ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಮುನೇಶ್ವರ ಸ್ವಾಮಿ ದೇವಾಲಯದ ಮೂರ್ತಿಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ನಡೆದಿದೆ.
ಗ್ರಾಮದ ಮಜ್ಜಿಗೆಪುರ ರಸ್ತೆಯಲ್ಲಿರುವ ಮುನೇಶ್ವರ ಸ್ವಾಮಿ ದೇಗುಲದಲ್ಲಿ ತಡರಾತ್ರಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ದುಷ್ಕರ್ಮಿಗಳು ದೇವಾಲಯದ ಮೂರ್ತಿಯ ಮುಖದ ಭಾಗವನ್ನು ವಿರೂಪಗೊಳಿಸಿದ್ದಾರೆ. ಬೆಳಗ್ಗೆ ಈ ವಿಚಾರ ಗ್ರಾಮಸ್ಥರ ಗಮನಕ್ಕೆ ಬರುತ್ತಿದ್ದಂತೆ ಸ್ಥಳದಲ್ಲಿ ಆತಂಕ ಹಾಗೂ ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ.
ಪವಿತ್ರ ಸ್ಥಳದಲ್ಲಿ ಇಂತಹ ಕೃತ್ಯ ಎಸಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣದ ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕೆಆರ್ಎಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಾಲಯದ ಸುತ್ತಮುತ್ತಲಿನ ಮಾಹಿತಿ ಹಾಗೂ ಲಭ್ಯವಿರುವ ಸುಳಿವುಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರ ಮೃತದೇಹ ಹೊರವಲಯದ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ನವೀನ್ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕೆಎಸ್ಆರ್ಪಿ 3ನೇ ಬೆಟಾಲಿಯನ್ನಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ನವೀನ್, ಸದ್ಯ ಬೆಂಗಳೂರು ಐಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ನವೀನ್ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ಕಾರೊಂದು ನದಿಗೆ ಬಿದ್ದು, ಅದರೊಳಗೆ ಸಿಲುಕಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿರುವ ಘಟನೆ ನಡೆದಿದೆ.
ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಮೀನುಗಾರ ಗಣೇಶ್ ಚೆನ್ನಂಗಡಿ, ತಕ್ಷಣ ನದಿಗೆ ಧುಮುಕಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ನೀರಿನ ಸೆಳೆತದ ನಡುವೆಯೂ ಧೈರ್ಯದಿಂದ ಕಾರ್ಯಾಚರಣೆ ನಡೆಸಿ ಕಾರಿನೊಳಗೆ ಸಿಲುಕಿದ್ದ ಚಾಲಕ ಹಾಗೂ ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಗಣೇಶ್ ಅವರ ಸಮಯಪ್ರಜ್ಞೆ ಹಾಗೂ ಸಾಹಸದಿಂದ ಇಬ್ಬರ ಜೀವ ಉಳಿದಿದ್ದು, ಅವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಪಾರಿವಾಳ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನೊಬ್ಬನ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಶ್ರೀನಿವಾಸ ನಗರದಲ್ಲಿ ನಡೆದಿದೆ.
ಶಿವು ಅಲಿಯಾಸ್ ಬಸವ ಎಂಬಾತ ಪಾರಿವಾಳ ಸಾಕಾಣಿಕೆ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಪ್ರದೇಶದ ಬಾಲಕನೊಬ್ಬ ಪಾರಿವಾಳ ಕದಿಯಲು ಬಂದಿದ್ದಾನೆ ಎಂದು ಆರೋಪಿಸಿ, ಆತನನ್ನು ಕಟ್ಟಿ ಹಾಕಿ ಶಿವು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಹಲ್ಲೆಯಿಂದ ಬಾಲಕ ಗಾಯಗೊಂಡಿದ್ದು, ಘಟನೆ ಬಳಿಕ ಆರೋಪಿ ಶಿವು ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಗದಗ: ಗದಗ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸದಿರುವುದಕ್ಕೆ ರೈತರ ಆಕ್ರೋಶ ಕಟ್ಟೆಯೊಡೆದ ಬೆನ್ನಲ್ಲೇ ಶಾಸಕ ಎಚ್.ಕೆ. ಪಾಟೀಲ್ ಸರ್ಕಾರಕ್ಕೆ ಖಡಕ್ ಗಡುವು ನೀಡಿದ್ದಾರೆ.
