Home Blog

ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ! ಪತ್ನಿಗೆ ನೇಣು ಹಾಕಿ ವಿಡಿಯೋ ಕಾಲ್‌ನಲ್ಲಿ ತೋರಿಸಿದ ಪತಿ

0

ಬಾಗಲಕೋಟೆ: ಪತ್ನಿಗೆ ನೇಣು ಹಾಕಿ ಆಕೆ ಪ್ರಾಣಕ್ಕಾಗಿ ಒದ್ದಾಡುತ್ತಿದ್ದ ದೃಶ್ಯವನ್ನು ಅತ್ತೆ–ಮಾವನಿಗೆ ವಿಡಿಯೋ ಕಾಲ್‌ ಮೂಲಕ ತೋರಿಸಿದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಭಾಗ್ಯಶ್ರೀ ಜಿಗಳೂರು (23) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ಪ್ರವೀಣ್ ಜಿಗಳೂರು ಹತ್ಯೆ ಆರೋಪಿಯಾಗಿದ್ದಾನೆ.

ಪತ್ನಿಯ ಮೇಲೆ ಅನೈತಿಕ ಸಂಬಂಧದ ಅನುಮಾನ ಹೊಂದಿದ್ದ ಪ್ರವೀಣ್, ಆಕೆಯ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿ ಬಳಿಕ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ನೇಣು ಬಿಗಿದ ಬಳಿಕ ಆಕೆ ಒದ್ದಾಡುತ್ತಿದ್ದ ದೃಶ್ಯವನ್ನು ವಿಡಿಯೋ ಕಾಲ್‌ನಲ್ಲಿ ಅತ್ತೆ–ಮಾವನಿಗೆ ತೋರಿಸಿದ್ದಾನೆ. ಅಲ್ಲದೇ ಘಟನೆ ದೃಶ್ಯವನ್ನು ವಿಡಿಯೋ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ವಿಡಿಯೋದಲ್ಲಿ ನೇಣು ಕುಣಿಕೆಯ ಹಿಂಭಾಗದಲ್ಲಿ ಮದುವೆ ಸಂದರ್ಭದಲ್ಲಿ ಬರೆದಿದ್ದ ದಂಪತಿಯ ಹೆಸರುಗಳು ಕೂಡ ಕಾಣಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾಗ್ಯಶ್ರೀ ಹಾಗೂ ಪ್ರವೀಣ್ ನಡುವೆ ಜಗಳವಾಗಿದ್ದ ಹಿನ್ನೆಲೆಯಲ್ಲಿ ಆಕೆ ಎರಡು ತಿಂಗಳ ಹಿಂದೆ ಮಹಾಲಿಂಗಪುರದಲ್ಲಿರುವ ತವರು ಮನೆಗೆ ತೆರಳಿದ್ದಳು. ಬಳಿಕ ಜುಲೈ 27ರಂದು ಚೆನ್ನಾಗಿ ಜೀವನ ನಡೆಸೋಣ ಎಂದು ಹೇಳಿ ಪ್ರವೀಣ್ ಆಕೆಯನ್ನು ಗಲಗಲಿಗೆ ಕರೆತಂದಿದ್ದ. ಅದೇ ದಿನ ಸಂಜೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಘಟನೆ ಮಾಹಿತಿ ತಿಳಿದು ಬೀಳಗಿ ಪೊಲೀಸರು ಹಾಗೂ ಎಸ್‌ಪಿ ಸಿದ್ದಾರ್ಥ್ ಗೋಯೆಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರವೀಣ್‌ನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಬಸ್ ಅಪಘಾತ; 39 ಯಾತ್ರಿಕರಿಗೆ ಗಾಯ!

0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇರ್‌ಬಾಲ್ ಜಿಲ್ಲೆಯ ಕಂಗನ್ ಪ್ರದೇಶದ ಹರಿಗನ್ವಾನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಮರನಾಥ ಯಾತ್ರೆ ಮುಗಿಸಿ ಹಿಂದಿರುಗುತ್ತಿದ್ದ ಬಸ್ ಅಪಘಾತಕ್ಕೀಡಾಗಿ 39 ಯಾತ್ರಿಕರು ಗಾಯಗೊಂಡಿದ್ದಾರೆ.

