Home Blog

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, 3 ಕೋಟಿ ರೂಪಾಯಿ ಸುಲಿಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್, ಅಶಿಕ್ ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ. ಅಪಹರಣಕ್ಕೆ ಬಳಸಿದ್ದ ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮಧ್ಯರಾತ್ರಿ ವೇಳೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ದಯಾನಂದ ರೆಡ್ಡಿ ಅವರ ಕಾರನ್ನು ಹಿಲಲಿಗೆ ಗ್ರಾಮದ ಬಳಿ ತಡೆದ ಆರೋಪಿಗಳು, ಉಡುಗೊರೆ ನೀಡುವ ನೆಪದಲ್ಲಿ ಕಾರಿನ ಬಾಗಿಲು ತೆರೆಯುವಂತೆ ಮಾಡಿದ್ದಾರೆ. ಇದೇ ವೇಳೆ ಕಾರಿನೊಳಗೆ ನುಗ್ಗಿದ ಆರೋಪಿ ಗನ್ ತೋರಿಸಿ ಬೆದರಿಕೆ ಹಾಕಿ ವಾಹನವನ್ನು ತನ್ನ ನಿಯಂತ್ರಣಕ್ಕೆ ಪಡೆದಿದ್ದಾನೆ.

ನಂತರ ಅತ್ತಿಬೆಲೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ‘ನಿಮ್ಮ ಹತ್ಯೆಗೆ 10 ಕೋಟಿ ರೂಪಾಯಿ ಸುಪಾರಿ ಬಂದಿದೆ’ ಎಂದು ಬೆದರಿಕೆ ಹಾಕಿದ್ದಾರೆ. ಜೀವ ಉಳಿಸಿಕೊಳ್ಳಲು ಹಣ ನೀಡುವುದಾಗಿ ದಯಾನಂದ ರೆಡ್ಡಿ ಮನವಿ ಮಾಡಿಕೊಂಡಾಗ, ಆರೋಪಿಗಳು 3 ಕೋಟಿ ರೂಪಾಯಿ ಬೇಡಿಕೆ ಇಟ್ಟು ಬಳಿಕ 2 ಕೋಟಿ ರೂಪಾಯಿಗೆ ಇಳಿದಿದ್ದರು.

ಬೆಳಗ್ಗೆ ಬ್ಯಾಂಕ್‌ನಿಂದ ಹಣ ತೆಗೆಯುವುದಾಗಿ ಹೇಳಿದ ದಯಾನಂದ ರೆಡ್ಡಿ ಅವರನ್ನು ಆರೋಪಿಗಳು ಬಿಡುಗಡೆ ಮಾಡಿದ್ದರು. ಬಳಿಕ ಅವರು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸಿಸಿಟಿವಿ ದೃಶ್ಯಗಳು ಮತ್ತು ತಾಂತ್ರಿಕ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

‘10 ಕೋಟಿ ಸುಪಾರಿ’ ಬೆದರಿಕೆ ನೀಡಿ ಅಪಹರಣ: ದಯಾನಂದ ರೆಡ್ಡಿ ಕೇಸ್‌ನಲ್ಲಿ ನಾಲ್ವರು ಪೊಲೀಸರ ಬಲೆಗೆ

ಆನೇಕಲ್: ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿ ಅವರ ಅಪಹರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, 3 ಕೋಟಿ ರೂಪಾಯಿ ಸುಲಿಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳ ಮೂಲದ ಪ್ರವೀಣ್, ರೋಮಿಯೋ ಮಾರ್ಟಿನ್, ಅಶಿಕ್ ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ. ಅಪಹರಣಕ್ಕೆ ಬಳಸಿದ್ದ ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮಧ್ಯರಾತ್ರಿ ವೇಳೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ದಯಾನಂದ ರೆಡ್ಡಿ ಅವರ ಕಾರನ್ನು ಹಿಲಲಿಗೆ ಗ್ರಾಮದ ಬಳಿ ತಡೆದ ಆರೋಪಿಗಳು, ಉಡುಗೊರೆ ನೀಡುವ ನೆಪದಲ್ಲಿ ಕಾರಿನ ಬಾಗಿಲು ತೆರೆಯುವಂತೆ ಮಾಡಿದ್ದಾರೆ. ಇದೇ ವೇಳೆ ಕಾರಿನೊಳಗೆ ನುಗ್ಗಿದ ಆರೋಪಿ ಗನ್ ತೋರಿಸಿ ಬೆದರಿಕೆ ಹಾಕಿ ವಾಹನವನ್ನು ತನ್ನ ನಿಯಂತ್ರಣಕ್ಕೆ ಪಡೆದಿದ್ದಾನೆ.

