Home Blog

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ; ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು!

0

ಚಾಮರಾಜನಗರ: ಕಾವೇರಿ ವನ್ಯಧಾಮದ ಹೊಳೆ ಮುರಿದಟ್ಟಿ ಕರಿಕಲ್ಲು ಗುಡ್ಡದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಅರಣ್ಯ ರಕ್ಷಕ ಶಿವರಾಜ್ ಸಾಸಲವಾಡೆ ಹಾಗೂ ವಾಚರ್‌ಗಳಾದ ಶಿವಲಿಂಗ ನಾಯ್ಕ ಮತ್ತು ಗಿರೀಶ್ ಅವರಿಗೆ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿಧಾಮದ ಹೊಳೆ ಮುರಿದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಅಂತೋಣಿಸ್ವಾಮಿ, ಡೇವಿಡ್ ಕುಮಾರ್ ಹಾಗೂ ಜಾನ್ ರೋಸ್ ಪೀಟರ್ ಮೃತಪಟ್ಟಿದ್ದರು. ಪ್ರಕರಣದಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾದ ಅರಣ್ಯ ಸಿಬ್ಬಂದಿಯನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

ಇದೀಗ ಪೊಲೀಸರು ದಾಖಲಿಸಿರುವ ಅಪರಾಧ ಸಂಖ್ಯೆ 166/2026ಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕೆಲ ಷರತ್ತುಗಳೊಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಜಾಮೀನಿನ ಷರತ್ತುಗಳೇನು?

ಅರಣ್ಯ ಸಿಬ್ಬಂದಿ ಆದೇಶದ ದಿನಾಂಕದಿಂದ 25 ದಿನಗಳೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗಬೇಕು. ಬಂಧಿಸಿದಲ್ಲಿ ತಲಾ ₹1 ಲಕ್ಷದ ವೈಯಕ್ತಿಕ ಬಾಂಡ್ ಹಾಗೂ ಒಬ್ಬ ಜಾಮೀನುದಾರರನ್ನು ಪಡೆದು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು.

ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಚಾರ್ಜ್‌ಶೀಟ್ ಸಲ್ಲಿಸುವವರೆಗೆ ಪ್ರತಿ ಶನಿವಾರ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಹಾಜರಾತಿ ನೀಡಬೇಕು.

ಅಲ್ಲದೆ, ಸಾಕ್ಷಿಗಳಿಗೆ ಬೆದರಿಕೆ, ಪ್ರಚೋದನೆ ಅಥವಾ ಯಾವುದೇ ರೀತಿಯ ಪ್ರಭಾವ ಬೀರಬಾರದು ಹಾಗೂ ಸಾಕ್ಷ್ಯ ತಿರುಚಬಾರದು ಎಂದು ನ್ಯಾಯಾಲಯ ಸೂಚಿಸಿದೆ.

ಒಟ್ಟಾರೆ, ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದ್ದು, ನ್ಯಾಯಾಲಯದ ಷರತ್ತುಗಳೊಂದಿಗೆ ಅವರು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ.

ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ; 15 ಕಡೆ ಏಕಕಾಲಕ್ಕೆ ಶೋಧ!

0

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಲಾಗಿದೆ.

ಅಬಕಾರಿ ಇಲಾಖೆಯ ಅಕ್ರಮ ಲೈಸೆನ್ಸ್‌ ಹಂಚಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಸತೀಶ್ ಜಾರಕಿಹೊಳಿ ಅವರು ತಮ್ಮ ಪ್ರಭಾವ ಬಳಸಿ 18 ಬಾರ್‌ಗಳಿಗೆ ಅನಧಿಕೃತ ಲೈಸೆನ್ಸ್‌ ನೀಡಲು ನೆರವಾಗಿದ್ದರು ಎಂಬ ಆರೋಪ ಕೇಳಿಬಂದಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಅವರ ಬಾವ ಹಾಗೂ ಅಬಕಾರಿ ಅಧಿಕಾರಿ ವೈ. ಮಂಜುನಾಥ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಈ ಹಿಂದೆ ED ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಅಕ್ರಮ ಹಣ ಹಾಗೂ ಹಲವು ಮಹತ್ವದ ದಾಖಲೆಗಳು ಪತ್ತೆಯಾಗಿದ್ದವು ಎಂದು ತಿಳಿದುಬಂದಿದೆ.

ಅಲ್ಲದೆ, ವಿದೇಶದಲ್ಲಿ ಹಣ ಹೂಡಿಕೆ ಮಾಡಲು ಸತೀಶ್ ಜಾರಕಿಹೊಳಿ ನೆರವು ನೀಡಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಸುಮಾರು ₹3 ಕೋಟಿ ಮೌಲ್ಯದ ವಿದೇಶಿ ಹಣ ಪತ್ತೆಯಾಗಿತ್ತು ಎನ್ನಲಾಗಿದೆ.

