Home Blog

ಬಿಜೆಪಿಗೆ ಅಣ್ಣಾಮಲೈ ಗುಡ್ ಬೈ: 6 ವರ್ಷಗಳ ರಾಜಕೀಯ ಪಯಣಕ್ಕೆ ಅಂತ್ಯ, ಹೊಸ ಸಂಘಟನೆ ಘೋಷಣೆಯ ಸುಳಿವು

ನವದೆಹಲಿ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ. ಅವರ ರಾಜೀನಾಮೆ ಪತ್ರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದು, ಈ ಮೂಲಕ ಬಿಜೆಪಿಯೊಂದಿಗಿನ ಸುಮಾರು ಆರು ವರ್ಷಗಳ ರಾಜಕೀಯ ನಂಟಿಗೆ ತೆರೆ ಬಿದ್ದಿದೆ ಎನ್ನಲಾಗಿದೆ.

ಜೂನ್ 2ರಂದು ಅಣ್ಣಾಮಲೈ ಅವರು ನಿತಿನ್ ನಬಿನ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಬಳಿಕ ಅವರು ಬಿಜೆಪಿಯಲ್ಲೇ ಮುಂದುವರಿಯಲಿದ್ದಾರೆ ಅಥವಾ ರಾಜ್ಯಸಭೆಗೆ ಆಯ್ಕೆಯಾಗಲಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡಿದ್ದವು.

ಆದರೆ ರಾಜೀನಾಮೆ ಅಂಗೀಕಾರಗೊಂಡಿರುವ ಹಿನ್ನೆಲೆಯಲ್ಲಿ ಆ ಚರ್ಚೆಗಳಿಗೆ ತೆರೆ ಬಿದ್ದಂತಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಅಣ್ಣಾಮಲೈ ಅವರು ಇಂದು ಸುದ್ದಿಗೋಷ್ಠಿ ನಡೆಸಿ ತಮ್ಮ ಮುಂದಿನ ರಾಜಕೀಯ ನಡೆಯ ಕುರಿತು ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

ಎಐಎಡಿಎಂಕೆಯನ್ನು ಮತ್ತೆ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಸಿಕೊಂಡ ಬಳಿಕ ಪಕ್ಷದ ಉನ್ನತ ನಾಯಕತ್ವ ಅಣ್ಣಾಮಲೈ ಅವರನ್ನು ಕಡೆಗಣಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಜೊತೆಗೆ ಪಕ್ಷದ ಕೆಲವು ನಿರ್ಧಾರಗಳ ಬಗ್ಗೆ ಅವರು ಅಸಮಾಧಾನ ಹೊಂದಿದ್ದರು ಎನ್ನಲಾಗುತ್ತಿದೆ. ಈ ಹಿಂದೆ ತಮಿಳುನಾಡು ವಿಧಾನಸಭೆ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗಳಿಗೆ ಸಹ ಅವರು ರಾಜೀನಾಮೆ ನೀಡಿದ್ದರು.

ಇದರ ನಡುವೆ ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ‘ಮಕ್ಕಳ್ ಶಕ್ತಿ ಇಯಕ್ಕಂ’ (ಜನಶಕ್ತಿ ಆಂದೋಲನ) ಹೆಸರಿನ ಹೊಸ ಜನಪರ ಸಂಘಟನೆ ಅಥವಾ ಚಳವಳಿಯನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಆದರೆ ಈ ಕುರಿತು ಅವರು ಇನ್ನೂ ಅಧಿಕೃತವಾಗಿ ಯಾವುದೇ ಘೋಷಣೆ ಮಾಡಿಲ್ಲ.

ಇತ್ತೀಚೆಗೆ ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಗೆ ಅಣ್ಣಾಮಲೈ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದರು. 9ನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳ ಅಧ್ಯಯನ ಕಡ್ಡಾಯಗೊಳಿಸುವ ಪ್ರಸ್ತಾವನೆಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬೆಳವಣಿಗೆಯ ನಂತರ ಬಿಜೆಪಿ ನಾಯಕತ್ವದೊಂದಿಗೆ ಅವರ ಭಿನ್ನಾಭಿಪ್ರಾಯಗಳ ಕುರಿತು ಚರ್ಚೆಗಳು ಜೋರಾಗಿದ್ದವು.

