Home Blog

ಬೆಂಗಳೂರಿನಲ್ಲಿ ಮತ್ತೆ ಆತಂಕ: ಕುಸಿಯುವ ಹಂತದಲ್ಲಿರುವ ಗೋಡೆಗಳು, ಅಧಿಕಾರಿಗಳ ನಿರ್ಲಕ್ಷ್ಯ!

ಬೆಂಗಳೂರು: ಇತ್ತೀಚೆಗೆ ನಗರದ ಬೋರಿಂಗ್ ಆಸ್ಪತ್ರೆ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿದ ಘಟನೆ ಬಳಿಕವೂ ಅಪಾಯಕಾರಿ ಕಟ್ಟಡಗಳ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

ಘಟನೆಯ ನಂತರ ಜಿಬಿಎ ಅಧಿಕಾರಿಗಳು ಕಾಟಾಚಾರಕ್ಕೆ ಕೆಲ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದರೂ, ಹಲವೆಡೆ ಕುಸಿಯುವ ಹಂತದಲ್ಲಿರುವ ಗೋಡೆಗಳು ಮತ್ತು ಕಾಂಪೌಂಡ್‌ಗಳು ಇನ್ನೂ ಅಪಾಯಕರ ಸ್ಥಿತಿಯಲ್ಲೇ ಇವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಗರದ ಆಸ್ಪತ್ರೆಗಳು, ಶಾಲೆಗಳು ಹಾಗೂ ಕಾಲೇಜುಗಳ ಸುತ್ತಮುತ್ತಲಿನ ಗೋಡೆಗಳಲ್ಲಿ ಗಂಭೀರ ಬಿರುಕುಗಳು ಕಾಣಿಸಿಕೊಂಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ. ವಿಶೇಷವಾಗಿ ಕಿಮ್ಸ್ ಆಸ್ಪತ್ರೆ ಸಮೀಪದ ಒಂದು ಕಾಲೇಜಿನ ಕಾಂಪೌಂಡ್ ಗೋಡೆ ಹಲವು ವರ್ಷಗಳಿಂದ ದುರ್ಬಲ ಸ್ಥಿತಿಯಲ್ಲಿದ್ದು, ಯಾವ ಕ್ಷಣದಲ್ಲಾದರೂ ಕುಸಿಯುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಗೋಡೆಗಳ ಬಳಿ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದು, ಪಾದಚಾರಿಗಳು ಕೂಡ ನಿರಂತರವಾಗಿ ಸಂಚರಿಸುತ್ತಿದ್ದಾರೆ. ಮಳೆ ಬಂದರೆ ಗೋಡೆ ಕುಸಿಯುವ ಅಪಾಯ ಹೆಚ್ಚಾಗಿದ್ದು, ಮತ್ತೊಂದು ದುರ್ಘಟನೆ ಸಂಭವಿಸುವ ಮುನ್ನವೇ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಪಾಯಕಾರಿ ಕಟ್ಟಡಗಳು ಹಾಗೂ ಗೋಡೆಗಳನ್ನು ತಕ್ಷಣ ಪರಿಶೀಲಿಸಿ ತೆರವುಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದು, ಜಿಬಿಎ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ 10 ಲಕ್ಷ ಕೋಟಿ ಸಾಲದ ಹೊರೆ? ಡಿಎಂಕೆ ಸರ್ಕಾರದ ವಿರುದ್ಧ ಗುಡುಗಿದ ಸಿಎಂ ವಿಜಯ್!

ಚೆನ್ನೈ: ತಮಿಳುನಾಡಿನ ಪ್ರಸ್ತುತ ಆರ್ಥಿಕ ಸ್ಥಿತಿಗತಿಯ ಬಗ್ಗೆ ಸಾರ್ವಜನಿಕರಿಗೆ ಪಾರದರ್ಶಕ ಮಾಹಿತಿ ನೀಡಲು ಶ್ವೇತಪತ್ರ  ಬಿಡುಗಡೆ ಮಾಡುವುದಾಗಿ ನೂತನ ಮುಖ್ಯಮಂತ್ರಿ ಹಾಗೂ TVK ಮುಖ್ಯಸ್ಥ ವಿಜಯ್ ಅವರು ಘೋಷಿಸಿದ್ದಾರೆ.

