Home Blog

ಮಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಯ ಬರಿಮಾರು ಸಮೀಪದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ವರ್ಷದ ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಕಲ್ಲಡ್ಕ ಶ್ರೀರಾಮ ಶಾಲೆಯ ಯುಕೆಜಿ ವಿದ್ಯಾರ್ಥಿನಿ ಚಿರನ್ವಿ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಶಾಲೆ ಮುಗಿಸಿಕೊಂಡು ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಶಾಲಾ ವಾಹನದ ಮೇಲೆ ಬೃಹತ್ ಮರವೊಂದು ಏಕಾಏಕಿ ಬಿದ್ದಿದೆ.

ಮರ ಬಿದ್ದ ಪರಿಣಾಮ ವಾಹನದಲ್ಲಿದ್ದ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲು ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಚಿರನ್ವಿಯನ್ನು ಆಟೋ ಮೂಲಕ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗ ಮಧ್ಯದಲ್ಲಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನು ಗಾಯಗೊಂಡಿರುವ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲಾ ವಾಹನದ ಮೇಲೆ ಮರ ಬೀಳಲು ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳ ಬಗ್ಗೆ ತನಿಖೆ ಮುಂದುವರಿದಿದೆ.

ಐದು ವರ್ಷದ ಬಾಲಕಿಯ ಸಾವಿನ ಸುದ್ದಿ ಕಲ್ಲಡ್ಕ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕ SIR ಪರಿಷ್ಕರಣೆ: 17.19 ಲಕ್ಷ ಮತದಾರರ ಫಾರ್ಮ್‌ಗಳಿಗೆ ವಂಶಾವಳಿ ಮಾಹಿತಿ ಇಲ್ಲ – ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ 17.19 ಲಕ್ಷ ಎನ್ಯುಮರೇಶನ್ ಫಾರ್ಮ್‌ಗಳು ವಂಶಾವಳಿ ಮಾಹಿತಿ ಇಲ್ಲದೆ ಸಲ್ಲಿಕೆಯಾಗಿವೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ರಾಜ್ಯಾದ್ಯಂತ ಮನೆ-ಮನೆ ಗಣತಿ ವೇಳೆ ಒಟ್ಟು 5.53 ಕೋಟಿ ಎಸ್‌ಐಆರ್ ಫಾರ್ಮ್‌ಗಳನ್ನು ವಿತರಿಸಲಾಗಿದ್ದು, ಈ ಪೈಕಿ ಇದುವರೆಗೆ 3.67 ಕೋಟಿ ಫಾರ್ಮ್‌ಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಒಟ್ಟು ಫಾರ್ಮ್‌ಗಳ ಪೈಕಿ ಶೇ.66.35ರಷ್ಟು ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಆಯೋಗ ತಿಳಿಸಿದೆ.

ಡಿಜಿಟಲೀಕರಣಗೊಂಡ ಫಾರ್ಮ್‌ಗಳಲ್ಲಿ 1.56 ಕೋಟಿ ಮತದಾರರು ಸ್ವಯಂ ಮ್ಯಾಪಿಂಗ್ ಮಾಡಿಕೊಂಡಿದ್ದಾರೆ. 1.93 ಕೋಟಿ ಮತದಾರರ ವಿವರಗಳನ್ನು ವಂಶಾವಳಿ ಮ್ಯಾಪಿಂಗ್ ಮೂಲಕ ಜೋಡಿಸಲಾಗಿದೆ. ಆದರೆ 17.19 ಲಕ್ಷ ಫಾರ್ಮ್‌ಗಳಲ್ಲಿ ಯಾವುದೇ ಮ್ಯಾಪಿಂಗ್ ಮಾಹಿತಿ ಲಭ್ಯವಾಗಿಲ್ಲ.

ಮ್ಯಾಪಿಂಗ್ ವಿವರಗಳಿಲ್ಲದಿದ್ದರೂ ಮತದಾರರು ಆತಂಕಪಡಬೇಕಿಲ್ಲ. ಆಗಸ್ಟ್ 8ರೊಳಗೆ ತಮ್ಮ ಫಾರ್ಮ್‌ಗಳನ್ನು ಮತಗಟ್ಟೆ ಹಂತದ ಅಧಿಕಾರಿಗಳಿಗೆ (BLO) ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (CEO) ವಿ. ಅನ್ಬುಕ್ಕುಮಾರ್ ಮನವಿ ಮಾಡಿದ್ದಾರೆ. ಕುಟುಂಬದ ಯಾವುದೇ ವಯಸ್ಕ ಸದಸ್ಯರು ಕೂಡ ಫಾರ್ಮ್ ಸಲ್ಲಿಸಬಹುದಾಗಿದೆ.