ಇದೀಗ ಕೊಯಮತ್ತೂರಿನಲ್ಲಿ ಅಣ್ಣಾಮಲೈ ಅವರ ಭಾವಚಿತ್ರವಿರುವ ಪೋಸ್ಟರ್‌ಗಳು ಕಾಣಿಸಿಕೊಂಡಿದ್ದು, “ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ” ಎಂಬ ಸಂದೇಶ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಈ ಪೋಸ್ಟರ್‌ಗಳು ಅವರ ಮುಂದಿನ ರಾಜಕೀಯ ಹೆಜ್ಜೆಯ ಸುಳಿವು ನೀಡುತ್ತಿವೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.

2021ರಿಂದ 2025ರವರೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ, ರಾಜ್ಯದಲ್ಲಿ ಬಿಜೆಪಿಯ ಸಂಘಟನೆ ಬಲವರ್ಧನೆಗೆ ಪ್ರಮುಖ ಪಾತ್ರವಹಿಸಿದ್ದರು. ಆದರೆ ವಿಧಾನಸಭೆ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿ ಮಾಡಿಕೊಂಡ ವಿಚಾರವೂ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು ಎನ್ನಲಾಗುತ್ತಿದೆ. ಚುನಾವಣಾ ಪ್ರಚಾರದಲ್ಲಿ ಅವರಿಗೆ ನಿರೀಕ್ಷಿತ ಸ್ಥಾನಮಾನ ಸಿಗಲಿಲ್ಲ ಎಂಬ ಚರ್ಚೆಗಳೂ ನಡೆದಿದ್ದವು. ಜೊತೆಗೆ ಸತತವಾಗಿ ಎರಡು ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಗಳಿಗೆ ಗೈರಾಗಿದ್ದುದೂ ಅವರ ರಾಜಕೀಯ ಭವಿಷ್ಯದ ಕುರಿತು ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿತ್ತು.

ರಾಜೀನಾಮೆ ಪತ್ರದಲ್ಲಿ ರಾಮಲಿಂಗಾ ರೆಡ್ಡಿ ಉಲ್ಲೇಖಿಸಿದ ಕಾರಣ ಏನು ಗೊತ್ತಾ?

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ರಚನೆಯಾದ ಕೆಲವೇ ಗಂಟೆಗಳಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ರಾಮಲಿಂಗಾ ರೆಡ್ಡಿಗೆ ಜಲಸಂಪನ್ಮೂಲ ಇಲಾಖೆ ಹಂಚಿಕೆಯಾಗಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಶುಕ್ರವಾರ ಬೆಳಗ್ಗೆ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ.

ರಾಜೀನಾಮೆ ಪತ್ರದಲ್ಲಿ, “ನನಗೆ ಸಚಿವ ಸ್ಥಾನ ನೀಡಿದ ಮುಖ್ಯಮಂತ್ರಿಗಳಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದಗಳು. ಆದರೆ ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು. ನಾನು ಕಾಂಗ್ರೆಸ್ ಪಕ್ಷದ ಶಾಸಕ ಹಾಗೂ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ” ಎಂದು ಉಲ್ಲೇಖಿಸಿದ್ದಾರೆ.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಾವು ಕೇಳಿರಲಿಲ್ಲ. ಆದರೆ 2023ರಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ತಮ್ಮ ನಿವಾಸಕ್ಕೆ ಭೇಟಿ ನೀಡಿ, ಭವಿಷ್ಯದಲ್ಲಿ ಆ ಖಾತೆ ನೀಡುವ ಭರವಸೆ ನೀಡಿದ್ದರು ಎಂದು ಹೇಳಿದ್ದಾರೆ.

“ನನಗೆ ನೀಡಿದ್ದ ಮಾತು ಈಡೇರಿಲ್ಲ. ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲ. ಅದಕ್ಕಾಗಿಯೇ ಸಚಿವ ಸ್ಥಾನ ತ್ಯಜಿಸಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆದಾಗ್ಯೂ, ಕಾಂಗ್ರೆಸ್ ಪಕ್ಷದ ವಿರುದ್ಧ ಯಾವುದೇ ಅಸಮಾಧಾನ ಇಲ್ಲ. ಪಕ್ಷದ ಶಾಸಕನಾಗಿ ಹಾಗೂ ಕಾರ್ಯಕರ್ತನಾಗಿ ಮುಂದುವರಿಯುವುದಾಗಿ ಅವರು ಪುನರುಚ್ಚರಿಸಿದ್ದಾರೆ.

