Home Blog

ಸೈಬರ್ ಖದೀಮರ ಜಾಲಕ್ಕೆ ಬಿದ್ದ ವೃದ್ಧೆ: ಡಿಜಿಟಲ್ ಬಂಧನ ಹೆಸರಿನಲ್ಲಿ 24 ಕೋಟಿ ವಂಚನೆ!

ಬೆಂಗಳೂರು:  ನಗರದಲ್ಲಿ ಡಿಜಿಟಲ್ ಬಂಧನ ಹೆಸರಿನಲ್ಲಿ ಸೈಬರ್ ವಂಚಕರು ವೃದ್ಧೆಯೊಬ್ಬರನ್ನು ಬೆದರಿಸಿ 24 ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಶಿವಾಜಿನಗರ ನಿವಾಸಿ ಲಕ್ಷ್ಮೀ ರಾಮಮೂರ್ತಿ ಎಂಬ ವೃದ್ಧೆಯನ್ನು ಗುರಿಯಾಗಿಸಿಕೊಂಡ ಸೈಬರ್ ವಂಚಕರು, “ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿಮ್ಮ ಹೆಸರು ಇದೆ” ಎಂದು ಬೆದರಿಕೆ ಹಾಕಿ ಹಲವು ತಿಂಗಳುಗಳ ಕಾಲ ಡಿಜಿಟಲ್ ಬಂಧನದಲ್ಲಿರುವಂತೆ ನಂಬಿಸಿದ್ದಾರೆ.

ಆಸ್ತಿ ಮಾರಾಟದಿಂದ ಲಕ್ಷ್ಮೀ ರಾಮಮೂರ್ತಿಗೆ ಕೋಟ್ಯಂತರ ರೂಪಾಯಿ ಬಂದಿದ್ದ ಮಾಹಿತಿ ತಿಳಿದ ವಂಚಕರು, ಕಳೆದ ಜನವರಿಯಿಂದ ಮೇ ತಿಂಗಳವರೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಈ ಅವಧಿಯಲ್ಲಿ ಬರೋಬ್ಬರಿ 24 ಕೋಟಿ ರೂಪಾಯಿ ವಂಚಕರ ಪಾಲಾಗಿದೆ ಎನ್ನಲಾಗಿದೆ.

ಇಷ್ಟೊಂದು ಹಣ ನೀಡಿದ ಬಳಿಕವೂ ಇನ್ನಷ್ಟು ಹಣ ಕೊಡಬೇಕು ಎಂದು ವಂಚಕರು ಒತ್ತಾಯ ಮಾಡುತ್ತಿದ್ದರು. ಇದರಿಂದ ಆತಂಕಗೊಂಡ ವೃದ್ಧೆ ಮನೆಯಲ್ಲಿದ್ದ ಸುಮಾರು 1.30 ಕಿಲೋ ಚಿನ್ನಾಭರಣವನ್ನು ಅಡ ಇಟ್ಟು ಹಣ ಪಡೆಯಲು ಬ್ಯಾಂಕ್‌ಗೆ ತೆರಳಿದ್ದರು.

ಈ ವೇಳೆ ವೃದ್ಧೆಯ ವರ್ತನೆ ಅನುಮಾನಾಸ್ಪದವಾಗಿ ಕಂಡ ಹಿನ್ನೆಲೆ ಕಂಟೋನ್ಮೆಂಟ್ ಶಾಖೆಯ ಐಸಿಐಸಿಐ ಬ್ಯಾಂಕ್ ವ್ಯವಸ್ಥಾಪಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಿಸಿಬಿ ಸೈಬರ್ ಅಪರಾಧ ವಿಭಾಗದ ಪೊಲೀಸರು ವೃದ್ಧೆಯನ್ನು ವಿಚಾರಣೆ ನಡೆಸಿದ್ದಾರೆ.

ಆರಂಭದಲ್ಲಿ ವೃದ್ಧೆ ಯಾವುದೇ ಮಾಹಿತಿ ನೀಡಲು ಹಿಂದೇಟು ಹಾಕಿದರೂ, ಬಳಿಕ ಸೈಬರ್ ವಂಚಕರು ಡಿಜಿಟಲ್ ಬಂಧನ ಮಾಡಿ ಹಣ ವಸೂಲಿ ಮಾಡಿರುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿದೇಶದಲ್ಲಿರುವ ವೃದ್ಧೆಯ ಮಕ್ಕಳಿಗೂ ಮಾಹಿತಿ ನೀಡಲಾಗಿದೆ.

ಪ್ರಕರಣ ಸಂಬಂಧ ಮುಂಬೈ, ಅಲಹಾಬಾದ್ ಹಾಗೂ ದೆಹಲಿ ಮೂಲದ ಆರೋಪಿಗಳನ್ನು ಬಂಧಿಸಲಾಗಿದ್ದು, ಗೌರವ್ ಕುಮಾರ್, ಓಂ ಪ್ರಕಾಶ್ ರಾಜಪೂತ್ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಸೈಬರ್ ವಂಚಕರು 22 ಬ್ಯಾಂಕ್ ಖಾತೆಗಳ ಮೂಲಕ ಹಣ ವರ್ಗಾವಣೆ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದುವರೆಗೆ 60 ಲಕ್ಷ ರೂಪಾಯಿ ಇರುವ ಬ್ಯಾಂಕ್ ಖಾತೆಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಪೊಲೀಸ್ ವಸತಿ ಗೃಹದಲ್ಲಿ ಕಾನ್ಸ್‌ಟೇಬಲ್ ಪತ್ನಿ ಆತ್ಮಹತ್ಯೆ! ವರದಕ್ಷಿಣೆ ಕಿರುಕುಳ ಆರೋಪ?