ಫಾರ್ಮ್ ಸಲ್ಲಿಸಿದವರ ಹೆಸರನ್ನು ಆಗಸ್ಟ್ 17ರಂದು ಪ್ರಕಟವಾಗುವ ಕರಡು ಮತದಾರರ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದರೆ ಅಥವಾ ದಾಖಲೆಗಳ ಕೊರತೆ ಇದ್ದರೆ ಮತದಾರರಿಗೆ ನೋಟಿಸ್ ನೀಡಲಾಗುತ್ತದೆ. ಬಳಿಕ ಫಾರ್ಮ್ ಹಿಂಭಾಗದಲ್ಲಿ ಸೂಚಿಸಿರುವ 11 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಿ ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ.

ಇನ್ನು ರಾಜ್ಯದಲ್ಲಿ ASDDO (Absent, Shifted, Dead, Duplicate, Others) ವರ್ಗದಡಿ ಗುರುತಿಸಲಾದ ಮತದಾರರ ಸಂಖ್ಯೆ 44.84 ಲಕ್ಷಕ್ಕೆ ಏರಿಕೆಯಾಗಿದೆ. ಇದರಲ್ಲಿ 5.87 ಲಕ್ಷ ಗೈರುಹಾಜರಿ ಮತದಾರರು, 26.32 ಲಕ್ಷ ಸ್ಥಳಾಂತರಗೊಂಡವರು, 9.81 ಲಕ್ಷ ಮೃತಪಟ್ಟವರು, 2.70 ಲಕ್ಷ ನಕಲಿ ದಾಖಲೆಗಳು ಹಾಗೂ 12,344 ಇತರೆ ಪ್ರಕರಣಗಳು ಸೇರಿವೆ.

ಬೆಂಗಳೂರಿನ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲೇ 23.86 ಲಕ್ಷ ASDDO ಪ್ರಕರಣಗಳು ದಾಖಲಾಗಿವೆ. ಇಲ್ಲಿ ಡಿಜಿಟಲೀಕರಣ ಪ್ರಕ್ರಿಯೆ ಇನ್ನೂ ಶೇ.30ರಷ್ಟು ಮಾತ್ರ ಪೂರ್ಣಗೊಂಡಿದೆ. ಬೆಂಗಳೂರಿನಲ್ಲಿ 4.51 ಲಕ್ಷ ಗೈರುಹಾಜರಿ, 16.62 ಲಕ್ಷ ಸ್ಥಳಾಂತರಗೊಂಡವರು, 2.40 ಲಕ್ಷ ಮೃತಪಟ್ಟವರು, 27,480 ನಕಲಿ ಹಾಗೂ 5,189 ಇತರೆ ಪ್ರಕರಣಗಳು ಪತ್ತೆಯಾಗಿವೆ.

ಇದೇ ವೇಳೆ ಉತ್ತರಹಳ್ಳಿ ಮತ್ತು ಯಲಹಂಕ ವ್ಯಾಪ್ತಿಯ 2002ರ ಮತದಾರರ ಪಟ್ಟಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಆರಂಭದಲ್ಲಿ ಕೆಲವು ಮತಗಟ್ಟೆಗಳ ಪಿಡಿಎಫ್ ದಾಖಲೆಗಳು ಮಾತ್ರ ಅಪ್‌ಲೋಡ್ ಆಗಿದ್ದರಿಂದ ಸಮಸ್ಯೆ ಉಂಟಾಗಿತ್ತು. ಇದೀಗ ಎಕ್ಸೆಲ್ ದಾಖಲೆಗಳನ್ನು ಸಿದ್ಧಪಡಿಸಿ ದೋಷ ಸರಿಪಡಿಸಲಾಗಿದೆ ಎಂದು ಆಯೋಗ ತಿಳಿಸಿದೆ.

ಆನೇಕಲ್‌ನಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಪಿಜಿಯಲ್ಲಿದ್ದ 10ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ!