ಪ್ರಮಾಣವಚನ ಸ್ವೀಕರಿಸಿದ ನಂತರ ನಡೆದ ತಮ್ಮ ಮೊದಲ ಭಾಷಣದಲ್ಲಿ ಅವರು ಹಿಂದಿನ ಡಿಎಂಕೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯವನ್ನು ಸುಮಾರು 10 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲದ ಹೊರೆ ಜೊತೆಗೆ ಸ್ವೀಕರಿಸಿದ್ದೇನೆ ಎಂದು ಹೇಳಿದ ವಿಜಯ್, ಸಾರ್ವಜನಿಕರಿಗೆ ನೈಜ ಸ್ಥಿತಿಯನ್ನು ತಿಳಿಸುವುದು ತಮ್ಮ ಕರ್ತವ್ಯವಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಹಿನ್ನೆಲೆಯಲ್ಲಿ ಶ್ವೇತಪತ್ರ ಬಿಡುಗಡೆ ಮಾಡಲಾಗುವುದು ಎಂದು ಅವರು ಘೋಷಿಸಿದರು.

“ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಮೋಸಗೊಳಿಸುವ ರಾಜಕಾರಣವನ್ನು ನಾನು ಮಾಡುವುದಿಲ್ಲ. ನನ್ನ ಸರ್ಕಾರ ಸಂಪೂರ್ಣ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದೆ” ಎಂದು ಅವರು ಹೇಳಿದರು. ಸರ್ಕಾರದ ಪ್ರತಿಯೊಂದು ನಿರ್ಧಾರವೂ ಜನರಿಗೆ ತಿಳಿಯುವಂತೆ ಮಾಡಲಾಗುವುದು ಎಂದೂ ಅವರು ಭರವಸೆ ನೀಡಿದರು.

“ಇದು ಕೇವಲ ನನ್ನ ಸರ್ಕಾರವಲ್ಲ, ಇದು ಜನರ ಸರ್ಕಾರ”. ಅಧಿಕಾರವನ್ನು ಜನಸೇವೆಯ ಜವಾಬ್ದಾರಿಯಾಗಿ ನೋಡಬೇಕು ಎಂದು ಒತ್ತಿ ಹೇಳಿದರು. ರಾಜ್ಯದ ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲು ಸ್ವಲ್ಪ ಸಮಯ ನೀಡಬೇಕೆಂದು ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಮಾದಕ ದ್ರವ್ಯಗಳ ಹಾವಳಿಯನ್ನು ಸಂಪೂರ್ಣವಾಗಿ ಅಂತ್ಯಗೊಳಿಸುವುದು ತಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ವಿಜಯ್ ಘೋಷಿಸಿದರು.

 

ಪ್ರಧಾನಿ ಮೋದಿಗೆ 13 ಕೆಜಿ ಬೆಳ್ಳಿ ಪ್ರತಿಮೆ ನೀಡಿ ಸನ್ಮಾನ: ಕರ್ನಾಟಕದ ಸಿಎಂ ಬಗ್ಗೆ ವ್ಯಂಗ್ಯವಾಡಿದ ‘ನಮೋ’!

ಬೆಂಗಳೂರು: ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕಕ್ಕೆ ಆಗಮಿಸಿದರು.

ಬೆಂಗಳೂರಿನ ಎಚ್‌ಎಎಲ್ ಆವರಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರಿಂದ ಪ್ರಧಾನಿಗೆ ಅದ್ಧೂರಿ ಸನ್ಮಾನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ 13 ಕೆಜಿ ತೂಕದ ಬೆಳ್ಳಿಯ ಪ್ರತಿಮೆ ನೀಡಿ ಗೌರವಿಸಲಾಯಿತು. ಈ ವೇಳೆ ಬಿಜೆಪಿ ನಾಯಕರಿಂದ ಜಯಭೇರಿ ಸಂಭ್ರಮವೂ ವ್ಯಕ್ತವಾಯಿತು.