ನಂತರ ಅತ್ತಿಬೆಲೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ‘ನಿಮ್ಮ ಹತ್ಯೆಗೆ 10 ಕೋಟಿ ರೂಪಾಯಿ ಸುಪಾರಿ ಬಂದಿದೆ’ ಎಂದು ಬೆದರಿಕೆ ಹಾಕಿದ್ದಾರೆ. ಜೀವ ಉಳಿಸಿಕೊಳ್ಳಲು ಹಣ ನೀಡುವುದಾಗಿ ದಯಾನಂದ ರೆಡ್ಡಿ ಮನವಿ ಮಾಡಿಕೊಂಡಾಗ, ಆರೋಪಿಗಳು 3 ಕೋಟಿ ರೂಪಾಯಿ ಬೇಡಿಕೆ ಇಟ್ಟು ಬಳಿಕ 2 ಕೋಟಿ ರೂಪಾಯಿಗೆ ಇಳಿದಿದ್ದರು.

ಬೆಳಗ್ಗೆ ಬ್ಯಾಂಕ್‌ನಿಂದ ಹಣ ತೆಗೆಯುವುದಾಗಿ ಹೇಳಿದ ದಯಾನಂದ ರೆಡ್ಡಿ ಅವರನ್ನು ಆರೋಪಿಗಳು ಬಿಡುಗಡೆ ಮಾಡಿದ್ದರು. ಬಳಿಕ ಅವರು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸಿಸಿಟಿವಿ ದೃಶ್ಯಗಳು ಮತ್ತು ತಾಂತ್ರಿಕ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಬೆಳಗಿನ ಜಾವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ವೈಟ್ ಫೀಲ್ಡ್ʼನಲ್ಲಿ ಆರೋಪಿ ಅರೆಸ್ಟ್!

ಬೆಂಗಳೂರು: ಟೀ ಕುಡಿದು ಪಿಜಿಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಪಶ್ಚಿಮ ಬಂಗಾಳ ಮೂಲದ ಯುವಕನನ್ನು ವೈಟ್‌ಫೀಲ್ಡ್ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಂಧಿತನನ್ನು ಸೈಪುಲ್ ಮೊಂಡಲ್ ಎಂದು ಗುರುತಿಸಲಾಗಿದೆ. ಜೂನ್ 2ರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾ ಕೆಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸೈಪುಲ್ ಮೊಂಡಲ್ ವೈಟ್‌ಫೀಲ್ಡ್ ಪ್ರದೇಶದಲ್ಲಿ ರಸ್ತೆ ಬದಿ ಕಸ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಜೂನ್ 2ರ ಮುಂಜಾನೆ ವಿದ್ಯಾರ್ಥಿನಿಯೊಬ್ಬರು ಟೀ ಕುಡಿದು ತಮ್ಮ ಪಿಜಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ, ಆಕೆಯನ್ನು ಗಮನಿಸಿದ ಆರೋಪಿ ಬಲವಂತವಾಗಿ ಎತ್ತಿಕೊಂಡು ಹೋಗಲು ಯತ್ನಿಸಿದ್ದಾನೆ. ಇದರಿಂದ ಭಯಗೊಂಡ ವಿದ್ಯಾರ್ಥಿನಿ ಜೋರಾಗಿ ಕಿರುಚಿಕೊಂಡಿದ್ದು, ಸುತ್ತಮುತ್ತಲಿನ ಜನರು ಸ್ಥಳಕ್ಕೆ ಧಾವಿಸಿದ್ದಾರೆ.

