Home Blog

‘ಕೌಸ್ತುಭ’ ಚಿತ್ರದ ಫಸ್ಟ್ ಲುಕ್ ರಿಲೀಸ್

0

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ನಟ ಪ್ರಮೋದ್ ಶೆಟ್ಟಿ ಅವರ ಜನ್ಮದಿನದ ಅಂಗವಾಗಿ ಬಹುನಿರೀಕ್ಷಿತ ‘ಕೌಸ್ತುಭ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಹೊಸ ಲುಕ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

ಈಗಾಗಲೇ ಹಲವು ಪೋಷಕ, ಖಳ ಹಾಗೂ ಪ್ರಧಾನ ಪಾತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪ್ರಮೋದ್ ಶೆಟ್ಟಿ ಅವರು ‘ಕೌಸ್ತುಭ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದ ಜನಪ್ರಿಯ ನಾಯಕ ನಟರ ಸಾಲಿಗೆ ಸೇರುವ ಭರವಸೆ ಇದೆ ಎಂದು ಚಿತ್ರದ ನಿರ್ದೇಶಕ ಸಿದ್ದು ವಜ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.

‘ಕೌಸ್ತುಭ’ ಒಂದು ಪತ್ತೇದಾರಿ ಕಥಾಹಂದರ ಹೊಂದಿರುವ ಚಿತ್ರವಾಗಿದ್ದು, ಕಥೆಯ ಹಲವು ಪ್ರಮುಖ ಅಂಶಗಳನ್ನು ಈಗಲೇ ಬಹಿರಂಗಪಡಿಸುವುದು ಸಾಧ್ಯವಿಲ್ಲ ಎಂದು ಚಿತ್ರತಂಡ ತಿಳಿಸಿದೆ. ಆದರೆ, ಚಿತ್ರದಲ್ಲಿನ ಪೊಲೀಸ್ ಪಾತ್ರ ಹಾಗೂ ಕ್ಲೈಮ್ಯಾಕ್ಸ್ ವಿಭಿನ್ನವಾಗಿರಲಿದೆ ಎಂದು ನಾಯಕ ನಟ ಪ್ರಮೋದ್ ಶೆಟ್ಟಿ ಹೇಳಿದ್ದಾರೆ.

ಇದುವರೆಗೆ ತಮ್ಮ ಹಲವು ಪಾತ್ರಗಳಲ್ಲಿ ಹಾಸ್ಯದ ಛಾಯೆಯನ್ನೂ ಪ್ರದರ್ಶಿಸಿದ್ದ ಪ್ರಮೋದ್ ಶೆಟ್ಟಿ, ಈ ಚಿತ್ರದಲ್ಲಿ ‘ಚಾಣಕ್ಯ’ ಎಂಬ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ದೃಶ್ಯಗಳಿದ್ದು, ಇದು ಪ್ರಮೋದ್ ಶೆಟ್ಟಿ ನಾಯಕ ನಟರಾಗಿ ಅಭಿನಯಿಸುತ್ತಿರುವ ಮೊದಲ ಕಮರ್ಷಿಯಲ್ ಚಿತ್ರವಾಗಿದೆ.

ನಿರ್ದೇಶಕ ಸಿದ್ದು ವಜ್ರಪ್ಪ ಅವರಿಗೆ ಇದು ಎರಡನೇ ಚಿತ್ರವಾಗಿದೆ. ಕಳೆದ ವರ್ಷ ಪ್ರಯೋಗಾತ್ಮಕ ಚಿತ್ರವೊಂದನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ಅವರು, ಇದೀಗ ‘ಕೌಸ್ತುಭ’ ಚಿತ್ರದ ಮೂಲಕ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾರೆ.

ಚಿತ್ರದ ಈಗಾಗಲೇ ಸುಮಾರು ಶೇ.60ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಒಂದು ಹಾಡನ್ನು ನಿರ್ದೇಶಕ ಸಿದ್ದು ವಜ್ರಪ್ಪ ಅವರೇ ರಚಿಸಿದ್ದಾರೆ. ಮತ್ತೊಂದು ಗೀತೆಯನ್ನು ಪ್ರಶಾಂತ್ ಬಾಗೂರು ಬರೆದಿದ್ದಾರೆ. ನಾಯಕನ ಪ್ರವೇಶಕ್ಕಾಗಿ ವಿಶೇಷ ಹಾಡೊಂದನ್ನು ಸಿದ್ಧಪಡಿಸಲಾಗುತ್ತಿದ್ದು, ಒಂದು ಗೀತೆಯನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಡಲಿದ್ದಾರೆ ಎನ್ನಲಾಗಿದೆ. ಚಿತ್ರಕ್ಕೆ ಡಾಸ್ ಮೋಡ್ ಸಂಗೀತ ನಿರ್ದೇಶನವಿದೆ.

ಚಿತ್ರದಲ್ಲಿ ಹಿರಿಯ ನಟ ಹಾಗೂ ನಿರ್ದೇಶಕ ಟಿ.ಎಸ್. ನಾಗಾಭರಣ, ರವಿಶಂಕರ್ ಗೌಡ, ಕಿರುತೆರೆ ನಟಿ ವಿದ್ಯಾ, ಕಡ್ಡಿಪುಡಿ ಚಂದ್ರು ಸೇರಿದಂತೆ ದೊಡ್ಡ ತಾರಾಗಣವೇ ಇದೆ. ‘ರಾಮಾ ರಾಮಾ ರೇ’ ಖ್ಯಾತಿಯ ನಟರಾಜ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರಕ್ಕೆ ಅರವಿಂದ್ ರಾಜ್ ಸಂಕಲನ, ದಿಲೀಪ್ ಎಂ. ರಾಜ್ ಸಾಹಸ ನಿರ್ದೇಶನವಿದೆ. ಎವಿಕೆ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ರಾಜೇಶ್ ಧನಪಾಲ್ ಬಂಡವಾಳ ಹೂಡಿದ್ದಾರೆ. ಚಿತ್ರದ ಪ್ರಚಾರ ಕಾರ್ಯವನ್ನು ಪಿಆರ್‌ಒ ರಮಿತ್ ಏಲಕ್ಕಿ, ಡಾ. ಪ್ರಭು ಗಂಜಿಹಾಳ ಹಾಗೂ ಡಾ. ವೀರೇಶ ಹಂಡಿಗಿ ನಿರ್ವಹಿಸುತ್ತಿದ್ದಾರೆ.

