Home Blog

ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರು ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬಳಿಕ ಸಚಿವರ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಶ್ವಾಸಕೋಶ ಪ್ರತಿರೋಪಣ (ಟ್ರಾನ್ಸ್‌ಪ್ಲಾಂಟ್) ನಡೆಸಲು ಮೆದಳು ಪ್ರಜ್ಞೆಯಲ್ಲಿರುವುದು ಅಗತ್ಯವಾಗಿದ್ದು, ಈ ಕುರಿತು ವೈದ್ಯರು ನಾಳೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಸಚಿವರ ಕುಟುಂಬದವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ ಸಿಎಂ, ಸುಧಾಕರ್ ಅವರ ಇತರೆ ಅಂಗಾಂಗಗಳು ವೆಂಟಿಲೇಟರ್ ನೆರವಿನಿಂದ ಸ್ಥಿರವಾಗಿವೆ. ಆದರೆ ಮೆದಳಿನ ಪ್ರಜ್ಞೆ ಇನ್ನೂ ಮರಳಿಲ್ಲ. ನಾಳೆ ಸಿಟಿ ಸ್ಕ್ಯಾನ್ ನಡೆಸಿ ಮುಂದಿನ ಚಿಕಿತ್ಸಾ ಕ್ರಮವನ್ನು ನಿರ್ಧರಿಸಲಾಗುವುದು ಎಂದು ಮಾಹಿತಿ ನೀಡಿದರು. ಹೆಚ್ಚಿನ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ “ಐ ಎಮ್ ನಾಟ್ ಎ ಡಾಕ್ಟರ್” ಎಂದು ಹೇಳಿ ಸಿಎಂ ತೆರಳಿದರು.

ಕೆಲ ದಿನಗಳ ಹಿಂದೆ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ಬಳಿಕ, ಹಠಾತ್ತನೆ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಸುಧಾರಣೆ ಕಾಣಿಸದ ಹಿನ್ನೆಲೆಯಲ್ಲಿ, ಸೋಂಕು ಗಂಭೀರ ಸ್ವರೂಪಕ್ಕೆ ತಿರುಗಿತ್ತು.

ಇದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮರಾಠಿಗೆ ಆದ್ಯತೆ ಬೇಕು, ಆದರೆ ಹಿಂಸಾಚಾರಕ್ಕೆ ಅವಕಾಶವಿಲ್ಲ: ದೇವೇಂದ್ರ ಫಡ್ನವೀಸ್ ಖಡಕ್ ಎಚ್ಚರಿಕೆ

0

ಮುಂಬೈ: ರಾಜ್ಯದಲ್ಲಿ ಮರಾಠಿ ಭಾಷೆಗೆ ಆದ್ಯತೆ ನೀಡುವುದು ಅಗತ್ಯವಾದರೂ, ಅದರ ಹೆಸರಿನಲ್ಲಿ ಯಾವುದೇ ರೀತಿಯ ಹಿಂಸಾಚಾರವನ್ನು ಸಹಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಎಚ್ಚರಿಕೆ ನೀಡಿದ್ದಾರೆ.

ಮುಂಬೈ ಸಮೀಪದ ಥಾಣೆ ಪ್ರದೇಶದಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಚೇರಿ ಬಳಿ ಮರಾಠಿಯೇತರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಎಚ್ಚರಿಕೆ ನೀಡುವ ಬ್ಯಾನರ್‌ಗಳನ್ನು ಅಳವಡಿಸಿರುವ ಹಿನ್ನೆಲೆ ಉಂಟಾದ ಉದ್ವಿಗ್ನ ಪರಿಸ್ಥಿತಿಗೆ ಪ್ರತಿಕ್ರಿಯೆ ನೀಡಿದ ಅವರು ಈ ಮಾತುಗಳನ್ನು ಹೇಳಿದ್ದಾರೆ.

