Home Blog

ಒಗ್ಗಟ್ಟಿನಿಂದ ಐತಿಹಾಸಿಕ ಗೌರಿಗುಡಿ ಅಭಿವೃದ್ಧಿ: ಜೀರ್ಣೋದ್ಧಾರ ಕಾಮಗಾರಿಗೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜದ ಒಗ್ಗಟ್ಟು ಮತ್ತು ಸಹಕಾರದಿಂದ ಮಾತ್ರ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಕೈಗೊಳ್ಳಲು ಸಾಧ್ಯ ಎಂದು ಗಣ್ಯ ಉದ್ಯಮಿ ವಿಜಯಕುಮಾರ ಗಡ್ಡಿ ಹೇಳಿದರು.

ಬೆಟಗೇರಿಯ ಹುಯಿಲಗೋಳ ರಸ್ತೆಯ ಗೌರಿಗುಡಿ ಓಣಿಯಲ್ಲಿರುವ ನೂರಾರು ವರ್ಷಗಳ ಐತಿಹಾಸಿಕ ಹಿನ್ನೆಲೆಯ ಗೌರಿಗುಡಿಯ ಜೀರ್ಣೋದ್ಧಾರ ಕಾಮಗಾರಿಯ ಸ್ಲ್ಯಾಬ್ ಹಾಕುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಟಗೇರಿಯ ವೀರಶೈವ ಸಮಾಜವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಹಿರಿಯರು, ಯುವಕರು ಹಾಗೂ ಸಮಾಜಸೇವಕರನ್ನು ಒಳಗೊಂಡಿದೆ. ರೈತರು, ವ್ಯಾಪಾರಸ್ಥರು, ಉದ್ಯಮಿಗಳು, ಎಪಿಎಂಸಿ ವಹಿವಾಟುದಾರರು, ಶಿಕ್ಷಕರು, ಪತ್ರಕರ್ತರು, ಸರ್ಕಾರಿ ನೌಕರರು ಸೇರಿದಂತೆ ವಿವಿಧ ವೃತ್ತಿಗಳಲ್ಲಿ ಸಮಾಜದವರು ಹೆಸರು ಮಾಡಿದ್ದು, ಸಮಾಜಸೇವೆಯಲ್ಲಿಯೂ ಜನಮನ್ನಣೆ ಗಳಿಸಿದ್ದಾರೆ ಎಂದು ಹೇಳಿದರು.

ಈ ಭಾಗದ ಮಹತ್ವದ ಧಾರ್ಮಿಕ ಕೇಂದ್ರವಾಗಿರುವ ಗೌರಿಗುಡಿಯನ್ನು ಅದರ ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಜೀರ್ಣೋದ್ಧಾರ ಕೈಗೊಂಡಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸಮಾಜದ ಎಲ್ಲರೂ ಒಗ್ಗಟ್ಟಿನಿಂದ ಸಹಕರಿಸಿದರೆ ಇಂತಹ ಅಭಿವೃದ್ಧಿ ಕಾರ್ಯಗಳನ್ನು ಇನ್ನಷ್ಟು ಯಶಸ್ವಿಯಾಗಿ ಕೈಗೊಳ್ಳಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಉದ್ಯಮಿಗಳಾದ ವಿಜಯಕುಮಾರ ಗಡ್ಡಿ, ರವಿ ಪಟ್ಟಣಶೆಟ್ಟಿ ಹಾಗೂ ಮೋಹನ ಮಾಳಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜದ ಹಿರಿಯರಾದ ಪುತ್ರಪ್ಪ ಬೆಂತೂರ, ಬಸವಣ್ಣೆಪ್ಪ ಮಾಳಶೆಟ್ಟಿ, ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಗುಡಿಮನಿ, ಶಿವಪ್ಪ ನಾಗರಾಳ, ಪ್ರಕಾಶ ಮ್ಯಾಗೇರಿ, ಶರಣಪ್ಪ ಅಣ್ಣಿಗೇರಿ, ಶಿವಯ್ಯ ಶಿವಪ್ಪಯ್ಯನಮಠ, ಸಿದ್ದು ಮುಳ್ಳಾಳ, ಬಸವರಾಜ ಕುಂದಗೋಳ, ಸುದೀಪ ಕಣವಿ, ರಾಜು ಗೊಂಡಬಾಳ, ಸುರೇಶ ಬೆಂತೂರ, ಮಹೇಶ ಚಿಕ್ಕನಗೌಡ್ರ, ಶ್ರೀಕಾಂತ ಸೋನೆ, ಶ್ರೀನಿವಾಸ ಬೆಟಗೇರಿ, ಮಂಜುನಾಥ ಬೆಂತೂರ ಹಾಗೂ ಶರಣಪ್ಪ ಆಲೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಮಾಜದ ಅಭಿವೃದ್ಧಿಗೆ ಒಗ್ಗಟ್ಟು ಬಹುದೊಡ್ಡ ಶಕ್ತಿಯಾಗಿದೆ. ಎಲ್ಲರೂ ಒಂದಾಗಿ ಕೈಜೋಡಿಸಿದರೆ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಇನ್ನಷ್ಟು ಪರಿಣಾಮಕಾರಿಯಾಗಿ ಸಾಧ್ಯವಾಗುತ್ತದೆ.

