Home Blog

ಮದುವೆ ಬಳಿಕ ಗೋವಾ ತಂಡ ತೊರೆಯುವ ವದಂತಿಗೆ ತೆರೆ ಎಳೆದ ಅರ್ಜುನ್ ತೆಂಡೂಲ್ಕರ್!

0

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಇತ್ತೀಚೆಗೆ ತಮ್ಮ ಬಹುಕಾಲದ ಗೆಳತಿ ಸಾನಿಯಾ ಚಂದೋಕ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅದ್ಧೂರಿಯಾಗಿ ನಡೆದ ವಿವಾಹ ಸಮಾರಂಭದಲ್ಲಿ ಹಲವು ಗಣ್ಯರು ಹಾಗೂ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಇದೀಗ ಮದುವೆ ಹಾಗೂ ಐಪಿಎಲ್ ಬಳಿಕ ಅರ್ಜುನ್ ತೆಂಡೂಲ್ಕರ್ ತಮ್ಮ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅರ್ಜುನ್ ತೆಂಡೂಲ್ಕರ್ ಅವರ ದೇಶಿ ಕ್ರಿಕೆಟ್ ಭವಿಷ್ಯದ ಕುರಿತು ಹಲವು ಊಹಾಪೋಹಗಳು ಕೇಳಿಬಂದಿದ್ದವು. ಐಪಿಎಲ್ ಬಳಿಕ ವಿಶ್ರಾಂತಿಗೆ ತೆರಳಿದ್ದ ಅರ್ಜುನ್, ಪತ್ನಿ ಸಾನಿಯಾ ಚಂದೋಕ್ ಅವರೊಂದಿಗೆ ಪ್ರವಾಸದಲ್ಲಿದ್ದರು. ಇದೇ ವೇಳೆ ಗೋವಾ ತಂಡದ ಓಮನ್ ಪ್ರವಾಸಕ್ಕೂ ಅವರು ಗೈರಾಗಿದ್ದರು.

ಇದಕ್ಕೂ ಮುನ್ನ ಕೆಲವು ದೇಶಿ ಟೂರ್ನಿಗಳಿಂದಲೂ ಅರ್ಜುನ್ ದೂರ ಉಳಿದಿದ್ದರಿಂದ, ಅವರು ಗೋವಾ ತಂಡವನ್ನು ತೊರೆಯಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಇದೀಗ ಈ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಮುಂಬರುವ ದೇಶಿ ಕ್ರಿಕೆಟ್ ಋತುವಿನಲ್ಲಿ ಗೋವಾ ತಂಡದ ಪರವೇ ಮುಂದುವರಿಯಲು ಅರ್ಜುನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ ಎಂದು ಮಾಹಿತಿ ಹೊರಬಿದ್ದಿದೆ. ಇದಕ್ಕಾಗಿ ಈಗಾಗಲೇ ಅವರು ಅಭ್ಯಾಸವನ್ನೂ ಆರಂಭಿಸಿದ್ದಾರೆ.

ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ತಮ್ಮ ಕೌಶಲ್ಯವನ್ನು ಮತ್ತಷ್ಟು ಸುಧಾರಿಸಿಕೊಳ್ಳಲು ಅರ್ಜುನ್ ಗಮನ ಹರಿಸುತ್ತಿದ್ದಾರೆ. ಗೋವಾ ತಂಡದ ಪ್ರಮುಖ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿರುವ ಅವರು ಮುಂಬರುವ ದೇಶಿ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದ್ದಾರೆ.

ಮುಂಬೈ ತೊರೆದು ಗೋವಾ ಸೇರಿದ್ದ ಅರ್ಜುನ್

ಅರ್ಜುನ್ ತೆಂಡೂಲ್ಕರ್ ಆರಂಭದಲ್ಲಿ ಮುಂಬೈ ತಂಡದ ಪರ ದೇಶಿ ಕ್ರಿಕೆಟ್ ಆಡುತ್ತಿದ್ದರು. ಆದರೆ ತಂಡದಲ್ಲಿ ನಿರಂತರವಾಗಿ ಅವಕಾಶ ಪಡೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕೆಲವು ವರ್ಷಗಳ ಬಳಿಕ ಮುಂಬೈ ತಂಡವನ್ನು ತೊರೆಯುವ ನಿರ್ಧಾರ ಕೈಗೊಂಡಿದ್ದರು.

ಬಳಿಕ ಗೋವಾ ತಂಡಕ್ಕೆ ಸೇರ್ಪಡೆಯಾದ ಅರ್ಜುನ್, ಹೊಸ ತಂಡದ ಪರ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದರು. ಗೋವಾ ಪರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಶತಕ ಕೂಡ ಸಿಡಿಸಿರುವ ಅವರು, ಇದುವರೆಗೆ 50 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಬೌಲಿಂಗ್ ಜೊತೆಗೆ ಬ್ಯಾಟಿಂಗ್‌ನಲ್ಲೂ ಕೊಡುಗೆ ನೀಡಬಲ್ಲ ಆಲ್‌ರೌಂಡರ್ ಆಗಿ ಅರ್ಜುನ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುವ ಪ್ರಯತ್ನದಲ್ಲಿದ್ದಾರೆ.ಐಪಿಎಲ್‌ನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ಪರ ಆಡುತ್ತಿರುವ ಅರ್ಜುನ್ ತೆಂಡೂಲ್ಕರ್, ಮುಂದಿನ ಆವೃತ್ತಿಯಲ್ಲಿ ತಮ್ಮ ಪ್ರದರ್ಶನದ ಮೂಲಕ ಆಯ್ಕೆ ಸಮಿತಿಯ ಗಮನ ಸೆಳೆಯುವ ಗುರಿ ಹೊಂದಿದ್ದಾರೆ.

ದೇಶಿ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ, ಐಪಿಎಲ್‌ನಲ್ಲೂ ತಮ್ಮ ಸಾಮರ್ಥ್ಯ ಸಾಬೀತುಪಡಿಸುವುದು ಅರ್ಜುನ್ ಅವರ ಮುಂದಿನ ಗುರಿಯಾಗಿದೆ. ಹೀಗಾಗಿ ಮದುವೆ ಬಳಿಕ ವೈಯಕ್ತಿಕ ಜೀವನದ ಜೊತೆಗೆ ಕ್ರಿಕೆಟ್ ವೃತ್ತಿಜೀವನಕ್ಕೂ ಹೆಚ್ಚಿನ ಆದ್ಯತೆ ನೀಡಲು ಅರ್ಜುನ್ ಮುಂದಾಗಿದ್ದಾರೆ.

ಗೋವಾ ತಂಡವನ್ನು ತೊರೆಯಲಿದ್ದಾರೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಅರ್ಜುನ್, ಇದೀಗ ಹೊಸ ದೇಶಿ ಋತುವಿಗಾಗಿ ಸಜ್ಜಾಗುತ್ತಿದ್ದಾರೆ. ಅವರ ಮುಂದಿನ ಪ್ರದರ್ಶನದ ಮೇಲೆ ಕ್ರಿಕೆಟ್ ಅಭಿಮಾನಿಗಳು ಹಾಗೂ ಆಯ್ಕೆ ಸಮಿತಿಯ ಕಣ್ಣು ನೆಟ್ಟಿದೆ.