ನಗರದ ಮಧ್ಯಭಾಗದಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣ ಬೇಡ: ವಿಶ್ವನಾಥ ಖಾನಾಪೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ಮಧ್ಯಭಾಗದಲ್ಲಿರುವ 35 ಎಕರೆ ವಿಶಾಲವಾದ ವಕಾರಸಾಲು ಜಾಗದಲ್ಲಿ ಪಿಪಿಪಿ ಮಾದರಿಯ ಬೃಹತ್ ವಾಣಿಜ್ಯ ಸಂಕೀರ್ಣ ಹಾಗೂ ಅಂತರರಾಷ್ಟ್ರೀಯ ಮಟ್ಟದ ಬಿಸಿನೆಸ್ ಸೆಂಟರ್ ನಿರ್ಮಿಸುವ ಬದಲು, ಈ ಯೋಜನೆಯನ್ನು ನಗರದ ಹೊರವಲಯದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ಆಗ್ರಹಿಸಿದ್ದಾರೆ.

ಈಗಾಗಲೇ ಸಂಬಂಧಪಟ್ಟ ಪ್ರಾಧಿಕಾರ ರಚನೆಯಾಗಿದ್ದು, ಬೆಂಗಳೂರು ಹಾಗೂ ಗದಗದಲ್ಲಿ ನಡೆದ ಸಭೆಗಳಲ್ಲಿ ಯೋಜನೆ ಕುರಿತು ಚರ್ಚೆ ಹಾಗೂ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಬೃಹತ್ ವಾಣಿಜ್ಯ ಸಂಕೀರ್ಣವನ್ನು ನಗರದ ಮಧ್ಯಭಾಗದಲ್ಲಿ ನಿರ್ಮಿಸುವುದು ಸೂಕ್ತವಲ್ಲ. ನಗರದ ಹೊರವಲಯದಲ್ಲಿ ವಿಶಾಲ ಪ್ರದೇಶವನ್ನು ಗುರುತಿಸಿ ಅಲ್ಲಿ ಪಿಪಿಪಿ ಮಾದರಿಯಲ್ಲಿ ಆಧುನಿಕ ಬಿಸಿನೆಸ್ ಸೆಂಟರ್ ನಿರ್ಮಿಸಬೇಕು ಎಂದು ಅವರು ಜಿಲ್ಲಾಡಳಿತ ಹಾಗೂ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

35 ಎಕರೆ ಜಾಗದ ಬಗ್ಗೆ ಪುನರ್ ಪರಿಶೀಲನೆಗೆ ಆಗ್ರಹ

ನಗರದ ಮಧ್ಯಭಾಗದಲ್ಲಿರುವ 35 ಎಕರೆ ವಿಶಾಲ ಜಾಗವನ್ನು ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಹಾಗೂ ನಗರಸಭೆ ಪುನರ್ ಪರಿಶೀಲನೆ ಮಾಡಬೇಕು. ಈ ಜಾಗವನ್ನು ನಗರಸಭೆಗೆ ಹಸ್ತಾಂತರಿಸಿ, ಈ ಹಿಂದೆ ಇಲ್ಲಿಯೇ ವ್ಯಾಪಾರ ನಡೆಸುತ್ತಿದ್ದ ಹಳೆಯ ವ್ಯಾಪಾರಸ್ಥರಿಗೆ ಆದ್ಯತೆ ನೀಡಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ನಗರದ ಈ ಭಾಗವು ಹಲವು ದಶಕಗಳಿಂದ ಪ್ರಮುಖ ವ್ಯಾಪಾರ-ವಹಿವಾಟಿನ ಕೇಂದ್ರವಾಗಿತ್ತು. ಇಲ್ಲಿ ಸಿಮೆಂಟ್, ಕಬ್ಬಿಣ, ಗೊಬ್ಬರ, ಬೇಳೆಕಾಳು, ಹಾರ್ಡ್‌ವೇರ್, ಸಗಟು ಕಿರಾಣಿ, ಕಾಳುಕಡಿ, ವಾಹನಗಳ ಬಿಡಿಭಾಗಗಳ ಅಂಗಡಿಗಳು, ಗ್ಯಾರೇಜ್‌ಗಳು, ಶಾಮಿಯಾನ ಹಾಗೂ ಕೃಷಿಗೆ ಅಗತ್ಯವಿರುವ ವಿವಿಧ ವಾಣಿಜ್ಯ ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದವು.

ಆದರೆ ದಿಢೀರನೆ ಕಟ್ಟಡಗಳನ್ನು ತೆರವುಗೊಳಿಸಿದ್ದರಿಂದ ಹಲವು ಹಳೆಯ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದು, ತಮ್ಮ ವ್ಯಾಪಾರ-ವಹಿವಾಟನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಈ ಹಿಂದೆ ಅಲ್ಲಿಯೇ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಸ್ಥರ ಪ್ರತ್ಯೇಕ ಸಭೆ ಕರೆದು ಅವರ ಅಭಿಪ್ರಾಯ ಪಡೆದು, ಅವರಿಗೆ ಮರಳಿ ವ್ಯಾಪಾರ ನಡೆಸಲು ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.

ಹಳೆಯ ವ್ಯಾಪಾರಸ್ಥರನ್ನು ಕಡೆಗಣಿಸಬೇಡಿ

ನಗರದ ಹಳೆಯ ವ್ಯಾಪಾರಸ್ಥರ ಸಭೆ ನಡೆಸದೆ ಅಥವಾ ಅವರ ಸಮಗ್ರ ಅಭಿಪ್ರಾಯ ಪಡೆಯದೆ ಏಕಪಕ್ಷೀಯ ನಿರ್ಣಯ ಕೈಗೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ವಿಶೇಷವಾಗಿ ಈ ಹಿಂದೆ ಆ ಪ್ರದೇಶದಲ್ಲಿ ವ್ಯಾಪಾರ ಮಳಿಗೆಗಳನ್ನು ಹೊಂದಿರದವರನ್ನು ಸಭೆಯಲ್ಲಿ ಸೇರಿಸಿಕೊಂಡು ಒಮ್ಮತದ ನಿರ್ಣಯ ಕೈಗೊಂಡಿರುವುದು ಸರಿಯಲ್ಲ ಎಂದು ಜಿಲ್ಲಾ ವಿಕಾಸ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.

ಮೊದಲು ಅಲ್ಲಿ ವ್ಯಾಪಾರ ನಡೆಸುತ್ತಿದ್ದ ಎಲ್ಲ ವ್ಯಾಪಾರಸ್ಥರ ಸಭೆ ಆಯೋಜಿಸಿ, ಅವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಮರಳಿ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ನೀಡುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಹೊರವಲಯದಲ್ಲಿ ಬಿಸಿನೆಸ್ ಸೆಂಟರ್‌ಗೆ ಹೆಚ್ಚಿನ ಅವಕಾಶ

ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ವಿಶೇಷ ಅನುದಾನ ತಂದು, ನಗರದ ಹೊರವಲಯದಲ್ಲಿ ವಿಶಾಲ ಪ್ರದೇಶದಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣ ಹಾಗೂ ಬಿಸಿನೆಸ್ ಸೆಂಟರ್ ನಿರ್ಮಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ವೇಗ ಸಿಗಲಿದೆ ಎಂದು ವಿಶ್ವನಾಥ ಖಾನಾಪೂರ ಅಭಿಪ್ರಾಯಪಟ್ಟಿದ್ದಾರೆ.