ಸ್ಥಳೀಯರು ಬರುತ್ತಿರುವುದನ್ನು ಗಮನಿಸಿದ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ವಿದ್ಯಾರ್ಥಿನಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ಘಟನೆಯ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ; ಇಂದು ಸಂಜೆಯೊಳಗೆ ಖಾತೆ ಹಂಚಿಕೆ – ಪ್ರಿಯಾಂಕ್ ಖರ್ಗೆ

ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಸಚಿವರ ಖಾತೆ ಹಂಚಿಕೆ ಕುರಿತು ಮುಖ್ಯಮಂತ್ರಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಗೃಹ ಸಚಿವ ಸ್ಥಾನದ ರೇಸ್‌ನಲ್ಲಿ ತಮ್ಮ ಹೆಸರು ಕೇಳಿಬರುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,

ಇನ್ನೂ ಯಾವುದೇ ಖಾತೆ ಹಂಚಿಕೆ ಆಗಿಲ್ಲ. ಪಕ್ಷ ಅಥವಾ ಸರ್ಕಾರ ಯಾವ ಜವಾಬ್ದಾರಿಯನ್ನು ನೀಡಿದರೂ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಕರ್ನಾಟಕದ ಜನರಿಗೆ ಸೇವೆ ಸಲ್ಲಿಸುವುದೇ ಮುಖ್ಯ. ಅದಕ್ಕಾಗಿ ಯಾವುದೇ ಸ್ಥಾನಮಾನ ದೊಡ್ಡದು ಅಥವಾ ಚಿಕ್ಕದು ಎಂಬ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಸಚಿವರ ಖಾತೆ ಹಂಚಿಕೆ ಕುರಿತು ಮುಖ್ಯಮಂತ್ರಿ ಈಗಾಗಲೇ ಚರ್ಚೆ ನಡೆಸಿದ್ದು, ಇಂದು ಸಂಜೆಯೊಳಗೆ ಅಂತಿಮ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಗೃಹ ಸಚಿವ ಸ್ಥಾನ ಕುರಿತು ನಡೆಯುತ್ತಿರುವ ಚರ್ಚೆಗಳ ನಡುವೆ ಮಾತನಾಡಿದ ಅವರು, ಯಾರು ಗೃಹ ಸಚಿವರಾದರೂ ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲೇ ಕೆಲಸ ಮಾಡಬೇಕು. ಅದನ್ನು ಮೀರಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಮರ್ಪಕ ಅವಕಾಶ ನೀಡಿಲ್ಲ ಎಂಬ ಬಿಜೆಪಿ ನಾಯಕರ ಟೀಕೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಅವರಿಗೆ ಇಷ್ಟ ಬಂದಂತೆ ಮಾತನಾಡಲಿ. ಮೊದಲು ವಿಜಯೇಂದ್ರ ಮತ್ತು ಆರ್. ಅಶೋಕ್ ಅವರು ತಮ್ಮ ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಲಿ. ಆರ್‌ಎಸ್‌ಎಸ್‌ನಲ್ಲಿ ಮಹಿಳೆಯರನ್ನು ಸಹಸಂಚಾಲಕರನ್ನಾಗಿ ನೇಮಿಸಲಿ. ನಂತರ ಈ ವಿಚಾರದ ಬಗ್ಗೆ ಚರ್ಚೆ ಮಾಡೋಣ ಎಂದು ತಿರುಗೇಟು ನೀಡಿದರು.

ಮಳೆ ಅನಾಹುತಕ್ಕೆ 8 ವರ್ಷದ ಬಾಲಕ ಬಲಿ: ನೆಲಕ್ಕೆ ಬಿದ್ದ ವಿದ್ಯುತ್ ತಂತಿ ತಗುಲಿ ದಾರುಣ ಸಾವು

0

ಬೀದರ್: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಮತ್ತೊಂದು ಅಮಾಯಕ ಜೀವವನ್ನು ಬಲಿ ಪಡೆದಿದೆ. ಹುಲಸೂರು ಪಟ್ಟಣದಲ್ಲಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 8 ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಬಾಲಕನನ್ನು ಅಲಿ ಮೊಮಿನ್ (8) ಎಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ವಿದ್ಯುತ್ ಕಂಬದಿಂದ ಮನೆಗೆ ನೀಡಲಾಗಿದ್ದ ಸಂಪರ್ಕ ತಂತಿ ತುಂಡಾಗಿ ನೆಲಕ್ಕೆ ಬಿದ್ದಿತ್ತು.

