Home Blog

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಚಿವರ ಸಹೋದರನ ಕುಟುಂಬದ 7 ಮಂದಿ ವಿರುದ್ಧ FIR

0

ತುಮಕೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಸಚಿವ ದಿವಂಗತ ಸುಧಾಕರ್ ಅವರ ಸಹೋದರ ಡಿಎಸ್. ಕುಮಾರ್ ಕುಟುಂಬದ ವಿರುದ್ಧ ತುಮಕೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಡಿಎಸ್. ಕುಮಾರ್ ಪುತ್ರ ಅರ್ಜುನ್ ಸೇರಿದಂತೆ ಕುಟುಂಬದ ಒಟ್ಟು ಏಳು ಮಂದಿ ವಿರುದ್ಧ ಯುವತಿ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಯುವತಿ ಮತ್ತು ಅರ್ಜುನ್ ಕಳೆದ 16 ವರ್ಷಗಳಿಂದ ಪರಿಚಿತರಾಗಿದ್ದು, ಕಳೆದ ಏಳು ವರ್ಷಗಳಿಂದ ಅರ್ಜುನ್ ಪ್ರೀತಿಸುವುದಾಗಿ ಹೇಳಿ ಮದುವೆಯಾಗುವುದಾಗಿ ನಂಬಿಸಿದ್ದ ಎನ್ನಲಾಗಿದೆ.

2020ರಲ್ಲಿ ಎರಡೂ ಕುಟುಂಬಗಳ ಪೋಷಕರ ಸಮ್ಮುಖದಲ್ಲಿ ಕುಂಕುಮ ಶಾಸ್ತ್ರ ನಡೆದಿತ್ತು. ಬಳಿಕ ಇಬ್ಬರೂ ಹಲವು ಕಡೆ ಪ್ರವಾಸ ಮಾಡಿದ್ದು, ಈ ಸಂದರ್ಭದಲ್ಲಿ ಅರ್ಜುನ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಮದುವೆ ವಿಚಾರವಾಗಿ ಎರಡೂ ಕುಟುಂಬಗಳ ನಡುವೆ ಮಾತುಕತೆ ಮುಂದುವರಿದಿದ್ದು, 2025ರ ಅಕ್ಟೋಬರ್‌ನಲ್ಲಿ ನಿಶ್ಚಿತಾರ್ಥ ನಡೆಸಲು ಸಿದ್ಧತೆ ನಡೆದಿತ್ತು. ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ಉಂಟಾದ ಬಳಿಕ ಡಿಸೆಂಬರ್‌ನಲ್ಲಿ ನಿಶ್ಚಿತಾರ್ಥ ನೆರವೇರಿಸಲಾಗಿತ್ತು. 2026ರ ಮಾರ್ಚ್ 1ರಂದು ಮದುವೆ ದಿನಾಂಕವನ್ನೂ ನಿಗದಿಪಡಿಸಲಾಗಿತ್ತು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಆದರೆ ಮದುವೆಗೆ ಎರಡು ತಿಂಗಳು ಬಾಕಿ ಇರುವಾಗ ಅರ್ಜುನ್ ಕುಟುಂಬ ಮದುವೆ ನಿರ್ಧಾರದಿಂದ ಹಿಂದೆ ಸರಿದಿದೆ ಎಂದು ಯುವತಿ ಆರೋಪಿಸಿದ್ದಾರೆ. ಬಳಿಕ ಕುಟುಂಬದವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಸ್ಪಂದಿಸಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮಿಂದ ತಪ್ಪಾಗಿದ್ದರೆ ಕ್ಷಮಿಸುವಂತೆ ಮನವಿ ಮಾಡಿದರೂ ಸ್ಪಂದಿಸದೆ, ಡಿಎಸ್. ಕುಮಾರ್ ಅವರು ಲಾರಿ ಹರಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ಯುವತಿ ಮಾಡಿದ್ದಾರೆ.

ಸದ್ಯ ಪೊಲೀಸರು ಯುವತಿಯ ಹೇಳಿಕೆ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಮಹಜರ್ ನಡೆಸಿದ್ದಾರೆ. ಮುಂದಿನ ಹಂತದಲ್ಲಿ ನ್ಯಾಯಾಧೀಶರ ಮುಂದೆ ಯುವತಿಯ ಸೆಕ್ಷನ್ 164ರ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ. ಬಳಿಕ ತನಿಖೆಯ ಆಧಾರದ ಮೇಲೆ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಗಲ್ಫ್ ಸಂಘರ್ಷದ ಬಿಸಿ; ಪಾಕಿಸ್ತಾನದಲ್ಲಿ ಇಂಧನ ಉಳಿಸಲು ಹೊಸ ನಿಯಮಗಳು ಜಾರಿ!

0

ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಮತ್ತು ಗಲ್ಫ್ ಪ್ರದೇಶದಲ್ಲಿನ ಸಂಘರ್ಷದಿಂದ ಜಾಗತಿಕ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ಇಂಧನ ಸಂರಕ್ಷಣೆ ಹಾಗೂ ವೆಚ್ಚ ಕಡಿತಕ್ಕೆ ಹಲವು ಕಠಿಣ ಕ್ರಮಗಳನ್ನು ಘೋಷಿಸಿದೆ.