ನಗರದ ಹೊರವಲಯದಲ್ಲಿ ಯೋಜನೆ ನಿರ್ಮಾಣವಾದರೆ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ದೊಡ್ಡ ಪ್ರಮಾಣದ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ದೊರೆಯಲಿದೆ. ಅಲ್ಲದೆ ಬಾಗಲಕೋಟೆ, ಕೊಪ್ಪಳ ಹಾಗೂ ಧಾರವಾಡ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳ ಜನರೂ ಸುಲಭವಾಗಿ ಆಗಮಿಸಿ ವ್ಯಾಪಾರ-ವಹಿವಾಟು ನಡೆಸಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಇದರಿಂದ ಗದಗ ಜಿಲ್ಲೆಯ ವ್ಯಾಪಾರ ವ್ಯವಸ್ಥೆಗೆ ಹೊಸ ಗುರುತು ದೊರೆಯುವುದರ ಜತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ನಗರದ ಮಧ್ಯಭಾಗದಲ್ಲಿ ಜನಸಾಮಾನ್ಯರ ವ್ಯಾಪಾರಕ್ಕೆ ಆದ್ಯತೆ

ಗದಗ ನಗರವು ಸೀಮಿತ ವಿಸ್ತೀರ್ಣ ಹೊಂದಿದ್ದು, ನಗರದ ಮಧ್ಯಭಾಗದಲ್ಲಿ ಕಡಿಮೆ ಅಂತರದಲ್ಲಿಯೇ ಪ್ರಮುಖ ವಾಣಿಜ್ಯ ಪ್ರದೇಶಗಳು ನೆಲೆಗೊಂಡಿವೆ. ಹೀಗಾಗಿ ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ದೈನಂದಿನ ಅಗತ್ಯ ವಸ್ತುಗಳು ಸುಲಭವಾಗಿ ದೊರೆಯುವಂತಹ ಮಾರುಕಟ್ಟೆ ಹಾಗೂ ವ್ಯಾಪಾರ ಮಳಿಗೆಗಳನ್ನು ನಗರದೊಳಗೆ ಉಳಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.

ನಗರದ ಜನಸಾಮಾನ್ಯರಿಗೆ ಅನುಕೂಲವಾಗುವ ಸಣ್ಣ ಮತ್ತು ಮಧ್ಯಮ ವ್ಯಾಪಾರ ಮಳಿಗೆಗಳಿಗೆ ನಗರದ ಮಧ್ಯಭಾಗದಲ್ಲಿಯೇ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಬೃಹತ್ ಪ್ರಮಾಣದ ಪಿಪಿಪಿ ಯೋಜನೆ ಹಾಗೂ ಅಂತರರಾಷ್ಟ್ರೀಯ ಮಟ್ಟದ ಬಿಸಿನೆಸ್ ಸೆಂಟರ್‌ಗಳನ್ನು ನಗರದ ಹೊರವಲಯದಲ್ಲಿ ನಿರ್ಮಿಸುವ ಮೂಲಕ ನಗರ ಸಂಚಾರದ ಮೇಲಿನ ಒತ್ತಡವನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ಈ ಕುರಿತು ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ನೇತೃತ್ವದಲ್ಲಿ ಪ್ರಭು ಜಂಗಮನಿ, ಬಸವರಾಜ ದೇಗುಲ, ಮಲ್ಲಿಕಾರ್ಜುನ ಕುರ್ತಕೋಟಿ, ಪರಶುರಾಮ ನರಗುಂದ, ರಾಜು ನರಗುಂದ, ಆನಂದ ಕಬಾಡಿ, ರಾಜು ಮೇರವಾಡೆ ಸೇರಿದಂತೆ ಹಲವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ಬೃಹತ್ ಪಿಪಿಪಿ ಮಾದರಿಯ ವಾಣಿಜ್ಯ ಸಂಕೀರ್ಣ ಹಾಗೂ ಬಿಸಿನೆಸ್ ಸೆಂಟರ್ ನಗರದ ಹೊರವಲಯದಲ್ಲಿ ನಿರ್ಮಿಸಿದರೆ ಸುಗಮ ಸಂಚಾರ, ವಿಶಾಲ ಪಾರ್ಕಿಂಗ್ ಮತ್ತು ದೊಡ್ಡ ಪ್ರಮಾಣದ ವ್ಯಾಪಾರಕ್ಕೆ ಅನುಕೂಲವಾಗಲಿದೆ. ನಗರದ ಮಧ್ಯಭಾಗದಲ್ಲಿರುವ ಜಾಗದಲ್ಲಿ ಈ ಹಿಂದೆ ವ್ಯಾಪಾರ ನಡೆಸುತ್ತಿದ್ದ ಹಳೆಯ ವ್ಯಾಪಾರಸ್ಥರಿಗೆ ಆದ್ಯತೆ ನೀಡಿ, ಅವರ ಬದುಕು ಮತ್ತು ವ್ಯಾಪಾರ-ವಹಿವಾಟಿಗೆ ಸೂಕ್ತ ರಕ್ಷಣೆ ನೀಡಬೇಕು.

— ವಿಶ್ವನಾಥ ಖಾನಾಪೂರ, ಅಧ್ಯಕ್ಷರು, ಗದಗ ಜಿಲ್ಲಾ ವಿಕಾಸ ವೇದಿಕೆ

ಪ್ರಕಲ್ಪ ಶಾಲೆಯಲ್ಲಿ ಗುಂಪು ಮಟ್ಟದ ಕ್ರೀಡಾಕೂಟದ ಸಂಭ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಆನಂದ ಆಶ್ರಮ ರಸ್ತೆಯ ಈಶ್ವರ ಬಡಾವಣೆಯಲ್ಲಿರುವ ಪ್ರಕಲ್ಪ ಹೈಯರ್ ಪ್ರೈಮರಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ೨೦೨೬-೨೭ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಗುಂಪು ಮಟ್ಟದ ಕ್ರೀಡಾಕೂಟವನ್ನು ಉತ್ಸಾಹ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು.