ಈ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಚುನಾವಣಾ ಯಶಸ್ಸಿನ ಸಂಭ್ರಮ ಹಂಚಿಕೊಳ್ಳಲಾಗಿದ್ದು, ನಾಯಕರು ಒಟ್ಟಾಗಿ ಕೇಂದ್ರ ನಾಯಕತ್ವಕ್ಕೆ ಅಭಿನಂದನೆ ಸಲ್ಲಿಸಿದರು.  ಇದೇ ವೇಳೆ, ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದ ಮೋದಿ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ’ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್​​ ಎಲ್ಲೆಲ್ಲಿ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲ ಒಂದೊಂದು ಸಮಸ್ಯೆ ಇದ್ದೇ ಇರುತ್ತದೆ. ಹಿಮಾಚಲ ಪ್ರದೇಶದಲ್ಲಿ ಸಫಾಯಿ ಕರ್ಮಚಾರಿಗಳಿಗೆ ವೇತನ ದೊರೆಯುತ್ತಿಲ್ಲ. ತೆಲಂಗಾಣದಲ್ಲಿ ರೈತರ ಆತ್ಮಹತ್ಯೆಗಳಾಗುತ್ತಿವೆ. ಕೇರಳದಲ್ಲಿ ಬಹುಮತದೊಂದಿಗೆ ಚುನಾವಣೆ ಗೆದ್ದರೂ ಇನ್ನೂ ಸಿಎಂ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇಲ್ಲಿ ಕರ್ನಾಟಕದಲ್ಲೂ ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರದ ಆಂತರಿಕ ಕಚ್ಚಾಟವನ್ನು ಮೋದಿ ಲೇವಡಿ ಮಾಡಿದರು.

ಕಾಂಗ್ರೆಸ್​ ಸರ್ಕಾರ ಎಲ್ಲೆಲ್ಲಿ ಇದೆಯೋ ಅಲ್ಲೆಲ್ಲ ಖಜಾನೆ ಲೂಟಿ ಹೊಡೆಯುತ್ತಿದ್ದಾರೆ. ಜನರು ಸಮಸ್ಯೆಗಳಿಂದ ಬಳಲುತ್ತಿದ್ದರೆ, ಸರ್ಕಾರದ ನಾಯಕರು ಮಾತ್ರ ಲೂಟಿ ಹೊಡೆದ ಹಣಕ್ಕಾಗಿ ಆಂತರಿಕ ಜಗಳ ಮತ್ತು ಕುರ್ಚಿ ಕಿತ್ತಾಟದಲ್ಲಿ ಮುಳುಗಿದ್ದಾರೆ. ರಾಜಸ್ಥಾನದಲ್ಲಿ ಏನಾಯಿತು ಎಂಬುದು ನಿಮಗೆ ಗೊತ್ತಿದೆ, ಕರ್ನಾಟಕದಲ್ಲೂ ಅದೇ ಹಾದಿ ಮುಂದುವರಿಯುತ್ತಿದೆ ಎಂದು ಮೋದಿ ಹೇಳಿದರು.

ಮಳೆ ನೀರಿಗೆ ಸರ್ಕಾರಿ ಫೈಲ್‌ಗಳು ನಾಶ: ಬಿಸಿಲಿನಲ್ಲಿ ಫೈಲ್‌ಗಳನ್ನು ಒಣಗಿಸುತ್ತಿರುವ ಸಿಬ್ಬಂದಿ!

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಕಡತಗಳ ಸುರಕ್ಷತೆ ಅಧಿಕಾರಿಗಳ ಮೂಲಭೂತ ಜವಾಬ್ದಾರಿಯಾಗಿದ್ದರೂ, ನಗರದ ಕೆ.ಆರ್. ಸರ್ಕಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆ (PWD) ಕಚೇರಿಯಲ್ಲಿ ಗಂಭೀರ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ.

ಮಳೆಯ ನೀರು ನುಗ್ಗಿದ ಪರಿಣಾಮ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವ್ಯವಹಾರಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಹಾನಿಗೊಂಡಿರುವ ಘಟನೆ ನಡೆದಿದೆ.