ಸರ್ಕಾರಿ ವಾಹನಗಳಿಗೆ ನೀಡಲಾಗುವ ಇಂಧನ ಪ್ರಮಾಣವನ್ನು ಶೇ.50ರಷ್ಟು ಕಡಿತಗೊಳಿಸಲು ಸರ್ಕಾರ ನಿರ್ಧರಿಸಿದೆ. ಸೇನೆ, ಕಾನೂನು ಜಾರಿ ಸಂಸ್ಥೆಗಳು, ಆಂಬುಲೆನ್ಸ್, ಅಗ್ನಿಶಾಮಕ ದಳ ಸೇರಿದಂತೆ ಅಗತ್ಯ ಸೇವೆಗಳ ವಾಹನಗಳಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ.

ಸರ್ಕಾರಿ ವೆಚ್ಚದಲ್ಲಿ ಹೊಸ ವಾಹನಗಳ ಖರೀದಿಗೂ ಸಂಪೂರ್ಣ ನಿಷೇಧ ಹೇರಲಾಗಿದೆ. ಜೊತೆಗೆ ಸರ್ಕಾರಿ ಅಧಿಕಾರಿಗಳು ಹಾಗೂ ಸಚಿವರ ವಿದೇಶ ಪ್ರವಾಸಗಳಿಗೆ ಮೂರು ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಅನಿವಾರ್ಯ ಪ್ರವಾಸವಿದ್ದರೆ ಎಕಾನಮಿ ಕ್ಲಾಸ್‌ನಲ್ಲೇ ಪ್ರಯಾಣಿಸಬೇಕು ಎಂದು ಸೂಚಿಸಲಾಗಿದೆ.

ಅಗತ್ಯವಿಲ್ಲದ ಸರ್ಕಾರಿ ಸಭೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲು ಸೂಚಿಸಲಾಗಿದ್ದು, ಸರ್ಕಾರಿ ಔತಣಕೂಟಗಳು, ಅನಗತ್ಯ ವಿಚಾರಸಂಕಿರಣಗಳು ಹಾಗೂ ತರಬೇತಿ ಕಾರ್ಯಕ್ರಮಗಳ ಮೇಲೂ ನಿರ್ಬಂಧ ಹೇರಲಾಗಿದೆ.

ವಿದ್ಯುತ್ ಉಳಿತಾಯಕ್ಕಾಗಿ ಅಂಗಡಿ, ಮಾರುಕಟ್ಟೆ ಮತ್ತು ಶಾಪಿಂಗ್ ಮಾಲ್‌ಗಳನ್ನು ರಾತ್ರಿ 9 ಗಂಟೆಯೊಳಗೆ ಮುಚ್ಚಬೇಕು. ಮದುವೆ ಮಂಟಪಗಳು ರಾತ್ರಿ 10 ಗಂಟೆಗೆ ಹಾಗೂ ರೆಸ್ಟೋರೆಂಟ್‌ಗಳು ರಾತ್ರಿ 11 ಗಂಟೆಯೊಳಗೆ ಬಂದ್ ಆಗಬೇಕು ಎಂದು ಸರ್ಕಾರ ಸೂಚಿಸಿದೆ. ಮದುವೆ ಹಾಗೂ ಇತರ ಸಮಾರಂಭಗಳಲ್ಲಿ ‘ಸಿಂಗಲ್ ಡಿಶ್’ ನಿಯಮ ಮುಂದುವರಿಯಲಿದೆ.

ಗಲ್ಫ್ ಸಂಘರ್ಷದಿಂದ ಎಲ್‌ಎನ್‌ಜಿ ಪೂರೈಕೆಗೆ ಅಡಚಣೆ ಉಂಟಾಗುವ ಆತಂಕದ ನಡುವೆಯೇ ಇಂಧನ ಬಳಕೆಯನ್ನು ನಿಯಂತ್ರಿಸಲು ಪಾಕಿಸ್ತಾನ ಈ ಕ್ರಮಗಳನ್ನು ಕೈಗೊಂಡಿದೆ.

ತಮಿಳುನಾಡಿನಲ್ಲಿ ಹಿಂದಿ ಕಲಿಕೆ ವಿರೋಧ; ‘ನಿಲುವು ಬದಲಿಸಿ’ ಎಂದ ಸುಪ್ರೀಂಕೋರ್ಟ್!

0

ನವದೆಹಲಿ: ತಮಿಳುನಾಡಿನಲ್ಲಿ ಹಿಂದಿ ಕಲಿಸುವುದನ್ನು ವಿರೋಧಿಸುತ್ತಿರುವ ರಾಜ್ಯ ಸರ್ಕಾರ ತನ್ನ ನಿಲುವನ್ನು ಮರುಪರಿಶೀಲಿಸಬೇಕು ಎಂದು ಸುಪ್ರೀಂಕೋರ್ಟ್ ಗುರುವಾರ ಸೂಚಿಸಿದೆ.

ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎ.ಜಿ. ಮಸೀಹ್ ಅವರ ಪೀಠ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿತು.

ತಮಿಳುನಾಡಿನಲ್ಲಿ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸುವುದಕ್ಕೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಶಾಲೆಗಳಲ್ಲಿ ಜಾರಿಯಲ್ಲಿರುವ ತ್ರಿಭಾಷಾ ವ್ಯವಸ್ಥೆಯಲ್ಲಿ ಹಿಂದಿ ಕೂಡ ಇರುವುದರಿಂದ, ಅದು ತಮಿಳುನಾಡಿನ ದ್ವಿಭಾಷಾ ನೀತಿಗೆ ಹೊಂದಿಕೆಯಾಗುವುದಿಲ್ಲ ಎಂಬುದು ರಾಜ್ಯ ಸರ್ಕಾರದ ಪ್ರಮುಖ ವಾದವಾಗಿದೆ.

ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, ನಿಮ್ಮ ಮನೋಭಾವವನ್ನು ಬದಲಿಸಿಕೊಳ್ಳಬೇಕು. ತಮಿಳುನಾಡಿನ ನೆಲದಲ್ಲಿ ಹಿಂದಿ ಕಲಿಸಬಾರದು ಎಂದು ಹೇಳಲಾಗದು. ಅಲ್ಲದೆ, ಚೆನ್ನೈ ಮತ್ತು ದೆಹಲಿ ಪರಸ್ಪರ ದೂರವಾಗಬಾರದು. ಕೇಂದ್ರದಿಂದ ಬರುವ ಯೋಜನೆಯಿಂದ ರಾಜ್ಯದ ಶಿಕ್ಷಣದ ಗುಣಮಟ್ಟ ಕಡಿಮೆಯಾಗುವುದಿಲ್ಲ. ಹೆಚ್ಚುವರಿ ಅವಕಾಶಗಳು ವಿದ್ಯಾರ್ಥಿಗಳಿಗೆ ದೊರೆಯುತ್ತವೆ ಎಂದು ಅಭಿಪ್ರಾಯಪಟ್ಟರು.

ತಮಿಳುನಾಡು ಸರ್ಕಾರವು ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಪ್ರತಿ ಜಿಲ್ಲೆಯಲ್ಲಿ ಅಗತ್ಯವಿರುವ ಭೂಮಿಯನ್ನು ಗುರುತಿಸುವಂತೆ ಈ ಹಿಂದೆ ಸುಪ್ರೀಂಕೋರ್ಟ್ ನೀಡಿದ್ದ ನಿರ್ದೇಶನವನ್ನು ಹಿಂಪಡೆಯುವಂತೆ ಮನವಿ ಮಾಡಿತ್ತು. ಆದರೆ ನ್ಯಾಯಾಲಯ ಆ ಮನವಿಯನ್ನು ತಿರಸ್ಕರಿಸಿ, ಆದೇಶ ಪಾಲನೆಗೆ ರಾಜ್ಯ ಸರ್ಕಾರಕ್ಕೆ ಮತ್ತೆ ಮೂರು ತಿಂಗಳ ಕಾಲಾವಕಾಶ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಲಾಗಿದೆ.

ಕಾಂಗ್ರೆಸ್‌ಗೆ ಬಿಗ್ ಶಾಕ್? 2028ರ ವೇಳೆಗೆ ಹಲವು ನಾಯಕರು NDA ಸೇರ್ತಾರೆ ಎಂದ ಆರ್. ಅಶೋಕ್

0

ಬೆಂಗಳೂರು: ಕಾಂಗ್ರೆಸ್‌ನ ಹಲವು ನಾಯಕರು ಪಕ್ಷದೊಳಗೆ ಅಸಮಾಧಾನಗೊಂಡಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಲವು ಕಾಂಗ್ರೆಸ್ ನಾಯಕರು ಪಕ್ಷ ತೊರೆದು ಎನ್‌ಡಿಎ ಒಕ್ಕೂಟ ಸೇರಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಆರ್. ಅಶೋಕ್, ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಸೂಕ್ತ ಗೌರವ ನೀಡಲಾಗಿಲ್ಲ ಎಂದು ಆರೋಪಿಸಿದರು. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ್ದಕ್ಕೆ ಕಾಂಗ್ರೆಸ್‌ ಇನ್ನೂ ಸ್ಪಷ್ಟ ಕಾರಣ ನೀಡಿಲ್ಲ ಎಂದು ಹೇಳಿದರು.

ಸಂಪುಟ ವಿಸ್ತರಣೆ ಬಳಿಕ ಸಿದ್ದರಾಮಯ್ಯ ಅವರ ಮಾತಿಗೆ ಪಕ್ಷದಲ್ಲಿ ಹಿಂದಿನಷ್ಟು ಪ್ರಾಮುಖ್ಯತೆ ಇಲ್ಲ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರನ್ನು ‘ಯೂಸ್‌ ಆ್ಯಂಡ್‌ ಥ್ರೋ’ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದರು.