ಉರುಳಿಗೆ ಸಿಲುಕಿ ಸತ್ತ ಚಿರತೆ ಸುಟ್ಟು ಹಾಕಿದ ಆರೋಪ; ತುಮಕೂರಿನಲ್ಲಿ ಮೂವರು ಬಂಧನ!

0

ತುಮಕೂರು: ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡದೆ ಗ್ರಾಮಸ್ಥರೇ ಸುಟ್ಟು ಹಾಕಿದ ಘಟನೆ ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ಆಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಗೌರಗೊಂಡನಹಳ್ಳಿಯ ಜಿ.ಡಿ. ಶಿವಕುಮಾರ್, ನಾರಾಯಣಪ್ಪ ಹಾಗೂ ಚಂದ್ರಶೇಖರ್ ಎಂದು ಗುರುತಿಸಲಾಗಿದೆ.

ಕಾಡುಪ್ರಾಣಿಗಳ ಹಾವಳಿ ತಪ್ಪಿಸುವ ಉದ್ದೇಶದಿಂದ ನಾರಾಯಣಪ್ಪ ಅವರ ಜಮೀನಿನಲ್ಲಿ ಉರುಳು ಹಾಕಲಾಗಿತ್ತು ಎನ್ನಲಾಗಿದೆ. ಇತ್ತೀಚೆಗೆ ಈ ಉರುಳಿಗೆ ಚಿರತೆ ಸಿಲುಕಿ ಸಾವನ್ನಪ್ಪಿತ್ತು. ಚಿರತೆ ಸಾವನ್ನಪ್ಪಿರುವ ವಿಚಾರವನ್ನು ಅರಣ್ಯಾಧಿಕಾರಿಗಳಿಗೆ ತಿಳಿಸುವ ಬದಲು ಗ್ರಾಮಸ್ಥರು ಅದನ್ನು ಸ್ಥಳದಲ್ಲೇ ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಚಿರತೆ ಸುಡುವ ಸಂದರ್ಭದಲ್ಲಿ ಗ್ರಾಮದ ಕೆಲ ಯುವಕರು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ವಿಡಿಯೋ ವೈರಲ್ ಆದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಘಟನೆ ಬಂದಿದೆ.

ವಿಡಿಯೋ ಆಧರಿಸಿ ತನಿಖೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

ವಿಜಯಪುರದಲ್ಲಿ ಮನಕಲಕುವ ಘಟನೆ: ಬಾವಿಗೆ ಬಿದ್ದ ಇಬ್ಬರು ಮಕ್ಕಳು, ರಕ್ಷಿಸಲು ಹೋದ ತಂದೆಯೂ ನಾಪತ್ತೆ

0

ವಿಜಯಪುರ: ತೆರೆದ ಬಾವಿಗೆ ಕಾಲು ಜಾರಿ ಇಬ್ಬರು ಮಕ್ಕಳು ಬಿದ್ದಿದ್ದು, ಅವರನ್ನು ರಕ್ಷಿಸಲು ಬಾವಿಗೆ ಹಾರಿದ ತಂದೆಯೂ ನಾಪತ್ತೆಯಾಗಿರುವ ದುರ್ಘಟನೆ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ನಡೆದಿದೆ.

ಬಳಬಟ್ಟಿ ಗ್ರಾಮದ ತೋಟದ ಮನೆಯೊಂದರ ಬಳಿ ಈ ಘಟನೆ ನಡೆದಿದೆ. ತೋಟದ ಮನೆಯ ಸಮೀಪದಲ್ಲಿದ್ದ ತೆರೆದ ಬಾವಿಯ ಬಳಿ ತೆರಳಿದ್ದ ವೇಳೆ ಇಬ್ಬರು ಹೆಣ್ಣು ಮಕ್ಕಳು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಬಾವಿಗೆ ಬಿದ್ದ ಮಕ್ಕಳನ್ನು ಸಾಕ್ಷಿ (15) ಮತ್ತು ರಕ್ಷಿತಾ (10) ಎಂದು ಗುರುತಿಸಲಾಗಿದೆ. ಸಾಕ್ಷಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಮಕ್ಕಳು ಬಾವಿಗೆ ಬಿದ್ದಿರುವುದನ್ನು ಗಮನಿಸಿದ ಅವರ ತಂದೆ ಸಾಬಣ್ಣ (40) ಕೂಡಲೇ ಅವರನ್ನು ರಕ್ಷಿಸಲು ಬಾವಿಗೆ ಜಿಗಿದಿದ್ದಾರೆ. ಆದರೆ ಸಾಬಣ್ಣ ಅವರಿಗೆ ಈಜು ಬಾರದ ಹಿನ್ನೆಲೆಯಲ್ಲಿ ಅವರೂ ನೀರಿನಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ನಿಡಗುಂದಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳಿಬ್ಬರು ಹಾಗೂ ತಂದೆ ಸಾಬಣ್ಣ ಅವರಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.

ಗ್ರಾಮಸ್ಥರು ಕೂಡ ರಕ್ಷಣಾ ಕಾರ್ಯದಲ್ಲಿ ಕೈಜೋಡಿಸಿದ್ದು, ತೆಪ್ಪದ ಮೂಲಕ ಬಾವಿಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಮೂವರ ಪತ್ತೆಗಾಗಿ ನಿರಂತರ ಶೋಧ ಕಾರ್ಯ ಮುಂದುವರಿದಿದೆ.

ಘಟನೆಯಿಂದ ಬಳಬಟ್ಟಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪೊಲೀಸ್ ಠಾಣೆಗಳ ಸಿಸಿಟಿವಿ 24 ಗಂಟೆಯೂ ಆನ್ ಇರಬೇಕು: ಹೈಕೋರ್ಟ್ ಖಡಕ್ ಆದೇಶ

0

ಬೆಂಗಳೂರು: ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಒಂದು ನಿಮಿಷವೂ ಸಿಸಿಟಿವಿ ಆಫ್ ಆಗದಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಖಡಕ್ ನಿರ್ದೇಶನ ನೀಡಿದೆ.

ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಕಿರುಕುಳ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಈ ಮಹತ್ವದ ನಿರ್ದೇಶನ ನೀಡಿದೆ. ಪ್ರಕರಣದ ತನಿಖೆ ವೇಳೆ ಕಳೆದ 11 ತಿಂಗಳಿನಿಂದ ಠಾಣೆಯ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಸಿಸಿಟಿವಿ ಕಾರ್ಯನಿರ್ವಹಿಸದಿರುವುದಕ್ಕೆ ಠಾಣೆಯಲ್ಲಿ ಯುಪಿಎಸ್ ಸಮಸ್ಯೆ ಇತ್ತು ಎಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಪೊಲೀಸರ ಈ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಇಂತಹ ಉತ್ತರಗಳು ಪೊಲೀಸ್ ಇಲಾಖೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ತರುತ್ತವೆ ಎಂದು ಅಭಿಪ್ರಾಯಪಟ್ಟಿದೆ.