ವಿಜಯಕುಮಾರ ಗಡ್ಡಿ

ಬರ ಘೋಷಣೆಗೆ ರೈತರ ಪಟ್ಟು ; ಹೆದ್ದಾರಿ ತಡೆದು ಪ್ರತಿಭಟನೆ, ಸರ್ಕಾರಕ್ಕೆ 8 ದಿನಗಳ ಗಡುವು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ರೈತರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಸಮಗ್ರ ರೈತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಲಕ್ಷ್ಮೇಶ್ವರದಲ್ಲಿ ಕೈಗಾ–ಇಳಕಲ್ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಏಕಾಏಕಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ ಮಾಗಡಿ ಮಾತನಾಡಿ, ಮುಂಗಾರು ಮಳೆಯ ಕೊರತೆಯಿಂದ ಮೂರು ತಾಲೂಕುಗಳಲ್ಲಿಯೂ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀಜ, ಗೊಬ್ಬರ, ಉಳುಮೆ ಹಾಗೂ ಕೂಲಿಗಾಗಿ ಮಾಡಿದ ವೆಚ್ಚವೂ ಮರಳಿ ಬಾರದಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಅವರು ಖುದ್ದು ಬರ ಪರಿಸ್ಥಿತಿ ಪರಿಶೀಲಿಸಿ ಬರಪೀಡಿತ ತಾಲೂಕುಗಳ ಘೋಷಣೆಗೆ ಭರವಸೆ ನೀಡಿದ್ದರು. ಆದರೆ, ಶಿರಹಟ್ಟಿ ಕ್ಷೇತ್ರದ ಮೂರು ತಾಲೂಕುಗಳನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.

ಪ್ರತಿಭಟನಾಕಾರರು ಮೂರು ತಾಲೂಕುಗಳನ್ನು ಕೂಡಲೇ ಬರಪೀಡಿತ ಎಂದು ಘೋಷಿಸಬೇಕು, ತಾಲೂಕುಗಳಾದ್ಯಂತ ಜಂಟಿ ಬೆಳೆನಷ್ಟ ಸಮೀಕ್ಷೆ ನಡೆಸಬೇಕು ಹಾಗೂ ಪ್ರತಿ ಎಕರೆಗೆ ಕನಿಷ್ಠ ₹50 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ರೈತರ ₹1 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು. ಬೆಳೆ ವಿಮೆ ಹಾಗೂ ಎಸ್‌ಡಿಆರ್‌ಎಫ್ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಹಾಗೂ ಜಾನುವಾರುಗಳಿಗೆ ಮೇವು ಬ್ಯಾಂಕ್ ಆರಂಭಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸದ ದಿನಗಳನ್ನು ಹೆಚ್ಚಿಸಿ, ಕೂಲಿಯನ್ನು ಸಕಾಲದಲ್ಲಿ ಪಾವತಿಸುವ ಮೂಲಕ ಗ್ರಾಮೀಣ ಜನರ ಗುಳೆ ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದೂ ರೈತರು ಒತ್ತಾಯಿಸಿದರು.

ಬಳಿಕ ಗ್ರೇಡ್–2 ತಹಸೀಲ್ದಾರ್ ಮಂಜುನಾಥ ಅಮಾಸಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಹೊನ್ನಪ್ಪ ವಡ್ಡರ, ಐ.ಎಸ್. ಪೂಜಾರ, ಮುತ್ತುರಾಜ ರಾಠೋಡ, ಬಿ.ಟಿ. ಚಂದ್ರಶೇಖರ, ಮಹೇಶ ಹೊಗೆಸೊಪ್ಪಿನ, ನಾಗರಾಜ ಚಿಂಚಲಿ, ಸೋಮಣ್ಣ ಡಾಣಗಲ್, ಚನ್ನಪ್ಪ ಷಣ್ಮುಖಿ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ನೂರಾರು ರೈತರು ಪಾಲ್ಗೊಂಡಿದ್ದರು.

ಸಿಪಿಐ ಬಿ.ವಿ. ನ್ಯಾಮಗೌಡರ ಹಾಗೂ ಪಿಎಸ್‌ಐ ಟಿ.ಕೆ. ರಾಠೋಡ ನೇತೃತ್ವದಲ್ಲಿ ಪೊಲೀಸರು ಸ್ಥಳದಲ್ಲಿ ಪರಿಸ್ಥಿತಿ ನಿಭಾಯಿಸಿದರು.

ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ತಾಲೂಕುಗಳನ್ನು ಎಂಟು ದಿನಗಳೊಳಗೆ ಬರಪೀಡಿತ ಎಂದು ಘೋಷಿಸಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಹಾಕುವುದರ ಜತೆಗೆ ಉಗ್ರ ಹೋರಾಟ ಹಾಗೂ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. 

ಎಂ.ಎಸ್. ದೊಡ್ಡಗೌಡರ, ನ್ಯಾಯವಾದಿ

ಗದಗ ಕ್ರೀಡಾಪಟುಗಳಿಗೆ ಸಿಕ್ಕಿದೆ ಬಲಿಷ್ಠ ವೇದಿಕೆ: ಬಿ.ಬಿ. ಆಸೂಟಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡಾ ಕ್ಷೇತ್ರದಲ್ಲಿ ಗದಗ ಜಿಲ್ಲೆ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ್ದು, ಹಲವು ಪ್ರತಿಭಾವಂತ ಕ್ರೀಡಾಪಟುಗಳನ್ನು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ನೀಡಿದೆ. ಜಿಲ್ಲೆಯ ಯುವ ಕ್ರೀಡಾ ಪ್ರತಿಭೆಗಳಿಗೆ ಮತ್ತಷ್ಟು ಉತ್ತೇಜನ ನೀಡಲು ಅಗತ್ಯವಾದ ಉತ್ತಮ ಮೂಲಸೌಕರ್ಯಗಳು ನಿರ್ಮಾಣಗೊಂಡಿವೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಆಸೂಟಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ನಗರದ ಮಹಾತ್ಮ ಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮೇಜರ್ ಧ್ಯಾನಚಂದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಾಕಿ ದಿಗ್ಗಜ ಮೇಜರ್ ಧ್ಯಾನಚಂದ್ ಅವರ ಸಾಧನೆಯನ್ನು ಸ್ಮರಿಸಿದ ಅವರು, ಗದಗ–ಬೆಟಗೇರಿ ಅವಳಿ ನಗರಕ್ಕೂ ಹಾಕಿ ಕ್ರೀಡೆಗೂ ಐತಿಹಾಸಿಕ ನಂಟಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಬೇಣು ಭಟ್, ರಾಜೀವ್ ಬಾಂಗ್ಲೆ ಹಾಗೂ ಸುನಿಲ್ ಜೋಶಿ ಅವರಂತಹ ಅಪ್ರತಿಮ ಕ್ರೀಡಾಪಟುಗಳನ್ನು ನೀಡಿದ ಹೆಮ್ಮೆ ಗದಗ ಜಿಲ್ಲೆಗಿದೆ ಎಂದರು.