ಬೆಂಗಳೂರು: ನಗರದ ಕೆ.ಆರ್.ಪುರಂ ಪೊಲೀಸ್ ವಸತಿ ಗೃಹದಲ್ಲಿ ಕಾನ್ಸ್‌ಟೇಬಲ್ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹೆಚ್‌ಎಎಲ್ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ರಾಜೇಶ್ ಆರಾಧ್ಯ ಅವರ ಪತ್ನಿ ಲಕ್ಷ್ಮೀಪ್ರಿಯಾ (27) ಮೃತ ಮಹಿಳೆ.

ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್ ಆರಾಧ್ಯ ಮತ್ತು ಲಕ್ಷ್ಮೀಪ್ರಿಯಾ 2023ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಎಂಟು ತಿಂಗಳ ಮಗು ಇದ್ದು, ಕೆ.ಆರ್.ಪುರಂ ಪೊಲೀಸ್ ವಸತಿ ಗೃಹದಲ್ಲಿ ವಾಸವಾಗಿದ್ದರು.

ಮೇ 22ರಂದು ದಂಪತಿ ನಡುವೆ ಕೌಟುಂಬಿಕ ವಿಚಾರಕ್ಕೆ ಜಗಳ ಉಂಟಾಗಿದ್ದು, “ನನ್ನ ತಂದೆ-ತಾಯಿಗೆ ನೀನು ಗೌರವ ಕೊಡುವುದಿಲ್ಲ” ಎಂದು ಪತಿ ರಾಜೇಶ್ ಪತ್ನಿಯನ್ನು ಬೈದಿದ್ದಾನೆ ಎನ್ನಲಾಗಿದೆ. ಈ ವಿಚಾರದಿಂದ ಮನನೊಂದ ಲಕ್ಷ್ಮೀಪ್ರಿಯಾ, ಪತಿ ರಾತ್ರಿ ಕರ್ತವ್ಯಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯ ಬಳಿಕ ಮೃತಳ ಪೋಷಕರು ಪತಿ ರಾಜೇಶ್ ಆರಾಧ್ಯ ಹಾಗೂ ಅವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮದುವೆಯಾದ ಬಳಿಕದಿಂದಲೇ ವರದಕ್ಷಿಣೆ ವಿಚಾರವಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ದೂರಿದ್ದಾರೆ.

ಮೃತಳ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪತಿ ರಾಜೇಶ್ ಆರಾಧ್ಯ ಹಾಗೂ ಕುಟುಂಬಸ್ಥರ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಾಯಚೂರಿನಲ್ಲಿ ಮಳೆ ಅಬ್ಬರ: ಸಿಡಿಲಿಗೆ ತೆಂಗಿನ ಮರ ಭಸ್ಮ, ರಾಯರ ಭಕ್ತರಿಗೆ ಮಠದಲ್ಲಿ ಆಶ್ರಯ ಕಲ್ಪಿಸಿದ ಶ್ರೀಗಳು!

ರಾಯಚೂರು: ಜಿಲ್ಲೆಯಾದ್ಯಂತ ಶನಿವಾರ ತಡರಾತ್ರಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾರೀ ಮಳೆಯ ನಡುವೆ ಸಿಡಿಲು ಬಡಿದು ತೆಂಗಿನ ಮರ ಸುಟ್ಟು ಕರಕಲಾಗಿರುವ ಘಟನೆ ಒಂದೆಡೆ ನಡೆದರೆ, ಮಂತ್ರಾಲಯದಲ್ಲಿ ಮಳೆಯಿಂದ ಸಾವಿರಾರು ಭಕ್ತರು ಸಂಕಷ್ಟಕ್ಕೆ ಸಿಲುಕಿದ ಘಟನೆ ಮತ್ತೊಂದೆಡೆ ನಡೆದಿದೆ.

ಜಿಲ್ಲೆಯ ಅರಕೇರಾ ತಾಲೂಕಿನ ಮುಕ್ಕಲಗುಡ್ಡ ತಾಂಡಾದಲ್ಲಿ ರಾತ್ರಿ ವೇಳೆ ಭೀಕರ ಸಿಡಿಲು ಬಡಿದಿದೆ. ತಾಂಡಾದ ನಿವಾಸಿ ಮನೋಹರ್ ನಾಯ್ಕ್ ಅವರ ಮನೆ ಮುಂದೆ ಇದ್ದ ತೆಂಗಿನ ಮರಕ್ಕೆ ಏಕಾಏಕಿ ಸಿಡಿಲು ಬಡಿದ ಪರಿಣಾಮ, ಮರದಲ್ಲಿದ್ದ ತೆಂಗಿನಕಾಯಿಗಳು ಹಾಗೂ ಗರಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ಸಿಡಿಲಿನ ತೀವ್ರತೆಗೆ ಮರ ಹೊತ್ತಿ ಉರಿದ ದೃಶ್ಯ ಕಂಡು ಗ್ರಾಮಸ್ಥರು ಆತಂಕಕ್ಕೊಳಗಾದರು. ದಟ್ಟ ಜನವಸತಿ ಪ್ರದೇಶದಲ್ಲೇ ಈ ಘಟನೆ ಸಂಭವಿಸಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದರಿಂದ ಇಡೀ ತಾಂಡಾ ದೊಡ್ಡ ಅನಾಹುತದಿಂದ ಪಾರಾಗಿದೆ.

