Home Blog

ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಸಿಗದಿದ್ದರೂ ಬೇಜಾರಿಲ್ಲ ಎಂದ ಜಮೀರ್ ಅಹ್ಮದ್

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಾಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ ಮಾಜಿ ಸಂಸದ ಡಿ.ಕೆ. ಸುರೇಶ್ ಅವರನ್ನು ಮಾಜಿ ಸಚಿವ ಜಮೀರ್ ಅಹ್ಮದ್ ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ತೀರ್ಮಾನವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

“ನಮ್ಮದು ಹೈಕಮಾಂಡ್ ಪಕ್ಷ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಎಲ್ಲ ವಿಚಾರಗಳಲ್ಲೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಮೊದಲ ಹಂತದಲ್ಲೇ ಸಚಿವ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಿದ್ದೆ. ಆದರೆ ಅವಕಾಶ ಸಿಗಲಿಲ್ಲ. ಎರಡನೇ ಹಂತದಲ್ಲಿ ಅವಕಾಶ ದೊರೆಯುವ ವಿಶ್ವಾಸವಿದೆ. ಸಿಗದಿದ್ದರೂ ಯಾವುದೇ ಬೇಸರವಿಲ್ಲ” ಎಂದು ಹೇಳಿದರು.

ಸಚಿವ ಸ್ಥಾನಕ್ಕಾಗಿ ತಾವು ಬಹಿರಂಗವಾಗಿ ಒತ್ತಾಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ನನ್ನ ಅಭಿಮಾನಿಗಳು ಹಾಗೂ ಬೆಂಬಲಿಗರು ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ. ಅದು ಅವರ ಅಭಿಮಾನದಿಂದ ಮಾಡಿದ ಕಾರ್ಯ” ಎಂದು ತಿಳಿಸಿದರು.

“ಸಚಿವ ಸ್ಥಾನ ಸಿಗದಿರುವುದಕ್ಕೆ ನನಗೆ ಬೇಸರವಿಲ್ಲ. ನನ್ನ ಮುಖದಲ್ಲಿ ಬೇಸರ ಕಾಣಿಸುತ್ತಿದೆಯೇ? ನಾನು ಹೈಕಮಾಂಡ್ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಕೇರಳ ಹಾಗೂ ತೆಲಂಗಾಣ ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷದ ಪರ ಪ್ರಚಾರ ನಡೆಸಿದ್ದೇನೆ” ಎಂದು ಹೇಳಿದರು.

ವಿಧಾನಪರಿಷತ್ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ ಶಾಸಕರು ಒಗ್ಗಟ್ಟಿನ ಸಂದೇಶ ನೀಡಿದ್ದಾರೆ ಎಂದರು.

ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುಮಾರು 140 ಶಾಸಕರು ಭಾಗವಹಿಸಿದ್ದರು. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಒಬ್ಬ ಅಭ್ಯರ್ಥಿಯ ಗೆಲುವಿಗೆ ಅಗತ್ಯವಿರುವ 28 ಮತಗಳು ದೊರೆತರೂ ಸಾಕು. ನಮ್ಮ ಅಭ್ಯರ್ಥಿಗಳ ಗೆಲುವಿನ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

18 ವರ್ಷಗಳ ದಾಂಪತ್ಯಕ್ಕೆ ದುರಂತ ಅಂತ್ಯ: ಡೆತ್‌ನೋಟ್ ಬರೆದು ನೇಣಿಗೆ ಶರಣಾದ ಪತಿ

0

ಹುಬ್ಬಳ್ಳಿ: ಕೌಟುಂಬಿಕ ಕಲಹ, ಪೊಲೀಸ್ ಠಾಣೆ ಸುತ್ತಾಟ ಹಾಗೂ ದಾಂಪತ್ಯ ಬಿಕ್ಕಟ್ಟಿನ ನಡುವೆ ವ್ಯಕ್ತಿಯೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಪ್ರದೇಶದಲ್ಲಿ ನಡೆದಿದೆ.