ಮುಂಬೈನಂತಹ ಮಹಾನಗರಗಳು ಹಾಗೂ ರಾಜ್ಯದಾದ್ಯಂತ ಮರಾಠಿ ಭಾಷೆಯ ಪ್ರಚಾರ ಮಾಡುವುದು ತಪ್ಪಲ್ಲ. ಆದರೆ, ಅದನ್ನು ಜವಾಬ್ದಾರಿಯುತವಾಗಿ ನಡೆಸಬೇಕು. ಭಾಷೆ ತಿಳಿಯದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ತರಬೇತಿ ನೀಡುವ ಮೂಲಕ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ತಿಳಿಸಿದ್ದಾರೆ. ಭಾಷೆಯ ಹೆಸರಿನಲ್ಲಿ ಬಲವಂತ ಅಥವಾ ಹಿಂಸಾಚಾರಕ್ಕೆ ತೊಡಗುವುದು ಸರಿಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ, ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಮೇ 1ರಿಂದ ರಾಜ್ಯದಾದ್ಯಂತ ಆಟೋ ಮತ್ತು ಟ್ಯಾಕ್ಸಿ ಚಾಲಕರ ಮರಾಠಿ ಪ್ರಾವೀಣ್ಯತೆ ಮೌಲ್ಯಮಾಪನ ನಡೆಸಲಾಗುವುದು ಎಂದು ಘೋಷಿಸಿದ್ದಾರೆ.

ಮರಾಠಿಯೇತರ ಚಾಲಕರಿಗೆ ಭಾಷಾ ತರಬೇತಿ ನೀಡಲು ಸರ್ಕಾರ ಕೊಂಕಣ ಮರಾಠಿ ಸಾಹಿತ್ಯ ಪರಿಷತ್ ಮತ್ತು ಮುಂಬೈ ಮರಾಠಿ ಸಾಹಿತ್ಯ ಸಂಘದಂತಹ ಸಂಸ್ಥೆಗಳೊಂದಿಗೆ ಕೈಜೋಡಿಸಿದೆ.

ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಾಗಿ, ಮೂಲ ಮರಾಠಿ ಭಾಷೆಯನ್ನು ಅರ್ಥಮಾಡಿಕೊಳ್ಳುವ ಹಾಗೂ ಮಾತನಾಡುವ ಸಾಮರ್ಥ್ಯದ ಆಧಾರದ ಮೇಲೆ ಚಾಲಕರನ್ನು ಮೌಲ್ಯಮಾಪನ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಹತೆ ಪಡೆದವರಿಗೆ ಪ್ರಮಾಣಪತ್ರ ನೀಡಲಾಗುತ್ತದೆ.

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ಅಂತಿಮ ತೆರೆ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

0

ನವದೆಹಲಿ: ಕೊಪ್ಪಳ ಜಿಲ್ಲೆಯ ನವವೃಂದಾವನ ಗಡ್ಡೆಯ ಪೂಜೆ ಹಾಗೂ ಸಂಬಂಧಿತ ಆಚರಣೆಗಳ ವಿಚಾರವಾಗಿ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠ ಮತ್ತು ಉತ್ತರಾದಿ ಮಠಗಳ ನಡುವೆ ನಡೆದು ಬಂದಿದ್ದ ಸುದೀರ್ಘ ಕಾನೂನು ಹೋರಾಟಕ್ಕೆ ಸುಪ್ರೀಂಕೋರ್ಟ್ ತೆರೆ ಎಳೆದಿದೆ.

ಈ ವಿವಾದ ಬಗೆಹರಿಸಲು ಸುಪ್ರೀಂಕೋರ್ಟ್ 2025ರ ಮಾರ್ಚ್ 19ರಂದು ನಿವೃತ್ತ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರನ್ನು ಮಧ್ಯಸ್ಥಿಕೆದಾರರನ್ನಾಗಿ ನೇಮಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಹಾಗೂ ಎನ್. ಕೋಟೀಶ್ವರ್ ಸಿಂಗ್ ಅವರ ಪೀಠ, ಮಧ್ಯಸ್ಥಿಕೆಯ ಮೂಲಕ ಈ ವಿವಾದ ಇತ್ಯರ್ಥಗೊಂಡಿದೆ ಎಂದು ತಿಳಿಸಿದೆ.

ಮಧ್ಯಸ್ಥಿಕೆ ಪ್ರಕ್ರಿಯೆಯ ಯಶಸ್ವಿ ಪ್ರಯತ್ನಗಳಿಂದ ಎರಡು ಮಠಗಳ ನಡುವಿನ ದೀರ್ಘಕಾಲದ ವಿವಾದಕ್ಕೆ ಸೌಹಾರ್ದಯುತ ಅಂತ್ಯ ಕಂಡುಬಂದಿದೆ. 2026ರ ಜನವರಿ 3ರಂದು ಮಾಡಿಕೊಂಡ ಒಪ್ಪಂದ ಮತ್ತು ಏಪ್ರಿಲ್ 13ರ ತಿಳುವಳಿಕೆ ಪತ್ರದ ಆಧಾರದ ಮೇಲೆ ವಿಶೇಷ ಮೇಲ್ಮನವಿ ಅರ್ಜಿಯನ್ನು ವಿಲೇವಾರಿ ಮಾಡಬಹುದು ಎಂದು ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.