ಬಾಬಾ ಬರ್ಫಾನಿ ದರ್ಶನ ಪಡೆದು ವಾಪಸ್ ಆಗುತ್ತಿದ್ದ ಯಾತ್ರಿಕರಿದ್ದ ಬಸ್, ಹರಿಗನ್ವಾನ್ ಬಳಿಯ ತೀಕ್ಷ್ಣ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಖಾಲಿ ಮನೆಗೆ ಡಿಕ್ಕಿ ಹೊಡೆದಿದೆ.

ಅಪಘಾತದ ವೇಳೆ ಬಸ್ ಸಿಂಧ್ ನದಿಗೆ ಬೀಳುವ ಅಪಾಯದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ. ಬಸ್ ನದಿಗೆ ಉರುಳಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಮನೆಯೊಳಗೆ ಯಾರೂ ಇಲ್ಲದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ.

ಘಟನೆ ಮಾಹಿತಿ ತಿಳಿದ ತಕ್ಷಣ ಸ್ಥಳೀಯರು, ಜಮ್ಮು-ಕಾಶ್ಮೀರ ಪೊಲೀಸರು, ಐಟಿಬಿಪಿ, ಸಿಆರ್‌ಪಿಎಫ್ ಹಾಗೂ ಭಾರತೀಯ ಸೇನೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಗಾಯಗೊಂಡ ಯಾತ್ರಿಕರನ್ನು ಸಮೀಪದ ಆಸ್ಪತ್ರೆಗಳು ಹಾಗೂ ಶ್ರೀನಗರದ ಸ್ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ಯಾತ್ರಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಗಂಡೇರ್‌ಬಾಲ್ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳೊಂದಿಗೆ ಮಾತನಾಡಿ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಗಾಯಗೊಂಡ ಭಕ್ತರಿಗೆ ಅಗತ್ಯ ನೆರವು ಹಾಗೂ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ವರ್ಷದ ವಾರ್ಷಿಕ ಅಮರನಾಥ ಯಾತ್ರೆ ಜುಲೈ 2ರಂದು ಆರಂಭವಾಗಿದ್ದು, ಇದುವರೆಗೆ 4.15 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಹಿಮಲಿಂಗದ ದರ್ಶನ ಪಡೆದಿದ್ದಾರೆ. 57 ದಿನಗಳ ಕಾಲ ನಡೆಯುವ ಯಾತ್ರೆ ಆಗಸ್ಟ್ 28ರಂದು ಮುಕ್ತಾಯಗೊಳ್ಳಲಿದೆ.

Assam Flood: ಪ್ರವಾಹ ಪರಿಸ್ಥಿತಿ ಸುಧಾರಣೆ, ಆದರೂ ಲಕ್ಷಾಂತರ ಜನರು ಸಂಕಷ್ಟದಲ್ಲಿ!

0

ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಕೊಂಚ ಸುಧಾರಿಸಿದ್ದು, ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ.

ಆದರೂ ರಾಜ್ಯದ 6 ಜಿಲ್ಲೆಗಳ 4.45 ಲಕ್ಷಕ್ಕೂ ಹೆಚ್ಚು ಜನರು ಇನ್ನೂ ಪ್ರವಾಹ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ASDMA ಬಿಡುಗಡೆ ಮಾಡಿರುವ ವರದಿ ಪ್ರಕಾರ, ಶಿವಸಾಗರ್, ಗೋಲಾಘಾಟ್, ಚರೈದಿಯೋ, ಜೋರ್ಹಾಟ್, ನಾಗಾಂವ್ ಹಾಗೂ ಕಾಮರೂಪ್  ಜಿಲ್ಲೆಗಳ ಒಟ್ಟು 4,45,495 ಮಂದಿ ಪ್ರವಾಹದಿಂದ ಬಾಧಿತರಾಗಿದ್ದಾರೆ.

ಗೋಲಾಘಾಟ್ ಜಿಲ್ಲೆಯ ನುಮಾಲಿಗಢದಲ್ಲಿ ಧನಸಿರಿ ನದಿ ಇನ್ನೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಳೆದ ಭಾನುವಾರ ರಾಜ್ಯದ 5 ಜಿಲ್ಲೆಗಳ 5.24 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ.

ಈ ವರ್ಷದ ಅಸ್ಸಾಂ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 68ಕ್ಕೆ ಸ್ಥಿರವಾಗಿದೆ.