ಬಾರ್‌ ಲೈಸೆನ್ಸ್‌ ನೀಡುವಿಕೆ ಹಾಗೂ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಇದೀಗ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಸೇರಿದಂತೆ ವಿವಿಧೆಡೆ ED ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಮುಂಗಾರು ಕೈಕೊಟ್ಟಿದ್ದರಿಂದ ರೈತರಿಗೆ ಸಂಕಷ್ಟ; 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಭೀತಿ

0

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹಲವು ಜಿಲ್ಲೆಗಳಲ್ಲಿ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೆರೆ-ಕಟ್ಟೆಗಳು ಹಾಗೂ ಜಲಮೂಲಗಳಲ್ಲಿ ನೀರಿನ ಕೊರತೆ ಎದುರಾಗಿದ್ದು, ಕೆಲವೆಡೆ ನದಿಗಳಲ್ಲೂ ನೀರಿನ ಹರಿವು ಕಡಿಮೆಯಾಗಿದೆ. ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ಹೆಚ್ಚಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಮೆಕ್ಕೆಜೋಳ, ತೊಗರಿ, ಶೇಂಗಾ, ಸೋಯಾಬೀನ್ ಹಾಗೂ ಹೆಸರು ಸೇರಿದಂತೆ ಹಲವು ಬೆಳೆಗಳು ಮಳೆಯಿಲ್ಲದೆ ಒಣಗಿವೆ.

ಬಿತ್ತನೆ ಬಳಿಕ ಮೊಳಕೆಯೊಡೆದ ಬೆಳೆಗಳಿಗೂ ಮಳೆಯ ಕೊರತೆಯ ಬಿಸಿ ತಟ್ಟಿದ್ದು, ಉಳಿದಿರುವ ಬೆಳೆಗಳೂ ಹೊಲದಲ್ಲೇ ಒಣಗಿ ನಷ್ಟ ಉಂಟಾಗಿದೆ ಎಂದು ರೈತರು ತಿಳಿಸಿದ್ದಾರೆ.

ಬೆಳಗಾವಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಅಗತ್ಯ ನೆರವು ನೀಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಸಮಸ್ಯೆಗೆ ಸರ್ಕಾರ ಸ್ಪಂದಿಸದಿದ್ದರೆ ಬೃಹತ್ ಹೋರಾಟ ನಡೆಸುವುದಾಗಿ ರೈತ ಮುಖಂಡ ಚೂನಪ್ಪ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

ಮಳೆ ಕೊರತೆಯ ಪರಿಣಾಮ ತುಮಕೂರು ಜಿಲ್ಲೆಯಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ. ಕೊರಟಗೆರೆ ತಾಲೂಕಿನ ಕಲ್ಲುಗುಟ್ಟರಹಳ್ಳಿ ಹಾಗೂ ಕೃಷ್ಣರಾಜಪುರ ಭಾಗಗಳಲ್ಲಿ ಬೋರ್‌ವೆಲ್‌ಗಳು ಬತ್ತಿಹೋಗಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಪುರಸಭೆ ಕಚೇರಿ ಎದುರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಮಳೆಯ ಕೊರತೆಯ ಜೊತೆಗೆ ಅಂತರ್ಜಲ ಮಟ್ಟ ಕುಸಿಯುತ್ತಿರುವುದು ಗ್ರಾಮೀಣ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಎರಡನೇ ಹಂತದಲ್ಲಿ 25 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ಎರಡನೇ ಹಂತದ ಪಟ್ಟಿಯನ್ನು ಘೋಷಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದಿರುವುದು ಕೃಷಿ ಕ್ಷೇತ್ರಕ್ಕೆ ದೊಡ್ಡ ಹೊಡೆತ ನೀಡಿದೆ. ಬಿತ್ತನೆ ಮಾಡಿರುವ ರೈತರಿಗೆ ಮಳೆ ಕೈಕೊಟ್ಟಿರುವುದರಿಂದ ಬೆಳೆ ನಷ್ಟದ ಆತಂಕ ಹೆಚ್ಚಾಗಿದೆ.

ಕೆರೆ-ಕಟ್ಟೆಗಳು ಹಾಗೂ ಜಲಮೂಲಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಕೃಷಿ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸುವ ಸಾಧ್ಯತೆ ಇದೆ.

ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಸಮರ್ಪಕ ಸಮೀಕ್ಷೆ ನಡೆಸಿ, ರೈತರಿಗೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಸೆ.17ರಂದು ಮಧುರೈ ಮೀನಾಕ್ಷಿ ದೇವಸ್ಥಾನದ ಮಹಾ ಕುಂಭಾಭಿಷೇಕ; ನವವಧುವಿನಂತೆ ಕಂಗೊಳಿಸಿದ ದೇವಾಲಯ

0

ಮಧುರೈ: ತಮಿಳುನಾಡಿನ ಐತಿಹಾಸಿಕ ಹಾಗೂ ಪ್ರಸಿದ್ಧ ಮಧುರೈ ಅರುಳ್ಮಿಗು ಮೀನಾಕ್ಷಿ ಸುಂದರೇಶ್ವರರ್ ದೇವಸ್ಥಾನದ ಮಹಾ ಕುಂಭಾಭಿಷೇಕ ಮಹೋತ್ಸವ ಸೆಪ್ಟೆಂಬರ್ 17ರಂದು ವೈಭವದಿಂದ ನಡೆಯಲಿದೆ.

ಕುಂಭಾಭಿಷೇಕದ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಸಾಂಪ್ರದಾಯಿಕ ಯಾಗಶಾಲೆ ಪೂಜಾ ವಿಧಿವಿಧಾನಗಳಿಗೆ ಚಾಲನೆ ನೀಡಲಾಗಿದೆ. ಮಹೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ನೂತನವಾಗಿ ಬಣ್ಣ ಬಳಿಯಲಾಗಿದ್ದು, ದೇವಾಲಯದ ಸೌಂದರ್ಯ ಮತ್ತಷ್ಟು ಹೆಚ್ಚಾಗಿದೆ.

ನವವಧುವಿನಂತೆ ಕಂಗೊಳಿಸುತ್ತಿರುವ ಗೋಪುರಗಳು:

ದೇವಾಲಯದ ಪ್ರಸಿದ್ಧ ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ರಾಜಗೋಪುರಗಳಿಗೆ ನೂತನವಾಗಿ ಬಣ್ಣ ಬಳಿಯಲಾಗಿದೆ. ಮೀನಾಕ್ಷಿ ದೇವಿ ಸನ್ನಿಧಿಯ ಗೋಪುರಕ್ಕೂ ಹೊಸ ಬಣ್ಣ ಬಳಿದು ಅಲಂಕರಿಸಲಾಗಿದೆ.

ರಾತ್ರಿಯ ವೇಳೆ ಎಲ್ಲಾ ಗೋಪುರಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಭಕ್ತರು ಹಾಗೂ ಪ್ರವಾಸಿಗರ ಗಮನ ಸೆಳೆಯುತ್ತಿವೆ.

ಹಲವು ವರ್ಷಗಳ ಬಳಿಕ ನಡೆಯುತ್ತಿರುವ ಈ ಬೃಹತ್ ಕುಂಭಾಭಿಷೇಕ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತ; ಕಾರವಾರ FDA ಪಂಡರಿನಾಥ್ ನಾಯ್ಕ ನಿಧನ!

0

ಕಾರವಾರ: ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ಕಾರವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (FDA) ಪಂಡರಿನಾಥ್ ವಿ. ನಾಯ್ಕ (51) ಮೃತಪಟ್ಟಿದ್ದಾರೆ.

ಮಂಗಳವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ಆಗಮಿಸಿದ್ದ ಪಂಡರಿನಾಥ್ ನಾಯ್ಕ ಅವರು ತಮ್ಮ ಕರ್ತವ್ಯದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಅವರು ಕಚೇರಿಯಲ್ಲೇ ಕುಸಿದುಬಿದ್ದಿದ್ದಾರೆ.

ಇದನ್ನು ಗಮನಿಸಿದ ಕಚೇರಿ ಸಿಬ್ಬಂದಿ ತಕ್ಷಣ ಅವರ ನೆರವಿಗೆ ಧಾವಿಸಿದ್ದಾರೆ. ಬಳಿಕ ತಹಶೀಲ್ದಾರ್ ಅವರ ಜೀಪ್‌ನಲ್ಲಿ ಪಂಡರಿನಾಥ್ ನಾಯ್ಕ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆಸ್ಪತ್ರೆಯಲ್ಲಿ ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರಲಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಪಂಡರಿನಾಥ್ ನಾಯ್ಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರು ದಿಢೀರ್ ಮೃತಪಟ್ಟ ಸುದ್ದಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳಿಗೆ ಆಘಾತ ಉಂಟುಮಾಡಿದೆ. ಪಂಡರಿನಾಥ್ ನಾಯ್ಕ ಅವರ ಅಕಾಲಿಕ ನಿಧನಕ್ಕೆ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.

ಡಿಜಿಟಲ್ ತಂತ್ರಜ್ಞಾನದಿಂದ ಜನರ ಜೀವನ ಸುಲಭ; ಭಾರತದ ಫಿನ್‌ಟೆಕ್ ಸಾಧನೆ ಬಣ್ಣಿಸಿದ ಪ್ರಧಾನಿ ಮೋದಿ

0

ಮುಂಬೈ: ಸರ್ಕಾರದ ಸುಧಾರಣಾ ಕ್ರಮಗಳಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ವೇಗ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮುಂಬೈನಲ್ಲಿ ಮಂಗಳವಾರ ನಡೆದ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ 2026 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಒಂದು ದಶಕದಲ್ಲಿ ಜಾರಿಗೆ ತಂದ ಆರ್ಥಿಕ ಹಾಗೂ ಡಿಜಿಟಲ್ ಸುಧಾರಣೆಗಳಿಂದ ಭಾರತವು ಜಾಗತಿಕ ಫಿನ್‌ಟೆಕ್ ಮತ್ತು ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಪ್ರಮುಖ ಸ್ಥಾನಕ್ಕೇರಿದೆ ಎಂದು ಹೇಳಿದರು.