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಇಂದು ಮುಂಜಾನೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಅವರಿಗೆ ಸೇರಿದ ಪಿಜಿಯಲ್ಲಿ ಈ ಅವಘಡ ಸಂಭವಿಸಿದೆ. ಪಿಜಿಯನ್ನು ಅವರು ಬೇರೆಯವರಿಗೆ ಲೀಸ್ ನೀಡಿದ್ದರು ಎನ್ನಲಾಗಿದೆ. ಬೆಳಗಿನ ಜಾವ ಸುಮಾರು 6 ಗಂಟೆ ವೇಳೆಗೆ ಕಾರ್ಮಿಕರು ಎದ್ದೇಳುತ್ತಿದ್ದ ಸಂದರ್ಭದಲ್ಲಿ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ.

ಸ್ಫೋಟದ ತೀವ್ರತೆಗೆ ಪಿಜಿಯಲ್ಲಿದ್ದವರು ಆತಂಕದಿಂದ ಹೊರಗೆ ಓಡಿಬಂದಿದ್ದಾರೆ. ಈ ಪಿಜಿಯಲ್ಲಿ ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕೆಲಸಕ್ಕಾಗಿ ಬಂದಿದ್ದ ಕಾರ್ಮಿಕರು ವಾಸವಾಗಿದ್ದರು. ಗಾಯಗೊಂಡ ಎಲ್ಲರೂ ಹೊರರಾಜ್ಯದವರಾಗಿದ್ದು, ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸ್ಫೋಟದ ತೀವ್ರತೆಗೆ ಕಟ್ಟಡದ ಕೆಲವು ಭಾಗಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿದೆಯೇ ಅಥವಾ ಬೇರೆ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದೆ.

ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಾಯಾಳುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

4 ದಿನಗಳಿಂದ ಜೋಳದ ತೋಟದಲ್ಲೇ ಇದ್ದ ಆನೆ ಮರಿ: ಸುರಕ್ಷಿತವಾಗಿ ಕಾಡಿಗೆ ಮರಳಿಸಿದ ಸಿಬ್ಬಂದಿ!

ಮೈಸೂರು: ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಮರಿಯಾನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ 6 ಗಂಟೆಗಳ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಕಾಡಿಗೆ ಮರಳಿಸಿದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.

ದಡದಹಳ್ಳಿ ಗ್ರಾಮದ ರೈತ ಮಹಿಳೆ ಸಣ್ಣಮ್ಮ ಅವರಿಗೆ ಸೇರಿದ ಮುಸುಕಿನ ಜೋಳದ ಜಮೀನಿಗೆ ಸುಮಾರು 2 ವರ್ಷದ ಗಂಡಾನೆ ಮರಿ ನುಗ್ಗಿತ್ತು. ಕಳೆದ ನಾಲ್ಕು ದಿನಗಳಿಂದ ಅದೇ ಜಮೀನಿನಲ್ಲಿ ಬೀಡುಬಿಟ್ಟಿದ್ದ ಆನೆ ಮರಿ ಜೋಳದ ಬೆಳೆಯನ್ನು ತಿಂದು, ತುಳಿದು ಹಾನಿಗೊಳಿಸಿತ್ತು. ಇದರಿಂದ ರೈತ ಮಹಿಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ.

ಆನೆ ಮರಿ ಹೊಲದಲ್ಲೇ ಇರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿತ್ತು. ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದರು. ಆನೆ ಮರಿಯನ್ನು ಸುರಕ್ಷಿತವಾಗಿ ಕಾಡಿಗೆ ಕಳುಹಿಸಲು ಮೂರು ಸಾಕಾನೆಗಳನ್ನು ಬಳಸಲಾಯಿತು.

ಕಾರ್ಯಾಚರಣೆ ವೇಳೆ ಆನೆ ಮರಿ ಸಿಬ್ಬಂದಿಯ ಕೈಗೆ ಸಿಗದೆ ಬೆದರಿಕೊಂಡು ಹೊಲದಲ್ಲಿ ಓಡಾಡತೊಡಗಿತು. ಹೀಗಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿದರು.