ಚರೈದಿಯೋ ಜಿಲ್ಲೆಯಲ್ಲಿ ಹೆಚ್ಚು ಹಾನಿ:

ಪ್ರವಾಹದಿಂದ ಚರೈದಿಯೋ ಜಿಲ್ಲೆ ಅತಿ ಹೆಚ್ಚು ಬಾಧಿತವಾಗಿದ್ದು, ಇಲ್ಲಿ 1,88,404 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಳಿಕ ಶಿವಸಾಗರ್ ಜಿಲ್ಲೆಯಲ್ಲಿ 1,44,461 ಮಂದಿ ಹಾಗೂ ಜೋರ್ಹಾಟ್ ಜಿಲ್ಲೆಯಲ್ಲಿ 74,458 ಮಂದಿ ಪ್ರವಾಹದ ಪರಿಣಾಮ ಎದುರಿಸುತ್ತಿದ್ದಾರೆ.

90 ಪರಿಹಾರ ಶಿಬಿರಗಳಲ್ಲಿ 28 ಸಾವಿರಕ್ಕೂ ಹೆಚ್ಚು ಜನರಿಗೆ ಆಶ್ರಯ:

ಪ್ರಸ್ತುತ ರಾಜ್ಯದಲ್ಲಿ 90 ಪರಿಹಾರ ಶಿಬಿರಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರವಾಹದಿಂದ ಸ್ಥಳಾಂತರಗೊಂಡ 28,695 ಜನರಿಗೆ ಆಶ್ರಯ ಕಲ್ಪಿಸಲಾಗಿದೆ. ಇದರ ಜೊತೆಗೆ 94 ಪರಿಹಾರ ವಿತರಣಾ ಕೇಂದ್ರಗಳ ಮೂಲಕ ಅಗತ್ಯ ವಸ್ತುಗಳನ್ನು ಪೂರೈಸಲಾಗುತ್ತಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಗಳು ಮುಂದುವರಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Karnataka Dam Water Level: ಯಾವ ಜಲಾಶಯದಲ್ಲಿ ಎಷ್ಟು ನೀರು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಮಟ್ಟದಲ್ಲಿ ವಿಭಿನ್ನ ಚಿತ್ರಣ ಕಂಡುಬರುತ್ತಿದೆ.

ಉತ್ತರ ಕರ್ನಾಟಕದ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯ ಹಂತ ತಲುಪಿದ್ದರೆ, ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಸಂಗ್ರಹ ಗಣನೀಯವಾಗಿ ಕಡಿಮೆಯಾಗಿದೆ.

ಆಲಮಟ್ಟಿ ಜಲಾಶಯ ಭರ್ತಿಗೆ ಕೆಲವೇ ಹಂತ ಬಾಕಿ:

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯ ಭರ್ತಿಯ ಹಂತ ತಲುಪಿದೆ.

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ನೀರಿನ ಮಟ್ಟ: 519.30 ಮೀಟರ್
  • ಒಳಹರಿವು: 55,685 ಕ್ಯೂಸೆಕ್
  • ಹೊರಹರಿವು: 21,113 ಕ್ಯೂಸೆಕ್

ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ.

ಬಸವಸಾಗರ ಜಲಾಶಯದಲ್ಲೂ ಹೆಚ್ಚಿದ ನೀರಿನ ಮಟ್ಟ:

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯವೂ ಗರಿಷ್ಠ ಮಟ್ಟದ ಸಮೀಪದಲ್ಲಿದೆ.

  • ಗರಿಷ್ಠ ಮಟ್ಟ: 492.25 ಮೀಟರ್
  • ಇಂದಿನ ಮಟ್ಟ: 492.20 ಮೀಟರ್
  • ಒಳಹರಿವು: 25,000 ಕ್ಯೂಸೆಕ್
  • ಹೊರಹರಿವು: 20,500 ಕ್ಯೂಸೆಕ್

ಒಳಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ನದಿಗೆ ನೀರು ಹರಿಸಲಾಗುತ್ತಿದೆ.

ಹೇಮಾವತಿ ಜಲಾಶಯದಲ್ಲಿ ಕಳೆದ ವರ್ಷಕ್ಕಿಂತ ಭಾರಿ ಕುಸಿತ:

ಹಾಸನ ಜಿಲ್ಲೆಯ ಗೊರೂರು ಸಮೀಪದ ಹೇಮಾವತಿ ಜಲಾಶಯದಲ್ಲಿ ನೀರಿನ ಸಂಗ್ರಹ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆಯಾಗಿದೆ.

  • ಗರಿಷ್ಠ ಸಾಮರ್ಥ್ಯ: 37 ಟಿಎಂಸಿ
  • ಇಂದಿನ ಸಂಗ್ರಹ: 23.753 ಟಿಎಂಸಿ
  • ಒಳಹರಿವು: 6,390 ಕ್ಯೂಸೆಕ್
  • ಕಳೆದ ವರ್ಷ ಇದೇ ದಿನ ಸಂಗ್ರಹ: 35.943 ಟಿಎಂಸಿ

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಒಳಹರಿವು ಪ್ರಮಾಣವೂ ಕಡಿಮೆಯಾಗಿದೆ.

ಕಬಿನಿ ಜಲಾಶಯದಲ್ಲೂ ನೀರಿನ ಕೊರತೆ:

ಮೈಸೂರು ಜಿಲ್ಲೆಯ ಕಬಿನಿ ಜಲಾಶಯದಲ್ಲಿಯೂ ನೀರಿನ ಮಟ್ಟದಲ್ಲಿ ಇಳಿಕೆ ಕಂಡುಬಂದಿದೆ.

  • ಇಂದಿನ ನೀರಿನ ಮಟ್ಟ: 75.28 ಅಡಿ
  • ಕಳೆದ ವರ್ಷ ಇದೇ ದಿನ: 81.97 ಅಡಿ
  • ಇಂದಿನ ಸಂಗ್ರಹ: 14.42 ಟಿಎಂಸಿ
  • ಕಳೆದ ವರ್ಷ ಸಂಗ್ರಹ: 18.22 ಟಿಎಂಸಿ
  • ಒಳಹರಿವು: 3,594 ಕ್ಯೂಸೆಕ್

ಕಳೆದ ವರ್ಷ ಇದೇ ಅವಧಿಯಲ್ಲಿ ಹೆಚ್ಚಿನ ಒಳಹರಿವು ದಾಖಲಾಗಿದ್ದರೆ, ಈ ಬಾರಿ ಪ್ರಮಾಣ ತೀವ್ರವಾಗಿ ಕಡಿಮೆಯಾಗಿದೆ.

ಕೆಆರ್‌ಎಸ್‌ನಲ್ಲಿ ಇನ್ನೂ 100 ಅಡಿ ತಲುಪದ ನೀರಿನ ಮಟ್ಟ

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದಲ್ಲೂ ನೀರಿನ ಮಟ್ಟ ನಿರೀಕ್ಷಿತ ಮಟ್ಟಕ್ಕೆ ಏರಿಕೆಯಾಗಿಲ್ಲ.

  • ಗರಿಷ್ಠ ಮಟ್ಟ: 124.80 ಅಡಿ
  • ಇಂದಿನ ಮಟ್ಟ: 91.80 ಅಡಿ
  • ಸಂಗ್ರಹ: 17.039 ಟಿಎಂಸಿ
  • ಒಳಹರಿವು: 2,552 ಕ್ಯೂಸೆಕ್
  • ಹೊರಹರಿವು: 1,745 ಕ್ಯೂಸೆಕ್

ಒಟ್ಟಾರೆ, ಕೃಷ್ಣಾ ನದಿ ಪಾತ್ರದ ಜಲಾಶಯಗಳಲ್ಲಿ ಉತ್ತಮ ನೀರಿನ ಸ್ಥಿತಿ ಕಂಡುಬರುತ್ತಿದ್ದರೆ, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಹೆಚ್ಚಿಸಲು ಇನ್ನಷ್ಟು ಮಳೆಯ ಅಗತ್ಯವಿದೆ. ರಾಜ್ಯದ ಜಲಾಶಯಗಳ ಸ್ಥಿತಿ ಮಳೆಯ ಪ್ರಮಾಣದ ಮೇಲೆ ಅವಲಂಬಿತವಾಗಿದೆ.