ಶಾಲೆಯ ಸಂಸ್ಥಾಪಕ ಹಾಗೂ ಅಧ್ಯಕ್ಷ ಎಸ್.ವಿ. ಹುಬ್ಬಳ್ಳಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಅತ್ಯಗತ್ಯವಾಗಿದ್ದು, ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಜವಾಬ್ದಾರಿ, ತಂಡದ ಮನೋಭಾವ ಹಾಗೂ ಗೆಲುವು-ಸೋಲನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ಬೆಳೆಸುತ್ತವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ಪಿ.ಎಸ್. ಹುಬ್ಬಳ್ಳಿ, ಮಾರ್ಗದರ್ಶಕಿ ಶ್ರೀಮತಿ ಎಸ್.ಎಸ್. ಹುಬ್ಬಳ್ಳಿ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮುಕ್ತಾ ಭಜಂತ್ರಿ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪ್ರವೀಣಾ ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಲೆಮನ್ ಅಂಡ್ ಸ್ಪೂನ್ ರೇಸ್, ಗೋಣಿಚೀಲ ಜಿಗಿತ, ೧೦೦ ಮೀಟರ್ ಮತ್ತು ೨೦೦ ಮೀಟರ್ ಓಟ, ಕಬಡ್ಡಿ, ಖೋ-ಖೋ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಶಾಲಾ ಮೈದಾನದಲ್ಲಿ ಕ್ರೀಡೋತ್ಸವದ ಸಂಭ್ರಮ ಮನೆ ಮಾಡಿತ್ತು.

ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರ ಸಹಕಾರದೊಂದಿಗೆ ಕ್ರೀಡಾಕೂಟ ಯಶಸ್ವಿಯಾಗಿ ನೆರವೇರಿತು.

ನರೇಗಲ್ಲದಲ್ಲಿ ಕಲುಷಿತ ನೀರು ಪೂರೈಕೆ: ನೀರಿನಲ್ಲಿ ಕೀಟಗಳು, ಜನರಲ್ಲಿ ಆತಂಕ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣ ಪಂಚಾಯಿತಿಯಿಂದ ನರೇಗಲ್ಲ ಪಟ್ಟಣ ಸೇರಿದಂತೆ ಕೋಡಿಕೊಪ್ಪ, ಕೋಚಲಾಪೂರ, ತೋಟಗಂಟಿ, ದ್ಯಾಂಪೂರ ಹಾಗೂ ಮಲ್ಲಾಪೂರ ಗ್ರಾಮಗಳಿಗೆ ಪ್ರತಿನಿತ್ಯ ಸರಬರಾಜು ಮಾಡಲಾಗುತ್ತಿರುವ ಕುಡಿಯುವ ನೀರು ಕಲುಷಿತಗೊಂಡಿದ್ದು, ಕೆಂಪು ಬಣ್ಣದ ಕೊಳಕು ನೀರಿನಲ್ಲಿ ಸಣ್ಣ ಸಣ್ಣ ಕೀಟಗಳು ಕಾಣಸಿಗುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಕಳೆದ ಒಂದು ವಾರದಿಂದ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು ಮಾಡಲಾಗುತ್ತಿದ್ದು, ಸಾರ್ವಜನಿಕರು ಪಟ್ಟಣ ಪಂಚಾಯಿತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಳಕು ನೀರಿನಿಂದ ಮನೆಗಳಲ್ಲಿರುವ ನೀರು ಶುದ್ಧೀಕರಣ ಫಿಲ್ಟರ್‌ಗಳೇ ಹಾಳಾಗುತ್ತಿವೆ. ಫಿಲ್ಟರ್‌ಗಳನ್ನೇ ಹಾಳು ಮಾಡುವಷ್ಟು ಕಲುಷಿತ ನೀರು ಸರಬರಾಜಾಗುತ್ತಿದ್ದರೆ, ಯಾವುದೇ ಫಿಲ್ಟರ್ ವ್ಯವಸ್ಥೆ ಇಲ್ಲದೆ ಇದೇ ನೀರನ್ನು ಕುಡಿಯುವ ಜನಸಾಮಾನ್ಯರ ಪರಿಸ್ಥಿತಿ ಏನು ಎಂದು ನಾಗರಿಕರು ಪ್ರಶ್ನಿಸಿದ್ದಾರೆ.

ನೀರಿನಲ್ಲಿ ಬಾಲಹುಳು ಸೇರಿದಂತೆ ಸಣ್ಣ ಸಣ್ಣ ಕೀಟಗಳು ಕಾಣಸಿಗುತ್ತಿದ್ದು, ಜೀವಭಯದಲ್ಲೇ ನೀರು ಕುಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಗುಣಮಟ್ಟವನ್ನು ತಕ್ಷಣವೇ ಪರಿಶೀಲಿಸಿ, ಕಲುಷಿತ ನೀರು ಸರಬರಾಜಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಜಿಗಳೂರು ಸಮೀಪ ನಿರ್ಮಿಸಿರುವ ನೀರು ಶುದ್ಧೀಕರಣ ಘಟಕ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಅನುಮಾನವೂ ಸಾರ್ವಜನಿಕರಲ್ಲಿ ಮೂಡಿದೆ. ಕಲುಷಿತ ನೀರು ಸರಬರಾಜಾಗುತ್ತಿರುವುದಕ್ಕೆ ಹೊಣೆ ಯಾರು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಟ್ಟಣದ ಜನರಿಗೆ ಕನಿಷ್ಠ ಮೂಲಸೌಕರ್ಯವನ್ನೇ ಸಮರ್ಪಕವಾಗಿ ಒದಗಿಸಲು ಸಾಧ್ಯವಾಗದಿದ್ದರೆ, ಇನ್ನುಳಿದ ಅಭಿವೃದ್ಧಿ ಕಾರ್ಯಗಳನ್ನು ಯಾವ ರೀತಿ ಕೈಗೊಳ್ಳುತ್ತಾರೆ ಎಂದು ನಾಗರಿಕರು ಪ್ರಶ್ನಿಸಿದ್ದಾರೆ.

ಪಟ್ಟಣದಲ್ಲಿ 24×7 ಕುಡಿಯುವ ನೀರು ಸರಬರಾಜು ಯೋಜನೆ ನೆನೆಗುದಿಗೆ ಬಿದ್ದು ವರ್ಷಗಳೇ ಕಳೆದಿವೆ. ನೀರು ಸರಬರಾಜು ಯೋಜನೆಗಾಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವು ರಸ್ತೆಗಳನ್ನು ಅಗೆದು ಹಾಕಲಾಗಿದ್ದು, ರಸ್ತೆಗಳು ಗುಂಡಿಮಯವಾಗಿವೆ ಎಂಬ ಆರೋಪವೂ ಕೇಳಿಬಂದಿದೆ.