ಇನ್ನೊಂದೆಡೆ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಂತ್ರಾಲಯದಲ್ಲೂ ಸುಮಾರು ಎರಡು ಗಂಟೆಗಳ ಕಾಲ ಭಾರೀ ಮಳೆಯಾಗಿದೆ. ವಾರಾಂತ್ಯ ಹಿನ್ನೆಲೆ ರಾಯರ ದರ್ಶನಕ್ಕಾಗಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು.

ಜಾಗದ ಕೊರತೆಯಿಂದ ಮಠದ ಹೊರಪ್ರಾಂಗಣದಲ್ಲಿ ನೂರಾರು ಭಕ್ತರು ಮಲಗಿದ್ದ ವೇಳೆ ತಡರಾತ್ರಿ ಏಕಾಏಕಿ ಮಳೆ ಆರಂಭವಾಗಿದೆ. ಮಳೆಯಿಂದ ತಪ್ಪಿಸಿಕೊಳ್ಳಲು ಭಕ್ತರು ದಿಕ್ಕಾಪಾಲಾಗಿ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಸಣ್ಣ ಮಕ್ಕಳು ಹಾಗೂ ವೃದ್ಧರೊಂದಿಗೆ ಭಕ್ತರು ಮಳೆಯಲ್ಲಿ ನೆನೆದು ಪರದಾಡಿದರು.

ಭಕ್ತರು ಸಂಕಷ್ಟಕ್ಕೆ ಸಿಲುಕಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಮಂತ್ರಾಲಯ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ತಡರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ತಕ್ಷಣವೇ ಮಠದ ಕಲ್ಯಾಣ ಮಂಟಪಗಳ ಬಾಗಿಲು ತೆರೆಯಿಸಿ ಭಕ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಮೂಲಕ ಮಾನವೀಯತೆ ಮೆರೆದರು.

ಕೊಪ್ಪಳದಲ್ಲಿ ಭೀಕರ ಅಪಘಾತ: ರಸ್ತೆಗೆ ಬಿದ್ದಿದ್ದ ಬೇವಿನ ಮರಕ್ಕೆ ಬೈಕ್ ಡಿಕ್ಕಿ – ಯುವಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ!

ಕೊಪ್ಪಳ: ಜಿಲ್ಲೆಯಲ್ಲಿ ಸುರಿದ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ರಸ್ತೆಗೆ ಉರುಳಿಬಿದ್ದಿದ್ದ ಬೇವಿನ ಮರಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಕಾಮನೂರ ಗ್ರಾಮದ ಬಳಿ ಭಾನುವಾರ ಬೆಳಗಿನ ಜಾವ ನಡೆದಿದೆ.

ಮೃತ ಯುವಕನನ್ನು ಕಿರಣ್ ಕರಬಡಗಿ (30) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಜೊತೆಯಲ್ಲಿದ್ದ ಮಹೇಶ್ ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಕೊಪ್ಪಳ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಭಾನುವಾರ ಬೆಳಿಗ್ಗೆ ಸುಮಾರು 5 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಕಿರಣ್ ಮತ್ತು ಮಹೇಶ್ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಗೆ ಕೆಲಸ ನಿಮಿತ್ತ ತೆರಳುತ್ತಿದ್ದರು. ಮೊದಲು ಕಾಮನೂರಿನಿಂದ ಗಿಣಿಗೇರಿಗೆ ಬೈಕ್‌ನಲ್ಲಿ ತೆರಳಿ, ಅಲ್ಲಿಂದ ಕ್ರಷರ್ ವಾಹನ ಹತ್ತಿ ಕೆಲಸದ ಸ್ಥಳಕ್ಕೆ ಹೋಗುವ ಯೋಜನೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಆದರೆ ರಾತ್ರಿ ಸುರಿದ ಭಾರಿ ಗಾಳಿ-ಮಳೆಯಿಂದ ಕಾಮನೂರ ಸಮೀಪ ಬೃಹತ್ ಬೇವಿನ ಮರವೊಂದು ರಸ್ತೆಗೆ ಅಡ್ಡವಾಗಿ ಬಿದ್ದಿತ್ತು. ಬೆಳಗಿನ ಜಾವ ಕತ್ತಲೆ ವಾತಾವರಣ ಮತ್ತು ಕಡಿಮೆ ಬೆಳಕಿನ ಕಾರಣ ರಸ್ತೆಯಲ್ಲಿದ್ದ ಮರ ಕಾಣಿಸದೇ, ಇವರ ಬೈಕ್ ನೇರವಾಗಿ ಮರಕ್ಕೆ ಡಿಕ್ಕಿಯಾಗಿದೆ.