ಇದೇ ವೇಳೆ, ಕಕ್ಷಿದಾರರ ಪರವಾಗಿ ಹಿರಿಯ ವಕೀಲ ಡಿ.ಎಸ್. ನಾಯ್ಡು ಹಾಗೂ ವಕೀಲ ಅಲ್ಜೋ ಕೆ. ಜೋಸೆಫ್ ಸಲ್ಲಿಸಿದ ದಾಖಲೆಗಳನ್ನು ನ್ಯಾಯಾಲಯ ಸ್ವೀಕರಿಸಿದೆ. ಉತ್ತರಾದಿ ಮಠ ಮತ್ತು ಮಂತ್ರಾಲಯ ಮಠಗಳ ನಡುವಿನ ಒಪ್ಪಂದ ಹಾಗೂ ತಿಳುವಳಿಕೆ ಪತ್ರಗಳನ್ನು ಈ ಆದೇಶದ ಭಾಗವಾಗಿಸಲಾಗಿದೆ.

ಮಾಧ್ವ ಪರಂಪರೆಯ ಎರಡು ಪ್ರಮುಖ ಮಠಗಳಾದ ಉತ್ತರಾದಿ ಮಠ ಮತ್ತು ರಾಘವೇಂದ್ರ ಸ್ವಾಮಿ ಮಠಗಳ ನಡುವಿನ ಹಲವು ದಶಕಗಳ ವಿವಾದಗಳನ್ನು ಸೌಹಾರ್ದಯುತ ಮಾತುಕತೆ ಮೂಲಕ ಬಗೆಹರಿಸಲು ಎರಡೂ ಮಠಗಳು ಈಗಾಗಲೇ ಒಪ್ಪಿಗೆ ಸೂಚಿಸಿದ್ದವು. ಬೆಂಗಳೂರಿನಲ್ಲಿ ನಡೆದ ಸೌಹಾರ್ದ ಸಮಾವೇಶದಲ್ಲಿ ಎರಡೂ ಮಠಗಳ ಸ್ವಾಮೀಜಿಗಳು ಒಪ್ಪಂದಕ್ಕೆ ಸಹಿ ಹಾಕಿದ್ದರು ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ: ಕರಾವಳಿಯಲ್ಲಿ ಹೀಟ್‌ ವೇವ್ ಎಚ್ಚರಿಕೆ, ಹಲವೆಡೆ ಆಲಿಕಲ್ಲು ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ತಾಪಮಾನದಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಬೆಂಗಳೂರು ಸೇರಿದಂತೆ ವಿವಿಧ ಪ್ರದೇಶಗಳು ಬಿಸಿಲಿನ ಬೇಗೆಗೆ ತತ್ತರಿಸುತ್ತಿವೆ. ವಿಶೇಷವಾಗಿ ಕರಾವಳಿ ಮತ್ತು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಉಷ್ಣ ಅಲೆ ತೀವ್ರಗೊಂಡಿದೆ. ಇದೇ ವೇಳೆ, ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ದಿನಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಲಾಗಿದೆ. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಅನಗತ್ಯವಾಗಿ ಹೊರಗೆ ಹೋಗುವುದನ್ನು ತಪ್ಪಿಸಿ, ಸಾಕಷ್ಟು ನೀರು ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದ ಭಾಗಗಳಲ್ಲಿ ಒಣಹವಾಮಾನ ಮುಂದುವರಿಯಲಿದೆ. ಜೊತೆಗೆ, 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿಯೂ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇನ್ನೊಂದೆಡೆ, ಕರಾವಳಿ ಭಾಗಗಳಲ್ಲಿ ತಾಪಮಾನ ಏರಿಕೆಯಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹೀಟ್‌ವೇವ್ ಎಚ್ಚರಿಕೆ ನೀಡಲಾಗಿದ್ದು, ಜೊತೆಗೆ ಗಾಳಿ-ಮಳೆಯ ಸಂಭವವೂ ಇದೆ. ಮುಂದಿನ ಐದು ದಿನಗಳವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ತಾಪಮಾನ ಹೆಚ್ಚಳದ ಹಿನ್ನೆಲೆ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಅನಗತ್ಯವಾಗಿ ಹೊರಗೆ ತೆರಳುವುದನ್ನು ತಪ್ಪಿಸಿ, ಬೇಸಿಗೆ ರಜೆಯಲ್ಲಿ ಮಕ್ಕಳನ್ನು ಬಿಸಿಲಲ್ಲಿ ಹೆಚ್ಚು ಸಮಯ ಆಟವಾಡಲು ಬಿಡಬಾರದು ಎಂದು ಸಲಹೆ ನೀಡಲಾಗಿದೆ.