ಜಾಗತಿಕ ಮಟ್ಟದಲ್ಲಿ UPI ಮೈಲಿಗಲ್ಲು:

ಭಾರತದ UPI ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ವಿಶ್ವದ ಡಿಜಿಟಲ್ ವಹಿವಾಟುಗಳಲ್ಲಿ ಭಾರತ ಪ್ರಮುಖ ಪಾಲು ಹೊಂದಿದೆ ಎಂದು ಮೋದಿ ಹೇಳಿದರು.

ಡಿಜಿಟಲ್ ತಂತ್ರಜ್ಞಾನವು ಕೇವಲ ಹಣಕಾಸು ವಹಿವಾಟುಗಳನ್ನು ಸುಲಭಗೊಳಿಸುವುದಕ್ಕೆ ಸೀಮಿತವಾಗಿಲ್ಲ. ಸಾಮಾನ್ಯ ಜನರ ಜೀವನವನ್ನು ಮತ್ತಷ್ಟು ಸುಲಭಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಅವರು ವಿವರಿಸಿದರು.

ನಿಯಂತ್ರಣ ಸಡಿಲಿಕೆ, ತೆರಿಗೆ ವ್ಯವಸ್ಥೆಯ ಸರಳೀಕರಣ ಹಾಗೂ ಪಾರದರ್ಶಕ ಆಡಳಿತದ ಮೂಲಕ ಭಾರತದಲ್ಲಿ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಮುಂಬರುವ ದಿನಗಳಲ್ಲಿ ದೇಶದ ತಾಂತ್ರಿಕ ಮೂಲಸೌಕರ್ಯ ಮತ್ತು ಸುಧಾರಣಾ ಕ್ರಮಗಳು ಇನ್ನಷ್ಟು ವೇಗ ಪಡೆದುಕೊಳ್ಳಲಿವೆ ಎಂದು ಅವರು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಆರ್ಥಿಕ ಅನಿಶ್ಚಿತತೆ ಮುಂದುವರಿದಿದ್ದರೂ ಭಾರತವು ವಿಶ್ವದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಿರತೆಯನ್ನು ಕಾಯ್ದುಕೊಂಡಿದೆ ಎಂದು ಮೋದಿ ಹೇಳಿದರು.

ಫಿನ್‌ಟೆಕ್, ಹಸಿರು ಇಂಧನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಜಾಗತಿಕ ಹೂಡಿಕೆಗೆ ಭಾರತ ಉತ್ತಮ ತಾಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಜನಧನ್ ಯೋಜನೆ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (DPI) ಮೂಲಕ ಕೋಟ್ಯಂತರ ಜನರನ್ನು ಬ್ಯಾಂಕಿಂಗ್ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗಿದೆ. ಸಾಲ ಹಾಗೂ ವಿವಿಧ ಹಣಕಾಸು ಸೇವೆಗಳನ್ನು ಸಮಾಜದ ತಳಮಟ್ಟದ ಜನರಿಗೂ ತಲುಪಿಸಲು ಇದು ಸಹಕಾರಿಯಾಗಿದೆ ಎಂದು ಪ್ರಧಾನಿ ಹೇಳಿದರು.

‘ವಿಕಸಿತ ಭಾರತ 2047’ ಗುರಿ ಸಾಧಿಸುವಲ್ಲಿ ತಂತ್ರಜ್ಞಾನ ಮತ್ತು ಆರ್ಥಿಕ ನಾವೀನ್ಯತೆಗಳು ಪ್ರಮುಖ ಚಾಲಕ ಶಕ್ತಿಗಳಾಗಲಿವೆ ಎಂದು ನರೇಂದ್ರ ಮೋದಿ ಸ್ಪಷ್ಟಪಡಿಸಿದರು.

ಬೆಂಗಳೂರಿನ ರಸ್ತೆ ಸ್ವಚ್ಛತೆಗೆ ತಂತ್ರಜ್ಞಾನದ ಸ್ಪರ್ಶ; 48 ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರ ಖರೀದಿಗೆ ಸಿದ್ಧತೆ

0

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರಮುಖ ರಸ್ತೆಗಳಲ್ಲಿ ಧೂಳು ಮತ್ತು ಕಸದ ಸಮಸ್ಯೆಗೆ ಕಡಿವಾಣ ಹಾಕಲು ನಗರ ಪಾಲಿಕೆಗಳು ತಂತ್ರಜ್ಞಾನದ ಮೊರೆ ಹೋಗಿವೆ.

