Home Blog

ಮೆಣಸಿನಕಾಯಿ ದರ ಕುಸಿತ; ಕಟಾವು ಮಾಡದೇ ಗಿಡದಲ್ಲೇ ಬೆಳೆ ಬಿಟ್ಟ ರೈತರು!

ಧಾರವಾಡ: ಜಿಲ್ಲೆಯಲ್ಲಿ ಈ ಬಾರಿ ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮಳೆ ಕೈಕೊಟ್ಟರೂ ಬೋರ್‌ವೆಲ್‌, ಕೃಷಿ ಹೊಂಡ ಹಾಗೂ ತುಂತುರು ಹನಿ ನೀರಾವರಿ ಮೂಲಕ ಬೆಳೆಗಳನ್ನು ಉಳಿಸಿಕೊಂಡಿದ್ದ ರೈತರಿಗೆ ಇದೀಗ ಮಾರುಕಟ್ಟೆ ದರ ಕುಸಿತ ಮತ್ತೊಂದು ಆಘಾತ ನೀಡಿದೆ. ಉತ್ತಮವಾಗಿ ಬೆಳೆದ ಮೆಣಸಿನಕಾಯಿಗೆ ನಿರೀಕ್ಷಿತ ಬೆಲೆ ಸಿಗದ ಹಿನ್ನೆಲೆಯಲ್ಲಿ ಹಲವು ರೈತರು ಕಾಯಿ ಕಟಾವು ಮಾಡದೇ ಗಿಡದಲ್ಲೇ ಬಿಟ್ಟಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಸೇರಿದಂತೆ ಹಲವು ತಾಲೂಕುಗಳಲ್ಲಿ ಮೆಣಸಿನಕಾಯಿ ಪ್ರಮುಖ ಬೆಳೆಯಾಗಿದೆ. ಈ ಬಾರಿಯೂ ರೈತರು ಉತ್ತಮ ತಳಿಯ ಸಸಿಗಳನ್ನು ದುಬಾರಿ ಬೆಲೆಗೆ ಖರೀದಿಸಿ ನಾಟಿ ಮಾಡಿದ್ದರು. ಆರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ಬೆಳೆಯೂ ಚೆನ್ನಾಗಿ ಬಂದಿತ್ತು. ಆದರೆ ಬಳಿಕ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಬೋರ್‌ವೆಲ್‌ ಹಾಗೂ ಕೃಷಿ ಹೊಂಡಗಳಿಂದ ನೀರು ಹಾಯಿಸಿ ಬೆಳೆಯನ್ನು ಉಳಿಸಿಕೊಂಡಿದ್ದರು.

ಮೆಣಸಿನಕಾಯಿ ಬೆಳೆಗೆ ನೀರುಣಿಸಲು ಹಾಗೂ ನಿರ್ವಹಣೆ ಮಾಡಲು ರೈತರು ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಇದೀಗ ಗಿಡಗಳು ಮೈತುಂಬಾ ಕಾಯಿಯನ್ನು ಬಿಟ್ಟಿದ್ದು, ಕಟಾವಿಗೆ ಸಿದ್ಧವಾಗಿವೆ. ಆದರೆ ಇದೇ ಸಮಯದಲ್ಲಿ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ದರದಲ್ಲಿ ತೀವ್ರ ಕುಸಿತ ಕಂಡುಬಂದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.

ಸದ್ಯ ಕೆಲವೆಡೆ 10 ಕೆಜಿ ಮೆಣಸಿನಕಾಯಿಗೆ ಕೇವಲ 80ರಿಂದ 100 ರೂಪಾಯಿ ದರ ನಿಗದಿಯಾಗುತ್ತಿದೆ ಎನ್ನಲಾಗಿದೆ. ಈ ದರದಲ್ಲಿ ಮಾರಾಟ ಮಾಡಿದರೆ ರೈತರಿಗೆ ಕಟಾವು ವೆಚ್ಚವೂ ಸಿಗದ ಪರಿಸ್ಥಿತಿ ಎದುರಾಗಿದೆ. ಮೆಣಸಿನಕಾಯಿ ಕೀಳಲು ಕಾರ್ಮಿಕರಿಗೆ ಕೂಲಿ ನೀಡಬೇಕು. ಬಳಿಕ ವಾಹನದ ಮೂಲಕ ಮಾರುಕಟ್ಟೆಗೆ ಸಾಗಿಸಬೇಕು. ಹೀಗಾಗಿ ಮಾರುಕಟ್ಟೆ ದರಕ್ಕಿಂತ ಕಟಾವು ಮತ್ತು ಸಾಗಣೆ ವೆಚ್ಚವೇ ಹೆಚ್ಚಿನದಾಗುವ ಆತಂಕ ರೈತರಲ್ಲಿದೆ.

ಕನಿಷ್ಠ ಕೆಜಿಗೆ 25 ರೂಪಾಯಿ ದರ ಸಿಕ್ಕರೆ ಇದುವರೆಗೆ ಮಾಡಿರುವ ಖರ್ಚನ್ನಾದರೂ ಸರಿದೂಗಿಸಬಹುದು. ಅದಕ್ಕಿಂತ ಹೆಚ್ಚಿನ ದರ ಸಿಕ್ಕಾಗ ಮಾತ್ರ ರೈತರಿಗೆ ಲಾಭವಾಗಲಿದೆ. ಇಲ್ಲವಾದರೆ ಇಷ್ಟು ದಿನ ಬೆಳೆಗಾಗಿ ಮಾಡಿದ ಖರ್ಚು ವ್ಯರ್ಥವಾಗಲಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಈಗಾಗಲೇ ಎಕರೆಗೆ ಸಾವಿರಾರು ರೂಪಾಯಿ ಖರ್ಚು ಮಾಡಿರುವ ರೈತರು ಮತ್ತೊಮ್ಮೆ ಕಾಯಿ ಕಟಾವಿಗೆ ಹಣ ಖರ್ಚು ಮಾಡಬೇಕಾದ ಪರಿಸ್ಥಿತಿಯಲ್ಲಿದ್ದಾರೆ. ಕಟಾವು ಮಾಡಿದ ಬಳಿಕವೂ ಸೂಕ್ತ ಬೆಲೆ ಸಿಗದಿದ್ದರೆ ನಷ್ಟ ಮತ್ತಷ್ಟು ಹೆಚ್ಚಾಗಲಿದೆ. ಇದೇ ಕಾರಣಕ್ಕೆ ಕೆಲ ರೈತರು ಕಾಯಿ ಕೀಳದೇ ಗಿಡದಲ್ಲೇ ಬಿಟ್ಟಿದ್ದಾರೆ.

ಇದೀಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆಯಾಗುತ್ತಿರುವುದರಿಂದ ಬೆಳೆ ಕಟಾವು ಮಾಡಿ ಒಂದಷ್ಟು ಆದಾಯ ಗಳಿಸಿ, ಮುಂದಿನ ಬೆಳೆಗೆ ಸಿದ್ಧತೆ ಮಾಡಿಕೊಳ್ಳುವ ನಿರೀಕ್ಷೆಯಲ್ಲಿ ರೈತರಿದ್ದರು. ಆದರೆ ಮೆಣಸಿನಕಾಯಿಗೆ ಸೂಕ್ತ ಬೆಲೆ ಸಿಗದಿರುವುದು ಮುಂದಿನ ಬೆಳೆಯ ಯೋಜನೆಗೂ ಹೊಡೆತ ನೀಡುವ ಆತಂಕ ಮೂಡಿಸಿದೆ.