ಸುಮಾರು 6 ಗಂಟೆಗಳ ಸತತ ಕಾರ್ಯಾಚರಣೆಯ ಬಳಿಕ ಮರಿಯಾನೆಗೆ ಯಾವುದೇ ತೊಂದರೆಯಾಗದಂತೆ ಸುರಕ್ಷಿತವಾಗಿ ಪಕ್ಕದ ಅರಣ್ಯ ಪ್ರದೇಶದತ್ತ ಕಳುಹಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಆನೆ ಮರಿ ಕಾಡಿಗೆ ಮರಳಿದ ಬಳಿಕ ದಡದಹಳ್ಳಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

NEET ಪ್ರತಿಭಟನೆ ಕಾವು: ಜಂತರ್ ಮಂತರ್‌ನಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ; 6ಕ್ಕೂ ಹೆಚ್ಚು ಸಿಬ್ಬಂದಿಗೆ ಗಾಯ!

0

ನವದೆಹಲಿ: ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ.

ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ‘ಸಂಸದ್ ಚಲೋ’ ಕರೆ ನೀಡಲಾಗಿತ್ತು. ಈ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಲಾಠಿಚಾರ್ಜ್ ನಡೆಸಿದ್ದಾರೆ. ಅಲ್ಲದೆ, ಪರಿಸ್ಥಿತಿ ನಿಯಂತ್ರಿಸಲು ಅಶ್ರುವಾಯು ಪ್ರಯೋಗಿಸಲಾಗಿದೆ.

ಟಾಲ್‌ಸ್ಟಾಯ್ ಮಾರ್ಗ ಹಾಗೂ ಜಂತರ್ ಮಂತರ್ ಸುತ್ತಮುತ್ತ ಘರ್ಷಣೆ ತೀವ್ರಗೊಂಡಿದ್ದು, ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಇಬ್ಬರು ಎಸಿಪಿ ದರ್ಜೆಯ ಅಧಿಕಾರಿಗಳು ಸೇರಿದಂತೆ 6ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ನುಸುಳಿದ ಕೆಲ ಕಿಡಿಗೇಡಿಗಳು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಲಾಠಿಗಳನ್ನು ಕಸಿದುಕೊಂಡು ಹಲ್ಲೆ ನಡೆಸಿರುವ ಆರೋಪವೂ ಕೇಳಿಬಂದಿದೆ. ಆಯೋಜಕರ ಮನವಿಯನ್ನೂ ಲೆಕ್ಕಿಸದೆ ಕೆಲವರು ಹಿಂಸಾಚಾರಕ್ಕೆ ಮುಂದಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ದೆಹಲಿ ಹಾಗೂ ಜಂತರ್ ಮಂತರ್ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜ್ಯಾಮರ್‌ಗಳನ್ನು ಅಳವಡಿಸಿ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಹಾಗೂ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕಾರರ ಗುಂಪೊಂದು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ಹಾಗೂ ಬಾಟಲಿಗಳಿಂದ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಸನದಲ್ಲಿ ಕಾಡಾನೆಗಳ ಅಟ್ಟಹಾಸ: 8 ಎಕರೆ ಕಾಫಿ ತೋಟ ಧ್ವಂಸ, ₹6 ಲಕ್ಷಕ್ಕೂ ಅಧಿಕ ನಷ್ಟ!

ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಸುಮಾರು 8 ಎಕರೆ ಪ್ರದೇಶದ ಕಾಫಿ ತೋಟವನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ದಾಳಿಯಿಂದ ಕಾಫಿ, ಅಡಿಕೆ ಹಾಗೂ ಬಾಳೆ ಬೆಳೆಗಳು ನಾಶವಾಗಿದ್ದು, ತೋಟದ ಮಾಲೀಕರಿಗೆ ಸುಮಾರು 6 ಲಕ್ಷ ರೂಪಾಯಿಗೂ ಅಧಿಕ ನಷ್ಟ ಉಂಟಾಗಿದೆ.

ಜಗನ್ನಾಥ್ ಶೆಟ್ಟಿ, ಪ್ರಭಾಕರ್ ಶೆಟ್ಟಿ ಹಾಗೂ ಸ್ವಾಮಿ ಅವರಿಗೆ ಸೇರಿದ ತೋಟಕ್ಕೆ ಮರಿಗಳೊಂದಿಗೆ ಬಂದ 20ಕ್ಕೂ ಹೆಚ್ಚು ಕಾಡಾನೆಗಳು ನುಗ್ಗಿ ಬೆಳೆಗಳನ್ನು ಹಾನಿಗೊಳಿಸಿವೆ. ಕಾಡಾನೆಗಳ ಹಿಂಡು ತೋಟದಲ್ಲೇ ಬೀಡುಬಿಟ್ಟಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