ಬೆಂಗಳೂರು ದಕ್ಷಿಣ ಹಾಗೂ ಉತ್ತರ ನಗರ ಪಾಲಿಕೆಗಳ ವ್ಯಾಪ್ತಿಯ ಆರ್ಟಿರಿಯಲ್ ಮತ್ತು ಸಬ್-ಆರ್ಟಿರಿಯಲ್ ರಸ್ತೆಗಳನ್ನು ಸ್ವಚ್ಛಗೊಳಿಸಲು ಅತ್ಯಾಧುನಿಕ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳ ಫೀಲ್ಡ್ ಟ್ರಯಲ್ ಮತ್ತು ತಾಂತ್ರಿಕ ಮೌಲ್ಯಮಾಪನ ನಡೆಯುತ್ತಿದೆ.

ಕ್ಯಾಬಿನೆಟ್ ಅನುಮೋದನೆಯಂತೆ ಒಟ್ಟು 48 ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳನ್ನು ಖರೀದಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ.

ಈಗಾಗಲೇ ಔಟರ್ ರಿಂಗ್ ರೋಡ್, ವೈಟ್‌ಫೀಲ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಹಾಗೂ ಮೇಲ್ಸೇತುವೆಗಳಲ್ಲಿ ಯಂತ್ರಗಳ ಪ್ರಾಯೋಗಿಕ ಕಾರ್ಯಾಚರಣೆ ನಡೆಸಲಾಗಿದೆ. ಜಯನಗರದ ಸೌತ್ ಎಂಡ್ ಸರ್ಕಲ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ತಾಂತ್ರಿಕ ಮೌಲ್ಯಮಾಪನ ತಂಡ ಸ್ಥಳ ಪರಿಶೀಲನೆ ನಡೆಸಿದೆ.

5 ದಿನಗಳ ಕಾಲ ತಾಂತ್ರಿಕ ಪರೀಕ್ಷೆ:

ಪ್ರಾಯೋಗಿಕ ಪರೀಕ್ಷೆಯನ್ನು ಒಟ್ಟು 5 ದಿನಗಳ ಕಾಲ ನಡೆಸಲಾಗುತ್ತಿದ್ದು, ಯಂತ್ರಗಳ ಸಾಮರ್ಥ್ಯ, ಕಾರ್ಯಕ್ಷಮತೆ ಹಾಗೂ ರಸ್ತೆ ಸ್ವಚ್ಛತೆಯಲ್ಲಿ ಅವುಗಳ ಪರಿಣಾಮಕಾರಿತ್ವವನ್ನು ಪರಿಶೀಲಿಸಲಾಗುತ್ತಿದೆ.

ಈ ಯಂತ್ರಗಳ ಬಳಕೆಯಿಂದ ಪ್ರಮುಖ ರಸ್ತೆಗಳಲ್ಲಿ ಧೂಳು, ಕಸ ಹಾಗೂ ರಸ್ತೆ ಬದಿಯ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ತೆರವುಗೊಳಿಸಲು ಸಾಧ್ಯವಾಗಲಿದೆ. ಯೋಜನೆ ಸಂಪೂರ್ಣವಾಗಿ ಜಾರಿಗೆ ಬಂದರೆ ದಕ್ಷಿಣ ಮತ್ತು ಉತ್ತರ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಧೂಳಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ.

ಸಾರ್ವಜನಿಕ ಆರೋಗ್ಯಕ್ಕೂ ಅನುಕೂಲ:

ರಸ್ತೆಗಳಲ್ಲಿ ಧೂಳಿನ ಪ್ರಮಾಣ ಕಡಿಮೆಯಾಗುವುದರಿಂದ ವಾಯು ಗುಣಮಟ್ಟ ಸುಧಾರಿಸುವುದರ ಜತೆಗೆ ಸಾರ್ವಜನಿಕ ಆರೋಗ್ಯಕ್ಕೂ ಅನುಕೂಲವಾಗಲಿದೆ. ಸ್ವಚ್ಛ ರಸ್ತೆಗಳು ವಾಹನ ಸಂಚಾರಕ್ಕೂ ಮತ್ತಷ್ಟು ಅನುಕೂಲ ಕಲ್ಪಿಸಲಿವೆ.

ಬೆಳೆಯುತ್ತಿರುವ ಬೆಂಗಳೂರಿನ ರಸ್ತೆ ಸ್ವಚ್ಛತೆಗೆ ಆಧುನಿಕ ತಂತ್ರಜ್ಞಾನ ಅಳವಡಿಸುವ ಅಗತ್ಯವಿದ್ದು, ಪ್ರಸ್ತುತ ನಡೆಯುತ್ತಿರುವ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳ ಪರೀಕ್ಷೆ ಯಶಸ್ವಿಯಾದರೆ ನಗರದ ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತೆ ಕಾಪಾಡಲು ಇದು ಮಹತ್ವದ ಹೆಜ್ಜೆಯಾಗಲಿದೆ.