ಶೌಚಾಲಯ ಕ್ಲೀನರ್‌ಗಳೇ ಚಿನ್ನದ ಕಳ್ಳರು! ಕಿಟಕಿ ಮೂಲಕ ನುಗ್ಗಿ 12 ಲಕ್ಷದ ಚಿನ್ನ ಎಗರಿಸಿದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಗರದ ನಗರತ್‌ಪೇಟೆಯ ಜ್ಯುವೆಲ್ಲರಿ ಅಂಗಡಿಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಕಳ್ಳತನ ಪ್ರಕರಣವನ್ನು ಹಲಸೂರು ಗೇಟ್ ಪೊಲೀಸರು ಭೇದಿಸಿದ್ದು, ರೌಡಿ ಶೀಟರ್ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 12 ಲಕ್ಷ ರೂ. ಮೌಲ್ಯದ 84 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳಲಾಗಿದೆ.

ಶ್ರೀರಾಮಪುರದ ನಾಗರಾಜು ಅಲಿಯಾಸ್ ‘ಆರ್‌ಎಕ್ಸ್ ನಾಗ’, ಅರ್ಜುನ್ ಅಲಿಯಾಸ್ ‘ರೋಲೆಕ್ಸ್’ ಹಾಗೂ ರಾಕ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಲ್ಲಿ ನಾಗರಾಜು ಶ್ರೀರಾಮಪುರ ಪೊಲೀಸ್ ಠಾಣೆಯ ರೌಡಿ ಶೀಟರ್ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಮೇ 6ರಂದು ನಗರತ್‌ಪೇಟೆಯ ‘ಆರುಮ್ ಜ್ಯುವೆಲ್ಲರ್ಸ್’ ಕಟ್ಟಡದ ಐದನೇ ಮಹಡಿಯಲ್ಲಿ ಕಳ್ಳತನ ನಡೆದಿತ್ತು. ಕಟ್ಟಡದ ಶೌಚಾಲಯದ ಕಿಟಕಿ ಮೂಲಕ ಒಳನುಗ್ಗಿದ್ದ ಆರೋಪಿಗಳು, ಅಲ್ಲಿದ್ದ ಚಿನ್ನದ ಗಟ್ಟಿಗಳನ್ನು ಕದ್ದೊಯ್ದು ಪರಾರಿಯಾಗಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಚಲನವಲನ ಪತ್ತೆಯಾಗಿದೆ. ಬಳಿಕ ನಗರತ್‌ಪೇಟೆ ಪ್ರದೇಶದ ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಸಿಬ್ಬಂದಿಯ ಮೇಲೆ ಅನುಮಾನ ಮೂಡಿದ್ದು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನದ ಸಂಪೂರ್ಣ ಸಂಚು ಬೆಳಕಿಗೆ ಬಂದಿದೆ.

ಆರೋಪಿಗಳು ನಗರತ್‌ಪೇಟೆಯ ಚಿನ್ನದ ಅಂಗಡಿಗಳ ಶೌಚಾಲಯ ಮತ್ತು ಚರಂಡಿಗಳಿಂದ ಹರಿದುಬರುವ ಕೊಳಚೆ ನೀರಿನಲ್ಲಿ ಚಿನ್ನದ ಸಣ್ಣ ಕಣಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದರು. ಇದೇ ವೇಳೆ ಜ್ಯುವೆಲ್ಲರಿ ಅಂಗಡಿಯ ಒಳಗಿನ ವ್ಯವಸ್ಥೆ, ಭದ್ರತಾ ಕೊರತೆ ಮತ್ತು ಪ್ರವೇಶ ಮಾರ್ಗಗಳ ಬಗ್ಗೆ ಮಾಹಿತಿ ಪಡೆದಿದ್ದರು.