ಮರಿಗಳೂ ಹಿಂಡಿನೊಂದಿಗೆ ಇರುವ ಕಾರಣ ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಎಚ್ಚರಿಕೆಯಿಂದ ನಡೆದುಕೊಳ್ಳುತ್ತಿದ್ದಾರೆ. ಪಟಾಕಿ ಸಿಡಿಸಿ ಕಾಡಾನೆಗಳನ್ನು ಓಡಿಸಿದರೆ ಅವುಗಳು ಆಕ್ರೋಶಗೊಂಡು ಮನುಷ್ಯರ ಮೇಲೆ ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಅಂತಹ ಕ್ರಮಕ್ಕೆ ಸಿಬ್ಬಂದಿ ಹಿಂದೇಟು ಹಾಕಿದ್ದಾರೆ.

ಕಾಡಾನೆಗಳ ಹಾವಳಿಯಿಂದ ತೋಟದ ಮಾಲೀಕರು ಹಾಗೂ ಸುತ್ತಮುತ್ತಲಿನ ರೈತರು ಆತಂಕದಲ್ಲಿದ್ದು, ಶೀಘ್ರದಲ್ಲೇ ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿಗೆ ಮರಳಿಸುವಂತೆ ಹಾಗೂ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ: ಇಂದು ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ರಜೆ!

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಬಿರುಗಾಳಿ ಬೀಸುವ ಎಚ್ಚರಿಕೆಯನ್ನೂ ಇಲಾಖೆ ನೀಡಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ದಾವಣಗೆರೆ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆ ಪ್ರಕಾರ ಜುಲೈ 24ರಂದೂ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ.

ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಗಲ್‌ಬೆಟ್‌ನಲ್ಲಿ 22 ಸೆಂ.ಮೀ. ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 7 ಸೆಂ.ಮೀ., ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 6 ಸೆಂ.ಮೀ., ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯಲ್ಲಿ 6 ಸೆಂ.ಮೀ., ಪುತ್ತೂರು ಹಾಗೂ ಸುಬ್ರಹ್ಮಣ್ಯದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ. ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮೂಡುಬಿದಿರೆಯಲ್ಲಿ ತಲಾ 3 ಸೆಂ.ಮೀ. ಮತ್ತು ರಾಯಚೂರು ಜಿಲ್ಲೆಯ ಕುರ್ಡಿಯಲ್ಲಿ 3 ಸೆಂ.ಮೀ. ಮಳೆಯಾಗಿದೆ.

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜುಲೈ 23ರಂದು ಜಿಲ್ಲೆಯ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ನಿರಂತರ ಮಳೆಯಿಂದ ಭೂಕುಸಿತ ಹಾಗೂ ಪ್ರವಾಹದ ಆತಂಕ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಮನವಿ ಮಾಡಿದೆ.

ಸಣ್ಣ ಮಳೆಗೂ ಮುಳುಗಿದ ಬೆಂಗಳೂರು ರಸ್ತೆ: ಹೆಣ್ಣೂರು-ಬಾಗಲೂರು ಮಾರ್ಗದಲ್ಲಿ ವಾಹನ ಸವಾರರ ಪರದಾಟ

ಬೆಂಗಳೂರು: ಮಧ್ಯಾಹ್ನ ಸುರಿದ ಅಲ್ಪ ಮಳೆಗೆ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸವಾರರು ಪರದಾಡುವಂತಾಗಿದೆ.

ಹೆಣ್ಣೂರು-ಬಾಗಲೂರು ಮುಖ್ಯರಸ್ತೆ (ನ್ಯೂ ಏರ್ಪೋರ್ಟ್ ರಸ್ತೆ) ಜಲಾವೃತಗೊಂಡ ಪರಿಣಾಮ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರು ಪೂರ್ವ ನಗರ ಪಾಲಿಕೆಯ ಹೊರಮಾವು ವಾರ್ಡ್ ವ್ಯಾಪ್ತಿಯಲ್ಲಿ ಮಳೆ ನೀರು ರಸ್ತೆಯಲ್ಲೇ ತುಂಬಿಕೊಂಡಿದ್ದು, ರಸ್ತೆ ಯಾವುದು? ಫುಟ್‌ಪಾತ್ ಯಾವುದು? ಎಂಬ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ನ್ಯೂ ಏರ್ಪೋರ್ಟ್ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸುಮಾರು 3 ಕಿಲೋಮೀಟರ್‌ಗೂ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಿದೆ.

