Home Blog

ತುಂಗಭದ್ರಾ ಡ್ಯಾಂ ಕಾಲುವೆ ನೀರು ಸಂಪೂರ್ಣ ಸ್ಥಗಿತ: ರೈತರಿಗೆ ದೊಡ್ಡ ಸಂಕಷ್ಟ!

ಕೊಪ್ಪಳ: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವುದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಕಡಿಮೆಯಾಗಿರುವುದರಿಂದ ಮುಂಗಾರು ಬೆಳೆಗೆ ನೀರು ಒದಗಿಸಲು ಸಾಧ್ಯವಿಲ್ಲ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರದ ಸೂಚನೆಯ ಮೇರೆಗೆ ಕಾಲುವೆ ನೀರು ಬಂದ್ ಮಾಡಲಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಆತಂಕ ಹೆಚ್ಚಾಗಿದೆ.

ಪ್ರಸ್ತುತ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದ್ದು, ಇದು ಕಳೆದ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಟ್ಟವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 75 ಟಿಎಂಸಿ ನೀರು ಸಂಗ್ರಹವಾಗಿತ್ತು. ಆದರೆ ಈ ಬಾರಿ ಮುಂಗಾರು ಮಳೆಯೇ ತಡವಾಗಿರುವುದರಿಂದ ಜೂನ್ ತಿಂಗಳಲ್ಲಿ ಯಾವುದೇ ಪ್ರಮುಖ ಒಳಹರಿವು ದಾಖಲಾಗಿಲ್ಲ.

ಈ ಹಿನ್ನೆಲೆ ಕೊಪ್ಪಳ, ಬಳ್ಳಾರಿ, ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳ ಲಕ್ಷಾಂತರ ರೈತರಿಗೆ ತೀವ್ರ ಸಂಕಷ್ಟ ಉಂಟಾಗಿದೆ. ಕೃಷಿ ಇಲಾಖೆಯು ಈಗಾಗಲೇ ಜಲಾಶಯದ ನೀರನ್ನೇ ನಂಬಿ ಹೆಚ್ಚಿನ ನೀರು ಬೇಡುವ ಬೆಳೆಗಳನ್ನು ಬಿತ್ತಬಾರದು ಎಂದು ಎಚ್ಚರಿಕೆ ನೀಡಿದೆ.

ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯ ಬಳಿಕ ರೈತರಿಗೆ ಎಚ್ಚರಿಕೆ ನೀಡಿದ್ದು, ಕೇವಲ ಜಲಾಶಯದ ನೀರನ್ನು ನಂಬಿ ಬಿತ್ತನೆ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.

ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ, ಈ ವರ್ಷದ ಜೂನ್ ತಿಂಗಳಲ್ಲಿ ರಾಜ್ಯದಲ್ಲಿ ಶೇಕಡಾ 42ರಷ್ಟು ಮಳೆ ಕೊರತೆ ದಾಖಲಾಗಿದ್ದು, ಇದು ಕಳೆದ ಐದು ದಶಕಗಳಲ್ಲೇ ನಾಲ್ಕನೇ ಅತ್ಯಂತ ಕಡಿಮೆ ಮಳೆಯ ಅವಧಿಯಾಗಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲೂ ಮಳೆ ಕೊರತೆಯಿಂದ ಜಲಾಶಯಗಳ ನೀರಿನ ಮಟ್ಟ ಕುಸಿದಿದೆ.

ಒಟ್ಟಾರೆ, ಮಳೆ ಕೊರತೆ ಮತ್ತು ಜಲಾಶಯ ನೀರಿನ ಇಳಿಕೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಕೃಷಿ ಚಟುವಟಿಕೆಗಳಿಗೆ ಗಂಭೀರ ಭೀತಿ ಎದುರಾಗಿದೆ.

ವಿದ್ಯುತ್ ಖಾಸಗೀಕರಣಕ್ಕೆ ಸರ್ಕಾರ ವಿರೋಧ: ಇಂದಿನ ಸಭೆಯಲ್ಲಿ ತೀರ್ಮಾನ ಎಂದ ಸಿಎಂ ಡಿಕೆಶಿ!

