ನವದೆಹಲಿ: ಜಂತರ್ ಮಂತರ್ನಲ್ಲಿ ನಡೆದ ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಅವರ ತಾಯಿ, ಭಾರತೀಯ ಸೇನೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣಗಳಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ.
ಅತಿರೇಕದ ವರ್ತನೆ ಹಾಗೂ ಅವಹೇಳನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಲು ಮುಂದಾದ ಬೆನ್ನಲ್ಲೇ, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ಕ್ಷಮೆಯಾಚನೆ ಮಾಡುವ ವಿಡಿಯೋಗಳನ್ನು ಹಂಚಿಕೊಂಡಿದ್ದರು.
ಈ ಪೈಕಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನಕಾರಿ ರೀತಿಯಲ್ಲಿ ನಿಂದಿಸಿದ ಆರೋಪ ಎದುರಿಸುತ್ತಿದ್ದ ಅಪ್ರಾಪ್ತ ಬಾಲಕಿಯ ವಿರುದ್ಧದ ಪ್ರಕರಣವನ್ನು ದೆಹಲಿ ಪೊಲೀಸರು ರದ್ದುಗೊಳಿಸಿದ್ದಾರೆ. ಪ್ರಧಾನಿ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮನ್ನು ನಿಂದಿಸಿದ ಮಕ್ಕಳನ್ನು ಕ್ಷಮಿಸಿರುವುದಾಗಿ ಹೇಳಿದ ಬಳಿಕ ಈ ಬೆಳವಣಿಗೆ ನಡೆದಿದೆ.
ಜಂತರ್ ಮಂತರ್ ಪ್ರತಿಭಟನೆ ವೇಳೆ ಅಪ್ರಾಪ್ತ ಬಾಲಕಿಯ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಪ್ರಕರಣ ದಾಖಲಾಗುತ್ತಿದ್ದಂತೆ ಬಾಲಕಿಯ ಕುಟುಂಬ ಆತಂಕಕ್ಕೆ ಒಳಗಾಗಿತ್ತು ಎನ್ನಲಾಗಿದೆ.
ಬಳಿಕ ಬಾಲಕಿ ವಿಡಿಯೋ ಮೂಲಕ ತನ್ನ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಳು. ಅಂದಿನ ಆವೇಶದಲ್ಲಿ ತಪ್ಪಾಗಿ ಮಾತನಾಡಿದ್ದು, ತಮ್ಮಿಂದ ತಪ್ಪಾಗಿದೆ. ದಯವಿಟ್ಟು ಕ್ಷಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಳು.
ಬಾಲಕಿ ಸೇರಿದಂತೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಲವರು ತಮ್ಮಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸೆಲ್ಫಿ ವಿಡಿಯೋ ಮೂಲಕ ಪ್ರತಿಕ್ರಿಯಿಸಿ, ಮಕ್ಕಳು ತಪ್ಪು ಮಾಡುವುದು ಸಹಜ. ಅವರನ್ನು ತಿದ್ದಿ ಸರಿಯಾದ ದಾರಿಯಲ್ಲಿ ಮುನ್ನಡೆಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದರು.
“ಮಕ್ಕಳು ತಪ್ಪಿನಿಂದ ಏನಾದರೂ ಹೇಳಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವರ ಭವಿಷ್ಯವನ್ನು ಹಾಳು ಮಾಡಬಾರದು. ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳ ಸುತ್ತ ಅವರ ಜೀವನ ಸಾಗುವಂತಾಗಬಾರದು” ಎಂದು ಹೇಳಿದ್ದ ಮೋದಿ, ತಮ್ಮನ್ನು ನಿಂದಿಸಿದ ಮಕ್ಕಳನ್ನು ಕ್ಷಮಿಸಿರುವುದಾಗಿ ತಿಳಿಸಿದ್ದರು.
ಇದೇ ವೇಳೆ, ಬಾಲಕಿಯ ತಾಯಿ ಕೂಡ ಮಾಧ್ಯಮಗಳ ಮೂಲಕ ಪ್ರತಿಕ್ರಿಯಿಸಿ, ಮಗಳು ತಪ್ಪು ಮಾಡಿದ್ದಾಳೆ. ಆಕೆಯನ್ನು ಕ್ಷಮಿಸುವಂತೆ ಮನವಿ ಮಾಡಿದ್ದರು.
ಪ್ರಕರಣ ಹಿಂಪಡೆಯುವಂತೆ ಹಲವು ರಾಜಕೀಯ ನಾಯಕರು ಹಾಗೂ ಸಂಘಟನೆಗಳು ಕೂಡ ಒತ್ತಾಯಿಸಿದ್ದವು. ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಸೇರಿದಂತೆ ಹಲವರು ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದರು.