ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ವಿಜಯೇಂದ್ರ, ಬಿ. ನಾಗೇಂದ್ರ ಅವರಿಗೆ ವಾಲ್ಮೀಕಿ ಸಮಾಜದ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ನಾಗೇಂದ್ರ ಅವರು ಆರೋಪಿಯಾಗಿದ್ದಾರೆ. ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿದ್ದು, ಅವರು ಆರೋಪಗಳಿಂದ ಸಂಪೂರ್ಣವಾಗಿ ಮುಕ್ತರಾಗಿಲ್ಲ. ಅವರು ನಿರಪರಾಧಿ ಎಂದು ನ್ಯಾಯಾಲಯದಲ್ಲಿ ಸಾಬೀತಾದ ಬಳಿಕ ಸಚಿವರಾದರೆ ಬಿಜೆಪಿಗೆ ಯಾವುದೇ ಅಭ್ಯಂತರವಿಲ್ಲ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಬಿಜೆಪಿಗೆ ಬಿ. ನಾಗೇಂದ್ರ ಅವರ ಬಗ್ಗೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ಆದರೆ ತಮ್ಮ ವಿರುದ್ಧ ಗಂಭೀರ ಆರೋಪಗಳಿರುವ ಸಂದರ್ಭದಲ್ಲಿ ಸಚಿವ ಸ್ಥಾನದಲ್ಲಿ ಮುಂದುವರಿಯುವುದು ಸರಿಯಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತಹ ಪರಿಸ್ಥಿತಿ ಏಕೆ ನಿರ್ಮಾಣವಾಯಿತು ಎಂಬುದನ್ನು ಅವರೇ ರಾಜ್ಯದ ಜನರಿಗೆ ವಿವರಿಸಬೇಕು ಎಂದು ಪ್ರಶ್ನಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ 185 ಕೋಟಿ ರೂಪಾಯಿ ಹಣದ ದುರುಪಯೋಗದ ಆರೋಪ ಪ್ರಕರಣದಲ್ಲಿ ನಾಗೇಂದ್ರ ಅವರ ಹೆಸರು ಕೇಳಿಬಂದಿದೆ. ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಪ್ರಕರಣದ ತನಿಖೆ ಆರಂಭವಾಗಿದ್ದು, ಹಣ ತೆಲಂಗಾಣಕ್ಕೆ ವರ್ಗಾವಣೆಯಾಗಿ ದುರುಪಯೋಗವಾಗಿದೆ ಎಂಬ ವಿಚಾರ ರಾಜ್ಯದ ಜನರಿಗೆ ತಿಳಿದಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವನ್ನೂ ಉಲ್ಲೇಖಿಸಿದ ವಿಜಯೇಂದ್ರ, ಅವರ ಧರ್ಮಪತ್ನಿಯ ಹೇಳಿಕೆಯನ್ನು ಸರ್ಕಾರ ಗಮನಿಸಬೇಕು ಎಂದು ಆಗ್ರಹಿಸಿದ್ದಾರೆ.
ಇಂದಿಗೂ ಚಂದ್ರಶೇಖರ್ ಅವರ ಕುಟುಂಬಕ್ಕೆ ಗ್ರಾಚ್ಯುಟಿ ಹಾಗೂ ಪಿಂಚಣಿ ದೊರೆತಿಲ್ಲ ಎಂದು ಆರೋಪಿಸಿದ ಅವರು, ಅವರ ಮಗನಿಗೆ ಕಾಂಗ್ರೆಸ್ ಸರ್ಕಾರ ಜವಾನನ ಹುದ್ದೆ ನೀಡಿದೆ ಎಂದು ಟೀಕಿಸಿದರು.
ಚಂದ್ರಶೇಖರ್ ಅವರು ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಅವರ ಮಗನಿಗೆ ಜವಾನನ ಕೆಲಸ ನೀಡಿರುವುದು ಕುಟುಂಬಕ್ಕೆ ಮಾಡಿರುವ ಅಪಮಾನ ಎಂದು ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