ಡಿಕ್ಕಿಯ ತೀವ್ರತೆಗೆ ಕಿರಣ್ ತಲೆಗೆ ಭಾರೀ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹೇಶ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

“ಉಚಿತ ವಿದ್ಯುತ್ ಘೋಷಿಸಿ ಬಿಲ್ ಏಕೆ?”

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿಯ ವಿದ್ಯುತ್ ಚಾಲಿತ ಮಗ್ಗಗಳಿಗೆ ಸರ್ಕಾರ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ಯೋಜನೆ ಜಾರಿಗೊಳಿಸಿದ್ದರೂ, ಇತ್ತೀಚೆಗೆ ಹೆಚ್ಚುವರಿ ವಿದ್ಯುತ್ ಬಿಲ್‌ಗಳು ಬರುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ವತಿಯಿಂದ ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮುಳಗುಂದ ನಾಕಾದ ಹೆಸ್ಕಾಂ ಮುಖ್ಯ ಕಾರ್ಯನಿರ್ವಾಹಕ ಅಭಿಯಂತರರಿಗೆ ಸಲ್ಲಿಸಿದ ಮನವಿಯಲ್ಲಿ, ವೃತ್ತಿಪರ ನೇಕಾರರಿಗೆ ಸರ್ಕಾರ ನೀಡಿರುವ ಉಚಿತ ವಿದ್ಯುತ್ ಸೌಲಭ್ಯವನ್ನು ಯಾವುದೇ ಷರತ್ತಿಲ್ಲದೆ ಸಂಪೂರ್ಣ ಜಾರಿಗೆ ತರಬೇಕು ಎಂದು ಆಗ್ರಹಿಸಲಾಯಿತು.
ಈ ವೇಳೆ ಮಾತನಾಡಿದ ರಾಜು ಧಡಿ, ಗದಗ-ಬೆಟಗೇರಿ ಸೇರಿದಂತೆ ರಾಜ್ಯದ ಎಲ್ಲ ವೃತ್ತಿಪರ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ ಎಂದು ಹೇಳಿದರು.
10 ಹೆಚ್.ಪಿ ಮೀರಿದ ವಿದ್ಯುತ್ ಚಾಲಿತ ಮಗ್ಗಗಳಿಗೆ ಮಾತ್ರ ಪ್ರತಿ ಯೂನಿಟ್‌ಗೆ 1 ರೂಪಾಯಿ 25 ಪೈಸೆ ದರ ನಿಗದಿಯಾಗಿದೆ. ಆದರೆ ಇತ್ತೀಚೆಗೆ 10 ಹೆಚ್.ಪಿ ವ್ಯಾಪ್ತಿಯ ಮಗ್ಗ ಘಟಕಗಳಿಗೂ ಹಣ ಪಾವತಿಸುವಂತೆ ಬಿಲ್‌ಗಳು ಬರುತ್ತಿವೆ ಎಂದು ದೂರಿದರು.
“ಸರ್ಕಾರ ಕೊಟ್ಟು ಕಿತ್ತುಕೊಳ್ಳುವ ನೀತಿ ಅನುಸರಿಸಬಾರದು. ರಾಜ್ಯದ ವಿದ್ಯುತ್ ಚಾಲಿತ ಮಗ್ಗಗಳಿಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸದೆ ಸಂಪೂರ್ಣ ಉಚಿತ ಜೀರೋ ಬಿಲ್ ನೀಡಬೇಕು” ಎಂದು ಒತ್ತಾಯಿಸಿದರು.
ಇನ್ನು ಮುಂದೆ ಹೆಸ್ಕಾಂ ಇಲಾಖೆಯಿಂದ ಹಣ ಪಾವತಿಸುವಂತೆ ಬಿಲ್‌ಗಳು ಬಂದರೆ ಅದಕ್ಕೆ ಸರ್ಕಾರವೇ ಸಂಪೂರ್ಣ ಜವಾಬ್ದಾರಿಯಾಗಿರುತ್ತದೆ. ನೇಕಾರರು ಯಾವುದೇ ಹಣ ಪಾವತಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ  ವಿರುಪಾಕ್ಷಪ್ಪ ಐಲಿ, ನಗರಸಭಾ ಸದಸ್ಯ ಮಾಧುಸಾ ಮೇರವಾಡೆ, ನಾರಾಯಣಪ್ಪ, ಕೃಷ್ಣ ಕೊಪ್ಪರದ, ಈರಣ್ಣ ಕೋನಾ, ನಾರಾಯಣ ಗೋಟೂರ, ಬಸವರಾಜ ಕರಿ, ಟಿ.ಎಂ. ಮೇರವಾಡೆ, ಪಿ.ಸಿ. ಹೀನಾಯಿ, ರಾಘವೇಂದ್ರ ಕಿನಿಲಿ, ನಾರಾಯಣ ಎಸ್. ಜುಟ್ಲಾ, ವೆಂಕಟೇಶ ಸಿಂಪಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬೆಟಗೇರಿಗೆ ತುರ್ತು ಸಾರಿಗೆ ಪೊಲೀಸ್ ಠಾಣೆ ಅಗತ್ಯ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಭಾಗದಲ್ಲಿ ದಿನದಿಂದ ದಿನಕ್ಕೆ ವಾಹನ ಸಂಚಾರ ಹೆಚ್ಚುತ್ತಿದ್ದು, ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಬೆಟಗೇರಿಯಲ್ಲಿ ತಕ್ಷಣ ಸಾರಿಗೆ ಪೊಲೀಸ್ ಠಾಣೆ ಆರಂಭಿಸಬೇಕು ಎಂದು ಮುಖಂಡ ಸತೀಶ ಹುಲಿ ಒತ್ತಾಯಿಸಿದ್ದಾರೆ.