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ಸರ್ಕಾರ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಅಂತಿಮ ತೀರ್ಮಾನವನ್ನು ಶುಕ್ರವಾರ ನಡೆಯುವ ಕೆಇಆರ್‌ಸಿ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಖಾಸಗೀಕರಣಕ್ಕೆ ಸಂಬಂಧಿಸಿ ಟಾಟಾ ಸಂಸ್ಥೆಯವರು ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಎಸ್ಕಾಂಗಳು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಸರ್ಕಾರದ ನಿಲುವು ಸ್ಪಷ್ಟವಾಗಿದ್ದು, ಖಾಸಗೀಕರಣಕ್ಕೆ ಒಪ್ಪದಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಶುಕ್ರವಾರದ ಕೆಇಆರ್‌ಸಿ ಸಭೆಯಲ್ಲಿ ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ಮುಂದುವರಿದು ಮಾತನಾಡಿದ ಸಿಎಂ, ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಲು ‘ಪ್ರಜಾಸೇವೆ ಇಲಾಖೆ’ ಆರಂಭಿಸಲಾಗುತ್ತಿದೆ. ಈ ಇಲಾಖೆಯ ಜವಾಬ್ದಾರಿಯನ್ನು ಒಬ್ಬ ಸಚಿವರಿಗೆ ನೀಡಲಾಗುವುದು. ಪ್ರತಿ ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಿಗೆ ಕನಿಷ್ಠ ಎರಡು ದಿನ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುವುದು ಕಡ್ಡಾಯವಾಗಲಿದೆ. ಎಲ್ಲಾ ಇಲಾಖೆಯ ಅಧಿಕಾರಿಗಳು ಈ ಸಭೆಗಳಲ್ಲಿ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ಜನರ ಅಹವಾಲುಗಳನ್ನು ನೇರವಾಗಿ ಸರ್ಕಾರವೇ ಆಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ. ಒಂದು ದಿನ ಮುಂಚಿತವಾಗಿ ಅರ್ಜಿಗಳನ್ನು ಪರಿಶೀಲಿಸಿ, ಸ್ಥಳೀಯ ಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಸಿಎಂ ಹೇಳಿದರು. ತಾವು ಕೂಡ ಕೆಲ ತಾಲೂಕುಗಳಲ್ಲಿ ಇಂತಹ ಸಭೆಗಳಲ್ಲಿ ಭಾಗವಹಿಸುವುದಾಗಿ ಅವರು ತಿಳಿಸಿದ್ದಾರೆ.

 

ಮಂಡ್ಯದಲ್ಲಿ ಮೆಡಿಸಿನ್ ಕಂಟೇನರ್ ಮೇಲೆ ಗುಂಡಿನ ದಾಳಿ! ಐಷಾರಾಮಿ ಕಾರಿನಲ್ಲಿ ಬಂದಿದ್ದ ಪ್ರಭಾವಿ ವ್ಯಕ್ತಿಯ ಪುತ್ರನಿಂದ ಕೃತ್ಯ?

ಮಂಡ್ಯ: ಬೆಂಗಳೂರಿನಿಂದ ಮೆಡಿಸಿನ್ ತುಂಬಿಕೊಂಡು ಮಂಡ್ಯಕ್ಕೆ ಬರುತ್ತಿದ್ದ ಕಂಟೇನರ್ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು–ಮೈಸೂರು ಹಳೆ ಹೆದ್ದಾರಿಯಲ್ಲಿ ನಿನ್ನೆ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಘಟನೆ ನಡೆದಿದೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ, ಐಷಾರಾಮಿ ಕಾರಿನಲ್ಲಿ ಬಂದಿದ್ದ ಕೆಲವರು ಕಂಟೇನರ್ ಲಾರಿಯನ್ನು ಅಡ್ಡಗಟ್ಟಲು ಯತ್ನಿಸಿದ್ದಾರೆ. ಕಂಟೇನರ್‌ನಲ್ಲಿ ಚಾಲಕ ಮಾತ್ರ ಇದ್ದು, ಮೈಸೂರು ಮೂಲದ ಚಾಲಕ ಶಂಕರ್ ಘಟನೆ ಬಳಿಕ ಭಯಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡದೆ ಮುಂದೆ ಸಾಗಿದ್ದಾನೆ ಎಂದು ಹೇಳಲಾಗಿದೆ.