ಪ್ರತಿ ಬಾರಿ ಮಳೆ ಬಂದಾಗ ಬೆಂಗಳೂರಿನ ಹಲವು ಭಾಗಗಳಲ್ಲಿ ಜಲಾವೃತ ಸಮಸ್ಯೆ ಎದುರಾಗುತ್ತಿದ್ದು, ಈ ಬಾರಿ ಕೂಡ ಅಲ್ಪ ಮಳೆಗೆ ರಸ್ತೆಗಳು ಮುಳುಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಮಳೆ ಮುನ್ಸೂಚನೆ:

ಇನ್ನು ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯಲ್ಲಿ ಕೆಲವೆಡೆ ಭಾರಿ ಗಾಳಿಯ ಸಾಧ್ಯತೆ ಇದ್ದು, ಬಳ್ಳಾರಿ, ದಾವಣಗೆರೆ, ಮೈಸೂರು, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

 

IPL ಸಂಸ್ಥಾಪಕ ಲಲಿತ್ ಮೋದಿ ಭಾರತಕ್ಕೆ ಮರಳಲು ಸಿದ್ಧ: 16 ವರ್ಷದ ಹೋರಾಟಕ್ಕೆ ತೆರೆ!

0

ನವದೆಹಲಿ: ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಅವರು ಭಾರತಕ್ಕೆ ವಾಪಸ್ ಆಗುವ ಸುಳಿವು ನೀಡಿದ್ದಾರೆ.

16 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ FEMA ಪ್ರಕರಣದಲ್ಲಿ ರಿಲೀಫ್ ಸಿಕ್ಕಿರುವ ಹಿನ್ನೆಲೆಯಲ್ಲಿ ಈ ವರ್ಷದ ಅಂತ್ಯದಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಭಾರತಕ್ಕೆ ಮರಳುವುದಾಗಿ ತಿಳಿಸಿದ್ದಾರೆ.

2009ರ ಐಪಿಎಲ್ ಎರಡನೇ ಆವೃತ್ತಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಿದ್ದ ವೇಳೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆಯಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ಲಲಿತ್ ಮೋದಿ ವಿರುದ್ಧ ಪ್ರಕರಣ ದಾಖಲಿಸಿತ್ತು.

ಈ ಪ್ರಕರಣದಲ್ಲಿ ಮೇಲ್ಮನವಿ ನ್ಯಾಯಮಂಡಳಿ ಲಲಿತ್ ಮೋದಿ ಅವರಿಗೆ ರಿಲೀಫ್ ನೀಡಿದ್ದು, ಅವರ ಮೇಲಿದ್ದ ದಂಡವನ್ನು ರದ್ದುಗೊಳಿಸಿದೆ. ಈ ತೀರ್ಪಿನಿಂದ 16 ವರ್ಷಗಳ ಕಾನೂನು ಹೋರಾಟ ಅಂತ್ಯಗೊಂಡಿದೆ ಎಂದು ಲಲಿತ್ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

“ನಿನ್ನೆಯ ತೀರ್ಪಿನಿಂದ ನನಗೆ ತುಂಬಾ ಸಂತೋಷವಾಗಿದೆ. 16 ವರ್ಷಗಳಿಂದ ನಾನು ಹೋರಾಡುತ್ತಿದ್ದೆ. ನಾನು ಹೇಳುತ್ತಿದ್ದ ವಿಚಾರಗಳು ಕೊನೆಗೂ ಸತ್ಯ ಎಂದು ಸಾಬೀತಾಗಿದೆ” ಎಂದು ಲಲಿತ್ ಮೋದಿ ಹೇಳಿದ್ದಾರೆ.

“ಐಪಿಎಲ್‌ನ ಒಳಿತನ್ನು ಹೊರತುಪಡಿಸಿ ನನಗೆ ಬೇರೆ ಯಾವುದೇ ಉದ್ದೇಶ ಇರಲಿಲ್ಲ. ಆ ಅಧ್ಯಾಯ ಈಗ ಮುಗಿದಿದೆ. ಜೀವನದಲ್ಲಿ ಮುಂದೆ ಸಾಗಲು ಬಯಸುತ್ತೇನೆ. ಭಾರತಕ್ಕೆ ಮರಳಲು ಎದುರು ನೋಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಭಾರತಕ್ಕೆ ಮರಳುವ ಯೋಜನೆ ಇದೆ ಎಂದು ಹೇಳಿರುವ ಲಲಿತ್ ಮೋದಿ, ತಮ್ಮ ಮಗಳು ಅಕ್ಟೋಬರ್‌ನಲ್ಲಿ ಮೊಮ್ಮಗನೊಂದಿಗೆ ಭಾರತಕ್ಕೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.