ಘಟನೆಯ ವೇಳೆ ಹೊರಗಡೆ ಆಟವಾಡುತ್ತಿದ್ದ ಅಲಿ ಮೊಮಿನ್, ನೆಲದಲ್ಲಿದ್ದ ವಿದ್ಯುತ್ ತಂತಿಯನ್ನು ಕೈಯಿಂದ ಮುಟ್ಟಿದ್ದಾನೆ. ತಕ್ಷಣವೇ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳೀಯರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇತ್ತ ಜೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರು ಹಾಗೂ ಸ್ಥಳೀಯರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಯಿಂದ ವಿದ್ಯುತ್ ತಂತಿ ಕಟ್ ಆಗಿ ನೆಲಕ್ಕೆ ಬಿದ್ದಿದ್ದರೂ ಅದನ್ನು ತೆರವುಗೊಳಿಸಲು ಅಥವಾ ಸುರಕ್ಷತಾ ಕ್ರಮ ಕೈಗೊಳ್ಳಲು ಇಲಾಖೆ ವಿಫಲವಾಗಿದೆ ಎಂದು ದೂರಿದ್ದಾರೆ.

ಈ ಘಟನೆ ಹುಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂರನೇ ಮದುವೆಗೆ ಸಜ್ಜಾದ ಅಮೀರ್ ಖಾನ್: ಬೆಂಗಳೂರಿನ ಗೌರಿ ಸ್ಪ್ರ್ಯಾಟ್ ಜೊತೆ ಶೀಘ್ರವೇ ವಿವಾಹ?

ಮುಂಬೈ: ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ವೈಯಕ್ತಿಕ ಬದುಕಿನ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಪ್ರೇಯಸಿ ಗೌರಿ ಸ್ಪ್ರ್ಯಾಟ್ ಜೊತೆ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಜುಲೈ 5ರಂದು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆಮೀರ್ ಖಾನ್ ಕಳೆದ ವರ್ಷ ತಮ್ಮ ಹುಟ್ಟುಹಬ್ಬದ ದಿನವೇ ಗೌರಿ ಅವರನ್ನು ಅಧಿಕೃತವಾಗಿ ಪರಿಚಯಿಸಿ ಸಂಬಂಧದ ಬಗ್ಗೆ ಬಹಿರಂಗಪಡಿಸಿದ್ದರು. ಹಲವು ವರ್ಷಗಳ ಸ್ನೇಹ ಪ್ರೀತಿಗೆ ತಿರುಗಿದ್ದು, ಇದೀಗ ಇಬ್ಬರೂ ದಾಂಪತ್ಯ ಜೀವನ ಆರಂಭಿಸಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ಆಮೀರ್ ಖಾನ್ ಈಗಾಗಲೇ ಎರಡು ಮದುವೆಗಳನ್ನು ಮಾಡಿಕೊಂಡಿದ್ದಾರೆ. ಮೊದಲ ಪತ್ನಿ ರೀನಾ ದತ್ತಾ ಅವರೊಂದಿಗೆ 16 ವರ್ಷಗಳ ದಾಂಪತ್ಯ ಜೀವನ ನಡೆಸಿದ ಬಳಿಕ ವಿಚ್ಛೇದನ ಪಡೆದಿದ್ದರು. ನಂತರ ಕಿರಣ್ ರಾವ್ ಅವರನ್ನು ವಿವಾಹವಾಗಿದ್ದ ಅವರು, 2021ರಲ್ಲಿ ಬೇರ್ಪಟ್ಟಿದ್ದರು.

ಮೂಲತಃ ಬೆಂಗಳೂರಿನವರಾದ ಗೌರಿ ಸ್ಪ್ರ್ಯಾಟ್ ಫ್ಯಾಶನ್ ಮತ್ತು ಬ್ಯೂಟಿ ಕ್ಷೇತ್ರದಲ್ಲಿ ಗುರುತಿಸಿಕೊಂಡ ಉದ್ಯಮಿಯಾಗಿದ್ದಾರೆ. ಲಂಡನ್‌ನಲ್ಲಿ ಉನ್ನತ ಶಿಕ್ಷಣ ಪಡೆದಿರುವ ಅವರು, ಮುಂಬೈನಲ್ಲಿ ಯಶಸ್ವಿಯಾಗಿ ಸಲೂನ್ ವ್ಯವಹಾರ ನಡೆಸುತ್ತಿದ್ದಾರೆ.

