Home Blog

ರೈತರಿಗೆ ವೈಜ್ಞಾನಿಕ ಬೆಲೆ ನಿಗದಿ ಅಗತ್ಯ: ಬಸವರಾಜ ಬೊಮ್ಮಾಯಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ರೈತರ ಆದಾಯ ಮತ್ತು ಬದುಕು ಸ್ಥಿರವಾಗಬೇಕಾದರೆ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ರವಿವಾರ ತಡರಾತ್ರಿ ಶಿರಹಟ್ಟಿ ಪಟ್ಟಣದಲ್ಲಿ ಶಿರಹಟ್ಟಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದ ಸಹಕಾರಿ ಚಳುವಳಿಗೆ ಗದಗ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ರೈತರು ಮಧ್ಯವರ್ತಿಗಳ ಹಾವಳಿ ಹಾಗೂ ಕಮಿಷನ್ ಇಲ್ಲದೆ ತಾವು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಪಡೆಯುವ ಉದ್ದೇಶದಿಂದ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಗಳು ಸ್ಥಾಪನೆಯಾಗಿವೆ. ಎಪಿಎಂಸಿ ಹಾಗೂ ಸಹಕಾರಿ ಸಂಸ್ಥೆಗಳು ರೈತರ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಇಂದು ರಾಜ್ಯದ ಅನೇಕ ಸಹಕಾರಿ ಸಂಸ್ಥೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ಖರೀದಿದಾರರಿಂದ ರೈತರಿಗೆ ಸಕಾಲದಲ್ಲಿ ಹಣ ಪಾವತಿಯಾಗದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಆದರೂ ಗದಗ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ರೈತರ ಹಿತಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಶಿರಹಟ್ಟಿ ಟಿಎಪಿಸಿಎಂಎಸ್ ಸಂಸ್ಥೆಯ ಪುನಶ್ಚೇತನ ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದರು.

ತಾವು ಗೃಹ ಸಚಿವರಾಗಿದ್ದ ವೇಳೆ ಈ ಸಂಸ್ಥೆಯ ಪುನಶ್ಚೇತನಕ್ಕೆ ಮನವಿ ಬಂದ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು. ಬಳಿಕ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಅವರ ಸಹಕಾರದಿಂದ ಷೇರು ಬಂಡವಾಳ ಸಂಗ್ರಹಿಸಿ, ಮಾರ್ಕೆಟಿಂಗ್ ಫೆಡರೇಶನ್ ನೆರವಿನೊಂದಿಗೆ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಮುಂದೆಯೂ ಸಂಸ್ಥೆಗೆ ಅಗತ್ಯ ಬಂಡವಾಳ ಹಾಗೂ ಶೇ.1ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲು ತಾವು ಸಿದ್ಧವಿದ್ದು, ಸಂಸ್ಥೆ ಲಾಭದಾಯಕವಾಗಿ ಬೆಳೆಯಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ, ಶಾಸಕ ಡಾ. ಚಂದ್ರು ಲಮಾಣಿ, ಜಿಪಂ ಮಾಜಿ ಸದಸ್ಯ ಎಂ.ಎಸ್. ದೊಡ್ಡಗೌಡ ಮಾತನಾಡಿದರು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಜ.ಫ. ಸಿದ್ದರಾಮ ಸ್ವಾಮೀಜಿ ವಹಿಸಿದ್ದರು.

ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ, ಟಿಎಪಿಸಿಎಂಎಸ್ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಜಿಪಂ ಮಾಜಿ ಸದಸ್ಯ ಶಿವಪ್ರಕಾಶ ಮಹಾಜನಶೆಟ್ಟರ, ಸಿ.ಸಿ. ನೂರಶೆಟ್ಟರ, ಎಲ್.ಡಿ. ಪಾಟೀಲ, ಜಿ.ವಿ. ಪಾಟೀಲ, ಸಂದೀಪ ಕಪ್ಪತ್ತನವರ, ನಾಗರಾಜ ಲಕ್ಕುಂಡಿ, ಸಂದೇಶ ಗಾಣಿಗೇರ, ಫಕ್ಕೀರೇಶ ರಟ್ಟಿಹಳ್ಳಿ, ವಸಂತ ಜಗ್ಗಲರ, ಸುರೇಶ ಕಪ್ಪತ್ತನವರ, ಸುಮಾ ಶಿವಪ್ರಕಾಶ ಮಹಾಜನಶೆಟ್ಟರ, ಬಸವರಾಜ ತುಳಿ, ರಾಜು ಪಾಟೀಲ, ಮಹೇಶ ಮತ್ತೂರ, ಪಿಎಸ್‌ಐ ಈರಪ್ಪ ರಿತ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ರೈತರ ಬದುಕು ಭದ್ರವಾಗಬೇಕಾದರೆ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಜಾರಿಯಾಗಬೇಕು. ಸಹಕಾರಿ ಸಂಸ್ಥೆಗಳೇ ರೈತರ ಆರ್ಥಿಕ ಶಕ್ತಿಯ ಕೇಂದ್ರವಾಗಬೇಕು.”

ಬಸವರಾಜ ಬೊಮ್ಮಾಯಿ

ವಿದ್ಯಾರ್ಥಿಗಳಿಗೆ ‘ಫ್ರೀ ಫೀಸ್’ ಘೋಷಣೆ

ವಿಜಯಸಾಕ್ಷಿ ಸುದ್ದಿ, ರೋಣ: ರೋಣದಲ್ಲಿ ಪುನರಾರಂಭಗೊಂಡಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಪ್ರವೇಶ ಪಡೆಯುವ ಎಲ್ಲ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ತಾವೇ ಭರಿಸುವುದಾಗಿ ಶಾಸಕ ಜಿ.ಎಸ್. ಪಾಟೀಲ ಘೋಷಿಸಿದರು.