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಕಚೇರಿಯ ನೆಲಮಹಡಿಗೆ ನೀರು ನುಗ್ಗಿದ್ದು, ಭೂಸ್ವಾಧೀನ ಹಾಗೂ ಪರಿಹಾರ ಕಾರ್ಯಗಳಿಗೆ ಸಂಬಂಧಿಸಿದ ಪ್ರಮುಖ ಕಡತಗಳು ಸಂಪೂರ್ಣವಾಗಿ ಒದ್ದೆಯಾಗಿವೆ. ದಾಖಲೆಗಳ ಮಹತ್ವ ಅರಿತಿದ್ದರೂ ಅವುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸದ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸ್ಥಿತಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಹಾನಿಗೊಂಡ ಕಡತಗಳನ್ನು ಪ್ರಸ್ತುತ ಕಚೇರಿಯ ಮುಂಭಾಗದಲ್ಲಿ ಬಿಸಿಲಿಗೆ ಒಣಗಿಸಲು ಇಡಲಾಗಿದ್ದು, ಕೆಲವು ದಾಖಲೆಗಳಲ್ಲಿನ ಬರಹಗಳು ಮತ್ತು ಅಧಿಕೃತ ಟಿಪ್ಪಣಿಗಳು ಅಳಿದುಹೋಗಿರುವ ಆತಂಕ ವ್ಯಕ್ತವಾಗಿದೆ. ಇದರಿಂದ ಆಡಳಿತಾತ್ಮಕ ವ್ಯವಹಾರಗಳ ಪಾರದರ್ಶಕತೆ ಮೇಲೆ ಪ್ರಶ್ನೆಗಳು ಉದ್ಭವಿಸಿವೆ.

ಕೋಟ್ಯಂತರ ರೂಪಾಯಿ ಮೌಲ್ಯದ ವ್ಯವಹಾರಗಳಿಗೆ ಸಂಬಂಧಿಸಿದ ಈ ದಾಖಲೆಗಳ ನಾಶದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸಚಿವ ಡಿ. ಸುಧಾಕರ್ ನಿಧನ: ಸಿಎಂ ಸಂತಾಪ, ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ!

ಚಿತ್ರದುರ್ಗ: ರಾಜ್ಯ ರಾಜಕೀಯದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಅವರು ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 3:15ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ತಿಳಿಸಿವೆ.

ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಡಿ. ಸುಧಾಕರ್ ಅವರಿಗೆ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದ ಕಾರಣ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿದಿದ್ದರೂ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.

ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ. “ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ತಮ್ಮ ಸಂದೇಶದಲ್ಲಿ, ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದೆ, ಅವರು ಗುಣಮುಖರಾಗುವ ಭರವಸೆ ನನಗಿತ್ತು. ಆದರೆ ವೈದ್ಯರ ನಿರಂತರ ಪ್ರಯತ್ನಗಳ ನಡುವೆಯೂ ಅವರು ನಮ್ಮನ್ನಗಲಿದ್ದಾರೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆ ಹೊಂದಿದ್ದ ಸುಧಾಕರ್ ಅವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ಸಿಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಮತ್ತು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಬಳಿಕ, ಡಿ. ಸುಧಾಕರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲು ವ್ಯವಸ್ಥೆ ಮಾಡಲಾಗಿದೆ. ಚಳ್ಳಕೆರೆಯಲ್ಲಿರುವ ಸುಧಾಕರ್ ಶಟಲ್ ಕಾಕ್ ಕೋರ್ಟ್‌ನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ.

ಈ ಘಟನೆಯಿಂದ ರಾಜ್ಯ ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ಆವರಿಸಿದೆ.

ತಮಿಳುನಾಡಿನಲ್ಲಿ ಹೊಸ ಯುಗ ಆರಂಭ: ನೂತನ ಸಿಎಂ ಆಗಿ ನಟ ವಿಜಯ್ ಪ್ರಮಾಣವಚನ!

ಚೆನ್ನೈ: ತಮಿಳು ನಾಡು ರಾಜಕಾರಣದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದೆ. ನಟ ಹಾಗೂ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ಅವರು ಇಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿದ್ದು, ಬಳಿಕ ರಾಜ್ಯಪಾಲರು ಮಾತನಾಡಿ ನಂತರ ವಿಜಯ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. “ನಾನು ಸಿ. ಜೋಸೆಫ್ ವಿಜಯ್ ಎನ್ನುವ ನಾನು…” ಎಂದು ಹೇಳುತ್ತಾ ವಿಜಯ್ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಅವರ ತಂದೆ–ತಾಯಿ ಭಾವುಕರಾಗಿ ಮಗನನ್ನು ನೋಡಿ ಕೈಮುಗಿದ ದೃಶ್ಯ ಗಮನ ಸೆಳೆದಿತು.