ಸಂಬಂಧವನ್ನು ಬಹಿರಂಗಪಡಿಸಿದ ಬಳಿಕ ಆಮೀರ್ ಖಾನ್, ‘ಗೌರಿ ನನ್ನ ಜೀವನಕ್ಕೆ ಬಂದ ಬಳಿಕ ನಾನು ಹೆಚ್ಚು ಸಂತೋಷವಾಗಿದ್ದೇನೆ. ಜೀವನದಲ್ಲಿ ಮತ್ತೊಮ್ಮೆ ಸಮತೋಲನ ಮತ್ತು ನೆಮ್ಮದಿ ಸಿಕ್ಕಿದೆ’ ಎಂದು ಹೇಳಿಕೊಂಡಿದ್ದರು.

ಈಗ ಅವರ ವಿವಾಹದ ಸುದ್ದಿ ಹೊರಬಿದ್ದಿರುವ ಹಿನ್ನೆಲೆಯಲ್ಲಿ ಬಾಲಿವುಡ್ ವಲಯದಲ್ಲಿ ಭಾರಿ ಕುತೂಹಲ ಮೂಡಿದ್ದು, ಅಧಿಕೃತ ಘೋಷಣೆಯ ನಿರೀಕ್ಷೆ ಹೆಚ್ಚಾಗಿದೆ.

26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದೆ: ನಟಿ ಕಂಗನಾ ರಣಾವತ್

ಮುಂಬೈ: 2008ರ ನವೆಂಬರ್ 26ರಂದು ನಡೆದ ಭೀಕರ ಮುಂಬೈ ಉಗ್ರರ ದಾಳಿಯ ಸಮಯದಲ್ಲಿ ತಾವು ಸ್ನೇಹಿತರೊಂದಿಗೆ ಪಾರ್ಟಿಯಲ್ಲಿ ತೊಡಗಿಸಿಕೊಂಡಿದ್ದೆವು ಎಂದು ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಬಹಿರಂಗಪಡಿಸಿದ್ದಾರೆ. ‘ಭಾರತ್ ಭಾಗ್ಯ ವಿಧಾತ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶವನ್ನೇ ಬೆಚ್ಚಿಬೀಳಿಸಿದ್ದ ಆ ಕರಾಳ ರಾತ್ರಿಯ ನೆನಪುಗಳನ್ನು ಹಂಚಿಕೊಂಡರು.

ಕಂಗನಾ ಅವರ ಪ್ರಕಾರ, ನಟಿ ಶಹಾನಾ ಗೋಸ್ವಾಮಿ ಹೊಸ ಮನೆಗೆ ಗೃಹಪ್ರವೇಶ ಮಾಡಿಕೊಂಡ ಹಿನ್ನೆಲೆಯಲ್ಲಿ ಯಾರಿ ರೋಡ್‌ನಲ್ಲಿರುವ ನಿವಾಸದಲ್ಲಿ ವಿಶೇಷ್ ಫಿಲ್ಮ್ಸ್‌ಗೆ ಸಂಬಂಧಿಸಿದ ಕಲಾವಿದರಿಗಾಗಿ ಹೌಸ್ ಪಾರ್ಟಿ ಆಯೋಜಿಸಲಾಗಿತ್ತು. ಅಲ್ಲಿ ಎಲ್ಲರೂ ಹಾಡು, ನೃತ್ಯ ಮತ್ತು ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.

ಈ ವೇಳೆ ಹಿರಿಯ ನಿರ್ದೇಶಕ ಮಹೇಶ್ ಭಟ್ ಪಾರ್ಟಿಗೆ ಆಗಮಿಸಿ ತಕ್ಷಣ ಟಿವಿ ಆನ್ ಮಾಡುವಂತೆ ಸೂಚಿಸಿದ್ದರು. ಟಿವಿ ತೆರೆದಾಗ ಮುಂಬೈನಲ್ಲಿ ಉಗ್ರರ ದಾಳಿ ನಡೆಯುತ್ತಿರುವ ದೃಶ್ಯಗಳು ನೇರ ಪ್ರಸಾರವಾಗುತ್ತಿದ್ದು, ಅಲ್ಲಿ ಇದ್ದವರು ಆಘಾತಕ್ಕೊಳಗಾದರು ಎಂದು ಕಂಗನಾ ತಿಳಿಸಿದ್ದಾರೆ.

