Home Blog

ಕಾವೇರಿ ವಿಚಾರದಲ್ಲಿ ರಾಜಕೀಯ ಬದಿಗಿಟ್ಟು ರಾಜ್ಯದ ಹಿತಕ್ಕಾಗಿ ಒಗ್ಗಟ್ಟಾಗೋಣ; ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾವೇರಿ ನದಿ ನೀರಿನ ವಿಚಾರದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಸಿಎಂ ಡಿಕೆಶಿ, “ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಕಾವೇರಿ ವಿಚಾರವನ್ನು ನಾವೆಲ್ಲರೂ ಮೈಗೆ ಅಂಟಿಸಿಕೊಂಡೇ ಬೆಳೆದಿದ್ದೇವೆ. ರಾಜಕೀಯಕ್ಕಿಂತ ರಾಜ್ಯದ ರೈತರು ಮತ್ತು ಜನರ ಹಿತವೇ ಮುಖ್ಯ” ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯವನ್ನು ಬದಿಗಿಟ್ಟು ಒಟ್ಟಾಗಿ ನಿಲ್ಲುವ ಸಂಪ್ರದಾಯ ಕರ್ನಾಟಕಕ್ಕಿದೆ. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎನ್ನುವುದು ಸರ್ಕಾರದ ನಿಲುವಾಗಿದ್ದು, ಈ ವಿಚಾರದಲ್ಲಿ ಎಲ್ಲರೂ ಸಹಮತ ಹೊಂದಿದ್ದಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಗಳಿಗೂ ಮುನ್ನ ಕೇಂದ್ರ ಸಚಿವರಾದ ಸಿಆರ್ ಪಾಟೀಲ್, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಅವರು ಕೂಡ ಕೇಂದ್ರ ಮಟ್ಟದಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತಿದ್ದಾರೆ ಎಂದು ಸಿಎಂ ಹೇಳಿದರು.

ದೆಹಲಿಯಲ್ಲಿ ನಡೆದ ಸಂಸದೀಯ ಸಭೆಯಲ್ಲೂ ಪಕ್ಷಭೇದ ಮರೆತು ಎಲ್ಲಾ ಸಂಸದರು ರಾಜ್ಯದ ಪರವಾಗಿ ನಿಲ್ಲುವ ಭರವಸೆ ನೀಡಿದ್ದಾರೆ. ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಈ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಸಚಿವರಾದ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್ ಸೇರಿದಂತೆ ಹಲವು ಹಿರಿಯ ನಾಯಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇದಲ್ಲದೆ ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸದ ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಎಚ್.ಕೆ. ಪಾಟೀಲ್, ಬಿ.ಕೆ. ಹರಿಪ್ರಸಾದ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಗಳ ವಿಶೇಷ ಸಲಹೆಗಾರ ಜಿ.ಸಿ. ಚಂದ್ರಶೇಖರ್, ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಮೈದಾನದಿಂದ ದೂರವಾದ್ರೂ ಮುಂದುವರಿಯಲಿದೆ ಆದಾಯ: ಅಜಿಂಕ್ಯ ರಹಾನೆಗೆ ಬಿಸಿಸಿಐ ನೀಡುವ ಪೆನ್ಷನ್ ಎಷ್ಟು?

0

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇತ್ತೀಚೆಗೆ ವಿದಾಯ ಘೋಷಿಸಿರುವ ಟೀಂ ಇಂಡಿಯಾದ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಇದೀಗ ಬಿಸಿಸಿಐನಿಂದ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗಿದ್ದಾರೆ. ಜುಲೈ 30ರಂದು ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಳ್ಳುವ ಮೂಲಕ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ರಹಾನೆ ತೆರೆ ಎಳೆದಿದ್ದರು.

ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ವಿಶ್ವಾಸಾರ್ಹ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಪೈಕಿ ಅಜಿಂಕ್ಯ ರಹಾನೆ ಪ್ರಮುಖ ಸ್ಥಾನ ಹೊಂದಿದ್ದಾರೆ. ವಿಶೇಷವಾಗಿ 2020-21ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿಯ ವೇಳೆ ಹಂಗಾಮಿ ನಾಯಕತ್ವ ವಹಿಸಿ ಭಾರತವನ್ನು ಐತಿಹಾಸಿಕ ಬಾರ್ಡರ್-ಗವಾಸ್ಕರ್ ಟ್ರೋಫಿ ಜಯದತ್ತ ಮುನ್ನಡೆಸಿದ್ದ ರಹಾನೆ ಅವರ ಸಾಧನೆ ಕ್ರಿಕೆಟ್ ಅಭಿಮಾನಿಗಳ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ.