ಲಾರಿ ನಿಲ್ಲಿಸದ ಹಿನ್ನೆಲೆಯಲ್ಲಿ ಆರೋಪಿತರು ಗುಂಡು ಹಾರಿಸಿದ ಆರೋಪ ಕೇಳಿಬಂದಿದೆ. ಈ ಘಟನೆಯಲ್ಲಿ ಮಂಡ್ಯದ ಪ್ರಭಾವಿ ವ್ಯಕ್ತಿಯ ಪುತ್ರ ಹಾಗೂ ಅವರ ತಂಡ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪವೂ ಹೊರಬಂದಿದೆ.

ಘಟನೆ ಬೆಳಕಿಗೆ ಬಂದ ನಂತರ ಪೊಲೀಸರು ಚಾಲಕ ಶಂಕರ್‌ನನ್ನು ಠಾಣೆಗೆ ಕರೆಸಿ ದೂರು ದಾಖಲಿಸಿಕೊಂಡಿದ್ದಾರೆ. ನಂತರ ಆರೋಪಿತ ವ್ಯಕ್ತಿಯನ್ನು ತಡರಾತ್ರಿ ಠಾಣೆಗೆ ಕರೆಸಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಚಾರಣೆ ನಡೆಸಲಾಗಿದೆ. ವಿಚಾರಣೆ ಮಂಡ್ಯ DYSP ಕಚೇರಿಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.

ಅತೀ ಗಂಭೀರ ವಿಷಯವೆಂದರೆ, ಆರೋಪಿತನ ಬಳಿ ಗನ್ ಲೈಸೆನ್ಸ್ ಇಲ್ಲದಿದ್ದರೂ ಶಸ್ತ್ರಾಸ್ತ್ರ ಬಳಕೆಯಾಗಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆತನಿಗೆ ಗನ್ ಹೇಗೆ ದೊರಕಿತು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನೆ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದು, ಇದು ದರೋಡೆ ಯತ್ನವಾಗಿತ್ತೇ ಅಥವಾ ಬೇರೆ ಕಾರಣವಿದೆಯೇ ಎಂಬುದು ಪರಿಶೀಲನೆಗೆ ಒಳಪಟ್ಟಿದೆ.

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಆದೇಶ ಹೊರಡಿಸಿದ್ದಾರೆ.

ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ತರಗತಿ ನಡೆಸುವುದು ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಹಾಗೂ ಅನಗತ್ಯ ಸಂಚಾರವನ್ನು ತಪ್ಪಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

3 ತಿಂಗಳಿಂದ ಸಂಬಳವಿಲ್ಲ; ಬಂದ್ ಎಚ್ಚರಿಕೆ ನೀಡಿದ ನಮ್ಮ ಕ್ಲಿನಿಕ್ ಸಿಬ್ಬಂದಿ, ಬಡವರ ಉಚಿತ ಆರೋಗ್ಯ ಸೇವೆಗೆ ಎದುರಾಯಿತೇ ಸಂಕಷ್ಟ?

ಬೆಂಗಳೂರು: ಬಡ ಜನರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವ ‘ನಮ್ಮ ಕ್ಲಿನಿಕ್’ ಯೋಜನೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ.