ಕುಡಿಯುವ ನೀರಿನ ಸಮಸ್ಯೆ ಹಾಗೂ ರಸ್ತೆ ಗುಂಡಿಗಳ ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದರೆ, ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ನರೇಗಲ್ಲ ಪಟ್ಟಣ ಪಂಚಾಯಿತಿಯ ನೀರು ಸರಬರಾಜು ಸಿಬ್ಬಂದಿ ಶಂಕ್ರಪ್ಪ ದೊಡ್ಡಣ್ಣವರ, ಜಿಗಳೂರು ಕೆರೆಯಲ್ಲಿ ನೀರಿನ ಅಭಾವ ಎದುರಾಗಿದ್ದು, ಕೆರೆಯ ತಳಮಟ್ಟದ ನೀರನ್ನು ಸರಬರಾಜು ಮಾಡುತ್ತಿರುವುದರಿಂದ ನೀರು ಕಲುಷಿತಗೊಂಡಿದೆ. ಕೆರೆಗೆ ಸಮರ್ಪಕವಾಗಿ ನೀರು ಬಂದ ತಕ್ಷಣ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ಪಟ್ಟಣ ಪಂಚಾಯಿತಿಯಿಂದ ಸರಬರಾಜಾಗುತ್ತಿರುವ ನೀರು ಕುಡಿಯಲು ಯೋಗ್ಯವಾಗಿಲ್ಲ. ನೀರಿನಲ್ಲಿ ಬಾಲಹುಳು ಸೇರಿದಂತೆ ಸಣ್ಣ ಸಣ್ಣ ಕೀಟಗಳು ಕಾಣಸಿಗುತ್ತಿವೆ. ಜೀವಭಯದಲ್ಲೇ ನೀರು ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಗುಣಮಟ್ಟವನ್ನು ತಕ್ಷಣ ಪರಿಶೀಲಿಸಿ, ಕಲುಷಿತ ನೀರು ಸರಬರಾಜಾಗದಂತೆ ಕ್ರಮ ಕೈಗೊಳ್ಳಬೇಕು.

— ಅನೀತಾ ವೈದ್ಯಮಠ, ನಿವಾಸಿ, ನರೇಗಲ್ಲ

ತಂಬಾಕು ನಿಯಂತ್ರಣಕ್ಕೆ ಗದಗ ಜಿಲ್ಲೆಯಲ್ಲಿ ಮತ್ತಷ್ಟು ಕಠಿಣ ಕ್ರಮ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಾದ್ಯಂತ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-೨೦೦೩ರ ಪರಿಣಾಮಕಾರಿ ಅನುಷ್ಠಾನಕ್ಕೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ತಂಬಾಕು ನಿಯಂತ್ರಣ ಹಾಗೂ ಜಾಗೃತಿ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಸಭೆಗೆ ಸ್ವಾಗತಿಸಿದರು. ಜಿಲ್ಲಾ ಕಾರ್ಯಕ್ರಮಾಧಿಕಾರಿ ಹಾಗೂ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಥೋಡ್ ಅವರು ಜಿಲ್ಲೆಯಲ್ಲಿನ ತಂಬಾಕು ನಿಯಂತ್ರಣ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಎಪ್ರಿಲ್ ೨೦೨೬ರಿಂದ ಇಲ್ಲಿಯವರೆಗೆ ಜಿಲ್ಲೆಯ ೬೧ ಶಾಲಾ-ಕಾಲೇಜುಗಳಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ೨೫ ದಾಳಿ ನಡೆಸಿ, ೧೮೦ ಪ್ರಕರಣ ದಾಖಲಿಸಿ, ರೂ. ೮೪,೯೫೦ ದಂಡ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ೧,೪೪೦ ತಂಬಾಕು ವ್ಯಸನಿಗಳಿಗೆ ಆಪ್ತ ಸಮಾಲೋಚನೆ ನಡೆಸಲಾಗಿದೆ. ಸಮುದಾಯ ಮಟ್ಟದಲ್ಲಿಯೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಸಭೆಯಲ್ಲಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಮಾರಾಟ ಹಾಗೂ ಬಳಕೆಯನ್ನು ಕಟ್ಟುನಿಟ್ಟಾಗಿ ತಡೆಯುವುದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದು, ಕಾನೂನುಬಾಹಿರ ತಂಬಾಕು ಜಾಹೀರಾತುಗಳಿಗೆ ಕಡಿವಾಣ ಹಾಕುವುದು ಹಾಗೂ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತವಾಗಿಸಲು ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.

ತಂಬಾಕು ಮಾರಾಟಗಾರರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆಯಬೇಕು. ಅಂಗಡಿಕಾರರು ಹಾಗೂ ಸಾರ್ವಜನಿಕ ಸ್ಥಳಗಳ ಮಾಲೀಕರು ತಂಬಾಕು ನಿಷೇಧ ಮತ್ತು ೨೧ ವರ್ಷದೊಳಗಿನವರಿಗೆ ತಂಬಾಕು ಮಾರಾಟ ನಿಷೇಧ ಕುರಿತ ನಾಮಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸೂಚಿಸಲಾಯಿತು. ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳುವಂತೆಯೂ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ನಗರಸಭೆ ಸಿಬ್ಬಂದಿ, ಹೋಟೆಲ್ ಮಾಲೀಕರ ಸಂಘದ ಪ್ರತಿನಿಧಿಗಳು ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಉಪಸ್ಥಿತರಿದ್ದರು.

ತಂಬಾಕು ವ್ಯಸನದಿಂದ ವ್ಯಕ್ತಿಯ ಆರೋಗ್ಯದ ಜತೆಗೆ ಕುಟುಂಬ ಮತ್ತು ಸಮಾಜದ ಮೇಲೂ ದುಷ್ಪರಿಣಾಮ ಉಂಟಾಗುತ್ತದೆ. ಎಲ್ಲ ಇಲಾಖೆಗಳು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸಿ ಗದಗ ಜಿಲ್ಲೆಯನ್ನು ತಂಬಾಕು ಮುಕ್ತ ಹಾಗೂ ಆರೋಗ್ಯಯುತ ಜಿಲ್ಲೆಯನ್ನಾಗಿ ರೂಪಿಸಬೇಕು.

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ಸೆ. 4ರಂದು ಕಾಶೀವಿಶ್ವನಾಥನ ಜಾತ್ರಾ ಮಹೋತ್ಸವಕ್ಕೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗದ ಕಾಶೀ ವಿಶ್ವನಾಥ ನಗರದ ಶ್ರೀ ಕಾಶೀವಿಶ್ವನಾಥನ ಜಾತ್ರಾ ಮಹೋತ್ಸವ, ದುರ್ಗಾದೇವಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ೩೪ನೇ ವರ್ಷದ ಸಾಮೂಹಿಕ ವಿವಾಹ ಸೇರಿದಂತೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೆ. ೪ರಿಂದ ೬ರವರೆಗೆ ಜರುಗಲಿವೆ.

ಸೆ. ೪ರಂದು ಮಧ್ಯಾಹ್ನ ಸಾಮೂಹಿಕ ವಿವಾಹ, ಧರ್ಮಸಭೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ ಶ್ರೀ ಕಾಶೀವಿಶ್ವನಾಥನ ಮಹಾರಥೋತ್ಸವ ಜರುಗಲಿದೆ. ಸೆ. ೫ರಂದು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಸನ್ಮಾನ, ಸಾಂಸ್ಕೃತಿಕ ಹಾಗೂ ಪಾರಿತೋಷಕ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಸೆ. ೬ರಂದು ಸನ್ಮಾನ ಹಾಗೂ ರಸಮಂಜರಿ ಕಾರ್ಯಕ್ರಮದೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಮೂರು ದಿನಗಳ ಕಾರ್ಯಕ್ರಮಗಳಲ್ಲಿ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸುವರು ಎಂದು ಜಾತ್ರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೊಸ ರೂಪದಲ್ಲಿ ಮಿನುಗಿದ ಐತಿಹಾಸಿಕ ರೋಟರಿ ಸರ್ಕಲ್

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮಧ್ಯಭಾಗದಲ್ಲಿರುವ ಐತಿಹಾಸಿಕ ರೋಟರಿ ಸರ್ಕಲ್‌ಗೆ ರೋಟರಿ ಕ್ಲಬ್ ಗದಗ-ಬೆಟಗೇರಿಯ ಸದಸ್ಯರು ನವೀಕರಣ ಕಾರ್ಯ ಕೈಗೊಂಡು ಹೊಸ ರೂಪ ನೀಡಿದ್ದಾರೆ.

ನವೀಕರಣ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರಾದ ರೊ. ಡಾ. ರಾಜಶೇಖರ ಎಸ್. ಬಳ್ಳಾರಿ, 1970ರ ದಶಕದಲ್ಲಿ ರೋಟರಿ ಸಂಸ್ಥೆ ಗದಗ-ಬೆಟಗೇರಿಯು ಕೈಗೊಂಡಿದ್ದ ಸಾಮಾಜಿಕ ಸೇವಾ ಕಾರ್ಯಗಳನ್ನು ಗುರುತಿಸಿ ನಗರದ ಮಧ್ಯಭಾಗದಲ್ಲಿರುವ ಈ ವೃತ್ತಕ್ಕೆ ‘ರೋಟರಿ ಸಂಸ್ಥೆ ಗದಗ-ಬೆಟಗೇರಿ ಸರ್ಕಲ್’ ಎಂದು ನಾಮಕರಣ ಮಾಡಲಾಗಿತ್ತು ಎಂದು ತಿಳಿಸಿದರು.

ಕಾಲಾನಂತರ ಈ ವೃತ್ತವು ‘ರೋಟರಿ ಸರ್ಕಲ್’ ಎಂದೇ ಜನಪ್ರಿಯತೆ ಪಡೆದುಕೊಂಡಿತು. ಈ ಸರ್ಕಲ್ ನಿರ್ಮಾಣಕ್ಕೆ ಸಂಸ್ಥೆಯ ಮಾಜಿ ಅಧ್ಯಕ್ಷರಾದ ದಿವಂಗತ ವಿ.ಆರ್. ಮಾಳೆಕೊಪ್ಪಮಠ ಅವರು ಪ್ರಮುಖ ಕೊಡುಗೆ ನೀಡಿದ್ದರು ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ಸರ್ಕಲ್‌ನ ಮಹತ್ವವನ್ನು ಉಳಿಸಿಕೊಂಡು ಅದರ ನವೀಕರಣ ಕಾರ್ಯ ಕೈಗೊಂಡಿರುವುದು ಸಂತಸದ ಸಂಗತಿಯಾಗಿದೆ. ಈ ಕಾರ್ಯದಲ್ಲಿ ಶ್ರಮಿಸಿದ ಎಲ್ಲ ರೋಟರಿ ಸದಸ್ಯರಿಗೆ ಅವರು ಶುಭಾಶಯ ತಿಳಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಗದಗ-ಬೆಟಗೇರಿಯ ಅಧ್ಯಕ್ಷರಾದ ರೊ. ಡಾ. ಪ್ರದೀಪ ಉಗಲಾಟ, ಕಾರ್ಯದರ್ಶಿ ರೊ. ಅಕ್ಷಯ ಶೆಟ್ಟಿ, ಸದಸ್ಯರಾದ ರೊ. ಬಾಲಕೃಷ್ಣ ಕಾಮತ್, ರೊ. ಚನ್ನವೀರಪ್ಪ ಹುಣಶಿಕಟ್ಟಿ, ರೊ. ಚಂದ್ರಮೌಳಿ ಜಾಲಿ, ರೊ. ಎಚ್.ಎಸ್. ಪಾಟೀಲ, ರೊ. ಶ್ರೀಧರ ಧರ್ಮಾಯತ, ರೊ. ವಿಶ್ವನಾಥ ಯಳಮಲಿ, ರೊ. ಸುರೇಶ ಕುಂಬಾರ, ರೊ. ಶ್ರೀಧರ ಸುಲ್ತಾನಪುರ, ರೊ. ಡಾ. ಧನೇಶ ದೇಸಾಯಿ, ರೊ. ಡಾ. ಪ್ರಕಾಶ ಡಿ. ಕೊಲೋಳಗಿ, ರೊ. ಡಾ. ಉಮೇಶ ಪುರದ, ರೊ. ಎನ್.ಡಿ. ಜೈನ್, ರೊ. ಎಸ್.ಎಸ್. ಹೊಸಳ್ಳಿಮಠ, ರೊ. ಮಹಾಂತೇಶ ಬಾತಾಖಾನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹೆಬ್ಬಾಳದಲ್ಲಿ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿ; 14 ಸಾವಿರ ಲೀಟರ್ ಹಾಲು ಮಣ್ಣುಪಾಲು!