ಬೆಟಗೇರಿ ಭಾಗದಲ್ಲಿ ವಾಹನಗಳ ಉಪಟಳ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹುಯಿಲಗೋಳ ಕ್ರಾಸ್, ಬೆಟಗೇರಿ ಬಸ್ ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಭವಿಸುತ್ತಿರುವ ಅಪಘಾತಗಳು ಹಾಗೂ ಸಾವಿನ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ ಎಂದು ಅವರು ತಿಳಿಸಿದ್ದಾರೆ.
ಸಾರಿಗೆ ನಿಯಂತ್ರಣದ ಸಮರ್ಪಕ ವ್ಯವಸ್ಥೆಯ ಕೊರತೆಯಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಬೆಟಗೇರಿ ಭಾಗಕ್ಕೆ ಪ್ರತ್ಯೇಕ ಸಾರಿಗೆ ಪೊಲೀಸ್ ಠಾಣೆ ಅಗತ್ಯವಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಜನಸಂಚಾರ ಮತ್ತು ವಾಹನ ದಟ್ಟಣೆಗೆ ಅನುಗುಣವಾಗಿ ಬೆಟಗೇರಿಗೆ ಸಾರಿಗೆ ಪೊಲೀಸ್ ಠಾಣೆ ಮಂಜೂರು ಮಾಡಬೇಕು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಲಾಗಿದೆ.
ಈ ಒತ್ತಾಯಕ್ಕೆ ಆರ್.ಎಲ್. ಮೇಳೆನ್ನವರ, ಮಹಾದೇವ ಚಲವಾದಿ, ಗುರುಮೂರ್ತಿ ಚಲವಾದಿ, ಬೂದಪ್ಪ ಹುಣಸೀಮರದ ಸೇರಿದಂತೆ ಸ್ಥಳೀಯರು ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹವಳದ ನೇಮಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಸರಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜ ಹವಳದ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ನೇಮಕಾತಿ ಪತ್ರ ನೀಡಿ ಹವಳದ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸರಕಾರಿ ನೌಕರರ ಉಪಾಧ್ಯಕ್ಷರು ಹಾಗೂ ಜಿಲ್ಲಾ ಅಧ್ಯಕ್ಷ ಬಸವರಾಜ ಬಳ್ಳಾರಿ ಇದ್ದರು.
ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗುರುರಾಜ ಹವಳದ ಅವರು ಉತ್ಸಾಹದಿಂದ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ನೌಕರರ ಸಮಸ್ಯೆಗಳ ಪರಿಹಾರಕ್ಕಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಜವಾಬ್ದಾರಿ ನೀಡಿರುವುದಕ್ಕೆ ತಾಲೂಕು ನೌಕರರ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಹರ್ಷ ವ್ಯಕ್ತಪಡಿಸಿದ್ದಾರೆ.
ಗುರುರಾಜ ಹವಳದ ಅವರ ನೇಮಕಕ್ಕೆ ಬಿ.ಎಸ್. ಹರ್ಲಾಪೂರ, ಎಂ.ಎ. ನಧಾಪ್, ಎಂ.ಡಿ. ವಾರದ, ಬಸವರಾಜ ಯರಗುಪ್ಪಿ, ಡಿ.ಎಚ್. ಪಾಟೀಲ, ಎಲ್.ಎನ್. ನಂದೆಣ್ಣವರ, ಎಂ.ಎಸ್. ಹಿರೇಮಠ, ಚಂದ್ರು ನೇಕಾರ, ಡಿ.ಡಿ. ಲಮಾಣಿ ಸೇರಿದಂತೆ ತಾಲೂಕು ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