ಸಿನಿಮಾ ಲೋಕದಿಂದ ರಾಜಕೀಯಕ್ಕೆ ಎಂಟ್ರಿ ನೀಡಿದ ವಿಜಯ್, 2009ರಲ್ಲಿ ಅಭಿಮಾನಿ ಸಂಘಟನೆ ‘ವಿಜಯ್ ಮಕ್ಕಳ್ ಅಯ್ಯಕಂ’ ಮೂಲಕ ಸಾಮಾಜಿಕ ಸೇವೆ ಆರಂಭಿಸಿದ್ದರು. ನಂತರ 2024 ಫೆಬ್ರವರಿ 2ರಂದು ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಅಧಿಕೃತವಾಗಿ ಸ್ಥಾಪಿಸಿದ್ದರು. ಅದೇ ವರ್ಷ ಅಕ್ಟೋಬರ್‌ನಲ್ಲಿ ವಿಕ್ರವಂಡಿಯಲ್ಲಿ ಮೊದಲ ಮಹಾಸಮಾವೇಶ ನಡೆಸಿ ರಾಜಕೀಯ ಪಯಣಕ್ಕೆ ವೇಗ ನೀಡಿದ್ದರು.

ಈ ಮಧ್ಯೆ 2025ರ ಸೆಪ್ಟೆಂಬರ್‌ನಲ್ಲಿ ಕರೂರು ಕಾಲ್ತುಳಿತ ದುರಂತದಲ್ಲಿ 41 ಜನರು ಸಾವನ್ನಪ್ಪಿ, 80ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಜ್ಯವನ್ನು ತತ್ತರಗೊಳಿಸಿತ್ತು. ಆದರೆ ಈ ಘಟನೆಯ ನಂತರವೂ ವಿಜಯ್ ರಾಜಕೀಯದಿಂದ ಹಿಂದೆ ಸರಿಯದೆ 2026ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಯಶಸ್ಸು ಸಾಧಿಸಿದ್ದಾರೆ.

ಟಿವಿಕೆ ಪಕ್ಷವು ಮೊದಲ ಪ್ರಯತ್ನದಲ್ಲೇ ಅಧಿಕಾರಕ್ಕೆ ಬಂದಿದ್ದು, ಚುನಾವಣಾ ತಂತ್ರಜ್ಞರಾದ ಕಪಿಲ್ ಸಾಹು ಮತ್ತು ಜಾನ್ ಆರೋಗ್ಯಸ್ವಾಮಿ ಅವರ ಮಾರ್ಗದರ್ಶನ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿದುಬಂದಿದೆ.

ಸರ್ಕಾರವು ಹಲವು ಜನಹಿತ ಘೋಷಣೆಗಳನ್ನು ಕೂಡ ಮಾಡಿದೆ. ಮನೆ ಯಜಮಾನಿಗೆ ಮಾಸಿಕ ₹2,500, ಉಚಿತ ಸಿಲಿಂಡರ್ ಯೋಜನೆ, ಮಹಿಳಾ ಮದುವೆಗೆ ಚಿನ್ನ, ಬಡ್ಡಿರಹಿತ ಸಾಲ, ಉಚಿತ ಬಸ್ ಪ್ರಯಾಣ, ವಿದ್ಯುತ್ ಹಾಗೂ ನೀರಿನ ಉಚಿತ ಸೇವೆ, ರೈತರ ಸಾಲ ಮನ್ನಾ, ನಿರುದ್ಯೋಗಿಗಳಿಗೆ ಧನಸಹಾಯ ಸೇರಿದಂತೆ ಹಲವು ಭರವಸೆಗಳನ್ನು ಘೋಷಿಸಲಾಗಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಕರ ಘಟನೆ: 8 ವರ್ಷದ ಬಾಲಕ ಚಿರತೆಗೆ ಬಲಿ

ಚಾಮರಾಜನಗರ: ಜಿಲ್ಲೆಯ ಪವಿತ್ರ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಮತ್ತೆ ಭೀಕರ ಘಟನೆ ಸಂಭವಿಸಿದೆ.