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಅವು ನಿರಂತರವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ಕಡ್ಡಾಯವಾಗಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ರಾಜ್ಯ ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ಡಿಜಿ-ಐಜಿಪಿ ಕಚೇರಿಯಿಂದಲೇ ಲೈವ್ ಮಾನಿಟರಿಂಗ್:

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರಿಯಲ್‌ಟೈಮ್‌ನಲ್ಲಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಡಿಜಿ-ಐಜಿಪಿ ಕಚೇರಿಯಿಂದಲೇ ಲೈವ್ ಮಾನಿಟರ್ ಮಾಡುವ ವ್ಯವಸ್ಥೆ ರೂಪಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಸಿಸಿಟಿವಿ ಕ್ಯಾಮೆರಾಗಳು ಸ್ಥಗಿತಗೊಂಡರೆ ಅಥವಾ ತಾಂತ್ರಿಕ ಸಮಸ್ಯೆ ಎದುರಾದರೆ ತಕ್ಷಣವೇ ಅದನ್ನು ಸರಿಪಡಿಸುವ ವ್ಯವಸ್ಥೆ ಇರಬೇಕು. ಪೊಲೀಸ್ ಠಾಣೆಗಳಲ್ಲಿನ ವಿಚಾರಣೆ ಹಾಗೂ ಇತರ ಚಟುವಟಿಕೆಗಳ ಮೇಲೆ ನಿಗಾ ಇಡುವ ದೃಷ್ಟಿಯಿಂದ ಸಿಸಿಟಿವಿ ವ್ಯವಸ್ಥೆ ನಿರಂತರವಾಗಿ ಕಾರ್ಯನಿರ್ವಹಿಸುವುದು ಅತ್ಯಂತ ಅಗತ್ಯ ಎಂದು ನ್ಯಾಯಾಲಯದ ನಿರ್ದೇಶನಗಳು ಸ್ಪಷ್ಟಪಡಿಸಿವೆ.

ವೈಟ್‌ಫೀಲ್ಡ್ ಠಾಣೆ ವಿರುದ್ಧ ಮಹಿಳೆಯ ದೂರು:

ವೈಟ್‌ಫೀಲ್ಡ್ ಪೊಲೀಸ್ ಠಾಣೆಯ ಸಿಬ್ಬಂದಿ ತಮ್ಮ ಮೇಲೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಶೈಲಜಾ ಎಂಬ ಮಹಿಳೆ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ತನಿಖೆ ವೇಳೆ ಠಾಣೆಯ ಸಿಸಿಟಿವಿ ಕಳೆದ 11 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಹಿತಿ ಪೊಲೀಸರಿಂದ ನ್ಯಾಯಾಲಯಕ್ಕೆ ತಿಳಿದುಬಂದಿತ್ತು.

ಈ ಹಿನ್ನೆಲೆಯಲ್ಲಿ ಸಿಸಿಟಿವಿ ವ್ಯವಸ್ಥೆಯ ನಿರ್ವಹಣೆ ಕುರಿತು ಪೊಲೀಸರ ಕಾರ್ಯವೈಖರಿಯನ್ನು ಪ್ರಶ್ನಿಸಿದ ಹೈಕೋರ್ಟ್, ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ವ್ಯವಸ್ಥೆ ಕೇವಲ ಅಳವಡಿಸಿರುವುದಷ್ಟೇ ಅಲ್ಲದೆ, ಅದು ಸದಾ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳುವುದು ಇಲಾಖೆಯ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದೆ.

₹2 ಲಕ್ಷ ಲಂಚ ಪಡೆಯುವಾಗ ಇಬ್ಬರು ಸರ್ವೇ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

0

ಚಿಕ್ಕಮಗಳೂರು: 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಸರ್ವೇ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಸರ್ವೇಯರ್‌ಗಳಾದ ದೊರೆರಾಜ್ ಹಾಗೂ ರಂಗನಾಥ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಅಧಿಕಾರಿಗಳು. ಕೃಷಿ ಜಮೀನಿನ ಸರ್ವೇ ನಡೆಸಿ ಸ್ಕೆಚ್‌ ತಯಾರಿಸಿಕೊಡಲು ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಇಂದಾವರ ಗ್ರಾಮದ ಧರಣೇಶ್ ಎಂಬವರು ತಮ್ಮ ಕೃಷಿ ಜಮೀನಿನ ಸರ್ವೇಗಾಗಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಈ ವೇಳೆ ಸರ್ವೇ ಹಾಗೂ ಸ್ಕೆಚ್‌ ತಯಾರಿಸಲು ₹10 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮುಂಗಡವಾಗಿ ₹2 ಲಕ್ಷ ನೀಡುವಂತೆ ಸೂಚಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಧರಣೇಶ್ ಅವರು ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಖಾಸಗಿ ಕಚೇರಿಯಲ್ಲಿ ₹2 ಲಕ್ಷ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳನ್ನು ಬಲೆಗೆ ಬೀಳಿಸಿದ್ದಾರೆ.

ಡಿವೈಎಸ್‌ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ: ಸಾವಿನ ಸುತ್ತ ಹಲವು ಅನುಮಾನ!

0

ಹಾಸನ: ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ 19 ವರ್ಷದ ಯುವತಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ಯುವತಿಯ ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದ್ದು, ಪೋಷಕರು ತನಿಖೆಗೆ ಒತ್ತಾಯಿಸಿದ್ದಾರೆ.

ಮೃತ ಯುವತಿಯನ್ನು ಸಾಕಮ್ಮ–ಮಂಜಶೆಟ್ಟಿ ದಂಪತಿಯ ಪುತ್ರಿ ರಚಿತಾ (19) ಎಂದು ಗುರುತಿಸಲಾಗಿದೆ. ರಚಿತಾ ಪ್ರಥಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಆಗಸ್ಟ್ 21ರ ರಾತ್ರಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ.

ರಚಿತಾ ಸುಮಾರು ಒಂದೂವರೆ ವರ್ಷದಿಂದ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ನವೀನ್ ಚನ್ನರಾಯಪಟ್ಟಣ ಪಟ್ಟಣದ ರೇಣುಕಾಂಬ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಬೇಕರಿಯಲ್ಲಿ ರಚಿತಾ ತಾಯಿ ಸಾಕಮ್ಮ ಕೂಡ ಕೆಲಸ ಮಾಡುತ್ತಿದ್ದರು.