ಸ್ಟಾರ್ ಕ್ರಿಕೆಟರ್ ಜೊತೆ ನಟಿ ಮೃಣಾಲ್ ಠಾಕೂರ್ ಡೇಟಿಂಗ್? ಕೆಫೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಡಿಯೋ ವೈರಲ್

ಮುಂಬೈ: ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಹಾಗೂ ಭಾರತದ ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಒಟ್ಟಿಗೆ ಕಾಣಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇದರ ಬೆನ್ನಲ್ಲೇ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಊಹಾಪೋಹಗಳು ಜೋರಾಗಿವೆ. ಆದರೆ ಈ ಸಂಬಂಧ ಮೃಣಾಲ್ ಅಥವಾ ಯಶಸ್ವಿ ಯಾರೂ ಕೂಡ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ.

ಮುಂಬೈನ ಬಾಂದ್ರಾ ವೆಸ್ಟ್‌ನ ಬುಜೀ ಕ್ಯಾಫೆಯಲ್ಲಿ ಇಬ್ಬರೂ ಕಾಣಿಸಿಕೊಂಡಿರುವ ದೃಶ್ಯಗಳು ವೈರಲ್ ಆಗಿವೆ. ವಿಡಿಯೋದಲ್ಲಿ ಯಶಸ್ವಿ ಮೊದಲು ಕ್ಯಾಫೆಯಿಂದ ಹೊರಬಂದರೆ, ಮೃಣಾಲ್ ನಂತರ ಹೊರಬಂದಿರುವುದು ನೆಟ್ಟಿಗರ ಗಮನ ಸೆಳೆದಿದೆ.

ಈ ಒಂದು ವಿಡಿಯೋ ಆಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಡೇಟಿಂಗ್ ವದಂತಿಗಳು ಹರಿದಾಡುತ್ತಿವೆ. ಕೆಲವರು ಇದು ಹೊಸ ಪ್ರೇಮಕಥೆಯ ಆರಂಭ ಎಂದು ಊಹಿಸುತ್ತಿದ್ದರೆ, ಇನ್ನು ಕೆಲವರು ಜಾಹೀರಾತು ಅಥವಾ ವೃತ್ತಿಪರ ಭೇಟಿಯನ್ನು ಅನಗತ್ಯವಾಗಿ ವೈಯಕ್ತಿಕ ಸಂಬಂಧದೊಂದಿಗೆ ಜೋಡಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇಬ್ಬರ ನಡುವಿನ 11 ವರ್ಷಗಳ ವಯಸ್ಸಿನ ಅಂತರವೂ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಗಮನಾರ್ಹ ಸಂಗತಿಯೆಂದರೆ, ಈ ಹಿಂದೆ ಮೃಣಾಲ್ ಠಾಕೂರ್ ಹೆಸರು ನಟ ಧನುಷ್ ಜೊತೆಗೂ ಕೇಳಿಬಂದಿತ್ತು. ಆದರೆ ಆ ಸುದ್ದಿಗಳಿಗೆ ಯಾವುದೇ ಅಧಿಕೃತ ದೃಢೀಕರಣ ಇರಲಿಲ್ಲ.

ಸದ್ಯ ಯಶಸ್ವಿ ಜೈಸ್ವಾಲ್ ಟೀಂ ಇಂಡಿಯಾದ ಪ್ರಮುಖ ಯುವ ಬ್ಯಾಟರ್ ಆಗಿ ಭರವಸೆ ಮೂಡಿಸುತ್ತಿದ್ದು, ಮೃಣಾಲ್ ಠಾಕೂರ್ ತಮ್ಮ ಮುಂಬರುವ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ, ವೈರಲ್ ವಿಡಿಯೋ ಹೊರತುಪಡಿಸಿ ಇವರಿಬ್ಬರ ಸಂಬಂಧದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

Egg Price Hike: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆಗೆ ಕೊಕ್? ಶಿಕ್ಷಕರಿಗೆ ಹೆಚ್ಚಿದ ಹೊರೆ!

ಬೆಂಗಳೂರು: ಮೊಟ್ಟೆ ದರ ಏರಿಕೆಯ ಪರಿಣಾಮ ಸರ್ಕಾರಿ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಮೇಲೂ ಪರಿಣಾಮ ಬೀರಿದೆ.

ಹೆಚ್ಚುವರಿ ಹಣ ಹೊಂದಿಸಲಾಗದೆ ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲು ಶಿಕ್ಷಕರು ಪರದಾಡುವಂತಾಗಿದೆ.

ಮಾರುಕಟ್ಟೆಯಲ್ಲಿ ಮೊಟ್ಟೆ ದರ ಪ್ರತಿ ಮೊಟ್ಟೆಗೆ 2ರಿಂದ 3 ರೂ.ವರೆಗೆ ಏರಿಕೆಯಾಗಿದೆ. ಆದರೆ ಮೊಟ್ಟೆ ಖರೀದಿಗೆ ಸರ್ಕಾರ ನೀಡುತ್ತಿರುವ ಅನುದಾನ ಹೆಚ್ಚಳವಾಗಿಲ್ಲ. ಈ ಹಿನ್ನೆಲೆಯಲ್ಲಿ ಶಾಲಾ ಹಂತದಲ್ಲಿ ಹಣಕಾಸಿನ ಕೊರತೆ ಎದುರಾಗಿದ್ದು, ಶಿಕ್ಷಕರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ರಾಜ್ಯದಲ್ಲಿ 1ರಿಂದ 10ನೇ ತರಗತಿಯ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ ನೀಡಲಾಗುತ್ತಿದೆ. ಸುಮಾರು 55 ಲಕ್ಷ ಮಕ್ಕಳಿಗೆ ಶಿಕ್ಷಣ ಇಲಾಖೆ ಮೂಲಕ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಶಾಲಾ ಹಂತದಲ್ಲಿ ಪ್ರತಿ ಮೊಟ್ಟೆ ಖರೀದಿಗೆ ₹6 ಅನುದಾನ ನೀಡಲಾಗುತ್ತಿದೆ.

ಆದರೆ ಪ್ರಸ್ತುತ ಮಾರುಕಟ್ಟೆಯಲ್ಲಿ ಮೊಟ್ಟೆಯ ಬೆಲೆ ₹8ರಿಂದ ₹9ಕ್ಕೆ ಏರಿಕೆಯಾಗಿದೆ. ಹೆಚ್ಚುವರಿ ವೆಚ್ಚವನ್ನು ಭರಿಸಲು ಸರ್ಕಾರದಿಂದ ಯಾವುದೇ ಹೆಚ್ಚುವರಿ ಅನುದಾನ ಲಭ್ಯವಾಗಿಲ್ಲ. ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದರೂ ಸರ್ಕಾರದಿಂದ ಇನ್ನೂ ಅನುಮೋದನೆ ಸಿಕ್ಕಿಲ್ಲ ಎನ್ನಲಾಗಿದೆ.

ಮೊಟ್ಟೆ ಖರೀದಿಗೆ ಹಣದ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೆಲವು ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ಬದಲಾಗಿ ಬಾಳೆಹಣ್ಣು ನೀಡಲಾಗುತ್ತಿದೆ. ಮೊಟ್ಟೆ ದರ ಏರಿಕೆಗೆ ಅನುಗುಣವಾಗಿ ಅನುದಾನ ಹೆಚ್ಚಿಸುವಂತೆ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಗಳು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ 6 ಗಂಟೆ ಇರಲ್ಲ ಕರೆಂಟ್, ನಿಮ್ಮ ಏರಿಯಾ ಪಟ್ಟಿಯಲ್ಲಿದೆಯಾ ನೋಡಿ!

ಬೆಂಗಳೂರು: ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಜುಲೈ 29ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಸುಮಾರು ಆರು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರಮುಖ ಪ್ರದೇಶಗಳು:

  • ನಾರ್ತ್ ಗೇಟ್ 1, 2, 3
  • ರಾಯಭಾರ ಕಚೇರಿ ಹಾಗೂ ಫಿಲಿಪ್ಸ್ ಕಂಪನಿ ಸುತ್ತಮುತ್ತಲಿನ ಪ್ರದೇಶಗಳು
  • ದ್ವಾರಕಾನಗರ, ಬಾಬಾನಗರ ಹಾಗೂ ಕಟ್ಟಿಗೇನಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು
  • ಬಾಗಲೂರು ಕ್ರಾಸ್, ಬಾಗಲೂರು ಮುಖ್ಯ ರಸ್ತೆ ಹಾಗೂ ವಿನಾಯಕನಗರ
  • ಮಣಿಪಾಲ ಕಾಲೇಜು, ಬಿಎಸ್‌ಎಫ್ ಕ್ಯಾಂಪ್ ಮತ್ತು ಪಿಡಿಎಂಎಸ್ ಪ್ರದೇಶಗಳು