ಪ್ರತಿದಿನ ಚಿನ್ನದ ಕಣಗಳನ್ನು ಸಂಗ್ರಹಿಸುವ ಬದಲು ಒಂದೇ ಬಾರಿಗೆ ದೊಡ್ಡ ಮೊತ್ತದ ಹಣ ಸಂಪಾದಿಸುವ ಉದ್ದೇಶದಿಂದ ಕಳ್ಳತನಕ್ಕೆ ಸಂಚು ರೂಪಿಸಿದ್ದರು. ಅದರಂತೆ ಶೌಚಾಲಯದ ಕಿಟಕಿ ಮೂಲಕ ಕಟ್ಟಡದೊಳಗೆ ಪ್ರವೇಶಿಸಿ ಚಿನ್ನದ ಗಟ್ಟಿಯನ್ನು ಕದ್ದೊಯ್ದಿದ್ದರು.

ಪ್ರಸ್ತುತ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕಳ್ಳತನದಲ್ಲಿ ಬಳಸಿದ ಮಾರ್ಗ ಹಾಗೂ ಇತರೆ ಪ್ರಕರಣಗಳ ಸಂಪರ್ಕದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ವರದಕ್ಷಿಣೆ ಕಿರುಕುಳ? ಕಾಣೆಯಾಗಿದ್ದ ಮಹಿಳೆ ಕೆರೆಯಲ್ಲಿ ಶವವಾಗಿ ಪತ್ತೆ!

ಬೆಂಗಳೂರು: ಮನೆಯಿಂದ ಕಾಣೆಯಾಗಿದ್ದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಕೊಮ್ಮಘಟ್ಟದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಜ್ಯೋತಿ (29) ಎಂದು ಗುರುತಿಸಲಾಗಿದೆ. ಮೂಲತಃ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಸರಗೂರು ಮೂಲದ ಜ್ಯೋತಿ, ಪತಿ ಶರತ್ ಕುಮಾರ್ ಹಾಗೂ ನಾಲ್ಕು ವರ್ಷದ ಮಗುವಿನೊಂದಿಗೆ ಕೊಮ್ಮಘಟ್ಟದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಶರತ್ ಕುಮಾರ್ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾನೆ ಎಂದು ಜ್ಯೋತಿ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಮನನೊಂದ ಜ್ಯೋತಿ ನಾಲ್ಕು ದಿನಗಳ ಹಿಂದೆ ಮನೆಯಿಂದ ಹೊರಗೆ ಹೋಗಿದ್ದು, ಬಳಿಕ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ಬೆಳಗಿನ ಜಾವ ಕೊಮ್ಮಘಟ್ಟ ಕೆರೆಯಲ್ಲಿ ಮಹಿಳೆಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಪ್ರಕರಣ ಸಂಬಂಧ ಜ್ಯೋತಿ ಕುಟುಂಬಸ್ಥರು ಪತಿ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿನ ನಿಖರ ಕಾರಣ ಹಾಗೂ ಆರೋಪಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಖಾತೆ ಹಂಚಿಕೆಯಾದ ಬೆನ್ನಲ್ಲೇ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್!

ಬೆಂಗಳೂರು: ಆರೋಗ್ಯ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಜಯನಗರದ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ಸಿಗುತ್ತಿರುವ ಚಿಕಿತ್ಸೆ ಹಾಗೂ ಸಿಬ್ಬಂದಿಯ ಕಾರ್ಯನಿರ್ವಹಣೆಯ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ಈ ವೇಳೆ ರಾತ್ರಿ ಪಾಳಿಯಲ್ಲಿ ಸಿಬ್ಬಂದಿ ಕೊರತೆ ಇರುವುದು ಹಾಗೂ ಕೆಲ ವೈದ್ಯರು ಕರ್ತವ್ಯಕ್ಕೆ ಗೈರಾಗಿರುವುದು ಸಚಿವರ ಗಮನಕ್ಕೆ ಬಂದಿದೆ.

ಇದರಿಂದ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಗೈರಾಗಿದ್ದ ವೈದ್ಯರಿಗೆ ಎಚ್ಚರಿಕೆ ನೀಡುವುದಾಗಿ ತಿಳಿಸಿದರು. ಆಸ್ಪತ್ರೆಯ ನೈಜ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದಲೇ ಈ ಹೊತ್ತಲ್ಲಿ ಭೇಟಿ ನೀಡಿದ್ದಾಗಿ ಅವರು ಹೇಳಿದರು.