ಗದಗ ಜಿಲ್ಲೆಯಲ್ಲಿ ಡಿಜೆ ಸೌಂಡ್‌ಗೆ ಬ್ರೇಕ್: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಹಾಗೂ ಜನಸಾಮಾನ್ಯರ ನೆಮ್ಮದಿಯ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಡಿಜೆ ವ್ಯವಸ್ಥೆ, ಬಾಸ್ ಬೂಸ್ಟರ್, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್‌ಗಿಂತ ಹೆಚ್ಚಿನ ಶಬ್ದ ಉಂಟುಮಾಡುವ ಶಬ್ದವರ್ಧಕ ಸಾಧನಗಳ ಬಳಕೆಯನ್ನು ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮಗಳು) ನಿಯಮಗಳು, 2000 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS), 2023ರ ಕಲಂ 163ರಡಿ ಜಿಲ್ಲಾಧಿಕಾರಿಗಳಿಗೆ ಪ್ರದತ್ತವಾಗಿರುವ ಅಧಿಕಾರ ಬಳಸಿ ಈ ಆದೇಶ ಜಾರಿಗೊಳಿಸಲಾಗಿದೆ.

ವಸತಿ ಪ್ರದೇಶಗಳು ಹಾಗೂ ಆಸ್ಪತ್ರೆ, ಶಾಲೆ, ನ್ಯಾಯಾಲಯ ಮತ್ತು ಧಾರ್ಮಿಕ ಸ್ಥಳಗಳ 100 ಮೀಟರ್ ವ್ಯಾಪ್ತಿಯ ಸೈಲೆಂಟ್ ಝೋನ್‌ಗಳಲ್ಲಿ ಹೆಚ್ಚಿನ ಶಬ್ದ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗಿದೆ. ಇಳಿಜಾರು ರಸ್ತೆಗಳು, ಸಂಚಾರ ದಟ್ಟಣೆ ಪ್ರದೇಶಗಳು ಹಾಗೂ ಇತರ ಸೂಕ್ಷ್ಮ ಪ್ರದೇಶಗಳಲ್ಲೂ ಶಬ್ದ ನಿಯಂತ್ರಣ ಕಡ್ಡಾಯವಾಗಿದೆ.

ಅಲ್ಲದೆ, ಜಿಲ್ಲೆಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ ಹಾಗೂ ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆದೇಶ ಉಲ್ಲಂಘನೆ ಕಂಡುಬಂದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಅಥವಾ ಮೆರವಣಿಗೆಯನ್ನು ತಕ್ಷಣ ಸ್ಥಗಿತಗೊಳಿಸಬಹುದು. ಡಿಜೆ ಹಾಗೂ ಶಬ್ದವರ್ಧಕ ಉಪಕರಣಗಳನ್ನು ಜಪ್ತಿ ಮಾಡುವುದು, ಅಗತ್ಯವಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಹಾಗೂ ಗುಂಪನ್ನು ಚದುರಿಸುವ ಕ್ರಮ ಕೈಗೊಳ್ಳಬಹುದು.

ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸುವುದರ ಜೊತೆಗೆ ನೀಡಿರುವ ಅನುಮತಿಗಳನ್ನು ರದ್ದುಪಡಿಸುವ ಅಧಿಕಾರವೂ ಸಂಬಂಧಿಸಿದ ಅಧಿಕಾರಿಗಳಿಗೆ ನೀಡಲಾಗಿದೆ.

ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆಯಲ್ಲಿ ಹೆಚ್ಚಿನ ಶಬ್ದ ವ್ಯವಸ್ಥೆ ಬಳಸಬೇಕಾದರೆ ಪೂರ್ವ ಲಿಖಿತ ಅನುಮತಿ ಪಡೆಯಬೇಕು. ನಿಗದಿತ ಶಬ್ದಮಿತಿಯೊಳಗಿನ ಸಾಧನಗಳನ್ನಷ್ಟೇ ಬಳಸಬೇಕು. ಶಬ್ದ ಮಾಲಿನ್ಯ ನಿಯಮಗಳನ್ನು ಪಾಲಿಸುವ ಕುರಿತು ಆಯೋಜಕರು ಲಿಖಿತ ಮುಚ್ಚಳಿಕೆ ನೀಡಬೇಕು.