ಬೆಳೆ ಬಂದರೂ ಬೆಲೆ ಸಿಗದಿದ್ದರೆ ರೈತರ ಸಂಕಷ್ಟ ತಪ್ಪುವುದಿಲ್ಲ. ಉತ್ತಮ ಇಳುವರಿ ಪಡೆದಿದ್ದರೂ ಮಾರುಕಟ್ಟೆಯಲ್ಲಿ ಸೂಕ್ತ ದರ ದೊರೆಯದಿರುವುದು ಅನ್ನದಾತರ ಪಾಲಿಗೆ ಮತ್ತೊಂದು ಸಂಕಷ್ಟವಾಗಿ ಪರಿಣಮಿಸಿದೆ.

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಜೀವಾಳ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಖಾದ್ರಿ ಶಾಮಣ್ಣ ಟ್ರಸ್ಟ್ ಇಂದು ಶೇಷಾದ್ರಿಪುರಂ ಕಾಲೇಜಿನ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿ, ಖಾದ್ರಿ ಶಾಮಣ್ಣ ಟ್ರಸ್ಟ್‌ ವತಿಯಿಂದ ಪ್ರತಿವರ್ಷ ಅವರ ಹೆಸರಿನಲ್ಲಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು, ಈ ಬಾರಿ ಪ್ರಜಾವಾಣಿಯ ನಿವೃತ್ತ ಸಹಾಯಕ ಸಂಪಾದಕ ಉದಯ್‌ಕುಮಾರ್‌ ಅವರನ್ನು ಆಯ್ಕೆ ಮಾಡಿದ್ದಾರೆ ಎಂದರು. ಈ ವೇಳೆ ಪ್ರಶಸ್ತಿಗೆ ಭಾಜನರಾದ ಉದಯ್‌ಕುಮಾರ್‌ ಅವರಿಗೆ ಖಾದ್ರಿ ಶಾಮಣ್ಣ ಟ್ರಸ್ಟ್‌ ವತಿಯಿಂದ ಅಭಿನಂದಿಸಿದರು.

ಮುಂದುವರಿದು ಮಾತನಾಡಿದ ಅವರು, ಪತ್ರಿಕೋದ್ಯಮದಲ್ಲಿ ಅನನ್ಯ ಸೇವೆಯನ್ನು ಮಾಡಿ, ಪತ್ರಿಕಾ ಧರ್ಮವನ್ನು ಹಾಗೂ ಅದರ ಮೌಲ್ಯವನ್ನು ಎತ್ತಿ ಹಿಡಿದ ಕೆಲಸವನ್ನು ಮಾಡಿರುವುದಕ್ಕೆ ಈ ಪ್ರಶಸ್ತಿ ಸಂದಾಯವಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಅದರಲ್ಲೂ ಮುಖ್ಯವಾಗಿ, ಯುವಕರಲ್ಲಿ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಪತ್ರಿಕೋದ್ಯಮ ಬಹಳ ಮುಖ್ಯವಾಗಿದ್ದು, ಅದು ಪ್ರಜಾಪ್ರಭುತ್ವದ ಜೀವಾಳ ಎಂದರು.

ನಮ್ಮ ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಅಸಮಾನತೆ ಇದ್ದು, ಅದನ್ನು ಹೋಗಲಾಡಿಸುವುದು ಯಾರೂ ಪತ್ರಿಕೋದ್ಯಮವನ್ನು ಆಯ್ಕೆ ಮಾಡಿಕೊಂಡಿರುತ್ತಾರೋ ಅವರ ಜವಾಬ್ದಾರಿಯೂ ಆಗಿದೆ ಎಂದು ತಿಳಿಸಿದರು.

ಹಿಂದೆ ಖಾದ್ರಿ ಶಾಮಣ್ಣನವರು ಇದ್ದ ಕಾಲದಲ್ಲಿ ಪತ್ರಿಕೋದ್ಯಮದ ಅನುಭವವನ್ನು, ಅದರ ಮೌಲ್ಯಗಳನ್ನು ಎತ್ತಿಹಿಡಿವಂತಹ ಕೆಲಸವನ್ನು ಮಾಡುತ್ತಿದ್ದರು. ನಾನು ಖಾದ್ರಿ ಶಾಮಣ್ಣನವರನ್ನು ಬಹಳ ಹತ್ತಿರದಿಂದ ಬಲ್ಲೆ. ಯಾಕೆಂದರೆ ಅವರು ಸಮಾಜವಾದಿಗಳಾಗಿದ್ದರು. ಹಾಗಾಗಿ ನಾನು ಅವರನ್ನು ಆಗಾಗ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಭೇಟಿ ಮಾಡುತ್ತಿದ್ದೆ ಎಂದು ಅವರ ಒಡನಾಟವನ್ನು ನೆನಪಿಸಿಕೊಂಡರು.

ಖಾದ್ರಿ ಶಾಮಣ್ಣನವರು ಕನ್ನಡಪ್ರಭ ಪತ್ರಿಕೆಯ ಸಂಪಾದಕರಾಗಿದ್ದರು. ಅವರ ಸಂಪಾದಕೀಯವೇ ಬಹಳ ಪ್ರಮುಖವಾಗಿರುತ್ತಿತ್ತು. ಎಷ್ಟೇ ಗಂಭೀರ ವಿಷಯವಾದರೂ, ಗಾಢ ವಿಷಯವಾದರೂ ಕೂಡ ಅವರು ಬಳಸುವ ಭಾಷೆ ಬಹಳ ಸರಳವಾಗಿರುತ್ತಿತ್ತು. ಹೀಗಾಗಿ ಅದು ಜನರಿಗೆ ಬೇಗ ತಲುಪುತ್ತಿತ್ತು. ಅವರು ರಾಜಕಾರಣಿಯಾಗಿರಲಿಲ್ಲ, ಆದರೆ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಜೊತೆಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟುಕೊಂಡಿದ್ದ ವ್ಯಕ್ತಿಯಾಗಿದ್ದರು. ಸಂವಿಧಾನದ ಮೇಲೆ ಅವರಿಗಿದ್ದ ಬದ್ಧತೆ ಅಪಾರವಾದುದ್ದು.

ಪ್ರತಿಯೊಬ್ಬರು ಕೂಡ ಸಂವಿಧಾನವನ್ನು ತಿಳಿದುಕೊಳ್ಳುವುದು ಅವಶ್ಯಕ, ಅದರಲ್ಲೂ ಪತ್ರಿಕೋದ್ಯಮದಲ್ಲಿ ಇರುವವರು ತಿಳಿದುಕೊಳ್ಳುವುದು ಅತ್ಯಂತ ಅವಶ್ಯಕ ಎಂದರು. ಸಂವಿಧಾನ ನಿಮಗೆ ಸ್ವಾತಂತ್ರ್ಯವನ್ನು ಕೊಟ್ಟಿದ್ದೆ, ಆ ಸ್ವಾತಂತ್ರ್ಯವನ್ನು ಸರಿಯಾದ ದಾರಿಯಲ್ಲಿ ಉಪಯೋಗಿಸುವಂತಹದ್ದು ಅತ್ಯಂತ ಅವಶ್ಯಕ. ಇಲ್ಲದೇ ಹೋದರೆ ಪ್ರಜಾಪ್ರಭುತ್ವದ ಆಶಯಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಪತ್ರಕರ್ತರಿಗೆ ತಿಳಿಸಿದರು.