ಗದಗದಲ್ಲಿ ಅತ್ಯಾಧುನಿಕ ಒಳಾಂಗಣ ಕ್ರೀಡಾಂಗಣ ನಿರ್ಮಾಣಗೊಂಡಿದ್ದು, ಬೆಂಗಳೂರನ್ನು ಹೊರತುಪಡಿಸಿದರೆ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಒಳಾಂಗಣ ಕ್ರೀಡಾಂಗಣ ಗದಗದಲ್ಲಿರುವುದು ಜಿಲ್ಲೆಯ ಕ್ರೀಡಾಪಟುಗಳಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.

ಗದಗದ ಯುವಕರು ಹಾಕಿ ಮಾತ್ರವಲ್ಲದೆ ಸೈಕ್ಲಿಂಗ್, ಕುಸ್ತಿ, ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ ಹಾಗೂ ಕರಾಟೆ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಇಂತಹ ಪ್ರತಿಭೆಗಳಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ಮತ್ತು ಅಗತ್ಯ ಮೂಲಸೌಕರ್ಯ ಕಲ್ಪಿಸಿದರೆ ಇನ್ನಷ್ಟು ಕ್ರೀಡಾಪಟುಗಳು ಉನ್ನತ ಮಟ್ಟದಲ್ಲಿ ಹೊರಹೊಮ್ಮಲಿದ್ದಾರೆ ಎಂದು ತಿಳಿಸಿದರು.

ಸರ್ಕಾರ ನಿರ್ಮಿಸಿರುವ ಕ್ರೀಡಾಂಗಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅವುಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಪೋಷಕರು ಮಕ್ಕಳನ್ನು ಕ್ರೀಡಾ ಕ್ಷೇತ್ರದತ್ತ ಪ್ರೋತ್ಸಾಹಿಸುವ ಮೂಲಕ ಅವರ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಾಬರ್ಚಿ ಹಾಕಿ ಪಂದ್ಯಗಳಿಗೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯದಲ್ಲಿಯೇ ಮಾದರಿಯಾಗುವಂತಹ ಮಹತ್ವದ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.

ಕಬಡ್ಡಿ, ಕುಸ್ತಿ, ಹಾಕಿ, ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಅಗತ್ಯವಿರುವ ಸುಸಜ್ಜಿತ ಕ್ರೀಡಾಂಗಣಗಳು ಹಾಗೂ ಮೂಲಸೌಕರ್ಯಗಳನ್ನು ನಿರ್ಮಿಸಲಾಗಿದ್ದು, ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಮತ್ತು ಅಭ್ಯಾಸಕ್ಕೆ ಅನುಕೂಲಕರ ವಾತಾವರಣ ಕಲ್ಪಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೆರಿ, ಎಚ್.ಬಿ. ವೀರಾಪುರ, ವಾಯ್.ಜಿ. ಗಡದ, ಸುರೇಶ್ ಕಟ್ಟಿಮನಿ, ಮಾರುತಿ ಮುಟಗಾರ, ವಸಂತ ಕಲಕಾಂಬಿ, ಡಾ. ಪ್ರವೀಣ ಚಪ್ಪರಮನಿ, ಮಂಜುನಾಥ ಬಾಗಲಕೋಟಿ, ಶಿವರಾಜ ಕೊರಶ್, ವಿಶ್ವಾಸ ಗಂಗಡೆ, ವಾಯ್.ಕೆ. ಚೌಡಾಪುರ, ಲಕ್ಷ್ಮಣ ಬಾಗಲಕೋಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಾಹುಬಲಿ ಜೈನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಗದಗ ಜಿಲ್ಲೆಯಲ್ಲಿ ಕ್ರೀಡಾ ಪ್ರತಿಭೆಗಳಿಗೆ ಯಾವುದೇ ಕೊರತೆಯಿಲ್ಲ. ಸೂಕ್ತ ಅವಕಾಶ, ತರಬೇತಿ ಮತ್ತು ಪ್ರೋತ್ಸಾಹ ದೊರೆತರೆ ಜಿಲ್ಲೆಯ ಇನ್ನಷ್ಟು ಯುವ ಕ್ರೀಡಾಪಟುಗಳು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಗದಗದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿದ್ದಾರೆ.

ಬಿ.ಬಿ. ಆಸೂಟಿ

ಸಿಹಿ ಭೋಜನದೊಂದಿಗೆ ಸರ್ಕಾರಿ ಶಾಲೆಗೆ ಮಕ್ಕಳ ಸೆಳೆತ!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸುವ ವಿನೂತನ ಉದ್ದೇಶದಿಂದ ತಾಲೂಕಿನ ಗೋವನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಶ್ರಾವಣ ಸಿರಿ–ಸಿಹಿ ಭೋಜನ’ ಕಾರ್ಯಕ್ರಮ ಸತತ ಐದು ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿದೆ.