ಆದೇಶ ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೋಜಕರೇ ಸಂಪೂರ್ಣ ಹೊಣೆಗಾರರಾಗಿರುತ್ತಾರೆ. ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಜನರ ನೆಮ್ಮದಿಗೆ ಧಕ್ಕೆ ಉಂಟಾಗದಂತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

— ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಗಣೇಶೋತ್ಸವಕ್ಕೆ ಪಿಓಪಿ, ಡಿಜೆ ನಿಷೇಧ: ತಹಸೀಲ್ದಾರ್ ಕೆ. ರಾಘವೇಂದ್ರ ರಾವ್

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮುಂಬರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪಿಓಪಿ ಗಣಪತಿ ವಿಗ್ರಹ ಹಾಗೂ ಡಿಜೆ ಬಳಕೆಯನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಹಬ್ಬವನ್ನು ಆಚರಿಸಬೇಕು. ನಿಯಮ ಉಲ್ಲಂಘಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಎಚ್ಚರಿಸಿದರು.

ಮಂಗಳವಾರ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪಿಸುವ ಮಂಡಳಿಗಳು ಸ್ಥಳೀಯ ಸಂಸ್ಥೆಯಿಂದ ನಿರಾಪೇಕ್ಷಣಾ ಪತ್ರ (ಎನ್‌ಒಸಿ) ಪಡೆದು, ಪೊಲೀಸ್, ಹೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಯಿಂದ ಅಗತ್ಯ ಪರವಾನಗಿ ಪಡೆಯುವುದು ಕಡ್ಡಾಯ. ಏಕಗವಾಕ್ಷಿ ವ್ಯವಸ್ಥೆಯಡಿ ಪರಿಶೀಲನೆ ನಡೆಸಿ ಪರವಾನಗಿ ನೀಡಲಾಗುವುದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಅನುಮತಿ ಪಡೆದ ಪಟಾಕಿ ವ್ಯಾಪಾರಿಗಳು ಮಾತ್ರ ಪಟ್ಟಣದ ಹೊರವಲಯದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಪಟಾಕಿ ಮಾರಾಟ ಮಾಡಬೇಕು. ಅನಧಿಕೃತವಾಗಿ ಮಾರಾಟ ಮಾಡಿದರೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಪಿಎಸ್‌ಐ ಈರಪ್ಪ ರಿತ್ತಿ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪಿಸುವ ಸಂಘಟಕರು ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಜಿಲ್ಲಾಧಿಕಾರಿಗಳ ಆದೇಶದಂತೆ ಡಿಜೆ ಹಾಗೂ ಹೆಚ್ಚಿನ ಡೆಸಿಬೆಲ್‌ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ಎಲ್ಲರೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂಗಾರು ಮಳೆ ಕೊರತೆ ಎಫೆಕ್ಟ್; ಕರ್ನಾಟಕದಲ್ಲಿ 4.28 ಲಕ್ಷ ಹೆಕ್ಟೇರ್ ಭತ್ತದ ಬಿತ್ತನೆ ಇಳಿಕೆ!

0

ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಪರಿಣಾಮ ಭತ್ತದ ಬಿತ್ತನೆ ಪ್ರಮಾಣ ಗಣನೀಯವಾಗಿ ಕುಸಿದಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕರ್ನಾಟಕದಲ್ಲಿ 4.28 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬಿತ್ತನೆ ಕಡಿಮೆಯಾಗಿದೆ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲೇ ಭತ್ತದ ಬಿತ್ತನೆ ಪ್ರಮಾಣದಲ್ಲಿ ಅತಿ ಹೆಚ್ಚು ಇಳಿಕೆ ಕಂಡುಬಂದಿದೆ.

ದೇಶಾದ್ಯಂತವೂ ಭತ್ತದ ಬಿತ್ತನೆ ಪ್ರಮಾಣ ಕುಸಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 438.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದ್ದರೆ, ಈ ವರ್ಷ ಅದು 421.82 ಲಕ್ಷ ಹೆಕ್ಟೇರ್‌ಗೆ ಇಳಿಕೆಯಾಗಿದೆ. ಅಂದರೆ ದೇಶದಲ್ಲಿ ಒಟ್ಟಾರೆ 16.37 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬಿತ್ತನೆ ಕಡಿಮೆಯಾಗಿದ್ದು, ಶೇ.3.71ರಷ್ಟು ಕುಸಿತ ದಾಖಲಾಗಿದೆ.

ಪ್ರಮುಖ ಭತ್ತ ಬೆಳೆಯುವ ಜಿಲ್ಲೆಗಳಲ್ಲೂ ಹಿನ್ನಡೆ:

ಕರ್ನಾಟಕದಲ್ಲಿ ಭತ್ತ ಬೆಳೆಯುವ ಪ್ರಮುಖ ಜಿಲ್ಲೆಗಳಾದ ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ಶಿವಮೊಗ್ಗ, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ಮಂದಗತಿಗೆ ತಲುಪಿವೆ.