ಆರಂಭದಲ್ಲಿ ಪರಿಸ್ಥಿತಿಯ ಗಂಭೀರತೆ ಅರ್ಥವಾಗದ ಕಾರಣ ಪಾರ್ಟಿ ಮುಂದುವರಿಸಬೇಕೇ ಅಥವಾ ಮನೆಗೆ ತೆರಳಬೇಕೇ ಎಂಬ ಚರ್ಚೆ ನಡೆದಿತ್ತು. ಆದರೆ ಮಹೇಶ್ ಭಟ್ ಪರಿಸ್ಥಿತಿಯ ತೀವ್ರತೆಯನ್ನು ಮನಗಂಡು ಎಲ್ಲರೂ ಕೂಡಲೇ ಮನೆಗೆ ತೆರಳುವಂತೆ ಸೂಚಿಸಿದರು. ಅವರ ಸಲಹೆಯಿಂದಲೇ ನಾವು ಅಲ್ಲಿಂದ ಹೊರಟೆವು ಎಂದು ಕಂಗನಾ ನೆನಪಿಸಿಕೊಂಡರು.

ಇದೇ ವೇಳೆ ತಮ್ಮ ಹೊಸ ಸಿನಿಮಾ ‘ಭಾರತ್ ಭಾಗ್ಯ ವಿಧಾತ’ ಕುರಿತು ಮಾತನಾಡಿದ ಅವರು, 26/11 ಉಗ್ರರ ದಾಳಿಯ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್‌ಗಳು ತೋರಿದ ಮಾನವೀಯತೆ ಮತ್ತು ಧೈರ್ಯದ ಕಥೆಯನ್ನು ಚಿತ್ರ ಹೇಳಲಿದೆ ಎಂದು ತಿಳಿಸಿದರು. ಚಿತ್ರದಲ್ಲಿ ಕಂಗನಾ ನರ್ಸ್ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಖಿನ್ನತೆಗೆ ಜಾರಿದ್ದ ಮಹಿಳೆಯಿಂದ ದಾರುಣ ಕೃತ್ಯ: ಇಬ್ಬರು ಪುಟ್ಟ ಮಕ್ಕಳ ಹತ್ಯೆ

0

ಕೋಲಾರ: ಮುಳಬಾಗಿಲು ತಾಲೂಕಿನ ಆಲಂಗೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಪತಿಯ ಸಾವಿನ ಬಳಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದಾಳೆ.

ಆಂಧ್ರಪ್ರದೇಶ ಮೂಲದ ಬುಜ್ಜಮ್ಮ (22) ತನ್ನ ಮೂರು ವರ್ಷದ ಮಗಳು ಸರಸ್ವತಿ ಮತ್ತು ಒಂದು ವರ್ಷದ ಮಗು ಹೇಮಾಶ್ರಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಆಕೆಯನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬುಜ್ಜಮ್ಮ ಮತ್ತು ಪತಿ ಬಾಬು ಕಳೆದ ಒಂದು ವರ್ಷದಿಂದ ಆಲಂಗೂರಿನ ಮಾವಿನ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಆದರೆ 20 ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಬಾಬು ಮೃತಪಟ್ಟಿದ್ದರು. ಈ ಘಟನೆಯ ಬಳಿಕ ಬುಜ್ಜಮ್ಮ ತೀವ್ರ ಮಾನಸಿಕ ಆಘಾತ ಹಾಗೂ ಖಿನ್ನತೆಗೆ ಒಳಗಾಗಿದ್ದಳು ಎಂದು ತಿಳಿದುಬಂದಿದೆ.