ಶಾಲೆಯ 1ರಿಂದ 8ನೇ ತರಗತಿಯ 86 ವಿದ್ಯಾರ್ಥಿಗಳಿಗೆ ಶ್ರಾವಣ ಮಾಸದುದ್ದಕ್ಕೂ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಿವಿಧ ಬಗೆಯ ಸಿಹಿ ತಿನಿಸುಗಳನ್ನು ನೀಡಲಾಗುತ್ತಿದೆ. ಜಿಲೇಬಿ, ಬೂಂದಿ, ಮೈಸೂರು ಪಾಕ್, ಪಾಯಸ, ಕೇಸರಿಬಾತ್ ಹಾಗೂ ಹೋಳಿಗೆ ಸೇರಿದಂತೆ ಪ್ರತಿದಿನ ವಿಭಿನ್ನ ಸಿಹಿ ತಿನಿಸುಗಳನ್ನು ಮಕ್ಕಳಿಗೆ ಸಿದ್ಧಪಡಿಸಿ ನೀಡುತ್ತಿರುವುದು ವಿಶೇಷವಾಗಿದೆ.

ಗ್ರಾಮಸ್ಥರು, ದಾನಿಗಳು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಎಸ್‌ಡಿಎಂಸಿ ಹಾಗೂ ಶಿಕ್ಷಕರ ಸಹಕಾರದಿಂದ ಶ್ರಾವಣ ಮಾಸದುದ್ದಕ್ಕೂ ಈ ಸಿಹಿಯೂಟ ಕಾರ್ಯಕ್ರಮ ನಡೆಯುತ್ತಿದೆ.

ಸಿಹಿ ಭೋಜನದ ಜತೆಗೆ ಪ್ರತಿಭಾ ಕಾರಂಜಿ, ಕ್ರೀಡಾಕೂಟ ಹಾಗೂ ನಲಿ–ಕಲಿ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಶಾಲೆಯ ಬಗ್ಗೆ ಆಸಕ್ತಿ ಮೂಡಿಸಲಾಗುತ್ತಿದೆ. ಈ ವಿನೂತನ ಪ್ರಯತ್ನದಿಂದ ಸರ್ಕಾರಿ ಶಾಲೆಯತ್ತ ಮಕ್ಕಳ ಸೆಳೆತ ಹೆಚ್ಚಿಸುವ ಉದ್ದೇಶವನ್ನು ಶಾಲೆ ಯಶಸ್ವಿಯಾಗಿ ಮುಂದುವರಿಸಿಕೊಂಡು ಬಂದಿದೆ.

ಜಿಲ್ಲಾ ಉಪನಿರ್ದೇಶಕ ಆರ್.ಎಸ್. ಬುರಡಿ ಶಾಲೆಯ ಈ ವಿಶೇಷ ಕಾರ್ಯಕ್ರಮವನ್ನು ಮೆಚ್ಚಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಸಮುದಾಯದ ಸಹಕಾರ ಪಡೆದು ಇಂತಹ ವಿನೂತನ ಚಟುವಟಿಕೆಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ ಶಿಮೀಕೇರಿ, ಅಕ್ಷರ ದಾಸೋಹ ಸಹ ನಿರ್ದೇಶಕ ಎಚ್.ಎಸ್. ರಾಮನಗೌಡ, ಪ್ರಧಾನ ಗುರು ಎಸ್.ಪಿ. ಕಟ್ಟೆನ್ನವರ ಹಾಗೂ ಶಿಕ್ಷಕ ಬಿ.ಬಿ. ಯತ್ತಿನಹಳ್ಳಿ ಸೇರಿದಂತೆ ಇತರರು ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಬರಪೀಡಿತ ಘೋಷಣೆಗೆ ಆಗ್ರಹಿಸಿ ಬಿಜೆಪಿ ಮನವಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮರ್ಪಕ ಮಳೆಯಿಲ್ಲದೆ ತಾಲೂಕಿನಾದ್ಯಂತ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸಮಗ್ರ ಬರ ಸಮೀಕ್ಷೆ ನಡೆಸಿ ಲಕ್ಷ್ಮೇಶ್ವರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿ ಮುಖಂಡರು ಸರ್ಕಾರವನ್ನು ಆಗ್ರಹಿಸಿದರು.

ಶಿರಹಟ್ಟಿ ಬಿಜೆಪಿ ಮಂಡಲದ ವತಿಯಿಂದ ಗ್ರೇಡ್–2 ತಹಸೀಲ್ದಾರ್ ಮಂಜುನಾಥ ಅಮಾಸಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಲಕ್ಷ್ಮೇಶ್ವರ ತಾಲೂಕಿನ ವಾಸ್ತವ ಬರ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಲಾಯಿತು.

ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಡಿ.ವೈ. ಹುನಗುಂದ ಮಾತನಾಡಿ, ಮಳೆಯ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ನಿರೀಕ್ಷಿತ ಇಳುವರಿ ದೊರೆಯುವ ಸಾಧ್ಯತೆ ಕ್ಷೀಣಿಸಿದೆ. ಕೃಷಿ ಚಟುವಟಿಕೆಗಳಿಗೆ ರೈತರು ಮಾಡಿರುವ ಖರ್ಚು ಕೂಡ ವಾಪಸ್ ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೃಷಿ ಹಾಗೂ ಬೆಳೆನಷ್ಟದಿಂದ ರೈತರಿಗೆ ಕೃಷಿ ಸಾಲ, ಬೆಳೆ ಸಾಲ ಸೇರಿದಂತೆ ವಿವಿಧ ಸಾಲಗಳನ್ನು ಸಕಾಲದಲ್ಲಿ ಮರುಪಾವತಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ತಾಲೂಕಿನ ಬರ ಪರಿಸ್ಥಿತಿಯ ಸಮಗ್ರ ಸಮೀಕ್ಷೆ ನಡೆಸಿ, ಲಕ್ಷ್ಮೇಶ್ವರವನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ತಾಲೂಕಿನ ಬರ ಪರಿಸ್ಥಿತಿಯ ಕುರಿತು ಸಮರ್ಪಕ ಅಧ್ಯಯನ ನಡೆಸಿ ಸರ್ಕಾರಕ್ಕೆ ಮಾಹಿತಿ ನೀಡದಿರುವುದರಿಂದ ಲಕ್ಷ್ಮೇಶ್ವರ ತಾಲೂಕು ಬರಪೀಡಿತ ಪಟ್ಟಿಯಿಂದ ಕೈತಪ್ಪಿದೆ ಎಂದು ಅವರು ಆರೋಪಿಸಿದರು.