ಸೋಮವಾರ ಮುದೇನಗುಡಿ ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

2013ರಲ್ಲಿ ಶಾಸಕನಾಗಿದ್ದ ವೇಳೆ ರೋಣಕ್ಕೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮಂಜೂರಾಗಿದ್ದು, 8 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿತ್ತು. ಬಳಿಕ ಕಾಲೇಜು ಮಾಗಡಿಗೆ ಸ್ಥಳಾಂತರಗೊಂಡಿತ್ತು. ಇದೀಗ ಮತ್ತೆ ರೋಣಕ್ಕೆ ಮರಳಿ ತರಲಾಗಿದ್ದು, 240 ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ಈಗಾಗಲೇ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಸರ್ಕಾರಿ ನಿಯಮದಂತೆ ವಿದ್ಯಾರ್ಥಿಯೊಬ್ಬರಿಗೆ 5 ಸಾವಿರ ರೂ. ಶುಲ್ಕವಿದೆ. ಆದರೆ ಎಲ್ಲ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ತಾವೇ ಭರಿಸಲಿದ್ದು, ಈಗಾಗಲೇ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು ಹಿಂತಿರುಗಿಸಲಾಗುವುದು ಎಂದು ತಿಳಿಸಿದರು.

ಕಾಲೇಜಿನ ಅಭಿವೃದ್ಧಿಗೆ 2.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲೇ ವರ್ಕ್‌ಶಾಪ್ ಹಾಗೂ ಕಾಂಪೌಂಡ್ ನಿರ್ಮಿಸಲಾಗುವುದು. ಅಲ್ಲದೆ 50 ಕೋಟಿ ರೂ. ವೆಚ್ಚದ ಜೆಟಿಟಿಐ ಮಹಾವಿದ್ಯಾಲಯದ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾಲೇಜು ಆರಂಭಿಸಲಾಗುವುದು. ಪಾಲಿಟೆಕ್ನಿಕ್ ಹಾಗೂ ಜೆಟಿಟಿಐ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನದ ಮೂಲಕ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಗುರುಪಾದ ದೇವರು ಮಾತನಾಡಿ, ವಿದ್ಯಾರ್ಥಿಗಳು ಪ್ರಾಮಾಣಿಕತೆ, ಪರಿಶ್ರಮ ಮತ್ತು ಶ್ರದ್ಧೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಯವನ್ನು ವ್ಯರ್ಥ ಮಾಡದೆ ನಿರಂತರ ಕಲಿಕೆಯತ್ತ ಗಮನಹರಿಸಿದರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಸಿದ್ದಣ್ಣ ಬಂಡಿ, ಬಸವರಾಜ ನವಲಗುಂದ, ಯೂಸುಫ್ ಇಟಗಿ, ಮುತ್ತಣ್ಣ ಸಂಗಳದ, ಶಫೀಕ್ ಮೂಗನೂರ, ಶಿವಪ್ಪ ಕರಿಲಿಂಗಣ್ಣವರ, ರಂಗವ್ವ ಭಜಂತ್ರಿ, ಅಭಿಷೇಕ ನವಲಗುಂದ, ಯಲ್ಲಪ್ಪ ಕಿರೇಸೂರ, ಪ್ರಾಂಶುಪಾಲ ಮಹಾಂತೇಶ ಗುದ್ದಿನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

“ವಿದ್ಯಾರ್ಥಿಗಳಲ್ಲಿ ಕಲಿಕೆಯ ಹಸಿವು ಇರಬೇಕು. ಪ್ರಾಮಾಣಿಕತೆ, ಪರಿಶ್ರಮ ಮತ್ತು ಶ್ರದ್ಧೆಯೇ ಯಶಸ್ಸಿನ ನಿಜವಾದ ಬಂಡವಾಳ.”

ಗುರುಪಾದ ದೇವರು

ಶಿಖರ ಗೆದ್ದ ಸೃಷ್ಟಿಗೆ ಗೌರವ ಸನ್ಮಾನ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸುಮಾರು 15,500 ಅಡಿ ಎತ್ತರದ ‘ಹುರ್ರಾ ಟಾಪ್’ ಶಿಖರವನ್ನು ಯಶಸ್ವಿಯಾಗಿ ಏರಿದ ಜಕ್ಕಲಿ ಗ್ರಾಮದ ಯುವ ಪರ್ವತಾರೋಹಿ ಸೃಷ್ಟಿ ಉಮೇಶ ಮೇಟಿ ಅವರನ್ನು ರೋಣ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ ಹಾಗೂ ಶಶಿಕಲಾ ಪಾಟೀಲ ಅವರ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಿಥುನ ಪಾಟೀಲ, ಸೃಷ್ಟಿ ಅವರ ಸಾಧನೆ ಗ್ರಾಮೀಣ ಪ್ರತಿಭೆಗಳಿಗೆ ಸ್ಫೂರ್ತಿಯಾಗಿದ್ದು, ರಾಷ್ಟ್ರಮಟ್ಟದಲ್ಲಿ ಜಕ್ಕಲಿ ಗ್ರಾಮದ ಕೀರ್ತಿ ಹೆಚ್ಚಿಸಿದೆ ಎಂದು ಹೇಳಿದರು. ಶಶಿಕಲಾ ಪಾಟೀಲ, ಹೆಣ್ಣುಮಕ್ಕಳಿಗೆ ಸೂಕ್ತ ಅವಕಾಶ ಸಿಕ್ಕರೆ ಯಾವುದೇ ಕ್ಷೇತ್ರದಲ್ಲೂ ಸಾಧನೆ ಮಾಡಬಹುದು ಎಂಬುದನ್ನು ಸೃಷ್ಟಿ ತೋರಿಸಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಎಂ.ಎಸ್. ಧಡೇಸೂರಮಠ, ನಿವೃತ್ತ ಪ್ರಾಂಶುಪಾಲ ಎಂ.ಎಸ್. ಕೋರಿ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪೊರಕೆ ಹಿಡಿದು ಬಸ್ ನಿಲ್ದಾಣ ಸ್ವಚ್ಛಗೊಳಿಸಿದ ಅಧಿಕಾರಿಗಳು

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಜಿಟಿಜಿಟಿ ಮಳೆಯ ನಡುವೆಯೇ ಗಜೇಂದ್ರಗಡ ಕೇಂದ್ರ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಪೊರಕೆ ಹಿಡಿದು ಸ್ವಚ್ಛತಾ ಶ್ರಮದಾನ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದರು.