ಇತ್ತೀಚಿನ ವರ್ಷಗಳಲ್ಲಿ ಪತ್ರಿಕೋದ್ಯಮದ ದಾರಿ ಬದಲಾಗುತ್ತಿದೆ. ಕೆಲವು ಪತ್ರಿಕೋದ್ಯಮ ಸಂಸ್ಥೆಗಳು ಅದರ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪತ್ರಿಕೆಗಳು ನಿಷ್ಪಕ್ಷಪಾತವಾಗಿ ನೈಜ ವಿಷಯಗಳನ್ನು ಜನರ ಎದುರು ಇಡಬೇಕು. ನಮ್ಮ ಸಮಾಜ ಅಸಮಾನತೆಯಿಂದ ಕೂಡಿದೆ. ಅದನ್ನು ಹೋಗಲಾಡಿಸುವುದು ನಮ್ಮಂತಹ ರಾಜಕಾರಣಿಗಳ ಹಾಗೂ ಪತ್ರಕರ್ತರ ಜವಾಬ್ದಾರಿಯಾಗಿದೆ. ಅಸಮಾನತೆ ಮುಂದುವರಿದರೆ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದರು.

ಸಂವಿಧಾನ ಬಂದು ಈಗಾಗಲೇ 76 ವರ್ಷಗಳೇ ಆಗಿದೆ, ಆದರೂ ಇನ್ನೂ ಅಸಮಾನತೆ ಕಾಡುತ್ತಲೇ ಇದೆ. ಸಮಾಜದಲ್ಲಿ ಪ್ರಭಾವಿಗಳು, ಪ್ರಭಾವ ಉಳ್ಳದವರು, ಧ್ವನಿಯಿರುವವರು, ಧ್ವನಿ ಇಲ್ಲದವರು ಇದ್ದಾರೆ. ಹೀಗಾಗಿ ನಾವು ಯಾವಾಗಲೂ ಕೂಡ ಸಮಾಜದಲ್ಲಿ ಬಡವರು, ಮಹಿಳೆಯರು, ಹಿಂದುಳಿದವರು, ರೈತರು ಹಾಗೂ ಅಲ್ಪಸಂಖ್ಯಾತರು ಹೀಗೆ ಶೋಷಿತರ ಧ್ವನಿಯಾಗಿ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.

ನಾನು ಕೂಡ ಸಮಾಜಸೇವೆಯ ಕೆಲಸವನ್ನು ಮಾಡಬೇಕು ಎಂದು ರಾಜಕೀಯವನ್ನು ಆಯ್ಕೆ ಮಾಡಿಕೊಂಡೆ. ಶ್ರೀಮಂತರಾಗಿರುವವರು ಇನ್ನೂ ಕೂಡ ಶ್ರೀಮಂತರಾಗಬೇಕು ಎಂದು ಕೆಲಸ ಮಾಡಬಾರದು. ಅಸಮಾನತೆಯನ್ನು ಹೋಗಲಾಡಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು. ಸಂವಿಧಾನದ ಆಶಯವೇ ಸಮಾಸಮಾಜ ನಿರ್ಮಾಣ. ಜಾತಿವ್ಯವಸ್ಥೆ ಹೋಗಲಾಡಿಸಬೇಕು ಎಂದರೆ ಪತ್ರಕೋದ್ಯಮದವರು ಜಾತ್ಯತೀತವಾಗಿವಾಗಿ ಕೆಲಸವನ್ನು ಮಾಡಬೇಕು ಎಂದರು.

ಪತ್ರಿಕೋದ್ಯಮದ ಸಂಸ್ಥೆಗಳು ಸಮಾಜದಲ್ಲಿರುವ ಅಸಮಾನತೆಯನ್ನು ನೋಡಿಕೊಂಡು, ಸಮಸಮಾಜ ನಿರ್ಮಾಣ ಮಾಡುವಂತಹ ಕೆಲಸವನ್ನು ಮಾಡಬೇಕು ಎಂದು ಕರೆಕೊಟ್ಟರು. ಕೆಲವು ಪತ್ರಿಕೋದ್ಯಮಿಗಳು ಅಧಿಕಾರ ಯಾವ ಪಕ್ಷದಲ್ಲಿರುತ್ತದೆಯೋ ಅವರ ಹಿಂದೆ ಸುತ್ತುವಂತ, ಅವರ ಪರವಾಗಿ ನಿಲ್ಲುವಂತಹ ಕೆಲಸವನ್ನು ಮಾಡುತ್ತಾರೆ ಎಂದು ನುಡಿದರು.

ಸಮಾಜವನ್ನು ಒಡೆಯುವಂತಹ, ಸುಳ್ಳು ಸುದ್ದಿಗಳಿಗೆ ಪ್ರಚಾರವನ್ನು ನೀಡುವಂತಹ ಕೆಲಸವನ್ನು ಮಾಧ್ಯಮಗಳು ಮಾಡಬಾರದು. ಮೌಢ್ಯಗಳಿಂದಲೇ ಜಾತಿ ವ್ಯವಸ್ಥೆ ಹೆಚ್ಚಾಗಿರುವಂತಹದ್ದು, ಅಸಮಾನತೆ ಹೆಚ್ಚಾಗಿರುವಂತದ್ದು ಹೀಗಾಗಿ ಮೌಢ್ಯಗಳಿಗೆ ಹೆಚ್ಚು ಒತ್ತು ನೀಡಬಾರದು ಎನ್ನುವ ಕರೆ ನೀಡಿದರು.

ಮೌಢ್ಯಗಳನ್ನು ಆಚರಣೆ ಮಾಡುವ ಕೆಲವು ಪತ್ರಿಕೋದ್ಯಮಗಳನ್ನು ಖಂಡಿಸುವ ಕೆಲಸ ಮಾಡಿದ್ದೆ. ಪತ್ರಿಕಾ ಸ್ವಾಂತ್ರ್ಯವನ್ನು ಯಾವುದೇ ಕಾರಣಕ್ಕೂ ದುರುಪಯೋಗ ಮಾಡಬಾರದು.

ಪತ್ರಿಕಾ ಸ್ವಾತಂತ್ರ್ಯಕ್ಕೆ ನಾನು ಹೆಚ್ಚು ಒತ್ತು ಕೊಡುವವನಾಗಿದ್ದು, ಈ ಕಾರಣಕ್ಕಾಗಿ ನಮ್ಮ ಪಕ್ಷದ ಬಗ್ಗೆ ಯಾರೂ ಏನೇ ಬರೆದರೂ ಅಥವಾ ನನ್ನ ಬಗ್ಗೆಯೇ ಬರೆದರೂ, ಟೀಕೆ ಮಾಡಿದರೂ ಯಾವುದೇ ಪತ್ರಿಕಾ ಸಂಸ್ಥೆಯವರಿಗೆ, ಪತ್ರಕರ್ತರಿಗೆ ಇವತ್ತಿನವರೆಗೂ ಫೋನ್‌ ಮಾಡಿಲ್ಲ, ಮಾಡೋದು ಇಲ್ಲ ಎಂದು ತಮ್ಮ ಅನುಭವವನ್ನು ತಿಳಿಸಿದರು.