ಕಾಂಗ್ರೆಸ್‌ನ ಇತರ ನಾಯಕರಲ್ಲೂ ಅಸಮಾಧಾನವಿದ್ದು, ಹಲವು ನಾಯಕರು ಬೇರೆ ಪಕ್ಷ ಸೇರುವ ಬಗ್ಗೆ ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್‌ ನಾಯಕರೊಂದಿಗೆ ಹಲವು ಕಾಂಗ್ರೆಸ್ ನಾಯಕರು ಸಂಪರ್ಕದಲ್ಲಿದ್ದಾರೆ ಎಂಬುದಾಗಿ ಆರ್. ಅಶೋಕ್ ಹೇಳಿಕೊಂಡಿದ್ದಾರೆ.

ಇದೇ ವೇಳೆ, ಮಂಗಳೂರು ಸಚಿವ ಸಂಪುಟ ಸಭೆ ಬಗ್ಗೆ ಮಾತನಾಡಿ, ಮಂಗಳೂರು ಕ್ಯಾಬಿನೆಟ್ ಉಪಯೋಗ ಇಲ್ಲ. ಸರ್ಕಾರದಲ್ಲಿ ಹಣ ಇಲ್ಲ, ಮೂಗಿಗೆ ತುಪ್ಪ ಸವರಿ ಬರ್ತಾರೆ ಅಷ್ಟೇ. ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಮಂಗಳೂರಿಗೆ ಏನೂ ಕೊಡಲಿಲ್ಲ, ಈಗ ಆರ್ಥಿಕ ಸಂಕಷ್ಟದಲ್ಲಿ ಡಿಕೆಶಿ ಕೂಡ ಏನೂ ಕೊಡಲ್ಲ ಎಂದು ಟೀಕೆ ಮಾಡಿದರು.

ಮೂರು ದಿನ ವಿಶೇಷ ಅಧಿವೇಶ ಕರೆಯಲಾಗಿದೆ. ನಾವು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡ್ತೇವೆ. ವಿಶೇಷ ಅಧಿವೇಶನಲ್ಲೂ ನಾವು ಸಾಲಮನ್ನಾ ಆಗ್ರಹಿಸಿ ಚರ್ಚೆ ಮಾಡ್ತೇವೆ. ಸರ್ಕಾರ ಕಾಟಾಚಾರಕ್ಕೆ ಅಧಿವೇಶನ ಕರೆದಿದೆ ಅಷ್ಟೇ ಎಂದು ವಾಗ್ದಾಳಿ ನಡೆಸಿದರು.

ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಗುಡ್‌ನ್ಯೂಸ್‌; ನಾಲೆಗಳಿಗೆ ಇಂದು ರಾತ್ರಿಯಿಂದಲೇ ನೀರು ಬಿಡುಗಡೆ!

0

ಶಿವಮೊಗ್ಗ: ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯತೆ ಪೂರೈಸಲು ಭದ್ರಾ ಜಲಾಶಯದ ವಿತರಣಾ ನಾಲೆಗಳಿಗೆ 15 ದಿನಗಳ ಕಾಲ ನೀರು ಹರಿಸಲು ನಿರ್ಧರಿಸಲಾಗಿದೆ.

ಸೆಪ್ಟೆಂಬರ್ 17ರ ಮಧ್ಯರಾತ್ರಿ 12 ಗಂಟೆಯಿಂದ ಅಕ್ಟೋಬರ್ 2ರವರೆಗೆ ಭದ್ರಾ ಜಲಾಶಯದಿಂದ ನೀರು ಹರಿಸಲಾಗುತ್ತದೆ. ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ, ಅಂತರ್ಜಲ ವೃದ್ಧಿ ಹಾಗೂ ಕೆರೆ-ಹಳ್ಳಗಳನ್ನು ತುಂಬಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ರೈತರು, ಶಾಸಕರು ಹಾಗೂ ರೈತ ಮುಖಂಡರು ಒತ್ತಾಯಿಸಿದ್ದರು. ಶಿವಮೊಗ್ಗ, ಭದ್ರಾವತಿ, ದಾವಣಗೆರೆ, ಶಾಂತಿಸಾಗರ ಹಾಗೂ ಮಲೆಬೆನ್ನೂರು ಭಾಗಗಳಲ್ಲೂ ಈ ಸಂಬಂಧ ಪ್ರತಿಭಟನೆಗಳು ನಡೆದಿದ್ದವು.

ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯ ಆಧಾರದ ಮೇಲೆ ಜಲಸಂಪನ್ಮೂಲ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನೀರು ಬಿಡುಗಡೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.

ಈ ನೀರನ್ನು ಕೇವಲ ಕುಡಿಯುವ ನೀರು, ಅಂತರ್ಜಲ ವೃದ್ಧಿ ಹಾಗೂ ಕೆರೆಗಳನ್ನು ತುಂಬಿಸಲು ಮಾತ್ರ ಬಳಸಬೇಕು. ಡಿಸೆಂಬರ್ 2026ರವರೆಗೆ ನೀರಿನ ಅಭಾವ ಎದುರಾಗದಂತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

UPI ಶುಲ್ಕದ ಬಗ್ಗೆ ಗೊಂದಲ ಬೇಡ; ಗ್ರಾಹಕರು ತಿಳಿಯಬೇಕಾದ 5 ಪ್ರಮುಖ ಅಂಶಗಳು!