ತಾಲೂಕು ಪಂಚಾಯಿತಿ, ತಾಲೂಕು ಗ್ಯಾರಂಟಿ ಸಮಿತಿ, ಪುರಸಭೆ, ಕೆಎಸ್‌ಆರ್‌ಟಿಸಿ ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಸಂಯುಕ್ತ ಆಶ್ರಯದಲ್ಲಿ ಬಸ್ ನಿಲ್ದಾಣ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಬೆಳಿಗ್ಗೆ 6.30ರಿಂದ 9 ಗಂಟೆಯವರೆಗೆ ಬಸ್ ನಿಲ್ದಾಣ, ಇಂದಿರಾ ಕ್ಯಾಂಟೀನ್, ಶೌಚಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ ಕಸವನ್ನು ತೆರವುಗೊಳಿಸಲಾಯಿತು. ಬಳಿಕ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶರಣಪ್ಪ ಬೆಟಗೇರಿ ಬಸ್ ನಿಲ್ದಾಣದ ಆವರಣದಲ್ಲಿ ಸ್ಯಾನಿಟೈಸರ್ ಸಿಂಪಡಿಸಿದರು.

ಅಂಗಡಿ ಮಾಲೀಕರನ್ನು ಭೇಟಿ ಮಾಡಿದ ಅಧಿಕಾರಿಗಳು ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಒಂದು ಕಡೆ ಸಂಗ್ರಹಿಸಿ ಪುರಸಭೆ ವಾಹನಕ್ಕೆ ನೀಡುವಂತೆ ಮನವಿ ಮಾಡಿದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶರಣಪ್ಪ ಬೆಟಗೇರಿ ಮಾತನಾಡಿ, ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟರೆ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರು ಮಾತನಾಡಿ, ವೈಯಕ್ತಿಕ ಸ್ವಚ್ಛತೆಯೊಂದಿಗೆ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೂ ಆದ್ಯತೆ ನೀಡಬೇಕು. ಸರ್ಕಾರದ ಸ್ವಚ್ಛತಾ ಅಭಿಯಾನಗಳು ಯಶಸ್ವಿಯಾಗಲು ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದೆ. ಗ್ರಾಮ ಪಂಚಾಯಿತಿಗಳೊಂದಿಗೆ ಸಾರ್ವಜನಿಕರು ಕೈಜೋಡಿಸಿದರೆ ಸ್ವಚ್ಛ ಮತ್ತು ಸುಂದರ ಪರಿಸರ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ (ಪಂ.ರಾಜ್) ಬಸವರಾಜ ಬಡಿಗೇರ್, ಪುರಸಭೆ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕ ಕೆ.ಎಸ್. ಜಿಗಳೂರು, ತಾಲೂಕು ಯೋಜನಾಧಿಕಾರಿ ಅರವಿಂದ ಬಂಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.

“ಸ್ವಚ್ಛತೆ ಕೇವಲ ಸರ್ಕಾರದ ಕೆಲಸವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಹೌದು. ಸಾರ್ವಜನಿಕರ ಸಹಭಾಗಿತ್ವದಿಂದಲೇ ಸ್ವಚ್ಛ ಭಾರತ ಪರಿಕಲ್ಪನೆ ಯಶಸ್ವಿಯಾಗಲಿದೆ.”

ಚಂದ್ರಶೇಖರ ಕಂದಕೂರು, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ ಗಜೇಂದ್ರಗಡ

ನೂತನ ಬಿಇಒ ದಯಾನಂದ ಯಾವಗಲ್ಲಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ರೋಣ: ರೋಣ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ದಯಾನಂದ ಯಾವಗಲ್ಲ ಅವರನ್ನು ಅಖಿಲ ಕರ್ನಾಟಕ ಶಾಲಾ-ಕಾಲೇಜುಗಳ ಅನುದಾನಿತ ನೌಕರರ ಸಂಘದ ರೋಣ ತಾಲೂಕು ಘಟಕದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಬಿ.ಬಿ. ಮೇಗಲಮನಿ, ಕಾರ್ಯದರ್ಶಿ ಎಸ್.ಕೆ. ಆಡಿನ, ಖಜಾಂಚಿ ಕೆ.ಎಸ್. ಹಳ್ಳಳ್ಳಿ ಸೇರಿದಂತೆ ಸದಸ್ಯರಾದ ಎಸ್.ಎನ್. ಭರಮಗೌಡ್ರ, ಎಸ್.ಟಿ. ವಾಲ್ಮೀಕಿ, ಎಂ.ಎಸ್. ವಾಲ್ಮೀಕಿ, ಪಿ.ಪಿ. ವಾಲ್ಮೀಕಿ, ಎಂ.ಎಸ್. ಹೊಸಮನಿ, ಎಂ.ಕೆ. ಬಂಡಗರ್ ಹಾಗೂ ಪಿ.ಎಂ. ಮುನವಳ್ಳಿ ಉಪಸ್ಥಿತರಿದ್ದು, ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶುಭ ಹಾರೈಸಿದರು.