ಭಾರತ ಪರ 85 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ರಹಾನೆ, ಬಿಸಿಸಿಐ ಪಿಂಚಣಿ ಯೋಜನೆಯ ಗರಿಷ್ಠ ಶ್ರೇಣಿಗೆ ಸೇರುತ್ತಾರೆ. 2022ರಲ್ಲಿ ಬಿಸಿಸಿಐ ತನ್ನ ಮಾಜಿ ಆಟಗಾರರಿಗೆ ನೀಡುತ್ತಿದ್ದ ಪಿಂಚಣಿ ಮೊತ್ತವನ್ನು ಪರಿಷ್ಕರಿಸಿ ಹೆಚ್ಚಳ ಮಾಡಿತ್ತು. ಈ ಮೊದಲು ಗರಿಷ್ಠ ಶ್ರೇಣಿಯ ಆಟಗಾರರು ತಿಂಗಳಿಗೆ ₹50,000 ಪಿಂಚಣಿ ಪಡೆಯುತ್ತಿದ್ದರೆ, ಪರಿಷ್ಕೃತ ಯೋಜನೆಯಡಿ ಆ ಮೊತ್ತವನ್ನು ₹70,000ಕ್ಕೆ ಏರಿಸಲಾಗಿದೆ.

ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿಗಳಲ್ಲೊಂದಾದ ಬಿಸಿಸಿಐ, ಮಾಜಿ ಆಟಗಾರರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಿಂಚಣಿ ಯೋಜನೆಯ ಮೂಲಕ ಆರ್ಥಿಕ ಭದ್ರತೆ ಒದಗಿಸುತ್ತಿದೆ. ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪಿಂಚಣಿ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿತ್ತು.

ಬಿಸಿಸಿಐ ನಿಯಮಾವಳಿಗಳ ಪ್ರಕಾರ, ಭಾರತ ಪರ 25ಕ್ಕಿಂತ ಹೆಚ್ಚು ಟೆಸ್ಟ್ ಪಂದ್ಯಗಳನ್ನಾಡಿದ ಆಟಗಾರರು ಗರಿಷ್ಠ ₹70,000 ಮಾಸಿಕ ಪಿಂಚಣಿಗೆ ಅರ್ಹರಾಗುತ್ತಾರೆ. ಹಾಗೆಯೇ 25ರಿಂದ 49 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ ಆಟಗಾರರು ತಿಂಗಳಿಗೆ ₹30,000 ಹಾಗೂ 75ಕ್ಕೂ ಹೆಚ್ಚು ಪ್ರಥಮ ದರ್ಜೆ ಪಂದ್ಯಗಳನ್ನಾಡಿದ ಆಟಗಾರರು ₹45,000 ಪಿಂಚಣಿ ಪಡೆಯುತ್ತಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಅಜಿಂಕ್ಯ ರಹಾನೆಗೆ ಇದೀಗ ಬಿಸಿಸಿಐನ ಪಿಂಚಣಿ ಯೋಜನೆಯ ಮೂಲಕ ಪ್ರತಿ ತಿಂಗಳು ₹70,000 ಪಿಂಚಣಿ ಲಭಿಸಲಿದ್ದು, ಅವರ ದೀರ್ಘಕಾಲದ ಸೇವೆಗೆ ಮತ್ತೊಂದು ಗೌರವ ಸಿಕ್ಕಂತಾಗಿದೆ.

ತಿಮ್ಮಪ್ಪನ ಮೊರೆ ಹೋದ ಹಾರ್ದಿಕ್ ಪಾಂಡ್ಯ: ತಿರುಪತಿಯಲ್ಲಿ ಮುಡಿ ಅರ್ಪಿಸಿ ಗಮನ ಸೆಳೆದ ಸ್ಟಾರ್ ಆಲ್ರೌಂಡರ್!

0

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಗೆಳತಿ ಮಹೀಕಾ ಶರ್ಮಾ ಅವರೊಂದಿಗೆ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಬ್ಬರೂ ಸಾಂಪ್ರದಾಯಿಕ ಬಿಳಿ ಉಡುಪಿನಲ್ಲಿ ದೇವರ ದರ್ಶನ ಪಡೆದು, ಬೆಳಗಿನ ಸುಪ್ರಭಾತ ಸೇವೆಯಲ್ಲೂ ಭಾಗವಹಿಸಿ ಶ್ರೀನಿವಾಸನ ಆಶೀರ್ವಾದ ಪಡೆದರು.

ಈ ವೇಳೆ ಹಾರ್ದಿಕ್ ಪಾಂಡ್ಯ ಮುಡಿ ಸಮರ್ಪಣೆ ಮಾಡಿರುವುದು ಭಕ್ತರು ಹಾಗೂ ಅಭಿಮಾನಿಗಳ ಗಮನ ಸೆಳೆಯಿತು. ಅವರ ಹೊಸ ಲುಕ್‌ನ ಫೋಟೋಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮುಡಿ ಸಮರ್ಪಣೆಯ ಹಿಂದೆ ಯಾವುದೇ ಹರಕೆ ಇದೆಯೇ ಎಂಬ ಬಗ್ಗೆ ಚರ್ಚೆಗಳು ಜೋರಾಗಿವೆ.