ಸಂತೋಷ್ ಅಳ್ಳೂರು (39) ಮೃತ ವ್ಯಕ್ತಿಯಾಗಿದ್ದು, ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ಮುನ್ನ ಅವರು ಡೆತ್‌ನೋಟ್ ಬರೆದಿಟ್ಟು ಹೋಗಿರುವುದಾಗಿ ತಿಳಿದುಬಂದಿದೆ.

ಸಂತೋಷ್ ಮತ್ತು ಅವರ ಪತ್ನಿ ಸುಮಾರು 18 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದು, ಇತ್ತೀಚಿನ ದಿನಗಳಲ್ಲಿ ಇಬ್ಬರ ನಡುವೆ ಕೌಟುಂಬಿಕ ಕಲಹ ತೀವ್ರಗೊಂಡಿತ್ತು ಎನ್ನಲಾಗಿದೆ.

ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಂತರ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಪತಿಯಿಂದ ದೂರವಾಗಲು ಮುಂದಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಕುಟುಂಬದವರ ಆರೋಪದ ಪ್ರಕಾರ, ಪೊಲೀಸ್ ಠಾಣೆಗೆ ಪದೇ ಪದೇ ಕರೆಸಿ ಕಿರುಕುಳ ನೀಡಲಾಗುತ್ತಿತ್ತು. ಇದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಸಂತೋಷ್ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಬಳಿಕ ಕುಟುಂಬಸ್ಥರು ಪತ್ನಿ ಹಾಗೂ ಸಂಬಂಧಿತ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಾವಿನ ಹಿಂದಿನ ಕಾರಣಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್‌ನೋಟ್ ಸೇರಿದಂತೆ ಎಲ್ಲಾ ಆಯಾಮಗಳ ಬಗ್ಗೆ ತನಿಖೆ ನಡೆಯುತ್ತಿದೆ.

ಕಲಬುರಗಿಯಲ್ಲಿ PSI ಆತ್ಮಹತ್ಯೆ; ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

0

ಕಲಬುರಗಿ: ಪೊಲೀಸ್ ಇಲಾಖೆಯ ಪಿಎಸ್‌ಐಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಗಂಗಾನಗರ ಪ್ರದೇಶದಲ್ಲಿ ನಡೆದಿದೆ. ಬಸವರಾಜ ಹೆರೂರ್ (2014ರ ಬ್ಯಾಚ್ ಪಿಎಸ್‌ಐ) ಮೃತ ಅಧಿಕಾರಿ ಎಂದು ಗುರುತಿಸಲಾಗಿದೆ.

ಬಸವರಾಜ ಹೆರೂರ್ ಕಳೆದ ಎರಡು ವರ್ಷಗಳಿಂದ ಕಲಬುರಗಿ ಡಿಸಿಆರ್‌ಬಿ (DCRB) ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಸಾವಿನ ಸುದ್ದಿ ಪೊಲೀಸ್ ಇಲಾಖೆಯಲ್ಲಿ ಆಘಾತ ಮೂಡಿಸಿದೆ.

ಮಂಗಳವಾರ ತಡರಾತ್ರಿ ಬಸವರಾಜ ಹೆರೂರ್ ತಮ್ಮ ಕೆಲ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಕುರಿತು ಸುಳಿವು ನೀಡಿದ್ದರು ಎನ್ನಲಾಗಿದೆ. ವಿಷಯ ತಿಳಿದ ಸ್ನೇಹಿತರು ತಕ್ಷಣವೇ ಅವರ ತಂದೆಗೆ ಮಾಹಿತಿ ನೀಡಿದ್ದಾರೆ.

ಬಳಿಕ ಅವರ ತಂದೆ ಮನೆಗೆ ಧಾವಿಸಿ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಯಾವುದೇ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ಒಳ ಪ್ರವೇಶಿಸಿದಾಗ ಬಸವರಾಜ ಹೆರೂರ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಮಾಹಿತಿ ಸಂಗ್ರಹಿಸಿದ್ದಾರೆ.

ಈ ಸಂಬಂಧ ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಆತ್ಮಹತ್ಯೆಯ ಹಿಂದಿನ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.

ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಆರೋಪ: ಪ್ರೊ. ದೇವರಾಜನ್ ತಂಗುದೊರೈ ಅಮಾನತು

0

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಆರೋಪ ಪ್ರಕರಣದಲ್ಲಿ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ದೇವರಾಜನ್ ತಂಗುದೊರೈ ಅವರನ್ನು ವಿಶ್ವವಿದ್ಯಾಲಯ ಆಡಳಿತ ಅಮಾನತುಗೊಳಿಸಿದೆ.

ಪಿಎಚ್‌ಡಿ ಸಂಶೋಧನೆಗಾಗಿ ತಮ್ಮ ಮಾರ್ಗದರ್ಶನದಲ್ಲಿ ಅಧ್ಯಯನ ನಡೆಸುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಪ್ರಾಧ್ಯಾಪಕರು ವೈಯಕ್ತಿಕ ಸಂಬಂಧ ಹೊಂದಿದ್ದರು ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ಸಂಬಂಧದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ವಿದ್ಯಾರ್ಥಿನಿ ಅಧ್ಯಯನವನ್ನು ಅರ್ಧದಲ್ಲೇ ನಿಲ್ಲಿಸಿ ತೆರಳಿದ ನಂತರವೂ ಆಕೆಯನ್ನು ಮರಳಿ ಕರೆಸುವಂತೆ ಇತರ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿತ್ತು.

ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳದ ವಿಶ್ವವಿದ್ಯಾಲಯ ಆಡಳಿತದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಆಡಳಿತ ಕಚೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು ಹೂವಿನ ಕುಂಡಗಳನ್ನು ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದರು.

ಕುಲಪತಿ ಕಚೇರಿಯೊಳಗೆ ಪ್ರವೇಶಿಸಲು ಕೆಲ ಕಾರ್ಯಕರ್ತರು ಯತ್ನಿಸಿದ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸಿಂಡಿಕೇಟ್ ಸದಸ್ಯರ ಸಭೆ ನಡೆಸಿದ ವಿಶ್ವವಿದ್ಯಾಲಯ ಆಡಳಿತ, ಪ್ರಾಧ್ಯಾಪಕರ ವಿರುದ್ಧ ತಕ್ಷಣದ ಅಮಾನತು ಕ್ರಮ ಜಾರಿಗೊಳಿಸಿತು. ಜೊತೆಗೆ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಪತ್ತೆಹಚ್ಚಲು ವಿಶೇಷ ತನಿಖಾ ಸಮಿತಿ ರಚಿಸಲಾಗಿದೆ.

ಕುಲಪತಿ ಪ್ರೊ. ಎ.ಎಂ. ಖಾನ್ ನೇತೃತ್ವದ ಆಡಳಿತ, ತನಿಖಾ ವರದಿ ಬಂದ ಬಳಿಕ ಮುಂದಿನ ಕಾನೂನು ಹಾಗೂ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದೆ. ಪ್ರಕರಣದಲ್ಲಿ ಪೊಲೀಸ್ ತನಿಖೆಯೂ ಅಗತ್ಯ ಎಂದು ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿವೆ.

ಅಮ್ಮ-ಅಕ್ಕನನ್ನು ನಿಂದಿಸಿದ್ದಕ್ಕೆ ಸ್ನೇಹಿತನ ಮೇಲೆಯೇ ಚಾಕು ಇರಿತ: ಚಿಕಿತ್ಸೆ ಫಲಿಸದೆ ಯುವಕ ಸಾವು

0

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರದ ನಿಮ್ಹಾನ್ಸ್ ಲೇಔಟ್‌ನಲ್ಲಿ ನಡೆದಿದೆ.

ಮೃತ ಯುವಕನನ್ನು ವಸೀಂ ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿಯನ್ನು ಸೈಯದ್ ಸಮೀರ್ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬುಧವಾರ ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ನಡೆದಿದ್ದು, ಇಬ್ಬರೂ ಆಪ್ತ ಸ್ನೇಹಿತರಾಗಿದ್ದರು ಎನ್ನಲಾಗಿದೆ.

 ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಈ ವೇಳೆ ವಸೀಂ, ಸಮೀರ್ ಅವರ ಕುಟುಂಬ ಸದಸ್ಯರನ್ನು, ವಿಶೇಷವಾಗಿ ತಂದೆ ಮತ್ತು ಅಕ್ಕನನ್ನು ನಿಂದಿಸಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಸಮೀರ್, ಮಾತಿಗೆ ಮಾತು ಬೆಳೆದು ವಸೀಂ ಮೇಲೆ ಹಲ್ಲೆ ನಡೆಸಿದ್ದಾನೆ.

ಜಗಳ ತೀವ್ರಗೊಂಡಾಗ ಸಮೀರ್ ಚಾಕುವಿನಿಂದ ವಸೀಂಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ವಸೀಂ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಆರೋಪಿ ಸೈಯದ್ ಸಮೀರ್ ಕೂಡ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸಂಬಂಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ನಿಖರ ಕಾರಣ ಹಾಗೂ ಇತರೆ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ: ನಟ ಪ್ರಕಾಶ್‌ ರಾಜ್‌

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರು ಉಲ್ಲೇಖವಾಗಿರುವ ಕುರಿತು ನಟ ಪ್ರಕಾಶ್ ರಾಜ್ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದು, ಚಿನ್ನಯ್ಯ ಎಂಬ ವ್ಯಕ್ತಿ ದೂರವಾಣಿ ಮೂಲಕ ಸಂಪರ್ಕಿಸಿದ್ದನ್ನು ಒಪ್ಪಿಕೊಂಡಿದ್ದಾರೆ. ಆದರೆ ಧರ್ಮಸ್ಥಳದ ವಿರುದ್ಧದ ಯಾವುದೇ ಸಂಚು ಅಥವಾ ಷಡ್ಯಂತ್ರದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಕೋರ್ಟ್‌ನಲ್ಲಿ ಚಿನ್ನಯ್ಯ ನೀಡಿರುವ ಹೇಳಿಕೆಯಲ್ಲಿ ತಮ್ಮ ಹೆಸರು ಪ್ರಸ್ತಾಪವಾಗಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.

‘ಚಿನ್ನಯ್ಯ ನನ್ನೊಂದಿಗೆ ಮಾತನಾಡಿದ್ದಾನೆ ಎಂಬುದು ನಿಜ. ಆದರೆ ಆತ ನನ್ನನ್ನು ಭೇಟಿಯಾಗಿಲ್ಲ. ನಾನು ಕೂಡ ಅವನನ್ನು ಭೇಟಿಯಾಗಿಲ್ಲ. ಆತ ಕರೆ ಮಾಡಿ ಭೇಟಿಯಾಗಬೇಕು ಎಂದು ಕೇಳಿದಾಗ, ನೇರವಾಗಿ ಭೇಟಿಯಾಗುವ ಅಗತ್ಯವಿಲ್ಲ, ಹೇಳಬೇಕಿರುವುದನ್ನು ರೆಕಾರ್ಡ್ ಮಾಡಿ ಕಳುಹಿಸು ಎಂದು ತಿಳಿಸಿದ್ದೆ’ ಎಂದು ಹೇಳಿದರು.

ಧರ್ಮಸ್ಥಳ ಕುರಿತು ಕೇಳಿಬಂದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಪಾರದರ್ಶಕ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಮಾತ್ರ ಎಸ್‌ಐಟಿ ರಚನೆಗೆ ಒತ್ತಾಯಿಸಿದ್ದಾಗಿ ಪ್ರಕಾಶ್ ರಾಜ್ ಸ್ಪಷ್ಟಪಡಿಸಿದರು.