ರಚಿತಾ ಹಾಗೂ ನವೀನ್ ಪರಸ್ಪರ ಪ್ರೀತಿಸುತ್ತಿರುವ ವಿಚಾರವನ್ನು ಇಬ್ಬರೂ ಸಾಕಮ್ಮ ಅವರ ಬಳಿ ತಿಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಗಳ ವಿವಾಹವನ್ನು ನವೀನ್ ಜೊತೆ ಮಾಡಿಸುವುದಾಗಿ ಸಾಕಮ್ಮ ಭರವಸೆ ನೀಡಿದ್ದರು ಎಂದು ತಿಳಿದುಬಂದಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ನವೀನ್ ತನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ರಚಿತಾ ತಾಯಿ ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಮಗಳ ಸಾವಿನ ಬಗ್ಗೆ ಅನುಮಾನವಿದ್ದು, ಸಮಗ್ರ ತನಿಖೆ ನಡೆಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

ಘಟನೆ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಯುವತಿಯ ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

ಸಿನಿಮಾ ಹೆಸರಲ್ಲಿ 3.85 ಕೋಟಿ ಹಣ ಪಡೆದು ವಂಚಿಸಿದ್ರಾ ಖ್ಯಾತ ನಿರ್ದೇಶಕ!? ಓಂಪ್ರಕಾಶ್ ರಾವ್ ವಿರುಧ್ದ ದಾಖಲಾಯ್ತು ಕೇಸ್

0

ಬೆಂಗಳೂರು: ಖ್ಯಾತ ಕನ್ನಡ ಚಿತ್ರ ನಿರ್ದೇಶಕ ಹಾಗೂ ನಟ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ಹಣ ಪಡೆದು ವಾಪಸ್ ನೀಡದೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಓಂಪ್ರಕಾಶ್ ರಾವ್ ಹಾಗೂ ಅವರ ಪತ್ನಿ ಡೆನ್ನಿಸಾ ಪ್ರಕಾಶ್ ವಿರುದ್ಧ ಆರೋಪ ಮಾಡಲಾಗಿದೆ.

ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ ಎಂಬುವರು ದೂರು ನೀಡಿದ್ದು, ‘ಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಹಣ ಪಡೆದು ಬಳಿಕ ಹಣವನ್ನು ವಾಪಸ್ ನೀಡದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಹಣ ವಾಪಸ್ ಕೇಳಿದಾಗ ಕಿರುಕುಳ ನೀಡುವುದರ ಜೊತೆಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ದೂರಿನಲ್ಲಿ ಕೇಳಿಬಂದಿದೆ.

ದೂರುದಾರರ ಪ್ರಕಾರ, ‘ಫೀನಿಕ್ಸ್’ ಸಿನಿಮಾಕ್ಕಾಗಿ ಓಂಪ್ರಕಾಶ್ ರಾವ್ ಅವರು ವಿವಿಧ ವ್ಯಕ್ತಿಗಳಿಂದ ಹಣ ಪಡೆದಿದ್ದಾರೆ. ಸಿನಿಮಾ ನಿರ್ಮಾಣ ಹಾಗೂ ಇತರ ಕಾರಣಗಳಿಗಾಗಿ ನೀಡಿದ ಹಣವನ್ನು ನಿಗದಿತ ಅವಧಿಯಲ್ಲಿ ವಾಪಸ್ ನೀಡುವುದಾಗಿ ಭರವಸೆ ನೀಡಿದ್ದರೂ, ಹಲವು ವರ್ಷ ಕಳೆದರೂ ಹಣ ಪಾವತಿಸಿಲ್ಲ ಎಂದು ಆರೋಪಿಸಲಾಗಿದೆ.

10 ಲಕ್ಷ ನೀಡಿದ್ದ ಭಾಸ್ಕರ್ ಶೆಟ್ಟಿ:

ದೂರುದಾರ ಭಾಸ್ಕರ್ ಶೆಟ್ಟಿ ಮಾತನಾಡಿ, 2023ರಲ್ಲಿ ಓಂಪ್ರಕಾಶ್ ರಾವ್ ಅವರ ಪರಿಚಯವಾಗಿತ್ತು. ತಾವು ಹೀರೋ ಆಗಬೇಕು ಎಂಬ ಆಸೆ ಹೊಂದಿದ್ದ ಸಂದರ್ಭದಲ್ಲಿ ಓಂಪ್ರಕಾಶ್ ರಾವ್ ಅವರಿಗೆ ₹10 ಲಕ್ಷ ಹಣ ನೀಡಿದ್ದೆ ಎಂದು ಹೇಳಿದ್ದಾರೆ.

2023ರಲ್ಲಿ ನೀಡಿದ ₹10 ಲಕ್ಷ ಹಣಕ್ಕೆ ಬಡ್ಡಿ ಸೇರಿ ಇದೀಗ ಸುಮಾರು ₹20 ಲಕ್ಷ ಆಗಿದೆ. ಆದರೆ ಈವರೆಗೆ ಒಂದು ರೂಪಾಯಿ ಕೂಡ ವಾಪಸ್ ಬಂದಿಲ್ಲ. ತಾವು ಬೇರೆಯವರ ಬಳಿ ಸಾಲ ಮಾಡಿಕೊಂಡು ಹಣ ನೀಡಿದ್ದಾಗಿ ಅವರು ಹೇಳಿದ್ದಾರೆ.

3.30 ಕೋಟಿ ಹಣ ಪಡೆದಿದ್ದಾರೆ ಎಂಬ ಆರೋಪ:

ಇನ್ನು ಫೈನಾನ್ಸ್ ವ್ಯವಹಾರ ನಡೆಸುವ ವಾಸುದೇವರೆಡ್ಡಿ ಅವರಿಂದಲೂ ಸುಮಾರು ₹3.30 ಕೋಟಿ ಹಣ ಪಡೆದಿದ್ದಾರೆ ಎಂದು ಭಾಸ್ಕರ್ ಶೆಟ್ಟಿ ಆರೋಪಿಸಿದ್ದಾರೆ. ಒಟ್ಟಾರೆ ಸುಮಾರು ₹3.85 ಕೋಟಿ ಹಣವನ್ನು ವಿವಿಧ ವ್ಯಕ್ತಿಗಳಿಂದ ಪಡೆದಿದ್ದು, ಹಣ ವಾಪಸ್ ನೀಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ನಿರಂತರವಾಗಿ ಕಾಲಾವಕಾಶ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಆರು ತಿಂಗಳಲ್ಲಿ ಹಣ ನೀಡುವುದಾಗಿ ಹಲವು ಬಾರಿ ಹೇಳಿದ್ದರೂ ಹಣ ನೀಡದೆ ಸತಾಯಿಸುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಈ ಸಮಸ್ಯೆ ಮುಂದುವರಿದಿದೆ ಎಂದು ಅವರು ಆರೋಪಿಸಿದ್ದಾರೆ.

ಮಹಿಳೆಯರಿಂದಲೂ ಹಣ ಪಡೆದ ಆರೋಪ:

ಕೆಲ ಮಹಿಳೆಯರಿಂದಲೂ ಸುಮಾರು ₹25 ಲಕ್ಷ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಮಹಿಳೆಯರು ತಮ್ಮ ಆಸ್ತಿಯನ್ನು ಮಾರಿ ಹಣ ನೀಡಿದ್ದಾರೆ ಎಂದು ಭಾಸ್ಕರ್ ಶೆಟ್ಟಿ ಹೇಳಿದ್ದಾರೆ. ಸಿನಿಮಾ ನಿರ್ಮಾಣ ಹಾಗೂ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಹಣ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಫಿಲ್ಮ್ ಚೇಂಬರ್‌ಗೂ ದೂರು:

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್‌ನಲ್ಲೂ ದೂರು ನೀಡಲಾಗಿದೆ. ಸಿನಿಮಾ ಕ್ಷೇತ್ರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ದೂರುದಾರರು ಹೇಳಿದ್ದಾರೆ.