ವಿಶೇಷವಾಗಿ ಜೂನ್ ಮತ್ತು ಜುಲೈ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ಭತ್ತದ ಬಿತ್ತನೆ ಮೇಲೆ ನೇರ ಪರಿಣಾಮ ಬೀರಿದೆ. ನೀರಿನ ಲಭ್ಯತೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ಬಿತ್ತನೆಯನ್ನು ಮುಂದೂಡುವ ಅಥವಾ ಪರ್ಯಾಯ ಬೆಳೆಗಳತ್ತ ಮುಖ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಬಳಿಕ ತೆಲಂಗಾಣದಲ್ಲಿ 3.61 ಲಕ್ಷ ಹೆಕ್ಟೇರ್, ಆಂಧ್ರಪ್ರದೇಶದಲ್ಲಿ 1.91 ಲಕ್ಷ ಹೆಕ್ಟೇರ್, ಉತ್ತರ ಪ್ರದೇಶದಲ್ಲಿ 1.84 ಲಕ್ಷ ಹೆಕ್ಟೇರ್ ಹಾಗೂ ಮಧ್ಯಪ್ರದೇಶದಲ್ಲಿ 1.75 ಲಕ್ಷ ಹೆಕ್ಟೇರ್ ಭತ್ತದ ಬಿತ್ತನೆ ಇಳಿಕೆಯಾಗಿದೆ.

ದ್ವಿದಳ ಧಾನ್ಯ ಬಿತ್ತನೆಯಲ್ಲೂ ಕರ್ನಾಟಕ ಹಿನ್ನಡೆ:

ಭತ್ತದ ಜತೆಗೆ ದ್ವಿದಳ ಧಾನ್ಯಗಳ ಬಿತ್ತನೆಯಲ್ಲೂ ಕರ್ನಾಟಕ ಹಿನ್ನಡೆ ಕಂಡಿದೆ. ದೇಶದಲ್ಲಿ ದ್ವಿದಳ ಧಾನ್ಯಗಳ ಬಿತ್ತನೆ ಪ್ರಮಾಣ ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ. ಕಳೆದ ವರ್ಷ 115.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯ ಬಿತ್ತನೆಯಾಗಿದ್ದರೆ, ಈ ವರ್ಷ ಅದು 117.13 ಲಕ್ಷ ಹೆಕ್ಟೇರ್‌ಗೆ ಏರಿಕೆಯಾಗಿದೆ. ಒಟ್ಟಾರೆ 1.84 ಲಕ್ಷ ಹೆಕ್ಟೇರ್‌ ಹೆಚ್ಚಳ ದಾಖಲಾಗಿದೆ.

ಆದರೆ ಕರ್ನಾಟಕದಲ್ಲಿ ಮಾತ್ರ 2.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯಗಳ ಬಿತ್ತನೆ ಕಡಿಮೆಯಾಗಿದೆ. ಮಹಾರಾಷ್ಟ್ರದಲ್ಲಿ 2.60 ಲಕ್ಷ ಹೆಕ್ಟೇರ್ ಹಾಗೂ ಒಡಿಶಾದಲ್ಲಿ 0.61 ಲಕ್ಷ ಹೆಕ್ಟೇರ್ ಇಳಿಕೆ ಕಂಡುಬಂದಿದೆ.

ಇದಕ್ಕೆ ವಿರುದ್ಧವಾಗಿ ಉತ್ತರ ಪ್ರದೇಶದಲ್ಲಿ 3.97 ಲಕ್ಷ ಹೆಕ್ಟೇರ್, ಜಾರ್ಖಂಡ್‌ನಲ್ಲಿ 0.98 ಲಕ್ಷ, ತೆಲಂಗಾಣದಲ್ಲಿ 0.90 ಲಕ್ಷ, ರಾಜಸ್ಥಾನದಲ್ಲಿ 0.57 ಲಕ್ಷ ಹಾಗೂ ಮಧ್ಯಪ್ರದೇಶದಲ್ಲಿ 0.38 ಲಕ್ಷ ಹೆಕ್ಟೇರ್ ದ್ವಿದಳ ಧಾನ್ಯಗಳ ಬಿತ್ತನೆ ಹೆಚ್ಚಾಗಿದೆ.

ರೈತರಲ್ಲಿ ಹೆಚ್ಚಿದ ಆತಂಕ:

ಒಟ್ಟಾರೆ, ಮುಂಗಾರು ಮಳೆಯ ಕೊರತೆ ಕರ್ನಾಟಕದ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತಿದೆ. ಪ್ರಮುಖ ಆಹಾರ ಬೆಳೆಗಳಾದ ಭತ್ತ ಮತ್ತು ದ್ವಿದಳ ಧಾನ್ಯಗಳ ಬಿತ್ತನೆ ಪ್ರಮಾಣ ಕುಸಿದಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಮಳೆ ಹಾಗೂ ನೀರಿನ ಲಭ್ಯತೆ ಹೇಗಿರಲಿದೆ ಎಂಬುದರ ಮೇಲೆ ಕೃಷಿ ಚಟುವಟಿಕೆಗಳ ಪ್ರಗತಿ ಅವಲಂಬಿತವಾಗಿದೆ.