ಖಾದ್ರಿ ಶಾಮಣ್ಣನವರು ಇವತ್ತು ಬದುಕಿರುತ್ತಿದ್ದರೇ, ಪತ್ರಿಕೋದ್ಯಮದ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತಿದ್ದರು ಎಂದರು. ಅವರ ಹೆಸರಿನಲ್ಲಿ ಪತ್ರಿಕೋದ್ಯಮದ ಶಕ್ತಿಯಿದೆ. ಅವರೊಬ್ಬ ಮಾದರಿ ಪತ್ರಕರ್ತರು, ಮಾರ್ಗದರ್ಶಕರು ಎಂದು ಹೇಳಿದರು.

ಬಿಡದಿ ಪಾದಯಾತ್ರೆ ಬಗ್ಗೆ ಬಿಜೆಪಿ ನಾಯಕರ ಜತೆ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ

ಬೆಂಗಳೂರು: ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ನಡೆದ ಜೆಡಿಎಸ್ ಮತ್ತು ಬಿಜೆಪಿ ಹಿರಿಯ ನಾಯಕರ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು ಕೇಂದ್ರ ಸಚಿವರು. ಬಿಡದಿ ಟೌನ್ ಶಿಪ್ ಯೋಜನೆಯ ಬಗ್ಗೆ ನಾವು ಅತ್ಯಂತ ವಿವರವಾಗಿ ಚರ್ಚೆ ನಡೆಸಿದ್ದೇವೆ ಹಾಗೂ ಮುಂಬರುವ ವಿಧಾನಕಲಾಪದಲ್ಲಿ ಪ್ರಸ್ತಾಪಿಸಲು ಉದ್ದೇಶಿಸಿರುವ ವಿವಿಧ ವಿಷಯಗಳ ಬಗ್ಗೆ ಸಮಾಲೋಚಿಸಿದ್ದೇವೆ ಎಂದು ಅವರು ಹೇಳಿದರು.

ಬಿಡದಿ ಪಾದಯಾತ್ರೆಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೂ ಹಮ್ಮಿಕೊಳ್ಳಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರು ಪಾದಯಾತ್ರೆಯ ನೇತೃತ್ವ ವಹಿಸಿದ್ದಾರೆ. ಬಿಜೆಪಿ ನಾಯಕರು ಕೂಡ ಪಾದಯಾತ್ರೆಯ ಬಗ್ಗೆ ಅತ್ಯಂತ ಸಕಾರಾತ್ಮಕ ಮನಸ್ಸು ಹೊಂದಿದ್ದು, ಅವರು ಕೂಡ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳಿಸಿದ್ದಾರೆ ಎಂದು ಅವರು ತಿಳಿಸಿದರು.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸೇರಿದಂತೆ ಬಿಜೆಪಿಯ ಅನೇಕ ಹಿರಿಯ ನಾಯಕರು ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅಲ್ಲದೆ, ಮುಂಬರುವ ವಿಧಾನಮಂಡಲ ಕಲಾಪದಲ್ಲಿ ಬಿಡದಿ ಟೌನ್ಶಿಪ್ ವಿಷಯ ಹಾಗೂ ನೈಸ್ ಯೋಜನೆಯ ಅಕ್ರಮಗಳ ಬಗ್ಗೆ ಧ್ವನಿ ಎತ್ತಲು ನಿರ್ಧರಿಸಲಾಗಿದೆ. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಒಮ್ಮತದಿಂದ ಹೋರಾಟ ನಡೆಸಲಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

ಎರಡೂ ಪಕ್ಷಗಳ ನಡುವೆ ಸಮನ್ವಯ ಕೊರತೆ ಆಗಬಾರದು ಎಂಬ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಡದಿ ಪಾದಯಾತ್ರೆ ನಡೆಯುತ್ತಿದೆ. ನಾನೇ ಪಾದಯಾತ್ರೆಗೆ ಚಾಲನೆ ನೀಡುತ್ತೇನೆ ಎಂದರು ಸಚಿವರು.

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದು ಸರಿ ಇಲ್ಲ ಎಂಬುದಕ್ಕೆ ಅನೇಕ ನಿದರ್ಶನಗಳು ಇವೆ. ಸಂಪುಟ ವಿಸ್ತರಣೆಗೆ ತಿಂಗಳಗಟ್ಟಲೆ ಸಮಯ ತೆಗೆದುಕೊಂಡರು. ಈಗ ಖಾತೆ ಹಂಚಿಕೆ ಕೂಡ ನಡೆದಿಲ್ಲ. ಸರ್ಕಾರದ ಕಾರ್ಯವೈಖರಿ ನೋಡಿದರೆ ತುಂಬಾ ನಿರಾಶೆಯಾಗುತ್ತದೆ, ಖಾತೆ ಹಂಚಿಕೆ ವಿಷಯ ಕಾಂಗ್ರೆಸ್ ದಿವಾಳಿತನ ತೋರುತ್ತದೆ ಸಚಿವರು ಕಟುವಾಗಿ ಟೀಕಿಸಿದರು.

ರಾಜ್ಯ ಹಿಂದೆಂದೂ ಸಿಲುಕಿರದಷ್ಟು ತೀವ್ರ ಬರಕ್ಕೆ ತುತ್ತಾಗಿದೆ. ಸರ್ಕಾರ ಜನರಿಗೆ ನೆರವಾಗುವಲ್ಲಿ ವಿಫಲವಾಗಿದೆ. ಈ ಬಗ್ಗೆಯೂ ಪ್ರಸ್ತಾಪಿಸಿ ಹೋರಾಟ ಮಾಡಲು ನಿರ್ಧರಿಸಲಾಯಿತು ಎಂದು ಸಚಿವರು ಮಾಹಿತಿ ನೀಡಿದರು.

ಬಿಡದಿ ವಿಚಾರದಲ್ಲಿ ಸದನದಲ್ಲೂ ಚರ್ಚೆ ಆಗಲೇಬೇಕು. ರೈತರ ಮಹಿಳೆಯರ ಹೋರಾಟವನ್ನು ಇಡೀ ರಾಜ್ಯ ನೋಡುತ್ತಿದೆ. ರೈತರು ಭೂಮಿ ಕೊಡಲು ತಯಾರಿಲ್ಲ. ಕೇವಲ ರೈತರ ಭೂಮಿಯನ್ನು ಲೂಟಿ ಒಡೆಯಲು ಯೋಜನೆಯನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಜೊತೆ ವಿಸ್ತೃತವಾಗಿ ಚರ್ಚೆ ನಡೆಸಿದ್ದೇನೆ ಎಂದು ಸಚಿವರು ಹೇಳಿದರು.

