಾ ಫಲಿತಾಂಶದೊಂದಿಗೆ ಗದಗ ಗ್ರಾಮೀಣ ವಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಮರುಮೌಲ್ಯಮಾಪನದ ನಂತರ ಅಂಕಗಳಲ್ಲಿ ಏರಿಕೆಯಾಗಿದ್ದು, ವೈಷ್ಣವಿ ಸಾಧನೆಗೆ ಶಾಲೆಯ ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ವಿದ್ಯಾರ್ಥಿನಿಯ ಶ್ರಮ, ಏಕಾಗ್ರತೆ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಶಾಲೆಯ ಆಡಳಿತ ಮಂಡಳಿ ಸಂತಸ ವ್ಯಕ್ತಪಡಿಸಿದೆ.

ಗದಗ| ಗಂಗಿಮಡಿಯಲ್ಲಿ ಬಿರುಗಾಳಿ ಅವಾಂತರ: 30ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಬೀದಿಪಾಲಾದ ಕುಟುಂಬಗಳು!

ಗದಗ: ಭಾರೀ ಗಾಳಿ ಸಹಿತ ಸುರಿದ ಮಳೆಯಿಂದ ಗದಗ ನಗರದಲ್ಲಿ ಮತ್ತೆ ಅವಾಂತರ ಸೃಷ್ಟಿಯಾಗಿದ್ದು, ನಗರದ ಗಂಗಿಮಡಿ ಬಡಾವಣೆಯಲ್ಲಿ 30ಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿ ಶೀಟುಗಳು ಗಾಳಿಗೆ ಹಾರಿಹೋಗಿ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಬಿರುಗಾಳಿಯ ರಭಸಕ್ಕೆ ಮನೆಗಳ ಮೇಲ್ಛಾವಣಿ ಶೀಟುಗಳು ಒಮ್ಮೆಲೆ ಕಿತ್ತು ಹಾರಿಹೋಗಿದ್ದು, ಮನೆಯೊಳಗಿದ್ದ ಮಹಿಳೆಯರು, ಮಕ್ಕಳು ಹಾಗೂ ವೃದ್ಧರಲ್ಲಿ ಕೆಲಕಾಲ ಭೀತಿ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಸಂದರ್ಭದಲ್ಲಿ ತಾಯಿ, ಗರ್ಭಿಣಿ ಮಗಳು ಹಾಗೂ ಮೊಮ್ಮಕ್ಕಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಸ್ಥಳೀಯರನ್ನು ಆತಂಕಗೊಳಿಸಿದೆ.

ಶೀಟುಗಳು ಹಾರುತ್ತಿದ್ದ ವೇಳೆ ಮನೆಗಳೊಳಗೆ ಕೂಗಾಟ–ಚೀರಾಟ ಕೇಳಿಬಂದಿದ್ದು, ಜನರು ಭಯಭೀತರಾಗಿ ತಕ್ಷಣವೇ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ. ಮಳೆಯ ನೀರು ಮನೆಗಳೊಳಗೆ ನುಗ್ಗಿದ ಪರಿಣಾಮ ದಿನಸಿ ವಸ್ತುಗಳು, ಅಡುಗೆ ಸಾಮಗ್ರಿಗಳು, ಬಟ್ಟೆ ಸೇರಿದಂತೆ ಬಹುತೇಕ ಸಾಮಗ್ರಿಗಳು ನೀರುಪಾಲಾಗಿವೆ. ಹಲವು ಮನೆಗಳಲ್ಲಿ ಅಡುಗೆ ಮಾಡಲೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

30ಕ್ಕೂ ಹೆಚ್ಚು ಕುಟುಂಬಗಳು ರಾತ್ರಿ ಪೂರ್ತಿ ಮನೆಗಳನ್ನು ತೊರೆದು ಹೊರಗೇ ಕಾಲ ಕಳೆಯಬೇಕಾದ ಪರಿಸ್ಥಿತಿ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಚಳಿಯಲ್ಲಿ ಪರದಾಡಿದ್ದಾರೆ.

ಘಟನೆಯ ನಂತರವೂ ಸ್ಥಳಕ್ಕೆ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ಭೇಟಿ ನೀಡದಿರುವುದಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರಸಭೆ ಸದಸ್ಯ ರವಿ ಕಮತರ ವಿರುದ್ಧ ಕಿಡಿಕಾರಿದ ಮಹಿಳೆಯರು, ಚುನಾವಣೆಯ ವೇಳೆ ಮತ ಕೇಳಲು ಬರುತ್ತಾರೆ ಆದರೆ ಸಂಕಷ್ಟದ ಸಂದರ್ಭದಲ್ಲಿ ಯಾರೂ ಕಾಣಿಸಿಕೊಳ್ಳುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ತಕ್ಷಣ ಕಾಳಜಿ ಕೇಂದ್ರ ತೆರೆಯಬೇಕು ಹಾಗೂ ಹಾನಿಗೊಳಗಾದ ಮನೆಗಳಿಗೆ ಪರಿಹಾರ ಮತ್ತು ತುರ್ತು ನೆರವು ಒದಗಿಸಬೇಕು ಎಂದು ಸ್ಥಳೀಯರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಘಟನಾ ಸ್ಥಳಕ್ಕೆ ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!