ಶಿರಹಟ್ಟಿ ಮಂಡಲ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ ಮಾತನಾಡಿ, ಬರ ಸಂಕಷ್ಟದ ನಡುವೆಯೂ ಕೆಲವು ಬ್ಯಾಂಕ್ ಅಧಿಕಾರಿಗಳು ರೈತರಿಗೆ ಸಾಲದ ಕಂತು ಹಾಗೂ ಬಾಕಿ ಮೊತ್ತ ಪಾವತಿಸುವಂತೆ ಒತ್ತಡ ಹೇರುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಸಂಕಷ್ಟದಲ್ಲಿರುವ ರೈತರ ಮೇಲೆ ಸಾಲ ವಸೂಲಾತಿಯ ಒತ್ತಡ ಹೇರದಂತೆ ಸರ್ಕಾರ ಬ್ಯಾಂಕ್‌ಗಳಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ರೈತ ಮೋರ್ಚಾ ತಾಲೂಕು ಅಧ್ಯಕ್ಷ ಅಜ್ಜಪ್ಪ ಹೂಗಾರ ಮಾತನಾಡಿ, ಬೆಳೆನಷ್ಟದ ಕುರಿತು ಗ್ರಾಮವಾರು ಹಾಗೂ ರೈತವಾರು ಸಮೀಕ್ಷೆ ನಡೆಸಿ ಅರ್ಹ ರೈತರಿಗೆ ಬರ ಪರಿಹಾರ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಬೇಕು. ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ನೀಲಪ್ಪ ಕರ್ಜಕಣ್ಣವರ, ನಿಂಗಪ್ಪ ಬನ್ನಿ, ನವೀನ ಹಿರೇಮಠ, ನಾಗಯ್ಯ ಮಠಪತಿ, ವೀರೇಶ ಸಾಸಲವಾಡ, ಅನಿಲ ಮುಳಗುಂದ ಸೇರಿದಂತೆ ಹಲವರು ಮಾತನಾಡಿದರು.

ಶಿರಹಟ್ಟಿ ಮಂಡಲ ಪ್ರಧಾನ ಕಾರ್ಯದರ್ಶಿ ಗಂಗಾಧರ ಮೆಣಸಿನಕಾಯಿ, ತಾಲೂಕು ಯುವ ಘಟಕ ಅಧ್ಯಕ್ಷ ಬಸವರಾಜ ಚಕ್ರಸಾಲಿ, ಎಂ.ಆರ್. ಪಾಟೀಲ, ನಗರ ಅಧ್ಯಕ್ಷ ವಿಜಯ ಕುಂಬಾರ, ಮಂಜನಗೌಡ ಕೆಂಚನಗೌಡ್ರ, ತುಕ್ಕಪ್ಪ ಪೂಜಾರ, ಪ್ರಕಾಶ ಮಾದನೂರ, ಗಿರೀಶ ಚೌರಡ್ಡಿ, ಜಗದೀಶಗೌಡ ಪಾಟೀಲ, ದುಂಡೇಶ ಕೋಟಗಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಲಕ್ಷ್ಮೇಶ್ವರ ತಾಲೂಕಿನ ವಾಸ್ತವ ಬರ ಪರಿಸ್ಥಿತಿಯ ಸಮಗ್ರ ಸಮೀಕ್ಷೆ ನಡೆಸಿ ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಸಂಕಷ್ಟದಲ್ಲಿರುವ ರೈತರ ಮೇಲೆ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ಬ್ಯಾಂಕ್‌ಗಳಿಗೆ ಸರ್ಕಾರ ಸೂಚನೆ ನೀಡಬೇಕು.

– ಡಿ.ವೈ. ಹುನಗುಂದ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ

ಸೆ.1ರಂದು ಗದಗಕ್ಕೆ ಮುಖ್ಯಮಂತ್ರಿ ಭೇಟಿ

0

ವಿಜಯಸಾಕ್ಷಿ ಸುದ್ದಿ, ಗದಗ: ಸೆಪ್ಟೆಂಬರ್ 1ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಗದಗ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಮಹತ್ವದ ಅವಲೋಕನ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

ಮುಖ್ಯಮಂತ್ರಿಗಳು ಸೆ.1ರಂದು ಹುಬ್ಬಳ್ಳಿಯಿಂದ ಗದಗಕ್ಕೆ ಆಗಮಿಸಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಬರಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲಿದ್ದು, ನಂತರ ಲಕ್ಷ್ಮೇಶ್ವರಕ್ಕೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸದ ಎಲ್ಲ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ತಮ್ಮ ಇಲಾಖೆಗೆ ಸಂಬಂಧಿಸಿದ ಅಗತ್ಯ ಮಾಹಿತಿ ಮತ್ತು ದಾಖಲೆಗಳೊಂದಿಗೆ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ನಿರ್ದೇಶನ ನೀಡಿದರು.

ಬರ ಪರಿಸ್ಥಿತಿ ಅವಲೋಕನ ಸಭೆಗೆ ಸಂಬಂಧಿಸಿದಂತೆ ಕುಡಿಯುವ ನೀರು, ಕೃಷಿ, ಬೆಳೆ ಹಾನಿ, ಬರ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಂಪೂರ್ಣ ಹಾಗೂ ನಿಖರ ಮಾಹಿತಿಯನ್ನು ಸಿದ್ಧಪಡಿಸಿಕೊಳ್ಳಬೇಕು. ಯಾವುದೇ ಇಲಾಖೆಯ ಮಾಹಿತಿಯಲ್ಲಿ ಲೋಪವಾಗದಂತೆ ಅಧಿಕಾರಿಗಳು ಅಗತ್ಯ ದಾಖಲೆಗಳೊಂದಿಗೆ ಸಜ್ಜಾಗಬೇಕು ಎಂದು ಸೂಚಿಸಿದರು.