0

ಬೆಂಗಳೂರು: ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದು ಮಣ್ಣುಪಾಲಾದ ಘಟನೆ ಬೆಂಗಳೂರಿನ ಹೆಬ್ಬಾಳ ಸಮೀಪದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟ್ಯಾಂಕರ್‌ ಕೆಎಂಎಫ್‌ ಹಾಲು ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಾಹಿತಿ ತಿಳಿದು ಸ್ಥಳಕ್ಕೆ ಸಂಜಯನಗರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ನಮ್ಮ ಸ್ವತ್ತು ನಮಗೆ ಕೊಡಿಸಿ; ಪೊಲೀಸರ ವಿರುದ್ಧ ಮಹಿಳೆಯ ಆಕ್ರೋಶ

0

ಗದಗ: 2024ರಲ್ಲಿ ನಡೆದಿದ್ದ ಭಾರೀ ಕಳ್ಳತನ ಪ್ರಕರಣದಲ್ಲಿ ಕಳ್ಳತನವಾದ ಸ್ವತ್ತು ಪತ್ತೆಯಾದರೂ ಅದನ್ನು ಕುಟುಂಬಕ್ಕೆ ಮರಳಿಸಿಲ್ಲ ಎಂದು ಮಹಿಳೆಯೊಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಗದಗ ನಗರದಲ್ಲಿ ಸಿಪಿಐ ಶಿವಯೋಗಿ ಅವರ ವಿರುದ್ಧ ಮಹಿಳೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಆ ಆಕ್ರೋಶಕ್ಕೆ ಕಾರಣವೇನು ಎಂಬ ಕುರಿತು ತುಳಜಾಬಾಯಿ ಅವರು ತಮ್ಮ ಆರೋಪಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ.

ಗದಗ ನಗರದ ಮುಳಗುಂದ ರಸ್ತೆಯ ಅಂಜುಮನ್ ಕಾಲೇಜು ಎದುರಿನ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ 2024ರ ಫೆಬ್ರುವರಿ 28ರಂದು ಹಾಡಹಗಲೇ ಕಳ್ಳತನ ನಡೆದಿತ್ತು ಎಂದು ತುಳಜಾಬಾಯಿ ತಿಳಿಸಿದ್ದಾರೆ. ಕಳ್ಳರು ಮನೆಯಲ್ಲಿದ್ದ ಸುಮಾರು ಒಂದು ಕೆಜಿ ಅಷ್ಟು ಚಿನ್ನ, ಒಂದು ಕೆಜಿ ಬೆಳ್ಳಿ ಹಾಗೂ 36 ಲಕ್ಷ ರೂ. ನಗದು ದೋಚಿಕೊಂಡು ಹೋಗಿದ್ದರು ಎಂದು ಅವರು ದೂರಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ಗದಗ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಆಗಿದ್ದ ಶಿವಯೋಗಿ ಅವರು ತನಿಖೆಯ ಉಸ್ತುವಾರಿ ವಹಿಸಿದ್ದರು ಎಂದು ಕುಟುಂಬ ತಿಳಿಸಿದೆ.

ಸ್ವತ್ತು ಸಿಕ್ಕಿದೆ ಎಂದು ಹೇಳಿದ್ದರು:

ಕಳ್ಳತನ ನಡೆದ ಕೆಲ ದಿನಗಳ ನಂತರ ಸ್ವತ್ತು ಪತ್ತೆಯಾಗಿದೆ, ಅದನ್ನು ಹಿಂದಿರುಗಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದರು ಎಂದು ತುಳಜಾಬಾಯಿ ಆರೋಪಿಸಿದ್ದಾರೆ. ಪ್ರಕರಣದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ತಮ್ಮನ್ನು ಸೂಚಿಸಲಾಗಿತ್ತು ಎಂದೂ ಅವರು ಆರೋಪಿಸಿದ್ದಾರೆ. ಆದರೆ, ಪ್ರಕರಣ ನಡೆದು ಸಾಕಷ್ಟು ಸಮಯ ಕಳೆದರೂ ಕಳ್ಳತನವಾದ ಸ್ವತ್ತಿನ ಪೈಕಿ ಯಾವುದನ್ನೂ ತಮಗೆ ಹಿಂದಿರುಗಿಸಲಾಗಿಲ್ಲ ಎಂದು ಅವರು ದೂರಿದ್ದಾರೆ.

ನಕಲಿ ಸಹಿ ಆರೋಪ:

ಪ್ರಕರಣದಲ್ಲಿ ಸ್ವತ್ತು ಪತ್ತೆಯಾಗಿಲ್ಲ ಎಂದು ತಿಳಿಸಿ ನ್ಯಾಯಾಲಯಕ್ಕೆ ಸಿ-ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಆರೋಪಿಸಿರುವ ತುಳಜಾಬಾಯಿ, ಆ ವರದಿಗೆ ತಮ್ಮ ನಕಲಿ ಸಹಿ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.

ಕಳ್ಳತನವಾದ ಚಿನ್ನಾಭರಣಗಳ ಖರೀದಿ ಬಿಲ್ ಹಾಗೂ ಇತರ ದಾಖಲೆಗಳನ್ನು ಪೊಲೀಸರಿಗೆ ನೀಡಲಾಗಿದೆ. ಆದರೂ ತಮ್ಮ ಸ್ವತ್ತು ಮರಳಿ ದೊರೆತಿಲ್ಲ ಎಂದು ಕುಟುಂಬ ಆರೋಪಿಸಿದೆ.

ಇಂದಿನ ಮಾರುಕಟ್ಟೆ ಮೌಲ್ಯದಲ್ಲಿ ಕಳ್ಳತನವಾದ ಚಿನ್ನ, ಬೆಳ್ಳಿ ಹಾಗೂ ನಗದು ಸೇರಿ ಸುಮಾರು ಎರಡು ಕೋಟಿ ರೂ. ಮೌಲ್ಯದ ಸ್ವತ್ತು ಕಳೆದುಕೊಂಡಿದ್ದೇವೆ ಎಂದು ಕುಟುಂಬ ಹೇಳಿಕೊಂಡಿದೆ.

ಗೃಹ ಸಚಿವರ ಮೊರೆ:

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ನ್ಯಾಯ ದೊರೆತಿಲ್ಲ ಎಂದು ಆರೋಪಿಸಿರುವ ತುಳಜಾಬಾಯಿ ಮತ್ತು ಅವರ ಪುತ್ರ ವಿನಾಯಕ, ಇದೀಗ ಗೃಹ ಸಚಿವರ ಮೊರೆ ಹೋಗಿದ್ದಾರೆ.

ಕಳ್ಳತನ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು. ಕಳ್ಳತನವಾದ ಸ್ವತ್ತು ನಿಜವಾಗಿಯೂ ಪತ್ತೆಯಾಗಿತ್ತೇ ಎಂಬುದನ್ನು ಪರಿಶೀಲಿಸಬೇಕು. ತಮ್ಮ ಆರೋಪಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಹಿಳೆ ಹಾಗೂ ಅವರ ಕುಟುಂಬ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಬೇಕಿದೆ.