“ಹದಗೆಟ್ಟ ರಸ್ತೆಗೆ ಜೀವ ತುಂಬಲು ಶಾಸಕರ ಒತ್ತಾಯ”

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕ್ಷೇತ್ರ ವ್ಯಾಪ್ತಿಯ ಹದಗೆಟ್ಟ ರಸ್ತೆಗಳನ್ನು ಸುಧಾರಿಸಲು ಆದ್ಯತೆ ನೀಡುವಂತೆ ಆಗ್ರಹಿಸಿ ಶಿರಹಟ್ಟಿ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅವರು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕೀಹೊಳಿ ಅವರನ್ನು ಭೇಟಿ ಮಾಡಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.
ಲಕ್ಷ್ಮೇಶ್ವರ-ದೊಡ್ಡೂರು ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಈ ರಸ್ತೆಯ ಅಭಿವೃದ್ಧಿ ಹಾಗೂ ಮಾರ್ಗ ಮಧ್ಯೆ ಬರುವ ಸೇತುವೆಗಳ ನಿರ್ಮಾಣ ತುರ್ತು ಅಗತ್ಯವಾಗಿದೆ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು.
ಈ ರಸ್ತೆಯ ಮೂಲಕ ನಿತ್ಯ ನೂರಾರು ವಾಹನಗಳು ಹಾಗೂ ರೈತಾಪಿ ಜನರು ಸಂಚರಿಸುತ್ತಿದ್ದು, ಸಾವಿರಾರು ಎಕರೆ ಕೃಷಿ ಜಮೀನುಗಳಿಗೆ ಇದೇ ಮುಖ್ಯ ಸಂಪರ್ಕ ಮಾರ್ಗವಾಗಿದೆ ಎಂದು ವಿವರಿಸಿದರು.
ರಸ್ತೆಯಲ್ಲಿರುವ ಸೇತುವೆ ಕೆಳಮಟ್ಟದಲ್ಲಿರುವುದರಿಂದ ಮಳೆಗಾಲದಲ್ಲಿ ಅಪಾರ ಪ್ರಮಾಣದ ನೀರು ಹರಿದು ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಹಿಂದೆ ಭಾರಿ ಮಳೆಯ ಸಂದರ್ಭದಲ್ಲಿ ಬಸ್‌ವೊಂದು ನೀರಿನಲ್ಲಿ ತೇಲಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರಯಾಣಿಕರನ್ನು ಅಪಾಯದಿಂದ ರಕ್ಷಿಸಲಾಗಿತ್ತು ಎಂದು ನೆನಪಿಸಿದರು.
ಹೀಗಾಗಿ ರಸ್ತೆ ಅಭಿವೃದ್ಧಿಯ ಜೊತೆಗೆ ಹೊಸ ಸೇತುವೆ ನಿರ್ಮಾಣ ಕೂಡ ಅತ್ಯಗತ್ಯವಾಗಿದ್ದು, ಸರ್ಕಾರ ತಕ್ಷಣ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಲೋಕೋಪಯೋಗಿ ಸಚಿವ ಸತೀಶ ಜಾರಕೀಹೊಳಿ, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಹೇಳಿದರು.
ರಾಜ್ಯಾದ್ಯಂತ ರಸ್ತೆ ಅಭಿವೃದ್ಧಿಗೆ ಸಾಕಷ್ಟು ಬೇಡಿಕೆಗಳಿದ್ದು, ಇಲಾಖೆಯ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು. ಶಿರಹಟ್ಟಿ ಕ್ಷೇತ್ರದ ದೊಡ್ಡೂರು ರಸ್ತೆ ಅಭಿವೃದ್ಧಿ ಕುರಿತ ಮನವಿಯನ್ನು ಸಹ ಸಕಾರಾತ್ಮಕವಾಗಿ ಪರಿಗಣಿಸಿ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.
“ರೈತರು ಮತ್ತು ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕಾಗಿ ಲಕ್ಷ್ಮೇಶ್ವರ-ದೊಡ್ಡೂರು ರಸ್ತೆ ಹಾಗೂ ಸೇತುವೆ ಅಭಿವೃದ್ಧಿಗೆ ಆದ್ಯತೆ ನೀಡಬೇಕು.” 
ಡಾ. ಚಂದ್ರು ಲಮಾಣಿ, ಶಾಸಕ

ಎಫ್‌ಐಡಿ ಇಲ್ಲದೆ ಗೊಬ್ಬರ ಇಲ್ಲ!