ಬೆಂಗಳೂರಿನಲ್ಲಿರುವ ನಮ್ಮ ಕ್ಲಿನಿಕ್‌ಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ನರ್ಸ್‌ಗಳು ಹಾಗೂ ಲ್ಯಾಬ್ ತಂತ್ರಜ್ಞರಿಗೆ ಕಳೆದ ಮೂರು ತಿಂಗಳಿಂದ ವೇತನ ಸಿಕ್ಕಿಲ್ಲ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ 240ಕ್ಕೂ ಹೆಚ್ಚು ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ 50% ಅನುದಾನ ನೀಡಬೇಕಿದ್ದರೂ, ಅನುದಾನ ಬಿಡುಗಡೆ ವಿಳಂಬವಾಗಿರುವುದರಿಂದ ಸಿಬ್ಬಂದಿಗೆ ಸಂಬಳ ನೀಡಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ.

ವೇತನ ಸಿಗದ ಕಾರಣ ಸಿಬ್ಬಂದಿ ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಈ ತಿಂಗಳ ಅಂತ್ಯದೊಳಗೆ ಬಾಕಿ ವೇತನ ಪಾವತಿಸದಿದ್ದರೆ ಸೇವೆ ಸ್ಥಗಿತಗೊಳಿಸುವುದಾಗಿ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನ ಹಂಚಿಕೆ ಪ್ರಕ್ರಿಯೆಯಲ್ಲಿ ತಾಂತ್ರಿಕ ವಿಳಂಬವಾಗಿರುವುದರಿಂದ ಸಂಬಳ ತಡವಾಗಿದೆ. ಶೀಘ್ರದಲ್ಲೇ ಬಾಕಿ ವೇತನ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಿಬ್ಬಂದಿ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.

ಆದರೆ, ಹಲವು ತಿಂಗಳಿಂದ ಸಂಬಳ ಸಿಗದ ಕಾರಣ ಸಿಬ್ಬಂದಿ ಅಸಮಾಧಾನಗೊಂಡಿದ್ದು, ಶೀಘ್ರದಲ್ಲೇ ವೇತನ ನೀಡದಿದ್ದರೆ ನಮ್ಮ ಕ್ಲಿನಿಕ್ ಸೇವೆಯನ್ನು ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಡವರಿಗೆ ದೊರೆಯುತ್ತಿರುವ ಉಚಿತ ಆರೋಗ್ಯ ಸೇವೆಗೆ ತೊಂದರೆಯಾಗುವ ಸಾಧ್ಯತೆ ಎದುರಾಗಿದೆ.

 

Karnataka Weather: ರಾಜ್ಯದಲ್ಲಿ ಮುಂಗಾರು ಅಬ್ಬರ; 3 ಜಿಲ್ಲೆಗಳಿಗೆ ರೆಡ್ ಅಲರ್ಟ್!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.

ಇದರಿಂದ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 5ರಿಂದ 7ರವರೆಗೆ ರೆಡ್ ಅಲರ್ಟ್ ನೀಡಲಾಗಿದೆ. ಈ ದಿನಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನದಿಗಳು ತುಂಬಿ ಹರಿಯುವುದು, ಪ್ರವಾಹ ಉಂಟಾಗುವುದು, ತಗ್ಗು ಪ್ರದೇಶಗಳು ಜಲಾವೃತವಾಗುವುದು ಹಾಗೂ ಗುಡ್ಡ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಹೋಗಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದಕ್ಕೂ ಮೊದಲು ಜುಲೈ 3 ಮತ್ತು 4ರಂದು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿರುತ್ತದೆ.

ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು.

ರಸ್ತೆಗಳಲ್ಲಿ ನೀರು ನಿಲ್ಲುವುದು, ಮರಗಳು ಬೀಳುವುದು ಮತ್ತು ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಅಗತ್ಯವಿದ್ದರೆ ಮಾತ್ರ ಪ್ರಯಾಣ ಮಾಡುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ಬಿಳಿ ಕೋಟ್‌ಗೆ ಸಮಾಜದ ಗೌರವ

ವಿಜಯಸಾಕ್ಷಿ ಸುದ್ದಿ, ಗದಗ: ಕೋವಿಡ್‌ನಂತಹ ಸಂಕಷ್ಟದ ಸಂದರ್ಭಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಜನರ ಆರೋಗ್ಯ ರಕ್ಷಣೆಗೆ ಶ್ರಮಿಸಿದ ವೈದ್ಯರ ಸೇವೆ ಸಮಾಜಕ್ಕೆ ಅಮೂಲ್ಯ ಕೊಡುಗೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಹೇಳಿದರು.