ನರಭಕ್ಷಕ ಚಿರತೆಯ ದಾಳಿಗೆ ಬೆಂಗಳೂರು ಮೂಲದ 8 ವರ್ಷದ ಬಾಲಕ ಹರ್ಷಿತ್ ದುರ್ಮರಣಕ್ಕೀಡಾದ ಘಟನೆ ಇಂದು ಮುಂಜಾನೆ ನಡೆದಿದೆ.

ಹರ್ಷಿತ್ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆ ಕಡೆಗೆ ಪಾದಯಾತ್ರೆ ಕೈಗೊಂಡಿದ್ದ ವೇಳೆ, ಸುಮಾರು ಬೆಳಿಗ್ಗೆ 7 ಗಂಟೆ ವೇಳೆಗೆ ದಟ್ಟ ಅರಣ್ಯದ ಹಾದಿಯಲ್ಲಿ ಈ ದುರ್ಘಟನೆ ನಡೆದಿದೆ. ಪೊದೆಯಲ್ಲಿ ಹೊಂಚು ಹಾಕಿದ್ದ ಚಿರತೆ ಕ್ಷಣಾರ್ಧದಲ್ಲಿ ಬಾಲಕನ ಮೇಲೆ ದಾಳಿ ಮಾಡಿ ಕಾಡಿನೊಳಗೆ ಎಳೆದುಕೊಂಡು ಹೋಗಿದೆ ಎಂದು ತಿಳಿದುಬಂದಿದೆ.

ಕುಟುಂಬಸ್ಥರು ಕಿರುಚಾಡಿ ರಕ್ಷಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ನಂತರ ಸ್ಥಳೀಯರು ಹಾಗೂ ಅರಣ್ಯ ಸಿಬ್ಬಂದಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ಪತ್ತೆಯಾಗಿದೆ. ಚಿರತೆ ದಾಳಿಯಿಂದ ದೇಹದ ಕೆಲವು ಭಾಗಗಳು ಹಾನಿಗೊಂಡಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

ಮಲೆ ಮಹದೇಶ್ವರ ಬೆಟ್ಟ ಹಾಗೂ ಸುತ್ತಮುತ್ತಲಿನ ಕಾಡಂಚು ಪ್ರದೇಶಗಳಲ್ಲಿ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ ಕೂಡ ಇದೇ ಪ್ರದೇಶದಲ್ಲಿ ಚಿರತೆ ದಾಳಿಗೆ ಹಲವು ಜೀವಗಳು ಬಲಿಯಾಗಿದ್ದವು.

ಈ ಘಟನೆಯಿಂದ ಯಾತ್ರಾರ್ಥಿಗಳಲ್ಲಿ ಭೀತಿ ಹೆಚ್ಚಿದ್ದು, ಅರಣ್ಯ ಇಲಾಖೆ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಅರಣ್ಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ತ್ಯಾಗದ ಪ್ರತಿರೂಪ ಅಮ್ಮ: ವಿಶ್ವ ತಾಯಂದಿರ ದಿನದ ಶುಭಾಶಯಗಳು!

ತಾಯಿಯ ನಿಷ್ಕಲ್ಮಶ ಪ್ರೀತಿ, ತ್ಯಾಗ ಮತ್ತು ಮಮತೆಯನ್ನು ಗೌರವಿಸುವ ವಿಶ್ವ ತಾಯಂದಿರ ದಿನವನ್ನು ಇಂದು ದೇಶದಾದ್ಯಂತ ಆಚರಿಸಲಾಗುತ್ತಿದೆ.

ಪ್ರತಿ ವರ್ಷದ ಮೇ ತಿಂಗಳ ಎರಡನೇ ಭಾನುವಾರದಂದು ಆಚರಿಸಲಾಗುವ ಈ ವಿಶೇಷ ದಿನ, ತಾಯಿಯ ಮಹತ್ವವನ್ನು ಸ್ಮರಿಸುವ ದಿನವಾಗಿದೆ.