0

ನವದೆಹಲಿ: ಯುಪಿಐ ವಹಿವಾಟುಗಳಿಗೆ ಸಂಬಂಧಿಸಿದಂತೆ ಹೊಸ ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ನಿಯಮಗಳ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಷೇರು ಮಾರುಕಟ್ಟೆ ವಹಿವಾಟುಗಳಿಗೂ MDR ನಿಗದಿಪಡಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಷೇರು ಮಾರುಕಟ್ಟೆ ವಹಿವಾಟುಗಳಿಗೆ ಶೇ.0.02ರ MDR ವಿಧಿಸುವ ನಿರ್ಧಾರವನ್ನು ಸೆಬಿ, ಷೇರು ವಿನಿಮಯ ಕೇಂದ್ರಗಳು ಹಾಗೂ ಸಂಬಂಧಿತ ಪಾಲುದಾರರೊಂದಿಗೆ ಚರ್ಚಿಸಿದ ಬಳಿಕ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮ್ಯೂಚುವಲ್ ಫಂಡ್‌, ಸ್ಟಾಕ್ ಬ್ರೋಕರ್ ಹಾಗೂ ಸೆಕ್ಯುರಿಟೀಸ್ ಪಾವತಿಗಳಿಗೂ ಶೇ.0.02ರ MDR ಅನ್ವಯವಾಗಲಿದ್ದು, ಗರಿಷ್ಠ ಶುಲ್ಕ ₹300ಕ್ಕೆ ಮಿತಿಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

ಇನ್ನು ₹2,000ವರೆಗೆ ನಡೆಯುವ ಯುಪಿಐ ವ್ಯಾಪಾರಿ ಪಾವತಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ₹2,000ಕ್ಕಿಂತ ಹೆಚ್ಚಿನ ವ್ಯಾಪಾರಿ ಪಾವತಿಗಳಿಗೆ ಶೇ.0.4ರ MDR ಅನ್ವಯವಾಗಲಿದೆ. ₹75,000 ಅಥವಾ ಅದಕ್ಕಿಂತ ಹೆಚ್ಚಿನ ದೊಡ್ಡ ವಹಿವಾಟುಗಳಿಗೆ ಗರಿಷ್ಠ ಶುಲ್ಕ ₹300 ಎಂದು ತಿಳಿಸಲಾಗಿದೆ.

ಸಣ್ಣ ವ್ಯಾಪಾರಿಗಳಿಗೆ ಸಂಬಂಧಿಸಿದಂತೆಯೂ ವಿನಾಯಿತಿ ನೀಡಲಾಗಿದೆ. ತಿಂಗಳಿಗೆ ₹1 ಲಕ್ಷದವರೆಗೆ ಯುಪಿಐ ಕ್ಯೂಆರ್‌ ಕೋಡ್ ಮೂಲಕ ಆದಾಯ ಪಡೆಯುವ ಸಣ್ಣ ವ್ಯಾಪಾರಿಗಳಿಗೆ ಈ ಶುಲ್ಕದಿಂದ ವಿನಾಯಿತಿ ಇರಲಿದೆ ಎಂದು ತಿಳಿಸಲಾಗಿದೆ.

ಇನ್ನು ಯುಪಿಐ ಶುಲ್ಕ ವಿಧಿಸುವ ನಿರ್ಧಾರದ ಹಿಂದೆ ಅಮೆರಿಕದ ಯಾವುದೇ ಒತ್ತಡವಿಲ್ಲ ಎಂದು ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ. ಯುಪಿಐ ವಹಿವಾಟುಗಳ ಮೇಲೆ ಜಿಎಸ್‌ಟಿ ವಿಧಿಸಲಾಗುತ್ತದೆ ಎಂಬ ವರದಿಗಳನ್ನೂ ಮೂಲಗಳು ತಳ್ಳಿಹಾಕಿವೆ.

MDR ಎಂದರೆ ಗ್ರಾಹಕರಿಂದ ಡಿಜಿಟಲ್ ಪಾವತಿಗಳನ್ನು ಸ್ವೀಕರಿಸಲು ವ್ಯಾಪಾರಿಗಳು ಬ್ಯಾಂಕ್‌ಗಳು ಅಥವಾ ಪಾವತಿ ಸೇವಾ ಸಂಸ್ಥೆಗಳಿಗೆ ಪಾವತಿಸುವ ಸೇವಾ ಶುಲ್ಕವಾಗಿದೆ. ಡೆಬಿಟ್ ಕಾರ್ಡ್‌ಗಳಿಗೆ ಸಾಮಾನ್ಯವಾಗಿ ಸುಮಾರು ಶೇ.0.90ರಷ್ಟು ಹಾಗೂ ಕ್ರೆಡಿಟ್ ಕಾರ್ಡ್‌ಗಳಿಗೆ ಶೇ.1.5ರಿಂದ ಶೇ.2.5ರವರೆಗೆ MDR ಇರುವುದಾಗಿ ತಿಳಿಸಲಾಗಿದೆ.