ಉಷ್ಣ ಅಲೆ ಮತ್ತು ಹೀಟ್ ಸ್ಟ್ರೋಕ್‌ನಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ನೇರ ಸೂರ್ಯಕಿರಣಗಳಿಗೆ ಮೈಯೊಡ್ಡುವುದನ್ನು ತಪ್ಪಿಸುವುದು, ನಿಯಮಿತವಾಗಿ ನೀರು ಕುಡಿಯುವುದು, ಎಳನೀರು, ಮಜ್ಜಿಗೆ ಹಾಗೂ ಹಣ್ಣಿನ ರಸಗಳನ್ನು ಸೇವಿಸುವುದು ಅಗತ್ಯ. ತಿಳಿ ಬಣ್ಣದ, ಸಡಿಲ ಹತ್ತಿ ಬಟ್ಟೆಗಳನ್ನು ಧರಿಸುವುದು, ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿ ಬಳಸುವುದು ಉತ್ತಮ. ಕಾಫಿ, ಟೀ ಹಾಗೂ ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳನ್ನು ಕಡಿಮೆ ಸೇವಿಸುವಂತೆ ಆರೋಗ್ಯ ತಜ್ಞರು ಸೂಚಿಸಿದ್ದಾರೆ.

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿವಾದ: ಕಾಲೇಜಿನ ಪರವಾನಗಿ ರದ್ದುಪಡಿಸಲು ಮಹಾಸಭಾ ಆಗ್ರಹ

ಬೆಂಗಳೂರು: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೆಲ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆ ವಿವಾದಕ್ಕೆ ಕಾರಣವಾಗಿದ್ದು, ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ಪತ್ರ ಬರೆದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಸಂಬಂಧಿತ ಪರೀಕ್ಷಾ ಕೇಂದ್ರವಾಗಿದ್ದ ಕಾಲೇಜಿನ ಪರವಾನಗಿಯನ್ನು ರದ್ದುಪಡಿಸುವಂತೆ ಮಹಾಸಭಾ ಆಗ್ರಹಿಸಿದೆ. ಜೊತೆಗೆ, ಘಟನೆಗೆ ಕಾರಣವಾದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂಪಾಯಿ ದಂಡ ವಿಧಿಸಬೇಕೆಂದು ಒತ್ತಾಯಿಸಿದೆ.

ರಾಜ್ಯದಲ್ಲಿ ಸಿಇಟಿ ಪರೀಕ್ಷಾರ್ಥಿಗಳಿಂದ ಜನಿವಾರ ತೆಗೆಸಲು ಯಾವುದೇ ಸ್ಪಷ್ಟ ನಿಯಮಗಳಿಲ್ಲದಿದ್ದರೂ ಈ ಕ್ರಮ ಕೈಗೊಂಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಈ ನಡುವೆ ಮಡಿವಾಳ ಠಾಣೆ ಪೊಲೀಸರು ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್, ಘಟನೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ ಎಂದು ತಿಳಿಸಿದ್ದಾರೆ. ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಪೋಷಕರು ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷವೂ ಇದೇ ರೀತಿಯ ಘಟನೆ ನಡೆದ ಸಂದರ್ಭದಲ್ಲಿ ಮಹಾಸಭಾ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. 2025ರ ಡಿಸೆಂಬರ್‌ನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಮತ್ತೆ ಇದೇ ರೀತಿಯ ಘಟನೆ ನಡೆದಿರುವುದು ಆತಂಕಕಾರಿ ಎಂದು ಆರೋಪಿಸಲಾಗಿದೆ.

