ಉತ್ತರ ಕನ್ನಡ: ಜಿಲ್ಲೆಯ ಕರಾವಳಿ ಭಾಗದಲ್ಲಿ ಕೇವಲ ಒಂದು ದಿನದ ಭಾರೀ ಮಳೆಯೇ ವ್ಯಾಪಕ ಅವಾಂತರವನ್ನು ಸೃಷ್ಟಿಸಿದೆ.
ನಿರಂತರ ಮಳೆಯ ಪರಿಣಾಮ ಪ್ರಸಿದ್ಧ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೂ ನೀರು ನುಗ್ಗುವ ಆತಂಕ ಎದುರಾಗಿದ್ದು, ಭಕ್ತರ ಸುರಕ್ಷತೆ ದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಮಳೆ ನೀರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಗರ್ಭಗುಡಿಗೆ ನೀರು ನುಗ್ಗುವ ಸಾಧ್ಯತೆ ಇರುವುದರಿಂದ ಆತ್ಮಲಿಂಗದ ಸ್ಪರ್ಶ ದರ್ಶನಕ್ಕೆ ಭಕ್ತರಿಗೆ ತಾತ್ಕಾಲಿಕವಾಗಿ ನಿರ್ಬಂಧ ಹೇರಲಾಗಿದೆ. ಇದರಿಂದ ದೂರದೂರಿನಿಂದ ಆಗಮಿಸುತ್ತಿದ್ದ ಭಕ್ತರು ನಿರಾಶರಾಗುವ ಪರಿಸ್ಥಿತಿ ಉಂಟಾಗಿದೆ.
ಸ್ಥಳೀಯ ಮೂಲಗಳ ಪ್ರಕಾರ, ಚರಂಡಿ ವ್ಯವಸ್ಥೆ ಸರಿಯಾಗಿ ಸ್ವಚ್ಛಗೊಳಿಸದಿರುವುದು ಮತ್ತು ನೀರು ಹರಿವಿನ ಸರಿಯಾದ ವ್ಯವಸ್ಥೆ ಇಲ್ಲದಿರುವುದರಿಂದ ಗೋಕರ್ಣ ಪಟ್ಟಣದ ಪ್ರಮುಖ ಬೀದಿಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ರಸ್ತೆಗಳು ಹಳ್ಳಗಳಂತಾಗಿ ನೀರು ತುಂಬಿಕೊಂಡಿರುವುದರಿಂದ ವ್ಯಾಪಾರ ವಹಿವಾಟಿಗೂ ಅಡ್ಡಿಯಾಗಿದೆ. ಜೊತೆಗೆ ಮಧ್ಯಾಹ್ನ 12:30ಕ್ಕೆ ನಡೆಯುವ ನಿತ್ಯ ಮಹಾಪೂಜೆಯಲ್ಲೂ ವ್ಯತ್ಯಯ ಉಂಟಾಗಿದೆ.
ಇನ್ನೊಂದೆಡೆ, ಕುಮಟಾ ತಾಲೂಕಿನ ವಾಲಗಳ್ಳಿ ಸಮೀಪ ಕುಮಟಾ–ಸಿದ್ದಾಪುರ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪೂರ್ಣವಾಗಿ ಜಲಾವೃತವಾಗಿದೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿರುವ ದೃಶ್ಯ ಕಂಡು ವಾಹನ ಸವಾರರು ಆತಂಕದಲ್ಲಿ ಸಂಚರಿಸುವಂತಾಗಿದೆ. ಹಲವು ದ್ವಿಚಕ್ರ ಹಾಗೂ ಲಘು ವಾಹನಗಳು ನೀರಿನಲ್ಲಿ ಸಿಲುಕಿಕೊಂಡಿರುವ ಮಾಹಿತಿ ಕೂಡ ಬಂದಿದೆ.
ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಜೀವದ ಹಂಗು ತೊರೆದು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತುರ್ತು ಸೇವಾ ವಾಹನಗಳ ಸಂಚಾರಕ್ಕೂ ತೊಂದರೆ ಉಂಟಾಗಿದೆ.
ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣದ ನೀರು ಹರಿವು ವ್ಯವಸ್ಥೆ, ಚರಂಡಿ ಸ್ವಚ್ಛತೆ ಹಾಗೂ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಮಳೆ ಮುಂದುವರಿದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತವಾಗಿದೆ.