ಆದರೆ, ಈ ಕುರಿತು ಹಾರ್ದಿಕ್ ಪಾಂಡ್ಯ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ತಿರುಮಲದಲ್ಲಿ ಭಕ್ತರು ಹರಕೆಯ ರೂಪದಲ್ಲಿ ಕೂದಲು ಸಮರ್ಪಿಸುವ ಸಂಪ್ರದಾಯ ಇರುವ ಹಿನ್ನೆಲೆಯಲ್ಲಿ, ಅದರ ಭಾಗವಾಗಿಯೇ ಅವರು ಮುಡಿ ಕೊಟ್ಟಿರಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಇದೇ ವೇಳೆ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಹಾರ್ದಿಕ್ ಪಾಂಡ್ಯ ಶೀಘ್ರದಲ್ಲೇ ಮತ್ತೆ ಕ್ರಿಕೆಟ್ ಮೈದಾನಕ್ಕಿಳಿಯುವ ನಿರೀಕ್ಷೆಯೂ ಹೆಚ್ಚಿದೆ. ಐಪಿಎಲ್ 2026ರ ಬಳಿಕ ಬೆನ್ನು ಹಾಗೂ ತೊಡೆಯ ಗಾಯದಿಂದ ಅವರು ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಗಾಯದ ಕಾರಣ ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿ ಸೇರಿದಂತೆ ಜಿಂಬಾಬ್ವೆ ವಿರುದ್ಧದ ಸರಣಿಯನ್ನೂ ಅವರು ತಪ್ಪಿಸಿಕೊಂಡಿದ್ದರು.

ಇದೀಗ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪುನರ್ವಸತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದಾಗಿ ವರದಿಯಾಗಿದೆ. ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ಭಾರತದ ಪ್ರಮುಖ ಆಲ್‌ರೌಂಡರ್ ಆಗಿರುವ ಹಾರ್ದಿಕ್ ಪಾಂಡ್ಯ, ಬ್ಯಾಟಿಂಗ್, ಬೌಲಿಂಗ್ ಹಾಗೂ ನಾಯಕತ್ವದ ಮೂಲಕ ತಂಡಕ್ಕೆ ಪ್ರಮುಖ ಬಲವಾಗಿದ್ದಾರೆ. ಆಧ್ಯಾತ್ಮಿಕ ಭೇಟಿ ಬಳಿಕ ಅವರು ಹೊಸ ಉತ್ಸಾಹದೊಂದಿಗೆ ಭಾರತ ತಂಡಕ್ಕೆ ಮರಳಿ ಮತ್ತೆ ಮೈದಾನದಲ್ಲಿ ಮಿಂಚಲಿದ್ದಾರೆ ಎಂಬ ವಿಶ್ವಾಸವನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.

ಕಾವೇರಿ ಮತ್ತು ಮೇಕೆದಾಟು ವಿಚಾರ: ತಮಿಳುನಾಡು ಸಿಎಂ ವಿಜಯ್ʼಗೆ ಬಿ.ವೈ. ವಿಜಯೇಂದ್ರ ಪತ್ರ

ಬೆಂಗಳೂರು: ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರದಲ್ಲಿ ಸಹಕಾರ ನೀಡುವಂತೆ ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಶತಮಾನಗಳಿಂದಲೂ ಇತಿಹಾಸ, ಸಂಸ್ಕೃತಿ, ವಾಣಿಜ್ಯ ಹಾಗೂ ಜನರ ನಡುವಿನ ಆತ್ಮೀಯ ಸಂಬಂಧಗಳ ಮೂಲಕ ಬೆಸೆದುಕೊಂಡಿವೆ ಎಂದು ಪತ್ರದಲ್ಲಿ ವಿಜಯೇಂದ್ರ ಉಲ್ಲೇಖಿಸಿದ್ದಾರೆ.

ಎರಡೂ ರಾಜ್ಯಗಳು ಪರಸ್ಪರ ಗೌರವ ಮತ್ತು ಸದ್ಭಾವನೆಯ ಆಧಾರದ ಮೇಲೆ ಸಹೋದರ ರಾಜ್ಯಗಳಂತೆ ನಡೆದುಕೊಂಡಿವೆ. ಕೋಟ್ಯಂತರ ತಮಿಳು ಜನರು ಕರ್ನಾಟಕವನ್ನು, ಅದರಲ್ಲೂ ವಿಶೇಷವಾಗಿ ಬೆಂಗಳೂರನ್ನು ತಮ್ಮ ನೆಲೆಯನ್ನಾಗಿ ಮಾಡಿಕೊಂಡು ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅದೇ ರೀತಿ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಅಲ್ಲಿನ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನೆರೆಯ ರಾಜ್ಯಗಳ ನಡುವೆ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ಅವುಗಳನ್ನು ಯಾವ ರೀತಿಯಲ್ಲಿ ಬಗೆಹರಿಸುತ್ತೇವೆ ಎಂಬುದು ಮುಖ್ಯ ಎಂದು ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನ ತಿರುಳ್ಳುವರ್ ಪ್ರತಿಮೆ ವಿಚಾರವನ್ನು ಉಲ್ಲೇಖಿಸಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ರಾಜತಾಂತ್ರಿಕ ನಡೆ ಹಾಗೂ ಸಹಕಾರದ ಮೂಲಕ ಆ ಸಮಸ್ಯೆ ಬಗೆಹರಿದಿತ್ತು ಎಂದು ಸ್ಮರಿಸಿದ್ದಾರೆ.