ಅಲ್ಲದೆ, ಭಾರತ್ ಜೋಡೋ ಯುವ ಸಂಘಗಳು, ಪ್ರಜಾ ಸೇವೆ ಹಾಗೂ ಪ್ರತಿ ಶನಿವಾರ ನಡೆಯುವ ಜನಸ್ಪಂದನ ಸಭೆಗಳಿಗೆ ಸಂಬಂಧಿಸಿದ ಮಾಹಿತಿಯನ್ನೂ ಸಂಬಂಧಿಸಿದ ಅಧಿಕಾರಿಗಳು ಸಿದ್ಧಪಡಿಸಿಕೊಂಡು ಬರಬೇಕು ಎಂದು ತಿಳಿಸಿದರು.

ಶಿಷ್ಟಾಚಾರ, ಸಂಚಾರ ವ್ಯವಸ್ಥೆಗೆ ಆದ್ಯತೆ

ಮುಖ್ಯಮಂತ್ರಿಗಳ ಕಾರ್ಯಕ್ರಮದ ಸಂದರ್ಭದಲ್ಲಿ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಖ್ಯಮಂತ್ರಿಗಳು ಗದಗ ಜಿಲ್ಲೆಯ ಪ್ರವಾಸ ಪೂರ್ಣಗೊಳಿಸಿ ತೆರಳುವವರೆಗೆ ಯಾವುದೇ ರೀತಿಯ ಸಂಚಾರ ವ್ಯತ್ಯಯ ಉಂಟಾಗದಂತೆ ಸಂಬಂಧಿತ ಇಲಾಖೆಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಮುಖ್ಯಮಂತ್ರಿಗಳ ಪ್ರವಾಸದ ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆಗೆ ಪ್ರಮುಖ ಆದ್ಯತೆ ನೀಡಲಾಗುವುದು. ಸಂಚಾರ ವ್ಯವಸ್ಥೆ ಸುಗಮವಾಗಿರುವಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್. ಅವರು ಮುಖ್ಯಮಂತ್ರಿಗಳ ಪ್ರವಾಸದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಡಿಡಿಎಲ್‌ಆರ್ ಜಿ.ಜೆ. ರುದ್ರಣ್ಣಗೌಡ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ್ ಸೋಮನಕಟ್ಟಿ, ಡಿಡಿಪಿಐ ಆರ್.ಎಸ್. ಬುರಡಿ, ಆರ್‌ಟಿಒ ವಿಶಾಲ್, ರಾಜಾರಾಮ ಪವಾರ್, ವಸಂತ ಮಡ್ಲೂರ, ಕೊಟ್ರೇಶ್ ವಿಭೂತಿ, ಶರಣು ಗೊಗೇರಿ, ಡಾ. ಎಚ್.ಬಿ. ಹುಲಗಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳ ಬರ ಪರಿಸ್ಥಿತಿ ಅವಲೋಕನ ಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಂಪೂರ್ಣ ಹಾಗೂ ನಿಖರ ಮಾಹಿತಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಕಡ್ಡಾಯವಾಗಿ ಹಾಜರಾಗಬೇಕು. ಪ್ರವಾಸದ ಎಲ್ಲ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.

ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಗದಗದಲ್ಲಿ ಶೇ.34 ಮಳೆ ಕೊರತೆ: ಬರ ನಿರ್ವಹಣೆಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಮಳೆ ಪ್ರಮಾಣ, ಬರ ಪರಿಸ್ಥಿತಿ, ಬೆಳೆ ಸ್ಥಿತಿ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಸಮಗ್ರ ಮಾಹಿತಿ ಪಡೆದು ಅವರು ಮಾತನಾಡಿದರು.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆ ಕೊರತೆ ಕಂಡುಬಂದಿದ್ದು, ವಿಶೇಷವಾಗಿ ಗಜೇಂದ್ರಗಡ ತಾಲೂಕಿನಲ್ಲಿ ವಾಡಿಕೆಗಿಂತ ಶೇ.45ರಷ್ಟು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ತಾಲೂಕನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ತಿಳಿಸಲಾಯಿತು. ಈ ಹಿನ್ನೆಲೆಯಲ್ಲಿ ಬರ ನಿರ್ವಹಣಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಡಾ. ವೆಂಕಟೇಶ ಸೂಚಿಸಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ನಿರಂತರ ನಿಗಾ ವಹಿಸಬೇಕು. ಯಾವುದೇ ಪ್ರದೇಶದಲ್ಲಿ ನೀರಿನ ಸಮಸ್ಯೆ ಕಂಡುಬಂದ ತಕ್ಷಣ ಪರ್ಯಾಯ ವ್ಯವಸ್ಥೆ ಮೂಲಕ ಸಮರ್ಪಕ ನೀರು ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಸುಮಾರು 37 ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇರುವ ಕುರಿತು ಮಾಹಿತಿ ಪಡೆದ ಅವರು, ಮುಂದಿನ ದಿನಗಳಲ್ಲಿಯೂ ಮೇವಿನ ಕೊರತೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಬರ ನಿರ್ವಹಣಾ ಕಾರ್ಯಗಳಿಗೆ ವಿಬಿಜಿ ರಾಮ್‌ಜಿ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ ಅಗತ್ಯ ಕಾಮಗಾರಿಗಳನ್ನು ಗುರುತಿಸಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಪರಿಶೀಲನೆ ನಡೆಸಲಾಯಿತು. ಶಕ್ತಿ ಯೋಜನೆಯಡಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಹೇಳಿದರು.