ಬೆಳೆವಿಮೆ ಅಕ್ರಮಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಗರಂ: ಖಾಸಗಿ ಪಿಆರ್‌ಒಗಳ ಬದಲಾವಣೆಗೆ ಸೂಚನೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಅಮಾಯಕ ರೈತರನ್ನು ದಾರಿ ತಪ್ಪಿಸಿ ಬೆಳೆ ವಿಮೆ ನೋಂದಣಿಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯಲು ಕೂಡಲೇ ಖಾಸಗಿ ಪಿಆರ್‌ಓಗಳನ್ನು (PRO) ಬದಲಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ರವಿವಾರ ಶಿರಹಟ್ಟಿ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಶಿರಹಟ್ಟಿ, ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಬರಗಾಲ ಹಾಗೂ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳೆ ವಿಮೆಯಲ್ಲಿ ಮಧ್ಯವರ್ತಿಗಳು ಹಾಗೂ ಕೆಲವು ಪಿಆರ್‌ಓಗಳು ಸೇರಿಕೊಂಡು ಒಂದು ಬೆಳೆ ಬದಲಿಗೆ ಮತ್ತೊಂದು ಬೆಳೆ ದಾಖಲಿಸುವ ಮೂಲಕ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ಕಾರಣದಿಂದ ರೈತರ ಮನೆ ಬಾಗಿಲಿಗೆ ಹೋಗಿ ಗಲಾಟೆ ಮಾಡುವ ಪ್ರಕರಣಗಳೂ ಹೆಚ್ಚುತ್ತಿವೆ. ಕೃಷಿ ಇಲಾಖೆ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಬೆಳೆ ಸಮೀಕ್ಷೆಯನ್ನು ಅತ್ಯಂತ ನಿಖರವಾಗಿ ನಡೆಸಬೇಕು. ಗ್ರಾಮ ಪಂಚಾಯಿತಿ ಮಟ್ಟದ ಮಳೆಮಾಪನ ಕೇಂದ್ರಗಳಲ್ಲಿಯೂ ಕಾಟಾಚಾರದ ಮಾಹಿತಿ ದಾಖಲಿಸದೆ ವಾಸ್ತವ ಅಂಕಿ-ಅಂಶಗಳನ್ನು ದಾಖಲಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ಪಟ್ಟಣಗಳ ಸ್ವಚ್ಛತೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಲಕ್ಷ್ಮೇಶ್ವರದಲ್ಲಿ ಸ್ವತಃ ಭೇಟಿ ನೀಡಿದಾಗ ಸಿಬ್ಬಂದಿ ಗೈರುಹಾಜರಾಗಿದ್ದು, ಹಣಕಾಸು ಬಳಕೆ ಕುರಿತು ಸಮರ್ಪಕ ಮಾಹಿತಿ ನೀಡಿಲ್ಲ. ಶಿರಹಟ್ಟಿಯಲ್ಲಿಯೂ ಸ್ವಚ್ಛತೆ ಬಗ್ಗೆ ನಿರಂತರ ದೂರುಗಳು ಬರುತ್ತಿದ್ದು, ಪ್ರತಿ ವಾರ್ಡ್‌ನಲ್ಲಿ ತಿಂಗಳಿಗೆ ಕನಿಷ್ಠ ಎರಡು-ಮೂರು ಬಾರಿ ಸ್ವಚ್ಛತಾ ಕಾರ್ಯ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಶಿರಹಟ್ಟಿಯಲ್ಲಿ ನಿರ್ಮಾಣವಾಗುತ್ತಿರುವ 100 ಹಾಸಿಗೆಗಳ ಆಸ್ಪತ್ರೆಗೆ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಲ್ಪಿಸುವಂತೆ ಸೂಚಿಸಿದರು.

ಬೆಳ್ಳಟ್ಟಿ ಗ್ರಾಮದಲ್ಲಿ ಮೂರು ಕೋಟಿ ರೂಪಾಯಿ ವೆಚ್ಚದ ಬೂದು ನೀರು ನಿರ್ವಹಣಾ ಯೋಜನೆ ಕಾಮಗಾರಿ ತಮ್ಮ ಗಮನಕ್ಕೆ ತಾರದೆ ಆರಂಭಿಸಿರುವುದು ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿ ನಿರ್ವಹಣೆಯಲ್ಲಿ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಪಂ ಇಒ ಅವರಿಗೆ ಸೂಚಿಸಿದರು.

ಬೆಳ್ಳಟ್ಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಸ್ಪೀಟ್ ಮತ್ತು ಓಸಿ ಜೂಜಾಟ ನಡೆಯುತ್ತಿರುವ ಕುರಿತು ಮಾಹಿತಿ ಹಾಗೂ ವಿಡಿಯೊಗಳು ತಮ್ಮ ಬಳಿ ಇರುವುದಾಗಿ ತಿಳಿಸಿದ ಶಾಸಕರು, ಹೊರ ಜಿಲ್ಲೆಗಳಿಂದಲೂ ಜನರು ಬಂದು ಜೂಜಾಟದಲ್ಲಿ ತೊಡಗುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಿರಹಟ್ಟಿ ಪಿಎಸ್‌ಐ ಈರಪ್ಪ ರಿತ್ತಿ ಅವರಿಗೆ ಸೂಚಿಸಿದರು.

ಗದಗ–ಹೊನ್ನಾಳಿ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯಲು ಶೀಘ್ರದಲ್ಲೇ ನಡೆಯಲಿರುವ ಸಭೆಯಲ್ಲಿ ಪೊಲೀಸ್ ಇಲಾಖೆ ಅಗತ್ಯ ಸುರಕ್ಷತಾ ಕ್ರಮಗಳ ಕುರಿತು ಪ್ರಸ್ತಾವನೆ ಸಲ್ಲಿಸಬೇಕು ಎಂದರು.