ಇದೇ ಮನೋಭಾವದಿಂದ ಕಾವೇರಿ ನೀರಿನ ವಿಚಾರವನ್ನು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಲು ಬೆಂಗಳೂರಿಗೆ ಭೇಟಿ ನೀಡುತ್ತಿರುವ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು, ಕರ್ನಾಟಕದ ರೈತರು ಹಾಗೂ ನಾಗರಿಕರ ಹಿತದೃಷ್ಟಿಯಿಂದ ವಿಚಾರವನ್ನು ಪರಿಗಣಿಸಬೇಕು ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ.

ಕಾವೇರಿ ನದಿ ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಹಲವು ನಗರಗಳ ಕೋಟ್ಯಂತರ ಜನರ ಜೀವನಾಡಿಯಾಗಿದೆ. ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗರು ಮತ್ತು ತಮಿಳು ಜನರು ಇಬ್ಬರೂ ಕುಡಿಯುವ ನೀರಿಗಾಗಿ ಕಾವೇರಿಯನ್ನೇ ಅವಲಂಬಿಸಿದ್ದಾರೆ. ಅನಿಶ್ಚಿತ ಮುಂಗಾರು ಪರಿಸ್ಥಿತಿಯಲ್ಲಿ ರೈತರು ಹಾಗೂ ಜನರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಮೇಕೆದಾಟು ಯೋಜನೆಯನ್ನು ಸಹಕಾರದ ದೃಷ್ಟಿಯಿಂದ ನೋಡುವಂತೆ ವಿಜಯೇಂದ್ರ ಮನವಿ ಮಾಡಿದ್ದಾರೆ. ತಮಿಳುನಾಡಿನ ನ್ಯಾಯಸಮ್ಮತ ನೀರಿನ ಹಕ್ಕಿಗೆ ಯಾವುದೇ ಧಕ್ಕೆಯಾಗದಂತೆ ಈ ಯೋಜನೆ ಬೆಂಗಳೂರಿನ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವ ಸಾಮರ್ಥ್ಯ ಹೊಂದಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಹಿತಾಸಕ್ತಿಗಳನ್ನು ರಕ್ಷಿಸುವುದರ ಜೊತೆಗೆ ತಮಿಳುನಾಡಿನ ಹಿತವನ್ನೂ ಗೌರವಿಸುವ ರಾಜತಾಂತ್ರಿಕ ನಿಲುವು ಎರಡೂ ರಾಜ್ಯಗಳ ನಡುವಿನ ಐತಿಹಾಸಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲಿದೆ. ಕಾವೇರಿ ಜನರನ್ನು ವಿಭಜಿಸುವ ಬದಲು ಒಗ್ಗೂಡಿಸುವ ಸೇತುವೆಯಾಗಲಿ ಎಂದು ವಿಜಯೇಂದ್ರ ಪತ್ರದ ಮೂಲಕ ಆಶಯ ವ್ಯಕ್ತಪಡಿಸಿದ್ದಾರೆ.

‘ಶಬರಿ’ ಚಿತ್ರದ ‘ತಂದಾನಿ ತನನೋ’ ವಿಡಿಯೊ ಸಾಂಗ್ ಬಿಡುಗಡೆ! ಸಿನಿಮಾ ತಂಡಕ್ಕೆ ಶುಭ ಕೋರಿದ ಗಣ್ಯರು