“ಬೆಳಗಿನ ವೇಳೆಯಲ್ಲಿ ಸಭೆಗಳು ಹಾಗೂ ಇತರ ಕಾರ್ಯಕ್ರಮಗಳು ಇರುತ್ತವೆ. ಹೀಗಾಗಿ ಈ ಸಮಯದಲ್ಲಿ ಆಸ್ಪತ್ರೆಗೆ ಬಂದಿದ್ದೇನೆ. ಈ ಸಮಯದಲ್ಲೇ ಆಸ್ಪತ್ರೆಯ ನಿಜವಾದ ಸ್ಥಿತಿ ಗೊತ್ತಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಾರೆ. ಎಷ್ಟೇ ಜನ ಬಂದರೂ ವೈದ್ಯರು ಸೇವೆ ನೀಡಬೇಕು,” ಎಂದು ಖಾದರ್ ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಂಬುಲೆನ್ಸ್‌ಗಳ ಹಾವಳಿ ಕುರಿತು ಪ್ರತಿಕ್ರಿಯಿಸಿದ ಅವರು, ಇಲಾಖೆಯ ಪರಿಶೀಲನಾ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ವೈದ್ಯರಿಗೆ ನಿರ್ಭಯವಾಗಿ ಕೆಲಸ ಮಾಡುವ ವಾತಾವರಣ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದರು.

ಖಾತೆ ಹಂಚಿಕೆ ಸಂಬಂಧ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಾದರ್, “ಅದು ನನ್ನ ಇಲಾಖೆಗೆ ಸಂಬಂಧಿಸಿದ ವಿಷಯವಲ್ಲ. ಆ ಬಗ್ಗೆ ನನಗೆ ಮಾಹಿತಿ ಇಲ್ಲ. ಪಕ್ಷದ ನಾಯಕರು ಈ ವಿಚಾರವನ್ನು ನೋಡಿಕೊಳ್ಳುತ್ತಾರೆ,” ಎಂದು ಪ್ರತಿಕ್ರಿಯಿಸಿದರು.

ರಾಜ್ಯಾದ್ಯಂತ ಮುಂಗಾರು ಮಳೆ ಚುರುಕು: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಪ್ರಬಲ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಬಾಗಲಕೋಟೆ, ಬೆಳಗಾವಿ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ಹವಾಮಾನ ಅಸ್ಥಿರವಾಗಿರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ! ಕೊಟ್ಟ ಮಾತು ತಪ್ಪಿದ್ರಾ ಡಿಕೆ ಶಿವಕುಮಾರ್!?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆದಿದೆ.

ನೂತನ ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನಗೊಂಡಿರುವ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ಘೋಷಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ ಅಸಮಾಧಾನಗೊಂಡಿರುವ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕೋರಮಂಗಲದ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ತಮ್ಮ ನಿರ್ಧಾರದ ಹಿಂದಿನ ಕಾರಣಗಳನ್ನು ವಿವರಿಸಿದ್ದಾರೆ.

ನನಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಥವಾ ಸಿದ್ದರಾಮಯ್ಯ ಅವರ ಮೇಲೆ ಯಾವುದೇ ವೈಯಕ್ತಿಕ ಅಸಮಾಧಾನವಿಲ್ಲ. ಆದರೆ ಹಿಂದೆ ನೀಡಿದ್ದ ಭರವಸೆಯನ್ನು ಉಳಿಸಿಕೊಳ್ಳಲಿಲ್ಲ ಎಂಬುದು ನೋವಾಗಿದೆ. ನಾನು 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ವೀರಪ್ಪ ಮೊಯ್ಲಿ ಹಾಗೂ ಸಿದ್ದರಾಮಯ್ಯ ಅವರ ಸಂಪುಟಗಳಲ್ಲಿ ಸಚಿವನಾಗಿ ಕೆಲಸ ಮಾಡಿದ್ದೇನೆ. “ಡಿಕೆ ಶಿವಕುಮಾರ್ ಅವರು ಭವಿಷ್ಯದಲ್ಲಿ ಮುಖ್ಯಮಂತ್ರಿಯಾದಾಗ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಹೇಳಿದ್ದರು. ಆದರೆ ಅದು ನೆರವೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅವರು ತಮ್ಮ ರಾಜೀನಾಮೆ ಕಾಂಗ್ರೆಸ್ ಪಕ್ಷಕ್ಕಲ್ಲ, ಕೇವಲ ಸಚಿವ ಸ್ಥಾನಕ್ಕೆ ಮಾತ್ರ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನದ ವಾತಾವರಣ ಹೆಚ್ಚಾಗಿರುವುದು ಸ್ಪಷ್ಟವಾಗಿದೆ.

ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಇಲಾಖೆ? ಇಲ್ಲಿದೆ ಲಿಸ್ಟ್‌

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದ್ದು, ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದ 13 ಸಚಿವರಿಗೆ ಗುರುವಾರ ಇಲಾಖೆಗಳನ್ನು ವಿತರಿಸಲಾಗಿದೆ.

ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಪ್ರಮುಖ ಖಾತೆಗಳ ಹಂಚಿಕೆಗೆ ಸಂಬಂಧಿಸಿದ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ಸಿಎಂ ಡಿಕೆ ಶಿವಕುಮಾರ್ ಅವರು ಹಣಕಾಸು ಇಲಾಖೆಯ ಜೊತೆಗೆ ಗುಪ್ತಚರ, ಸಹಕಾರ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗಳನ್ನೂ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಕಂದಾಯ ಹಾಗೂ ಯುವ ಸಬಲೀಕರಣ ಇಲಾಖೆ ಹಂಚಿಕೆಯಾಗಿದೆ.

ಪ್ರಿಯಾಂಕ್ ಖರ್ಗೆ ಅವರಿಗೆ ಗೃಹ ಹಾಗೂ ಐಟಿಬಿಟಿ ಇಲಾಖೆ ನೀಡಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಕೃಷ್ಣ ಬೈರೇಗೌಡರಿಗೆ ಒಲಿದಿದೆ.

ಸತೀಶ್ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಇಲಾಖೆ ನೀಡಲಾಗಿದ್ದು, ಕೆ.ಜೆ. ಜಾರ್ಜ್ ಅವರಿಗೆ ಇಂಧನ ಹಾಗೂ ಪ್ರವಾಸೋದ್ಯಮ ಇಲಾಖೆ ಹಂಚಿಕೆಯಾಗಿದೆ.

ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ನಗರಾಭಿವೃದ್ಧಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡಲಾಗಿದೆ.

ಬೈರತಿ ಸುರೇಶ್ ಅವರಿಗೆ ಸಾರಿಗೆ ಇಲಾಖೆ, ಯು.ಟಿ. ಖಾದರ್ ಅವರಿಗೆ ಆರೋಗ್ಯ ಇಲಾಖೆ, ಎಂ.ಬಿ. ಪಾಟೀಲ್ ಅವರಿಗೆ ಬೃಹತ್ ಕೈಗಾರಿಕೆ ಇಲಾಖೆ ನೀಡಲಾಗಿದೆ.

ರಾಮಲಿಂಗಾ ರೆಡ್ಡಿಗೆ ಜಲಸಂಪನ್ಮೂಲ ಇಲಾಖೆ ಹಂಚಿಕೆಯಾಗಿದೆ. ಈಶ್ವರ್ ಖಂಡ್ರೆ ಅವರಿಗೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ನೀಡಲಾಗಿದೆ.

ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ, ಕೆ.ಎಚ್. ಮುನಿಯಪ್ಪ ಅವರಿಗೆ ಆಹಾರ ಇಲಾಖೆ ಹಂಚಿಕೆಯಾಗಿದೆ.

ಈ ಮೂಲಕ ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಅಂತಿಮಗೊಂಡಿದ್ದು, ರಾಜಕೀಯ ವಲಯದಲ್ಲಿ ಇದಕ್ಕೆ ಸಂಬಂಧಿಸಿದ ಚರ್ಚೆಗಳು ಮುಂದುವರಿದಿವೆ.

ಅವೈಜ್ಞಾನಿಕ ಕಾಮಗಾರಿ: ರಸ್ತೆ ಗುಂಡಿಗೆ ಬಿದ್ದು ನರ್ಸ್ ದುರ್ಮರಣ, ಪತಿ ಗಂಭೀರ!