ಸಭೆಯಲ್ಲಿ ಶಿರಹಟ್ಟಿ ತಹಸೀಲ್ದಾರ್ ಕೆ. ರಾಘವೇಂದ್ರರಾವ್, ಶಿರಹಟ್ಟಿ ತಾಪಂ ಇಒ ಆರ್.ವಿ. ದೊಡ್ಡಮನಿ, ಲಕ್ಷ್ಮೇಶ್ವರ ತಾಪಂ ಇಒ ಮಂಜುಳಾ ಹಕಾರಿ, ಮುಂಡರಗಿ ತಾಪಂ ಇಒ ಬೆಣ್ಣಿ ಹಾಗೂ ಮೂರು ತಾಲೂಕುಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಬೆಳೆ ವಿಮೆಯಲ್ಲಿ ರೈತರಿಗೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಪಿಆರ್‌ಓಗಳ ಪಾತ್ರವನ್ನು ಪರಿಶೀಲಿಸಿ, ಅಗತ್ಯವಿದ್ದರೆ ತಕ್ಷಣವೇ ಬದಲಾವಣೆ ಮಾಡಬೇಕು. ಬೆಳೆ ಸಮೀಕ್ಷೆ ಮತ್ತು ಮಳೆ ದಾಖಲೆಗಳು ಸಂಪೂರ್ಣ ನಿಖರವಾಗಿರಬೇಕು.”

 ಡಾ. ಚಂದ್ರು ಲಮಾಣಿ, ಶಾಸಕ

ವೈದ್ಯರು ಡಬಲ್ ಡಾಕ್ಟರ್ ಆಗಬೇಕು:  ಬ್ರಹ್ಮಕುಮಾರಿ ಜಯಂತಿ

ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಗದುಗಿನ ಸಿದ್ಧರಾಮೇಶ್ವರ ನಗರದ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜಯೋಗಿನಿ ಬ್ರಹ್ಮಕುಮಾರಿ ಜಯಂತಿ ಅವರು, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ಖ್ಯಾತ ವೈದ್ಯ ಡಾ. ಬಿ.ಸಿ. ರಾಯ್ ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ, ವೈದ್ಯಕೀಯ ಸೇವೆ ಎಂದರೆ ಕೇವಲ ವೃತ್ತಿಯಲ್ಲ, ಅದು ಮಾನವೀಯ ಸೇವೆಯಾಗಿದೆ ಎಂದು ಹೇಳಿದರು.

ರೋಗಿಗಳಿಗೆ ಔಷಧೋಪಚಾರ ನೀಡುವ ವೈದ್ಯರು ದೇಹದ ಕಾಯಿಲೆಗಳನ್ನು ಗುಣಪಡಿಸುತ್ತಾರೆ. ಆದರೆ ಇಂದಿನ ಬಹುತೇಕ ಕಾಯಿಲೆಗಳ ಮೂಲ ಮನಸ್ಸಿನ ಒತ್ತಡ, ಭಯ, ಆತಂಕ ಹಾಗೂ ಅಶಾಂತಿಯಾಗಿರುವುದರಿಂದ ವೈದ್ಯರು ದೈಹಿಕ ಚಿಕಿತ್ಸೆಯ ಜೊತೆಗೆ ಮಾನಸಿಕ ಆರೋಗ್ಯಕ್ಕೂ ಆದ್ಯತೆ ನೀಡಬೇಕು. ರಾಜಯೋಗ ಧ್ಯಾನದಂತಹ ಆಧ್ಯಾತ್ಮಿಕ ವಿಧಾನಗಳು ರೋಗಿಗಳ ಮನಸ್ಸಿಗೆ ನೆಮ್ಮದಿ ನೀಡುವಲ್ಲಿ ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಈಶ್ವರೀಯ ವಿಶ್ವ ವಿದ್ಯಾಲಯ ಆತ್ಮದಲ್ಲಿರುವ ಕ್ರೋಧ, ಲೋಭ, ಅಹಂಕಾರ, ಈರ್ಷೆ, ದ್ವೇಷದಂತಹ ನಕಾರಾತ್ಮಕ ಗುಣಗಳನ್ನು ದೂರ ಮಾಡುವ ಮೂಲಕ ಆಂತರಿಕ ಆರೋಗ್ಯವನ್ನು ಬೆಳೆಸುವ ಕಾರ್ಯ ಮಾಡುತ್ತಿದೆ. ವೈದ್ಯರು ಈ ಜ್ಞಾನವನ್ನು ಅಳವಡಿಸಿಕೊಂಡರೆ ಸಮಾಜಕ್ಕೆ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ. ಜಯಕುಮಾರ್ ಬ್ಯಾಳಿ, ಡಾ. ತುಕಾರಾಂ ಸೋರಿ, ಡಾ. ಸಿ.ಬಿ. ಹಿರೇಗೌಡರ್, ಡಾ. ವೆಂಕಟೇಶ್ ಪೂಜಾರ್, ಡಾ. ಈರಣ್ಣ ಹಳೇಮನಿ, ಡಾ. ರಶ್ಮಿ ವಾದೋನಿ, ಡಾ. ಬಸವರಾಜ್ ಚನ್ನಪ್ಪಗೌಡ್ರ, ಡಾ. ಜಿ. ನಾಗರಾಳ, ಡಾ. ಅಶೋಕ್ ಮತ್ತಿಗಟ್ಟಿ, ಡಾ. ಉಮೇಶ್ ಹಾದಿ, ಡಾ. ಸವಿತಾ ನಿಡಗುಂದಿ, ಡಾ. ಸಾಯಿಪ್ರಕಾಶ್ ಮಡಿವಾಳರ್, ಡಾ. ರೋಹಿತ್ ಹಾಗೂ ಡಾ. ಮೇಘಾ ಕೊಪ್ಪಳಕರ್ ಸೇರಿದಂತೆ ಅನೇಕ ವೈದ್ಯರು ಸನ್ಮಾನ ಸ್ವೀಕರಿಸಿದರು.

