ಬೆಂಗಳೂರು: ಹವಾಮಾನ ಇಲಾಖೆ ನೀಡಿದ್ದ ಯೆಲ್ಲೋ ಅಲರ್ಟ್ ಮುನ್ಸೂಚನೆ ಬೆಂಗಳೂರಿನಲ್ಲಿ ಅಕ್ಷರಶಃ ನಿಜವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಸಂಜೆ ವೇಳೆಗೆ ದಿಢೀರ್ ಹವಾಮಾನ ಬದಲಾವಣೆಯಾಗಿದೆ.
ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಿದ ಭೀಕರ ಧೂಳಿನ ಬಿರುಗಾಳಿ, ಗುಡುಗು-ಮಿಂಚಿನ ಆರ್ಭಟ ಹಾಗೂ ಧಾರಾಕಾರ ಮಳೆಯಿಂದ ನಗರ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಧ್ಯಾಹ್ನದವರೆಗೆ ಉರಿ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನಲ್ಲಿ ಸಂಜೆ 6 ಗಂಟೆಯ ನಂತರ ಏಕಾಏಕಿ ಕಪ್ಪು ಮೋಡಗಳು ಆವರಿಸಿವೆ. ಬಿರುಗಾಳಿಯ ತೀವ್ರತೆ ಎಷ್ಟಿತ್ತೆಂದರೆ ರಸ್ತೆಗಳಲ್ಲಿ ವಾಹನ ಸವಾರರಿಗೆ ಸರಿಯಾಗಿ ಕಾಣಿಸದಷ್ಟು ಧೂಳು ಆವರಿಸಿತ್ತು.
ಅದಾದ ಬಳಿಕ ಮೆಜೆಸ್ಟಿಕ್, ಕಾರ್ಪೊರೇಷನ್, ಎಂ.ಜಿ ರಸ್ತೆ, ಯಶವಂತಪುರ, ಇಂದಿರಾನಗರ, ವೈಟ್ಫೀಲ್ಡ್, ಜಯನಗರ ಹಾಗೂ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.
ಕಚೇರಿ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಹಾಗೂ ದ್ವಿಚಕ್ರ ವಾಹನ ಸವಾರರು ದಿಢೀರ್ ಮಳೆಗೆ ಸಿಲುಕಿ ರಸ್ತೆ ಬದಿಯಲ್ಲಿ ಆಶ್ರಯ ಪಡೆಯುವಂತಾಯಿತು. ಮಳೆ ನೀರು ರಸ್ತೆಗಳಲ್ಲಿ ಹರಿದ ಪರಿಣಾಮ ಪ್ರಮುಖ ಜಂಕ್ಷನ್ಗಳು, ಫ್ಲೈಓವರ್ಗಳು ಹಾಗೂ ಹೆದ್ದಾರಿಗಳ ಮೇಲೆ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.
ಬಿರುಗಾಳಿಯ ರಭಸಕ್ಕೆ ನಗರದ ಕೆಲವೆಡೆ ಮರದ ಕೊಂಬೆಗಳು ಮುರಿದು ಬಿದ್ದಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಸ್ಕಾಂ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮುಂದಿನ 2ರಿಂದ 3 ಗಂಟೆಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಬಿಬಿಎಂಪಿ ಮತ್ತು ಟ್ರಾಫಿಕ್ ಪೊಲೀಸರು ಸೂಚನೆ ನೀಡಿದ್ದಾರೆ.