ಒರಟ ಶ್ರೀ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಶಬರಿ’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆದ ಬೆನ್ನಲ್ಲೇ, ಇದೀಗ ಚಿತ್ರದ ‘ತಂದಾನಿ ತನನೋ’ ವಿಡಿಯೊ ಸಾಂಗ್ ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ನಂತರ ಪ್ರೇಕ್ಷಕರಲ್ಲಿ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ಚಿತ್ರದ ವಿಡಿಯೊ ಸಾಂಗ್ ಅನ್ನು ನಿರ್ದೇಶಕ ಓಂ ಪ್ರಕಾಶ್ ರಾವ್, ರಘು ರಾಮ್, ಬಾಲಾಜಿ ವೀರಾಸ್ವಾಮಿ ಹಾಗೂ ಉದ್ಯಮಿ ವಿ. ಬಾಬು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಓಂ ಪ್ರಕಾಶ್ ರಾವ್ ಮತ್ತು ಬಾಲಾಜಿ ವೀರಾಸ್ವಾಮಿ, ‘ತಂದಾನಿ ತನನೋ’ ಹಾಡು ಅತ್ಯಂತ ಮನಮೋಹಕವಾಗಿ ಮೂಡಿಬಂದಿದ್ದು, ಸಂಗೀತ ನಿರ್ದೇಶಕ ಬಿ.ಆರ್. ಹೇಮಂತ್ ಕುಮಾರ್ ಅವರ ಸಂಗೀತ ಮನಸೂರೆಗೊಳ್ಳುವಂತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ, ಸರೆಗಮಪ ಖ್ಯಾತಿಯ ಅಶ್ವಿನ್ ಶರ್ಮಾ ಅವರ ಗಾಯನ ಹಾಡಿನ ಮೆರುಗು ಹೆಚ್ಚಿಸಿದ್ದು, ನಟ ಸಮರ್ಥ್ ಮತ್ತು ಧನ್ವಿ ತಮ್ಮ ಪಾತ್ರಗಳಲ್ಲಿ ಹೊಸಬರೆನ್ನಿಸದಷ್ಟು ಸಹಜ ಅಭಿನಯ ನೀಡಿದ್ದಾರೆ ಎಂದು ಪ್ರಶಂಸಿಸಿದರು.

ಇದೇ ವೇಳೆ ಮಾತನಾಡಿದ ರಘು ರಾಮ್, ಹೊಸ ಪ್ರತಿಭೆಗಳ ಈ ಪ್ರಯತ್ನ ಶ್ಲಾಘನೀಯವಾಗಿದ್ದು, ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ಚಿತ್ರದ ನಿರ್ದೇಶಕ ಒರಟ ಶ್ರೀ ಅವರೇ ಈ ಹಾಡಿನ ಸಾಹಿತ್ಯವನ್ನು ರಚಿಸಿದ್ದಾರೆ. ಹಾಡು ಸೃಷ್ಟಿಯಾದ ಹಿನ್ನೆಲೆಯನ್ನು ವಿವರಿಸಿದ ಅವರು, ಚಿತ್ರದಲ್ಲಿ ಸಮರ್ಥ್ ಮತ್ತು ಧನ್ವಿ ಮಾತ್ರವಲ್ಲದೆ ಜೀಪ್ ಕೂಡ ಪ್ರಮುಖ ಪಾತ್ರದಂತೆಯೇ ಕಾಣಿಸಿಕೊಳ್ಳಲಿದೆ ಎಂದು ಹೇಳಿದರು. ಸಸ್ಪೆನ್ಸ್, ಥ್ರಿಲ್ಲರ್ ಸೇರಿದಂತೆ ಹಲವು ಆಸಕ್ತಿಕರ ಅಂಶಗಳನ್ನು ಒಳಗೊಂಡಿರುವ ಕಥೆಯೊಂದಿಗೆ ‘ಶಬರಿ’ ಪ್ರೇಕ್ಷಕರ ಮುಂದೆ ಬರಲಿದೆ ಎಂದು ಮಾಹಿತಿ ನೀಡಿದರು.

ಬರವಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಸಿವಿಲ್ ಇಂಜಿನಿಯರ್ ರಮೇಶ್, ಸುಧಾಕರ್ ರೆಡ್ಡಿ ಯಾಕಸಿರಿ ಹಾಗೂ ವಿಷ್ಣುಕಾಂತ್ ಎ. ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸಮರ್ಥ್ ಮತ್ತು ಕೃತಿಕಾ ಗೌಡ ನಾಯಕ-ನಾಯಕಿಯಾಗಿ ನಟಿಸಿದ್ದು, ಧನ್ವಿ, ಎಂ.ಕೆ. ಮಠ, ನೀನಾಸಂ ಅಶ್ವತ್, ಸೀತಾ ಹರ್ಷವರ್ಧನ್, ಯೋಗೇಶ್ ವೀರ್, ಮಂಡ್ಯ ಸಿದ್ದು ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.

ಚಿತ್ರಕ್ಕೆ ಬಿ.ಆರ್. ಹೇಮಂತ್ ಕುಮಾರ್ ಸಂಗೀತ ಸಂಯೋಜನೆ, ಸಾಮ್ರಾಟ್ ನಾಗರಾಜ್ ಛಾಯಾಗ್ರಹಣ, ಕೆ. ಗಿರೀಶ್ ಕುಮಾರ್ ಸಂಕಲನ ಹಾಗೂ ಕೋರ ಚಿನ್ನಯ್ಯ ಸಾಹಸ ನಿರ್ದೇಶನವಿದೆ.

ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ದಾರುಣ ಸಾವು!

ಮೈಸೂರು: ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬೂದಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಬೂದಳ್ಳಿ ಗ್ರಾಮದ ರಾಜೇಶ್ (32), ನಾಗರಾಜು (35) ಹಾಗೂ ನಾರಾಯಣ್ (40) ಎಂದು ಗುರುತಿಸಲಾಗಿದೆ.