‘ನಾನು ಧರ್ಮಸ್ಥಳಕ್ಕೆ ಹೋಗಿಲ್ಲ. ಗಿರೀಶ್ ಮಟ್ಟಣ್ಣನವರ್ ಅವರನ್ನು ಭೇಟಿಯಾಗಿಲ್ಲ. ಕೇರಳದಿಂದ ಹಣ ಬಂದಿದೆ ಎಂಬ ಆರೋಪಗಳಿಗೂ ನನ್ನೊಂದಿಗೆ ಯಾವುದೇ ಸಂಬಂಧ ಇಲ್ಲ. ನನ್ನ ಹೆಸರನ್ನು ಅನಗತ್ಯವಾಗಿ ಎಳೆದು ತರುವ ಪ್ರಯತ್ನ ನಡೆಯುತ್ತಿದೆ’ ಎಂದು ಆರೋಪಿಸಿದರು.

ಚಿನ್ನಯ್ಯ ತಮ್ಮೊಂದಿಗೆ ತಮಿಳು ಭಾಷೆಯಲ್ಲಿ ಮಾತನಾಡಿದ್ದಾನೆ ಎಂದು ಹೇಳಿದ ಅವರು, ಆ ಕರೆ ಕುರಿತು ಪ್ರಣವ್ ಮೊಹಂತಿ ಅವರಿಗೆ ಮಾಹಿತಿ ನೀಡಿದ್ದೇನೆ ಎಂದರು.

‘ಈಗ ತನಿಖೆಯಲ್ಲಿ ಚಿನ್ನಯ್ಯ ಹಲವರನ್ನು ದಾರಿ ತಪ್ಪಿಸಿದ್ದಾನೆ ಎಂಬ ವಿಚಾರಗಳು ಹೊರಬರುತ್ತಿವೆ. ಸತ್ಯ ಹೊರಬರಬೇಕು ಎಂಬುದೇ ನನ್ನ ನಿಲುವು. ಆದರೆ ನನ್ನನ್ನು ಧರ್ಮಸ್ಥಳ ವಿರೋಧಿ ಅಥವಾ ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನಗಳು ಸಂಪೂರ್ಣ ಆಧಾರರಹಿತ’ ಎಂದು ಪ್ರಕಾಶ್ ರಾಜ್ ಹೇಳಿದರು.

ಕಾಫಿ ಬೋರ್ಡ್ ಸಿಗ್ನಲ್ ಬಳಿ ಆಟೋ ಪಲ್ಟಿ; ಚಾಲಕ ಸೇರಿ ಇಬ್ಬರು ಪ್ರಯಾಣಿಕರಿಗೆ ಗಾಯ

0

ಬೆಂಗಳೂರು: ನಗರದ ಕಾಫಿ ಬೋರ್ಡ್ ಸಿಗ್ನಲ್ ಸಮೀಪ ಆಟೋವೊಂದು ಪಲ್ಟಿಯಾಗಿ ಚಾಲಕ ಸೇರಿದಂತೆ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಅಪಘಾತದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಮಾಹಿತಿಯ ಪ್ರಕಾರ, ಸಂಚಾರ ದಟ್ಟಣೆ ನಡುವೆ ಸಾಗುತ್ತಿದ್ದ ಆಟೋ ಚಾಲಕನ ಮುಂದೆ ಇದ್ದ ವಾಹನ ಏಕಾಏಕಿ ಬ್ರೇಕ್ ಹಾಕಿದೆ. ಇದರಿಂದ ಗಾಬರಿಗೊಂಡ ಆಟೋ ಚಾಲಕ ಕೂಡ ತಕ್ಷಣ ಬ್ರೇಕ್ ಹಾಕಿದ್ದು, ನಿಯಂತ್ರಣ ತಪ್ಪಿದ ಆಟೋ ರಸ್ತೆ ಮೇಲೆಯೇ ಪಲ್ಟಿಯಾಗಿದೆ.

ಅಪಘಾತದ ಪರಿಣಾಮ ಆಟೋ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಸಾರ್ವಜನಿಕರು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿದ್ದಾರೆ.

ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

GBA ಚುನಾವಣೆ ಹಿನ್ನೆಲೆ ರೌಡಿಗಳಿಗೆ ಪೊಲೀಸರ ವಾರ್ನಿಂಗ್: ತಡರಾತ್ರಿ ಮನೆಗಳ ಮೇಲೆ ದಾಳಿ

ಬೆಂಗಳೂರು: ಜಿಬಿಎ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬ್ಯಾಡರಹಳ್ಳಿ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡೆಸಿದ್ದಾರೆ. ತಡರಾತ್ರಿ ಹಲವು ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ಪೊಲೀಸರು, ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದ ರಾಜು ಅವರ ನೇತೃತ್ವದಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆದಿದ್ದು, ದಂಧೆ ಶಿವ, ಹರೀಶ್, ಸಂದೀಪ್ ಅಲಿಯಾಸ್ ಹೇರೋಹಳ್ಳಿ ದೀಪು, ಮುಬಾರಕ್ ಸೇರಿದಂತೆ ಹಲವು ಕುಖ್ಯಾತ ರೌಡಿಗಳ ನಿವಾಸಗಳನ್ನು ಏಕಕಾಲದಲ್ಲಿ ಪರಿಶೀಲಿಸಲಾಯಿತು.

ಮುಂಬರುವ ಜಿಬಿಎ ಚುನಾವಣೆಯನ್ನು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಸಂದರ್ಭದಲ್ಲಿ ಯಾವುದೇ ರೀತಿಯ ಗಲಾಟೆ, ಬೆದರಿಕೆ, ಅಕ್ರಮ ಚಟುವಟಿಕೆ ಅಥವಾ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದು ರೌಡಿಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದಲ್ಲದೆ, ಚುನಾವಣೆ ಮಾತ್ರವಲ್ಲದೆ ಯಾವುದೇ ಸಿವಿಲ್ ವಿವಾದಗಳು ಅಥವಾ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಪರಿಶೀಲನೆ ವೇಳೆ ಯಾವುದೇ ಮಾರಕಾಸ್ತ್ರಗಳು ಅಥವಾ ಅಕ್ರಮ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಹಾಗೂ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವ ಉದ್ದೇಶದಿಂದ ಈ ರೀತಿಯ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ.

ನರಗಳ ಸಮಸ್ಯೆಯಿಂದ ಬಳಲುತ್ತಿದ್ದರೂ ಸ್ಟೇಜ್ ಏರಲು ಸಜ್ಜಾದ ಸೋನು ನಿಗಮ್

ಮುಂಬೈ: ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಖ್ಯಾತ ಗಾಯಕ ಸೋನು ನಿಗಮ್ ಅವರು ಚಿಕಿತ್ಸೆ ನಡುವೆಯೂ ತಮ್ಮ ಲೈವ್ ಪರ್ಫಾರ್ಮೆನ್ಸ್ ಮುಂದುವರಿಸಲು ನಿರ್ಧರಿಸಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮುಂಬೈನಲ್ಲಿ ನಡೆಯಲಿರುವ ಸಂಗೀತ ಕಾರ್ಯಕ್ರಮಕ್ಕೂ ಮುನ್ನ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಸೋನು ನಿಗಮ್, ನರಗಳ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಕಳೆದ ಒಂದು ವಾರದಿಂದ ಎಂಆರ್‌ಐ, ಸಿಟಿ ಸ್ಕ್ಯಾನ್ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಂಡಿದ್ದು, ನಿರಂತರ ಔಷಧಿ ಮತ್ತು ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ಫಿಸಿಯೋಥೆರಪಿ ವೇಳೆ ತೀವ್ರ ನೋವು ಅನುಭವಿಸುತ್ತಿರುವುದಾಗಿ ಹೇಳಿರುವ ಅವರು, ಸದ್ಯ ನೋವು ನಿವಾರಕ ಔಷಧಿಗಳ ಸಹಾಯದಿಂದ ಚಿಕಿತ್ಸೆಯನ್ನು ಮುಂದುವರಿಸುತ್ತಿದ್ದಾರೆ.