ತಾಯಿ ತನ್ನ ಕುಟುಂಬ ಮತ್ತು ಮಕ್ಕಳಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧಳಾಗುವ ದೈವಸ್ವರೂಪಿಯಾಗಿದ್ದು, ತನ್ನ ನೋವನ್ನು ಮರೆಯುವ ಮೂಲಕ ಮಕ್ಕಳ ಸಂತೋಷವನ್ನೇ ಮೊದಲಿಗಾಗಿಸಿಕೊಂಡು ಬದುಕುವವಳು ಎಂದು ಸಮಾಜದಲ್ಲಿ ಗೌರವಿಸಲಾಗುತ್ತದೆ. ಅದಕ್ಕಾಗಿಯೇ ತಾಯಿಯನ್ನು “ಕಣ್ಣಿಗೆ ಕಾಣುವ ದೇವರು” ಎಂದು ಕರೆಯಲಾಗುತ್ತದೆ.

ಈ ವಿಶೇಷ ದಿನದ ಅಂಗವಾಗಿ ಜನರು ತಮ್ಮ ತಾಯಿಗೆ ಧನ್ಯವಾದಗಳನ್ನು ಸಲ್ಲಿಸುವುದು, ಶುಭಾಶಯಗಳನ್ನು ಕೋರುವುದು ಹಾಗೂ ಪ್ರೀತಿಯನ್ನು ವ್ಯಕ್ತಪಡಿಸುವುದು ಸಾಮಾನ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಮದರ್ಸ್‌ ಡೇ ಸಂದೇಶಗಳು, ಶುಭಾಶಯಗಳು ಹರಿದಾಡುತ್ತಿವೆ.

ಈ ಸಂದರ್ಭದಲ್ಲಿ “ಮಮತೆಯ ಮಡಿಲು, ತ್ಯಾಗದ ಒಡಲು ಆಗಿರುವ ದೈವಸ್ವರೂಪಿಯಾದ ಎಲ್ಲಾ ತಾಯಂದಿರಿಗೂ ವಿಶ್ವ ತಾಯಂದಿರ ದಿನದ ಶುಭಾಶಯಗಳು” ಎಂಬ ಸಂದೇಶಗಳು ಜನರಲ್ಲಿ ಭಾವನಾತ್ಮಕ ಸ್ಪಂದನೆ ಮೂಡಿಸುತ್ತಿವೆ.

ಅಮ್ಮನ ಪ್ರೀತಿ ಶ್ರೇಷ್ಠವಾದದ್ದು, ಅದಕ್ಕೆ ಸಮಾನವಾದ ಪ್ರೀತಿ ಈ ಜಗತ್ತಿನಲ್ಲಿ ಇಲ್ಲ ಎಂಬ ಮಾತುಗಳು ಈ ದಿನದ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿವೆ. “ಅತ್ತಾಗ ಕಣ್ಣೀರು ಒರೆಸಿದ ದೇವತೆ, ಬಿದ್ದಾಗ ಎತ್ತಿ ಮುನ್ನಡೆಸಿದ ಮಾತೆ” ಎಂಬ ರೀತಿಯ ಹೃದಯಸ್ಪರ್ಶಿ ಸಂದೇಶಗಳು ಎಲ್ಲೆಡೆ ಗಮನ ಸೆಳೆಯುತ್ತಿವೆ.

ತಾಯಂದಿರ ದಿನದ ಈ ಸಂದರ್ಭದಲ್ಲಿ, ತಾಯಿಯ ತ್ಯಾಗ, ಪ್ರೀತಿ ಮತ್ತು ಶ್ರಮಕ್ಕೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಾಮಾಜಿಕವಾಗಿ ಸಂದೇಶ ನೀಡಲಾಗುತ್ತಿದೆ.

TVK ಪಕ್ಷವನ್ನು ಇಂಡಿಯಾ ಒಕ್ಕೂಟಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸಬೇಕು: ಪಿ. ಚಿದಂಬರಂ