ಬಿ.ಕೆ. ರೇಖಾ ಸ್ವಾಗತಿಸಿದರು. ಬಿ.ಕೆ. ಸಾವಿತ್ರಿ ವಂದಿಸಿದರು.

“ವೈದ್ಯರು ಕೇವಲ ದೇಹದ ಕಾಯಿಲೆ ಗುಣಪಡಿಸುವ ‘ಡಾಕ್ಟರ್’ ಆಗಿರಬಾರದು. ರೋಗಿಯ ಮನಸ್ಸಿನ ನೋವು, ಆತಂಕ, ಒತ್ತಡವನ್ನೂ ದೂರ ಮಾಡುವ ‘ಡಬಲ್ ಡಾಕ್ಟರ್’ ಆದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ.”

 ಬ್ರಹ್ಮಕುಮಾರಿ ಜಯಂತಿ, ಈಶ್ವರೀಯ ವಿಶ್ವ ವಿದ್ಯಾಲಯ

ಮಧುಮೇಹ ನಿಯಂತ್ರಣಕ್ಕೆ ನರ್ಸ್‌ಗಳ ಪಾತ್ರ ಮಹತ್ವದ್ದು: ಡಾ. ಅನ್ವರ್ ಹುಸೇನ್

ವಿಜಯಸಾಕ್ಷಿ ಸುದ್ದಿ, ಗದಗ: ಮಧುಮೇಹವನ್ನು ಕೇವಲ ಔಷಧಗಳಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಆಹಾರ ಪದ್ಧತಿ, ನಿಯಮಿತ ವ್ಯಾಯಾಮ, ಪಾದದ ಆರೈಕೆ ಹಾಗೂ ಮಾನಸಿಕ ಬೆಂಬಲದಂತಹ ಅಂಶಗಳು ಸಮಾನವಾಗಿ ಮಹತ್ವದ್ದಾಗಿದ್ದು, ರೋಗಿಯ ಆರೈಕೆಯಲ್ಲಿ ನರ್ಸ್‌ಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಸಿಎಂಸಿ ವೆಲ್ಲೂರಿನ ಹಿರಿಯ ಎಂಡೋಕ್ರೈನಾಲಜಿಸ್ಟ್ ಡಾ. ಅನ್ವರ್ ಹುಸೇನ್ ಹೇಳಿದರು.

ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು (ಸಿಎಂಸಿ), ವೆಲ್ಲೂರು ಹಾಗೂ ಬಾಸೆಲ್ ಮಿಷನ್ ಸಿಎಸ್‌ಐ ಆಸ್ಪತ್ರೆ, ಗದಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕ್ಲಾರ್ಕ್ಸ್ ಇನ್ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ‘ಮಧುಮೇಹ ನಿರ್ವಹಣೆ’ ಕುರಿತ ಒಂದು ದಿನದ ನಿರಂತರ ನರ್ಸಿಂಗ್ ಶಿಕ್ಷಣ (ಸಿಎನ್‌ಇ) ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಮಧುಮೇಹ ಚಿಕಿತ್ಸೆಯಲ್ಲಿನ ಹೊಸ ವಿಧಾನಗಳು, ಇನ್ಸುಲಿನ್ ನಿರೋಧಕತೆ ಹಾಗೂ ಗರ್ಭಾವಸ್ಥೆಯ ಮಧುಮೇಹ ನಿರ್ವಹಣೆ ಕುರಿತು ಸವಿಸ್ತಾರವಾಗಿ ವಿವರಿಸಿದ ಅವರು, ರೋಗಿಗೆ ಸಮಗ್ರ ಆರೈಕೆ ದೊರೆತಾಗ ಮಾತ್ರ ಉತ್ತಮ ಫಲಿತಾಂಶ ಸಾಧ್ಯವಾಗುತ್ತದೆ ಎಂದರು.

ಡಯಾಬಿಟಿಸ್ ನರ್ಸ್ ಎಜುಕೇಟರ್ ವಿಜಯಲಕ್ಷ್ಮಿ ಅವರು ಸುರಕ್ಷಿತ ಇನ್ಸುಲಿನ್ ಚುಚ್ಚುಮದ್ದು ತಂತ್ರ, ಇನ್ಸುಲಿನ್ ಪೆನ್ ಬಳಕೆ, ಹೈಪೋಗ್ಲೈಸೆಮಿಯಾ ತುರ್ತು ನಿರ್ವಹಣೆ ಹಾಗೂ ಸ್ವಯಂ ರಕ್ತದ ಗ್ಲೂಕೋಸ್ ಪರೀಕ್ಷೆ ಮಾಡುವ ವಿಧಾನಗಳ ಕುರಿತು ಪ್ರಾಯೋಗಿಕ ಪ್ರದರ್ಶನ ನೀಡಿದರು.

ಬಾಸೆಲ್ ಮಿಷನ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಬ್ಯೂಲಾ ಪ್ರಿಯದರ್ಶಿನಿ ಮಾತನಾಡಿ, ಭಾರತೀಯ ನರ್ಸಿಂಗ್ ಪರಿಷತ್ತಿನ ಮಾರ್ಗಸೂಚಿಯಂತೆ ಉತ್ತರ ಕರ್ನಾಟಕದಲ್ಲಿ ಇಂತಹ ವಿಶೇಷ ತರಬೇತಿ ಕಾರ್ಯಕ್ರಮಗಳ ಅಗತ್ಯ ಹೆಚ್ಚಿದ್ದು, ನರ್ಸ್‌ಗಳ ಕೌಶಲ್ಯ ವೃದ್ಧಿಗೆ ಇದು ಸಹಕಾರಿಯಾಗಿದೆ ಎಂದರು.