ಇದಲ್ಲದೆ, ವಾಲ್ಮೀಕಿ ಹಗರಣ, ಬೆಂಗಳೂರಿನಲ್ಲಿ ಅಸಮರ್ಪಕ ಕಸ ವಿಲೇವಾರಿ, ಕೆಪಿಎಸ್ಸಿ ಅಕ್ರಮಗಳು, ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳು, ಗೃಹಲಕ್ಷ್ಮಿ ಯೋಜನೆಯ ಹಣ ದುರ್ಬಳಕೆ ಮುಂತಾದ ವಿಷಯಗಳ ಬಗ್ಗೆ ಎರಡು ಪಕ್ಷಗಳು ದನಿಯ ಎತ್ತುತ್ತವೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಲೋಕಸಭೆ ಸದಸ್ಯ ಎಂ. ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಮಾಜಿ ಸಚಿವ ಸಿ.ಸಿ. ಪಾಟೀಲ್ ಮುಂತಾದವರು ಭಾಗಿಯಾಗಿದ್ದರು.

ಸ್ನ್ಯಾಕ್ಸ್ ಪ್ಯಾಕೆಟ್‌ನಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಮಾರಾಟ: ಆರೋಪಿ ಅರೆಸ್ಟ್‌

0

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳನ್ನೇ ಗಾಂಜಾ ಮಾರಾಟದ ಅಡ್ಡೆಯನ್ನಾಗಿ ಮಾಡಿಕೊಂಡಿದ್ದ ಆರೋಪಿಯನ್ನು ಉದ್ಯಮಬಾಗ ಪೊಲೀಸರು ಬಂಧಿಸಿದ್ದಾರೆ. ಕಾಲೇಜೊಂದರ ಸಮೀಪ ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ತುಂಬಿಸಿ ಚಾಕ್ಲೆಟ್ ರೂಪದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಭೋಲು ಪ್ರಜಾಪತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಆರೋಪಿ ಗಾಂಜಾವನ್ನು ಚಾಕ್ಲೆಟ್ ರೂಪದಲ್ಲಿ ಪ್ಯಾಕ್ ಮಾಡಿ ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಬಚ್ಚಿಟ್ಟು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಕಾಲೇಜು ಸಮೀಪ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆ ವೇಳೆ ₹54 ಸಾವಿರ ಮೌಲ್ಯದ 6 ಕೆಜಿ ಗಾಂಜಾ, ಒಂದು ಮೊಬೈಲ್ ಫೋನ್ ಹಾಗೂ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹94 ಸಾವಿರ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಗಾಂಜಾ ಮಾರಾಟದ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದೂ ಸೇರಿದಂತೆ ಪ್ರಕರಣದ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೋಡಿ ಬಿದ್ದ ಅಂಬ್ಲಿಗೋಳ ಜಲಾಶಯ: ರೈತರ ಸಮೃದ್ಧಿಗಾಗಿ ಬಾಗಿನ ಅರ್ಪಿಸಿದ ಸಂಸದ ರಾಘವೇಂದ್ರ

0

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಶಿಕಾರಿಪುರ ತಾಲೂಕಿನ ಪ್ರಮುಖ ಜಲಮೂಲವಾಗಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದಿದೆ. ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ದಾರೆ.

ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿರುವ ಬಿ.ವೈ. ರಾಘವೇಂದ್ರ, ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿರುವುದಾಗಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ವರುಣದೇವನ ಕೃಪೆಯಿಂದ ಶಿಕಾರಿಪುರ ತಾಲೂಕು ಮಾತ್ರವಲ್ಲದೆ ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಸಮೃದ್ಧಿಯಾಗಲಿ. ರೈತ ಕುಟುಂಬಗಳಲ್ಲಿ ಸುಖ, ಶಾಂತಿ ಮತ್ತು ಸಂತಸ ನೆಲೆಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಬಾಗಿನ ಅರ್ಪಣೆ ಬಳಿಕ ಬಿ.ವೈ. ವಿಜಯೇಂದ್ರ ಹಾಗೂ ಬಿ.ವೈ. ರಾಘವೇಂದ್ರ ಅವರು ಶಿಕಾರಿಪುರ ಪಟ್ಟಣದ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

0

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್ ಅಧಿಕಾರಿಯ ಪುತ್ರನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರು ಡಿಕ್ಕಿಯಾಗಿ 70 ವರ್ಷದ ವೃದ್ಧೆ ಮೃತಪಟ್ಟಿರುವ ಘಟನೆ ದೆಹಲಿಯ ನರೇಲಾದಲ್ಲಿ ನಡೆದಿದೆ. ಮೃತರನ್ನು ಊರ್ಮಿಳಾ ಎಂದು ಗುರುತಿಸಲಾಗಿದೆ.

ಮಾಮುರ್‌ಪುರದ ಹಿಮಾಲಯ ಅಪಾರ್ಟ್‌ಮೆಂಟ್ ಹೊರಭಾಗದಲ್ಲಿ ಇಂದು ಬೆಳಗ್ಗೆ ಸುಮಾರು 8 ಗಂಟೆಗೆ ಅಪಘಾತ ಸಂಭವಿಸಿದೆ. ಬೆಳಗಿನ ವಾಕಿಂಗ್‌ಗೆ ತೆರಳಿದ್ದ ಊರ್ಮಿಳಾ ಅವರಿಗೆ ವೇಗವಾಗಿ ಬಂದ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದಿದೆ. ಬಳಿಕ ಕಾರು ಮತ್ತೊಂದು ವಾಹನಕ್ಕೂ ಡಿಕ್ಕಿ ಹೊಡೆದಿದೆ.

ಮರ್ಸಿಡಿಸ್ ಕಾರನ್ನು ಹರಿಯಾಣ ಪೊಲೀಸ್ ಇಲಾಖೆಯ ಸಬ್‌ಇನ್ಸ್‌ಪೆಕ್ಟರ್ ಪುತ್ರ ಶುಭಂ ಚಲಾಯಿಸುತ್ತಿದ್ದ ಎನ್ನಲಾಗಿದೆ. ಅಪಘಾತದ ವೇಳೆ ಶುಭಂ ಕುಡಿದಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಬಂಧಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

ಪೊಲೀಸರ ಪ್ರಕಾರ, ಮರ್ಸಿಡಿಸ್ ಕಾರು ವ್ಯಾಗನ್‌ಆರ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವ್ಯಾಗನ್‌ಆರ್ ಕಾರು ಹಿಂದಕ್ಕೆ ಎಸೆಯಲ್ಪಟ್ಟು, ದೂರದಲ್ಲಿ ನಿಲ್ಲಿಸಿದ್ದ ತ್ರಿಚಕ್ರ ವಾಹನ ಲೋಡಿಂಗ್ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಊರ್ಮಿಳಾ ಅವರು ತ್ರಿಚಕ್ರ ವಾಹನ ಮತ್ತು ವ್ಯಾಗನ್‌ಆರ್ ನಡುವೆ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾರು ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಕುಡಿದು ವಾಹನ ಚಲಾಯಿಸಿದ್ದ ಆರೋಪದಡಿ ಪೊಲೀಸ್ ಅಧಿಕಾರಿಯ ಪುತ್ರ ಶುಭಂನನ್ನು ಬಂಧಿಸಿರುವ ಪೊಲೀಸರು, ಅಪಘಾತದ ನಿಖರ ಕಾರಣ ಹಾಗೂ ಚಾಲಕನ ವಿರುದ್ಧದ ಆರೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

ವಿಬಿಜಿ ರಾಮ್ ಜಿ ಯೋಜನೆಯಡಿ ಉದ್ಯೋಗ: ಒಂದು ವಾರದಲ್ಲಿ ಜಾಬ್ ಕಾರ್ಡ್ ಮೇಳ ನಡೆಸಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಮನ್ರೇಗಾದ ಬದಲಾದ ರೂಪವಾದ ವಿಬಿಜಿ ರಾಮ್ ಜಿ ಯೋಜನೆಯಡಿ ಅರ್ಹ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಒಂದು ವಾರದೊಳಗೆ ಜಾಬ್ ಕಾರ್ಡ್ ಮೇಳ ಆಯೋಜಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.

ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ನಿಷ್ಕ್ರಿಯವಾಗಿದ್ದ ಹಲವು ಉದ್ಯೋಗ ಚೀಟಿಗಳನ್ನು (ಜಾಬ್ ಕಾರ್ಡ್) ರದ್ದುಪಡಿಸಲಾಗಿದೆ. ಆದರೆ, ಈ ಪ್ರಕ್ರಿಯೆಯಿಂದ ಬಡ ಗ್ರಾಮೀಣ ಕುಟುಂಬಗಳಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶಿಸಿದ್ದಾರೆ.

ಹೊಸದಾಗಿ ಉದ್ಯೋಗ ಬಯಸುವ ಅರ್ಹ ಗ್ರಾಮೀಣ ಕುಟುಂಬಗಳಿಗೆ ತಕ್ಷಣ ಜಾಬ್ ಕಾರ್ಡ್ ವಿತರಿಸುವಂತೆ ಸೂಚಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷಚೇತನರು, ಮಹಿಳಾ ನೇತೃತ್ವದ ಕುಟುಂಬಗಳು, ಭೂರಹಿತ ಕೂಲಿ ಕಾರ್ಮಿಕರು ಸೇರಿದಂತೆ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸುವ ಎಲ್ಲ ಅರ್ಹರಿಗೆ ಜಾಬ್ ಕಾರ್ಡ್ ನೀಡಬೇಕು ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದ 5,927 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಒಂದು ವಾರದೊಳಗೆ ಜಾಬ್ ಕಾರ್ಡ್ ಮೇಳಗಳನ್ನು ಆಯೋಜಿಸಿ, ಅರ್ಹರಿಗೆ ಜಾಬ್ ಕಾರ್ಡ್ ವಿತರಿಸುವುದರ ಜತೆಗೆ ಉದ್ಯೋಗ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ವಿಬಿಜಿ ರಾಮ್ ಜಿ ಯೋಜನೆಯಡಿ ಕೇಂದ್ರ ಸರ್ಕಾರದ ಶೇ.60ರಷ್ಟು ಅನುದಾನವಾಗಿ ₹1,700 ಕೋಟಿ ಹಾಗೂ ರಾಜ್ಯ ಸರ್ಕಾರದ ಶೇ.40ರಷ್ಟು ಅನುದಾನವಾಗಿ ₹1,200 ಕೋಟಿ ಸೇರಿದಂತೆ ಒಟ್ಟು ₹2,900 ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಕೂಲಿ ಪಾವತಿಗಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ₹1,000 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಯೋಜನೆಗೆ ಹಣದ ಕೊರತೆ ಇಲ್ಲದಿದ್ದರೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ವಿಬಿಜಿ ರಾಮ್ ಜಿ ಯೋಜನೆಯ ಅನುಷ್ಠಾನ ತೃಪ್ತಿಕರವಾಗಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವರು, ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ಕಲ್ಪಿಸುವಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

‘ನಮಗೆ ನಿಮ್ಮ ಮೇಲೆ ನಂಬಿಕೆಯಿದೆ, ದೇಶಕ್ಕೆ ನಿಮ್ಮ ಅಗತ್ಯವಿದೆ’: ಜೆನ್‌-ಝಿಗೆ ಮೋದಿ ಕಿವಿಮಾತು

0

ನವದೆಹಲಿ: ‘ನಮಗೆ ನಿಮ್ಮ ಮೇಲೆ ನಂಬಿಕೆಯಿದೆ, ದೇಶಕ್ಕೆ ನಿಮ್ಮ ಅಗತ್ಯವೂ ಇದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜೆನ್‌-ಝಿ ಪೀಳಿಗೆಗೆ ಸಂದೇಶ ನೀಡಿದ್ದಾರೆ. ದೆಹಲಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ 57ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಬದಲಾಗುತ್ತಿರುವ ತಂತ್ರಜ್ಞಾನ, ಜಾಗತಿಕ ಬೆಳವಣಿಗೆಗಳು ಹಾಗೂ ಭವಿಷ್ಯದ ಸವಾಲುಗಳನ್ನು ಎದುರಿಸಲು ಯುವಕರು ನಿರಂತರವಾಗಿ ಕಲಿಯುತ್ತಿರಬೇಕು ಎಂದು ಕರೆ ನೀಡಿದರು.

ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆ ಬಳಿಕ ಜೆನ್‌-ಝಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ನೀಡಿದ ಮೊದಲ ಭಾಷಣ ಇದಾಗಿದೆ. ಜಗತ್ತು ವೇಗವಾಗಿ ಬದಲಾಗುತ್ತಿದ್ದು, ತಂತ್ರಜ್ಞಾನ ಮತ್ತು ಜಾಗತಿಕ ಚಲನಶೀಲತೆಗಳು ಕೈಗಾರಿಕೆ ಹಾಗೂ ವೃತ್ತಿಗಳ ಸ್ವರೂಪವನ್ನು ಅಭೂತಪೂರ್ವ ವೇಗದಲ್ಲಿ ಬದಲಾಯಿಸುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಕುತೂಹಲ ಹಾಗೂ ಕಲಿಯುವ ಆಸಕ್ತಿಯನ್ನು ಜೀವಂತವಾಗಿರಿಸಿಕೊಳ್ಳಬೇಕು ಎಂದು ಮೋದಿ ಹೇಳಿದರು.

ಮುಂದಿನ 20ರಿಂದ 30 ವರ್ಷಗಳಲ್ಲಿ ಜಗತ್ತು ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಯಾರಿಗೂ ನಿಖರವಾಗಿ ಊಹಿಸಲು ಸಾಧ್ಯವಿಲ್ಲ. ಹೀಗಾಗಿ ಜೀವನದುದ್ದಕ್ಕೂ ಕಲಿಯುವ ಮನೋಭಾವ ಬೆಳೆಸಿಕೊಳ್ಳಬೇಕು. ಹೊಸದನ್ನು ಕಲಿಯುವ ಪ್ರವೃತ್ತಿಯನ್ನು ಮುಂದುವರಿಸುವವರು ಮಾತ್ರ ಬದಲಾಗುತ್ತಿರುವ ಜಗತ್ತಿನಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರತಿಯೊಂದು ಪೀಳಿಗೆಯೂ ತನ್ನದೇ ಆದ ಸವಾಲುಗಳನ್ನು ಎದುರಿಸುತ್ತದೆ. ಮುಂದಿನ ಮೂರರಿಂದ ನಾಲ್ಕು ದಶಕಗಳಲ್ಲಿ ಜೆನ್‌-ಝಿ ಪೀಳಿಗೆ ತೆಗೆದುಕೊಳ್ಳುವ ನಿರ್ಧಾರಗಳು ಮತ್ತು ನೀಡುವ ಕೊಡುಗೆಗಳು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಪ್ರಯಾಣದಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ಮೋದಿ ಹೇಳಿದರು.