ಇದಲ್ಲದೆ, ಚಿಕ್ಕಬಳ್ಳಾಪುರದಲ್ಲಿಯೂ ಇಂತಹದ್ದೇ ಘಟನೆ ಸಂಭವಿಸಿರುವ ಮಾಹಿತಿ ಲಭ್ಯವಾಗಿದ್ದು, ಅಲ್ಲಿ ಸಹ ಪ್ರತಿಭಟನೆಗಳು ನಡೆಯುತ್ತಿವೆ ಎಂದು ರಘುನಾಥ್ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ವಿಳಂಬವಾಗುತ್ತಿದೆ ಎಂಬ ಅಸಮಾಧಾನವೂ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ನ್ಯಾಯ ದೊರಕುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಮಹಾಸಭಾ ಎಚ್ಚರಿಕೆ ನೀಡಿದೆ.

ವಿನಯ್ ಕುಲಕರ್ಣಿ ಪರ ಬೆಂಬಲಿಗರ ಮೌನ ಮೆರವಣಿಗೆ: ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಧಾರವಾಡ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ  ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಅವರ ಬೆಂಬಲಿಗರು ಇಂದು ಧಾರವಾಡ ನಗರದಲ್ಲಿ ಮೌನ ಮೆರವಣಿಗೆ ನಡೆಸಿದರು.

ನಗರದ ಕಲಾಭವನದ ಬಳಿ ನೂರಾರು ಬೆಂಬಲಿಗರು ಜಮಾಯಿಸಿ, ಕೈಗೆ ಕಪ್ಪು ಪಟ್ಟಿಗಳನ್ನು ಕಟ್ಟಿಕೊಂಡು ಪ್ರತಿಭಟನೆಗೆ ಇಳಿದರು. ಕಲಾಭವನದಿಂದ ಕೆಸಿಸಿ ಬ್ಯಾಂಕ್‌ವರೆಗೆ ಶಾಂತಿಯುತವಾಗಿ ಮೆರವಣಿಗೆ ನಡೆಸಿ, ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಕುಲಕರ್ಣಿ  ನಿರಪರಾಧಿ ಎಂಬ ನಿಲುವು ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು. ಮೌನ ಮೆರವಣಿಗೆಯ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ ಅವರು, ಪ್ರಕರಣದ ವಿಚಾರದಲ್ಲಿ ನ್ಯಾಯಾಂಗವು ಸಮಗ್ರ ಪರಿಶೀಲನೆ ನಡೆಸಬೇಕೆಂದು ಒತ್ತಾಯಿಸಿದರು.

ಏನಿದು ಪ್ರಕರಣ?

2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು.

ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ಒಪ್ಪಿಸಿತ್ತು. ಇಂಚಿಂಚು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿತ್ತು.

ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿಯನ್ನ ಕೋರ್ಟ್ ಖುಲಾಸೆಗೊಳಿತ್ತು. ಇನ್ನು ಇಬ್ಬರು ನಿರ್ದೋಷಿಗಳನ್ನ ಬಿಟ್ಟು ಉಳಿದವರನ್ನು ಸಿಬಿಐ ವಶಕ್ಕೆ ಪಡೆದಿತ್ತು.

ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ 17 ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಬಳಿಕ ಆದೇಶ ಪ್ರಕಟಿಸಿದ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಬೆಟ್ಟ ಅಗೆದು ಇಲಿ ಹುಡುಕಿದಂತೆ ಒಳ ಮೀಸಲಾತಿ ಕುರಿತ ನಿರ್ಧಾರ: ಗೋವಿಂದ ಕಾರಜೋಳ

ಬೆಂಗಳೂರು: ಸಿದ್ದರಾಮಯ್ಯನವರೇ, ನೀವೇ ನೇಮಿಸಿದ ನ್ಯಾ.ನಾಗಮೋಹನ್‍ದಾಸ್ ಅವರ ವರದಿ ಅವೈಜ್ಞಾನಿಕ ಎಂಬ ಕಾರಣಕ್ಕೆ ತಿರಸ್ಕರಿಸಿದ್ದೀರಾ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವೇ ರಚಿಸಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವರದಿ ವೈಜ್ಞಾನಿಕ ಎಂದು ಒಪ್ಪಿಕೊಂಡಿದ್ದೀರಾ ಎಂದು ಸ್ಪಷ್ಟಪಡಿಸಲು ಒತ್ತಾಯಿಸಿದರು. ನಾಗಮೋಹನ್‍ದಾಸ್ ಅವರ ವರದಿಯಲ್ಲಿ ಶೇ 17 ಎಂದಿದ್ದರೂ ಶೇ 15ಕ್ಕೆ ಸೀಮಿತ ಮಾಡಿ ಕೊಡಬಹುದಾಗಿತ್ತು.