ಬಾಸೆಲ್ ಮಿಷನ್ ಸಿಎಸ್‌ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅಜಯ್ ರಾಜು ಮಾತನಾಡಿ, ಐಸಿಎಂಆರ್–ಇಂಡಿಯಾಬ್ ಅಧ್ಯಯನದ ಪ್ರಕಾರ ಕರ್ನಾಟಕದಲ್ಲಿ 18 ವರ್ಷ ಮೇಲ್ಪಟ್ಟವರಲ್ಲಿ ಶೇ.11.2ರಷ್ಟು ಜನ ಮಧುಮೇಹದಿಂದ ಬಳಲುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ರೋಗ ತಡವಾಗಿ ಪತ್ತೆಯಾಗುತ್ತಿರುವುದರಿಂದ ಪ್ರಾಥಮಿಕ ಹಂತದಲ್ಲೇ ನರ್ಸ್‌ಗಳು ತಪಾಸಣೆ, ಮಾರ್ಗದರ್ಶನ ಹಾಗೂ ಆರೋಗ್ಯ ಶಿಕ್ಷಣ ನೀಡುವುದು ಅತ್ಯಂತ ಅಗತ್ಯ ಎಂದು ಹೇಳಿದರು.

ಗದಗ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ನರ್ಸಿಂಗ್ ಕಾಲೇಜುಗಳಿಂದ 125ಕ್ಕೂ ಹೆಚ್ಚು ನರ್ಸ್‌ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ತಜ್ಞರಿಂದ ಪ್ರಾಯೋಗಿಕ ಹಾಗೂ ಸಾಕ್ಷ್ಯಾಧಾರಿತ ತರಬೇತಿ ಪಡೆದರು.

ಕಾರ್ಯಕ್ರಮದಲ್ಲಿ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹ ಪ್ರಾಧ್ಯಾಪಕ ಡಾ. ಸ್ಟೀಫನ್, ಹಿರಿಯ ಶುಶ್ರೂಷಾಧಿಕಾರಿಗಳು ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

“ಮಧುಮೇಹ ಚಿಕಿತ್ಸೆಯಲ್ಲಿ ಔಷಧ ಮಾತ್ರ ಸಾಕಾಗುವುದಿಲ್ಲ. ಆಹಾರ, ವ್ಯಾಯಾಮ, ಪಾದದ ಆರೈಕೆ ಮತ್ತು ಮಾನಸಿಕ ಬೆಂಬಲವನ್ನು ಸಮನ್ವಯಗೊಳಿಸಿದಾಗಲೇ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯ.”

– ಡಾ. ಅನ್ವರ್ ಹುಸೇನ್, ಹಿರಿಯ ಎಂಡೋಕ್ರೈನಾಲಜಿಸ್ಟ್, ಸಿಎಂಸಿ ವೆಲ್ಲೂರು

ಕೊಟ್ಟೂರೇಶ್ವರ ಮಠದ ಸೇವೆಗೆ ಬೊಮ್ಮಾಯಿ ಮೆಚ್ಚುಗೆ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆಯ ರಕ್ಷಣೆಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹರ್ಲಾಪೂರದ ಕೊಟ್ಟೂರೇಶ್ವರ ಮಠ ಮುಂಚೂಣಿಯಲ್ಲಿದ್ದು, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮೌಲಿಕ ಸೇವೆ ಸಲ್ಲಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಲಕ್ಕುಂಡಿ ಸಮೀಪದ ಹರ್ಲಾಪೂರ ಕೊಟ್ಟೂರೇಶ್ವರ ಮಠದ 138ನೇ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಹಠಯೋಗಿ ಕೊಟ್ಟೂರೇಶ್ವರರ 16ನೇ ದಿನದ ಪುರಾಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶರಣ-ಶರಣಿಯರ ಆದರ್ಶ ಜೀವನ, ಸಂಸ್ಕೃತಿ, ಸಂಪ್ರದಾಯ ಹಾಗೂ ಮೌಲ್ಯಗಳನ್ನು ಪುರಾಣ ಪ್ರವಚನಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯವನ್ನು ಮಠ ನಿರಂತರವಾಗಿ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಮಠದ ಪೀಠಾಧಿಪತಿಗಳಾದ ಡಾ. ಕೊಟ್ಟೂರೇಶ್ವರ ಶ್ರೀಗಳು ಕೃಷಿ ಕಾಯಕದಲ್ಲೂ ತೊಡಗಿಕೊಂಡಿರುವುದು ಮಾದರಿಯಾಗಿದೆ. ಮಠವು ಶಿಕ್ಷಣ ದಾಸೋಹದ ಯೋಜನೆ ಕೈಗೊಂಡರೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಅಗತ್ಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಡಾ. ಕೊಟ್ಟೂರೇಶ್ವರ ಶ್ರೀಗಳು ಮಾತನಾಡಿ, ಬಸವರಾಜ ಬೊಮ್ಮಾಯಿ ಅವರು ಮಠ-ಮಾನ್ಯಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಮಠದ ಆಹ್ವಾನಕ್ಕೆ ಸ್ಪಂದಿಸಿ ಆಗಮಿಸಿರುವುದು ಸಂತಸದ ವಿಷಯವಾಗಿದೆ. ಕೊಟ್ಟೂರೇಶ್ವರರ ಆಶೀರ್ವಾದ ಸದಾ ಅವರ ಮೇಲಿರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕಳಕಪ್ಪ ಬಂಡಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಜು ಕುರುಡಗಿ, ರೋಣ ಬಿಜೆಪಿ ಮಂಡಲ ಅಧ್ಯಕ್ಷ ಉಮೇಶ ಮಲ್ಲಾಪೂರ, ಡಂಬಳ ಬಿಜೆಪಿ ಮಂಡಲ ಅಧ್ಯಕ್ಷ ಅಂದಪ್ಪ ಹಾರೋಗೇರಿ ಉಪಸ್ಥಿತರಿದ್ದರು.