ನಗರದ ಕೆಎಚ್‌ಪಿಐಎಂಎಸ್ ಉಪನ್ಯಾಸ ಸಭಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಗದಗ ಶಾಖೆ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೈದ್ಯಕೀಯ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಮಾನವೀಯ ಸೇವೆಯ ಪ್ರತೀಕವಾಗಿದೆ. ಸಮಾಜದ ಆರೋಗ್ಯ ಮತ್ತು ಸುರಕ್ಷತೆಯಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಪ್ರತಿಯೊಂದು ಸಂಕಷ್ಟದ ಘಟ್ಟದಲ್ಲೂ ವೈದ್ಯ ಸಮುದಾಯ ನಿಸ್ವಾರ್ಥ ಸೇವೆ ಸಲ್ಲಿಸಿದೆ. ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಐಎಂಎ ಗದಗ ಶಾಖೆ ಕೈಗೊಂಡಿರುವ ಸಾಮಾಜಿಕ ಹಾಗೂ ವೈದ್ಯಕೀಯ ಸೇವಾ ಕಾರ್ಯಗಳು ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐಎಂಎ ಗದಗ ಶಾಖೆಯ ಅಧ್ಯಕ್ಷ ಡಾ. ಶ್ರೀಧರ ವಿ. ಕುರಡಗಿ ಮಾತನಾಡಿ, ವೈದ್ಯಕೀಯ ವೃತ್ತಿಯಲ್ಲಿ ನೈತಿಕ ಮೌಲ್ಯಗಳನ್ನು ಕಾಪಾಡುವ ಜತೆಗೆ ಅನಧಿಕೃತ ವೈದ್ಯಕೀಯ (ಕ್ವಾಕ್ ಪ್ರಾಕ್ಟೀಸ್) ವಿರುದ್ಧ ವೈದ್ಯರು ಸಂಘಟಿತವಾಗಿ ಹೋರಾಡಬೇಕಾದ ಅಗತ್ಯವಿದೆ ಎಂದು ಹೇಳಿದರು.

ಕೆಎಚ್‌ಪಿಐಎಂಎಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ರಾಷ್ಟ್ರೀಯ ವೈದ್ಯರ ದಿನಾಚರಣೆಯ ಮಹತ್ವವನ್ನು ವಿವರಿಸಿ, ಡಾ. ಬಿ.ಸಿ. ರಾಯ್ ಅವರ ಆದರ್ಶ ಸೇವೆ ಪ್ರತಿಯೊಬ್ಬ ವೈದ್ಯರಿಗೂ ಸ್ಫೂರ್ತಿಯಾಗಬೇಕು ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಪ್ರಕಾಶ್ ಎಸ್. ನೀಲಗುಂದ, ಖಾಸಗಿ ಆಸ್ಪತ್ರೆಗಳು ಕೆಪಿಎಂಇ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವನ್ನು ಒತ್ತಿ ಹೇಳಿದರು.

ಈ ಸಂದರ್ಭದಲ್ಲಿ ಐಎಂಎ ಗದಗ ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಾ. ಎಸ್.ಆರ್. ನಾಗನೂರ, ಕಾರ್ಯದರ್ಶಿ ಡಾ. ರಾಹುಲ್ ಶಿರೋಳ, ಖಜಾಂಚಿ ಡಾ. ಜಯರಾಜ ಪಾಟೀಲ, ಐಎಂಎ ಲೇಡೀಸ್ ವಿಂಗ್ ಅಧ್ಯಕ್ಷೆ ಡಾ. ಸುನಿತಾ ಎಸ್. ಕುರಡಗಿ, ಖಜಾಂಚಿ ಡಾ. ಜ್ಯೋತಿ ಪಾಟೀಲ ಸೇರಿದಂತೆ ಜಿಲ್ಲೆಯ ವೈದ್ಯರು ಹಾಗೂ ವೈದ್ಯಕೀಯ ವೃತ್ತಿಪರರು ಉಪಸ್ಥಿತರಿದ್ದರು.