ಯಾಕೆ ಕೊಟ್ಟಿಲ್ಲ ಎಂದು ಕೇಳಿದರು. ನಿನ್ನೆ ದಿನ ಬೆಟ್ಟ ಅಗೆದು ಇಲಿ ಹುಡುಕಿದಂತೆ ಸಿದ್ದರಾಮಯ್ಯನವರು ಒಳ ಮೀಸಲಾತಿಯನ್ನು ಜಾರಿ ನಿರ್ಧಾರ ಪ್ರಕಟಿಸಿ ತಮ್ಮ ಬೆನ್ನನ್ನು ತಾವೇ ಚಪ್ಪರಿಸಿಕೊಂಡಿದ್ದಾರೆ ಎಂದು ಟೀಕಿಸಿದರು. ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ಎಂದು ನಿರಂತರ ಭಾಷಣ ಮಾಡಿದಿರಲ್ಲವೇ? ಇದು ಕೇವಲ ಭಾಷಣದ ಸರಕೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಸಿದ್ದರಾಮಯ್ಯನವರೇ, ಅಹಿಂದ ವರ್ಗದ ಕುರಿತು ನಿಮಗೇನಾದರೂ ಬದ್ಧತೆ ಇದೆಯೇ? ಬದ್ಧತೆ ಇದ್ದರೆ ನೀವು ಸಾವಿರಾರು ಕೋಟಿ ಖರ್ಚು ಮಾಡಿ ವರದಿ ತರಿಸಿದ್ದೀರಿ. ಕೆಂಪರಾಜ್ ವರದಿ ಮೂಲೆಗುಂಪು ಮಾಡಿದ್ದೀರಿ. ಅದಾದ ಬಳಿಕ ಜಯಪ್ರಕಾಶ್ ಹೆಗ್ಡೆ ಅವರ ವರದಿ ಮೂಲೆಗುಂಪಾಗಿದೆ. ಮಧುಸೂದನ ನಾಯಕ್ ವರದಿ ಹೊರಗೆ ಬರಲೇ ಇಲ್ಲ ಎಂದು ಆಕ್ಷೇಪಿಸಿದರು.

ಯೋಗೇಶ್ ಗೌಡ ಹತ್ಯೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ಗೆ ವಿನಯ್ ಕುಲಕರ್ಣಿ ಅರ್ಜಿ

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಹೈಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.

ಜನಪ್ರತಿನಿಧಿಗಳ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿರುವ ಕನ್ವಿಕ್ಷನ್ ಆದೇಶವನ್ನು ಪ್ರಶ್ನಿಸಿ, ಶಿಕ್ಷೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡುವಂತೆ ಹಾಗೂ ಜಾಮೀನು ಮಂಜೂರು ಮಾಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ತಮ್ಮ ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಎದುರಿರುವ ಹಿನ್ನೆಲೆಯಲ್ಲಿ, ತಕ್ಷಣ ಶಿಕ್ಷೆಗೆ ತಡೆ ನೀಡುವುದು ಅಗತ್ಯವೆಂದು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ.