ಇದೇ ವೇಳೆ ವೈದ್ಯರು ನೀಡಿರುವ ಹೈ-ಡೋಸ್ ಔಷಧಿಗಳ ಪರಿಣಾಮ ಗಂಟಲಿನ ಧ್ವನಿಯ ಮೇಲೂ ಬಿದ್ದಿದ್ದು, ‘ಗಂಟಲು ಸ್ವಲ್ಪ ಭಾರವಾಗಿರುವ ಅನುಭವವಾಗುತ್ತಿದೆ’ ಎಂದು ತಿಳಿಸಿದ್ದಾರೆ.

ಸಾಮಾನ್ಯವಾಗಿ ಗಾಯಕರಿಗೆ ಧ್ವನಿಯಲ್ಲಿ ಸಣ್ಣ ಬದಲಾವಣೆಯಾದರೂ ಕಾರ್ಯಕ್ರಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಆದರೆ ಸೋನು ನಿಗಮ್ ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸದೆ ಅಭಿಮಾನಿಗಳ ಮುಂದೆ ಹಾಡಲು ಸಿದ್ಧರಾಗಿದ್ದಾರೆ. ಅವರ ಆರೋಗ್ಯ ಶೀಘ್ರವಾಗಿ ಸುಧಾರಿಸಲಿ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾರೈಸುತ್ತಿದ್ದಾರೆ.

ನಾಯಕರಿಗೆ ನೇರ ಟಾರ್ಗೆಟ್: ಬಿಡದಿಯಲ್ಲಿ ಕಾಂಗ್ರೆಸ್ ಪೋಸ್ಟರ್ ಅಟ್ಯಾಕ್ ವೈರಲ್

0

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧದ ಹೋರಾಟಕ್ಕೆ ಬಿಜೆಪಿ-ಜೆಡಿಎಸ್ ನೀಡಿರುವ ಬೆಂಬಲಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಪೋಸ್ಟರ್ ವಾರ್ ಮೂಲಕ ತೀವ್ರ ರಾಜಕೀಯ ಪ್ರತ್ಯುತ್ತರ ನೀಡಿದೆ.

ಬಿಡದಿ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಅಂಟಿಸಲಾದ ಪೋಸ್ಟರ್‌ಗಳಲ್ಲಿ ಮೈತ್ರಿಪಕ್ಷ ನಾಯಕರ ವಿರುದ್ಧ ನೇರ ಮತ್ತು ವ್ಯಂಗ್ಯಾತ್ಮಕ ಟೀಕೆಗಳು ಕಾಣಿಸಿಕೊಂಡಿವೆ. ರೈತರ ಭೂಮಿ ವಿಚಾರದಿಂದ ಆರಂಭವಾಗಿ ವಿವಿಧ ಆರೋಪಗಳನ್ನು ಒಳಗೊಂಡ ಸಂದೇಶಗಳು ಪೋಸ್ಟರ್‌ಗಳಲ್ಲಿ ಪ್ರಕಟವಾಗಿವೆ.

ಬಿಜೆಪಿ ನಾಯಕ ಆರ್. ಅಶೋಕ್, ನಾರಾಯಣಸ್ವಾಮಿ ಹಾಗೂ ವಿಜಯೇಂದ್ರ ಅವರನ್ನು ಉಲ್ಲೇಖಿಸಿ ಕಠಿಣ ಭಾಷೆಯ ಟೀಕೆಗಳು ಪೋಸ್ಟರ್‌ನಲ್ಲಿ ಬಳಕೆ ಮಾಡಲಾಗಿದೆ. ಜೊತೆಗೆ ಜೆಡಿಎಸ್ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರ ಚಿತ್ರಗಳನ್ನು ಸೇರಿಸಿ ರಾಜಕೀಯ ಆರೋಪಾತ್ಮಕ ಸಂದೇಶಗಳನ್ನು ಹಾಕಲಾಗಿದೆ.

ಈ ಪೋಸ್ಟರ್ ಅಭಿಯಾನದಿಂದ ಬಿಡದಿಯಲ್ಲಿ ರಾಜಕೀಯ ತಾಪಮಾನ ಹೆಚ್ಚಿದ್ದು, ಬಿಜೆಪಿ-ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಮಾತಿನ ಕದನ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

error: Content is protected !!