ಅಕ್ಟೋಬರ್ 10ರೊಳಗೆ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಘೋಷಿಸಿರುವುದು ಹೋರಾಟದ ಕಾವು ಮತ್ತಷ್ಟು ಹೆಚ್ಚಿಸಿದೆ.
ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ರೈತರು ಭಾನುವಾರ ಭಾರೀ ಪ್ರತಿಭಟನೆ ನಡೆಸಿದರು. ಪಟ್ಟಣದ ಗಣೇಶ ಗುಡಿಯಿಂದ ಬಸಾಪುರ ಕ್ರಾಸ್ವರೆಗೆ ಮೆರವಣಿಗೆ ನಡೆಸಿದ ರೈತರು, ಬಳಿಕ ಗದಗ–ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ಹೊರಹಾಕಿದರು.
ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಚ್.ಕೆ. ಪಾಟೀಲ್, ಹೋರಾಟಕ್ಕೆ ಬೆಂಬಲ ಸೂಚಿಸುವುದರ ಜೊತೆಗೆ ಸರ್ಕಾರದ ಕ್ರಮದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗದಗ ತಾಲೂಕಿನಲ್ಲಿ ಶೇ.49ರಷ್ಟು ಮಳೆ ಕೊರತೆಯಾಗಿದ್ದರೂ, ಸರ್ಕಾರದ ಮೂರನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಗದಗವನ್ನು ಕೈಬಿಟ್ಟಿರುವುದಕ್ಕೆ ಅವರು ಪ್ರಶ್ನೆ ಎತ್ತಿದರು.
ಜಿಲ್ಲಾಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿ ಗದಗದ ಬರ ಪರಿಸ್ಥಿತಿಯ ಕುರಿತು ಚರ್ಚಿಸಲಾಗಿತ್ತು. ಅಧಿಕಾರಿಗಳ ವರದಿ ಬಳಿಕ ಮುಖ್ಯಮಂತ್ರಿಗಳು ಗದಗ ಜಿಲ್ಲೆಗೆ ಭೇಟಿ ನೀಡಿ ಕದಾಂಪುರದಿಂದ ಕುರ್ತಕೋಟಿವರೆಗೆ ಬೆಳೆ ಹಾನಿ ವೀಕ್ಷಣೆ ನಡೆಸಿದ್ದರು. ಇಷ್ಟೆಲ್ಲಾ ಆದರೂ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಎಚ್.ಕೆ. ಪಾಟೀಲ್ ಹೇಳಿದರು.
ರೈತರ ಪರಿಸ್ಥಿತಿ ತನಗೆ ಅರಿವಿದ್ದು, ರೈತ ಕುಟುಂಬದಿಂದ ಬಂದವನಾಗಿ ಅವರ ಸಂಕಷ್ಟವನ್ನು ಅರ್ಥಮಾಡಿಕೊಂಡಿದ್ದೇನೆ ಎಂದು ಹೇಳಿದ ಅವರು, ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಪ್ರಯತ್ನ ನಡೆಸುವುದಾಗಿ ತಿಳಿಸಿದರು.
ಮೂರು ದಿನಗಳಲ್ಲಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಹೇಳಿದ ಅವರು, ಅದು ಸಾಧ್ಯವಾಗದಿದ್ದರೆ ವಿಧಾನಸಭೆಯ ಮೂಲಕ ಸರ್ಕಾರಕ್ಕೆ ಅಕ್ಟೋಬರ್ 10ರ ಗಡುವು ನೀಡುವುದಾಗಿ ಸ್ಪಷ್ಟಪಡಿಸಿದರು. ಆ ಗಡುವಿನೊಳಗೆ ಗದಗ ತಾಲೂಕು ಬರಪೀಡಿತ ಎಂದು ಘೋಷಣೆಯಾಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.