“ವೈದ್ಯಕೀಯ ವೃತ್ತಿ ಕೇವಲ ಉದ್ಯೋಗವಲ್ಲ; ಅದು ಮಾನವೀಯ ಸೇವೆಯ ಪ್ರತೀಕ. ಕೋವಿಡ್‌ನಂತಹ ಸಂಕಷ್ಟದ ಕಾಲದಲ್ಲಿ ವೈದ್ಯರು ಸಲ್ಲಿಸಿದ ನಿಸ್ವಾರ್ಥ ಸೇವೆ ಸಮಾಜ ಎಂದಿಗೂ ಮರೆಯುವುದಿಲ್ಲ.”

ರೋಹನ್ ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ವಚನ ಉಳಿಸಿದ ಮಹಾತ್ಮನಿಗೆ ಶಿವಾನುಭವದ ನಮನ

ವಿಜಯಸಾಕ್ಷಿ ಸುದ್ದಿ, ಗದಗ: ಕಾಲಗರ್ಭದಲ್ಲಿ ಮರೆಯಾಗುತ್ತಿದ್ದ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂಶೋಧಿಸಿ, ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಅಮೂಲ್ಯ ಪರಂಪರೆಯನ್ನು ಉಳಿಸಿಕೊಟ್ಟ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿಯವರ ಸೇವೆ ಅನನ್ಯ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ನಗರದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘ ಆಯೋಜಿಸಿದ್ದ 2804ನೇ ಶಿವಾನುಭವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಕನ್ನಡ ನಾಡು-ನುಡಿಯನ್ನು ಶ್ರೀಮಂತಗೊಳಿಸುವಲ್ಲಿ ವಚನ ಸಾಹಿತ್ಯದ ಪಾತ್ರ ಅಪಾರವಾಗಿದೆ. ಶರಣರ ತತ್ವಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿದ್ದು, ಮಾನವೀಯ ಮೌಲ್ಯಗಳ ನೆಲೆಗಟ್ಟಾಗಿ ಉಳಿದಿವೆ ಎಂದು ಹೇಳಿದರು.

ಮುಖ್ಯ ಉಪನ್ಯಾಸ ನೀಡಿದ ವಿಜಯಪುರದ ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಎಂ.ಎಸ್. ಮದಭಾವಿ, ಹಳಕಟ್ಟಿಯವರು ತಮ್ಮ ವೈಯಕ್ತಿಕ ಸುಖವನ್ನು ತ್ಯಜಿಸಿ ಸಮಾಜಕ್ಕಾಗಿ ಬದುಕಿದ ಮಹನೀಯರು. ವಚನ ಸಾಹಿತ್ಯ ಉಳಿವಿಗಾಗಿ ತಮ್ಮ ಆಸ್ತಿಯನ್ನೇ ಮಾರಿಕೊಂಡು ಜೀವನವನ್ನೇ ಸಮರ್ಪಿಸಿದ ಅವರ ತ್ಯಾಗ ಇತಿಹಾಸದಲ್ಲಿ ಅಜರಾಮರವಾಗಿದೆ ಎಂದು ಹೇಳಿದರು.

ಶಿವಾನುಭವದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಮಾಜಿ ಅಧ್ಯಕ್ಷ ಡಾ. ಜಿ.ಬಿ. ಪಾಟೀಲ ದಂಪತಿಯನ್ನು ಸನ್ಮಾನಿಸಲಾಯಿತು. ಬಳ್ಳಾರಿಯ ಡಾ. ತಿಪ್ಪೇರುದ್ರ ಸಂಡೂರ ಅವರ ‘ಭುವಿಯ ಬೆಳಕು ಬಸವಣ್ಣ’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು. ಉತ್ತರಾಖಂಡದ ಉತ್ತರಕಾಶಿಯ ಟೆರ್ರಾಕೋಟ್ ಶಿಖರವನ್ನು ಆರೋಹಣ ಮಾಡಿದ ಗದಗ ಜಿಲ್ಲೆಯ ಸೃಷ್ಟಿ ಉಮೇಶ ಮೇಟಿ, ಅಶ್ವಿನಿ ತಿರ್ಲಾಪೂರ ಹಾಗೂ ಜಯಲಕ್ಷ್ಮಿ ಸಿ. ಹೊಳೆಯಾಚೆ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ, ಶಿವಾನುಭವ ಸಮಿತಿ ಅಧ್ಯಕ್ಷ ರಮೇಶ ಕಲ್ಲನಗೌಡರ, ಪ್ರಭು ಗಂಜಿಹಾಳ, ಸಿದ್ಧರಾಮ ಪಟ್ಟೇದ, ಪ್ರತಿಭಾ ಬಡ್ನಿ, ವೀರಣ್ಣ ಗೋಟಡಕಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

“ಕನ್ನಡ ನಾಡು-ನುಡಿಗೆ ವಚನ ಸಾಹಿತ್ಯವೇ ಜೀವಾಳ. ಸೌಹಾರ್ದಯುತ, ಸುಂದರ ಸಮಾಜ ನಿರ್ಮಾಣವಾಗಬೇಕಾದರೆ ವಚನಗಳನ್ನು ಕೇವಲ ಓದುವುದಲ್ಲ, ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು.”

ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ಮತದಾರರ ಹಕ್ಕು ಕಾಪಾಡಲು ಗ್ರಾಮದಲ್ಲಿ ಎಸ್‌ಐಆರ್ ಜಾಗೃತಿ

ವಿಜಯಸಾಕ್ಷಿ ಸುದ್ದಿ, ರೋಣ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹಿನ್ನೆಲೆಯಲ್ಲಿ ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಲ್ಲರೂ ಜಾಗೃತಿ ವಹಿಸಬೇಕು ಎಂದು ಗ್ರಾಮದ ಹಿರಿಯ ಶೇಖರಗೌಡ ಪಾಟೀಲ ಹೇಳಿದರು.

ಮಾರನಬಸರಿ ಗ್ರಾಮದಲ್ಲಿ ನಡೆದ ಎಸ್‌ಐಆರ್ ಜಾಗೃತಿ ಜಾಥಾದಲ್ಲಿ ಮಾತನಾಡಿದ ಅವರು, ಈ ಬಾರಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಪರಿಷ್ಕರಣೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಿರುವುದರಿಂದ ಗ್ರಾಮೀಣ ಭಾಗದ ರೈತರು, ಕೂಲಿ ಕಾರ್ಮಿಕರಿಗೆ ಸೂಕ್ತ ಮಾಹಿತಿ ತಲುಪಿಸುವುದು ಅಗತ್ಯವಾಗಿದೆ. ವಿದ್ಯಾವಂತ ಯುವಕರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಈ ಕಾರ್ಯದಲ್ಲಿ ಕೈಜೋಡಿಸಬೇಕು ಎಂದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಅರ್ಜಿ ನಮೂನೆಗಳನ್ನು ವಿತರಿಸುತ್ತಿದ್ದು, ಅವುಗಳನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವಂತೆ ತಿಳಿಸಿದರು.