ನಮ್ಮ ಮನೆ ಕಳ್ಳತನವಾದ ಬಳಿಕ ಸ್ವತ್ತು ಸಿಕ್ಕಿದೆ ಎಂದು ಪೊಲೀಸರು ಹೇಳಿದ್ದರು. ಆದರೆ, ಇದುವರೆಗೆ ಯಾವುದೇ ಸ್ವತ್ತು ನಮಗೆ ಮರಳಿ ದೊರೆತಿಲ್ಲ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಬೇಕು” ಎಂದು ತುಳಜಾಬಾಯಿ ಒತ್ತಾಯಿಸಿದ್ದಾರೆ.

ಯಡಿಯೂರು ಕೆರೆ ಭೂವಿವಾದ: ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್!

0

ನವದೆಹಲಿ: ಬೆಂಗಳೂರಿನ ಯಡಿಯೂರು ಕೆರೆ ಪ್ರದೇಶದ ಭೂವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಭೂಮಿಯ ಸರ್ವೆ ನಂಬರ್‌ಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸಲು ಕಂದಾಯ ಅಧಿಕಾರಿಗಳಿಗೆ ನೀಡಿದ್ದ ಅನುಮತಿಯನ್ನು ಕಾನೂನುಬಾಹಿರ ಎಂದು ಹೇಳಿರುವ ಸುಪ್ರೀಂ ಕೋರ್ಟ್, 2014ರಲ್ಲಿ ನೀಡಲಾಗಿದ್ದ ಹೊಸ ತನಿಖೆಯ ನೋಟಿಸ್‌ನ್ನೂ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್ ಸಚ್‌ದೇವ್ ಅವರ ಪೀಠ ಈ ತೀರ್ಪು ನೀಡಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಸೆಕ್ಷನ್ 56ರ ಅಡಿಯಲ್ಲಿ ಮರುಪರಿಶೀಲನಾ ಅಧಿಕಾರವನ್ನು ಚಲಾಯಿಸಲು ಮೂರು ವರ್ಷಗಳ ಶಾಸನಬದ್ಧ ಕಾಲಮಿತಿ ಇದೆ. ಈ ಅವಧಿ ಮುಗಿದ ಬಳಿಕ ಅಧಿಕಾರಿಗಳು ಮರುಪರಿಶೀಲನಾ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

2014ರಲ್ಲಿ ಆರಂಭವಾಗಿದ್ದ ವಿವಾದ:

ಯಡಿಯೂರು ಕೆರೆ ಒತ್ತುವರಿಯಾಗಿರುವ ಕುರಿತು ಬಂದ ದೂರಿನ ಆಧಾರದ ಮೇಲೆ ಕಂದಾಯ ದಾಖಲೆಗಳ ಜಂಟಿ ನಿರ್ದೇಶಕರು ಹಾಗೂ ನೋಂದಣಾಧಿಕಾರಿಗಳು 2014ರಲ್ಲಿ ಭೂ ಕಂದಾಯ ಕಾಯ್ದೆಯ ಸೆಕ್ಷನ್ 56ರ ಅಡಿಯಲ್ಲಿ ಹೊಸದಾಗಿ ತನಿಖೆ ನಡೆಸಲು ಭೂಮಾಲೀಕರಿಗೆ ನೋಟಿಸ್ ನೀಡಿದ್ದರು.

ಈ ನೋಟಿಸ್ ಪ್ರಶ್ನಿಸಿ ಭೂಮಾಲೀಕರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್‌ನ ಏಕಸದಸ್ಯ ಪೀಠವು, ಮೂರು ವರ್ಷಗಳ ಕಾಲಮಿತಿ ಮುಗಿದ ಬಳಿಕ ಅಧಿಕಾರಿಗಳು ಮರುಪರಿಶೀಲನಾ ಅಧಿಕಾರ ಬಳಸಲು ಸಾಧ್ಯವಿಲ್ಲ ಎಂದು ಹೇಳಿ ನೋಟಿಸ್ ರದ್ದುಗೊಳಿಸಿತ್ತು.

ಏಕಸದಸ್ಯ ಪೀಠದ ಆದೇಶ ಬದಲಿಸಿದ್ದ ವಿಭಾಗೀಯ ಪೀಠ:

ಆದರೆ, 2020ರ ಜನವರಿಯಲ್ಲಿ ಹೈಕೋರ್ಟ್‌ನ ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶವನ್ನು ಬದಲಿಸಿತ್ತು. ಅಧಿಕಾರಿಗಳು ಈವರೆಗೆ ಯಾವುದೇ ಅಂತಿಮ ಆದೇಶ ಹೊರಡಿಸಿಲ್ಲ ಎಂಬ ಕಾರಣ ನೀಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸಲು ಕಂದಾಯ ಅಧಿಕಾರಿಗಳಿಗೆ ಅವಕಾಶ ನೀಡಿತ್ತು.

ಈ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯನ್ನೂ ಹೈಕೋರ್ಟ್ 2023ರ ಜೂನ್‌ನಲ್ಲಿ ವಜಾಗೊಳಿಸಿತ್ತು. ಬಳಿಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಮೂರು ವರ್ಷಗಳ ಕಾಲಮಿತಿ ಕಡ್ಡಾಯ ಎಂದ ಸುಪ್ರೀಂ:

ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 56ರ ಅಡಿಯಲ್ಲಿ ಆದೇಶ ಅಥವಾ ದಾಖಲೆಗಳನ್ನು ಮರುಪರಿಶೀಲಿಸುವ ಅಧಿಕಾರವನ್ನು ಕಾಯ್ದೆಯಲ್ಲಿ ನಿಗದಿಪಡಿಸಿರುವ ಮೂರು ವರ್ಷಗಳ ಅವಧಿಯ ನಂತರ ಬಳಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಕಾನೂನಿನಲ್ಲಿ ನಿಗದಿಪಡಿಸಿರುವ ಕಾಲಮಿತಿಯನ್ನು ಮೀರಿ ಮರುಪರಿಶೀಲನಾ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಕೆರೆ ಒತ್ತುವರಿ ತನಿಖೆಯ ನೆಪದಲ್ಲಿಯೂ ಶಾಸನಬದ್ಧ ಕಾಲಮಿತಿಯನ್ನು ಕಡೆಗಣಿಸಲು ಅವಕಾಶವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಈ ಮೂಲಕ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶವನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, 2014ರಲ್ಲಿ ಭೂಮಾಲೀಕರಿಗೆ ನೀಡಲಾಗಿದ್ದ ಹೊಸ ತನಿಖೆಯ ನೋಟಿಸ್‌ನ್ನೂ ವಜಾಗೊಳಿಸಿದೆ.