ಚಿಕ್ಕಮಗಳೂರು: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ರಸ್ತೆಗೆ ಬಿದ್ದ ಸವಾರರ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಹಳೇಹಟ್ಟಿ ಗೇಟ್ ಬಳಿ ನಡೆದಿದೆ.
ಮೃತರನ್ನು ಮೂಲತಃ ರಾಜಸ್ಥಾನ ಮೂಲದವರು ಎಂದು ಗುರುತಿಸಲಾಗಿದ್ದು, ಅವರ ಹೆಸರು ಹಾಗೂ ವಿಳಾಸ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಮೃತರ ಗುರುತು ಪತ್ತೆಹಚ್ಚಲು ಮಾಹಿತಿ ಕಲೆಹಾಕುತ್ತಿದ್ದಾರೆ.
ಕಡೂರಿನಿಂದ ಚಿಕ್ಕಮಗಳೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬಂದ ಮತ್ತೊಂದು ಬೈಕ್ ನಡುವೆ ಹಳೇಹಟ್ಟಿ ಗೇಟ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಸರ್ಕಾರಿ ಬಸ್ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮತ್ತೊಂದು ಬೈಕ್ನಲ್ಲಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸಖರಾಯಪಟ್ಟಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