ಇದೇ ವೇಳೆ ಉತ್ತರ ಕರ್ನಾಟಕದ 73 ತಾಲೂಕುಗಳ ಪೈಕಿ 27 ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಎಚ್.ಕೆ. ಪಾಟೀಲ್ ತಿಳಿಸಿದರು. ಗದಗ ಸೇರಿದಂತೆ ಉತ್ತರ ಕರ್ನಾಟಕದ ಉಳಿದ ತಾಲೂಕುಗಳನ್ನೂ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಪರಿಹಾರ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಬರ ಘೋಷಣೆಗೆ ಆಗ್ರಹಿಸಿ ನಡೆದ ರೈತರ ಹೆದ್ದಾರಿ ತಡೆ ಪ್ರತಿಭಟನೆಯಿಂದ ಮುಳಗುಂದದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತರ ಹೋರಾಟಕ್ಕೆ ಶಾಸಕ ಎಚ್.ಕೆ. ಪಾಟೀಲ್ ನೀಡಿದ ರಾಜೀನಾಮೆ ಗಡುವು ಇದೀಗ ಸರ್ಕಾರದ ಮುಂದಿನ ನಿರ್ಧಾರದತ್ತ ಗಮನ ಸೆಳೆದಿದೆ.
ಆನೇಕಲ್: ರಾತ್ರಿ ಸುರಿದ ಭಾರೀ ಮಳೆಯಿಂದ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಮಳೆ ನೀರು ರಸ್ತೆಯಲ್ಲಿ ನಿಂತಿದ್ದು, ಕೆಸರು ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಹಳೆ ಚಂದಾಪುರದ ಬಳಿ ಕಳೆದ ಒಂದು ವರ್ಷದಿಂದ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಂಡಿಲ್ಲದ ಹಿನ್ನೆಲೆಯಲ್ಲಿ ಮಳೆ ನೀರು ರಸ್ತೆಯಲ್ಲೇ ನಿಂತು, ಸಂಚಾರಕ್ಕೆ ಅಡ್ಡಿಯಾಗಿದೆ. ಪರಿಣಾಮ ಹೆದ್ದಾರಿಯಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಗಂಟೆಗಟ್ಟಲೆ ಟ್ರಾಫಿಕ್ನಲ್ಲಿ ಸಿಲುಕಿದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಸೂರ್ಯನಗರ ಪೊಲೀಸರು ಸ್ಥಳದಲ್ಲಿ ಸಂಚಾರ ನಿರ್ವಹಣೆ ಮಾಡಿದ್ದಾರೆ.
ಪ್ರತಿದಿನ ಕಾಮಗಾರಿ ಹಾಗೂ ಟ್ರಾಫಿಕ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿರುವ ವಾಹನ ಸವಾರರು, ಹೆದ್ದಾರಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಬೆಂಗಳೂರು: ನಡುರಸ್ತೆಯಲ್ಲೇ ಲಾಂಗ್ ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಇಬ್ಬರು ಯುವಕರನ್ನು ತಿಲಕ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನದೀಂ ಹಾಗೂ ಜುನೈದ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಜಯನಗರದ 9ನೇ ಬ್ಲಾಕ್ನಲ್ಲಿ ಇಬ್ಬರು ಲಾಂಗ್ ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಓಡಾಡಿದ್ದರು ಎನ್ನಲಾಗಿದೆ.
ಈ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ತಿಲಕ್ ನಗರ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಇಬ್ಬರನ್ನೂ ಬಂಧಿಸಿ, ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಸ್ಥಳೀಯರು ಹಾಗೂ ವ್ಯಾಪಾರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಮಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ನಡೆದಿದೆ.