ಎಎಪಿ ತೊರೆದು ಬಿಜೆಪಿ ಸೇರ್ಪಡೆ ವಿಚಾರ: ರಾಘವ್ ಛಡ್ಡಾ ನಿರ್ಧಾರ ಸರಿಯಾಗಿದೆ – ಅಣ್ಣಾ ಹಜಾರೆ

0

ಮಹಾರಾಷ್ಟ್ರ: ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿರುವ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಹಾಗೂ ಇತರೆ ಸದಸ್ಯರ ನಿರ್ಧಾರ ಕುರಿತು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ತೆಗೆದುಕೊಂಡಿರುವ ಈ ನಿರ್ಧಾರ ಸರಿಯಾದ ಮಾರ್ಗದ ಆಯ್ಕೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಹಾರಾಷ್ಟ್ರದ ಅಹಿಲ್ಯಾನಗರದಲ್ಲಿ ಮಾತನಾಡಿದ ಹಜಾರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ಅಭಿಪ್ರಾಯ ಹೊಂದುವ ಹಕ್ಕಿದೆ ಎಂದು ಹೇಳಿದರು. ಛಡ್ಡಾ ಸೇರಿದಂತೆ ಇತರರು ಪಕ್ಷದ ಒಳಗೆ ಕೆಲವು ಸಂಕಷ್ಟಗಳನ್ನು ಎದುರಿಸಿದ್ದರಿಂದಲೇ ಅವರು ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿರಬಹುದು ಎಂದು ತಿಳಿಸಿದ್ದಾರೆ.

ಇದೇ ವೇಳೆ, ಈ ಬೆಳವಣಿಗೆಗೆ ಎಎಪಿ ನಾಯಕತ್ವದ ವೈಫಲ್ಯವೂ ಕಾರಣವಾಗಿರಬಹುದು ಎಂದು ಅವರು ಟೀಕಿಸಿದರು. ಪಕ್ಷ ಸರಿಯಾದ ದಾರಿಯಲ್ಲಿ ನಡೆದಿದ್ದರೆ ಸದಸ್ಯರು ಹೊರಬರುವ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.

ಪಕ್ಷದೊಳಗಿನ ಅಸಮಾಧಾನ ಮತ್ತು ಸಮಸ್ಯೆಗಳೇ ಈ ರೀತಿಯ ನಿರ್ಧಾರಕ್ಕೆ ಕಾರಣವಾಗಿರಬಹುದು. ಎಲ್ಲವೂ ಸಮರ್ಪಕವಾಗಿದ್ದರೆ ಅವರು ಪಕ್ಷ ತೊರೆಯುವ ಅಗತ್ಯವೇ ಇರಲಿಲ್ಲ ಎಂದು ಅಣ್ಣಾ ಹಜಾರೆ ತಿಳಿಸಿದ್ದಾರೆ.

ಇರಾನ್ ಸಂಘರ್ಷದ ಪರಿಣಾಮ: ಕಾಂಡೋಮ್ ದರದಲ್ಲಿ ಶೇ.20-30 ಏರಿಕೆ ಸಾಧ್ಯತೆ!

0

ಕೌಲಾಲಂಪುರ: ಇರಾನ್ ಸಂಘರ್ಷದ ಪರಿಣಾಮವಾಗಿ ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾಗಿರುವ ವ್ಯತ್ಯಯದಿಂದ ಕಾಂಡೋಮ್ ದರಗಳು ಶೀಘ್ರದಲ್ಲೇ ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ವಿಶ್ವದ ಅತಿದೊಡ್ಡ ಕಾಂಡೋಮ್ ತಯಾರಕ ಸಂಸ್ಥೆಯಾದ ಮಲೇಷ್ಯಾ ಮೂಲದ ಕಾರೆಕ್ಸ್ ಕಂಪನಿ, ಕಾಂಡೋಮ್ ದರಗಳು ಶೇ. 20ರಿಂದ 30ರವರೆಗೆ ಏರಿಕೆಯಾಗಬಹುದು ಎಂದು ತಿಳಿಸಿದೆ. ಹೆಚ್ಚುತ್ತಿರುವ ವೆಚ್ಚವನ್ನು ಗ್ರಾಹಕರ ಮೇಲೆ ಹಾಕುವುದು ಅನಿವಾರ್ಯವಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಜಾಗತಿಕ ಮಟ್ಟದಲ್ಲಿ ಕಾಂಡೋಮ್ ಪೂರೈಕೆಯ ಬಹುಪಾಲು ಮಲೇಷ್ಯಾ ಸೇರಿದಂತೆ ಆಗ್ನೇಯ ಏಷ್ಯಾದ ದೇಶಗಳಿಂದಲೇ ನಡೆಯುತ್ತದೆ. ಆದರೆ ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಹಾರ್ಮುಜ್ ಜಲಸಂಧಿ ಮತ್ತು ಕೆಂಪು ಸಮುದ್ರ ಮಾರ್ಗಗಳಲ್ಲಿ ಸಾಗಾಣಿಕೆಗೆ ಭದ್ರತಾ ಸವಾಲು ಎದುರಾಗಿದೆ. ಇದರ ಪರಿಣಾಮವಾಗಿ ಹಡಗುಗಳು ದೀರ್ಘವಾದ ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗಿ ಬಂದಿದ್ದು, ಸಾಗಣೆ ಮತ್ತು ವಿಮಾ ವೆಚ್ಚಗಳು ಹೆಚ್ಚಳ ಕಂಡಿವೆ.