ಆಟವಾಡುತ್ತಿದ್ದಾಗ 3ನೇ ಮಹಡಿಯಿಂದ ಬಿದ್ದ ಬಾಲಕ; ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

0

ಬೆಂಗಳೂರು: ಗೌರಿ ಹಬ್ಬದಂದು ಆಟವಾಡುತ್ತಿದ್ದ 6 ವರ್ಷದ ಬಾಲಕ ಮೂರನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಕದಕಟ್ಟೆಯ ಅಯ್ಯಪ್ಪ ಸರ್ಕಲ್‌ ಬಳಿ ನಡೆದಿದೆ.

ವಿನೀಶ್‌ ಎಂಬ ಬಾಲಕ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮೂರನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಯಿಂದ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸದ್ಯ ಬಾಲಕನನ್ನು ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದ್ದರೂ, ಗಾಯಗಳ ಗಂಭೀರತೆಯಿಂದಾಗಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ.

ಚಿಕಿತ್ಸೆಗಾಗಿ ಹೆಚ್ಚಿನ ಹಣದ ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಬಾಲಕನ ಪೋಷಕರು ಸಾರ್ವಜನಿಕರು ಹಾಗೂ ದಾನಿಗಳಿಂದ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಘಟನೆ ಕುರಿತು ಈವರೆಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

ಮೆಂತ್ಯೆ ತಿಂದರೆ ಶುಗರ್ ಕಂಟ್ರೋಲ್ ಆಗುತ್ತಾ? ಡಯಾಬಿಟಿಸ್ ಇರುವವರು ತಿಳಿಯಬೇಕಾದ ಮಾಹಿತಿ

0

ಮಧುಮೇಹ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿರುವ ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ವೈದ್ಯರು ಸೂಚಿಸುವ ಔಷಧಿಗಳ ಜೊತೆಗೆ ಆಹಾರ ಕ್ರಮ, ದೈಹಿಕ ಚಟುವಟಿಕೆ ಹಾಗೂ ಜೀವನಶೈಲಿಯಲ್ಲಿನ ಬದಲಾವಣೆಗಳಿಗೂ ಹೆಚ್ಚಿನ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ ಎನ್ನಲಾಗುವ ಹಲವು ಆಹಾರ ಪದಾರ್ಥಗಳ ಬಳಕೆಯ ಬಗ್ಗೆಯೂ ಚರ್ಚೆಗಳು ನಡೆಯುತ್ತವೆ. ಅದರಲ್ಲಿ ಮೆಂತ್ಯೆ ಬೀಜವೂ ಒಂದು.

ಮೆಂತ್ಯೆ ಬೀಜಗಳಲ್ಲಿ ನಾರಿನಾಂಶ ಸೇರಿದಂತೆ ಕೆಲವು ಸಸ್ಯ ಸಂಯುಕ್ತಗಳು ಕಂಡುಬರುತ್ತವೆ. ಇವು ಆಹಾರದಲ್ಲಿರುವ ಕಾರ್ಬೋಹೈಡ್ರೇಟ್‌ಗಳ ಜೀರ್ಣಕ್ರಿಯೆ ಹಾಗೂ ಗ್ಲೂಕೋಸ್‌ ಹೀರಿಕೊಳ್ಳುವಿಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಊಟದ ನಂತರ ರಕ್ತದಲ್ಲಿನ ಸಕ್ಕರೆ ಮಟ್ಟ ಏರಿಕೆಯಾಗುವುದನ್ನು ಕೆಲಮಟ್ಟಿಗೆ ನಿಯಂತ್ರಿಸಲು ಮೆಂತ್ಯೆ ಸಹಾಯ ಮಾಡಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸಿವೆ.

ಕೆಲವು ಸಣ್ಣ ಪ್ರಮಾಣದ ಅಧ್ಯಯನಗಳಲ್ಲಿ ಮೆಂತ್ಯೆ ಸೇವಿಸಿದವರಲ್ಲಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವರದಿಯಾಗಿದೆ. ಆದರೆ ಇದರ ಪರಿಣಾಮ ಎಲ್ಲರಲ್ಲಿಯೂ ಒಂದೇ ರೀತಿಯಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ವ್ಯಕ್ತಿಯ ಆರೋಗ್ಯ ಸ್ಥಿತಿ, ಆಹಾರ ಕ್ರಮ, ತೆಗೆದುಕೊಳ್ಳುತ್ತಿರುವ ಔಷಧಿಗಳು ಹಾಗೂ ಇತರ ಅಂಶಗಳ ಆಧಾರದ ಮೇಲೆ ಪರಿಣಾಮ ಬದಲಾಗಬಹುದು.