ಶಿಕ್ಷಕ ಕೆ.ಬಿ. ಕೊಣ್ಣೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಎಂ. ಮಜ್ಜಿಗುಡ್ಡ ಸ್ವಾಗತಿಸಿದರು. ವೆಂಕಟೇಶ ಜುಂಜಣಿ ನಿರೂಪಿಸಿದರು. ರಾಮಣ್ಣ ಬೆಳಧಡಿ ವಂದಿಸಿದರು.

“ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಉಳಿಸುವಲ್ಲಿ ಹರ್ಲಾಪೂರ ಕೊಟ್ಟೂರೇಶ್ವರ ಮಠದ ಸೇವೆ ಶ್ಲಾಘನೀಯ. ಶಿಕ್ಷಣ ದಾಸೋಹಕ್ಕೆ ಸಂಸದರ ನಿಧಿಯಿಂದ ನೆರವು ನೀಡಲು ಸಿದ್ಧನಿದ್ದೇನೆ.”

– ಬಸವರಾಜ ಬೊಮ್ಮಾಯಿ

‘ಜೀವನ ಧಾರಾ’ ಮೂಲಕ ಮಾನವೀಯ ನೆರವು

ವಿಜಯಸಾಕ್ಷಿ ಸುದ್ದಿ, ಗದಗ: ಇನ್ನರ್ ವೀಲ್ ಕ್ಲಬ್ ಗದಗ-ಬೆಟಗೇರಿ ವತಿಯಿಂದ “ಜೀವನ ಧಾರಾ” ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ, ಅಂಧತ್ವ ಹಾಗೂ ಅಂಗವಿಕಲತೆಯಿಂದ ಬಳಲುತ್ತಿರುವ ವೀರೇಶ ಅಬ್ಬಿಗೇರಿ ಅವರಿಗೆ ಎರಡು ಸಿಟ್ಟಿಂಗ್‌ಗಳ ಡಯಾಲಿಸಿಸ್ ಚಿಕಿತ್ಸೆಗೆ ಅಗತ್ಯವಾದ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷೆ ಮಂಜುಳಾ ಅಕ್ಕಿ ಮಾತನಾಡಿ, ಸಂಕಷ್ಟದಲ್ಲಿರುವವರಿಗೆ ಸಮಯೋಚಿತ ನೆರವು ನೀಡುವುದು ಸಂಸ್ಥೆಯ ಧ್ಯೇಯವಾಗಿದೆ. ಸಮಾಜದ ದುರ್ಬಲ ವರ್ಗಗಳ ಕಲ್ಯಾಣಕ್ಕಾಗಿ ಇಂತಹ ಸೇವಾ ಚಟುವಟಿಕೆಗಳನ್ನು ಮುಂದೆಯೂ ನಿರಂತರವಾಗಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ವೀರೇಶ ಅಬ್ಬಿಗೇರಿ ಹಾಗೂ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಪದಾಧಿಕಾರಿಗಳು ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಕ್ಲಬ್ ಸದಸ್ಯೆ ಡಾ. ಶಿಲ್ಪಾ ಧಡೂತಿ ಅವರು ಈ ಸೇವಾ ಕಾರ್ಯಕ್ಕೆ ಕೈಜೋಡಿಸಿ, ನೆರವು ನಿಜವಾದ ಫಲಾನುಭವಿಗೆ ತಲುಪುವಂತೆ ಸಹಕರಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಪೂಜಾ ಭೂಮಾ, ಜಂಟಿ ಕಾರ್ಯದರ್ಶಿ ಪುಷ್ಪಾ ಭಂಡಾರಿ, ಖಜಾಂಚಿ ವೀಣಾ ಕಾವೇರಿ, ಐಎಸ್‌ಒ ವಿದ್ಯಾ ಶಿವನಗುತ್ತಿ, ಸಂಪಾದಕಿ ಮೀನಾಕ್ಷಿ ಕೊರವನವರ, ಕೋಸಿಪಿಸಿಸಿ ಶಾರದಾ ಸಜ್ಜನ ಸೇರಿದಂತೆ ಕ್ಲಬ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಸಂಕಷ್ಟದಲ್ಲಿರುವ ವ್ಯಕ್ತಿಗೆ ಸಮಯಕ್ಕೆ ಸಿಗುವ ನೆರವಿಗಿಂತ ದೊಡ್ಡ ಸೇವೆ ಮತ್ತೊಂದಿಲ್ಲ. ಸಮಾಜದ ದುರ್ಬಲ ವರ್ಗಗಳ ಬದುಕಿಗೆ ಆಸರೆಯಾಗುವ ಕೆಲಸಗಳನ್ನು ಇನ್ನರ್ ವೀಲ್ ಕ್ಲಬ್ ಮುಂದೆಯೂ ನಿರಂತರವಾಗಿ ಕೈಗೊಳ್ಳಲಿದೆ.”

– ಮಂಜುಳಾ ಅಕ್ಕಿ, ಅಧ್ಯಕ್ಷೆ, ಇನ್ನರ್ ವೀಲ್ ಕ್ಲಬ್ ಗದಗ-ಬೆಟಗೇರಿ