ತಮ್ಮ ವೃತ್ತಿಪರ ಹಾಗೂ ವೈಯಕ್ತಿಕ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ರಾಷ್ಟ್ರೀಯ ಹಿತಾಸಕ್ತಿಯನ್ನು ಪರಿಗಣಿಸಬೇಕು. ತಮ್ಮ ಕೆಲಸ ದೇಶದ ಅಗತ್ಯಗಳನ್ನು ಪೂರೈಸಲು ಹೇಗೆ ಕೊಡುಗೆ ನೀಡಬಹುದು ಎಂಬುದನ್ನು ಪ್ರತಿಯೊಬ್ಬರೂ ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಪ್ರಧಾನಿ ಕರೆ ನೀಡಿದರು.

ಜಾಗತಿಕ ಕಾರ್ಯತಂತ್ರದ ಸಮೀಕರಣಗಳು ವೇಗವಾಗಿ ಬದಲಾಗುತ್ತಿವೆ. ಜಾಗತಿಕ ಶಕ್ತಿಯ ಸಮತೋಲನ ಕ್ಷಣಕ್ಷಣಕ್ಕೂ ಬದಲಾಗುತ್ತಿರುವ ಸಂದರ್ಭದಲ್ಲಿ, ಸ್ಪರ್ಧಾತ್ಮಕ ಜಗತ್ತಿಗೆ ಪ್ರವೇಶಿಸುತ್ತಿರುವ ಪದವೀಧರರು ತಂತ್ರಜ್ಞಾನ, ಕೈಗಾರಿಕೆ ಮತ್ತು ವೃತ್ತಿ ಕ್ಷೇತ್ರಗಳಲ್ಲಿ ಮಹತ್ವದ ಪರಿವರ್ತನೆಗಳನ್ನು ಎದುರಿಸಲಿದ್ದಾರೆ ಎಂದರು.

ಕೆಲಸದ ಸ್ವರೂಪ ಮುಂದಿನ ದಿನಗಳಲ್ಲಿ ಗಮನಾರ್ಹವಾಗಿ ಬದಲಾಗಬಹುದು. ಆದರೆ ನಿರಂತರ ಕಲಿಕೆಯೇ ಭವಿಷ್ಯದಲ್ಲೂ ಪ್ರಸ್ತುತವಾಗಿರಲು ಮತ್ತು ಯಶಸ್ಸು ಸಾಧಿಸಲು ಪ್ರಮುಖ ಅಸ್ತ್ರವಾಗಿರಲಿದೆ ಎಂದು ಮೋದಿ ಹೇಳಿದರು.

ಭಾರತದ ಯುವ ಪ್ರತಿಭೆಗಳಿಗೆ ಸಂಶೋಧನೆ ಮತ್ತು ನಾವೀನ್ಯತೆ ದೊಡ್ಡ ಅವಕಾಶಗಳನ್ನು ಒದಗಿಸುತ್ತಿವೆ. ದೇಶದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಯುವ ಪದವೀಧರರು ಕೊಡುಗೆ ನೀಡಬೇಕು ಎಂದು ಕರೆ ನೀಡಿದ ಪ್ರಧಾನಿ, ಪ್ರತಿಭಾವಂತ ವಿದ್ಯಾರ್ಥಿಗಳು ಸಂಶೋಧನೆಯನ್ನು ಮುಂದುವರಿಸಲು ಅವಕಾಶ ಕಲ್ಪಿಸುವ ಪ್ರಧಾನ ಮಂತ್ರಿಗಳ ಸಂಶೋಧನಾ ಫೆಲೋಶಿಪ್ ಸೇರಿದಂತೆ ಯುವ ಸಂಶೋಧಕರನ್ನು ಉತ್ತೇಜಿಸುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆಯೂ ಪ್ರಸ್ತಾಪಿಸಿದರು.

4 ತಿಂಗಳು ವೀಕ್‌ಆಫ್ ಇಲ್ಲ, ತುರ್ತು ರಜೆಗೂ ನೋ: ಸೂಪರ್‌ವೈಸರ್ ವಿರುದ್ಧ ಆರೋಪಿಸಿ ಮಹಿಳೆ ಆತ್ಮಹತ್ಯೆ

0

ಮೈಸೂರು: ಕೆಲಸದ ಸ್ಥಳದಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿಯೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿನಕಲ್‌ನಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ನಾಗೇಶ್ವರಿ ಬರೆದಿಟ್ಟಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ ಕಂಪನಿಯ ಲೇಡಿ ಸೂಪರ್‌ವೈಸರ್ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಲಾಗಿದೆ.

ಖಾಸಗಿ ಕಂಪನಿಯಲ್ಲಿ ಪ್ರಮೋಟರ್ ಆಗಿದ್ದ ನಾಗೇಶ್ವರಿ, ನಾಲ್ಕು ದಿನಗಳ ಹಿಂದೆ ‘ಡಾಲಿ’ ಎಂಬ ಮಹಿಳೆ ಸೂಪರ್‌ವೈಸರ್ ಆಗಿ ಬಂದ ಬಳಿಕ ತಮ್ಮ ಮೇಲೆ ಕಿರುಕುಳ ಹೆಚ್ಚಾಯಿತು ಎಂದು ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ. ತನ್ನದಲ್ಲದ ತಪ್ಪುಗಳಿಗೂ ತಮ್ಮನ್ನೇ ಹೊಣೆ ಮಾಡಿ ಟಾರ್ಗೆಟ್ ಮಾಡಲಾಗುತ್ತಿತ್ತು ಎಂದು ಅವರು ತಿಳಿಸಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಒಂದು ದಿನವೂ ವೀಕ್‌ಆಫ್ ನೀಡಿರಲಿಲ್ಲ. ತುರ್ತು ಸಂದರ್ಭದಲ್ಲೂ ರಜೆ ಕೇಳಿದರೂ ಅವಕಾಶ ನೀಡಲಿಲ್ಲ. ಈ ಬಗ್ಗೆ ಪ್ರಶ್ನೆ ಮಾಡಿದ ಬಳಿಕ ತಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ವಜಾಗೊಳಿಸಿದ ನಂತರ ನೋಟಿಸ್ ಪಿರಿಯಡ್ ಕೂಡ ಮಾಡಿಸಿರಲಿಲ್ಲ ಎಂದು ನಾಗೇಶ್ವರಿ ಆರೋಪಿಸಿದ್ದಾರೆ.