ಇಟ್ಟಿಗೆ ಗೂಡಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಗೂಡು ಕುಸಿದಿದೆ. ಈ ವೇಳೆ ಅವಶೇಷಗಳಡಿ ಸಿಲುಕಿದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಟಿ.ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಶೃಂಗೇರಿಯಲ್ಲಿ ಭಾರೀ ಮಳೆ ಅವಾಂತರ! ರಸ್ತೆಗೆ ಬಿದ್ದ ಬೃಹತ್ ಮರ, ಸಿರಿಮನೆ ಫಾಲ್ಸ್ ರಸ್ತೆ ಬಂದ್

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹಲವೆಡೆ ಮಳೆ ಅವಾಂತರ ಸೃಷ್ಟಿಸಿದೆ.

ಭಾರೀ ಗಾಳಿ-ಮಳೆಯಿಂದಾಗಿ ಹುಲುಗಾರುಬೈಲ್ ಬಳಿ ರಸ್ತೆಗೆ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಸಿರಿಮನೆ ಫಾಲ್ಸ್‌ಗೆ ತೆರಳುವ ರಸ್ತೆ ಸಂಪರ್ಕ ಕಡಿತಗೊಂಡಿದೆ.

ರಸ್ತೆ ಮಧ್ಯದಲ್ಲಿ ಮರ ಬಿದ್ದ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಭಾನುವಾರ ರಜೆ ದಿನವಾಗಿದ್ದರಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಆದರೆ ರಸ್ತೆ ಬಂದ್ ಆಗಿದ್ದರಿಂದ ಪ್ರವಾಸಿಗರು ಸ್ಥಳದಲ್ಲೇ ಪರದಾಡುವಂತಾಯಿತು.

ಸ್ಥಳೀಯರು ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಸಂಚಾರವನ್ನು ಸುಗಮಗೊಳಿಸುವ ಪ್ರಯತ್ನ ನಡೆಯುತ್ತಿದೆ. ಭಾರೀ ಮಳೆಯ ಪರಿಣಾಮ ಗ್ರಾಮದ ಸುತ್ತಮುತ್ತ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ಇನ್ನೊಂದೆಡೆ, ಶೃಂಗೇರಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಯ ನೀರಿನ ಮಟ್ಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಮಳೆ ಕೊರತೆಯಿಂದ ಕಂಗಾಲಾಗಿದ್ದ ಮಲೆನಾಡಿನ ಚಿತ್ರಣ ಇದೀಗ ಸಂಪೂರ್ಣ ಬದಲಾಗಿದೆ. ಕೇವಲ ಎರಡು ದಿನಗಳ ನಿರಂತರ ಮಳೆಯಿಂದಾಗಿ ನದಿಗಳು, ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ತನ್ನ ವೈಭವ ತೋರಿಸುತ್ತಿದೆ.

 

ದಿನಕ್ಕೆ 5 ಗಂಟೆಗಿಂತ ಕಡಿಮೆ ನಿದ್ರೆ ಮಾಡುತ್ತಿದ್ದೀರಾ? ದೇಹದ ಮೇಲೆ ಬೀಳುವ ಗಂಭೀರ ಪರಿಣಾಮಗಳ ಬಗ್ಗೆ ಇರಲಿ ಎಚ್ಚರ

0

ಆರೋಗ್ಯಕರ ಜೀವನಶೈಲಿಗೆ ಸಮತೋಲಿತ ಆಹಾರ ಮತ್ತು ನಿಯಮಿತ ವ್ಯಾಯಾಮ ಎಷ್ಟು ಅಗತ್ಯವೋ, ಅಷ್ಟೇ ಮಹತ್ವ ಉತ್ತಮ ಗುಣಮಟ್ಟದ ನಿದ್ರೆಗೂ ಇದೆ ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ. ನಿದ್ರೆಯನ್ನು ಐಷಾರಾಮಿ ವಿಷಯವಾಗಿ ಪರಿಗಣಿಸದೆ, ದೇಹದ ಮೂಲಭೂತ ಅಗತ್ಯಗಳಲ್ಲಿ ಒಂದಾಗಿ ಪರಿಗಣಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅತಿಯಾದ ಮೊಬೈಲ್ ಬಳಕೆ, ಒತ್ತಡದ ಜೀವನಶೈಲಿ ಹಾಗೂ ರಾತ್ರಿ ತಡವಾಗಿ ಮಲಗುವ ಅಭ್ಯಾಸದಿಂದ ಅನೇಕರು ಸಮರ್ಪಕ ನಿದ್ರೆಯಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ದೇಹದ ಜೈವಿಕ ಗಡಿಯಾರ (Biological Clock) ಅಸ್ತವ್ಯಸ್ತಗೊಂಡು ಹಾರ್ಮೋನುಗಳ ಸಮತೋಲನಕ್ಕೂ ಧಕ್ಕೆಯಾಗುತ್ತಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ವೈದ್ಯರ ಪ್ರಕಾರ, ದಿನಕ್ಕೆ ಐದು ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವ ಅಭ್ಯಾಸವು ಕೇವಲ ಒಂದು ವಾರದಲ್ಲೇ ದೇಹದಲ್ಲಿ ಹಲವು ನಕಾರಾತ್ಮಕ ಬದಲಾವಣೆಗಳನ್ನು ಉಂಟುಮಾಡುವ ಸಾಧ್ಯತೆ ಇದೆ.