ವಿಜಯಸಾಕ್ಷಿ ಸುದ್ದಿ, ರೋಣ: ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ವಿತರಣೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿರುವ ಕೃಷಿ ಇಲಾಖೆ, ಇನ್ನುಮುಂದೆ ಎಫ್‌ಐಡಿ ಕಡ್ಡಾಯಗೊಳಿಸಿದೆ. ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಉಪನಿರ್ದೇಶಕ ಬಿ.ಆರ್. ಪಾಲಾಕ್ಷಗೌಡ ಎಚ್ಚರಿಕೆ ನೀಡಿದರು.
ತಾಪಂ ಸಭಾಭವನದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳು ಹಾಗೂ ರಸಗೊಬ್ಬರ ಮಾರಾಟಗಾರರ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಸಗೊಬ್ಬರ ಕೊರತೆ ಉಂಟಾಗಿರುವ ಹಿನ್ನೆಲೆ ರೈತರು ಗೊಬ್ಬರವನ್ನು ಮಿತವಾಗಿ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.
ಮುಖ್ಯವಾಗಿ ಈ ಬಾರಿ ರೈತರು ರಸಗೊಬ್ಬರ ಪಡೆಯಬೇಕಾದರೆ ಎಫ್‌ಐಡಿ ಕಡ್ಡಾಯವಾಗಿದ್ದು, ಇಲ್ಲದಿದ್ದರೆ ಗೊಬ್ಬರ ವಿತರಣೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ರೈತರು ಬಿತ್ತನೆ ಮಾಡಿದ ಕ್ಷೇತ್ರದ ಆಧಾರದ ಮೇಲೆ ಕೆ-ಕಿಸಾನ್ ತಂತ್ರಜ್ಞಾನದ ಮೂಲಕ ರಸಗೊಬ್ಬರ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.
ರಸಗೊಬ್ಬರ ಮಾರಾಟಗಾರರು ತಮ್ಮ ಓ-ಫಾರಂಗಳ ಮೂಲಕ ನೋಂದಣಿ ಮಾಡಿಸಿಕೊಂಡು ಸರ್ಕಾರ ನಿಗದಿಪಡಿಸಿದ ದರದಲ್ಲೇ ಗೊಬ್ಬರ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿದರೆ ದಂಡ ವಿಧಿಸುವುದರ ಜೊತೆಗೆ ಅಂಗಡಿ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಗೊಬ್ಬರ ವಿತರಣೆಯ ವೇಳೆ ಗದ್ದಲ ಅಥವಾ ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.
ಸಹಾಯಕ ನಿರ್ದೇಶಕ ಎಸ್.ಎಫ್. ತಹಸೀಲ್ದಾರ್ ಮಾತನಾಡಿ, ರೈತರು ಅಗತ್ಯಕ್ಕೆ ತಕ್ಕಷ್ಟು ಮಾತ್ರ ರಸಗೊಬ್ಬರ ಖರೀದಿಸಿ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ರೋಣ ಹಾಗೂ ಗಜೇಂದ್ರಗಡ ತಾಲೂಕಿನ ರೈತರು ಈ ಬಾರಿ ಗೊಬ್ಬರ ಬಳಕೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಬೇಕು. ಗೊಬ್ಬರದ ದಾಸ್ತಾನು ಹಾಗೂ ಬೆಲೆಪಟ್ಟಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಅಂಗಡಿಗಳಲ್ಲಿ ಪ್ರದರ್ಶಿಸಬೇಕು ಎಂದು ಸೂಚಿಸಿದರು.
ರೈತರು ಗೊಬ್ಬರ ಖರೀದಿಸುವ ಮೊದಲು ಬೆಲೆ ಖಚಿತಪಡಿಸಿಕೊಳ್ಳಬೇಕು. ರಾಸಾಯನಿಕ ಗೊಬ್ಬರಗಳ ಬಳಕೆಯ ಜೊತೆಗೆ ನ್ಯಾನೋ ಯೂರಿಯಾ ಹಾಗೂ ಕಾಂಪ್ಲೆಕ್ಸ್ ಗೊಬ್ಬರ ಬಳಕೆಯತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಹೆಚ್ಚಿನ ಮಾಹಿತಿಗಾಗಿ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬೇಕು ಎಂದರು.
ಸಭೆಯಲ್ಲಿ ತಾಂತ್ರಿಕ ಅಧಿಕಾರಿ ಗೋಣಿಬಸಪ್ಪ, ಎ.ಎ. ಶಾಬಾದಿ, ಕೃಷಿ ಅಧಿಕಾರಿ ಕೃಷ್ಣಾ ಶಿರೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕೃಷಿ ಪರಿಕರ ಮಾರಾಟಗಾರರು ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿಗೆ ಕೆ-ಕಿಸಾನ್ ತಂತ್ರಜ್ಞಾನದ ಮೂಲಕ ಯೂರಿಯಾ ಗೊಬ್ಬರ ವಿತರಣೆ ಕುರಿತು ಆನ್‌ಲೈನ್ ತರಬೇತಿ ನೀಡಲಾಯಿತು.
 “ರಸಗೊಬ್ಬರ ಕೊರತೆಯ ಆತಂಕ ಇರುವುದರಿಂದ ರೈತರು ಮಿತ ಬಳಕೆಯತ್ತ ಗಮನ ಹರಿಸಬೇಕು.”
ಎಸ್.ಎಫ್. ತಹಸೀಲ್ದಾರ್, ಸಹಾಯಕ ನಿರ್ದೇಶಕರು