ನೂರುನ್ನೀಸಾ (28) ಹಾಗೂ ಅವರ ಪತಿ ಸಿನಾನ್ (32) ನಡುವೆ ಇಂದು ಫೋನ್ನಲ್ಲಿ ಜಗಳ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಕೋಪಗೊಂಡ ನೂರುನ್ನೀಸಾ, ಪತಿಯ ತಂಗಿಯ ಮಗುವಿನ ಜೊತೆಗೆ ತನ್ನ ಮಗುವನ್ನೂ ಬಾವಿಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಬಾವಿಗೆ ಇಳಿದು ಇಬ್ಬರು ಮಕ್ಕಳನ್ನು ಮೇಲಕ್ಕೆತ್ತಿದ್ದಾರೆ. ಆದರೆ ಪತಿಯ ತಂಗಿಯ ಮಗು ಮೃತಪಟ್ಟಿದ್ದು, ನೂರುನ್ನೀಸಾ ಅವರ ಸುಮಾರು ಮೂರೂವರೆ ವರ್ಷದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ನೂರುನ್ನೀಸಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಂಗಳೂರು: ಕೋರಮಂಗಲ ಪೊಲೀಸ್ ಠಾಣೆ ಮುಂಭಾಗ ನಿಲ್ಲಿಸಿದ್ದ ಐಷಾರಾಮಿ ಆಡಿ ಕಾರಿನೊಳಗೆ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬೆಳಗ್ಗೆ ಕಾರಿನ ಬಳಿ ಬಂದ ಹೋಟೆಲ್ ಸಿಬ್ಬಂದಿ ವ್ಯಕ್ತಿಯನ್ನು ಎಬ್ಬಿಸಲು ಪ್ರಯತ್ನಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ರಾತ್ರಿ ಸುಮಾರು 2.36ಕ್ಕೆ ಕೋರಮಂಗಲ ಠಾಣೆ ಮುಂಭಾಗದ ಫಾಸ್ಟ್ಫುಡ್ ಹೋಟೆಲ್ ಬಳಿ KA-51-MG-9786 ನೋಂದಣಿ ಸಂಖ್ಯೆಯ ಆಡಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಬೆಳಗ್ಗೆ ಕಾರಿನ ಬಾಗಿಲು ತೆರೆದಿರುವುದನ್ನು ಗಮನಿಸಿದ ಸಿಬ್ಬಂದಿ ಒಳಗಿದ್ದ ವ್ಯಕ್ತಿಯನ್ನು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಕೋರಮಂಗಲ ಪೊಲೀಸರು ಪರಿಶೀಲನೆ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ದೃಢಪಟ್ಟಿದೆ. ಮೃತರನ್ನು ಸಲೀಂ ಅಕ್ಬರ್ ಎಂದು ಗುರುತಿಸಲಾಗಿದ್ದು, ಅವರು ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು ಎನ್ನಲಾಗಿದೆ.
ವ್ಯವಹಾರ ಸಂಬಂಧ ಬೆಂಗಳೂರಿಗೆ ಬಂದಿದ್ದ ಸಲೀಂ ಅಕ್ಬರ್, ರಾತ್ರಿ ಕಾರನ್ನು ಹೋಟೆಲ್ ಮುಂಭಾಗ ನಿಲ್ಲಿಸಿದ್ದರು ಎನ್ನಲಾಗಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸದ್ಯ ಕೋರಮಂಗಲ ಪೊಲೀಸರು ಹಾಗೂ ಸೋಕೋ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.
ಬೆಂಗಳೂರು: ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಿಕೊಳ್ಳಲು ಹೋಗಿ ಟಿಟಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ.
ನಿನ್ನೆ ಮಧ್ಯರಾತ್ರಿ ದೇವಸ್ಥಾನದ ಬಳಿಯ ರಿಂಗ್ ರಸ್ತೆಯಲ್ಲಿ ಕೆಲವರು ವ್ಹೀಲಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ಟಿಟಿ ವಾಹನ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಮನೋಜ್ ಎಂದು ಗುರುತಿಸಲಾಗಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.