ಸಾಕಷ್ಟು ನಿದ್ರೆ ಇಲ್ಲದಿದ್ದರೆ ಪುರುಷರಲ್ಲಿ ಟೆಸ್ಟೋಸ್ಟೆರಾನ್ ಹಾರ್ಮೋನ್ ಮಟ್ಟ ಕಡಿಮೆಯಾಗುವ ಅಪಾಯವಿದ್ದು, ಇದರಿಂದ ದೈಹಿಕ ಶಕ್ತಿ, ಸ್ನಾಯುಗಳ ಬೆಳವಣಿಗೆ ಹಾಗೂ ಕಾರ್ಯಕ್ಷಮತೆ ಮೇಲೆ ಪರಿಣಾಮ ಬೀಳಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಅಲ್ಲದೆ, ವ್ಯಾಯಾಮದ ಬಳಿಕ ಸ್ನಾಯುಗಳು ಸಹಜ ಸ್ಥಿತಿಗೆ ಮರಳುವ ಪ್ರಕ್ರಿಯೆಯೂ ನಿಧಾನಗೊಳ್ಳುತ್ತದೆ. ಹೀಗಾಗಿ ಜಿಮ್‌ನಲ್ಲಿ ಎಷ್ಟೇ ವ್ಯಾಯಾಮ ಮಾಡಿದರೂ ಸಮರ್ಪಕ ನಿದ್ರೆ ಇಲ್ಲದಿದ್ದರೆ ಅದರ ಸಂಪೂರ್ಣ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ.

ನಿದ್ರೆಯ ಕೊರತೆಯು ಇನ್ಸುಲಿನ್ ಸಂವೇದನೆ ಕಡಿಮೆಯಾಗಲು ಕಾರಣವಾಗಬಹುದು. ಇದರ ಪರಿಣಾಮವಾಗಿ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿ ಉಳಿಯುವ ಸಾಧ್ಯತೆ ಇದ್ದು, ದೀರ್ಘಾವಧಿಯಲ್ಲಿ ಮಧುಮೇಹದ ಅಪಾಯ ಹೆಚ್ಚಾಗಬಹುದು. ಜೊತೆಗೆ ಹಸಿವನ್ನು ನಿಯಂತ್ರಿಸುವ ಹಾರ್ಮೋನುಗಳಲ್ಲಿ ವ್ಯತ್ಯಾಸ ಉಂಟಾಗಿ, ಹೆಚ್ಚುವರಿ ಕ್ಯಾಲೊರಿ ಸೇವನೆ ಹಾಗೂ ತೂಕ ಹೆಚ್ಚಳಕ್ಕೂ ಕಾರಣವಾಗಬಹುದು ಎಂದು ವೈದ್ಯರು ಹೇಳಿದ್ದಾರೆ.

ತಜ್ಞರ ಸಲಹೆಯಂತೆ, ದೇಹವು ತನ್ನನ್ನು ತಾನು ದುರಸ್ತಿ ಮಾಡಿಕೊಳ್ಳಲು ಮತ್ತು ಮೆದುಳು ಸರಿಯಾಗಿ ಕಾರ್ಯನಿರ್ವಹಿಸಲು ಪ್ರತಿದಿನ 7 ರಿಂದ 8 ಗಂಟೆಗಳ ಗುಣಮಟ್ಟದ ನಿದ್ರೆ ಅತ್ಯಗತ್ಯ. ರಾತ್ರಿ ಮಲಗುವ ಮುನ್ನ ಮೊಬೈಲ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಕಡಿಮೆ ಮಾಡಿ, ನಿಯಮಿತ ಸಮಯಕ್ಕೆ ಮಲಗುವ ಅಭ್ಯಾಸ ರೂಢಿಸಿಕೊಳ್ಳುವುದು ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕೊಡಗಿನಲ್ಲಿ ವರುಣನ ಆರ್ಭಟ! ತ್ರಿವೇಣಿ ಸಂಗಮ ಜಲಾವೃತ, ತಲಕಾವೇರಿಯಲ್ಲಿ ಜಲವೈಭವ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕಾವೇರಿ ಉಗಮ ಸ್ಥಾನವಾದ ತಲಕಾವೇರಿ ಹಾಗೂ ಭಾಗಮಂಡಲ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ನದಿ-ತೊರೆಗಳು ತುಂಬಿ ಹರಿಯುತ್ತಿವೆ.