ನವದೆಹಲಿ: ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಭವಿಷ್ಯದಲ್ಲಿ INDIA ಮೈತ್ರಿಕೂಟಕ್ಕೆ ಸೇರುವ ಸಾಧ್ಯತೆ ಇದೆ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಆಶಾವಾದ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯ್ ನೇತೃತ್ವದ TVK ಪಕ್ಷವನ್ನು ಕೂಡ INDIA ಒಕ್ಕೂಟಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸಬೇಕು ಎಂಬುದು ತಮ್ಮ ಆಸೆಯಾಗಿದೆ ಎಂದು ಹೇಳಿದರು.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ಕೆಲ ಅಸಮಾಧಾನ ವ್ಯಕ್ತಪಡಿಸಿದ್ದರೂ, INDIA ಕೂಟದ ಬಗ್ಗೆ ನಕಾರಾತ್ಮಕವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಆದ್ದರಿಂದ ಸ್ಟಾಲಿನ್ ಮೈತ್ರಿಯಲ್ಲೇ ಮುಂದುವರಿಯುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ರಾಜ್ಯ ಮಟ್ಟದಲ್ಲಿ ಪಕ್ಷಗಳು ಪರಸ್ಪರ ಎದುರಾಳಿಗಳಾಗಿದ್ದರೂ, ರಾಷ್ಟ್ರ ಮಟ್ಟದಲ್ಲಿ INDIA ಮೈತ್ರಿಕೂಟದಲ್ಲಿ ಒಟ್ಟಾಗಿ ಕೆಲಸ ಮಾಡಬಹುದು ಎಂದು ಚಿದಂಬರಂ ಅಭಿಪ್ರಾಯಪಟ್ಟರು. ಇದಕ್ಕೆ ಕೇರಳದ ಸಿಪಿಎಂ ಹಾಗೂ ಪಶ್ಚಿಮ ಬಂಗಾಳದ ಟಿಎಂಸಿ ಉದಾಹರಣೆಗಳಾಗಿವೆ ಎಂದು ಅವರು ಉಲ್ಲೇಖಿಸಿದರು.

ಸಿಡಿಲು ಬಡಿದು ರೈತ ಸ್ಥಳದಲ್ಲೇ ಸಾವು

ಹಗರಿಬೊಮ್ಮನಹಳ್ಳಿ: ತಾಲೂಕಿನ ಮೆಟ್ರಿ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಜೆ ನಡೆದಿದೆ. ಗ್ರಾಮದ ಗಿರಿನಳ್ಳಿ ನಾಗಪ್ಪ (52) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ನಾಗಪ್ಪ ಅವರು ತಮ್ಮ ಮೂರು ಎಕರೆ ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ವೇಳೆ ಘಟನೆ ನಡೆದಿದೆ. ತೋಟದಲ್ಲಿದ್ದ “ಆಂಕಳ ಮರದಮ್ಮ” ದೇವರ ಮರದ ಬಳಿ ಸಂಜೆ ನೈವೇದ್ಯ ಸಲ್ಲಿಸಿ ಗ್ರಾಮಸ್ಥರು ತೆರಳಿದ ಬಳಿಕ ನಾಗಪ್ಪ ತೋಟದತ್ತ ಹೋಗಿದ್ದರು ಎನ್ನಲಾಗಿದೆ.

ಸಂಜೆಯ ಬಿಸಿಲಿನ ತಾಪ ಹೆಚ್ಚಿದ್ದ ಹಿನ್ನೆಲೆಯಲ್ಲಿ ನಾಗಪ್ಪ ಮರದ ಆಶ್ರಯ ಪಡೆದಿದ್ದರು. ಇದೇ ವೇಳೆ ಸಂಜೆ 5 ಗಂಟೆ ಸುಮಾರಿಗೆ ಗುಡುಗು-ಸಿಡಿಲು ಸಹಿತ ಮಳೆ ಆರಂಭವಾಗಿದೆ.

ಮರದ ಒಂದು ಭಾಗಕ್ಕೆ ಸಿಡಿಲು ಅಪ್ಪಳಿಸಿದ ಪರಿಣಾಮ, ಮರದ ಕೆಳಗೆ ನಿಂತಿದ್ದ ನಾಗಪ್ಪ ಅವರಿಗೆ ಸಿಡಿಲು ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪತ್ನಿಗೆ ಕಾದಿತ್ತು ಆಘಾತ

ಸಂಜೆಯಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಪತ್ನಿ ತೋಟದತ್ತ ಹುಡುಕಿಕೊಂಡು ಹೋಗಿದ್ದು, ಪತಿಗೆ ಸಿಡಿಲು ಬಡಿದಿರುವುದು ಕಂಡು ಬೆಚ್ಚಿಬಿದ್ದಿದ್ದಾರೆ.

ಈ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!