ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ನಗರದಲ್ಲಿ ಮುಂದುವರಿದಿರುವ ಮಳೆಯ ಅಬ್ಬರ ಇಂದು ಕೂಡ ಮುಂದುವರಿದಿದೆ.
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಬಸವನಗುಡಿ, ಶಾಂತಿನಗರ, ಟೌನ್ಹಾಲ್, ಮೆಜೆಸ್ಟಿಕ್, ಜಯನಗರ, ಮಲ್ಲೇಶ್ವರಂ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಏಕಾಏಕಿ ಸುರಿದ ಮಳೆಯಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸಿದ್ದು, ಬಸ್ ನಿಲ್ದಾಣಗಳು, ಅಂಗಡಿ ಮುಂಗಟ್ಟುಗಳ ಬಳಿ ನಿಂತು ಮಳೆಯಿಂದ ರಕ್ಷಣೆ ಪಡೆದರು.
ಈ ನಡುವೆ ಹವಾಮಾನ ಇಲಾಖೆ ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
ಉಡುಪಿ, ಶಿವಮೊಗ್ಗದಲ್ಲಿ ಭಾರಿ ಮಳೆ:
ರಾಜ್ಯದಲ್ಲಿ ನಿನ್ನೆ ಅತಿ ಹೆಚ್ಚು ಮಳೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೆರ್ಗಾಳುವಿನಲ್ಲಿ ದಾಖಲಾಗಿದ್ದು, 160.5 ಮಿ.ಮೀ. ಮಳೆಯಾಗಿದೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ 155 ಮಿ.ಮೀ., ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ 98.5 ಮಿ.ಮೀ. ಮಳೆಯಾಗಿದೆ.
ಇದಲ್ಲದೆ ಮಡಿಕೇರಿಯ ಪೆರಾಜೆ, ಯಾದಗಿರಿಯ ಸುರಪುರದ ಮಾಲಗತ್ತಿಯಲ್ಲಿ ತಲಾ 64.5 ಮಿ.ಮೀ., ರಾಯಚೂರಿನ ಪೂರ್ತಿಪ್ಲಿಯಲ್ಲಿ 59 ಮಿ.ಮೀ., ಉತ್ತರ ಕನ್ನಡದ ಸಿದ್ದಾಪುರದ ದೊಡ್ಮನೆಯಲ್ಲಿ 57.5 ಮಿ.ಮೀ. ಹಾಗೂ ಬೆಳಗಾವಿಯ ಬೆಳವಟ್ಟಿಯಲ್ಲಿ 56 ಮಿ.ಮೀ. ಮಳೆ ದಾಖಲಾಗಿದೆ.