ಅಂಗನವಾಡಿ ಕಟ್ಟಡಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆದ ಡಾ. ವೆಂಕಟೇಶ, ಅಗತ್ಯವಿರುವ ಕಟ್ಟಡಗಳನ್ನು ಹೊಸ ಉದ್ಯೋಗ ಖಾತ್ರಿ ಯೋಜನೆಯಡಿ ಅಭಿವೃದ್ಧಿಪಡಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಶಾಲೆಗಳು ಹಾಗೂ ವಿವಿಧ ವಸತಿ ನಿಲಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದ ಅವರು, ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಉತ್ತಮ ಶಿಕ್ಷಣ ದೊರೆಯುವಂತೆ ಸಂಬಂಧಿಸಿದ ಅಧಿಕಾರಿಗಳು ಖಾತರಿಪಡಿಸಬೇಕು ಎಂದರು.

ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹಾರ ಒದಗಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕು ಎಂದು ಅವರು ಸೂಚಿಸಿದರು. ಸ್ಥಳೀಯ ಜನಪ್ರತಿನಿಧಿಗಳನ್ನು ಕಾರ್ಯಕ್ರಮಗಳಿಗೆ ಆಹ್ವಾನಿಸಿ ಸಾರ್ವಜನಿಕರ ಅಹವಾಲುಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಬೇಕು ಎಂದರು.

ಸರ್ಕಾರದ ‘ಪ್ರಜಾಸೇವೆ’ ನೂತನ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಜೂನ್ 1ರಿಂದ ಆಗಸ್ಟ್ 28ರವರೆಗೆ ಗದಗ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.34ರಷ್ಟು ಮಳೆ ಕೊರತೆ ದಾಖಲಾಗಿದೆ. ಈ ಅವಧಿಯಲ್ಲಿ ವಾಡಿಕೆಯಂತೆ 229.3 ಮಿ.ಮೀ. ಮಳೆಯಾಗಬೇಕಾಗಿದ್ದರೆ, ಕೇವಲ 152.2 ಮಿ.ಮೀ. ಮಳೆ ದಾಖಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ತಾಲೂಕುವಾರು ಗಮನಿಸಿದರೆ ಗದಗ ಹಾಗೂ ಗಜೇಂದ್ರಗಡ ತಾಲೂಕುಗಳಲ್ಲಿ ತಲಾ ಶೇ.46ರಷ್ಟು ಮಳೆ ಕೊರತೆ ದಾಖಲಾಗಿದೆ. ರೋಣ ಮತ್ತು ಮುಂಡರಗಿಯಲ್ಲಿ ತಲಾ ಶೇ.39, ಶಿರಹಟ್ಟಿಯಲ್ಲಿ ಶೇ.31 ಹಾಗೂ ಲಕ್ಷ್ಮೇಶ್ವರದಲ್ಲಿ ಶೇ.20ರಷ್ಟು ಮಳೆ ಕೊರತೆಯಾಗಿದೆ. ನರಗುಂದ ತಾಲೂಕಿನಲ್ಲಿ ಮಾತ್ರ ಶೇ.10ರಷ್ಟು ಅಧಿಕ ಮಳೆ ದಾಖಲಾಗಿದೆ.

ಆಗಸ್ಟ್ 1ರಿಂದ 28ರವರೆಗಿನ ಅವಧಿಯಲ್ಲಿಯೂ ಜಿಲ್ಲೆಯಲ್ಲಿ ವಾಡಿಕೆಯ 73.1 ಮಿ.ಮೀ. ಮಳೆಗೆ ಕೇವಲ 44.6 ಮಿ.ಮೀ. ಮಳೆ ದಾಖಲಾಗಿದ್ದು, ಶೇ.39ರಷ್ಟು ಕೊರತೆ ಕಂಡುಬಂದಿದೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನೀಡಿರುವ ಎಲ್ಲ ನಿರ್ದೇಶನಗಳನ್ನು ಅಧಿಕಾರಿಗಳು ಚಾಚೂ ತಪ್ಪದೆ ಪಾಲಿಸಬೇಕು ಎಂದು ಸೂಚಿಸಿದರು. ಜಿಲ್ಲೆಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಗೆ ಸಂಬಂಧಿಸಿದ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಸಾಧಿಸುವಂತೆ ಹಾಗೂ ವಿಶೇಷವಾಗಿ ಕಂದಾಯ ಇಲಾಖೆಯ ಬಾಕಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಡಿಎಸ್‌ಸಿ ಆರ್. ಮುಂಡರಗಿ, ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.

ಬರ ನಿರ್ವಹಣೆಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು. ಪ್ರತಿಯೊಂದು ಪ್ರದೇಶದ ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಗಮನಿಸಿ, ಸಮಸ್ಯೆ ಕಂಡುಬಂದ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು.

ಡಾ. ಎಂ.ವಿ. ವೆಂಕಟೇಶ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

11 ವರ್ಷಗಳ ಅಕ್ಕ–ತಮ್ಮನ ಬಾಂಧವ್ಯಕ್ಕೆ ರಾಖಿಯ ಬೆಸುಗೆ

ವಿಜಯಸಾಕ್ಷಿ ಸುದ್ದಿ, ಗದಗ: ಪ್ರೀತಿ, ವಿಶ್ವಾಸ ಹಾಗೂ ಅಕ್ಕ–ತಮ್ಮನ ಬಾಂಧವ್ಯದ ಪ್ರತೀಕವಾದ ರಕ್ಷಾ ಬಂಧನ ಹಬ್ಬವನ್ನು ಗದಗದ ಹುಯಿಲಗೋಳ ಆಸ್ಪತ್ರೆಯ ವೈದ್ಯರಾದ ಡಾ. ಸಂತೋಷ ಹುಯಿಲಗೋಳ ಹಾಗೂ ಡಾ. ರೂಪಾ ಹುಯಿಲಗೋಳ ಅವರ ಸುಪುತ್ರ ಸಕ್ಷಮ್ ಮತ್ತು ರಾಧಾ ಕಡ್ಲಿಮಟ್ಟಿ ಅವರು ವಿಶೇಷವಾಗಿ ಆಚರಿಸಿದರು.