ವಿದ್ಯುತ್ ವ್ಯತ್ಯಯದಿಂದ ಸಾರ್ವಜನಿಕರು ಹಾಗೂ ಉದ್ಯಮಗಳಿಗೆ ಉಂಟಾಗುವ ಅನಾನುಕೂಲತೆಗಾಗಿ ಬೆಸ್ಕಾಂ ವಿಷಾದ ವ್ಯಕ್ತಪಡಿಸಿದೆ. ಸಾರ್ವಜನಿಕರು ಮುಂಚಿತವಾಗಿ ಅಗತ್ಯ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳುವಂತೆ ಹಾಗೂ ಕಾಮಗಾರಿ ಅವಧಿಯಲ್ಲಿ ಸಹಕರಿಸುವಂತೆ ಮನವಿ ಮಾಡಿದೆ.

ಪ್ರಯಾಣಿಕರೇ ಗಮನಿಸಿ: ಪೀಣ್ಯ ಮೇಲ್ಸೇತುವೆಯಲ್ಲಿ ರಾತ್ರಿ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ಇಲ್ಲಿದೆ!

ಬೆಂಗಳೂರು: ತುಮಕೂರು ರಸ್ತೆ ಮೂಲಕ ಸಂಚರಿಸುವ ವಾಹನ ಸವಾರರಿಗೆ ಬೆಂಗಳೂರು ಸಂಚಾರ ಪೊಲೀಸರು ಮಹತ್ವದ ಮಾಹಿತಿ ನೀಡಿದ್ದಾರೆ.

ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನಲ್ಲಿ ಡಾಂಬರೀಕರಣ ಹಾಗೂ ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ–4ರ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆಯ ಮೇಲೆ ಜುಲೈ 27ರಿಂದ ಆಗಸ್ಟ್‌ 5ರವರೆಗೆ ಸಂಚಾರ ನಿರ್ಬಂಧ ಜಾರಿಯಲ್ಲಿರಲಿದೆ. ಸಾಮಾನ್ಯ ದಿನಗಳಲ್ಲಿ (ಸೋಮವಾರದಿಂದ ಶುಕ್ರವಾರದವರೆಗೆ) ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಹಾಗೂ ಶನಿವಾರ ಮತ್ತು ಭಾನುವಾರ ರಾತ್ರಿ 12 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಾಹನ ಸಂಚಾರ ಬಂದ್ ಮಾಡಲಾಗುತ್ತದೆ.

ಈ ನಿರ್ಬಂಧವು ನೆಲಮಂಗಲ ಅಥವಾ ತುಮಕೂರು ಕಡೆಯಿಂದ ಬೆಂಗಳೂರು ನಗರಕ್ಕೆ ಬರುವ ವಾಹನಗಳಿಗೆ ಮಾತ್ರ ಅನ್ವಯವಾಗಲಿದೆ. ಬೆಂಗಳೂರಿನಿಂದ ಹೊರಹೋಗುವ ವಾಹನಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪರ್ಯಾಯ ಮಾರ್ಗ:

ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಕೆನ್ನಮೆಟಲ್ ಫ್ಯಾಕ್ಟರಿ ಬಳಿ ಫ್ಲೈಓವರ್ ಕೆಳಭಾಗದ ರಾಷ್ಟ್ರೀಯ ಹೆದ್ದಾರಿ–4 ಹಾಗೂ ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ ತಲುಪಬೇಕು. ಬಳಿಕ ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್‌ಆರ್‌ಎಸ್ ಜಂಕ್ಷನ್ ಹಾಗೂ ಗೊರಗುಂಟೆಪಾಳ್ಯ ಮಾರ್ಗವಾಗಿ ಸಂಚರಿಸಬಹುದು ಎಂದು ಸೂಚಿಸಲಾಗಿದೆ.

ಪೀಣ್ಯ ಮೇಲ್ಸೇತುವೆ ಬೆಂಗಳೂರು–ತುಮಕೂರು ರಸ್ತೆಯ ಪ್ರಮುಖ ಸಂಪರ್ಕ ಮಾರ್ಗವಾಗಿರುವುದರಿಂದ ಕಾಮಗಾರಿ ನಡೆಯುವ ಸಮಯದಲ್ಲಿ ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಹಾಗೂ ಅಗತ್ಯವಿದ್ದರೆ ಈ ಸಮಯದಲ್ಲಿ ಪ್ರಯಾಣ ತಪ್ಪಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

2 ದಿನದ ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿ ಬಿಟ್ಟು ತಾಯಿ ನಾಪತ್ತೆ; ಪೊಲೀಸರಿಂದ ತೀವ್ರ ಹುಡುಕಾಟ!