ಓಂಪ್ರಕಾಶ್ ರಾವ್ ಅವರು ಹಣ ಪಡೆದಿರುವುದಕ್ಕೆ ಸಂಬಂಧಿಸಿದಂತೆ ಅಗ್ರಿಮೆಂಟ್ ಹಾಗೂ ಚೆಕ್ ನೀಡಿದ್ದಾರೆ. ಹೀಗಾಗಿ ಹಣ ವಾಪಸ್ ನೀಡದಿದ್ದರೆ ವಂಚನೆ ಪ್ರಕರಣ ಅಥವಾ ಚೆಕ್ ಬೌನ್ಸ್ ಪ್ರಕರಣ ದಾಖಲಿಸುವುದಾಗಿ ಭಾಸ್ಕರ್ ಶೆಟ್ಟಿ ತಿಳಿಸಿದ್ದಾರೆ.

ಹಣ ಕೇಳಲು ಹೋದಾಗ ಬೆದರಿಕೆ ಆರೋಪ:

ಹಣ ವಾಪಸ್ ಕೇಳಲು ಓಂಪ್ರಕಾಶ್ ರಾವ್ ಅವರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ದೂರುದಾರರಿಗೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಓಂಪ್ರಕಾಶ್ ರಾವ್ ಹಾಗೂ ಅವರ ಪತ್ನಿ ಡೆನ್ನಿಸಾ ಪ್ರಕಾಶ್ ವಿರುದ್ಧವೂ ದೂರು ನೀಡಲಾಗಿದೆ.

‘ನಮ್ಮ ನಡುವೆ ಉತ್ತಮ ಒಡನಾಟವಿದ್ದ ಕಾರಣ ಇಷ್ಟು ದಿನ ಸುಮ್ಮನಿದ್ದೆವು. ಹಲವು ಬಾರಿ ಮಾತುಕತೆ ನಡೆಸಿ ಹಣ ನೀಡುವಂತೆ ಕೇಳಿದ್ದೇವೆ. ಹಣ ನೀಡುವುದಾಗಿ ಹೇಳುತ್ತಲೇ ಬಂದಿದ್ದಾರೆ. ಇದೀಗ ಕಾನೂನು ಮೊರೆ ಹೋಗುವ ಪರಿಸ್ಥಿತಿ ಬಂದಿದೆ’ ಎಂದು ಭಾಸ್ಕರ್ ಶೆಟ್ಟಿ ತಿಳಿಸಿದ್ದಾರೆ.

ಸದ್ಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಬೇಕಿದೆ. ಆರೋಪಗಳ ಕುರಿತು ಓಂಪ್ರಕಾಶ್ ರಾವ್ ಹಾಗೂ ಅವರ ಪತ್ನಿ ಡೆನ್ನಿಸಾ ಪ್ರಕಾಶ್ ಅವರ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ.

ತಿರುಮಲದಲ್ಲಿ AI ರೋಬೋಟ್ ನಾಯಿ ಕಾವಲು: ಭಕ್ತರ ಸುರಕ್ಷತೆಗೆ TTD ಹೊಸ ಪ್ಲ್ಯಾನ್!

0

ಅಮರಾವತಿ: ತಿರುಮಲದ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ಚಲನವಲನದ ಮೇಲೆ ನಿಗಾ ಇಡುವುದರ ಜೊತೆಗೆ ಭಕ್ತರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕೃತಕ ಬುದ್ಧಿಮತ್ತೆ (AI) ಆಧಾರಿತ ರೋಬೋಟಿಕ್ ನಾಯಿಗಳನ್ನು ಬಳಸಲು ತಿರುಮಲ ತಿರುಪತಿ ದೇವಸ್ಥಾನಂ (TTD) ಚಿಂತನೆ ನಡೆಸಿದೆ.

ದಟ್ಟ ಅರಣ್ಯ ಪ್ರದೇಶದಲ್ಲಿ ರೋಬೋಟಿಕ್ ನಾಯಿಗಳನ್ನು ನಿಯೋಜಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸುವ ನಿಟ್ಟಿನಲ್ಲಿ TTD ಹಿರಿಯ ಅಧಿಕಾರಿ ಚ. ವೆಂಕಯ್ಯ ಚೌಧರಿ ಸೇರಿದಂತೆ ಅಧಿಕಾರಿಗಳು ಇತ್ತೀಚೆಗೆ ಶ್ರೀ ಪದ್ಮಾವತಿ ಅತಿಥಿ ಗೃಹದಲ್ಲಿ ಚತುರ್ಭುಜ ರೋಬೋಟ್ ಅನ್ನು ಪರಿಶೀಲಿಸಿದರು.

ನಾಲ್ಕು ಕಾಲುಗಳನ್ನು ಹೊಂದಿರುವ ಈ ರೋಬೋಟಿಕ್ ನಾಯಿ ಅಪಾಯಕಾರಿ ಹಾಗೂ ಜನರಿಗೆ ತೊಂದರೆಯಾಗಬಹುದಾದ ಭೂಪ್ರದೇಶಗಳಲ್ಲೂ ಸಂಚರಿಸುವಂತೆ ವಿನ್ಯಾಸಗೊಳಿಸಲಾಗಿದೆ. ಸುಧಾರಿತ ಕಣ್ಗಾವಲು ಮತ್ತು ಮೇಲ್ವಿಚಾರಣಾ ತಂತ್ರಜ್ಞಾನವನ್ನು ಹೊಂದಿರುವ ರೋಬೋಟ್, 360 ಡಿಗ್ರಿ LiDAR, ಆಪ್ಟಿಕಲ್ ಹಾಗೂ ಥರ್ಮಲ್ ಕ್ಯಾಮೆರಾಗಳನ್ನು ಒಳಗೊಂಡಿದೆ.

ಸಂಪೂರ್ಣ ಕತ್ತಲೆ, ಮಂಜು ಸೇರಿದಂತೆ ವಿವಿಧ ಹವಾಮಾನ ಪರಿಸ್ಥಿತಿಗಳಲ್ಲೂ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ರೋಬೋಟ್ ಹೊಂದಿದೆ. ಇದರ AI ವ್ಯವಸ್ಥೆಯು ನೈಜ ಸಮಯದಲ್ಲಿ ವಸ್ತುಗಳನ್ನು ಗುರುತಿಸಿ, ಮಾನವರು, ಕಾಡುಪ್ರಾಣಿಗಳು, ಸಾಕುಪ್ರಾಣಿಗಳು ಹಾಗೂ ವಾಹನಗಳ ನಡುವಿನ ವ್ಯತ್ಯಾಸವನ್ನು ಪತ್ತೆಹಚ್ಚಬಲ್ಲದು.

ಅಲ್ಲದೆ, ರೋಬೋಟಿಕ್ ನಾಯಿ ತನ್ನ ಕ್ಯಾಮೆರಾಗಳ ಮೂಲಕ ದೃಶ್ಯಗಳನ್ನು ನೇರ ಪ್ರಸಾರ ಮಾಡಲಿದ್ದು, ಕೇಂದ್ರ ನಿಯಂತ್ರಣ ಕೊಠಡಿ ಹಾಗೂ ತುರ್ತು ಪ್ರತಿಕ್ರಿಯಾ ತಂಡಗಳಿಗೆ ಜಿಯೋ-ಟ್ಯಾಗ್ ಮಾಡಲಾದ ಎಚ್ಚರಿಕೆಗಳನ್ನು ಕಳುಹಿಸುವ ಸಾಮರ್ಥ್ಯ ಹೊಂದಿದೆ.