ರೈತನ ಕಣ್ಣೀರಿಗೆ ಸರ್ಕಾರ ಸ್ಪಂದಿಸಲಿ

ವಿಜಯಸಾಕ್ಷಿ ಸುದ್ದಿ, ಗದಗ: ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ, ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಶಂಕರಗೌಡ ಜಾಯನಗೌಡರ ನೇತೃತ್ವದಲ್ಲಿ ಮನವಿ ಸಲ್ಲಿಸಿದ ರೈತ ಮುಖಂಡರು, ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಸಂಘದ ಮುಖಂಡರು ಮಾತನಾಡಿ, ಎಫ್‌ಐಡಿ ಮೂಲಕ ನಡೆಯುತ್ತಿರುವ ರಸಗೊಬ್ಬರ ವಿತರಣೆಯಿಂದ ರೈತರಿಗೆ ತೊಂದರೆಯಾಗುತ್ತಿದೆ. ಈ ಪದ್ಧತಿಯನ್ನು ರದ್ದುಪಡಿಸಿ, ರೈತರಿಗೆ ಯಾವುದೇ ಮಧ್ಯವರ್ತಿತನವಿಲ್ಲದೆ ಸಂಪೂರ್ಣ ಪ್ರಮಾಣದ ರಸಗೊಬ್ಬರವನ್ನು ನೇರವಾಗಿ ಪೂರೈಸಬೇಕು ಎಂದು ಆಗ್ರಹಿಸಿದರು.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವ ಖರೀದಿ ಕೇಂದ್ರಗಳನ್ನು ವರ್ಷಪೂರ್ತಿ ತೆರೆಯಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೈತರ ಅನುಕೂಲಕ್ಕಾಗಿ ಸುಸಜ್ಜಿತ ಗೋದಾಮುಗಳನ್ನು ನಿರ್ಮಿಸಬೇಕು ಎಂದು ಮನವಿ ಮಾಡಿದರು.
ದೇಸಿ ಹಸು ಸಾಕಾಣಿಕೆ ಉತ್ತೇಜಿಸಲು ಸರ್ಕಾರ ವಿಶೇಷ ಪ್ರೋತ್ಸಾಹಧನ ಘೋಷಿಸಬೇಕು. ರೈತರ ಬೆಳೆಗಳನ್ನು ನಾಶಪಡಿಸುತ್ತಿರುವ ಮಂಗಗಳು ಹಾಗೂ ಇತರೆ ಕಾಡುಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಅವುಗಳನ್ನು ಸುರಕ್ಷಿತ ಅರಣ್ಯ ಪ್ರದೇಶಗಳಿಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.
ಫಸಲು ಭೀಮಾ ಯೋಜನೆಯಡಿ ಸ್ಯಾಟಲೈಟ್ ಹಾಗೂ ಬಯೋಮೆಟ್ರಿಕ್ ಸರ್ವೇ ಮೂಲಕ ವೈಜ್ಞಾನಿಕ ರೀತಿಯಲ್ಲಿ ಬೆಳೆಹಾನಿ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ತಕ್ಷಣ ಬೆಳೆ ವಿಮೆ ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಮಾರುಕಟ್ಟೆಯಲ್ಲಿ ಕಳಪೆ ಬೀಜಗಳ ಮಾರಾಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡು ರೈತರಿಗೆ ಉತ್ತಮ ಗುಣಮಟ್ಟದ ಬೀಜಗಳನ್ನು ಪೂರೈಸಬೇಕು ಎಂದು ಹೇಳಿದರು.
“ನಮ್ಮ ಹೊಲ-ನಮ್ಮ ದಾರಿ” ಯೋಜನೆಯಡಿ ಪ್ರತಿ ರೈತನ ಜಮೀನಿಗೆ ಸಂಪರ್ಕ ರಸ್ತೆ ನಿರ್ಮಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟರು.
ರಾತ್ರಿ ವೇಳೆ ನಡೆಯುವ ಹರಾಜು ಪ್ರಕ್ರಿಯೆಯಿಂದ ರೈತರ ಕಾಯಿಪಲ್ಲೆ ಮತ್ತು ಹಸಿ ಮಾಲುಗಳಿಗೆ ಹಂದಿ ಹಾಗೂ ಧನಕರುಗಳಿಂದ ಹಾನಿಯಾಗುತ್ತಿದೆ. ಆದ್ದರಿಂದ ಬೆಳಗಿನ ಜಾವ 6ರಿಂದ 9 ಗಂಟೆಯವರೆಗೆ ಹರಾಜು ಪ್ರಕ್ರಿಯೆ ನಡೆಸುವಂತೆ ಒತ್ತಾಯಿಸಿದರು.
ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಮೇ 25ರಂದು ಗದಗ ಕೃಷಿ ಮಾರುಕಟ್ಟೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಹಾದೇವ ವೆರ್ಣೇಕರ, ಆದರ್ಶ ಹುಲಗೂರು, ಗೂಳಪ್ಪ ಗುಡದೂರ, ಗಿರೀಶ್ ಹೊಸಮನಿ, ಅಂದಪ್ಪ ಅಂಗಡಿ, ರಾಮಣ್ಣ ಕಮ್ಮಾರ, ಶಂಕರಗೌಡ ಪಾಟೀಲ, ಶಿವಮೂರ್ತಿ ದೊಡ್ಡವಾಡ, ರಾಮನಗೌಡ ಪಾಟೀಲ, ಪ್ರವೀಣ ಕರ್ಣೆ, ಪ್ರಕಾಶ ಹಡಗಲಿ, ರವಿ ವಗ್ಗಣ್ಣವರ, ಬಸವರಾಜ ಮರಾಠಿ, ಸಂತೋಷ ಮಠದ, ಮಲ್ಲಪ್ಪ ಮಠದ ಸೇರಿದಂತೆ ಸಂಘಟನೆಯ ಅನೇಕ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.
“ರೈತನಿಗೆ ನ್ಯಾಯ ಸಿಗದಿದ್ದರೆ ಕೃಷಿಯೇ ಸಂಕಷ್ಟಕ್ಕೆ ಸಿಲುಕುತ್ತದೆ. ಸರ್ಕಾರ ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು.”
ಶಂಕರಗೌಡ ಜಾಯನಗೌಡರ
ಜಿಲ್ಲಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
error: Content is protected !!