ಚಿಕ್ಕಬಳ್ಳಾಪುರ: ಕೇವಲ ಎರಡು ದಿನಗಳ ಹಿಂದೆ ಜನಿಸಿದ್ದ ನವಜಾತ ಗಂಡು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ತಾಯಿ ನಾಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ.

ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಜುಲೈ 24ರಂದು ಹೆರಿಗೆಗೆ ದಾಖಲಾಗಿದ್ದ ಯುವತಿಗೆ ಗಂಡು ಮಗು ಜನಿಸಿತ್ತು. ಮಗುವಿಗೆ ಕಡಿಮೆ ತೂಕ ಹಾಗೂ ಉಸಿರಾಟದ ತೊಂದರೆ ಇದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ತಾಯಿ ಹಾಗೂ ಕೇರ್‌ಟೇಕರ್ ನರ್ಸ್ ಜೊತೆ ಅಂಬುಲೆನ್ಸ್ ಮೂಲಕ ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು.

ಚಿಕ್ಕಬಳ್ಳಾಪುರ ಆಸ್ಪತ್ರೆಗೆ ಬಂದ ಬಳಿಕ ಮಗುವಿನ ಚಿಕಿತ್ಸೆಗೆ ಹಣ ತರುತ್ತೇನೆ ಎಂದು ಹೇಳಿ ಹೊರಹೋದ ತಾಯಿ ಮತ್ತೆ ವಾಪಸ್ ಬಂದಿಲ್ಲ ಎಂದು ತಿಳಿದುಬಂದಿದೆ. ತಾಯಿ ಇಲ್ಲದೆ ಮಗು ಆಸ್ಪತ್ರೆಯ ಎನ್‌ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಮಗುವಿನ ಪೋಷಕರ ಬಗ್ಗೆ ವಿಚಾರಿಸಿದಾಗ ಕೇರ್‌ಟೇಕರ್ ನರ್ಸ್ ಈ ಮಾಹಿತಿ ನೀಡಿದ್ದಾರೆ.

ಇದರಿಂದ ಅನುಮಾನಗೊಂಡ ಆಸ್ಪತ್ರೆ ಆಡಳಿತ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದೆ. ಮಾಹಿತಿ ಪಡೆದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದೇ ವೇಳೆ ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಯುವತಿ ಆಸ್ಪತ್ರೆಯಲ್ಲಿ ನೀಡಿದ್ದ ಆಧಾರ್‌ ಕಾರ್ಡ್‌ನಲ್ಲಿ ಹಾವೇರಿ ಜಿಲ್ಲೆಯ ವಿಳಾಸ ಪತ್ತೆಯಾಗಿದ್ದು, ಅದರ ಆಧಾರದಲ್ಲಿ ಆಕೆಯ ಪತ್ತೆ ಕಾರ್ಯ ಮುಂದುವರಿದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಯುವತಿಗೆ ವಿವಾಹವಾಗಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಿರುವ ಸಾಧ್ಯತೆ ಕುರಿತು ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮಗುವಿನ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ನಿನ್ನ ರೇಟ್ ಎಷ್ಟು, 10 ಸಾವಿರಕ್ಕೆ ಬರ್ತಿಯಾ?; ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ!

ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ ಎಂದು ಆರೋಪಿಸಲಾಗಿದೆ.

ಸ್ಕೂಟಿಯಲ್ಲಿ ಬಂದ ವ್ಯಕ್ತಿಯೊಬ್ಬ ಯುವತಿಯ ಬಳಿ ತೆರಳಿ, “ನಿನ್ನ ರೇಟ್ ಎಷ್ಟು? ₹10 ಸಾವಿರ ಕೊಡುತ್ತೇನೆ, ಬರುತ್ತೀಯಾ?” ಎಂದು ಕೇಳಿದ್ದಾನೆ ಎನ್ನಲಾಗಿದೆ. ಇದಕ್ಕೆ ಯುವತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಪೊಲೀಸರಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದಾಗ, ಆತ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯ ಸಂಪೂರ್ಣ ದೃಶ್ಯವನ್ನು ಯುವತಿ ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.