ವಿಶೇಷವಾಗಿ ಅಲಿಪಿರಿ–ತಿರುಮಲ ಚಾರಣ ಮಾರ್ಗ ಸೇರಿದಂತೆ ಭಕ್ತರು ಹೆಚ್ಚಾಗಿ ಸಂಚರಿಸುವ ಮಾರ್ಗಗಳ ಬಳಿ ಚಿರತೆಗಳು ಸೇರಿದಂತೆ ಕಾಡುಪ್ರಾಣಿಗಳ ಚಲನವಲನವನ್ನು ಪತ್ತೆಹಚ್ಚಲು ಈ ತಂತ್ರಜ್ಞಾನ ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಸಂಭಾವ್ಯ ಅಪಾಯ ಪತ್ತೆಯಾದ ತಕ್ಷಣ ರೋಬೋಟಿಕ್ ನಾಯಿ ಲೈವ್ ಥರ್ಮಲ್ ವೀಡಿಯೊವನ್ನು ರವಾನಿಸುವುದರ ಜೊತೆಗೆ ಸ್ಥಳದ ಜಿಯೋ-ಟ್ಯಾಗ್ ಮಾಹಿತಿಯನ್ನು ಅಧಿಕಾರಿಗಳಿಗೆ ಕಳುಹಿಸಲಿದೆ. ಇದರಿಂದ ಪರಿಸ್ಥಿತಿಯನ್ನು ತ್ವರಿತವಾಗಿ ಮೇಲ್ವಿಚಾರಣೆ ಮಾಡಿ, ಅಗತ್ಯವಿದ್ದಲ್ಲಿ ತುರ್ತು ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ.

ಪಶ್ಚಿಮ ಬಂಗಾಳದ ಆಧಾರ್‌… ಬಾಂಗ್ಲಾದೇಶದ ಅಸಲಿ ಮುಖ!

0

ವಿಜಯಸಾಕ್ಷಿ ಸುದ್ದಿ, ಗದಗ: ಪಶ್ಚಿಮ ಬಂಗಾಳದ ವಿಳಾಸ ಹೊಂದಿರುವ ಆಧಾರ್‌ ಕಾರ್ಡ್‌ ಇಟ್ಟುಕೊಂಡು ಕಟ್ಟಡ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ನಿವಾಸಿಗಳು ಪತ್ತೆಯಾಗಿರುವ ಪ್ರಕರಣ ಜಿಲ್ಲೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ದಾಖಲೆಗಳ ಪರಿಶೀಲನೆ ವೇಳೆ ಇಬ್ಬರೂ ಬಾಂಗ್ಲಾದೇಶದವರು ಎಂಬ ಮಾಹಿತಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಭಾರತಕ್ಕೆ ಇವರ ಪ್ರವೇಶ ಹೇಗಾಯಿತು? ಪಶ್ಚಿಮ ಬಂಗಾಳದ ವಿಳಾಸದ ಆಧಾರ್‌ ಕಾರ್ಡ್‌ ಇವರ ಕೈಗೆ ಹೇಗೆ ಬಂತು? ಗದಗಕ್ಕೆ ಇವರನ್ನು ಕರೆತಂದವರು ಯಾರು? ಎಂಬ ಪ್ರಶ್ನೆಗಳು ಇದೀಗ ಪೊಲೀಸರನ್ನು ಕಾಡುತ್ತಿವೆ.

ತಾಲೂಕಿನ ಹರ್ತಿ ಗ್ರಾಮದ ಹೊರವಲಯದಲ್ಲಿ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ನೂರಾರು ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೇ ಕಾಮಗಾರಿ ಸ್ಥಳದಲ್ಲಿ ಕಳೆದ ಎರಡು ತಿಂಗಳಿಂದ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ೨೬ ವರ್ಷದ ಸಕೀಬ್‌ ಸಹೀನ್‌ ಹಾಗೂ ೨೨ ವರ್ಷದ ದಿಲಾವರ್‌ ಹುಸೇನ್‌ ಎಂಬ ಇಬ್ಬರನ್ನು ಗದಗ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕೂಲಿ ಕಾರ್ಮಿಕರಾಗಿ ಬಂದು ಸಿಕ್ಕಿಬಿದ್ದವರು

ಪಶ್ಚಿಮ ಬಂಗಾಳದಿಂದ ಬಂದಿದ್ದ ಕೂಲಿ ಕಾರ್ಮಿಕರ ತಂಡದೊಂದಿಗೆ ಈ ಇಬ್ಬರು ಗದಗಕ್ಕೆ ಬಂದಿದ್ದರು ಎನ್ನಲಾಗಿದೆ. ಕಳೆದ ಎರಡು ತಿಂಗಳಿಂದ ಹರ್ತಿಯ ಕಾಮಗಾರಿ ಸ್ಥಳದಲ್ಲೇ ಕೆಲಸ ಮಾಡುತ್ತಿದ್ದರು. ಈ ವೇಳೆ ಇವರ ಬಳಿ ಪಶ್ಚಿಮ ಬಂಗಾಳದ ವಿಳಾಸ ಹೊಂದಿರುವ ಆಧಾರ್‌ ಕಾರ್ಡ್‌ಗಳು ಪತ್ತೆಯಾಗಿವೆ.

ಆದರೆ, ಪೊಲೀಸರಿಗೆ ಲಭ್ಯವಾದ ಮಾಹಿತಿಯ ಆಧಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿದಾಗ ಇಬ್ಬರೂ ಬಾಂಗ್ಲಾದೇಶದ ನಿವಾಸಿಗಳು ಎಂಬುದು ಬೆಳಕಿಗೆ ಬಂದಿದೆ. ಇವರ ಜನ್ಮಸ್ಥಳ ಬಾಂಗ್ಲಾದೇಶ ಎಂದು ದಾಖಲೆಗಳಲ್ಲಿ ನಮೂದಾಗಿರುವುದು ಪೊಲೀಸರ ಅನುಮಾನಕ್ಕೆ ಮತ್ತಷ್ಟು ಬಲ ನೀಡಿದೆ. ಹೀಗಾಗಿ ಇವರ ಬಳಿ ದೊರೆತ ದಾಖಲೆಗಳ ಸತ್ಯಾಸತ್ಯತೆ ಹಾಗೂ ಅವರು ಭಾರತದಲ್ಲಿ ನೆಲೆಸಿರುವ ಹಿನ್ನೆಲೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಧಾರ್‌ ಸಿಕ್ಕಿದ್ದೇಗೆ?