ಕುಟುಂಬದ ಆಧಾರಸ್ತಂಭನನ್ನು ಕಳೆದುಕೊಂಡ ನೋವಿನಿಂದ ಬಳಲುತ್ತಿದ್ದ ಮಹಿಳೆ, ಕೊನೆಗೆ ತನ್ನ ಮಕ್ಕಳ ಜೀವ ಕಸಿದುಕೊಂಡು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ.

ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಪೊಲೀಸರು ಸವಿಸ್ತಾರ ತನಿಖೆ ನಡೆಸುತ್ತಿದ್ದಾರೆ.

ನಾನು ಟ್ರೋಲ್ ಪೇಜ್ʼಗಳ ಕ್ರಶ್: ಸಚಿವ ಸ್ಥಾನ ಸಿಕ್ಕರೂ ಸರಿ, ಸಿಗದಿದ್ದರೂ ಸರಿ – ಪ್ರದೀಪ್ ಈಶ್ವರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ ದಿನ ಕಾರಿನಲ್ಲಿ ಮೌನವಾಗಿ ಕುಳಿತಿದ್ದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತ್ತಿರುವ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಆ ಸಂದರ್ಭದಲ್ಲಿ ಯಾವುದೇ ವಿಶೇಷ ಕಾರಣದಿಂದ ಮೌನವಾಗಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹಿರಿಯ ನಾಯಕರು ಅಧಿಕಾರದಿಂದ ಹೊರಬರುತ್ತಿದ್ದರೆ, ಹೊಸ ನಾಯಕರು ಜವಾಬ್ದಾರಿ ವಹಿಸಿಕೊಳ್ಳುವಂತಹ ಭಾವನಾತ್ಮಕ ಸಂದರ್ಭವಾಗಿತ್ತು. ಆ ಸಮಯದಲ್ಲಿ ಏನು ಮಾತನಾಡಬೇಕು ಎಂಬುದರ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಇಂತಹ ಕ್ಷಣಗಳಲ್ಲಿ ಯಾವುದೇ ಹೇಳಿಕೆ ನೀಡಿದರೂ ಅದು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆ ಇರುವುದರಿಂದ ಮೌನವಾಗಿದ್ದೆ ಎಂದು ಹೇಳಿದರು.

ಟ್ರೋಲ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಟ್ರೋಲ್‌ಗಳು ನನಗೆ ಹೊಸದಲ್ಲ. ಕರ್ನಾಟಕದ ಟ್ರೋಲ್ ಪೇಜ್‌ಗಳ ಕ್ರಶ್ ನಾನು ಎಂದು ಹಾಸ್ಯಮಯವಾಗಿ ಉತ್ತರಿಸಿದರು.

ಸಚಿವ ಸ್ಥಾನ ಸಿಗುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಸಚಿವ ಸ್ಥಾನ ಪಡೆಯುವ ಆಸೆ ಇದೆ. ಆದರೆ ಕೊಟ್ಟರೂ ಸರಿ, ಕೊಡದಿದ್ದರೂ ಸರಿ. ನಾವು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ, ಪಕ್ಷದ ಸಿದ್ಧಾಂತ ಮತ್ತು ಜನಸೇವೆಯ ಉದ್ದೇಶದಿಂದ ಬಂದಿದ್ದೇವೆ ಎಂದು ಹೇಳಿದರು.

ನಾನು ಒಬಿಸಿ ಸಮುದಾಯದ ಯುವ ನಾಯಕ. ರಾಜ್ಯದಲ್ಲಿ ಒಬಿಸಿ ಚಳವಳಿಯನ್ನು ಮತ್ತಷ್ಟು ಬಲಪಡಿಸುವುದು ನನ್ನ ಉದ್ದೇಶ. ಅಧಿಕಾರವೇ ಗುರಿಯಾಗಿದ್ದರೆ ಅನೇಕ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಕೆಲಸ ಮಾಡುತ್ತಿರಲಿಲ್ಲ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಆಯ್ಕೆಯಾಗಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ಇಬ್ಬರಿಗೂ ಅಭಿನಂದನೆ ಸಲ್ಲಿಸಿದರು.

ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯ ಮತ್ತೊಂದು ಹಂತದ ಅಭಿವೃದ್ಧಿಯತ್ತ ಸಾಗಲಿದೆ ಎಂಬ ವಿಶ್ವಾಸವಿದೆ. ಒಬಿಸಿ ಸಮುದಾಯದ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ಒಬಿಸಿ ಸಮುದಾಯದ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಅಧಿಕಾರ ಬೇಕಾದವರು ಡಿಕೆ ಶಿವಕುಮಾರ್ ಜೊತೆ ಹೋಗಿ, ಪಕ್ಷ ಕಟ್ಟುವವರು ನನ್ನ ಜೊತೆ ಬನ್ನಿ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಮತ್ತು ಸಚಿವ ಸ್ಥಾನಗಳಿಗಾಗಿ ರಾಜಕೀಯ ಮಾಡುವವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹೋಗಬಹುದು. ಆದರೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು, ಪಕ್ಷದ ಸಿದ್ಧಾಂತ ಹಾಗೂ ವರಿಷ್ಠರ ಕೈ ಬಲಪಡಿಸುವುದೇ ಗುರಿ ಎನ್ನುವವರು ನನ್ನೊಂದಿಗೆ ಬರಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮಾತನಾಡಿದ ಅವರು, ಈ ಹೇಳಿಕೆಯನ್ನು ಯಾವುದೇ ಬಣ ರಾಜಕೀಯದ ದೃಷ್ಟಿಯಿಂದ ನೋಡಬಾರದು ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿ ನೀಡಿದ್ದಾರೆ. ವಿದ್ಯಾರ್ಥಿ ದಶೆಯಿಂದಲೇ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಾನು, ಎಂದಿಗೂ ಅಧಿಕಾರ ಅಥವಾ ಸಚಿವ ಸ್ಥಾನಕ್ಕಾಗಿ ವರಿಷ್ಠರ ಮುಂದೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.

ನಾನು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದವನಲ್ಲ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ, ಸಿಪಾಯಿಯಾಗಿ ಕೆಲಸ ಮಾಡಿದ್ದೇನೆ. ಹಿರಿಯ ನಾಯಕರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುತ್ತಾ, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ತಿಳಿಸಿದರು.

2028ರ ವಿಧಾನಸಭೆ ಚುನಾವಣೆಗೆ ತಾವು ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿದ ಹರಿಪ್ರಸಾದ್, ಅದನ್ನು ವಾಟ್ಸಪ್ ಯುನಿವರ್ಸಿಟಿಯ ಅಪಪ್ರಚಾರ ಎಂದು ತಳ್ಳಿಹಾಕಿದರು.

ನಾನು ಹಿಂದುಳಿದ ಅಥವಾ ಮುಂದುವರಿದ ವರ್ಗಕ್ಕೆ ಸೇರಿದವನು ಎಂಬುದು ಮುಖ್ಯವಲ್ಲ. ನನ್ನ ಮುಂದಿರುವ ಜವಾಬ್ದಾರಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು. ಸಿಎಎ, ಎಸ್‌ಐಆರ್ ಸೇರಿದಂತೆ ಜನಪರ ಹೋರಾಟಗಳಲ್ಲಿ ಪಕ್ಷವನ್ನು ಮುನ್ನಡೆಸಬೇಕಿದೆ. ಅಧಿಕಾರಕ್ಕಿಂತ ಹೋರಾಟ ಮತ್ತು ಸಂಘಟನೆ ನನಗೆ ಮುಖ್ಯ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಜನರ ಸಮಸ್ಯೆಗಳ ಪರವಾಗಿ ಹೋರಾಟ ನಡೆಸುವುದು ತಮ್ಮ ಮೊದಲ ಆದ್ಯತೆ ಎಂದು ಹರಿಪ್ರಸಾದ್ ತಿಳಿಸಿದರು. ಕಾಂಗ್ರೆಸ್ ಕೇವಲ ಅಧಿಕಾರದ ಪಕ್ಷವಲ್ಲ. ಇದು ಸಿದ್ಧಾಂತ ಮತ್ತು ಹೋರಾಟದ ಪಕ್ಷ. ಪಕ್ಷದ ತತ್ವ, ಮೌಲ್ಯಗಳು ಹಾಗೂ ವರಿಷ್ಠರ ನಾಯಕತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು  ಹೇಳಿದರು.

error: Content is protected !!