ಮುಖಂಡ ಅಂದಪ್ಪ ಮರಡಿ ಮಾತನಾಡಿ, ಗ್ರಾಮದಲ್ಲಿರುವ ಪ್ರತಿಯೊಬ್ಬ ಅರ್ಹ ಮತದಾರನಿಗೂ ಎಸ್‌ಐಆರ್ ಕುರಿತು ಮಾಹಿತಿ ತಲುಪಿಸುವ ಕೆಲಸವನ್ನು ಯುವಕರು ಮಾಡಬೇಕು. ಹೊರ ಊರುಗಳಲ್ಲಿ ದುಡಿಯುತ್ತಿರುವ ಕುಟುಂಬಗಳಿಗೂ ಮಾಹಿತಿ ನೀಡಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಖಾದಿರಸಾಬ ಕಳಕಾಪೂರ ಮಾತನಾಡಿ, ಗ್ರಾಮದಲ್ಲಿ ರೈತರು ಹಾಗೂ ಕೂಲಿ ಕಾರ್ಮಿಕರೇ ಹೆಚ್ಚಿರುವುದರಿಂದ ಎಸ್‌ಐಆರ್ ಕುರಿತು ಹೆಚ್ಚಿನ ಜಾಗೃತಿ ಅಗತ್ಯವಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಕಾರ್ಯಕರ್ತರು ಪಕ್ಷಾತೀತವಾಗಿ ಮತದಾರರ ಹಕ್ಕು ರಕ್ಷಣೆಗೆ ಕೈಜೋಡಿಸಬೇಕು ಎಂದು ಹೇಳಿದರು.

ಬಳಿಕ ಬಿಎಲ್‌ಒಗಳು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಅರ್ಜಿ ನಮೂನೆಗಳನ್ನು ವಿತರಿಸಿದರು.

ಬೂತ್‌ನಿಂದಲೇ ಬಿಜೆಪಿಗೆ ಬಲ ತುಂಬಿ: ಪಕ್ಷ ಸಂಘಟನೆಗೆ ಮುತ್ತಣ್ಣ ಕಡಗದ ಕರೆ

ವಿಜಯಸಾಕ್ಷಿ ಸುದ್ದಿ, ರೋಣ: ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಬೂತ್ ಮಟ್ಟದಿಂದಲೇ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಕೆಲಸಕ್ಕೆ ಈಗಿನಿಂದಲೇ ಮುಂದಾಗಬೇಕು ಎಂದು ಬಿಜೆಪಿ ರೋಣ ಮಂಡಲದ ಮಾಜಿ ಅಧ್ಯಕ್ಷ ಮುತ್ತಣ್ಣ ಕಡಗದ ಹೇಳಿದರು.

ಸವಡಿ ಗ್ರಾಮದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮಾಜಿ ಶಾಸಕ ಕಳಕಪ್ಪ ಬಂಡಿಯವರ ಕೊಡುಗೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಹೇಳಿದರು.

ಕಳಕಪ್ಪ ಬಂಡಿಯವರು ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದು, ರಸ್ತೆ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ತಂದು ಸಾಮಾಜಿಕ ಬದ್ಧತೆಯಿಂದ ಕೆಲಸ ಮಾಡಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದು ಕರೆ ನೀಡಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಕಾರ್ಯಕರ್ತರು ಈಗಿನಿಂದಲೇ ಸಂಘಟನೆಗೆ ಒತ್ತು ನೀಡಿ ಗೆಲುವಿನ ಗುರಿಯೊಂದಿಗೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನೂ ಕಾರ್ಯಕರ್ತರು ವಹಿಸಬೇಕು ಎಂದರು.

ಸಭೆಯಲ್ಲಿ ಅಶೋಕ ಪವಾಡಶೆಟ್ಟರ, ಶಂಕ್ರಯ್ಯ ಹಿರೇಮಠ, ಸಿ.ಎಸ್. ಗದಗ, ಕೂಡ್ಲೆಪ್ಪ ದಂಡಿನ, ಮಹ್ಮದ್ ತರಪದಾರ, ಸಚಿನ್ ಪಾಟೀಲ, ಪರಪ್ಪ ಹೊನ್ನಾಪುರ, ಸಂಗಮೇಶ ಬೆಳವಡಿ, ಅಂದಪ್ಪ ಕಡಿಯವರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.