ಹೀಗಾಗಿ ಮೆಂತ್ಯೆ ಪುಡಿ ಸೇವಿಸುವುದರಿಂದ ಮಧುಮೇಹ ಸಂಪೂರ್ಣವಾಗಿ ಗುಣವಾಗುತ್ತದೆ ಎಂಬ ಹೇಳಿಕೆಯನ್ನು ನಂಬಬಾರದು. ಮೆಂತ್ಯೆಯನ್ನು ವೈದ್ಯರು ಸೂಚಿಸಿರುವ ಡಯಾಬಿಟಿಸ್‌ ಔಷಧಿಗಳಿಗೆ ಪರ್ಯಾಯವಾಗಿ ಬಳಸುವುದು ಸೂಕ್ತವಲ್ಲ. ಔಷಧಿ ತೆಗೆದುಕೊಳ್ಳುವುದನ್ನು ನಿಲ್ಲಿಸಿ ಕೇವಲ ಮೆಂತ್ಯೆಯನ್ನು ಅವಲಂಬಿಸುವುದು ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಲು ಕಾರಣವಾಗಬಹುದು.

ಮೆಂತ್ಯೆಯನ್ನು ಆಹಾರದ ಭಾಗವಾಗಿ ಬಳಸುವುದಾದರೆ ಕಡಿಮೆ ಪ್ರಮಾಣದಲ್ಲಿ ಅಡುಗೆಯಲ್ಲಿ ಸೇರಿಸಿಕೊಳ್ಳಬಹುದು. ಮೆಂತ್ಯೆ ಬೀಜಗಳನ್ನು ಸ್ವಲ್ಪ ಹುರಿದು ತಣ್ಣಗಾದ ಬಳಿಕ ಪುಡಿ ಮಾಡಿಕೊಂಡು ತರಕಾರಿ, ಬೇಳೆ ಅಥವಾ ಇತರ ಆಹಾರಗಳೊಂದಿಗೆ ಬಳಸಬಹುದು. ಮೆಂತ್ಯೆ ರುಚಿಯಲ್ಲಿ ಕಹಿಯಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವ ಅಗತ್ಯವಿಲ್ಲ.

ಒಟ್ಟಾರೆ, ಮಧುಮೇಹ ನಿಯಂತ್ರಣದಲ್ಲಿ ಮೆಂತ್ಯೆ ಕೆಲವು ಮಟ್ಟಿಗೆ ಸಹಾಯಕವಾಗಬಹುದಾದರೂ, ಅದು ಯಾವುದೇ ರೀತಿಯ ಮ್ಯಾಜಿಕ್‌ ಪರಿಹಾರವಲ್ಲ. ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ತೂಕ ನಿರ್ವಹಣೆ ಹಾಗೂ ವೈದ್ಯರು ಸೂಚಿಸಿರುವ ಔಷಧಿಗಳ ನಿಯಮಿತ ಸೇವನೆಯೇ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಪ್ರಮುಖವಾಗಿದೆ. ಮೆಂತ್ಯೆಯನ್ನು ಆಹಾರದ ಒಂದು ಭಾಗವಾಗಿ ಬಳಸಬಹುದು, ಆದರೆ ಅದರ ಮೇಲೆ ಮಾತ್ರ ಅವಲಂಬಿಸುವುದು ಸರಿಯಲ್ಲ.

ಅಮೆರಿಕ ಮಹಿಳೆ ಅತ್ಯಾಚಾರ ಕೇಸ್: ಹೋಂಸ್ಟೇ ಮಾಲೀಕನಿಗೆ ₹5 ಲಕ್ಷ ಪರಿಹಾರ ನೀಡದಿದ್ದಕ್ಕೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!

0

ಮಡಿಕೇರಿ: ಕೊಡಗು ಜಿಲ್ಲೆಯ ಕುಟ್ಟ ವ್ಯಾಪ್ತಿಯ ಹೋಂಸ್ಟೇಯೊಂದರಲ್ಲಿ ಅಮೆರಿಕದ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ಪೊನ್ನಪ್ಪ ಅವರನ್ನು ಕಾನೂನುಬಾಹಿರವಾಗಿ ಬಂಧಿಸಲಾಗಿದೆ ಎಂದು ಪರಿಗಣಿಸಿದ್ದ ಹೈಕೋರ್ಟ್, ಅವರಿಗೆ ₹5 ಲಕ್ಷ ಪರಿಹಾರ ನೀಡುವಂತೆ ಈ ಹಿಂದೆ ಆದೇಶಿಸಿತ್ತು. ಆದರೆ ನ್ಯಾಯಾಲಯದ ನಿರ್ದೇಶನದಂತೆ ಒಂದು ತಿಂಗಳೊಳಗೆ ಪರಿಹಾರ ಪಾವತಿಯಾಗಿಲ್ಲ ಎಂದು ಆರೋಪಿಸಿ ಪೊನ್ನಪ್ಪ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ಅಲ್ಲದೆ, ಮೂರು ವಾರಗಳೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಪೊಲೀಸರಿಗೆ ಮಾಹಿತಿ ನೀಡದ ಆರೋಪ

ಹೋಂಸ್ಟೇಯಲ್ಲಿ ಅತ್ಯಾಚಾರ ಪ್ರಕರಣ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿಲ್ಲ ಎಂಬ ಆರೋಪದಡಿ ಪೊನ್ನಪ್ಪ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ತಮ್ಮ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದ ಪೊನ್ನಪ್ಪ, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಹಾಗೂ ₹15 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

₹5 ಲಕ್ಷ ಪರಿಹಾರ ನೀಡಲು ಈ ಹಿಂದೆ ಆದೇಶ

ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿತ್ತು. ಹೋಂಸ್ಟೇ ಮಾಲೀಕರ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಪೀಠ, ರಾಜ್ಯ ಸರ್ಕಾರವು ಒಂದು ತಿಂಗಳೊಳಗೆ ₹5 ಲಕ್ಷ ಪರಿಹಾರ ಪಾವತಿಸುವಂತೆ ಆದೇಶಿಸಿತ್ತು.