2009ರಲ್ಲಿ ಲೋಕಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಐಪಿಎಲ್ ಪಂದ್ಯಾವಳಿಯನ್ನು ದಕ್ಷಿಣ ಆಫ್ರಿಕಾಕ್ಕೆ ಸ್ಥಳಾಂತರಿಸಲಾಗಿತ್ತು. ಈ ವೇಳೆ ಆರ್‌ಬಿಐ ಪೂರ್ವಾನುಮತಿ ಇಲ್ಲದೆ ಸುಮಾರು ₹243.45 ಕೋಟಿ ವಿದೇಶಿ ವಿನಿಮಯ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಇಡಿ ಕ್ರಮ ಕೈಗೊಂಡಿತ್ತು.

ಈ ಸಂಬಂಧ ಲಲಿತ್ ಮೋದಿ ಅವರಿಗೆ ₹10.65 ಕೋಟಿ ದಂಡ ವಿಧಿಸಲಾಗಿತ್ತು. ಆದರೆ ಇದೀಗ ಸಫೆಮಾ ಮೇಲ್ಮನವಿ ನ್ಯಾಯಾಧಿಕರಣವು ಪ್ರಕರಣಗಳನ್ನು ವಜಾಗೊಳಿಸಿ ದಂಡವನ್ನು ರದ್ದುಗೊಳಿಸಿದೆ.

2010ರಿಂದ ಭಾರತದಿಂದ ಹೊರಗಿರುವ ಲಲಿತ್ ಮೋದಿ, ಇದೀಗ ಕಾನೂನು ಅಡೆತಡೆಗಳು ನಿವಾರಣೆಯಾದ ಹಿನ್ನೆಲೆಯಲ್ಲಿ ಸ್ವದೇಶಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ.

 

ಮಡಿಕೇರಿ: ಮನೆಯ ಎದುರೇ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ!

ಮಡಿಕೇರಿ: ಕೊಡಗು ಜಿಲ್ಲೆಯ ಶನಿವಾರಸಂತೆ ಸಮೀಪದ ಹೊಸಗುತ್ತಿ ಗ್ರಾಮದಲ್ಲಿ ಚಿರತೆಯೊಂದು ಮನೆಯ ಸಮೀಪದಿಂದಲೇ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ.

ಈ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.

ಬುಧವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಸ್ಥಳೀಯ ನಿವಾಸಿ ಅರುಣ್ ಅವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದೆ. ಬಳಿಕ ಕ್ಷಣಾರ್ಧದಲ್ಲೇ ಮನೆಯ ಸಮೀಪದಲ್ಲಿದ್ದ ಸಾಕು ನಾಯಿಯನ್ನು ಎಳೆದೊಯ್ದಿದೆ. ಈ ದೃಶ್ಯ ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಕಳೆದ ಕೆಲವು ದಿನಗಳಿಂದ ಆಲೂರು ಸಿದ್ಧಾಪುರ ವ್ಯಾಪ್ತಿಯ ಆಲೂರು, ಮಾಲಂಬಿ ಹಾಗೂ ಹೊಸಗುತ್ತಿ ಭಾಗಗಳಲ್ಲಿ ಚಿರತೆಯ ಓಡಾಟ ನಿರಂತರವಾಗಿ ಕಂಡುಬರುತ್ತಿದೆ. ರಾತ್ರಿ ವೇಳೆಯಲ್ಲಿ ಸಾಕು ನಾಯಿಗಳು ಹಾಗೂ ದನದ ಕೊಟ್ಟಿಗೆಯಲ್ಲಿದ್ದ ಕರುಗಳನ್ನು ಬೇಟೆಯಾಡುತ್ತಿರುವ ಘಟನೆಗಳೂ ವರದಿಯಾಗುತ್ತಿವೆ.

ಚಿರತೆಯ ನಿರಂತರ ಓಡಾಟದಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಅರಣ್ಯ ಇಲಾಖೆ ಕೂಡಲೇ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.