ಈ ಕಾರಣದಿಂದ ಯುರೋಪ್ ಮತ್ತು ಅಮೆರಿಕದಂತಹ ಮಾರುಕಟ್ಟೆಗಳಿಗೆ ಸರಕು ತಲುಪಲು ಹಿಂದಿನ 3-4 ವಾರಗಳ ಬದಲು ಈಗ 6ರಿಂದ 8 ವಾರಗಳ ಕಾಲ ಹಿಡಿಯುತ್ತಿದೆ. ಈ ವಿಳಂಬದಿಂದ ಮಾರುಕಟ್ಟೆಯಲ್ಲಿ ಕೃತಕ ಅಭಾವ ಉಂಟಾಗಿ ಬೆಲೆ ಏರಿಕೆಗೆ ಕಾರಣವಾಗುತ್ತಿದೆ.

ಇದೇ ವೇಳೆ, ಕಾಂಡೋಮ್ ತಯಾರಿಕೆಗೆ ಅಗತ್ಯವಾದ ಸಿಲಿಕೋನ್ ಆಯಿಲ್, ಅಮೋನಿಯಾ ಹಾಗೂ ಸಿಂಥೆಟಿಕ್ ರಬ್ಬರ್‌ನಂತಹ ಪೆಟ್ರೋಕೆಮಿಕಲ್ ವಸ್ತುಗಳ ಬೆಲೆಯೂ ಗಣನೀಯವಾಗಿ ಏರಿಕೆಯಾಗಿದೆ. ತೈಲ ಬೆಲೆ ಏರಿಕೆಯಿಂದಾಗಿ ಕೆಲವು ಕಚ್ಚಾ ವಸ್ತುಗಳ ದರಗಳು ಶೇ. 100ರವರೆಗೆ ಹೆಚ್ಚಿರುವುದಾಗಿ ವರದಿಯಾಗಿದೆ.

ಅಲ್ಲದೆ, ಕಾಂಡೋಮ್ ಪ್ಯಾಕಿಂಗ್‌ಗೆ ಬಳಸುವ ಅಲ್ಯೂಮಿನಿಯಂ ಫಾಯಿಲ್ ಮತ್ತು ಪಿವಿಸಿ ವಸ್ತುಗಳ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿ ದರ ಏರಿಕೆಯಾಗಿದೆ. ಜೊತೆಗೆ, ಜಾಗತಿಕ ಹಣದುಬ್ಬರದಿಂದ ಕಾರ್ಮಿಕರ ಕೂಲಿಯೂ ಹೆಚ್ಚಿರುವುದು ಉತ್ಪಾದನಾ ವೆಚ್ಚವನ್ನು ಮತ್ತಷ್ಟು ಹೆಚ್ಚಿಸಿದೆ.

ಪೂರೈಕೆಯಲ್ಲಿ ಉಂಟಾದ ಕೊರತೆಯಿಂದ ಕಾಂಡೋಮ್‌ಗಳ ಬೇಡಿಕೆಯೂ ಶೇ. 30ರಷ್ಟು ಏರಿಕೆಯಾಗಿದೆ. ಈ ಎಲ್ಲಾ ಕಾರಣಗಳಿಂದ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ವಿಶ್ವದ ಪ್ರತಿ ಐದು ಕಾಂಡೋಮ್‌ಗಳಲ್ಲಿ ಒಂದನ್ನು ತಯಾರಿಸುವ ಕಾರೆಕ್ಸ್ ಸಂಸ್ಥೆಯ ಈ ಘೋಷಣೆಯಿಂದ, ಭಾರತದಲ್ಲಿ ಲಭ್ಯವಿರುವ ಡ್ಯುರೆಕ್ಸ್, ಟ್ರೋಜನ್ ಸೇರಿದಂತೆ ಅಂತರಾಷ್ಟ್ರೀಯ ಬ್ರ್ಯಾಂಡ್‌ಗಳ ಬೆಲೆಯೂ ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆ ಇದೆ.

error: Content is protected !!