ಬಾಂಗ್ಲಾದೇಶದ ನಿವಾಸಿಗಳಾಗಿದ್ದರೆ ಪಶ್ಚಿಮ ಬಂಗಾಳದ ವಿಳಾಸ ಹೊಂದಿರುವ ಆಧಾರ್‌ ಕಾರ್ಡ್‌ ಇವರ ಕೈಗೆ ಹೇಗೆ ಬಂತು ಎಂಬುದು ತನಿಖೆಯ ಪ್ರಮುಖ ಪ್ರಶ್ನೆಯಾಗಿದೆ. ದಾಖಲೆಗಳು ನಕಲಿಯೇ? ಅಕ್ರಮವಾಗಿ ದಾಖಲೆಗಳಲ್ಲಿ ಬದಲಾವಣೆ ಮಾಡಲಾಗಿದೆಯೇ? ಅಥವಾ ಯಾರಾದರೂ ಇವರಿಗೆ ದಾಖಲೆಗಳನ್ನು ಸಿದ್ಧಪಡಿಸಿಕೊಟ್ಟಿದ್ದಾರೆಯೇ ಎಂಬ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

ಇಬ್ಬರೂ ಈ ಹಿಂದೆ ಬೆಂಗಳೂರು, ಮಂಗಳೂರು, ಗಂಗಾವತಿ ಸೇರಿದಂತೆ ರಾಜ್ಯದ ವಿವಿಧೆಡೆ ಕೂಲಿ ಕೆಲಸ ಮಾಡಿದ್ದರೆನ್ನಲಾಗಿದೆ. ಹೀಗಾಗಿ ಅವರು ಈ ಸ್ಥಳಗಳಲ್ಲಿ ಯಾವ ದಾಖಲೆಗಳ ಆಧಾರದಲ್ಲಿ ಕೆಲಸ ಮಾಡಿದರು, ಅವರನ್ನು ಒಂದೊಂದು ಊರಿಗೆ ಕರೆದುಕೊಂಡು ಹೋಗುತ್ತಿದ್ದವರು ಯಾರು, ಅವರೊಂದಿಗೆ ಇನ್ನೂ ಯಾರಾದರೂ ಸಂಪರ್ಕದಲ್ಲಿದ್ದಾರೆಯೇ ಎಂಬುದನ್ನು ಪೊಲೀಸರು ಜಾಲಾಡುತ್ತಿದ್ದಾರೆ.

ಗುತ್ತಿಗೆದಾರರಿಗೂ ಗೊತ್ತಿತ್ತಾ?

ಕಾಮಗಾರಿ ಸ್ಥಳದಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಕಾರ್ಮಿಕರ ದಾಖಲೆಗಳನ್ನು ಪರಿಶೀಲಿಸಲಾಗಿತ್ತೇ? ಗುತ್ತಿಗೆದಾರರಿಗೆ ಇವರ ಹಿನ್ನೆಲೆ ತಿಳಿದಿತ್ತೇ? ಪಶ್ಚಿಮ ಬಂಗಾಳದ ವಿಳಾಸದ ಆಧಾರ್‌ ಕಾರ್ಡ್‌ ಆಧರಿಸಿಯೇ ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗಿತ್ತೇ ಎಂಬ ಪ್ರಶ್ನೆಗಳಿಗೂ ಪೊಲೀಸರು ಉತ್ತರ ಹುಡುಕುತ್ತಿದ್ದಾರೆ.

ಇದು ಕೇವಲ ಇಬ್ಬರು ಅಕ್ರಮ ವಲಸಿಗರ ಪತ್ತೆ ಪ್ರಕರಣವೇ ಅಥವಾ ಇದರ ಹಿಂದೆ ದೊಡ್ಡ ಜಾಲವಿದೆಯೇ ಎಂಬ ಅನುಮಾನವೂ ಮೂಡಿದೆ. ಇಬ್ಬರು ರಾಜ್ಯದ ವಿವಿಧೆಡೆ ಕೆಲಸ ಮಾಡಿರುವ ಮಾಹಿತಿ ಹಿನ್ನೆಲೆಯಲ್ಲಿ, ಇವರ ಸಂಪರ್ಕದಲ್ಲಿದ್ದವರು ಹಾಗೂ ದಾಖಲೆಗಳ ಸೃಷ್ಟಿಗೆ ನೆರವಾದವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಇವರ ಹಿಂದೆ ಇನ್ನಾರಾದರೂ ಇದ್ದಾರೆಯೇ? ಅಕ್ರಮ ವಲಸಿಗರಿಗೆ ದಾಖಲೆಗಳನ್ನು ಸಿದ್ಧಪಡಿಸುವ ಜಾಲವಿದೆಯೇ? ಇನ್ನೂ ಹೆಚ್ಚಿನ ಮಂದಿ ಇದೇ ರೀತಿಯಲ್ಲಿ ರಾಜ್ಯದಲ್ಲಿ ನೆಲೆಸಿದ್ದಾರೆಯೇ ಎಂಬ ಪ್ರಶ್ನೆಗಳಿಗೆ ತನಿಖೆ ಮುಂದುವರಿದಂತೆ ಉತ್ತರ ಸಿಗಬೇಕಿದೆ.

ಭಾರತ ಪ್ರವೇಶದಿಂದ ದಾಖಲೆಗಳವರೆಗೆ ಜಾಡು

ಹರ್ತಿಯಲ್ಲಿ ಪತ್ತೆಯಾದ ಇಬ್ಬರು ಬಾಂಗ್ಲಾದೇಶದ ನಿವಾಸಿಗಳ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಭಾರತಕ್ಕೆ ಅವರು ಯಾವ ಮಾರ್ಗದಿಂದ ಪ್ರವೇಶಿಸಿದರು, ಗದಗಕ್ಕೆ ಕರೆತಂದವರು ಯಾರು, ಪಶ್ಚಿಮ ಬಂಗಾಳದ ವಿಳಾಸದ ಆಧಾರ್‌ ಕಾರ್ಡ್‌ ಹೇಗೆ ದೊರೆಯಿತು ಹಾಗೂ ರಾಜ್ಯದ ವಿವಿಧೆಡೆ ಅವರು ಹೇಗೆ ಕೆಲಸ ಮಾಡಿದರು ಎಂಬುದರ ಸುತ್ತ ತನಿಖೆಯ ಜಾಡು ಸಾಗುತ್ತಿದೆ.

“ಇಬ್ಬರ ಹಿನ್ನೆಲೆ, ಭಾರತಕ್ಕೆ ಪ್ರವೇಶಿಸಿದ ರೀತಿ, ಅವರ ಬಳಿ ದೊರೆತ ದಾಖಲೆಗಳು ಹಾಗೂ ಅವರು ಈ ಹಿಂದೆ ಕೆಲಸ ಮಾಡಿರುವ ಸ್ಥಳಗಳ ಕುರಿತು ತನಿಖೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ತಿಳಿದುಬರಲಿದೆ.”

ರೋಹನ್‌ ಜಗದೀಶ್‌, ಗದಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಶ್ರಾವಣದ ಸೊಬಗಿನಲ್ಲಿ ಕಂಗೊಳಿಸಿದ ವರಮಹಾಲಕ್ಷ್ಮೀ ಆರಾಧನೆ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಶ್ರಾವಣ ಮಾಸದ ಎರಡನೇ ಶುಕ್ರವಾರದ ಅಂಗವಾಗಿ ನರೇಗಲ್ಲ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವರಮಹಾಲಕ್ಷ್ಮೀ ಪೂಜೆ ಭಕ್ತಿಭಾವ ಹಾಗೂ ಸಂಭ್ರಮದಿಂದ ನೆರವೇರಿತು. ಮನೆಮನೆಗಳಲ್ಲಿ ಲಕ್ಷ್ಮೀ ದೇವಿಯ ಆರಾಧನೆ, ಹೂವಿನ ಅಲಂಕಾರ, ದೀಪಗಳ ಬೆಳಕು, ಮಂಗಳಗೀತೆ ಹಾಗೂ ಸಿಹಿ-ಸವಿಯೂಟದ ವಾತಾವರಣ ಕಳೆಗಟ್ಟಿತ್ತು.