ಭಾರೀ ಮಳೆಯ ಪರಿಣಾಮವಾಗಿ ಪ್ರಸಿದ್ಧ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಕಾವೇರಿ, ಕನ್ನಿಕೆ ಮತ್ತು ಸುಜ್ಯೋತಿ ನದಿಗಳ ಸಂಗಮ ಪ್ರದೇಶದಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರವಾಹದ ನೀರು ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳ ಹಂತದವರೆಗೂ ತಲುಪಿದೆ.

ಮಳೆಯ ಅಬ್ಬರದಿಂದ ಭಾಗಮಂಡಲ–ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ನದಿ ನೀರು ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ, ಕಾವೇರಿ ಉಗಮ ಸ್ಥಾನವಾದ ತಲಕಾವೇರಿ ಕ್ಷೇತ್ರದಲ್ಲೂ ಮಳೆಯ ಅಬ್ಬರ ಜೋರಾಗಿದೆ. ಕ್ಷೇತ್ರದ ಮೆಟ್ಟಿಲುಗಳ ಮೇಲೆಯೇ ಮಳೆ ನೀರು ಹಾಲಿನ ಹೊಳೆಯಂತೆ ರಭಸವಾಗಿ ಹರಿಯುತ್ತಿದ್ದು, ಪ್ರಕೃತಿಯ ಅದ್ಭುತ ದೃಶ್ಯ ಕಂಡುಬಂದಿದೆ.

ಈ ಸುಂದರ ಜಲವೈಭವವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ ಭಕ್ತರು ಹಾಗೂ ಪ್ರವಾಸಿಗರು ಮೊಬೈಲ್‌ಗಳಲ್ಲಿ ದೃಶ್ಯಗಳನ್ನು ಸೆರೆಹಿಡಿದು ಸಂಭ್ರಮಿಸಿದ್ದಾರೆ.

ಭಾರೀ ಮಳೆಯ ನಡುವೆಯೂ ತಲಕಾವೇರಿ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಗಳು ಮುಂದುವರಿದಿವೆ. ಅರ್ಚಕರ ತಂಡವು ಎಂದಿನಂತೆ ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದು, ಭಕ್ತರು ಮಳೆಯ ನಡುವೆಯೂ ಶ್ರೀ ಕಾವೇರಿ ಮಾತೆಯ ದರ್ಶನ ಪಡೆಯುತ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

 

KRS Dam Update: ಕೆಆರ್‌ಎಸ್‌ಗೆ ಭಾರೀ ಒಳಹರಿವು! 100 ಅಡಿ ತಲುಪಲು ಕ್ಷಣಗಣನೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ.

ಇದರಿಂದ ಡ್ಯಾಂ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದ್ದು, ಶೀಘ್ರದಲ್ಲೇ 100 ಅಡಿ ತಲುಪುವ ನಿರೀಕ್ಷೆ ಮೂಡಿದೆ.

ಕಳೆದ ಎರಡು ದಿನಗಳ ಹಿಂದೆ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 92 ಅಡಿಯಷ್ಟಿತ್ತು. ಇದೀಗ ಭಾರೀ ಒಳಹರಿವಿನಿಂದಾಗಿ ನೀರಿನ ಮಟ್ಟ 97 ಅಡಿಗೆ ಏರಿಕೆಯಾಗಿದೆ. ಜಲಾಶಯದಲ್ಲಿದ್ದ ನೀರಿನ ಸಂಗ್ರಹ ಪ್ರಮಾಣವೂ ಹೆಚ್ಚಾಗಿದ್ದು, ಮೊದಲು 17 ಟಿಎಂಸಿ ಇದ್ದ ನೀರು ಇದೀಗ 20.477 ಟಿಎಂಸಿಗೆ ಏರಿಕೆಯಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಇದೇ ರೀತಿ ಮಳೆ ಮುಂದುವರಿದರೆ, ಕೆಲವೇ ದಿನಗಳಲ್ಲಿ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ಇದೆ. ಇದರಿಂದ ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ನಡೆಯುತ್ತಿದ್ದ ಹೋರಾಟಗಳ ನಡುವೆಯೇ ಪ್ರಕೃತಿಯೇ ತಾತ್ಕಾಲಿಕ ನೆಮ್ಮದಿ ನೀಡಿದಂತಾಗಿದೆ.

ಇನ್ನೊಂದೆಡೆ, ಕಬಿನಿ ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ತಮಿಳುನಾಡಿಗೂ ನೀರು ಹರಿದುಹೋಗುತ್ತಿದೆ.

ಜಲಾಶಯಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಕಾವೇರಿ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ. ಉತ್ತಮ ಮಳೆಯಿಂದಾಗಿ ಈ ಬಾರಿ ನೀರಿನ ಸಮಸ್ಯೆ ಕಡಿಮೆಯಾಗುವ ನಿರೀಕ್ಷೆ ರೈತರಲ್ಲಿ ಮೂಡಿದೆ.