ರಾಧಾ ಕಡ್ಲಿಮಟ್ಟಿ ಅವರು ಸಕ್ಷಮ್‌ಗೆ ರಾಖಿ ಕಟ್ಟಿ, ಸಿಹಿ ಹಂಚುವ ಮೂಲಕ ರಕ್ಷಾ ಬಂಧನದ ಸಂಭ್ರಮವನ್ನು ಆಚರಿಸಿದರು. ಕಳೆದ 11 ವರ್ಷಗಳಿಂದ ಪ್ರೀತಿಯ ಅಕ್ಕ–ತಮ್ಮನಂತೆ ಬಾಂಧವ್ಯ ಹೊಂದಿರುವ ರಾಧಾ ಮತ್ತು ಸಕ್ಷಮ್ ಅವರು ಪ್ರತಿವರ್ಷವೂ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡು ಬರುತ್ತಿದ್ದಾರೆ.

ರಕ್ತಸಂಬಂಧಕ್ಕಿಂತಲೂ ಮಿಗಿಲಾದ ಪ್ರೀತಿ, ವಿಶ್ವಾಸ ಹಾಗೂ ಆತ್ಮೀಯತೆಯ ಬಂಧಕ್ಕೆ ಈ ರಕ್ಷಾ ಬಂಧನ ಸಾಕ್ಷಿಯಾಗಿದ್ದು, ಅವರ 11 ವರ್ಷಗಳ ಅಕ್ಕ–ತಮ್ಮನ ಬಾಂಧವ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಗದಗ ಜಿಪಂ ಸಿಇಒ ಆಗಿ ಮುಕುಲ್ ಜೈನ್ ವರ್ಗಾವಣೆ..!

0

ಗದಗ: ರಾಜ್ಯ ಸರ್ಕಾರ ಆಡಳಿತಾತ್ಮಕ ಮಟ್ಟದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಬೀದರ್ ನಗರ ಪಾಲಿಕೆ ಆಯುಕ್ತರಾಗಿದ್ದ ಮುಕುಲ್ ಜೈನ್, ಐಎಎಸ್ ಅವರನ್ನು ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.

ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ. ಈ ಆದೇಶದಲ್ಲಿ ಐಎಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳಿಗೆ ವಿವಿಧ ಹುದ್ದೆಗಳಿಗೆ ವರ್ಗಾವಣೆ ಮತ್ತು ನೇಮಕಾತಿ ಮಾಡಲಾಗಿದೆ.

2022ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮುಕುಲ್ ಜೈನ್ ಅವರು ಇದುವರೆಗೆ ಬೀದರ್ ನಗರ ಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಗದಗ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಗದಗ ಜಿಲ್ಲಾ ಪಂಚಾಯತಿಯ ಸಿಇಒ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ನಿರ್ವಹಿಸುತ್ತಿದ್ದ ಸಿ.ಎನ್. ಶ್ರೀಧರ, ಐಎಎಸ್ ಅವರನ್ನು ಈ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ. ನೂತನ ಸಿಇಒ ಆಗಿ ಮುಕುಲ್ ಜೈನ್ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಪಂಚಾಯತಿಗೆ ಪೂರ್ಣಾವಧಿಯ ಆಡಳಿತಾತ್ಮಕ ಸಾರಥಿ ದೊರೆತಂತಾಗಿದೆ.

ಈ ವರ್ಗಾವಣೆ ಆದೇಶದೊಂದಿಗೆ ಗದಗ ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲೂ ಮಹತ್ವದ ಬದಲಾವಣೆಯಾಗಿದ್ದು, ಮುಕುಲ್ ಜೈನ್ ಅವರು ನೂತನ ಜಿಪಂ ಸಿಇಒ ಆಗಿ ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.

ಶಿರಹಟ್ಟಿ ತಾಲೂಕನ್ನು ಬರಪೀಡಿತ ಘೋಷಿಸಿ: ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಪದಾಧಿಕಾರಿಗಳು ಶನಿವಾರ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಅಶೋಕ ಹುಬ್ಬಳ್ಳಿ ಮಾತನಾಡಿ, ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಹಾಗೂ ರೈತ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಸರ್ಕಾರ ಈಗಾಗಲೇ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಆದರೆ ಶಿರಹಟ್ಟಿ ತಾಲೂಕನ್ನು ಈ ಪಟ್ಟಿಯಲ್ಲಿ ಸೇರಿಸದಿರುವುದು ತಾಲೂಕಿನ ರೈತರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ಬರದ ಪರಿಸ್ಥಿತಿ ಇದ್ದರೂ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿರುವುದರಿಂದ ರೈತರಿಗೆ ಸರ್ಕಾರದ ಪರಿಹಾರ ಮತ್ತು ಸೌಲಭ್ಯಗಳಿಂದ ವಂಚಿತರಾಗುವ ಆತಂಕ ಎದುರಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಮತ್ತು ನೆರವು ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಢಾಕಪ್ಪ ಲಮಾಣಿ, ಮಹಮ್ಮದ್ ಅಜರುದ್ದೀನ್ ಹೆಸರೂರ, ಲಿಂಬಣ್ಣ ಲಮಾಣಿ, ಪರಶುರಾಮ ಹುಬ್ಬಳ್ಳಿ, ಪವನ ಹುಬ್ಬಳ್ಳಿ, ರವಿ ಲಮಾಣಿ, ಅವಿನಾಳ ಲಮಾಣಿ ಹಾಗೂ ಸುಭಾಸ ಅಂಬಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.