ಬೆಂಗಳೂರು: ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, 12 ಸಾವಿರ ಕ್ಯೂಸೆಕ್ ನೀರು ಬಿಡುವ ಆದೇಶ ತಮ್ಮ ಗಮನಕ್ಕೆ ಬಂದಿದೆ. ಸದ್ಯ ಕಾವೇರಿ ಜಲಾನಯನ ಪ್ರದೇಶದಲ್ಲಿನ ಒಳಹರಿವಿನ ಪ್ರಮಾಣವನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
“ನಮ್ಮ ಪರಿಸ್ಥಿತಿಯನ್ನು ನೋಡಿಕೊಂಡು ರೈತರನ್ನು ಕಾಪಾಡುವುದು ನಮ್ಮ ಕರ್ತವ್ಯ. ರೈತರನ್ನೂ ಕಾಪಾಡಬೇಕು, ಕೋರ್ಟ್ ಆದೇಶವನ್ನೂ ಪಾಲಿಸಬೇಕು. ಎರಡನ್ನೂ ಗಮನದಲ್ಲಿಟ್ಟುಕೊಂಡು ನೀರಾವರಿ ಸಚಿವರೊಂದಿಗೆ ಚರ್ಚಿಸುತ್ತೇವೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬೆಳೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಈಗಾಗಲೇ ಸೂಚಿಸಲಾಗಿದೆ. ಕಾವೇರಿ ಮಾತ್ರವಲ್ಲದೆ ರಾಜ್ಯದ ಎಲ್ಲ ಜಲಾಶಯಗಳಲ್ಲಿರುವ ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಬೆಳೆಗಳ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ರೈತರು ಆತಂಕ ಪಡಬಾರದು ಎಂದು ಮನವಿ ಮಾಡಿದ ಡಿಕೆಶಿ, “ತಾಳ್ಮೆಯಿಂದ ಇರಿ. ನಿಮಗಾಗಿಯೇ ನಾವು ಇದ್ದೇವೆ. ಜನರು ಅಧಿಕಾರ ನೀಡಿರುವುದು ರೈತರನ್ನು ಬದುಕಿಸಲು” ಎಂದು ಹೇಳಿದರು.
ಇದೇ ವೇಳೆ, ನಾಳೆ ಸಚಿವರು ಹಾಗೂ ಪಕ್ಷದ ಪ್ರಮುಖ ನಾಯಕರ ಸಭೆ ಕರೆಯಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಪಕ್ಷದ ಮುಂದಿನ ‘ಪ್ಲ್ಯಾನ್ ಆಫ್ ಆಕ್ಷನ್’ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ರಾಜಕೀಯವಾಗಿ ಎದುರಾಗಬಹುದಾದ ಬೆಳವಣಿಗೆಗಳನ್ನು ಹೇಗೆ ನಿರ್ವಹಿಸಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದರು.
ನಾಡಿದ್ದು ಸಚಿವ ಸಂಪುಟ ಸಭೆ ನಡೆಯಲಿದ್ದು, ಅದಕ್ಕೂ ಮುನ್ನ ನಾಳೆ ರಾಜಕೀಯ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