ಆದರೆ ನಿಗದಿತ ಅವಧಿಯೊಳಗೆ ಪರಿಹಾರ ಪಾವತಿಯಾಗಿಲ್ಲ ಎಂದು ಆರೋಪಿಸಿ ಪೊನ್ನಪ್ಪ ಇದೀಗ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿರುವ ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಮೂರು ವಾರಗಳಲ್ಲಿ ಉತ್ತರ ಸಲ್ಲಿಸುವಂತೆ ಸೂಚಿಸಿದೆ.

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

0

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್ ಖಾತೆ ಮೂಲಕ ಈಗಾಗಲೇ ಉತ್ತರ ನೀಡಿದ್ದೇನೆ ಎಂದು ಹೇಳಿರುವ ತಂಗಡಗಿ, ‘ನಾನು ಯಾರ ತಂಟೆಗೂ ಹೋಗುವುದಿಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಕಲ್ಯಾಣ ಕರ್ನಾಟಕದ 79ನೇ ವರ್ಷದ ಉತ್ಸವದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಂಗಡಗಿ, ಜನಾರ್ದನ ರೆಡ್ಡಿ ಅವರೊಂದಿಗಿನ ವಾಕ್ಸಮರದ ಕುರಿತು ಪ್ರತಿಕ್ರಿಯಿಸಿದರು.

ಜನಾರ್ದನ ರೆಡ್ಡಿ ತಮ್ಮನ್ನು ‘ಲೇ’ ಎಂದು ಸಂಬೋಧಿಸಿದ್ದಾರೆ. ತಾವು ರೆಡ್ಡಿ ಅವರಿಗೆ ಅದೇ ರೀತಿಯ ಪದ ಬಳಸಿಲ್ಲ. ಬದಲಾಗಿ ತಮ್ಮ ಅಧಿಕೃತ ಎಕ್ಸ್ ಖಾತೆ ಮೂಲಕ ‘ಅಣ್ತಮ್ಮಾ’ ಎಂದೇ ಪ್ರತಿಕ್ರಿಯಿಸಿದ್ದೇನೆ ಎಂದು ತಂಗಡಗಿ ಹೇಳಿದ್ದಾರೆ.

ರೆಡ್ಡಿ ಅವರು ಎರಡು ದಿನಗಳ ಬಳಿಕ ತಾವು ಈ ಹಿಂದೆ ಹೊಗಳಿದ್ದ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ ಎಂದು ತಂಗಡಗಿ ಹೇಳಿದ್ದಾರೆ. ಇದೇ ವೇಳೆ, ಈ ಹಿಂದೆ ಆನೆಗೊಂದಿ ಉತ್ಸವದಲ್ಲಿ ಜನಾರ್ದನ ರೆಡ್ಡಿ ತಮ್ಮನ್ನು ಹೊಗಳಿರುವ ವಿಡಿಯೋವನ್ನೂ ಬಿಡುಗಡೆ ಮಾಡಲಿ ಎಂದು ಅವರು ಸವಾಲು ಹಾಕಿದ್ದಾರೆ.

ಜನಾರ್ದನ ರೆಡ್ಡಿ ಅವರು ತಮಗೆ ಮಾಡಿರುವ ಸಹಾಯದ ವಿಚಾರವನ್ನೂ ನೆನಪಿಸಿಕೊಳ್ಳಲಿ ಎಂದು ತಂಗಡಗಿ ಹೇಳಿದ್ದಾರೆ. ತಮ್ಮ ಜಮೀನು ಮಾರಾಟ ಮಾಡಿದ್ದು, ರೆಡ್ಡಿ ಅವರ ಆಪ್ತರೊಬ್ಬರು ಆ ಜಮೀನು ಪಡೆದು ಹಣ ನೀಡಿದ್ದರು ಎಂದು ತಂಗಡಗಿ ಹೇಳಿದ್ದಾರೆ.

ಈ ವಿಚಾರವನ್ನೇ ತಾವು ಹೇಳಿದ್ದಾಗಿ ಸ್ಪಷ್ಟಪಡಿಸಿರುವ ಅವರು, ಆದರೆ ಇದಕ್ಕೆ ಪ್ರತಿಯಾಗಿ ‘ಕನಕಗಿರಿ ಕ್ಷೇತ್ರದ ಜನರನ್ನು ನಾನೇ ಸಾಕಿದ್ದೇನೆ, ತಂಗಡಿಗೆ ನಾನೇ ಸಲಹಿದ್ದೇನೆ’ ಎಂಬ ರೀತಿಯಲ್ಲಿ ಹೇಳಿಕೆ ನೀಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.