ಕುಟುಂಬದ ಸುಖ-ಶಾಂತಿ, ಆರೋಗ್ಯ, ಆಯುಷ್ಯ, ಐಶ್ವರ್ಯ ಹಾಗೂ ಸಮೃದ್ಧಿಗಾಗಿ ಮಹಿಳೆಯರು ವರಮಹಾಲಕ್ಷ್ಮೀ ವ್ರತ ಆಚರಿಸಿದರು. ಪೂಜೆಗೆ ಮುನ್ನವೇ ಹೂವು, ಹಣ್ಣು, ತೆಂಗಿನಕಾಯಿ, ಬಾಳೆದಿಂಡು, ಮಾವಿನ ತೋರಣ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡಿದ್ದರು.

ಶುಕ್ರವಾರ ಬೆಳಗ್ಗೆಯೇ ಮನೆಗಳನ್ನು ಸ್ವಚ್ಛಗೊಳಿಸಿ, ಬಾಗಿಲಿಗೆ ಮಾವಿನ ತೋರಣ ಹಾಗೂ ಬಾಳೆಕಂಬಗಳನ್ನು ಕಟ್ಟಿ, ರಂಗೋಲಿ ಬಿಡಿಸಿ ಹಬ್ಬದ ವಾತಾವರಣ ನಿರ್ಮಿಸಿದರು. ಕಳಶ ಪ್ರತಿಷ್ಠಾಪಿಸಿ ಅರಿಶಿಣ, ಕುಂಕುಮ ಹಾಗೂ ಹೂವುಗಳಿಂದ ಅಲಂಕರಿಸಿ, ಲಕ್ಷ್ಮೀ ದೇವಿಯ ಮೂರ್ತಿಗೆ ವಿವಿಧ ಆಭರಣ ಮತ್ತು ಹೂವಿನ ಅಲಂಕಾರ ಮಾಡಿದರು.

ಬಾಳೆಕಂಬ, ಹೂವಿನ ಹಾರ, ಬಣ್ಣಬಣ್ಣದ ತೋರಣ ಹಾಗೂ ದೀಪಗಳಿಂದ ಸಿಂಗರಿಸಿದ ಪೂಜಾ ಮಂಟಪಗಳು ಕಣ್ಮನ ಸೆಳೆದವು. ಹಣ್ಣು, ತೆಂಗಿನಕಾಯಿ ಹಾಗೂ ವಿವಿಧ ನೈವೇದ್ಯಗಳನ್ನು ಅರ್ಪಿಸಿ ಧೂಪ-ದೀಪ ಬೆಳಗಿಸಿ ಭಕ್ತಿಯಿಂದ ಪೂಜೆ ಸಲ್ಲಿಸಲಾಯಿತು.

ಗೃಹಿಣಿಯರು ಹೊಸ ಸೀರೆ ಧರಿಸಿ ಸಾಂಪ್ರದಾಯಿಕ ಅಲಂಕಾರದಲ್ಲಿ ಪಾಲ್ಗೊಂಡು ಪೂಜೆ ನೆರವೇರಿಸಿದರು. ಗೋಧಿಹುಗ್ಗಿ, ಕರ್ಜಿಕಾಯಿ, ಕಡುಬು, ಅನ್ನ-ಸಾರು ಸೇರಿದಂತೆ ವಿವಿಧ ಖಾದ್ಯಗಳನ್ನು ತಯಾರಿಸಿ ನೈವೇದ್ಯ ಅರ್ಪಿಸಿ ಪ್ರಸಾದ ವಿತರಿಸಿದರು.

ಸಂಜೆಯಾಗುತ್ತಿದ್ದಂತೆ ಮಹಿಳೆಯರು ಅಕ್ಕಪಕ್ಕದ ಮನೆಗಳಿಗೆ ತೆರಳಿ ಪರಸ್ಪರ ಅರಿಶಿಣ-ಕುಂಕುಮ, ಹೂವು, ತಾಂಬೂಲ ಹಾಗೂ ಸೌಭಾಗ್ಯದ ಸಾಮಗ್ರಿಗಳನ್ನು ನೀಡಿ ಶುಭಾಶಯ ವಿನಿಮಯ ಮಾಡಿಕೊಂಡರು. ಇದರಿಂದ ಮನೆಮನೆಗಳಲ್ಲಿ ಹಬ್ಬದ ಸಂಭ್ರಮ ಮತ್ತಷ್ಟು ಹೆಚ್ಚಾಯಿತು.

ವರಮಹಾಲಕ್ಷ್ಮೀ ಹಬ್ಬವು ಧಾರ್ಮಿಕ ಆಚರಣೆಯ ಜತೆಗೆ ಕುಟುಂಬ ಸದಸ್ಯರನ್ನು ಒಗ್ಗೂಡಿಸುವ ಹಾಗೂ ಮಹಿಳೆಯರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಾಂಸ್ಕೃತಿಕ ಹಬ್ಬವಾಗಿದೆ. ಶ್ರಾವಣದ ಹಸಿರು ಸೊಬಗಿನ ನಡುವೆ ದೀಪದ ಬೆಳಕು, ಹೂವಿನ ಪರಿಮಳ ಹಾಗೂ ಭಕ್ತಿಯ ವಾತಾವರಣ ಎಲ್ಲೆಡೆ ಮನೆಮಾಡಿತ್ತು.

ಕುಟುಂಬದ ಎಲ್ಲ ಸದಸ್ಯರಿಗೆ ಆರೋಗ್ಯ, ಆಯುಷ್ಯ, ಐಶ್ವರ್ಯ ಹಾಗೂ ನೆಮ್ಮದಿ ದೊರೆಯಲಿ, ಎಲ್ಲರ ಇಷ್ಟಾರ್ಥಗಳು ಈಡೇರಲಿ ಎಂದು ಮಹಿಳೆಯರು ಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸಿದರು.

ಸಂಭ್ರಮದಲ್ಲಿ ಸ್ನೇಹಾ ರಾಠೋಡ್, ಜ್ಯೋತಿ ವಂಕಲಕುಂಟಿ, ವಿಜಯಲಕ್ಷ್ಮಿ ಹಿರೇಮಠ, ಈರಮ್ಮ ಹುಲ್ಲೂರ, ಸವಿತಾ ಬೇವಿನಕಟ್ಟಿ, ಶೋಭಾ, ಐಶ್ವರ್ಯ, ವಿದ್ಯಾ, ಚನ್ನಮ್ಮ, ಲಕ್ಷ್ಮೀ ಕಲ್ಲೂರ, ಗಂಗಮ್ಮ ಕಲ್ಲೂರ, ರಶ್ಮಿ ಕರಮುಡಿ, ಸಾವಿತ್ರಿ ಕಡೆತೋಟದ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.