‘ಡಾಲಿ ಮೇಡಂ ನೀಡಿದ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನ್ಯಾಯ ಕೊಡಿಸಿ’ ಎಂದು ಡೆತ್‌ನೋಟ್‌ನಲ್ಲಿ ಮನವಿ ಮಾಡಿರುವುದಾಗಿ ತಿಳಿದುಬಂದಿದೆ.

ಘಟನೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಾಗೇಶ್ವರಿಯ ಡೆತ್‌ನೋಟ್ ಅನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಿ, ಅದರಲ್ಲಿರುವ ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಲಾಗುತ್ತಿದೆ.

ಕೆಲಸದ ಒತ್ತಡ, ವೃತ್ತಿಪರ ಸಮಸ್ಯೆಗಳು ಅಥವಾ ಸೂಪರ್‌ವೈಸರ್‌ನಿಂದ ಆಗಿದೆ ಎನ್ನಲಾದ ಕಿರುಕುಳ—ನಾಗೇಶ್ವರಿಯ ಆತ್ಮಹತ್ಯೆಗೆ ನಿಖರ ಕಾರಣ ಯಾವುದು ಎಂಬುದು ತನಿಖೆಯಿಂದ ಹೊರಬರಬೇಕಿದೆ. ಡೆತ್‌ನೋಟ್‌ನಲ್ಲಿನ ಆರೋಪಗಳಿಗೆ ಸಂಬಂಧಿಸಿದಂತೆ ಸೂಪರ್‌ವೈಸರ್ ಡಾಲಿ ಅವರ ಪಾತ್ರವೇನು ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ಹೋಗಿದ್ದ ಟೆಕ್ಕಿ ನಾಪತ್ತೆ: ಶಾಂತಲಾ ಡ್ರಾಪ್‌ನಲ್ಲಿ ಶೋಧ!

ನೆಲಮಂಗಲ: ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ 31 ವರ್ಷದ ಪ್ರತೀಕ್ ಉಪಾಧ್ಯಾಯ ನಾಪತ್ತೆಯಾಗಿರುವ ಪ್ರಕರಣ ತೀವ್ರ ಕುತೂಹಲ ಹಾಗೂ ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಬೆಳಗ್ಗೆ ಬೆಟ್ಟಕ್ಕೆ ತೆರಳಿದ್ದ ಯುವಕ, ಪಾರ್ಕಿಂಗ್‌ನಲ್ಲಿ ಬುಲೆಟ್ ಬೈಕ್ ಬಿಟ್ಟು ಟ್ರೆಕ್ಕಿಂಗ್ ಆರಂಭಿಸಿದ್ದರು. ಆದರೆ ಬಳಿಕ ಅವರ ಸುಳಿವು ಸಿಗದ ಹಿನ್ನೆಲೆಯಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಬೆಟ್ಟ ಏರುತ್ತಿದ್ದ ಪ್ರತೀಕ್ ಅವರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಅವರು ಬೆಟ್ಟ ಹತ್ತಿದ ಬಳಿಕ ಮತ್ತೆ ಕೆಳಗೆ ಬಂದಿರುವುದು ಕ್ಯಾಮೆರಾ ದೃಶ್ಯಗಳಲ್ಲಿ ಪತ್ತೆಯಾಗಿಲ್ಲ ಎನ್ನಲಾಗಿದೆ. ಹೀಗಾಗಿ ಅವರು ಯಾವ ಮಾರ್ಗದಲ್ಲಿ ತೆರಳಿದರು, ಬೆಟ್ಟದಿಂದ ವಾಪಸ್ ಬಂದರೇ ಅಥವಾ ಬೆಟ್ಟದ ಯಾವುದೇ ಅಪಾಯಕಾರಿ ಪ್ರದೇಶದಲ್ಲಿ ಸಿಲುಕಿದ್ದಾರೆಯೇ ಎಂಬ ಪ್ರಶ್ನೆಗಳು ಎದುರಾಗಿವೆ.

ಪ್ರತೀಕ್ ಐದು ದಿನಗಳ ಹಿಂದೆ ವೈಟ್‌ಫೀಲ್ಡ್‌ನಲ್ಲಿ ಬುಲೆಟ್ ಬೈಕ್ ಬಾಡಿಗೆಗೆ ಪಡೆದಿದ್ದರು. ಅದೇ ಬೈಕ್ ಶಿವಗಂಗೆ ಬೆಟ್ಟದ ಪಾರ್ಕಿಂಗ್‌ನಲ್ಲಿ ಪತ್ತೆಯಾಗಿದೆ. ಮತ್ತೊಂದೆಡೆ, ಅವರ ಮೊಬೈಲ್ ಫೋನ್ ಬೇರೆ ಸ್ಥಳದಲ್ಲಿ ಸ್ವಿಚ್ ಆಫ್ ಆಗಿರುವುದು ಪ್ರಕರಣದ ತನಿಖೆಗೆ ಮತ್ತೊಂದು ತಿರುವು ನೀಡಿದೆ.

ಯುವಕನ ಪತ್ತೆಗಾಗಿ ಪೊಲೀಸರು ಶಿವಗಂಗೆ ಬೆಟ್ಟದ ಶಾಂತಲಾ ಡ್ರಾಪ್ ಪ್ರದೇಶವನ್ನು ಕೇಂದ್ರೀಕರಿಸಿ ಶೋಧ ನಡೆಸುತ್ತಿದ್ದಾರೆ. ಡ್ರೋನ್ ಕ್ಯಾಮೆರಾ ಬಳಸಿ ಕಲ್ಲುಬಂಡೆಗಳು, ದಟ್ಟ ಮರಗಿಡಗಳು ಹಾಗೂ ಬೆಟ್ಟದ ಅಪಾಯಕಾರಿ ಪ್ರದೇಶಗಳ ಮೇಲೆ ನಿಗಾ ಇರಿಸಲಾಗಿದೆ.

ಸಮುದ್ರ ಮಟ್ಟದಿಂದ ಸುಮಾರು 4,800 ಅಡಿ ಎತ್ತರದಲ್ಲಿರುವ ಶಿವಗಂಗೆ ಬೆಟ್ಟದ ಶಾಂತಲಾ ಡ್ರಾಪ್ ಕಡಿದಾದ ಹಾಗೂ ಅಪಾಯಕಾರಿ ಪ್ರದೇಶವಾಗಿದೆ. ಹೀಗಾಗಿ ಪ್ರತೀಕ್ ಅವರು ಆ ಭಾಗದಲ್ಲಿ ತೆರಳಿರುವ ಸಾಧ್ಯತೆಯನ್ನೂ ಪೊಲೀಸರು ಗಂಭೀರವಾಗಿ ಪರಿಶೀಲಿಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ. ಸಿಸಿಟಿವಿ ದೃಶ್ಯಗಳು, ಮೊಬೈಲ್ ಫೋನ್‌ನ ಕೊನೆಯ ಸ್ಥಳ ಹಾಗೂ ಬೆಟ್ಟದ ವಿವಿಧ ಪ್ರದೇಶಗಳ ಪರಿಶೀಲನೆಯ ಆಧಾರದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರತೀಕ್ ಅವರ ಪತ್ತೆಗೆ ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.