ಬಳ್ಳಾರಿ: ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ನಡೆದ ಅವೈಜ್ಞಾನಿಕ ರಸ್ತೆ ಕಾಮಗಾರಿಯ ದುರ್ಘಟನೆಗೆ ಮತ್ತೊಂದು ಅಮಾಯಕ ಜೀವ ಬಲಿಯಾಗಿರುವ ಘಟನೆ ಚಾಣಕನೂರು ಕ್ರಾಸ್ ಬಳಿ ನಡೆದಿದೆ.

ರಾವಿಹಾಳ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುಳ (36) ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತಿ ಚಂದ್ರಶೇಖರ್ (46) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಜುಳ ಹಾಗೂ ಚಂದ್ರಶೇಖರ್ ಅವರು ರಾತ್ರಿ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ, ರಾಜ್ಯ ಹೆದ್ದಾರಿ 63ರ ಚಾಣಕನೂರು ಕ್ರಾಸ್ ಬಳಿ ರಸ್ತೆ ಕಾಮಗಾರಿಗಾಗಿ ತೆರೆದಿದ್ದ ಗುಂಡಿಗೆ ಬೈಕ್ ಬಿದ್ದಿದೆ. ಯಾವುದೇ ಮುನ್ನೆಚ್ಚರಿಕೆ ಫಲಕ ಅಥವಾ ಬ್ಯಾರಿಕೇಡ್ ಹಾಕದೆ ಗುಂಡಿಯನ್ನು ಹಾಗೇ ಬಿಟ್ಟಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ರಾತ್ರಿಯ ಕತ್ತಲಲ್ಲಿ ಗುಂಡಿ ಕಾಣಿಸದ ಕಾರಣ ಬೈಕ್ ನೇರವಾಗಿ ಅದರಲ್ಲಿ ಬಿದ್ದು ದುರ್ಘಟನೆ ನಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಮಂಜುಳ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಹೆದ್ದಾರಿ ಕಾಮಗಾರಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸದಿರುವುದೇ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ.

ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಎಕ್ಸ್ ಮೂಲಕ ವಿದೇಶಿ ಉಗ್ರನ ಜೊತೆ ನಂಟು: ತುಮಕೂರು ಯುವಕ ಅರೆಸ್ಟ್!

ತುಮಕೂರು: ವಿದೇಶಿ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇಲೆ ತುಮಕೂರಿನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ರಹಸ್ಯ ಮಾಹಿತಿಯ ಆಧಾರದ ಮೇಲೆ ತುಮಕೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ತುಮಕೂರಿನ ಶ್ರೀರಾಮನಗರ ನಿವಾಸಿ ಅಲ್ಲಾಬಕ್ಷು (24) ಎಂದು ಗುರುತಿಸಲಾಗಿದೆ.

ಆರೋಪಿಯು ಸಾಮಾಜಿಕ ಜಾಲತಾಣ ‘ಎಕ್ಸ್’ (X) ಮೂಲಕ ವಿದೇಶಿ ಶಂಕಿತ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ದೇಶದ ಆಂತರಿಕ ವಿಚಾರಗಳಿಗೆ ಸಂಬಂಧಿಸಿದ ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದನೆಂದು ಆರೋಪಿಸಲಾಗಿದೆ. ದೇಶ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದ ಚಾಟಿಂಗ್ ಕೂಡ ನಡೆಸುತ್ತಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಕೇಂದ್ರ ಸಂಸ್ಥೆಗಳು ಆತನ ಆನ್‌ಲೈನ್ ಚಟುವಟಿಕೆಗಳ ಮೇಲೆ ನಿಗಾ ವಹಿಸಿ, ಮಾಹಿತಿಯನ್ನು ರಾಜ್ಯ ಪೊಲೀಸರಿಗೆ ಹಂಚಿಕೊಂಡಿದ್ದವು. ಇದರ ಆಧಾರದ ಮೇಲೆ ಗುರುವಾರ ರಾತ್ರಿ ಕ್ಯಾತಸಂದ್ರ ಪ್ರದೇಶದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಶಂಕಿತನ ಬಗ್ಗೆಯೂ ಮಾಹಿತಿ ದೊರೆತಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಕರಣವನ್ನು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

error: Content is protected !!